ಎಲೆಕ್ರ್ಟಾನ್ ಲೋಕಕ್ಕೆ ಅಟ್ಟೋಸೆಕೆಂಡ್ ಕೀಲಿಕೈ

– ಇ.ದೀಪಕ್ ಡಿಸಿಲ್ವ.

2023, ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಪಿಯರೆ ಅಗೋಸ್ಟಿನಿ(Pierre Agostini), ಫೆರೆಂಕ್ ಕ್ರೌಸ್ಜ್(Ferenc Krausz) ಮತ್ತು ಆನ್ನೆ ಎಲ್’ಹುಲ್ಲಿಯರ್ (Anne L’Huillier) ಅವರಿಗೆ ಘೋಷಿಸಲಾಗಿದೆ. ಇದು ಅತ್ಯಂತ ಅಪೇಕ್ಷಿತ ಘೋಷಣೆ. ಈ ಮೂವರ ಸಂಶೋಧನೆಯ ಫಲಶ್ರುತಿಯಾಗಿ ಇನ್ನು ಮುಂದೆ ಪರಮಾಣುಗಳಲ್ಲಿ ನ್ಯೂಕ್ಲಿಯಸ್ ಸುತ್ತ ಪರಿಭ್ರಮಿಸುತ್ತಿರುವ ಸೂಕ್ಷ್ಮಾತಿ ಸೂಕ್ಷ್ಮ  ಎಲೆಕ್ಟ್ರಾನುಗಳ ಅಮಿತ ವೇಗದ ಚಲನೆಯನ್ನು ಅನುಸರಿಸಲು ಹಾಗು ಪತ್ತೆಹಚ್ಚಲು ಸಾಧ್ಯವಾಗಿದೆ. ಎಲೆಕ್ಟ್ರಾನ್‌ಗಳ ಚಲನೆಯ ಜಾಡು ಹಿಡಿಯುವುದು ಈ ಹಿಂದೆ ಕಷ್ಟಸಾಧ್ಯವೆಂದೆ ಭಾವಿಸಲಾಗಿತ್ತು. ಆದರೆ ಇನ್ನು ಮುಂದೆ ಹಾಗಲ್ಲ. ಎಲೆಕ್ಟ್ರಾನ್ ಎಲ್ಲಿದೆ ಅನ್ನುವುದನ್ನು ನಿಖರವಾಗಿ ಹೇಳಲು ಸಾಧ್ಯ – ಅದಕ್ಕಾಗಿಯೇ 2023ರ ನೊಬೆಲ್ ಪ್ರಶಸ್ತಿ ಅರಸಿ ಬಂದಿದೆ ಈ ಮೂರು ಮಂದಿಗೆ. 

ನಿಮಗೆ ತಿಳಿದಿರಬಹುದು – ಪ್ರಪಂಚದ ಎಲ್ಲಾ ವಸ್ತುಗಳು – ಘನ, ದ್ರವ, ಅನಿಲ – ಎಲ್ಲವೂ  ಪರಮಾಣುಗಳಿಂದ ಕೂಡಿವೆ. ಪರಮಾಣುಗಳು ವಸ್ತುವಿನ ಅಂತಿಮ ಘಟಕವೆಂದೇ ನಂಬಲಾಗಿತ್ತು ಇಪ್ಪತ್ತನೇ ಶತಮಾನದ ಆರಂಭದ ತನಕವೂ. ಆದರೆ ಪರಮಾಣುವಿಗೂ ಇನ್ನಷ್ಟು ಸಂಕೀರ್ಣ ರಚನೆ ಇದೆ ಅನ್ನುವುದನ್ನು ಸಂಶೋಧನೆಗಳು ಹೇಳಿದವು. ಪರಮಾಣುವಿಗೆ ನ್ಯೂಕ್ಲಿಯಸ್ ಎಂಬ ಒಂದು ಕೇಂದ್ರ ಮತ್ತು ಆ ಕೇಂದ್ರದ ಸುತ್ತ    ಎಲೆಕ್ಟ್ರಾನ್ ಎಂಬ ಕಣಗಳು ಸುತ್ತುತ್ತಿವೆ.  ಯಾವುದೇ ಮೂಲವಸ್ತುವು, ಅವುಗಳ ಪರಮಾಣುವಿನಲ್ಲಿ ಎಲೆಕ್ಟ್ರಾನ್‌ಗಳ ಸಂಖ್ಯೆ ಹಾಗು ಅವುಗಳ ಸಂರಚನೆಯ ಅಂಶದ ಮೇಲೆ ಅವಲಂಬಿತವಾಗಿರುತ್ತದೆ. ಉದಾಹರಣೆಗೆ, ಹೈಡ್ರೋಜನ್ ಪರಮಾಣುವಿನಲ್ಲಿ ಒಂದು ಎಲೆಕ್ಟ್ರಾನ್,  ಹೀಲಿಯಂ ಪರಮಾಣು ಎರಡು ಎಲೆಕ್ಟ್ರಾನ್ ಮತ್ತು ಆಮ್ಲಜನಕದ ಪರಮಾಣುವಿನಲ್ಲಿ ಎಂಟು ಎಲೆಕ್ಟ್ರಾನ್ ಇವೆ. 

ಪರಮಾಣುವಿನ ಪರಿಕಲ್ಪನೆಯು ಶತಮಾನಗಳಿಂದ ಗಮನಾರ್ಹವಾಗಿ ವಿಕಸನಗೊಂಡಿದೆ, ಆರಂಭಿಕ ತಾತ್ವಿಕ ಕಲ್ಪನೆಗಳಿಂದ ಪ್ರಾಯೋಗಿಕ ಪುರಾವೆಗಳು ಮತ್ತು ಅತ್ಯಾಧುನಿಕ ಸೈದ್ಧಾಂತಿಕ ಮಾದರಿಗಳ ಆಧಾರದ ಮೇಲೆ ಅದು ನಿಂತಿದೆ.

ಪರಮಾಣು ವಸ್ತುವಿನ ಮೂಲಭೂತ ಕಣವೆಂಬ ವಿಚಾರವು ಪ್ರಾಚೀನ ಗ್ರೀಕ್ ತತ್ವಜ್ಞಾನಿಗಳಿಗೆ ತಿಳಿದಿತ್ತು. ಕ್ರಿ.ಪೂ. 5 ನೇ ಶತಮಾನದಲ್ಲಿ ವಾಸಿಸುತ್ತಿದ್ದ ಲ್ಯೂಸಿಪ್ಪಸ್ ಮತ್ತು ಅವನ ವಿದ್ಯಾರ್ಥಿ ಡೆಮೊಕ್ರಿಟಸ್ ಪರಮಾಣುವಿನ ಪರಿಕಲ್ಪನೆಯನ್ನು ಅಭಿವೃದ್ಧಿಪಡಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಎಲ್ಲಾ ವಸ್ತುಗಳು ಪರಮಾಣುಗಳೆಂಬ ಅವಿಭಾಜ್ಯ, ಅವಿನಾಶಿ ಕಣಗಳಿಂದ ಕೂಡಿದೆ ಹಾಗು ಈ ಪರಮಾಣುಗಳು ನಿರಂತರ ಚಲನೆಯಲ್ಲಿವೆ ಮತ್ತು ವಿಭಿನ್ನ ಪದಾರ್ಥಗಳನ್ನು ರೂಪಿಸಲು ಅವುಗಳನ್ನು ಸಂಯೋಜಿಸಬಹುದು ಎಂದು ಅವರು ಪ್ರಸ್ತಾಪಿಸಿದರು.

ಡೆಮೋಕ್ರಿಟಸ್‌ನ ಸಮಕಾಲೀನನಾದ ಮತ್ತೋರ್ವ ತತ್ವಜ್ಞಾನಿ ಅರಿಸ್ಟಾಟಲ್ ಪರಮಾಣು ಮಾದರಿಯನ್ನು ತಿರಸ್ಕರಿಸಿದನು. ಪರಮಾಣು ಸಿದ್ಧಾಂತದ ಬೆಳವಣಿಗೆಯನ್ನು ಪ್ರತಿಬಂಧಿಸುವ ಅರಿಸ್ಟಾಟಲ್‌ನ ಆಲೋಚನೆಗಳು ಶತಮಾನಗಳವರೆಗೆ ಚಾಲ್ತಿಯಲ್ಲಿದ್ದವು.

18 ನೇ ಶತಮಾನದ ಆದಿಯಲ್ಲಿ  ಪರಮಾಣುವಿನ ಪರಿಕಲ್ಪನೆಯು ಪ್ರಾಮುಖ್ಯತೆಯನ್ನು ಮರಳಿ ಪಡೆಯಲಾರಂಭಿಸಿತು. ರಸಾಯನಶಾಸ್ತ್ರಜ್ಞ ಮತ್ತು ಭೌತಶಾಸ್ತ್ರಜ್ಞ ರಾಬರ್ಟ್ ಬೋಯ್ಲ್ ಅನಿಲಗಳ ವರ್ತನೆಯ ಮೇಲೆ ಪ್ರಯೋಗಗಳನ್ನು ನಡೆಸುವ ಮೂಲಕ ಆಧುನಿಕ ರಸಾಯನಶಾಸ್ತ್ರಕ್ಕೆ ಅಡಿಪಾಯವನ್ನು ಹಾಕಿದರು. ಅವರ ಕೆಲಸವು ಅನಿಲಗಳ ಪರಿಮಾಣ, ಒತ್ತಡ ಮತ್ತು ಉಷ್ಣತೆಗಳ ನಡುವಿನ ಸಂಬಂಧಗಳ ತಿಳುವಳಿಕೆಗೆ ಕೊಡುಗೆ ನೀಡಿತು, ಮತ್ತು ಪರೋಕ್ಷವಾಗಿ ವಸ್ತುವು ಪ್ರತ್ಯೇಕ ಕಣಗಳಿಂದ ಕೂಡಿದೆ ಎಂಬ ಕಲ್ಪನೆಗೆ ಸಮರ್ಥನೆಯನ್ನು ನೀಡಿತು.

