ಕ್ವಾಂಟಮ್ ಕಟ್ಟಳೆಯ ಬೆರಗು, ಬೆಡಗು!

090DB34C-DA88-45AF-9F01B627A5921A0B

ಒಂದು ಗೋಡೆಯ ಈ ಬದಿಯಲ್ಲಿ ನೀವು ಯಾವುದೋ ಕೆಲಸದಲ್ಲಿ ತೊಡಗಿದ್ದೀರಿ. ಇನ್ನೊಂದು ಬದಿಯಲ್ಲಿ ನಿಮ್ಮ ಗೆಳೆಯರು ಕಾಲ್ಚೆಂಡು ಆಡುತ್ತಿದ್ದಾರೆ. ಆ ಚೆಂಡು ಗೋಡೆಗೆ ಬಡಿಯುತ್ತದೆ. ಬಡಿದು ಹಿಂಪುಟಿದು ಅವರ ಕಡೆಗೇ ಸಾಗುತ್ತದೆಯಲ್ಲವೇ? ಒಂದುವೇಳೆ, ಗೋಡೆಯನ್ನು ತೂರಿ (ಗೋಡೆ ಒಡೆಯದೆಯೇ), ಆ ಚೆಂಡು ನಿಮ್ಮ ತಲೆ ಕುಟುಕುವಂತಿದ್ದರೆ?

ಹೀಗೂ ಯೋಚಿಸೋಣ. ಒಂದು ಪೆಟ್ಟಿಗೆಯಲ್ಲಿ ಯಾರೋ ಬೆಕ್ಕನ್ನಿಟ್ಟು ನಿಮಗೆ ಉಡುಗೊರೆಯಾಗಿ ನೀಡುತ್ತಾರೆ. ಆ ಪೆಟ್ಟಿಗೆಯನ್ನು ತೆಗೆದಾಗ ಮುದ್ದಾದ ಬೆಕ್ಕು ಮಿಯವ್ ಎನ್ನುತ್ತದೆ. ಒಂದು ವೇಳೆ ಉಸಿರು ಕಟ್ಟಿದ್ದಿದ್ದರೆ, ಪಾಪ, ನೀವು ನೋಡಿದಾಗ ಸತ್ತು ಹೋಗಿರುತ್ತದೆ. ಆದರೆ, ನೀವು ಆ ಪೆಟ್ಟಿಗೆ ತೆಗೆಯುವ ಮುನ್ನ ಅದು ಬದುಕಿತ್ತೋ, ಸತ್ತಿತ್ತೋ? ಯಾರೋ ಒಬ್ಬ ವಿಜ್ಞಾನಿ ಬಂದು “ಅದು ಬದುಕಿಯೂ ಇತ್ತು, ಸತ್ತೂ ಇತ್ತು” ಎಂದರೆ?

ಇಂತಹ ಬೆರಗನ್ನೂ, ಬೆಡಗನ್ನೂ ಮೂಡಿಸುವ ಭೌತಶಾಸ್ತ್ರದ ಕವಲೇ ಬಿಡಿ ಕಟ್ಟಳೆ (Quantum Theory). ಇದು ಹೊಮ್ಮಿದ ಬರೀ 30 ವರುಷಗಳಲ್ಲಿ, ನಮ್ಮ ಸುತ್ತಣದ ಅರಿವನ್ನೇ ಮೇಲೆಕೆಳಗೆ ಮಾಡಿದ ಕಟ್ಟಳೆ ಇದು. ಬನ್ನಿ, ಆ ಕಟ್ಟಳೆಯ ಕಟ್ಟೆಯೊಳಗೊಮ್ಮೆ ಇಳಿದುಬರೋಣ.

೧೯ನೇ ಶತಮಾನದ ಕೊನೆಯಲ್ಲಿ, ಜಗತ್ತಿನ ಹೆಚ್ಚಿನ ವಿಜ್ಞಾನಿಗಳು ಒಂದು ತೀರ್ಮಾನಕ್ಕೆ ಬಂದಿದ್ದರು. ತಿಳಿಯಬೇಕಾದ್ದನ್ನೆಲ್ಲ ಈಗಾಗಲೇ ತಿಳಿಯಲಾಗಿದೆ, ಇನ್ನು ಹೊಸದಾಗಿ ಕಂಡುಹಿಡಿಯುವಂತದ್ದು ಏನೂ ಇಲ್ಲ ಎಂದು! ಅವರ ಪ್ರಕಾರ, ಒಂದು ವಸ್ತುವಿನ, ಈ ಹೊತ್ತಿನ ಇರುವು ಮತ್ತು ವೇಗವನ್ನು ಗೊತ್ತುಪಡಿಸಿದರೆ, ಮುಂದಿನ ಎಲ್ಲ ಹೊತ್ತುಗಳಲ್ಲಿ ಆ ವಸ್ತುವಿನ ಇರುವು ಮತ್ತು ವೇಗವನ್ನು, ಯಾವುದೇ ಗೊಂದಲಕ್ಕೆ ಎಡೆಯಿಲ್ಲದಂತೆ, ಕಂಡುಹಿಡಿಯಬಹುದಾಗಿತ್ತು. ಇದಕ್ಕೆ, ಹಳೆಯ ಇಲ್ಲವೇ ವಾಡಿಕೆಯ ಕದಲರಿಮೆ (Classical Mechanics) ಎಂದು ಕರೆಯಬಹುದು. ಇದರ ಪ್ರಕಾರ, ಜಗತ್ತಿನಲ್ಲಿ ಎಲ್ಲವೂ ನಿಶ್ಚಿತ. ಈ ತಿಳುವಳಿಕೆಯಲ್ಲಿ ತೇಲುತ್ತಿದ್ದ ಭೌತಶಾಸ್ತ್ರಜ್ಞರನ್ನು ಒಮ್ಮೆಲೆ ಬಡಿದೆಬ್ಬಿಸಿದ್ದು ಹಲವು ಪ್ರಯೋಗಗಳು. ಅವುಗಳಲ್ಲಿ ಮುಖ್ಯವಾದವು; ಬೆಳುಕು-ವಿದ್ಯುತ್ ಪರಿಣಾಮ(Photoelectric Effect) ಮತ್ತು ಎಲೆಕ್ಟ್ರಾನ್ ಮೇಲ್ವಾಯುವಿಕೆ (Interference).

ಒಂದು ಲೋಹದ ಪಟ್ಟಿಯ ಮೇಲೆ ಬೆಳಕನ್ನು ಚೆಲ್ಲಿದಾಗ, ಇಲೆಕ್ಟ್ರಾನ್ಸ್ ಹೊರಹೊಮ್ಮುವ ಘಟನೆಗೆ, ಬೆಳುಕು-ವಿದ್ಯುತ್ ಪರಿಣಾಮ ಎಂದು ಕರೆಯುತ್ತಾರೆ. ಬೆಳಕನ್ನು ಅಲೆಯೆಂದು ತಿಳದು, ಈ ಘಟನೆಯನ್ನು ಮುಂಗಂಡರೆ, ಅದು ಕೊಡುತ್ತಿದ್ದ ಉತ್ತರಗಳೇ ಬೇರೆ. ಅರಸಿಕೆಯಲ್ಲಿ ಕಂಡುಬಂದಂತಹ ಫಲಿತಾಂಶಗಳೇ ಬೇರೆ! ಆದರೆ, ಅಲೆಬಾಗುವಿಕೆ (diffraction) ಮತ್ತು ಮೇಲ್ವಾಯುವಿಕೆಗಳೆಂಬ ವಿಚಾರಗಳಲ್ಲಿ ಬೆಳಕನ್ನು ಅಲೆಯೆಂದು ಅಂದುಕೊಳ್ಳದೇ ವಿಧಿಯಿಲ್ಲ. ಇಲ್ಲಿ, ಅಲೆಯೆಂದು ತಿಳಿದರೆ ಫಲಿತಾಂಶ ಸರಿಹೊಂದುವುದಿಲ್ಲ. ಹಾಗಾಗಿ, ಬೆಳಕು ಸಣ್ಣ ಸಣ್ಣ ತುಣುಕುಗಳೂ(particles) ಆಗಿರಬೇಕು ಎಂಬುದನ್ನು ವಿಜ್ಞಾನಿಗಳು ಮನಗಂಡರು. ಆ ತುಣುಕುಗಳು ಬಿಡಿ ಬಿಡಿಯಾಗಿಯೇ (quantum) ಸಾಮರ್ಥ್ಯವನ್ನು ಹೊಂದಿರುತ್ತವೆ.

ಇನ್ನೊಂದೆಡೆ, ಇಲೆಕ್ಟ್ರಾನ್‍ಗಳು ಎರಡು ಕುಳಿಗಳಿರುವ ತೆರೆಯ ಕಡೆಗೆ ಬಿಟ್ಟು, ಆ ತೆರೆಯ ಹಿಂದೆ ಇನ್ನೊಂದು ತೆರೆಯನ್ನಿಟ್ಟು, ಇಲೆಕ್ಟ್ರಾನ್ ಎಲ್ಲಿ ಬಂದು ಬಿದ್ದಿತು ಎಂದು ನೋಡುವ ಪ್ರಯೋಗವನ್ನು ಕೈಗೊಳ್ಳಲಾಯಿತು. ಇದರ ಫಲಿತಾಂಶವೂ ಸೋಜಿಗವನ್ನುಂಟುಮಾಡಿತ್ತು. ಯಾವ ಕುಳಿಯಿಂದ ಹಾದು ಬಂದಿತು ಎಂದು ತಿಳಿಯಲು ಹೋಗದಿದ್ದರೆ, ಇಲೆಕ್ಟ್ರಾನ್ ಒಂದು ಅಲೆಯಂತೆ ನಡೆದುಕೊಳ್ಳುತ್ತಿತ್ತು. ಒಂದುವೇಳೆ, ಯಾವ ಕುಳಿಯಿಂದ ಬಂದಿತೆಂದು ತಿಳಿಯಹೊರಟರೆ, ಅದು ತನ್ನ ಅಲೆಯ ತೊಡಗನ್ನು ಕಳಚಿ, ತುಣುಕಿನ ಅರಿವೆಯನ್ನು ತೊಡುತ್ತಿತ್ತು! ಈ ಪ್ರಯೋಗವನ್ನು ಕೆಳಗಿನ ಓಡುಚಿತ್ರದಲ್ಲಿ ತೋರಿಸಲು ಪ್ರಯತ್ನಿಸಲಾಗಿದೆ.