ಪರಮಾಣು ಸಿದ್ಧಾಂತದ ಬೆಳವಣಿಗೆಯಲ್ಲಿ ಅತ್ಯಂತ ಮಹತ್ವದ ಮೈಲಿಗಲ್ಲುಗಳಲ್ಲಿ ಒಂದಾದ ಜಾನ್ ಡಾಲ್ಟನ್ ಅವರ ಪರಮಾಣು ಸಿದ್ಧಾಂತವು 19 ನೇ ಶತಮಾನದ ಆರಂಭದಲ್ಲಿ ಬಂದಿತು. 

ವಸ್ತುವು ಪರಮಾಣುಗಳಿಂದ ಕೂಡಿದೆ. ಪರಮಾಣುಗಳು ಸಂಯೋಜನೆಗೊಂಡು ವಸ್ತುವು ರೂಪಿಸಲ್ಪಡುತ್ತದೆ. ವಿಭಿನ್ನ ವಸ್ತುಗಳು ವಿಭಿನ್ನ ಪರಮಾಣುಗಳಿಂದ ರಚಿಸ್ಪಟ್ಟಿದೆ. ಪರಮಾಣುಗಳು ವಸ್ತುವಿನ ಚಿಕ್ಕ, ಅವಿಭಾಜ್ಯ ಘಟಕಗಳಾಗಿವೆ ಎನ್ನುವುದು ಡಾಲ್ಟನ್ ನ ಸಿದ್ದಾಂತ. 

ಪರಮಾಣುಗಳ ಅಸ್ತಿತ್ವಕ್ಕೆ ಸಂಬಂದಿಸಿದಂತೆ ಡಾಲ್ಟನ್‌ನ ಪರಮಾಣು ಸಿದ್ಧಾಂತವು ಒಂದು ಪ್ರಮುಖ ಮೈಲಿಗಲ್ಲಾಗಿದ್ದರೂ, ಅದು ಇನ್ನೂ ತನ್ನ ಮಿತಿಗಳನ್ನು ಹೊಂದಿತ್ತು.

20 ನೇ ಶತಮಾನದಲ್ಲಿ ಪರಮಾಣುವಿನ ಉಪಕಣಗಳ ಆವಿಷ್ಕಾರದೊಂದಿಗೆ ಪರಮಾಣು  ಸಿದ್ಧಾಂತದ ಇತಿಮಿತಿಗಳು ಬೆಳಕಿಗೆ ಬಂದವು ಉದಾಹರಣೆಗೆ ಪರಮಾಣು  ಸಿದ್ಧಾಂತದಲ್ಲಿ ಐಸೊಟೋಪ್‌ಗಳ (ಅಂದರೆ ಒಂದೇ ಮೂಲವಸ್ತುವಿನ ಪರಮಾಣುಗಳು ಬೇರೆ ಬೇರೆ ಸಂಖ್ಯೆಯ ನ್ಯೂಟ್ರಾನ್‌ಗಳನ್ನು ಹೊಂದಿರುವುದು) ಅಸ್ತಿತ್ವಕ್ಕೆ ಕಾರಣವೇನೆಂಬ ಅಂಶಕ್ಕೆ ವಿವರಗಳಿರಲಿಲ್ಲ ಮತ್ತು ಪರಮಾಣು ಅವಿಭಾಜ್ಯವೆನ್ನುವ ಕಲ್ಪನೆಯು ಹುಸಿಯಾಯಿತು.

19 ನೇ ಶತಮಾನದ ಅಂತ್ಯದಲ್ಲಿ ವಿದ್ಯುತ್ ಮತ್ತು ವಿಕಿರಣದ ಪ್ರಯೋಗಗಳು ಪರಮಾಣುವಿನ ಉಪಕಣಗಳ ಅಸ್ತಿತ್ವವನ್ನು ಬಹಿರಂಗಪಡಿಸಲು ಪ್ರಾರಂಭಿಸಿದವು. ವಿಜ್ಞಾನಿ ಜೆ.ಜೆ ಥಾಮ್ಸನ್ ರ ಕ್ಯಾಥೋಡ್ ಕಿರಣಗಳೊಂದಿಗಿನ ಪ್ರಯೋಗಗಳು ಎಲೆಕ್ಟ್ರಾನ್ ಗಳ ಆವಿಷ್ಕಾರಕ್ಕೆ ಕಾರಣವಾಯಿತು. .

1909 ರಲ್ಲಿ ಅರ್ನೆಸ್ಟ್ ರುದರ್ಫೋರ್ಡ್ ಅವರ ಪ್ರಸಿದ್ಧ ಚಿನ್ನದ ಹಾಳೆಯ ಪ್ರಯೋಗವು ಪರಮಾಣುಗಳ ರಚನೆಯ ಬಗ್ಗೆ ಹೆಚ್ಚಿನ ಒಳನೋಟವನ್ನು ನೀಡಿತು. ಪರಮಾಣುಗಳ ಕೇಂದ್ರದಲ್ಲಿ ಸಣ್ಣ ಮತ್ತು ದ್ರವ್ಯರಾಶಿಯಿಂದ ಕೂಡಿದ ಸಾಂದ್ರವಾದ ರಚನೆ ಅಥವಾ ನ್ಯೂಕ್ಲಿಯಸ್ ವಿದ್ದು, ಉಳಿದಂತೆ ಬಹುತೇಕ ಖಾಲಿ ಜಾಗವಿರುತ್ತದೆ, ಮತ್ತು ಸೂರ್ಯನ ಸುತ್ತ ಗ್ರಹಗಳು ಹೇಗೆ ಸುತ್ತುತ್ತವೆಯೋ ಅದೇ ರೀತಿ ಎಲೆಕ್ಟ್ರಾನ್ಗಳು ನ್ಯೂಕ್ಲಿಯಸ್ ಸುತ್ತ  ಸುತ್ತುತ್ತಿರುತ್ತವೆಂಬುದನ್ನು ರುದರ್ಫೋರ್ಡ್ ಕಂಡುಕೊಂಡನು.

ಅಷ್ಟೇಯಲ್ಲದೆ 20 ನೇ ಶತಮಾನದ ಆರಂಭದಲ್ಲಿ ಅರ್ನೆಸ್ಟ್ ರುದರ್ಫೋರ್ಡ್ ರಿಂದ ಪ್ರೋಟಾನ್ ಮತ್ತು 1932 ರಲ್ಲಿ ಜೇಮ್ಸ್ ಚಾಡ್ವಿಕ್ ರಿಂದ ನ್ಯೂಟ್ರಾನ್ ಕಣಗಳ ಗುರುತಿಸುವಿಕೆಯಿಂದ, ಇನ್ನೆರಡು ಪರಮಾಣುವಿನ ಉಪಕಣಗಳ ಆವಿಷ್ಕಾರವಾಯಿತು. ಈ ಆವಿಷ್ಕಾರಗಳು ಪರಮಾಣುಗಳ ಸರಳವೆಂದು, ಭಾವಿಸಲಾದ ರಚನೆಯನ್ನು ಇನ್ನಷ್ಟು ಸಂಕೀರ್ಣಗೊಳಿಸಿದವು ಮತ್ತು ಹೊಸ ಪರಮಾಣು ಮಾದರಿಯ ಅಗತ್ಯವನ್ನು ಎತ್ತಿ ತೋರಿಸಿದವು. ಹೀಗೆ ಪರಮಾಣುವಿನ ಹಾಗೂ ಅದರ ಉಪಕಣಗಳ ಸಂಶೋಧನೆಯ ಹಾದಿಯು ನಡೆದುಬಂತು.

ಪ್ರಸ್ತುತ ನೋಬೆಲ್ ಪ್ರಶಸ್ತಿಯ ವಿಷಯಕ್ಕೆ ಬಂದರೆ ವಿಜ್ಞಾನಿಗಳಾದ ಪಿಯರೆ ಅಗೋಸ್ಟಿನಿ, ಫೆರೆಂಕ್ ಕ್ರೌಸ್ಜ್ ಮತ್ತು ಆನ್ನೆ ಎಲ್’ಹುಲ್ಲಿಯರ್ ಎಲೆಕ್ಟ್ರಾನ್‌ಗಳ ಚಲನೆ ಅಥವಾ ಶಕ್ತಿಯ ಬದಲಾವಣೆಯ ಕ್ಷಿಪ್ರ ಪ್ರಕ್ರಿಯೆಗಳನ್ನು ಅಳೆಯಲು ಬಳಸಬಹುದಾದ ಬೆಳಕಿನ ಅತ್ಯಂತ ಚಿಕ್ಕ ’ಪಲ್ಸ್’  ಅಥವಾ ಸ್ಪುರಣಗಳನ್ನು ಉತ್ಪಾದಿಸುವ ವಿಧಾನವನ್ನು ಆವಿಷ್ಕರಿಸಿದ್ದಾರೆ. ಇದು ಅತ್ಯಂತ ಗಮನಾರ್ಹ ಸಂಶೋಧನೆ – ಎಂದೇ ಇದಕ್ಕೆ ನೊಬೆಲ್ ಪ್ರಶಸ್ತಿಯ ಗರಿ. 

ಸರಳವಾಗಿ ಹೇಳುವುದಾದರೆ, ಸೆಕೆಂಡನ್ನು ವಿಭಜಿಸಿದಾಗ ದೊರಕುವ ನಂಬಲಾಗದಷ್ಟು ಚಿಕ್ಕದಾದ ವಿಭಜಿತ ಸೆಕೆಂಡುಗಳಲ್ಲಿ, ಪರಮಾಣುವಿನಲ್ಲಿನ ಎಲೆಕ್ಟ್ರಾನ್‌ಗಳ ಚಲನೆಯನ್ನು ಪರಿಶೀಲಿಸುವ ಸಂಶೋಧನೆ ಇವರದ್ದು. 