 

ಪ್ರಯೋಗಗಳನ್ನ ಮಾಡದೆ, ಒಂದು ಎಲೆಕ್ಟ್ರಾನು ಇದೇ ಕುಳಿಯ ಮೂಲಕ ಹೋದೀತು ಎಂದು ಬರಿದೇ ಕಲ್ಪಿಸಿದರೆ, ಕಡ್ಡಾಯವಾಗಿ ನಮ್ಮ ಊಹೆ ಕೆಟ್ಟೀತು! ನಾವು ಗಮನಿಸದೇ ಇದ್ದರೆ, ಹಲವು ಕುಳಿಗಳ ಮೂಲಕ ಒಂದೇ ಎಲೆಕ್ಟ್ರಾನು, ಒಂದೇ ಹೊತ್ತಿನಲ್ಲಿ ಸಾಗುವ ಬೆಡಗನ್ನು ಹೊಂದಿರುವುದು ಕಂಡುಬಂದಿತು. ಆಗ, ವಿಜ್ಞಾನಿಗಳ ತಲೆಯಲ್ಲಿ ಮೂಡಿದ್ದ ಪ್ರಶ್ನೆ ಎಂದರೆ “ಎಲೆಕ್ಟ್ರಾನ್ ಅಲೆಯೋ, ತುಣುಕೋ? ಇಲ್ಲ, ಎರಡೂನೋ? ಇಲ್ಲ, ಬೇರೆಯೇನೋ?” ಈ ಬಗೆಯ ಗೊಂದಲಕ್ಕೆ ಅಲೆ-ತುಣುಕಿನ ಇಬ್ಬಗೆತನ (Wave Particle Duality) ಎಂದು ಕರೆಯುತ್ತಾರೆ.

ಇಂತಹ ಹಲವಾರು ಬೆರಗುಗಳ ಬೆನ್ನು ಹತ್ತಿ ಅರಸಿದಾಗ, ವಿಜ್ಞಾನಿಗಳು ಕಂಡುಕೊಂಡ ದಿಟ, ನಿಜಕ್ಕೂ ನೆಲೆಬಿರಿಯುವಂತದ್ದಾಗಿತ್ತು. ನಾವು ಗಮನಿಸದೇ, ಇಲ್ಲ, ಒರೆದು ನೋಡದೆ, ಯಾವುದೇ ಒಂದು ವಸ್ತು (ಅಣು ಅಳತೆಯ ವಸ್ತುಗಳು), ಅಲೆಯೋ ಇಲ್ಲ, ತುಣುಕೋ ಎಂದು ಹೇಳಲು ಬರುವುದಿಲ್ಲ. ಮೊದಲನೆಯದಾಗಿ, ಅಲೆ ಮತ್ತು ತುಣುಕು ಎಂಬ ಬೇರ್ಮೆಗಳೇ ನಿರ್ದಿಷ್ಟವಾಗಿ ನಮ್ಮ ಜಗತ್ತಿನಲ್ಲಿ ಇಲ್ಲ! ಈ ಬೇರ್ಮೆಗಳು, ನಮ್ಮ ಹೊರಗಣ್ಣಿಗೆ, ಮನಸ್ಸಿಗೆ ಕಾಣುವ ಹುಸಿ ರೂಪಗಳಷ್ಟೆ.

ನಾವು, ಅಣು ಅಳತೆಯ ಕಣಗಳ ಕುರಿತು ಮಾತನಾಡುವಾಗ, ಅವು ಒಂದು ನಿರ್ದಿಷ್ಟ ಎಡೆಯಲ್ಲಿ ದೊರಕುವ ಇಲ್ಲ, ನಿರ್ದಿಷ್ಟ ಬಿರುಸಿನಲ್ಲಿ ಸಾಗುವ ಆಗುವಳೆಯನ್ನಷ್ಟೇ (probability) ಹೇಳಬಹುದು. ಒಂದು ಎಡೆಯಲ್ಲಿ ಎಲೆಕ್ಟ್ರಾನಿನ ಇರುವಿನ ಆಗುವಳೆಯು ಹೆಚ್ಚಿದ್ದರೆ, ಅಲ್ಲಿ ಆ ಎಲೆಕ್ಟಾನ್ ಹೆಚ್ಚಿನ ಸಲ ಕಂಡುಬರುವುದು ಎಂದಷ್ಟೇ ಹೇಳಬಹುದೇ ಹೊರತು, ಯಾವತ್ತಿಗೂ ಅಲ್ಲೇ ಕಂಡುಬರುತ್ತದೆ ಎಂದು ಹೇಳಬರುವುದಿಲ್ಲ. ಇನ್ನೊಂದು ಬಗೆಯಲ್ಲಿ ಹೇಳುವುದಾದರೆ, ಈ ಜಗತ್ತು ಅನಿಶ್ಚಿತತೆಯಿಂದ ಕೂಡಿದೆ.

ಹಾಗಾದರೆ, ಈ ಕಣಗಳು ಒಳಪಡುವ ಕಟ್ಟಳೆಗಳು ಯಾವುವು? ಎಂದು ಅರಸಹೊರಟರೆ, ನಮಗೆ ಸಿಗುವುದು ಅಲೆಯ ಎಣಿನಂಟು (Wave Function). ಈ ಎಣಿನಂಟು, ಒಂದು ವಸ್ತುವಿನ ಸ್ಥಿತಿಯ ಮಾಹಿತಿಯನ್ನು ಹೊಂದಿರುತ್ತದೆ. ಹಾಗೆಯೇ ಈ ಗಣಿತದ ನಂಟು, ಆ ಸ್ತಿತಿಯ ಎಲ್ಲಾ ಸಾಧ್ಯತೆಗಳನ್ನು ತನ್ನ ಒಡಲೊಳಗೆ, ನೇರಣಿಗೆಯಲ್ಲಿ(Linear superposition) ಅವಿತಿಟ್ಟುಕೊಂಡಿರುತ್ತದೆ. ಆ ವಸ್ತುವನ್ನು ಗಮನಿಸಿದಾಗ, ಯಾವುದೋ ಒಂದು ಸಾಧ್ಯತೆಯಷ್ಟೇ ಉಳಿದು, ಮಿಕ್ಕೆಲ್ಲಾ ಸಾಧ್ಯತೆಗಳು ಕುಸಿಯುತ್ತವೆ. ಯಾವ ಸಾಧ್ಯತೆ ಉಳಿಯುತ್ತದೆ ಎಂಬುದು, ಅದರ ಆಗುವಳೆಯ ಮೇಲೆ ನಿಂತಿದೆ.

ಉದಾಹರಣೆಗೆ, ತುಂಬ ಸರಳಗೊಳಿಸಿ ಹೇಳುವುದಾದರೆ, ಒಂದು ನಾಣ್ಯವನ್ನು ಮೆಲಕ್ಕೆ ಹಾರಿಸಿದಾಗ, ಅದರ “ತಲೆಯೋ, ಬಾಲವೋ” ಎಂಬ ಸ್ಥಿತಿಗಳೆರಡರ ಬೆರಕೆಯಾಗಿದೆ. |ತ>ಅನ್ನು “ತಲೆ”ಗೂ, |ಬ>ಅನ್ನು “ಬಾಲ”ಕ್ಕೂ ಗುರುತಿಸಿದರೆ, ಆ ಸ್ಥಿತಿಯು, a|ತ> + b|ಬ> ಆಗಿದೆ. ಇಲ್ಲಿ, a ಮತ್ತು b ಗಳು ಸ್ಥಿರಾಂಕಗಳು (constants). ಅಂದರೆ, ನಾಣ್ಯವು ನೆಲಕ್ಕೆ ಬೀಳುವವರೆಗೂ, ಅದರ ಸ್ಥಿತಿಯು ತಲೆಯೂ ಹೌದು, ಬಾಲವೂ ಹೌದು. ಆ ಎರಡೂ ಸ್ಥಿತಿಗಳ ಬೆರಕೆಯಲ್ಲಿ ಇರುತ್ತದೆ. ಆದರೆ, ಕೊನೆಯಲ್ಲಿ ಆ ನಾಣ್ಯವು ನೆಲಕ್ಕೆ ಬಿದ್ದಾಗ, ಯಾವುದಾದರೂ ಒಂದು ಸ್ಥಿತಿ ಉಳಿದು, ಮಿಕ್ಕವು ಕುಸಿದುಹೋಗುತ್ತವೆ (“ತಲೆ” ಉಳಿದರೆ“ಬಾಲ” ಅಳಿದುಹೋಗುತ್ತದೆ).

ಇದೇ ತಿಳುವಳಿಕೆಯನ್ನು ಬೆಳಕಿಗೆ ಚಾಚಿದರೆ, ನಮಗೆ ಆ ಬೆಳಕು-ವಿದ್ಯುತ್ ಪರಿಣಾಮದ ಒಳತಿರುಳು ಗೊತ್ತಾಗುತ್ತದೆ. ಬೆಳಕು, ಆ ಲೋಹದೊಳಗಣ ಇಲೆಕ್ಟ್ರಾನ್ ಜೊತೆ ಸಂಪರ್ಕವನ್ನು ಏರ್ಪಡಿಸುವಾಗ, ಎಣಿನಂಟಿನ ಹಲವು ಸಾಧ್ಯತೆಗಳು ಕುಸಿದು, ಯಾವುದೋ ಒಂದು ಸಾಧ್ಯತೆ ಉಳಿದುಕೊಳ್ಳುತ್ತದೆ. ಹಾಗಾಗಿ, ಬೆಳಕನ್ನು “ತುಣುಕು” ಎಂದು ಪರಿಗಣಿಸಬೇಕು. ಆದರೆ, ಅದು ಹಲವು ಕುಳಿಗಳ ಮೂಲಕ ಸಾಗುವಾಗಲೋ, ಇಲ್ಲ, ಒಂದು ಕಿರುವಸ್ತುವಿನ ಸುತ್ತ ಬಾಗುವಾಗಲೋ, ಎಲ್ಲ ಬಗೆಯ ಸಾಧ್ಯತೆಗಳನ್ನು ನಾವು ಪರಿಗಣಿಸಿ, ಬೆಳಕನ್ನು “ಅಲೆ”ಯೆಂದು ಗುರುತಿಸಬೇಕು. ಇದೇ ತೆರನಾದ ವಾದವನ್ನು ಎಲೆಕ್ಟ್ರಾನ್‍ಗಳಿಗೂ ಇಲ್ಲವೇ ಯಾವುದೇ ಕಣಕ್ಕೂ ಹೂಡಬೇಕು!