ಈ ವಿಭಜಿತ ಸೆಕೆಂಡುಗಳು ಎಷ್ಟು ಚಿಕ್ಕದಾಗಿದೆ?  ಎಂಬ ಪ್ರಶ್ನೆ ಉದ್ಭವಿಸುತ್ತದೆ. ಅವು ಎಷ್ಟು ಚಿಕ್ಕದಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು, ಕೆಲವು ಉದಾಹರಣೆಗಳನ್ನು ಪರಿಗಣಿಸಬಹುದು. 

ಒಂದು ಹೃದಯ ಬಡಿತವು ಸಾಧರಣವಾಗಿ ಒಂದು ಸೆಕೆಂಡಿನಲ್ಲಿ ಸಂಭವಿಸುತ್ತದೆ. ಹಮ್ಮಿಂಗ್ ಬರ್ಡ್ ಎಂಬ ಪುಟ್ಟ ಹಕ್ಕಿ  ತನ್ನ ರೆಕ್ಕೆಗಳನ್ನು ಸೆಕೆಂಡಿಗೆ 80 ಬಾರಿ ಬಡಿಯುತ್ತದೆ. ನಾವು    ಈ ಘಟನೆಗಳನ್ನು ಶಬ್ದದ ಮುಖೇನ ಮತ್ತು ಚಲನೆಗಳ ಅಸ್ಪಷ್ಟ ಗ್ರಹಿಕೆಯ ಮುಖೇನ ಮಾತ್ರ ತಿಳಿಯಲು ಸಾಧ್ಯ. ಮಾನವನ ಇಂದ್ರಿಯಗಳಿಗೆ, ಕ್ಷಿಪ್ರ ಚಲನೆಗಳು ಅಸ್ಪಷ್ಟವಾಗಿ ಗೋಚರಿಸುತ್ತವೆ ಮತ್ತು ಅತ್ಯಂತ ಚಿಕ್ಕ ಸಮಯದಲ್ಲಿ ನಡೆದ ಘಟನೆಗಳನ್ನು ಗ್ರಹಿಸಲು ಸಾಧ್ಯವಿಲ್ಲ.

ಇಂತಹ ತ್ವರಿತ ಕ್ಷಣಗಳನ್ನು ಸುಧಾರಿತ ಕ್ಯಾಮೆರಾದ ತಂತ್ರಗಳನ್ನು ಬಳಸಿಕೊಂಡು ನಿಧಾನಗೊಳಿಸಿ ಮಾತ್ರ ವೀಕ್ಷಿಸಬಹುದು. 

ಕ್ಷಿಪ್ರ ಪ್ರಕ್ರಿಯೆಗಳನ್ನು ಅಳೆಯಲು ಅಥವಾ ಚಿತ್ರಿಕರಿಸಲು ಬಳಸುವ ಎಲ್ಲಾ ವಿಧಾನಗಳಿಗೆ ಇದೇ ತತ್ವವು ಅನ್ವಯಿಸುತ್ತದೆ. ಕ್ಷಿಪ್ರ ಘಟನೆಗಳನ್ನು ಆ ಘಟನೆಗಳು ನಡೆಯುವ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಅಳೆಯಬೇಕಾಗುತ್ತದೆ, ಇಲ್ಲದಿದ್ದರೆ ಫಲಿತಾಂಶವು ಅಸ್ಪಷ್ಟವಾಗಿರುತ್ತದೆ. ಇಲ್ಲಿದೆ ಈ ವರ್ಷದ ನೊಬೆಲ್ ಪ್ರಶಸ್ತಿ ಭಾಜನಕ್ಕೆ ದಕ್ಕಿದ ಸಂಶೋಧನೆಯ ಮಹತ್ವ.   “ಈ ವರ್ಷದ ಪ್ರಶಸ್ತಿ ವಿಜೇತರು ಪರಮಾಣುಗಳು ಮತ್ತು ಅಣುಗಳೊಳಗಿನ ಪ್ರಕ್ರಿಯೆಗಳನ್ನು ಸೆರೆಹಿಡಿಯಲು ಸಾಕಾಗುವಷ್ಟು ಚಿಕ್ಕದಾದ ಬೆಳಕಿನ ಸ್ಪುರಣಗಳನ್ನು ಉತ್ಪಾದಿಸುವ ವಿಧಾನವನ್ನು ಪ್ರದರ್ಶಿಸಿದೆ” ಎಂದು 2023 ರ ನೊಬೆಲ್ ಸಮಿತಿಯು ಅಧಿಕೃತವಾಗಿ ತಿಳಿಸಿದೆ. ಇದು  ಸಂಶೋಧನೆಯ ಮಹತ್ವವನ್ನು ಸಾರುವ ಘೋಷಣೆ. 

ಈ ವರ್ಷದ ನೊಬೆಲ್ ಪ್ರಶಸ್ತಿ ವಿಜೇತರು ಸಾಧಿಸಿದ ಚಿಕ್ಕ ಪಲ್ಸ್ ಅಥವಾ ಸ್ಪುರಣದ ಪ್ರಮಾಣವು    ‘ಅಟ್ಟೋಸೆಕೆಂಡ್’ಆಗಿದೆ. ಅಟ್ಟೋಸೆಕೆಂಡ್ ಅಂದರೆ ಹತ್ತರ ಘಾತ ಮೈನಸ್ 18 ಸೆಕೆಂಡುಗಳು. ಅಣುವಿನಲ್ಲಿ, ಪರಮಾಣುಗಳು ಚಲಿಸಬಹುದಾದ ಸಮಯವನ್ನು ಫೆಮ್ಟೋಸೆಕೆಂಡುಗಳಲ್ಲಿ ಅಳೆಯುತ್ತಾರೆ, ಅಂದರೆ ಹತ್ತರ ಘಾತ ಮೈನಸ್ 15 ಸೆಕೆಂಡುಗಳು. ಆದರೆ ಪರಮಾಣುಗಳು ಅಥವಾ ಅಣುಗಳ ಒಳಗೆ ಎಲೆಕ್ಟ್ರಾನ್‌ಗಳ ಚಲನೆಯು, ಫೆಮ್ಟೋಸೆಕೆಂಡ್ ಮಾನಕದಲ್ಲಿ ಅಸ್ಪಷ್ಟವಾಗಿ ಗೋಚರಿಸುತ್ತದೆ.

ಅಟ್ಟೋಸೆಕೆಂಡ್ ಅನ್ನುವುದು ಒಂದು ಸೆಕೆಂಡಿನ ಶತಕೋಟಿಯ ಶತಕೋಟಿಯ ಒಂದು ಭಾಗವಾಗಿದೆ. ಎಲೆಕ್ಟ್ರಾನ್‌ಗಳ ಲೋಕದಲ್ಲಿ,  ಅದರ   ಸ್ಥಾನ ಮತ್ತು ಶಕ್ತಿಗಳು ಒಂದರಿಂದ ಕೆಲವು ನೂರು ಅಟ್ಟೋಸೆಕೆಂಡ್ ಗಳ ನಡುವಿನ ಅಂತರದ ವೇಗದಲ್ಲಿ ಬದಲಾಗುತ್ತವೆ

ಒಂದು ಅಟ್ಟೋಸೆಕೆಂಡ್ ಎಷ್ಟು ಚಿಕ್ಕದೆಂದರೆ, ಒಂದು ಸೆಕೆಂಡಿನಲ್ಲಿ ಅವುಗಳ ಸಂಖ್ಯೆಯು 13.8 ಶತಕೋಟಿ ವರ್ಷಗಳ ಹಿಂದೆ ಬ್ರಹ್ಮಾಂಡವು ಅಸ್ತಿತ್ವಕ್ಕೆ ಬಂದಾಗಿನಿಂದ ಸಂದ ಸೆಕೆಂಡುಗಳ ಸಂಖ್ಯೆಯಷ್ಟೆ ಇರುತ್ತದೆ. 

ಹೆಚ್ಚು ಸೂಕ್ತವಾದ ರೀತಿಯಲ್ಲಿ ನಾವು ಅಟ್ಟೋಸೆಕೆಂಡ್ ನ್ನು ಹೀಗೆ ಅರ್ಥೈಸಬಹುದು: ಉದಾಹರಣೆಗೆ ಕೋಣೆಯ ಒಂದು ಗೋಡೆಯ ಕಡೆಯಿಂದ ಎದುರು ಗೋಡೆಗೆ ಬೆಳಕನ್ನು ಹಾಯಿಸಿದಾಗ ತಗಲುವ ಸಮಯವು ಎಷ್ಟು? ಇದು ಸುಮಾರು    ಹತ್ತು ಬಿಲಿಯನ್ ಅಟ್ಟೋಸೆಕೆಂಡ್ ಗಳಾಗಿರುತ್ತವೆ.

ಇಲ್ಲಿಯವರೆಗೆ, ಫೆಮ್ಟೋಸೆಕೆಂಡ್‌ನ ಅವಧಿಯಲ್ಲಿ ಮಾತ್ರ ಪರಮಾಣು ಪ್ರಕ್ರಿಯೆಗಳನ್ನು ವೀಕ್ಷಿಸಲು ಸಾಧ್ಯವಾಗಿತ್ತು, ಅದಕ್ಕಿಂತ ಹೆಚ್ಚೇನೂ ಸಾಧ್ಯವಿರಲಿಲ್ಲ. ಇಲೆಕ್ಟ್ರಾನ್‌ಗಳ ಸಂಕ್ಷಿಪ್ತ ಸಮಯಮಾನದಲ್ಲಿ ಸಂಭವಿಸುವ ಪ್ರಕ್ರಿಯೆಗಳನ್ನು ಗ್ರಹಿಸುವುದು, ಅಸ್ತಿತ್ವದಲ್ಲಿರುವ ತಂತ್ರಜ್ಞಾನಗಳನ್ನು ಸುಧಾರಿಸುವುದರ ಮೂಲಕ ಸಾಕಾರಗೊಳ್ಳಲ್ಲಿಲ್ಲ. ಅದಕ್ಕಾಗಿ ಸಂಪೂರ್ಣವಾದ ಹೊಸ ವಿಧಾನದ ಅಗತ್ಯವಿತ್ತು. ಅಂತಹ ಒಂದು ಹೊಸ ವಿಧಾನವನ್ನು ಈ ವರ್ಷದ ಪ್ರಶಸ್ತಿ ವಿಜೇತರು ಅಟ್ಟೋಸೆಕೆಂಡ್ ಎಂಬ ಭೌತಶಾಸ್ತ್ರದ ಹೊಸ ಸಂಶೋಧನಾ ಕ್ಷೇತ್ರವನ್ನು ತೆರೆಯುವುದರ ಮೂಲಕ ಪರಿಚಯಿಸಿದರು ಹಾಗು ಅಟ್ಟೋಸೆಕೆಂಡ್ ಅವಧಿಯನ್ನು ಗ್ರಹಿಸಬಹುದು ಮತ್ತು ಅಳೆಯಬಹುದು ಎನ್ನುವುದನ್ನು ತೋರಿಸಿಕೊಟ್ಟರು.

ಈಗ ಅಟ್ಟೋಸೆಕೆಂಡ್ ಜಗತ್ತನ್ನು ಪ್ರವೇಶಿಸಬಹುದಾಗಿದೆ, ಮತ್ತು ಎಲೆಕ್ಟ್ರಾನ್ಗಳ ಚಲನೆಯನ್ನು ಅಧ್ಯಯನ ಮಾಡಲು ಬೆಳಕಿನ ಈ ಸಣ್ಣ ಸ್ಪುರಣಗಳನ್ನು ಬಳಸಬಹುದಾಗಿದೆ. ಇದೀಗ ಕೆಲವೇ ಡಜನ್ ಅಟ್ಟೋಸೆಕೆಂಡ್ಗಳವರೆಗೆ ಬೆಳಕಿನ ಸ್ಪುರಣಗಳನ್ನು ಉತ್ಪಾದಿಸಲು ಸಾಧ್ಯವಿದೆ, ಮತ್ತು ಈ ತಂತ್ರಜ್ಞಾನವು  ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಾಗಿ ಅಭಿವೃದ್ಧಿಯನ್ನು ಹೊಂದಲಿದೆ.

1987 ರಲ್ಲಿ, ಫ್ರೆಂಚ್ ಪ್ರಯೋಗಾಲಯದಲ್ಲಿ ಅನ್ನಿ ಎಲ್’ಹುಲ್ಲಿಯರ್ ಮತ್ತು ಅವರ ತಂಡವು ಗಮನಾರ್ಹವಾದ ಪ್ರಗತಿಯನ್ನು ಸಾಧಿಸಿತು. ಅವರು ಅತಿಗೆಂಪು ಲೇಸರ್ ಕಿರಣವನ್ನು ಜಡ ಅನಿಲದ ಮೂಲಕ ರವಾನಿಸಿದಾಗ, ಅದರಲ್ಲಿ ಮೂಲ ಕಿರಣಗಳ ಆವೃತ್ತಿಯ ಇನ್ನಷ್ಟು ಅಧಿಕ ಆವೃತ್ತಿಯ ಕಿರಣವನ್ನು ಪತ್ತೆ ಮಾಡಿದರು. ಇದಕ್ಕೆ ಓವರ್ಟೋನ್  ಎನ್ನುತ್ತಾರೆ. ಅಂದರೆ ಮೂಲ ಕಿರಣದ ತರಂಗಗಳು ಪೂರ್ಣಂಕದೊಂದಿಗೆ ಗುಣಾಕಾರಗೊಂಡಗ ದೊರೆಯುವ ಹೊಸ ಬೆಳಕಿನ ತರಂಗಗಳು ಸ್ರಷ್ಟಿಗೊಂಡವು. 

ಅನಿಲದಲ್ಲಿ ಉಂಟಾಗುವ ಈ ಓವರ್ಟೋನ್ ಗಳು ನೇರಳಾತೀತ ಬೆಳಕಿನ ರೂಪದಲ್ಲಿರುತ್ತವೆ. ಹೀಗೆ ಉತ್ಪಾದನೆಗೊಂಡ ಓವರ್ಟೋನ್ ಗಳು  ಪರಸ್ಪರ ಸಂವಹನ ನಡೆಸಿದಾಗ, ಅವು ವ್ಯತಿಕರಣದ (interference) ಮೂಲಕ ತೀವ್ರಗೊಳ್ಳಬಹುದು ಅಥವಾ ಶೂನ್ಯವಾಗಬಹುದು ಎಂದು ವಿಜ್ಞಾನಿಗಳು ಗಮನಿಸಿದರು. ತಮ್ಮ ಪ್ರಯೋಗ ಮಾದರಿಯನ್ನು ಪರಿಷ್ಕರಿಸುವ ಮೂಲಕ, ಭೌತಶಾಸ್ತ್ರಜ್ಞರು ಶಕ್ತಿಯುತವಾದ ಬೆಳಕಿನ ಅಟ್ಟೋಸೆಕೆಂಡ್ ಸ್ಪುರಣಗಳನ್ನು ರಚಿಸುವಲ್ಲಿ ಯಶಸ್ವಿಯಾಗಿದ್ದಾರೆ.

2001 ರಲ್ಲಿ, ಪಿಯರೆ ಅಗೋಸ್ಟಿನಿ ಮತ್ತು ಫ್ರಾನ್ಸ್ನಲ್ಲಿನ ಅವರ ಸಂಶೋಧನಾ ಗುಂಪು 250-ಅಟ್ಟೋಸೆಕೆಂಡ್ ಬೆಳಕಿನ ಸ್ಪುರಣಗಳ ಸರಣಿಯನ್ನು ಯಶಸ್ವಿಯಾಗಿ ಉತ್ಪಾದಿಸಿತು. ಈ ಸ್ಪುರಣಗಳ ಬಂಡಿಯನ್ನು ಮೂಲ ಕಿರಣದೊಂದಿಗೆ ಸಂಯೋಜಿಸಿ ನಡೆಸಿದ ಪ್ರಯೋಗಗಳ ಮೂಲಕ, ಅವರು ಎಲೆಕ್ಟ್ರಾನ್ ಡೈನಾಮಿಕ್ಸ್   ಅಥವಾ ಕನ್ನಡದಲ್ಲಿ ಹೇಳುವುದಾದರೆ ಎಲೆಕ್ಟ್ರಾನುಗಳ ಚಲನೆಯ ಬಗೆಗೆ  ಅಭೂತಪೂರ್ವ ಒಳನೋಟಗಳನ್ನು ಪಡೆದರು. 

ಅದೇ ಸಮಯದಲ್ಲಿ, ಆಸ್ಟ್ರಿಯಾದಲ್ಲಿ ಫೆರೆಂಕ್ ಕ್ರೌಸ್ಜ್ ಮತ್ತು ಅವರ ತಂಡವು ಬೆಳಕಿನ ಸ್ಪುರಣಗಳ ಬಂಡಿಯಿಂದ 650-ಅಟ್ಟೋಸೆಕೆಂಡ್ ಅವಧಿಯ ಸ್ಪುರಣಗಳನ್ನು ಪ್ರತ್ಯೇಕಿಸುವ ತಂತ್ರವನ್ನು ಅಭಿವೃದ್ಧಿಪಡಿಸಿದರು. ಈ ಪ್ರಗತಿಯು ಸಂಶೋಧಕರಿಗೆ ಕ್ರಿಪ್ಟಾನ್ ಪರಮಾಣುಗಳಿಂದ ಬಿಡುಗಡೆಯಾದ ಎಲೆಕ್ಟ್ರಾನ್ಗಳ ಶಕ್ತಿಯನ್ನು ಗಮನಾರ್ಹ ನಿಖರತೆಯೊಂದಿಗೆ ಅಳೆಯಲು ಅವಕಾಶ ಮಾಡಿಕೊಟ್ಟಿತು.

ವಸ್ತುವಿನ ಆಂತರಿಕ ಪ್ರಕ್ರಿಯೆಗಳನ್ನು ಪರೀಕ್ಷಿಸಲು ಮತ್ತು ಅರ್ಥಮಾಡಿಕೊಳ್ಳಲು ಅಟ್ಟೋಸೆಕೆಂಡ್ ಬೆಳಕಿನ ಸ್ಪುರಣಗಳನ್ನು ಬಳಸಬಹುದು. ಅಟ್ಟೋಸೆಕೆಂಡ್ ಬೆಳಕಿನ ಸ್ಪುರಣಗಳನ್ನು ಪರಮಾಣುಗಳು ಮತ್ತು ಅಣುಗಳ ವಿವರವಾದ ಭೌತಶಾಸ್ತ್ರದ ವಿವಿಧ ಆಯಾಮಗಳನ್ನು ಅನ್ವೇಷಿಸಲು ಬಳಸಬಹುದು. 

ಅಟ್ಟೋಸೆಕೆಂಡ್ ಬೆಳಕಿನ ಸ್ಪುರಣಗಳನ್ನು ವೈದ್ಯಕೀಯ ಕ್ಷೇತ್ರದಲ್ಲಿ ವ್ಯಾಪಕವಾಗಿ ಉಪಯೋಗಿಸುವ ಎಲ್ಲ ಸಾಧ್ಯತೆ ಇವೆ. ಉದಾಹರಣೆಗೆ, ಅಟ್ಟೋಸೆಕೆಂಡ್ ಬೆಳಕಿನ ಸ್ಪುರಣಗಳನ್ನು ಅಣುಗಳ ತಳ್ಳುವಿಕೆಗೆ ಬಳಸಬಹುದು, ಮತ್ತು ಈ ಪ್ರಕ್ರಿಯೆಯಲ್ಲಿ ಹೊರಸೂಸಲ್ಪಟ್ಟ ಕಿರಣಗಳ ಸಂಜ್ನೆಯನ್ನು ಯಾವ ಅಣು ಸೂಸಿದೆ ಮತ್ತು ಆ ಅಣುವಿನ ರಚನೆ ಏನು ಅನ್ನುವ ವಿವರವನ್ನು ಪ್ರಯೋಗ ಮೂಲಕ ಪಡೆಯಲು ಇಂದು ಸಾಧ್ಯ.  ಇದು ಒಂದು ರೀತಿಯ ಬೆರಳಚ್ಚು ಅಥವಾ ಫಿಂಗರ್‌ಪ್ರಿಂಟ್ – ಅಂದರೆ ಅಣುವಿನ ರಚನೆ ಮತ್ತು ಅದರ ಇನ್ನಿತರ ಗುಣ ಲಕ್ಶ್ಜಣಗಳ ಕುರಿತು ಕರಾರುವಾಕ್ಕಾದ ವಿವರಣೆ.  ಈ ವಿಧಾನವನ್ನು ವೈದ್ಯಕೀಯ   ಕ್ಷೇತ್ರದಲ್ಲಿ ರೋಗನಿರ್ಣಯಕ್ಕೆ ಬಳಸಿಕೊಳ್ಳಬಹುದು.