ಈಗ ಈ ಅರಿವನ್ನು, ನಮ್ಮ ಪೆಟ್ಟಿಗೆಯೊಳಗಿನ ಬೆಕ್ಕಿನ ಮೇಲೆ ಪ್ರಯೋಗ ಮಾಡೋಣ. ಈ ಪ್ರಯೋಗಕ್ಕೆ ಶ್ರೋಡಿಂಜರನ ಬೆಕ್ಕು (Schrodinger’s Cat) ಇಲ್ಲವೇ “ಶ್ರೋಡಿಂಜರನ ಯೋಚನೆಯ ಪ್ರಯೋಗ” (Schrodinger’s thought experiment) ಎಂಬ ಹೆಸರಿದೆ. ಅವನೇ ಈ ಪ್ರಯೋಗದ ಹೊಳಹನ್ನು ಮೊದಲು ಐನಸ್ಟೀನ್‍ಗೆ ತಿಳಿಸಿದ್ದು. ಅದರಂತೆ, ಆ ಪೆಟ್ಟಿಗೆಯೊಳಗೆ, ಒಂದಿಷ್ಟು ಸೂಸುವಿಕೆಗೆ (radioactive) ಒಳಪಡುವ ಅಣುಗಳನ್ನು ಇರಿಸಬೇಕು. ಅವುಗಳ ರಚನೆ ಹೇಗಿರಬೇಕೆಂದರೆ, ಒಂದು ವೇಳೆ ಸೂಸುವಿಕೆ ಮೂಡಿದಲ್ಲಿ, ಮಗ್ಗುಲಲ್ಲಿರುವ ಒಂದು ಕೊಡಲಿ “ಹೈಡ್ರೋಸಯಾನಿಕ್ ಆಸಿಡ್” ಅನ್ನು ತುಂಬಿರುವ ಒಂದು ಶೀಶದ ಮೇಲೆ ಬೀಳಬೇಕು ಮತ್ತು, ಅದು ಒಡೆದಾಗ ಹೊರಸೂಸುವ ವಾಸನೆಯಿಂದ ಬೆಕ್ಕು ಸಾಯಬೇಕು.

Schrodingers_cat_svg

ಈಗ, ನಮ್ಮ ಗಮನದಲ್ಲಿರಬೇಕಾದದ್ದು ಏನೆಂದರೆ, ಸೂಸುವಿಕೆ “ಕ್ವಾಂಟಮ್” ಕಟ್ಟಳೆಗೆ ಒಳಪಡುತ್ತದೆ. ಅಂದರೆ, ನಾವು ಪೆಟ್ಟಿಗೆ ತೆಗೆದು ಗಮನಿಸುವವರೆಗೂ, ಅದು ಒಂದೇ ಹೊತ್ತಿನಲ್ಲಿ “ಸೂಸುವ” ಮತ್ತು “ಸೂಸದ” ಸ್ಥಿತಿಗಳಲ್ಲಿ “ಬೆರೆತು” ಇರಬೇಕು. ನಾವು ನೋಡಿದಾಗಷ್ಟೇ, ಒಂದು ಸ್ಥಿತಿ ಉಳಿದು, ಮಿಕ್ಕದ್ದು ಅಳಿಯುತ್ತದೆ. ಈಗ ಇಲ್ಲಿದೆಮಜಾ! ಬೆಕ್ಕಿನ “ಬದುಕು” ಮತ್ತು “ಸಾವು” ಎಂಬ ಪಾಡುಗಳು ಈ “ಸೂಸುವ” ಮತ್ತು “ಸೂಸದ” ಪಾಡುಗಳ ಮೇಲೆ ನಿಂತಿವೆ! ಹಾಗಾಗಿ, ನಾವು ಪೆಟ್ಟಿಗೆಯನ್ನು ತೆರೆದು ನೋಡದವರೆಗೂ, ಬೆಕ್ಕು “ಬದುಕು” ಮತ್ತು “ಸಾವು” ಎಂಬುದರ ಕಲಬೆರಕೆಯ ಸ್ಥಿತಿಯಲ್ಲಿ ಇರುತ್ತದೆ! ನಾವು ತೆರೆದು ನೋಡಿದಾಗಲೇ, ಒಂದು ಸ್ಥಿತಿ ಉಳಿದು, ಮಿಕ್ಕದ್ದು ಅಳಿಯುತ್ತದೆ! (ಈ ಬಗೆಯ ಹುರುಳಿಕೆಗೆ “ಕೋಪನ್ಹೇಗನ್ ಹುರುಳಿಕೆ” (Copenhagen Interpretation) ಎಂಬ ಹೆಸರಿದೆ).

ಬಿಡಿ ಕಟ್ಟಳೆಯ ಅರಿವು, ನಮ್ಮ ಜಗತ್ತನ್ನು ನೋಡುವ ಮತ್ತು ಅರ್ಥೈಸುವ ನಿಟ್ಟಿನಲ್ಲಿ ಹೊಸ ಕಣ್ಣನ್ನೇ ಒದಗಿಸಿದೆ. ಅದರ ಬಳಕೆಯಿಂದ ಲೇಸರ್, ಸೂಪರ್ ಕಂಡಕ್ಟರ್, ಕ್ವಾಂಟಮ್ ಕಂಪ್ಯೂಟರ್ ನಂತಹ, ಮನುಜನ ಬೆಳವಣಿಗೆಯ ಗತಿಯನ್ನೇ ಮಾರ್ಪಡಿಸುವ ತಂತ್ರಜ್ಞಾನಗಳು ಹುಟ್ಟಿಕೊಂಡಿವೆ, ಹುಟ್ಟುಕೊಳ್ಳುವವೂ ಕೂಡ.

ಬಿಡಿಕಟ್ಟಳೆಯ ವಿಸ್ಮಯ ಹೇಳುತ್ತಾ ಹೊರಟರೆ ಮುಗಿಯತೀರದು. ಜಗತ್ತಿನ ಗುಟ್ಟನ್ನು ರಟ್ಟುಮಾಡುವಲ್ಲಿ ಮೂಡಿರುವ ಎಲ್ಲಾ ಥಿಯರಿಗಳ ಬೆನ್ನೆಲುಬು ಬಿಡಿ ಕಟ್ಟಳೆ. ತಾನೇ ಕಟ್ಟಲು ನೆರವಾಗಿದ್ದ ಈ ಕಟ್ಟಳೆಯನ್ನು, “ದೇವರು ಜೂಜಾಡುವುದಿಲ್ಲ” ಎನ್ನುತ್ತಾ, ಅಲ್ಲಗಳೆದಿದ್ದ ಐನಸ್ಟೀನ್ ಆದರೆ, ದೇವರು ಬರೀ ಜೂಜಾಡುತ್ತಿಲ್ಲ, ತಾನೇ ಆ ಜೂಜಿನಲ್ಲಿ ಸಿಲುಕಿ, ಹೊರಬರಲಾರದೆ ಒದ್ದಾಡುತ್ತಿದ್ದಾನೆ. ಅವನ ಇರುವು “ಕ್ವಾಂಟಮ್” ಕಟ್ಟಳೆಯೊಳಗೆ ಸೆರೆಯಾಗಿದೆ!

(ಚಿತ್ರಸೆಲೆಗಳು: ವಿಕಿಪೀಡಿಯಾ, www.scientificamerican.com)

 

(ಅರಿಮೆ ತಂಡ ಬೆಂಗಳೂರಿನ ಬಸವನಗುಡಿಯಲ್ಲಿರುವ ಮುನ್ನೋಟ ಪುಸ್ತಕ ಮಳಿಗೆಯೊಂದಿಗೆ ಒಡಗೂಡಿ ಕನ್ನಡದಲ್ಲಿ ತಿಂಗಳಿಗೊಮ್ಮೆ ವಿಜ್ಞಾನ ಮತ್ತು ತಂತ್ರಜ್ಞಾನದ ಮಾತುಕತೆ್ಯನ್ನು ಏರ್ಪಡಿಸುತ್ತಿದೆ. ಇಂತಹ ಮಾತುಕತೆಯೊಂದರ ಬರಹ ರೂಪವಿದು)

 

ಹುದುಗುವಿಕೆಯ ಚಳಕ ಮತ್ತು ಅದರ ಬಳಕೆ

ನಮ್ಮ ನಮ್ಮ ಮನೆಗಳಲ್ಲಿ ಅಮ್ಮ ಮಾಡುವ ರುಚಿಯಾದ ಇಡ್ಲಿ ಅಥವಾ ದೋಸೆ ತಿನ್ನುತ್ತಾ ತಿಂಡಿಗಳು ಹೇಗೆ ಇಷ್ಟು ರುಚಿಯಾಗಿ, ಮೆದುವಾಗಿವೆ ಎಂದು ಯೋಚಿಸಿದ್ದೀರಾ? ಹಾಲು ಹೇಗೆ ತನ್ನಷ್ಟಕ್ಕೆ ತಾನೇ ಮೊಸರಾಗುತ್ತದೆ? ಹಾಗೆ ಅಜ್ಜಿ ಮಾಡಿಟ್ಟ ಉಪ್ಪಿನಕಾಯಿ ಹೇಗೆ ತಿಂಗಳುಗಟ್ಟಲೆ ಕೆಡದೆ ಅದರ ವಿಶಿಷ್ಟ ರುಚಿ ಉಳಿಯತ್ತೆ ಎಂದು ತಲೆ ಕೆಡಿಸಿಕೊಂಡಿದ್ದೀರಾ? ಇವುಗಳ ಹಿಂದಿರುವ ಚಳಕವೇ ಹುದುಗುವಿಕೆ ಅಥವಾ ಹುಳಿಯುವಿಕೆ (Fermentation). ಇದನ್ನು ಮನುಷ್ಯರು ನೂರಾರು ವರ್ಷಗಳಿಂದ ಬಳಸುತ್ತಿದ್ದಾರೆ. ಇಂದಿಗೂ ದಿನನಿತ್ಯದ ಬದುಕಿನಲ್ಲೂ ಇದರ ಬಳಕೆ ಬಹಳ ಸಾಮಾನ್ಯ.

 ಏನಿದು ಹುದುಗುವಿಕೆ ?

ಫಂಗೈ ಹಾಗು ಬ್ಯಾಕ್ಟೀರಿಯಾದಂತಹ ಕಿರುಜೀವಿಗಳು ನಮ್ಮ ಆಹಾರವನ್ನು ಗಾಳಿಯ ಆಮ್ಲಜನಕ ಇರುವೆಡೆ ಇಲ್ಲವೇ ಗಾಳಿಯಿಲ್ಲದೆಡೆ, ಸಕ್ಕರೆಯ ಅಂಶ (ಗ್ಲುಕೋಸ್) ಸೇವಿಸಿ ಬೇರೆ ಪದಾರ್ಥಗಳನ್ನು ತಯಾರಿಸುವ ಬಗೆಯೇ ಹುದುಗುವಿಕೆಗೆ ಕಾರಣ. ಸಾಮಾನ್ಯ ಪರಿಸ್ಥಿತಿಯಲ್ಲಿ ಗಾಳಿಯ ಕೊರತೆ ಇರುವುದಿಲ್ಲ, ಬಗೆಯ ಸೇವನೆಯನ್ನು ಏರೋಬಿಕ್ ಮೆಟಾಬೋಲಿಸಮ್ (Aerobic metabolism) ಎನ್ನುತ್ತಾರೆ. ಆಮ್ಲಜನಕದ ಕೊರತೆಯಿದ್ದಾಗ ಕಿರುಜೀವಿಗಳ ಸೇವನೆಯ ಬಗೆ ಬೇರೆಯಾಗಿರುತ್ತದೆ, ಅದನ್ನು ಅನ್ಯೆರೋಬಿಕ್ ಮೆಟಾಬೋಲಿಸಮ್ (Anaerobic Metabolism) ಎನ್ನುತ್ತಾರೆ. ಹೀಗೆ ಎರಡೂ ಬಗೆಯಲ್ಲಿ ಸೇವಿಸುವ ಜೊತೆಗೆ ಅವು ಆಲ್ಕೋಹಾಲ್ ಅಥವಾ ಇನ್ನಿತರ ರಾಸಾಯನಿಕ ಪದಾರ್ಥವನ್ನು ತಯಾರಿಸುತ್ತವೆ. ಫಂಗೈ ಹಾಗು ಬ್ಯಾಕ್ಟೀರಿಯಾಗಳ ಗುಣವನ್ನು ಜನರು ತಮ್ಮ ಅನುಕೂಲಕ್ಕೆ ಬಳಸುವ ಚಳಕವೇ ಹುದುಗುವಿಕೆ.

 36383574_1760910227333441_1638605155286908928_n

ಹುದುಗುವಿಕೆ ಚಳಕದ ಬಳಕೆ: 

ಸಾಮಾನ್ಯವಾಗಿ ಅಡುಗೆಯಲ್ಲಿ ಬ್ಯಾಕ್ಟೀರಿಯಾ ಅಥವಾ ಫಂಗೈನ ಕೆಲಸ ಇರುವುದಿಲ್ಲ, ಆದರೆ ಹುದುಗಿದ ತಿನಿಸು ಹಾಗು ಅಡಿಗೆಯಲ್ಲಿ ಬ್ಯಾಕ್ಟೀರಿಯಾ ಹಾಗು ಫಂಗೈನ ಕೆಲಸದಿಂದ ಅಡುಗೆಯ ರುಚಿ, ಪೌಷ್ಟಿಕತೆ, ಗುಣಗಳನ್ನು ಹೆಚ್ಚಿಸುತ್ತವೆ, ಕಾರಣಕ್ಕೆ ಹುದುಗಿದ ತಿನಿಸುಗಳಿಗೆ ಬೇಡಿಕೆ ಹೆಚ್ಚು. ಇಡ್ಲಿ, ದೋಸೆ, ಉಪ್ಪಿನಕಾಯಿ ಇವುಗಳ ರುಚಿ ಹೆಚ್ಚುವುದು ಹುದುಗುವಿಕೆಯಿಂದಲೇ. ಇಡ್ಲಿ ಹಾಗು ದೋಸೆ ಮಾಡವ ಹಿಂದಿನ ದಿನ ಹಿಟ್ಟನ್ನು ನೆನಸಿಟ್ಟಾಗ ಕಿರುಜೀವಿಗಳು ಅದನ್ನು ಅನ್ಯೆರೋಬಿಕ್ ಮೆಟಾಬೋಲಿಸಮ್ ಮೂಲಕ ಸೇವಿಸಿ ಲ್ಯಾಕ್ಟಿಕ್ ಆಸಿಡ್ ತಯಾರಿಸುತ್ತದೆ ಹಾಗೆಯೆ ಹಿಟ್ಟು ಮೆದುವಾಗುತ್ತದೆ.

ಉಪ್ಪಿನಕಾಯಿ ಮಾಡುವಾಗ ಕಾಯಿಯ ತುಂಡುಗಳನ್ನು ಉಪ್ಪಿನಲ್ಲಿ ಕಲಸಿ ಗಾಳಿಯಾಡದಂತೆ ಮುಚ್ಚಿಟ್ಟಾಗ ಕಾಯಿಯ ಸಿಪ್ಪೆಯಲ್ಲಿದ್ದ ಲ್ಯಾಕ್ಟೊಬಸಿಲ್ಲುಸ್ (Lactobacillus) ಎಂಬ ಬ್ಯಾಕ್ಟೀರಿಯಾ ಕಾಯಿಯನ್ನು ಸೇವಿಸಿ ಲ್ಯಾಕ್ಟಿಕ್ ಆಸಿಡ್ ತಯಾರಿಸುವುದರ ಪರಿಣಾಮ ಉಪ್ಪಿನಕಾಯಿಗೆ ತನ್ನದೇ ಆದ ರುಚಿ ಒದಗುತ್ತದೆ, ಅಲ್ಲದೇ ಉಪ್ಪಿನೊಂದಿಗೆ ಲ್ಯಾಕ್ಟಿಕ್ ಆಸಿಡ್ ಇರುವುದರಿಂದ ಅದು ಕೆಡದೆ ಬಹಳ ಕಾಲ ಇರುತ್ತದೆ. ಇದೇ ಬ್ಯಾಕ್ಟೀರಿಯಾದ ಇಂತಹದೇ ಕೈಚಳಕದಿಂದ ಹಾಲು ಮೊಸರಾಗುವುದು ಕೂಡ. ಅಲ್ಲದೆ ಎಲ್ಲಾ ತರಹದ ಹೆಂಡಗಳು (ರಮ್, ವೈನ್, ವಿಸ್ಕಿ, ಇತ್ಯಾದಿ) ಎಲ್ಲವೂ ತಯಾರಾಗುವುದು ಹುದುಗುವಿಕೆಯಿಂದಲೇ. ಬ್ಯಾಕ್ಟೀರಿಯಾಗಳು ಹಣ್ಣು ಹಾಗು ತರಕಾರಿಗಳ ರಸವನ್ನು ಗಾಳಿಯಿಲ್ಲದ ಸಂದರ್ಭದಲ್ಲಿ ಸೇವಿಸಿ ಆಲ್ಕೋಹಾಲ್ ತಯಾರಿಸುತ್ತದೆ. ಬಗೆ ಬಗೆಯ ಹಣ್ಣು ಹಾಗು ತರಕಾರಿಗಳನ್ನು ಬಳಸಿ ಬಗೆ ಬಗೆಯ ಹೆಂಡಗಳನ್ನು ತಯಾರಿಸುತ್ತಾರೆ.

 ಹುದುಗುವಿಕೆಯ ಇತಿಹಾಸ:

ಯಾವಾಗ ಜನರು ಹಾಲನ್ನು ಮೊಸರು ಮಾಡುವುದನ್ನು ಕಲಿತರೋ, ಇಡ್ಲಿ, ದೋಸೆ, ಉಪ್ಪಿನಕಾಯಿ ಮಾಡಲು ಶುರುಮಾಡಿದರೋ, ಹೆಂಡ ತಯಾರಿಸಲು ಕಲಿತುಕೊಂಡರೋ ಅಂದೇ ಹುದುಗುವಿಕೆಯ ಬಳಕೆ ಶುರುವಾಯಿತು. ಸರಿ ಸುಮಾರು 6000 B.C.E ಯಲ್ಲಿ ಚೀನಾದ ಒಂದು ಪ್ರಾಂತ್ಯದಲ್ಲಿ ಒಂದು ಬಗೆಯ ಮದ್ಯ ತಯಾರಿಸಿದ ಪುರಾವೆ ಸಿಕ್ಕಿದೆ. ಹೀಗೆ ಬಗೆ ಬಗೆಯ ಹುದುಗಿದ ತಿನಿಸುಗಳನ್ನು ಸಾವಿರಾರು ವರುಷಗಳಿಂದ ತಯಾರಿಸಿದ ಪುರಾವೆಗಳು ಬಹಳಷ್ಟು ಇವೆ. ಆದರೆ ಇದರ ವೈಜ್ಞಾನಿಕ ಹಿನ್ನಲೆ ಯಾರು ಅರಿತಿರಲಿಲ್ಲ.

ಹುದುಗುವಿಕೆ ಹಿಂದಿನ ವಿಜ್ಞಾನವನ್ನು ಮೊದಲು ಅರಕೆ ಮಾಡಿದ್ದು ಫ್ರಾನ್ಸ್ ಮೂಲದ ಹೆಸರಾಂತ ವಿಜ್ಞಾನಿ ಲೂಯಿಸ್ ಪಾಶ್ಚರ್ (Louis Pasteur). ಸುಮಾರು 18ನೇ ಶತಮಾನದಲ್ಲಿ ಹಲವಾರು ವಿಜ್ಞಾನಿಗಳು ಹುದುಗುವಿಕೆ ಒಂದು ರಾಸಾಯನಿಕ ಕ್ರಿಯೆ ಎಂದು ಭಾವಿಸಿದ್ದರು, ಆದರೆ 1856ರಲ್ಲಿ ಪಾಶ್ಚರ್ ಅವರನ್ನು ಅವರ ಶಿಷ್ಯರ ತಂದೆಯೊಬ್ಬರು ತಮ್ಮ ವೈನ್ ತಯಾರಿಕೆಯಲ್ಲಿ ಆಗುತ್ತಿರುವ ತೊಂದರೆಗೆ ಪರಿಹಾರ ಸೂಚಿಸಲು ಕೇಳಿಕೊಂಡರು. ಅವರ ತೊಂದರೆ ಏನೆಂದರೆ, ಇವರು ಸರಿ ತಿಳಿದ ದಾರಿಯಲ್ಲಿ ತಯಾರು ಮಾಡುತ್ತಿದ್ದ ವೈನ್ ರುಚಿ ಹಾಳಾಗುತ್ತಿತ್ತು. ಆಗ ತೊಂದರೆಯಿಂದ ಕುತೂಹಲಗೊಂಡ ಪಾಶ್ಚರ್ ಅವರು ವೈನ್ ಮಾಡುವ ಬಗೆಯ ಬಗ್ಗೆ ತನಿಕೆ ಮಾಡಿದಾಗ ಹೊಸ ವಿಷಯವೊಂದು ಇವರ ಗಮನಕ್ಕೆ ಬಂತು

ಹಣ್ಣಿನ ರಸವನ್ನು ವೈನ್ ಮಾಡಲು ಯೀಸ್ಟ್ ಅನ್ನು ಬಳಸುತ್ತಿದ್ದರು, ಇದು ಹಣ್ಣಿನ ಸಕ್ಕರೆ ಅಂಶವನ್ನು ಗಾಳಿಯಿಲ್ಲದ ಏರ್ಪಾಡಿನಲ್ಲಿ ಸೇವಿಸಿ ಆಲ್ಕೋಹಾಲ್ ತಯಾರಿಸುತ್ತಿತ್ತು, ಇದೆ ವೈನ್ ಆಗುವ ಬಗೆ ಎಂದು ತಿಳಿಯಿತು. ವೈನ್ ಕೆಡುವುದಕ್ಕೆ ಕಾರಣವು ಮತ್ತೊಂದು ಬಗೆಯ ಯೀಸ್ಟ್ ಎಂಬುದು ತಿಳಿಯಿತು. ಯೀಸ್ಟ್, ಫಂಗೈ ಇವುಗಳು ಕಿರುಜೀವಿಗಳ ಬಗೆಗಳಾಗಿವೆ, ಇವುಗಳಲ್ಲಿ ಬಗೆ ಬಗೆಯ ಜಾತಿಗಳಿರುತ್ತವೆ. ಹೇಗೆ ಒಂದು ಜಾತಿಯ ಯೀಸ್ಟ್ ಸಕ್ಕರೆ ಅಂಶವನ್ನು ಆಲ್ಕೋಹಾಲ್ ಬದಲಿಗೆ ಲ್ಯಾಕ್ಟಿಕ್ ಆಸಿಡ್ ಆಗಿ ಬದಲಿಸುತ್ತಿತ್ತು. ಹೆಚ್ಚಿನ ಅರಕೆ ನಡೆಸಿದಾಗ ವೈನ್ ತಯಾರಿಸಲು ಬಳಸುತ್ತಿದ್ದ ಯೀಸ್ಟ್ ಮಿಶ್ರಣದಲ್ಲಿ, ಬೇರೊಂದು ಜಾತಿಯ ಯೀಸ್ಟ್ ಸೇರಿಕೊಂಡಿದ್ದು ತಿಳಿಯಿತು. ವೈನ್‍ನ ರುಚಿ ಕೆಡಲು ಇದೇ ಕಾರಣ!.