ಅಲ್ಪಾವಧಿಯ ಪ್ರಕ್ರಿಯೆಗಳನ್ನು ಅಧ್ಯಯನ ಮಾಡುಲು ಅಟ್ಟೋಸೆಕೆಂಡ್ ಬೆಳಕಿನ ಸ್ಪುರಣಗಳು ಅತ್ಯುಪಯುಕ್ತ.  ಉದಾಹರಣೆಗೆ, ಅಟ್ಟೊಸೆಕೆಂಡ್ ಸ್ಪುರಣಗಳು ವಿಜ್ಞಾನಿಗಳಿಗೆ ಅಲ್ಟ್ರಾಫಾಸ್ಟ್ ಪರಮಾಣು ಮತ್ತು ಆಣ್ವಿಕ ಪ್ರಕ್ರಿಯೆಗಳ ‘ಚಿತ್ರಗಳನ್ನು’ ಸೆರೆಹಿಡಿಯಲು ಅನುವು ಮಾಡಿಕೊಡುತ್ತದೆ. ವಸ್ತು ವಿಜ್ಞಾನ, ಎಲೆಕ್ಟ್ರಾನಿಕ್ಸ್ ಮತ್ತು ವೇಗವರ್ಧಕ (catalysis)ದಂತಹ ಕ್ಷೇತ್ರಗಳಿಗೆ ಅಟ್ಟೋಸೆಕೆಂಡ್ ವಿಜ್ಞಾನ ಉಪಕಾರಿಯಾಗಿದೆ, ಅಲ್ಲಿ ತ್ವರಿತ ಬದಲಾವಣೆಗಳನ್ನು ಅರ್ಥಮಾಡಿಕೊಳ್ಳುವುದು ನಿರ್ಣಾಯಕ. 

ಅಟ್ಟೊಸೆಕೆಂಡ್ ಭೌತಶಾಸ್ತ್ರವು ವೇಗವಾಗಿ ಕಾರ್ಯನಿರ್ವಹಿಸುವ ಎಲೆಕ್ಟ್ರಾನಿಕ್ ಸಾಧನಗಳ ಅಭಿವೃದ್ಧಿಗೆ ಕಾರಣವಾಗಬಹುದು, ಕಂಪ್ಯೂಟಿಂಗ್ ಮತ್ತು ದೂರಸಂಪರ್ಕ ತಂತ್ರಜ್ಞಾನ ಕ್ಷೇತ್ರಗಳಿಗೆ ಹೆಚ್ಚಿನ ಆಯಾಮಗಳನ್ನು ನೀಡಬಹುದಾದ ತಂತ್ರವಿದು, ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. 

ವರ್ಧಿತ ಇಮೇಜಿಂಗ್ ಮತ್ತು ಸ್ಪೆಕ್ಟ್ರೋಸ್ಕೋಪಿ ಕ್ಷೇತ್ರಗಳಲ್ಲಿ ಅಟ್ಟೋಸೆಕೆಂಡ್ ಬೆಳಕಿನ ಸ್ಪುರಣಗಳನ್ನು ಉಪಯೋಗಿಸಬಹುದು. ಉದಾಹರಣೆಗೆ, ಕುಶಲತೆಯಿಂದ ಯೋಜಿತ ರೀತಿಯಲ್ಲಿ ಅಟ್ಟೋಸೆಕೆಂಡ್ ಸ್ಪುರಣಗಳನ್ನು ಬಳಸುವುದರಿಂದ ಹೆಚ್ಚಿನ ಸಾಮರ್ಥ್ಯದ- ಎಲ್ಲ ವಿವರಗಳನ್ನು ನೀಡುವ ಚಿತ್ರಗಳನ್ನು ಪಡೆಯಲು ಸಾಧ್ಯವಾಗುತ್ತದೆ ಮತ್ತು ಆ ಮೂಲಕ ಸ್ಪೆಕ್ಟ್ರೋಸ್ಕೋಪಿ ಕ್ಷೇತ್ರಗಳಲ್ಲಿ ಕ್ರಾಂತಿಕಾರಕ ಬದಲಾವಣೆಯನ್ನು ನಿರೀಕ್ಷಿಸಬಹುದು. ಹಾಗಾಗಿಯೇ ಅಟ್ಟೊಸೆಕೆಂಡ್ ಸಂಶೋಧನೆಯ  ಹೊಸ ಸಾಧ್ಯತೆಗಳನ್ನು ಮುಂದಿನ ದಿನಗಳಲ್ಲಿ ಜೀವಶಾಸ್ತ್ರದಿಂದ ಖಗೋಳಶಾಸ್ತ್ರದವರೆಗಿನ ಬೇರೆ ಬೇರೆ ಕ್ಷೇತ್ರಗಳಲ್ಲಿ ಕಾಣಬಹುದು. 

ಅಟ್ಟೋಸೆಕೆಂಡ್  ಬೆಳಕಿನ ಸ್ಪುರಣಗಳು ಭೌತಶಾಸ್ತ್ರ ಸಂಶೋಧನಾ ಕ್ಷೇತ್ರಕ್ಕೆ ನವ ನವೀನ ಅವಕಾಶಗಳನ್ನು ಅಗಾಧವಾಗಿ ತೆರೆದಿವೆ. ಈ ಅವಕಾಶಗಳು ಮಾನವಬದುಕಿನ ಸಾವಿರಾರು ಸಮಸ್ಯೆಗಳಲ್ಲಿ ಕೆಲವನ್ನದರೂ ಪರಿಹರಿಸುವ ಆವಿಷ್ಕಾರಗಳಾಗಿ ಸದ್ವಿನಿಯೋಗಕ್ಕೆ ದೊರಕಲಿವೆ  ಎಂದು ವಿಜ್ಞಾನಿಗಳ ಅಭಿಮತ. ಹಾಗೆಯೇ ಆಗಲಿ ಎಂದು ಹಾರೈಸೋಣ. 

 

ತಿಟ್ಟ ಸೆಲೆ:scientist

ಹಸಿರುಮನೆಯ ಗುಟ್ಟು

ರತೀಶ ರತ್ನಾಕರ.

ಸಣ್ಣ ಸಣ್ಣ ಗಿಡಗಳನ್ನು ಬೆಳಸಲು ಇಲ್ಲವೇ ಹೆಚ್ಚಾಗಿ ಹೂವಿನ ಗಿಡಗಳನ್ನು ಬೆಳಸಲು ಹಸಿರು ಬಣ್ಣದ ಇಲ್ಲವೇ ಬಣ್ಣವಿಲ್ಲದ ಗಾಜು ಇಲ್ಲವೇ ಪ್ಲಾಸ್ಟಿಕ್ ಹೊದ್ದಿರುವ ‘ಹಸಿರು ಮನೆಗಳನ್ನು’ ಎಲ್ಲಾದರೂ ಕಂಡಿರುತ್ತೇವೆ. ಗಿಡಗಳ ಬೆಳವಣಿಗೆಗೆ ಈ ಬಗೆಯ ಬೆಳಸುವಿಕೆ ನೆರವಾಗುತ್ತದೆ ಎಂದು ಅಲ್ಲಲ್ಲಿ ಕೇಳಿರುತ್ತೇವೆ. ಹಾಗದರೆ ಈ ಹಸಿರು ಮನೆಗಳು ಗಿಡಗಳ ಬೆಳವಣಿಗೆಗೆ ಹೇಗೆ ನೆರವಾಗುತ್ತವೆ? ಇದರ ಕೆಲಸವೇನು ಎಂಬುದನ್ನು ಅರಿಯೋಣ ಬನ್ನಿ.

ಹಸಿರುಮನೆಯ ಹಿಂದಿರುವ ಅರಿಮೆ:

ನೇಸರನಿಂದ ನೆಲಕ್ಕೆ ಬೀಳುವ ಬೆಳಕಿನಿಂದಾಗಿ ನೆಲದಲ್ಲಿರುವ ಮಣ್ಣು, ನೀರು ಹಾಗು ಇತರೆ ವಸ್ತುಗಳು ಬಿಸಿಯಾಗುತ್ತವೆ. ಅಂದರೆ ನೇಸರನ ಬೆಳಕಿನ ಶಕ್ತಿಯನ್ನು ಹೀರಿಕೊಂಡು ಅದೇ ಶಕ್ತಿಯನ್ನು ಬಿಸಿಯ ರೂಪದಲ್ಲಿ ಹೊರಬಿಡುತ್ತವೆ ಹೀಗೆ ಹೊರಸೂಸುವ ಬಿಸಿಯು ತಿಳಿಗೆಂಪು ಕದಿರಾಗಿರುತ್ತದೆ (infrared rays). ನೇಸರನ ಬೆಳಕಿನ ಅಲೆಯಗಲ (wavelength) ಮತ್ತು ಮಣ್ಣು/ನೀರು ಹೊರಬಿಡುವ ತಿಳಿಗೆಂಪು ಕದಿರಿನ (infrared rays) ಅಲೆಯಗಲ ಬೇರೆ ಬೇರೆಯಾಗಿರುತ್ತದೆ. ಈ ಅಲೆಯಗಲದ ಆದಾರದ ಮೇಲೆ ಈ ಕಿರಣಗಳು ಕೆಲವು ವಸ್ತುಗಳ ಮೂಲಕ ಹಾದುಹೋಗಲಾರವು. ಉದಾಹರಣೆಗೆಗೆ , ನೇಸರನ ಬೆಳಕು ಗೋಡೆಗಳ ಮೂಲಕ ಹಾದುಹೋಗಲಾಗದು ಆದರೆ ರೇಡಿಯೋ ಅಲೆಗಳು ಗೋಡೆಗಳಮೂಲಕ ಹಾದುಹೋಗವುವು ಅದಕ್ಕೆ ಕಾರಣ ಅವುಗಳ ಅಲೆಯಗಲವೂ ಒಂದು. ಹೀಗೆ ನೇಸರನ ಬೆಳಕು ಗಾಜು/ಪ್ಲಾಸ್ಟಿಕ್ ಮೂಲಕ ಹಾದುಹೋಗುವುದು ಆದರೆ ತಿಳಿಗೆಂಪು ಕದಿರು ತಮ್ಮ ಅಲೆಯಗಲದಿಂದಾಗಿ ಗಾಜು/ಪ್ಲಾಸ್ಟಿಕ್ ಮೂಲಕ ಹಾದುಹೋಗಲಾರವು.

ಒಂದು ಹಸಿರುಮನೆಯು ಕಾಲಿ ಕೋಣೆಯಂತಿದ್ದು ಅದರ ಗೋಡೆ ಹಾಗು ಮಾಡನ್ನು ಗಾಜು ಇಲ್ಲವೇ ಪ್ಲಾಸ್ಟಿಕ್ ನಿಂದ ಕಟ್ಟಿರುತ್ತಾರೆ. ಈ ಗಾಜು/ಪ್ಲಾಸ್ಟಿಕ್ ನಿಂದ ನೇಸರನ ಬೆಳಕು ಹರಿದು ಹಸಿರುಮನೆಯ ಒಳಗೆ ಬರುತ್ತದೆ. ಹೀಗೆ ಒಳಗೆ ಬಂದ ನೇಸರನ ಬೆಳಕು ಮಣ್ಣಿನ ಮೇಲ್ಬಾಗ ಇಲ್ಲವೇ ಗಿಡಗಳಲ್ಲಿರುವ ತೇವವನ್ನು (humidity) ಆರಿಸುತ್ತದೆ ಮತ್ತು ಬಿಸಿಯನ್ನು ಅಂದರೆ ತಿಳಿಗೆಂಪು ಕದಿರನ್ನು (infrared rays) ಹೊರಹಾಕತೊಡಗುತ್ತವೆ.

ಹಸಿರುಮನೆಯ ಒಳಗಿರುವ ಮಣ್ಣು ನೇಸರನ ಬೆಳಕು ಬಿದ್ದೊಡನೆ ಬಿಸಿಯಾಗಿ ಆ ಬಿಸಿಯನ್ನು ಮಣ್ಣಿನ ಮೇಲ್ಬಾಗದಲ್ಲಿರುವ ಗಾಳಿಗೆ ಸಾಗಿಸುತ್ತದೆ. ಇದರಿಂದ ಮಣ್ಣಿನ ಮೇಲ್ಭಾಗದ ಗಾಳಿ ಮೊದಲು ಬಿಸಿಯಾಗತೊಡಗುತ್ತದೆ. ಹೀಗೆ ಬಿಸಿಯಾದ ಗಾಳಿಯ ದಟ್ಟಣೆ (Density) ಕಡಿಮೆಯಿರುವುದರಿಂದ ಇದು ಹರಡಿಕೊಂಡು ನೆಲದಿಂದ ಮೇಲೇರುವುದು ಅದರ ಗುಣ ಹಾಗಾಗಿ ಬಿಸಿಗಾಳಿಯು ಹರಡಿಕೊಂಡು ಮೇಲೇರುತ್ತದೆ. ಹಸಿರುಮನೆಯ ಚಾವಣಿಯ ಹತ್ತಿರದ ತಂಪನೆಯಗಾಳಿಯು ಬಿಸಿಗಾಳಿಗಿಂತ ಹೆಚ್ಚು ದಟ್ಟಣೆ ಹೊಂದಿರುವುದರಿಂದ ಇದು ಕೆಳಭಾಗಕ್ಕೆ ಬರುತ್ತದೆ. ಈ ತಂಪುಗಾಳಿಯು ಮಣ್ಣಿನಿಂದ ಹೊರಬರುತ್ತಿರುವ ಬಿಸಿಯನ್ನು ಹೀರಿಕೊಂಡು ಬಿಸಿಗಾಳಿಯಾಗಿ ಮತ್ತೆ ಮೇಲೇರತೊಡಗುತ್ತದೆ. ಹೀಗೆ ಮಣ್ಣಿನ ಮೇಲ್ಬಾಗದ ಕಡೆಯಿಂದ ಹಸಿರುಮನೆಯ ಚಾವಣಿಯ ಕಡೆಗೆ ಗಾಳಿಯು ಬಿಸಿಯಾಗತೊಡಗುತ್ತದೆ.

ಹಸಿರುಮನೆಗೆ ಬಳಸುವ ಗಾಜು/ಪ್ಲಾಸ್ಟಿಕ್‍ನ ಗುಣವೆಂದರೆ ಅದು ನೇಸರನ ಬೆಳಕನ್ನು ತನ್ನ ಮೂಲಕ ಹರಿಯಲು ಬಿಡುತ್ತದೆ ಆದರೆ ಹೆಚ್ಚು ಅಲೆಯಗಲ ಹೊಂದಿರುವ ಕಿರಣಗಳನ್ನು ಅಂದರೆ infrared rays ನ್ನು ತನ್ನ ಮೂಲಕ ಹರಿಯಲು ಬಿಡುವುದಿಲ್ಲ ಎಂದು ಮೊದಲೇ ತಿಳಿದಿದ್ದೇವೆ. ಹೀಗಾಗಿ ಮಣ್ಣಿನಿಂದ ಹೊರಬಂದ ಬಿಸಿಯು ಹಸಿರುಮನೆಯ ಗಾಳಿಗೆ ಸೇರಿ ಗಾಜು/ಪ್ಲಾಸ್ಟಿಕ್ ಮೂಲಕ ಹೊರಹೋಗಲಾಗದೆ ಇರುತ್ತದೆ. ಇದರಿಂದ ಹಸಿರುಮನೆಯ ಒಳಗಿನ ಗಾಳಿಯು ಬಿಸಿಯಾಗಿ, ಹಸಿರುಮನೆ ಹೊರಗಿನ ಗಾಳಿಯ ಬಿಸುಪಿಗಿಂತ (temperature) ಹೆಚ್ಚಿನ ಬಿಸುಪನ್ನು ಹೊಂದಿರುತ್ತದೆ. ಈ ಎಲ್ಲಾ ಕಾರಣಗಳಿಂದಾಗಿ ಹಸಿರುಮನೆಯ ಒಳಗೆ ಯಾವಾಗಲೂ ಹೊರಗಿನ ಗಾಳಿಪಾಡಿಗಿಂತ ಹೆಚ್ಚಿನ ಬಿಸುಪು ಇರುತ್ತದೆ. ಈ ಹೆಚ್ಚಿನ ಬಿಸುಪು ಗಿಡಗಳ ಬೆಳವಣಿಗೆಗೆ ಹೇಗೆ ನೆರವಾಗುತ್ತದೆ ಎಂಬುದನ್ನು ಮುಂದೆ ನೋಡೋಣ.

ಹಗಲಿನ ಹೊತ್ತು ನೇಸರನ ಬೆಳಕಿನಿಂದ ಹಸಿರುಮನೆಯ ಒಳಗೆ ಹೆಚ್ಚಿನ ಬಿಸುಪು ಇದ್ದರೆ ಇನ್ನೂ ಇರುಳಿನ ಹೊತ್ತಿನಲ್ಲಿ ಇಲ್ಲಿ ಬೆಚ್ಚಗಿನ ಗಾಳಿ ಇರುತ್ತದೆ. ಇದಕ್ಕೆ ಕಾರಣ, ಹಗಲೆಲ್ಲಾ ನೇಸರನ ಬೆಳಕಿನಿಂದ ಬಿಸಿಯಾದ ಹಸಿರು ಮನೆಯೊಳಗಿನ ಮಣ್ಣು ತನ್ನಲ್ಲಿರುವ ಬಿಸುಪನ್ನು ರಾತ್ರಿಯ ಹೊತ್ತು ಹೊರಗಾಳಿಗೆ ಬಿಡಲಾರಂಬಿಸುತ್ತದೆ. ಹಾಗು ಈ ಬಿಸಿಯನ್ನು ಗಾಜು/ಪ್ಲಾಸ್ಟಿಕ್ಕಿನ ಗೊಡೆಯ ನೆರವಿನಿಂದ ಹಸಿರುಮನೆಯ ಒಳಗೇ ಹಿಡಿದಿಡಿಲಾಗುತ್ತದೆ. ಹಾಗಾಗಿ ಹಸಿರು ಮನೆಯ ಒಳಗಿನ ಬಿಸುಪು ಹೊರಗಿನ ಗಾಳಿಯ ಬಿಸುಪಿಗಿಂತ ಹೆಚ್ಚಿರುತ್ತದೆ ಮತ್ತು ಇದು ಗಿಡಗಳ ಸುತ್ತಲಿನ ಗಾಳಿಯನ್ನು ಕೂಡಲೇ ತಂಪಾಗುವುದನ್ನು ತಡೆಯುತ್ತದೆ.

ಗಿಡಗಳ ಬೆಳವಣಿಗೆಗೆ ಹಸಿರುಮನೆ ಹೇಗೆ ನೆರವಾಗುತ್ತದೆ?
ನೇಸರನ ಬೆಳಕನ್ನು ಹಸಿರುಮನೆಯ ಒಳಗೆ ಹಾಯಿಸಿ ಅದರಿಂದ ಬಿಸಿಯಾದ ಮಣ್ಣು/ಗಿಡ/ನೀರಿನಿಂದ ಹೊರಬರುವ ತಿಳಿಗೆಂಪು ಕದಿರನ್ನು (infrared rays) ಹಿಡಿದಿಟ್ಟುಕೊಳ್ಳುವುದರಿಂದ ಗಿಡಗಳ ಬೆಳವಣಿಗೆಗೆ ಹೇಗೆ ನೆರವಾಗುತ್ತದೆ ಎಂಬುದನ್ನು ನೋಡೋಣ.