36343675_1760912287333235_2991375452431450112_n

(ಹುದುಗುವಿಕೆಯ ಸಂಶೋಧನೆಯಲ್ಲಿ ಲೂಯಿಸ್ ಪಾಶ್ಚರ್)

ತನಿಕೆಯಿಂದ ಹುದುಗುವಿಕೆಯ ಕ್ರಿಯೆ ಕಿರುಜೀವಿಗಳ ಕೈಚಳಕ ಎಂದು ಸಾಬೀತಾಯಿತು. ಅಲ್ಲದೆ, ಬಗೆ ಬಗೆಯ ಬ್ಯಾಕ್ಟೀರಿಯಾಗಳು ಹಾಗು ಫಂಗೈಗಳು ತಮ್ಮದೇ ವಿಶಿಷ್ಟ ರೀತಿಯಲ್ಲಿ ಆಹಾರ ಸೇವಿಸಿ ಆಲ್ಕೋಹಾಲ್ ಅಥವಾ ಆಸಿಡ್‍ಗಳನ್ನು ತಯಾರಿಸುತ್ತದೆ ಎಂದು ತಿಳಿಯಿತು. ಪಾಶ್ಚರ್ ಅವರ ತನಿಕೆಯಿಂದ ಅವರಿಗೆ ಹುದುಗುವಿಕೆ ಚಳಕದ ತಂದೆ (Father of Fermentation Technology) ಎಂಬ ಪಟ್ಟ ಸಿಕ್ಕಿತು.

ಪಾಶ್ಚರ್ ಅವರ ಹೊಸ ಹುಡುಕಿನಿಂದ ಜನ ಕಿರುಜೀವಿಗಳನ್ನು ನೋಡುವ ಬಗೆಯೇ ಬದಲಾಯಿತು. ಬ್ಯಾಕ್ಟೀರಿಯಾ ಹಾಗು ಫಂಗೈ ಬರೀ ಮನುಷ್ಯರಿಗೆ ಹಾನಿ ಮಾಡುತ್ತದೆ, ಇವುಗಳಿಂದ ಯಾವುದೇ ಒಳಿತಿಲ್ಲ ಎಂಬ ನಂಬಿಕೆಗೆ ಬದಲಾಗಿ ಇವುಗಳು ನಮಗೆ ತಿಳಿಯದೆ ನಮಗೆ ಸಾವಿರಾರು ವರುಷಗಳಿಂದ ನಮಗೆ ಏನೆಲ್ಲಾ ಉಪಕಾರ ಮಾಡಿವೆ ಎಂಬ ಮನಸ್ಥಿತಿ ಹುಟ್ಟಿತು. ಪಾಶ್ಚರ್ ಅವರ ಸಂಶೋಧನೆಯ ನಂತರ ಹುದುಗುವಿಕೆಯ ಬಗ್ಗೆ ವಿಜ್ಞಾನಿಗಳಲ್ಲಿ ಹೆಚ್ಚು ಆಸಕ್ತಿ ಮೂಡಿತು

1897 ರಲ್ಲಿ ಎಡ್ವರ್ಡ್ ಬುಕ್ನೆರ್, ಜರ್ಮನಿಯ ವಿಜ್ಞಾನಿಯೊಬ್ಬರು ಕಿರುಜೀವಿಗಳು ಬದುಕಿಲ್ಲದಿದ್ದರೂ ಅವುಗಳಿಂದ ತೆಗೆದ ರಸದಿಂದಲೇ ಹುದುಗುವಿಕೆಯಾಗುತ್ತದೆ ಎಂದು ತೋರಿಸಿದರು. ಸತ್ತ ಯೀಸ್ಟ್ ಇಂದ ತೆಗೆದ ರಸದಿಂದ ಸಕ್ಕರೆ ಆಲ್ಕೋಹಾಲ್ ಆಗಿ ಬದಲಾಗಿದ್ದನ್ನು ಗಮನಿಸಿ ತನಿಕೆ ಮಾಡಿದಾಗ ಯೀಸ್ಟ್ ತಯಾರಿಸಿದ ಕಿಣ್ವವೊಂದು(Enzymes) ಕೆಲಸ ಮಾಡುತಿದ್ದನ್ನು ಕಂಡುಹಿಡಿದರು. ಅದಕ್ಕೆ ಜೈಮೇಸ್ಎಂದು ಹೆಸರಿಟ್ಟರು. ಇದರಿಂದ, ಹುದುಗುವಿಕೆ ಬ್ಯಾಕ್ಟೀರಿಯಾ ಹಾಗು ಫಂಗೈಗಳು ತಯಾರಿಸುವ ಕಿಣ್ವಗಳಿಂದ ಹುದುಗುವಿಕೆಯಾಗುತ್ತದೆ ಎಂದು ಸಾಬೀತಾಯಿತು. ಇದನ್ನು ಕಂಡುಹಿಡಿದಿದ್ದಕ್ಕೆ ಎಡ್ವರ್ಡ್ ಬುಕ್ನೆರ್ ಅವರಿಗೆ 1907 ರಲ್ಲಿ ರಸಾಯನಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ ದೊರಕಿತು.

20ನೇ ಶತಮಾನದ ಶುರುವಿನೊಂದಿಗೆ ಹುದುಗುವಿಕೆಯ ಚಳಕ ಬೆಳೆಯತೊಡಗಿತು. ಪಾಶ್ಚರ್ ಅವರು ಕಿರುಜೀವಿಗಳು ಹೇಗೆ ಹುದುಗುವಿಕೆ ಮಾಡುತ್ತದೆ ಎಂದು ತೋರಿಸಿಕೊಟ್ಟಿದ್ದರು. ಹಾಗೆ 19ನೇ ಶತಮಾನದಲ್ಲಿ ಶುರುವಾಗಿದ್ದ ಕಿಣ್ವಗಳ ಕುತೂಹಲಕ್ಕೆ ಎಡ್ವರ್ಡ್ ಬುಕ್ನೆರ್ ಅವರು ಕಂಡುಹಿಡಿದ ಹುದುಗುವಿಕೆಯಲ್ಲಿ ಕಿಣ್ವಗಳ ಪಾತ್ರದ ವಿಚಾರ ಚಳಕಕ್ಕೆ ನಾಂದಿ ಹಾಡಿತು. ಅಲ್ಲದೆ, 1930ರಲ್ಲಿ ಅಲೆಕ್ಸಾಂಡರ್ ಫ್ಲೆಮಿಂಗ್ ಅವರು ಪೆನಿಸಿಲಿಯಮ್ ಎಂಬ ಫಂಗೈಯಿಂದ ಮೊಟ್ಟಮೊದಲ ಆಂಟಿಬಯೋಟಿಕ್ (Anti-biotic), ಪೆನಿಸಿಲಿನ್ ಅನ್ನು ತಯಾರಿಸಬಹುದು ಎಂದು ಕಂಡುಕೊಟ್ಟರು, ಇದೇ ಆಂಟಿಬಯೋಟಿಕ್ ಗಳನ್ನು ಹುದುಗುವಿಕೆಯ ಚಳಕದಿಂದ ತಯಾರಿಸಬಹುದು ಎಂಬ ಸುದ್ದಿ ಉದ್ಯಮಿಗಳ ಹುಬ್ಬೇರಿಸಿತು. ಹೀಗೆ 20ನೇ ಶತಮಾನದುದ್ದಕ್ಕೂ ವಿಜ್ಞಾನಿಗಳು, ಉದ್ಯಮಿಗಳು ಹುದುಗುವಿಕೆಯ ಚಳಕದಿಂದ ಕಿರುಜೀವಿಗಳಿಂದ ಏನೆಲ್ಲಾ ತಯಾರಿಸಬಹುದೆಂದು ತಿಳಿಯುತ್ತಾಹೋದಂತೆ ಪ್ರಪಂಚದ ಗಮನ ಹುದುಗುವಿಕೆಯ ಚಳಕದ ಮೇಲೆ ಹೆಚ್ಚಾಯಿತು!

ಪ್ರಪಂಚವನ್ನಾಳುತ್ತಿರುವ ಹುದುಗುವಿಕೆಯ ಚಳಕ:

ಇಂದು ಹುದುಗುವಿಕೆಯ ಚಳಕವೆಂದರೆ ಕಿರುಜೀವಿಗಳನ್ನು ಬಳಸಿ ಯಾವುದೋ ಒಂದು ಉಪಯುಕ್ತ ಪದಾರ್ಥವನ್ನು ತಯಾರಿಸುವ ಅಥವಾ ಒಂದು ಪದಾರ್ಥವನ್ನು ಕಿರುಜೀವಿಗಳ ಸಹಾಯದಿಂದ ಮತ್ತೊಂದು ಉಪಯುಕ್ತ ಪದಾರ್ಥವಾಗಿ ಮಾರ್ಪಾಟು ಮಾಡುವ ಚಳಕವಾಗಿ ಬೆಳೆದಿದೆ.