 

1. ಹೆಚ್ಚಿನ ಬಿಸುಪು ಗಿಡದ ಬೆಳವಣಿಗೆಗೆ ಉಪಕಾರಿ:
ಪ್ರತಿಯೊಂದು ಮರಗಿಡಗಳು ಸೂಲುಗೂಡುಗಳಿಂದ (cell) ಆಗಿರುತ್ತದೆ. ಈ ಸೂಲುಗೂಡುಗಳಲ್ಲಿ ದಿನಕ್ಕೆ ನೂರಾರು ಬಗೆಯ ರಾಸಾಯನಿಕ ಚಟುವಟಿಕೆಗಳು (chemical reaction) ನಡೆಯುತ್ತಿರುತ್ತವೆ, ಇವು ಸೂಲುಗೂಡುಗಳ ಬೆಳವಣಿಗೆಗೆ ನೆರವಾಗುತ್ತವೆ. ಹೀಗೆ ನಡೆಯುವ ರಾಸಾಯನಿಕ ಚಟುವಟಿಕೆಗಳಿಗೆ ದೊಳೆಗಳು (enzymes) ನೆರವನ್ನು ನೀಡುತ್ತವೆ. ಈ ದೊಳೆಗಳು ರಾಸಾಯನಿಕ ಚಟುವಟಿಕೆಗೆ ಬಿರುಗೆ (catalyst)ಯಂತೆ ಕೆಲಸ ಮಾಡುತ್ತವೆ. ಗಿಡದ ಸೂಲುಗೂಡುಗಳ ರಾಸಾಯನಿಕ ಚಟುವಟಿಕೆಯಲ್ಲಿ ‘ಬೆಳಕಿನ ಅಡುಗೆ ‘(photosynthesis) ಕೂಡ ಒಂದು. ಹೀಗೆ ಬೆಳಕಿನ ಒಂದುಗೆಗೆ ನೆರವಾಗುವ ದೊಳೆಗಳು ಕೆಲವು ಹುಳಿಯಳತೆ (pH) ಮತ್ತು ಬಿಸುಪಿನಲ್ಲಿ ಚೆನ್ನಾಗಿ ಕೆಲಸಮಾಡುತ್ತವೆ. ಅತಿ ಕಡಿಮೆ ಹುಳಿಯಳತೆ ಮತ್ತು ಕಡಿಮೆ ಬಿಸುಪು ಇದ್ದರೆ ಈ ದೊಳೆಗಳ ಕೆಲಸ ಕುಂದುತ್ತದೆ. ಹಾಗೆಯೇ ಅತಿ ಹೆಚ್ಚು ಹುಳಿಯಳತೆ ಮತ್ತು ಬಿಸುಪು ಇದ್ದರೂ ಈ ದೊಳೆಗಳು ತಮ್ಮ ಕೆಲಸಮಾಡಲಾರವು ಮತ್ತು ಸಾಯುಲೂ ಬಹುದು. ಹಾಗಾಗಿ, ಈ ದೊಳೆಗಳು ಚೆನ್ನಾಗಿ ತಮ್ಮ ಬಿರುಗೆಯ ಕೆಲಸವನ್ನು ಚೆನ್ನಾಗಿ ಮಾಡಲು ಒಂದು ಒಳ್ಳೆಯ ಬಿಸುಪು ಇರಬೇಕಾಗುತ್ತದೆ. ದೊಳೆಗಳ ಬಗೆಯ ಆಧಾರದ ಮೇಲೆ ಅವು ಹೆಚ್ಚು ಕೆಲಸ ಮಾಡುವ ಬಿಸುಪು ಬೇರೆ ಬೇರೆಯಾಗಿರುತ್ತದೆ.

ಹಸಿರುಮನೆಯ ಒಳಗೆ ಹೊರಗಿನ ಗಾಳಿಗಿಂತ ಹೆಚ್ಚಿನ ಬಿಸುಪು ಇರುವುದರಿಂದ ಗಿಡದ ಸೂಲುಗೂಡುಗಳ ದೊಳೆಗಳು ಈ ಬಿಸುಪಿನಲ್ಲಿ ತಮ್ಮ ಕೆಲಸವನ್ನು ಚೆನ್ನಾಗಿ ನಡೆಸಿ ಬೆಳಕಿನ ಒಂದುಗೆಯನ್ನು ನಡೆಸುತ್ತಿರುತ್ತವೆ. ಗಿಡಗಳಿಗೆ ಬೇಕಾದ ಬಿಸುಪನ್ನು ಮೊದಲೇ ತಿಳಿದುಕೊಂಡು ಆ ಬಿಸುಪನ್ನು ಹಸಿರುಮನೆಯ ಒಳಗೆ ಕಾದುಕೊಳ್ಳಬೇಕಾಗುತ್ತದೆ. ಒಂದು ವೇಳೆ ನೇಸರನ ಬೆಳಕು ಹೆಚ್ಚಾಗಿ ಹಸಿರುಮನೆಯ ಒಳಗಿನ ಬಿಸುಪು ಬೇಕಾದ ಬಿಸುಪಿಗಿಂತ ಹೆಚ್ಚಾದರೆ ಗಾಳಿಕಿಂಡಿಗಳ (Ventilator) ಮೂಲಕ ಬಿಸಿಗಾಳಿಯನ್ನು ಹೊರಹಾಕಿ ಹೊರಗಿನ ತಂಪುಗಾಳಿಯನ್ನು ಹಸಿರುಮನೆಯ ಒಳಗೆ ಬರುವಂತೆ ಏರ್ಪಾಡು ಮಾಡಬೇಕಾಗುತ್ತದೆ. ಅದಕ್ಕಾಗಿ ಹಸಿರುಮನೆಯಲ್ಲಿ ಗಾಳಿಕಿಂಡಿಗಳನ್ನು ಇಟ್ಟಿರಬೇಕಾಗುತ್ತದೆ. ಹಸಿರುಮನೆಯ ಕಿಟಕಿ ಬಾಗಿಲುಗಳು ಕೂಡ ಗಾಳಿಕಿಂಡಿಗಳಾಗಿ ಕೆಲಸ ಮಾಡುತ್ತವೆ. ಹೀಗೆ ಹಗಲೆಲ್ಲಾ ಬಿಸುಪಿನಲ್ಲಿ ಹೆಚ್ಚಿನ ಏರುಪೇರಾಗದೇ, ಬೇಕಾದ ಬಿಸುಪನ್ನು ಕಾಯ್ದುಕೊಳ್ಳುವುದರಿಂದ ಗಿಡದ ದೊಳೆಗಳು ನೇಸರನ ಬೆಳಕು ಸಿಗುವವರೆಗೂ ಚೆನ್ನಾಗಿ ಕೆಲಸಮಾಡಿ ಬೆಳಕಿನ ಅಡುಗೆಯನ್ನು ನಡೆಸುತ್ತವೆ. ಇದರಿಂದ ಹಸಿರು ಮನೆಯ ಒಳಗೆ ಗಿಡಗಳು ಬೇಗನೇ ಮತ್ತು ಚೆನ್ನಾಗಿ ಬೆಳೆಯುತ್ತವೆ.

2. ಹೆಚ್ಚಿನ ತೇವ (humidity) ಗಿಡದ ಬೆಳವಣಿಗೆಗೆ ಉಪಕಾರಿ:
ನೇಸರನ ಬೆಳಕಿದ್ದಾಗ ಬೆಳಕಿನ ಒಂದುಗೆಯನ್ನು ಗಿಡಗಳು ನಡೆಸುತ್ತವೆ ಎಂದು ನಾವು ಮೊದಲೇ ತಿಳಿದಿದ್ದೇವೆ. ಈ ಬೆಳಕಿನ ಒಂದುಗೆಗೆ ನೀರನ್ನೂ ಕೂಡ ಗಿಡಗಳು ಬಳಸುತ್ತವೆ. ಹಾಗಾಗಿ ಹಸಿರುಮನೆಯ ಒಳಗೆ ಸಾಕಷ್ಟು ನೀರಿನ ಏರ್ಪಾಡು ಗಿಡಗಳಿಗೆ ಬೇಕಾಗುತ್ತದೆ. ಮಣ್ಣಿನಿಂದ ಆವಿಯಾದ ನೀರಿನ ತೇವ ಮತ್ತು ಗಿಡಗಳ ಬೆಳಕಿನ ಅಡುಗೆಯಿಂದ ಹೊರಬಂದ ತೇವ ಹಸಿರುಮನೆಯ ಒಳಗೆಯೇ ಇರುತ್ತದೆ, ಗಾಜು/ಪ್ಲಾಸ್ಟಿಕ್ ಗೋಡೆಗಳನ್ನು ದಾಟಿ ತೇವಾಂಶವು ಹೊರಹೋಗಲಾಗದು. ಇದರಿಂದ ಮಣ್ಣಿನಲ್ಲಿರುವ ನೀರು ಬೇಗನೆ ಆವಿಯಾಗುವುದನ್ನು ತಪ್ಪಿಸಬಹುದು ಮತ್ತು ಈ ನೀರನ್ನು ಗಿಡಗಳ ಬೆಳಕಿನ ಅಡುಗೆಗೆ ಒದಗಿಸುತ್ತಿರ ಬಹುದು. ಒಂದು ವೇಳೆ, ಹಸಿರು ಮನೆಯ ಒಳಗೆ ತೇವಾಂಶವು ಅಗತ್ಯಕ್ಕಿಂತ ಹೆಚ್ಚಾದರೆ ಗಿಡಗಳಿಗೆ ಬೆಳಕಿನ ಅಡುಗೆಯಿಂದ ತೇವಾಂಶವನ್ನು ಹೊರಹಾಕಲು ತೊಡಕಾಗುತ್ತದೆ. ಹಾಗಾಗಿ ತೇವಾಂಶವನ್ನು ಬೇಕಾದಷ್ಟು ಮಾತ್ರ ಕಾಯ್ದುಕೊಳ್ಳಲು ಮತ್ತೊಮ್ಮೆ ಗಾಳಿಕಿಂಡಿಗಳ ನೆರವನ್ನು ಪಡೆಯಬಹುದು. ಒಳಗಿರುವ ತೇವದ ಗಾಳಿ ಹೊರಹೋಗಿ ಹೊರಗಿನ ಗಾಳಿ ಒಳಬರುವಂತೆ ಗಾಳಿಕಿಂಡಿಗಳನ್ನು ಹಸಿರುಮನೆಗಳಲ್ಲಿ ಅಳವಡಿಸಲಾಗಿರುತ್ತದೆ.