36343658_1760910237333440_4097575942015156224_n (1)

ಪಾಶ್ಚರ್ ಅವರು ಹುದುಗುವಿಕೆಯನ್ನು ಕಂಡುಹಿಡಿದ ನಂತರ, ವರುಷಗಳು ಕಳೆದಂತೆ ವಿಜ್ಞಾನಿಗಳು ಹೊಸ ಬಗೆಯ ಬ್ಯಾಕ್ಟೀರಿಯಾ ಹಾಗು ಫಂಗೈಗಳನ್ನು ಕಂಡುಹಿಡಿಯಲು ಶುರುಮಾಡಿದರು, ಹಾಗೆ ಇವುಗಳಿಂದ ತಯಾರಿಸಬಹುದಾದಂತ ಜನರಿಗೆ ಉಪಯೋಗವಾಗುವ ಪದಾರ್ಥಗಳನ್ನು ಕಂಡುಹಿಡಿಯಲು ಶುರುಮಾಡಿದರು. 1942ರಲ್ಲಿ ಫಂಗೈ ಬಳಸಿ ಪೆನಿಸಿಲಿನ್ಅನ್ನು ಹೆಚ್ಚು ಹೆಚ್ಚು ತಯಾರಿಸಲು ಶುರುವಾಯಿತು. ಹೀಗೆ ಪ್ರತಿಯೊಂದು ಆಂಟಿಬಯೋಟಿಕ್ ಗಳನ್ನು ಹುದುಗುವಿಕೆಯಿಂದ ತಯಾರಿಸಲು ಶುರುವಾಯಿತು. ಹುದುಗುವಿಕೆಯ ಚಳಕ ಬೆಳೆದಂತೆ ಅದರ ಬಳಕೆಯ ಬಗೆ ಬದಲಾಗತೊಡಗಿತು.

ಜೆನೆಟಿಕ್ ಇಂಜಿನಿಯರಿಂಗ್ (Genetic engineering) ಇಂದ ಜನರು ಬ್ಯಾಕ್ಟೀರಿಯಾ ಹಾಗು ಇತರೆ ಜೀವಿಗಳ ಜೀನ್ ಹಾಗು ಅವುಗಳ ಜಿನೊಮ್ ಅನ್ನು ನಮ್ಮ ಬಳಕೆಗೆ ಅನುಗುಣವಾಗಿ ಬದಲಾಯಿಸಬಲ್ಲ ಚಳಕದ ಬಗ್ಗೆ ಹೆಚ್ಚು ತಿಳಿಯುತ್ತ ಹೋದಂತೆ, ಹುದುಗುವಿಕೆಯಲ್ಲಿ ಬಳಸುವ ಜೀವಿಗಳ ಗುಣಗಳನ್ನು ನಮ್ಮ ಅನುಕೂಲಕ್ಕೆ ಸರಿಯಾಗಿ ಬದಲಾಯಿಸಲು ಶುರುಮಾಡಿದರು. ಮೈಕ್ರೋಬಯಾಲಜಿ (Microbiology) ಹಾಗು ಮೊಲಿಕ್ಯುಲರ್ ಬಯಾಲಜಿ(Molecular Biology)ಗಳಲ್ಲಿ ಜನರ ಅರಿವು ಹೆಚ್ಚಾದಂತೆ, ಬ್ಯಾಕ್ಟೀರಿಯಾ ಹಾಗು ಫಂಗೈಗಳನ್ನು ಬಳಸಿ ಯಾವುದೇ ಬಗೆಯ ಬಯೋಮಾಲಿಕ್ಯುಲನ್ನು (Biomolecule) ಹುದುಗುವಿಕೆಯ ಮೂಲಕ ಹೆಚ್ಚು ಹೆಚ್ಚು ತಯಾರಿಸಬಹುದು ಎಂದು ಅರಿತರು.

ಕಿಣ್ವಗಳ ಬಗ್ಗೆ ತಿಳಿವು ಹೆಚ್ಚಾದಂತೆ ಇವುಗಳ ಉಪಯೋಗಗಳು ಜನ ಜೀವನದಲ್ಲಿ ಬಹಳಷ್ಟಿದೆ ಎಂಬುದನ್ನು ಅರಿತುಕೊಂಡರು. ಕಿಣ್ವಗಳು ಪ್ರತಿ ಜೀವಿಯು ಬದುಕಿ ಬಾಳಲು ಅಗತ್ಯ, ಏಕೆಂದರೆ ಯಾವುದೇ ಜೀವಿಯು ಆಹಾರ ಸೇವಿಸಬೇಕಾದರೆ, ಅದನ್ನು ಜೀರ್ಣಿಸಲು ಹಾಗು ಅದರಿಂದ ಪೌಷ್ಟಿಕತೆ ಪಡೆದು ಎಲ್ಲಾ ಬಗೆಯ ಚಟುವಟಿಕೆಗೆ ಬಳಸಲು ಕಿಣ್ವಗಳು ಬೇಕೇ ಬೇಕು. ಹೇಗೆ ಕಿಣ್ವಗಳ ಕೆಲಸವನ್ನು ಜನರ ಬದುಕಿನ ಚಟುವಟಿಕೆಗಳಲ್ಲೂ ಬಳಸಬಹುದೆಂದು ತಿಳಿದಾಗ, ಇದನ್ನು ಹೆಚ್ಚು ಬಳಕೆ ಮಾಡಲು ಶುರುವಾಯಿತು. ಯಾವುದೇ ಬಗೆಯ ಕಿಣ್ವಗಳನ್ನು ಬ್ಯಾಕ್ಟೀರಿಯಾ ಅಥವಾ ಫಂಗೈಗಳಲ್ಲಿ ತಯಾರಿಸಬಹುದು ಎಂದು ತಿಳಿಯಿತು, ಹೀಗೆ ಹುದುಗುವಿಕೆಯ ಮೂಲಕ ಕಿಣ್ವಗಳನ್ನು ತಯಾರಿಸುವ ಬಗೆ ಬೆಳಕಿಗೆ ಬಂತು.

ರಾಸಾಯನಿಕ ಉತ್ಪನ್ನಗಳ ಕೆಟ್ಟ ಪರಿಣಾಮಗಳಿಂದ ಅದರ ಬದಲಿಗೆ ಜೈವಿಕ ಉತ್ಪನ್ನಗಳ ತಯಾರಿಕೆಯ ಬಗ್ಗೆ ಜನರ ಒಲವು ಹೆಚ್ಚಾದಾಗ ಹುದುಗುವಿಕೆಯ ಚಳಕದ ಮೂಲಕ ಬಗೆ ಬಗೆಯ ರಾಸಾಯನಿಕಗಳ ಬದಲಿ ಪದಾರ್ಥಗಳನ್ನು ತಯಾರಿಸಲು ಶುರುಮಾಡಿದರು. ಇಂದು ಕುಗ್ಗುತಿರುವ ಪೆಟ್ರೋಲ್ ಹಾಗು ಡೀಸೆಲ್ ಪ್ರಮಾಣದಿಂದ ಇಂಧನ ಬಳಕೆಗೆ ಬದಲಿ ಪದಾರ್ಥ ಕಂಡುಹಿಡಿಯ ಬೇಕಾದ ಅವಶ್ಯಕತೆ ಎದುರಾಗಿದೆ. ಇದಕ್ಕೆ ಕೂಡ ಅಲ್ಗೆಯನ್ನು (Algae) ಬಳಸಿ ಬಯೋಡೀಸೆಲ್ (Bio-Diesel) ಅನ್ನು ಹುದುಗುವಿಕೆಯ ಮೂಲಕ ತಯಾರಿಸುವ ಸಂಶೋಧನೆ ನಡೆಯುತ್ತಿದೆ. ಸಕ್ಕರೆ ತಯಾರಿಕೆಯಲ್ಲಿ ಬಾಕಿ ಉಳಿಯುವ ಕಾಕಂಬಿಯಿಂದ ಹಾಗು ಬೇಸಾಯದಿಂದ ಬಾಕಿ ಉಳಿಯುವ ತೆನೆಗಳಲ್ಲಿ ಇರುವ ಸೆಲ್ಯುಲೋಸ್ (Cellulose) ಅಂಶವನ್ನು ಬ್ಯಾಕ್ಟೀರಿಯಾ ಹಾಗು ಫಂಗೈ ಹುದುಗುವಿಕೆಯಿಂದ ಎಥನಾಲ್ (Ethanol) ಆಗಿ ಪರಿವರ್ತಿಸಿ ಅದನ್ನು ಪೆಟ್ರೋಲ್ ಬದಲು ಬಂಡಿಗಳಲ್ಲಿ ಬಳಸುವ ಉರುವಲುಗಳನ್ನಾಗಿ ತಯಾರಿಸುವ ಸೋಶೋಧನೆ ಕೂಡ ಇಂದು ಭರದಿಂದ ಸಾಗಿದೆ.

ಬಯೋ ಟೆಕ್ನಾಲಜಿಯಿಂದ ಯಾವುದೇ ಉತ್ಪನ್ನ ತಯಾರಿಕೆ ಆಗಬೇಕಾದರೆ ಅದನ್ನು ಹೆಚ್ಚಾಗಿ ಹುದುಗುವಿಕೆಯಿಂದಲೇ ತಯಾರಿಸಬೇಕಾಗುತ್ತದೆ. ಇಂದು ಹುದುಗುವಿಕೆ ಕೇವಲ ಬ್ಯಾಕ್ಟೀರಿಯಾ ಹಾಗು ಫಂಗೈ ಅಂತಹ ಕಿರುಜೀವಿಗಳಿಗೆ ಮೀಸಲಾಗಿಲ್ಲ, ಗಿಡಗಳ ಜೀವ ಕಣಗಳು, ಪ್ರಾಣಿಗಳ ಹಾಗು ಮನುಷ್ಯರ ಜೀವ ಕಣಗಳಿಂದಲೂ ಹುದುಗುವಿಕೆ ಮಾಡುತ್ತಾರೆ. ಉತ್ಪನ್ನದ ಗುಣ ಹಾಗು ಅದು ಯಾವ ಜಾತಿಯ ಜೀವಿಯಲ್ಲಿ ಹೆಚ್ಚು ತಯಾರಿಕೆಯಾಗುತ್ತದೆಯೋ ಅದೇ ಜೀವಿಯ ಕಣಗಳನ್ನು ಹುದುಗುವಿಕೆಯಲ್ಲಿ ಬಳಸಿ ಉತ್ಪನ್ನಗಳನ್ನು ತಯಾರಿಸುತ್ತಾರೆ. ಬಯೋ ಟೆಕ್ನಾಲಜಿಲ್ಲಿ ನಡಿಯುತ್ತಿರುವ ಸಂಶೋಧನೆಗಳು ಯಾರಲ್ಲಾದರೂ ಅಚ್ಚರಿ ಹಾಗು ಕುತೂಹಲ ಮೂಡಿಸದೇ ಇರದು.

ಹೀಗೆ ಹಲವು ಬಗೆಯ ಉತ್ಪನ್ನಗಳನ್ನು ಇಂದು ಹುದುಗುವಿಕೆಯಿಂದ ತಯಾರಿಸಲಾಗುತ್ತಿದೆ. ಇಂದು ತಯಾರಾಗುವ ಪ್ರತಿಯೊಂದು ಆಂಟಿಬಯೋಟಿಕ್ ಹುದುಗುವಿಕೆಯಿಂದಲೇ ತಯಾರಾಗುವುದು. ಹಲವು ರೋಗಗಳಿಗೆ ಮದ್ದಾಗಿ ಸಿಗುವ ಗಿಡಗಳ ಪದಾರ್ಥಗಳನ್ನು ಹೆಚ್ಚಾಗಿ ತಯಾರಿಸಲು ಮದ್ದಿನ ಅಂಶವನ್ನು ಜೆನೆಟಿಕ್ ಇಂಜಿನಿಯರಿಂಗ್ ಮೂಲಕ ಹುದುಗುವಿಕೆಯಿಂದ ಕಿರುಜೀವಿಗಳಲ್ಲಿ ತಯಾರಾಗುವಂತೆ ಮಾಡುತ್ತಿದ್ದಾರೆ. ಹುದುಗುವಿಕೆಯಿಂದ ಹೆಚ್ಚಾಗಿ ತಯಾರಿಸುತ್ತಿರುವ ಕಿಣ್ವಗಳು ಇಂದು ಜನರಿಗೆ ಅರಿವೇ ಇಲ್ಲದೆ ಎಲ್ಲೆಡೆ ಬಳಕೆಯಾಗುತ್ತಿದೆ. ಬಟ್ಟೆಗಳನ್ನು ತೊಳೆಯಲು ಬಳಸುವ ಸೋಪುಗಳಲ್ಲಿ, ಬಟ್ಟೆಗಳನ್ನು ನವಿರಾಗಿಸಲು, ನೂಲಿನ ತಯಾರಿಕೆಯಲ್ಲಿ, ಅಣಿಯಾಗಿರುವ ತಿನುಸುಗಳನ್ನು ತಯಾರಿಸಲು, ಹಣ್ಣುಗಳ ರಸದ ಉತ್ಪನ್ನಗಳಲ್ಲಿ, ಹೀಗೆ ದಿನ ನಿತ್ಯದ ಬಳಕೆಯಲ್ಲದೆ ಎಲ್ಲಾ ಬಗೆಯ ಕೈಗಾರಿಕೆಗಳಲ್ಲಿ ಕಿಣ್ವಗಳನ್ನು ಬಳಸುತಿದ್ದಾರೆ.

ಮುಂದಿನ ದಿನಗಳಲ್ಲಿ ನಮ್ಮ ಗಾಡಿಗಳೆಲ್ಲವೂ ಓಡುವುದು ಹುದುಗುವಿಕೆಯಿಂದ ಬಂದ ಬಯೋಡೀಸೆಲ್ ಹಾಗು ಬಯೋಎಥನಾಲ್ ಇಂದಲೇ ಎಂಬುವುದು ಒಂದು ವಾದ. ಇಷ್ಟಲ್ಲದೆ, ಇವತ್ತಿನ ಪರಿಸರ ಮಾಲಿನ್ಯದ ತೀವ್ರತೆಯಿಂದಾಗಿ ಎಲ್ಲಾ ಕೈಗಾರಿಕೆಗಳು ಪರಿಸರ ಸ್ನೇಹಿ ಚಳಕಗಳ ಹುಡುಕಿನಲ್ಲಿವೆ, ಇದುವರೆಗೂ ತಯಾರಿಕೆಯಲ್ಲಿದ್ದ ರೀತಿಯ ಬದಲಿಗೆ ಹುದುಗುವಿಕೆಯನ್ನು ಅಳವಡಿಸುವ ಪ್ರಯತ್ನಗಳು ಜಗತಿನ್ನೆಲ್ಲೆಡೆ ನಡೆಯುತ್ತಿದೆ. ಹೀಗೆ ವಿಜ್ಞಾನವು ಬ್ಯಾಕ್ಟೀರಿಯಾ, ಫಂಗೈ, ಅಲ್ಗೆ, ಗಿಡ ಹಾಗು ಪ್ರಾಣಿಗಳ ಜೀವಕಣಗಳ ಬಗ್ಗೆ ಹೆಚ್ಚು ಹೆಚ್ಚು ಕಂಡುಹಿಡಿಯುತ್ತಾ ಹೋದಂತೆ, ಅವುಗಳಿಂದ ಹೇಗೆ ಎಲ್ಲಾ ಬಗೆಯ ಪದಾರ್ಥಗಳನ್ನು ಹುದುಗುವಿಕೆಯ ಮೂಲಕ ತಯಾರಿಸಹಬಹುದು ಎಂದು ಚಳಕಗಾರರು ಕಂಡುಹಿಡಿಯಲು ಮಾಡುತ್ತಿದ್ದಾರೆ.

ಸಾವಿರಾರು ವರುಷಗಳಿಂದ ಕೇವಲ ಇಡ್ಲಿ, ದೋಸೆ, ಉಪ್ಪಿನಕಾಯಿ ಅಂತಹ ತಿನಿಸುಗಳಲ್ಲಿ ಅಡಗಿದ್ದ ಹುದುಗುವಿಕೆಯ ಚಳಕ, ಕಳೆದ ನೂರು ವರುಷಗಳಲ್ಲಿ ಜನರ ಬದುಕಿನ ಎಲ್ಲಾ ನಡೆಯಲ್ಲೂ ಅನುಕೂಲ ನೀಡುವ ದೊಡ್ಡ ಚಳಕವಾಗಿ ಬೆಳೆದು ನಿಂತಿರುವುದು ಅಚ್ಚರಿಯೇ ಸರಿ!.

(ಮಾಹಿತಿ ಮೂಲ: www.ncbi.nlm.nih.gov, www.libguides.lindahall.org, www.wikipedia.org)

 

 

ಇಂದು ಹಾರಲಿದೆ ಸೂರ್ಯನತ್ತ ಪಾರ್ಕರ್ ಬಾನಬಂಡಿ

ಅಮೆರಿಕಾದ ನಾಸಾ (NASA) ಕೂಟ ಸೂರ್ಯನ ಬಗ್ಗೆ ಅಧ್ಯಯನ ನಡೆಸಲು ಇಂದು ಪಾರ್ಕರ್ ಸೋಲಾರ್ ಪ್ರೋಬ್ ಎಂಬ ಬಾನಬಂಡಿಯನ್ನು ಹಾರಿಸಲಿದೆ. ಇನ್ನು ಎರಡು ಗಂಟೆಗಳಲ್ಲಿ ಅಂದರೆ ಭಾರತದ ಹೊತ್ತು ಮಧ್ಯಾಹ್ನ ಸುಮಾರು 1 ಗಂಟೆಗೆ ಈ ಬಾನಬಂಡಿ ಬಾನಿಗೆ ನೆಗೆಯಲಿದೆ. ಈ ಮೂಲಕ ವಿಜ್ಞಾನದ ಹೊಸದೊಂದು ಮೈಲಿಗಲ್ಲು ದಾಟಲು ಮನುಕುಲ ಎದುರುನೋಡುತ್ತಿದೆ.

260px-Parker_Solar_Probe

ಭೂಮಿಯ ವಾತಾವರಣ, ಜೀವಿಗಳು ಬೆಳೆಯಲು ಬೇಕಾದ ಶಕ್ತಿಮೂಲವಾದ ಸೂರ್ಯನ ಹತ್ತಿರಕ್ಕೆ ಹೋಗಲು ಇಲ್ಲಿಯವರಿಗೆ ಆಗಿಲ್ಲ ಏಕೆಂದರೆ ಸೂರ್ಯನ ಮೇಲ್ಮೈ ತುಂಬಾ ಬಿಸಿಯಾಗಿದ್ದು, ಆ ಬಿಸಿಯನ್ನು ತಡೆದುಕೊಳ್ಳುವ ಸಲಕರಣೆಗಳನ್ನು ಮಾಡುವುದು ತುಂಬಾ ಕಷ್ಟ. ಸೂರ್ಯನ ಮೇಲ್ಮೈಯ ಸುತ್ತಣದ ಭಾಗದಲ್ಲಿ ಕಾವಳತೆ ಸುಮಾರು 20,00,000 ಡಿಗ್ರಿ ಸೆಲ್ಸಿಯಸ್ ವರೆಗೆ ತಲುಪುತ್ತದೆ!

ಹಾಗೆನೇ ಭೂಮಿಯಿಂದ ಸೂರ್ಯನಿರುವ ದೂರ, ಸಲಕರಣೆಗಳನ್ನು ಕಳಿಸಲು ಇನ್ನೊಂದು ಸವಾಲು ಒಡ್ದುತ್ತದೆ. ಸೂರ್ಯ ಮತ್ತು ಭೂಮಿಯ ನಡುವಿನ ಸರಾಸರಿ ದೂರ ಸುಮಾರು 15 ಕೋಟಿ ಕಿಲೋ ಮೀಟರ್! ಪಾರ್ಕರ್ ಬಾನಬಂಡಿ ಸೂರ್ಯನ ಮೇಲ್ಮೈಯಿಂದ ಸುಮಾರು 60 ಲಕ್ಷ ಕಿ.ಮೀ. ನಷ್ಟು ಹತ್ತಿರ ಹೋಗಲಿದ್ದು, ಇಷ್ಟು ಹತ್ತಿರಕ್ಕೆ ಹೋಗುವ ಮೊದಲ ಸಲಕರಣೆ ಇದಾಗಲಿದೆ.

ನೇಸರ, ಸೂರ್ಯ, ರವಿ ಮುಂತಾದ ಹೆಸರುಗಳಿಂದ ಗುರುತಿಸಲ್ಪಡುವ ಈ ನಕ್ಷತ್ರ ನಮಗೆ ಶಕ್ತಿಯ ಮೂಲ. ಹೈಡ್ರೋಜನ್ ಅಣುಗಳ ಬೆಸುಗೆಯಿಂದಾಗಿ ಸೂರ್ಯನಲ್ಲಿ ಹೇರಳವಾದ ಶಕ್ತಿ ಬಿಡುಗಡೆಯಾಗುತ್ತದೆ. ಸುಮಾರು 4.57 ಬಿಲಿಯನ್ ವರುಷಗಳ ಹಿಂದೆ ಹೈಡ್ರೋಜನ್ ಮತ್ತು ಹೀಲಿಯಂ ಅಣುಗಳಿಂದ ಕೂಡಿದ್ದ ದೈತ್ಯ ಅಣುಮೋಡದ ಕುಸಿತದಿಂದ ಸೂರ್ಯ ಉಂಟಾಗಿದ್ದು, ತನ್ನ ಬದುಕಿನ ಅರ್ಧ ಆಯುಷ್ಯವನ್ನು ಸೂರ್ಯ ಈಗಾಗಲೇ ಕಳೆದಿದ್ದಾನೆ ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ.

ಸೂರ್ಯನಲ್ಲಿ ಮುಖ್ಯವಾಗಿ ತಿರುಳು (core), ಸೂಸಿಕೆಯ ಹರವು (radiative zone), ಒಯ್ಯಿಕೆಯ ಹರವು (convective zone), ಬೆಳಕುಗೋಳ (photosphere), ಬಣ್ಣಗೋಳ (chromosphere), ಹೊಳಪುಗೋಳ (corona) ಎಂಬ ಭಾಗಗಳನ್ನು ಗುರುತಿಸಲಾಗಿದೆ. ಈ ಭಾಗಗಳನ್ನು ಕೆಳಗಿನ ಚಿತ್ರದಲ್ಲಿ ತೋರಿಸಲಾಗಿದೆ.

3

ತಿರುಳಿನ ಭಾಗದಲ್ಲಿ ಹೈಡ್ರೋಜನ್ ಅಣುಗಳ ಬೆಸುಗೆಯಿಂದ ಬಿಡುಗಡೆಯಾಗುವ ಶಕ್ತಿ ಉಳಿದ ಭಾಗಗಳನ್ನು ದಾಟಿ ಹೊರಸೂಸುತ್ತದೆ. ನಾಸಾ ಇಂದು ಹಾರಿಸಲಿರುವ ಬಾನಬಂಡಿ ಸುಮಾರು 88 ದಿನಗಳ ಪ್ರಯಾಣದ ಬಳಿಕ ಸೂರ್ಯನ ಸುತ್ತಣದ ಭಾಗವಾದ ಹೊಳಪುಗೋಳದ ಹತ್ತಿರಕ್ಕೆ ಮೊದಲ ಬಾರಿಗೆ ಹೋಗಲಿದೆ.

ಸೋಲಾರ್ ಪಾರ್ಕರ್ ಬಾನಬಂಡಿ ಸುಮಾರು ಏಳು ವರುಶಗಳ ಕಾಲ ಸೂರ್ಯನ ಸುತ್ತ ಅಧ್ಯಯನ ನಡೆಸಲಿದ್ದು, ಅದರ ಒಟ್ಟಾರೆ ಪ್ರಯಾಣವನ್ನು ದಿನಾಂಕಕ್ಕೆ ತಕ್ಕಂತೆ ಕೆಳಗಿನ ಓಡುಚಿತ್ರದಲ್ಲಿ ತೋರಿಸಲಾಗಿದೆ. (ಚಿತ್ರಸೆಲೆ: ವಿಕಿಪೀಡಿಯಾ)

Animation_of_Parker_Solar_Probe_trajectory

(ಚಿತ್ರದಲ್ಲಿನ ಬಣ್ಣಗಳ ವಿವರ – ಹಳದಿ: ಸೂರ್ಯ, ಹಸಿರು: ಬುಧ, ತಿಳಿನೀಲಿ: ಶುಕ್ರ, ಕಡುನೀಲಿ: ಭೂಮಿ, ನವಿರುಗೆಂಪು: ಪಾರ್ಕರ್ ಪ್ರೋಬ್)

ಬಾನಬಂಡಿಯ ಭಾಗಗಳು:

ಪಾರ್ಕರ್ ಸೋಲಾರ್ ಪ್ರೋಬ್ ಸೂರ್ಯನ ಸುತ್ತಣದಲ್ಲಿ ಎದುರಾಗುವ ಹೆಚ್ಚಿನ ಕಾವಳತೆಯನ್ನು ತಡೆದುಕೊಳ್ಳುವಂತೆ ಅಣಿಗೊಳಿಸಲಾಗಿದೆ. ಇದಕ್ಕಾಗಿ ಕಾರ್ಬನ್ ಎಳೆಗಳಿಂದ ಮಾಡಲ್ಪಟ್ಟ ಸಿ.ಎಫ್.ಆರ್.ಸಿ. ಎಂಬ ವಸ್ತುವನ್ನು ಬಳಸಲಾಗಿದೆ. ಇದು ಸುಮಾರು 1377 ಡಿಗ್ರಿ ಸೆಲ್ಸಿಯಸ್ ವರೆಗಿನ ಕಾವಳತೆಯನ್ನು ತಡೆದುಕೊಳ್ಳಬಲ್ಲದು.

parker_probe

(ಚಿತ್ರಸೆಲೆ: KnowledgeSuttra.com )

ಬಾನಬಂಡಿಗೆ ಏನಾದರೂ ತೊಂದರೆಯಾದರೆ ಭೂಮಿಗೆ ಮಾಹಿತಿಯನ್ನು ಕಳಿಸಲು ಸುಮಾರು 8 ನಿಮಿಶಗಳು ತಗಲುವುದರಿಂದ, ಈ ಹೊತ್ತಿನಲ್ಲಿ ತಂತಾನೇ ತೀರ್ಮಾನ ಕೈಗೊಳ್ಳುವಂತೆ ಬಾನಬಂಡಿಯನ್ನು ಸಜ್ಜುಗೊಳಿಸಲಾಗಿದೆ. ಸೂರ್ಯನ ಬಗ್ಗೆ ಅಧ್ಯಯನ ನಡೆಸಲು ಬೇಕಿರುವ ವೈಜ್ಞಾನಿಕ ಸಲಕರಣೆಗಳನ್ನು ಬಾನಬಂಡಿಯ ನಡುವಿನ ಭಾಗದಲ್ಲಿ ಇರಿಸಲಾಗಿದೆ. ಬಾನಬಂಡಿಯಲ್ಲಿ ಎರಡು ಸೋಲಾರ್ ಸಾಲುತಟ್ಟೆಗಳಿದ್ದು, ಅಧ್ಯಯನಕ್ಕೆ ಬೇಕಾದ ವಿದ್ಯುತ್ ಶಕ್ತಿಯನ್ನು ಒದಗಿಸುತ್ತವೆ.

ಬಾನಬಂಡಿಯ ಕೆಲಸಗಳು:

ಇಂದು ಬಾನಿಗೇರಿ 2025 ರವರೆಗೆ ಸೂರ್ಯನ ಸುತ್ತ ಅಧ್ಯಯನ ನಡೆಸುವ ಪಾರ್ಕರ್ ಬಾನಬಂಡಿ ಈ ಕೆಳಗಿನ ಮುಖ್ಯ ಅಧ್ಯಯನದ ಗುರಿಗಳನ್ನು ಹೊಂದಿದೆ,

1. ಹೊಳಪುಗೋಳದ (ಕರೋನಾ) ಕಾವು ಮತ್ತು ಆ ಮೂಲಕ ಸೂರ್ಯ ಅಲೆಗಳ ವೇಗಹೆಚ್ಚುವಿಕೆಗೆ ಕಾರಣವಾದ ಶಕ್ತಿ ಹರಿವಿನ ಮೂಲವನ್ನು ತಿಳಿದುಕೊಳ್ಳುವುದು.

2. ಸೂರ್ಯನ ಸುತ್ತಣದಲ್ಲಿ ಉಂಟಾಗುವ ಕಾಂತ ಬಯಲಿನ (magnetic filed) ರಚನೆ ಮತ್ತು ಅದರ ಏರಿಳಿತದ ಕುರಿತು ಅರಿತುಕೊಳ್ಳುವುದು.

3. ಸೂರ್ಯನ ಸುತ್ತಣದಿಂದ ಹೊಮ್ಮುವ ಶಕ್ತಿದುಂಬಿದ ಕಣಗಳು ಹೇಗೆ ವೇಗಹೆಚ್ಚಿಸಿಕೊಳ್ಳುತ್ತವೆ ಮತ್ತು ಅವುಗಳು ಹೇಗೆ ಸಾಗಣಿಕೆಗೊಳ್ಳುತ್ತವೆ ಎಂದು ಅರಿಯುವುದು.

ಈ ಮೇಲಿನ ಮೂರು ಮುಖ್ಯ ಗುರಿಗಳ ಜತೆಗೆ ಸೂರ್ಯನ ಕುರಿತು ಇನ್ನೂ ಹತ್ತು ಹಲವಾರು ಹೊಸ ವಿಷಯಗಳು ತಿಳಿಯಲಿವೆ ಎಂದು ವಿಜ್ಞಾನಿಗಳು ಅಂದುಕೊಂಡಿದ್ದಾರೆ.

ಸೂರ್ಯನ ಬಗ್ಗೆ ಹಲವಾರು ವರುಷಗಳಿಂದ ಅಧ್ಯಯನ ಕೈಗೊಳ್ಳುತ್ತಾ ಬಂದಿರುವ ವಿಜ್ಞಾನಿ ಯುಜೀನ್ ಪಾರ್ಕರ್ (Eugene Parker) ಅವರ ಹೆಸರಿನಲ್ಲಿ ಈ ಬಾನಬಂಡಿಯನ್ನು ಗುರುತಿಸಲಾಗಿದೆ. ವಿಜ್ಞಾನಿಯೊಬ್ಬ ಬದುಕಿರುವಾಗಲೇ ಅವರ ಹೆಸರನ್ನು ಬಾನಬಂಡಿಗೆ ಇಟ್ಟಿದ್ದು ಇದೇ ಮೊದಲ ಬಾರಿ.

ಬಾನಬಂಡಿಯನ್ನು ಹಾರಿಸಲು ಈ ಮುಂಚೆ ನಿಗದಿಪಡಿಸಿದ್ದ ದಿನಾಂಕಗಳನ್ನು ಹಲವು ಬಾರಿ ಮುಂದೂಡಲಾಗಿದ್ದು, ಇಂದು ಈ ಹಮ್ಮುಗೆ ನೆರವೇರಲಿ ಎಂದು ಹಾರೈಸೋಣ.

ಮಾಹಿತಿ: 11.08.2018 ರಂದು ಹಾರಿಕೆಗೆ 4 ನಿಮಿಷಗಳ ಮುಂಚೆ ಕೆಲವು ತೊಡಕುಗಳು ಕಂಡುಬಂದಿದ್ದರಿಂದ ಹಾರಿಕೆಯನ್ನು 1 ದಿನ ಮುಂದೂಡಲಾಯಿತು. ಇಂದು ಅಂದರೆ 12.08.2018 ರಂದು ಭಾರತದ ಹೊತ್ತು ಮಧ್ಯಾಹ್ನ ಸುಮಾರು 1 ಗಂಟೆಗೆ ಪಾರ್ಕರ್ ಸೋಲಾರ್ ಪ್ರೋಬ್ ಬಾನಿಗೇರಿತು.

ನೆಲದಿಂದ ನೆಗೆದ 45 ನಿಮಿಷಗಳ ಬಳಿಕ ಡೆಲ್ಟಾ 4 ಏರುಬಂಡಿಯಿಂದ(rocket) ಸೋಲಾರ್ ಪ್ರೋಬ್ ಬಾನಬಂಡಿ(spacecraft) ಬೇರ್ಪಟ್ಟು ಸೂರ್ಯನೆಡೆಗೆ ಪಯಣ ಬೆಳೆಸಿತು. ಇದೆ ವರುಷದ ಕೊನೆಗೆ ಅದು ಸೂರ್ಯನ ಹತ್ತಿರಕ್ಕೆ ತಲುಪುವ ನಿರೀಕ್ಷೆಯಿದೆ.