3. ಹೊರಗಿನ ಕ್ರಿಮಿಕೀಟಗಳಿಂದ ಕಾಯುವುದು.
ಹಸಿರುಮನೆಯು ಗಾಜು/ಪ್ಲಾಸ್ಟಿಕ್ ನ ಗೋಡೆಗಳಿಂದ ಕಟ್ಟಿರುವುದರಿಂದ ಗಿಡಗಳ ಬೆಳವಣಿಗೆಗೆ ತೊಂದರೆ ಕೊಡುವ ಹೊರಗಿನ ಕ್ರಿಮಿಕೀಟಗಳಿಂದ ದೂರವಿಡಬಹುದಾಗಿದೆ.

4. ಕೆಟ್ಟ ಗಾಳಿಪಾಡಿನಿಂದ ಕಾಯುವುದು.
ಹಸಿರುಮನೆಯ ಗಿಡಗಳನ್ನು ಅತಿ ಹೆಚ್ಚಿನ ಮಳೆ, ಗಾಳಿ ಮತ್ತು ಬಿಸಿಲಿನಿಂದ ಆಗುವ ತೊಂದರೆಗಳಿಂದ ಕಾಪಾಡಬಹುದು. ಅಲ್ಲದೇ ಇರುಳಿನ ಹೆಚ್ಚು ಹೊತ್ತು ಹಸಿರುಮನೆಯ ಒಳಗೆ ಬೆಚ್ಚಗಿನ ಗಾಳಿ ಇರುವುದರಿಂದ ತಂಪುಗಾಳಿಯಿಂದ ಗಿಡಗಳಿಗೆ ಆಗುವ ತೊಂದರೆಗಳನ್ನು ತಪ್ಪಿಸಬಹುದು. ಕೆಲವು ಕಡೆ ಹಸಿರುಮನೆಗಳಿಗೆ ಹಸಿರುಬಣ್ಣದ ಗಾಜು/ಪ್ಲಾಸ್ಟಿಕ್ ಅನ್ನು ಬಳಸಿರುತ್ತಾರೆ, ಇದು ನೇಸರನ ಬಿಸಿಲು ಅಗತ್ಯಕ್ಕಿಂತ ಹೆಚ್ಚಾಗಿ ಹಸಿರುಮನೆಯ ಒಳಗೆ ಬರದಂತೆ ತಡೆಯುತ್ತದೆ.

ಹೀಗೆ, ಹಸಿರುಮನೆಯನ್ನು ಬಳಸಿ ಗಿಡಗಳನ್ನು ಬೆಳಸುವುದರಿಂದ ಗಿಡಗಳಿಗೆ ಬೇಕಾದ ಬಿಸುಪು ಮತ್ತು ತೇವಾಂಶ ದಿನದ ಹೆಚ್ಚುಕಾಲ ಸಿಗುತ್ತಿರುತ್ತದೆ. ಇದರಿಂದ ಗಿಡಗಳು ತಮ್ಮ ಬೆಳಕಿನ ಒಂದುಗೆಯನ್ನ್ಯು ನಡೆಸಿ ಆದಷ್ಟು ಬೇಗ ಮತ್ತು ಚೆನ್ನಾಗಿ ಬೆಳೆಯುತ್ತವೆ. ಹಸಿರುಮನೆಯ ಬಿಸುಪು ಹಾಗು ತೇವಾಂಶವನ್ನು ನಮಗೆ ಬೇಕಾದ ಬಗೆಯಲ್ಲಿ ಹಿಡಿದಿಟ್ಟುಕೊಳ್ಳಬಹುದಾಗಿದೆ. ಇದು ಹೆಚ್ಚು ಇಳುವರಿ ತರುವಲ್ಲಿ ನೆರವಾಗುತ್ತದೆ.

(ಮಾಹಿತಿ ಸೆಲೆ: www.ishs.org420magazine)

(ಚಿತ್ರ ಸೆಲೆ: wikipedia)

ಗಾಳಿಯಿಂದ ಕುಡಿಯುವ ನೀರನ್ನು ಪಡೆಯಲೊಂದು ಚಳಕ

ಜಯತೀರ್ಥ ನಾಡಗೌಡ.

ಊಟ ಸಿಗದಿದ್ದರೂ ಮನುಷ್ಯ ಬದುಕಬಲ್ಲ. ಆದರೆ ಉಸಿರ್ಗಾಳಿ(Oxygen) ಮತ್ತು ಕುಡಿಯುವ ನೀರು ಇಲ್ಲದೇ ಹೋದರೆ ನಮ್ಮ ಬದುಕನ್ನು ಊಹಿಸಿಕೊಳ್ಳಲಾಗದು. ಈ ಜಗತ್ತಿನ 2/3 ರಷ್ಟು ನೀರಿನಿಂದಲೇ ತುಂಬಿದೆ, ಆದರೆ ಇದರಲ್ಲಿ ಕುಡಿಯಲು ತಕ್ಕುದಾದ ನೀರು ಬಹಳ ಕಡಿಮೆ. ಇತ್ತೀಚಿನ ದಿನಗಳಲ್ಲಂತೂ ವಾತಾವರಣದ ಏರುಪೇರುಗಳಿಂದ ಚೊಕ್ಕವಾದ ಕುಡಿಯುವ ನೀರನ್ನು ಕಳೆದುಕೊಳ್ಳುತ್ತಿದ್ದೇವೆ. ಕುಡಿಯುವ ನೀರು ಪಡೆಯಲು ಇಂದಿನ ದಿನಗಳಲ್ಲೂ ಮಂದಿ ಹಲವಾರು ಮೈಲಿ ಸಾಗುವ ಪರಿಸ್ಥಿತಿ ಭಾರತದಲ್ಲಿದೆ.

ಆಫ್ರಿಕಾ ಖಂಡದ ಹಿಂದುಳಿದ ನಾಡುಗಳಲ್ಲೊಂದಾದ ಇಥಿಯೋಪಿಯಾ (Ethiopia) ಕೂಡ ಇದಕ್ಕೆ ಹೊರತಾಗಿಲ್ಲ. ಇಥಿಯೋಪಿಯಾ ನಾಡಿನ ಕೆಲವೆಡೆ ಒಳ್ಳೆಯ ನೀರು ಪಡೆಯಲು ಸುಮಾರು ಆರು ಗಂಟೆ ಅಲೆದಾಡಬೇಕಂತೆ. ಈ ನಾಡಿನಲ್ಲಿ ಕುಡಿಯುವ ನೀರನ್ನು ಹುಡುಕಿ ತರಲು ಮಕ್ಕಳು-ಮಂದಿ ಸೇರಿ ವರುಶಕ್ಕೆ ಸುಮಾರು 4 ಸಾವಿರ ಕೋಟಿಯಷ್ಟು ಗಂಟೆಗಳನ್ನು ಬಳಸುತ್ತಾರಂತೆ. ಇಷ್ಟಾದರೂ ಕುಡಿಯಲು ತಕ್ಕುದಾದ ನೀರು ಸಿಗುವುದು ಕಷ್ಟದ ಕೆಲಸ. ಹತ್ತಿರದಲ್ಲಿರುವ ಕೆರೆ, ಬಾವಿ, ಹೊಂಡದ ನೀರು, ಕೊಳಚೆ ಮತ್ತು ನಂಜಿನ ವೈರಸ್ ಗಳಿಂದ ಕೂಡಿರುತ್ತವೆ. ಪ್ರತಿ ವರುಶ ನೂರಾರು ಕೋಟಿ ಮಂದಿ ಆಫ್ರಿಕಾದಲ್ಲಿ ಕುಡಿಯುವ ನೀರಿನ ಕೊರತೆ ಅನುಭವಿಸುತ್ತಿದ್ದಾರೆ.

ಈ ವಿಷಯದ ಆಳವರಿತ ಹಾಲಿವುಡ್ ನ ಹೆಸರುವಾಸಿ ನಟ ಹಾಗು ವಾಟರ್ ಡಾಟ್ ಆರ‍್ಗ್ (water.org) ಕೂಟ ಹುಟ್ಟು ಹಾಕಿದ ಮ್ಯಾಟ್ ಡಮೋನ್ (Matt Damon), ಇವರೊಂದಿಗೆ ಮೈಕ್ರೊಸಾಫ್ಟ್ ಕೂಟದ ಬಿಲ್ಲ್ ಗೇಟ್ಸ್ (Bill Gates) ಒಂದಾಗಿ ಹೊಸ ಹಮ್ಮುಗೆಯೊಂದಕ್ಕೆ ಕೈ ಹಾಕಿದ್ದುಂಟು. ಕೊಳಚೆ ಹಾಗೂ ಬಳಸಿದ ನೀರನ್ನು ಮರಳಿ ಕುಡಿಯುವ ನೀರಾಗಿ ಮಾರ್ಪಡಿಸುವುದೇ ಈ ಹಮ್ಮುಗೆಯ ಕೆಲಸ. ಯಾವುದೇ ಲಾಭದ ಉದ್ದೇಶವಿರದ ಈ ಕೆಲಸಕ್ಕೆಂದೇ ಇಲ್ಲಿಯವರೆಗೆ ನೂರಾರು ಲಕ್ಷ ರೂಪಾಯಿಗಳ ವೆಚ್ಚ ಮಾಡಲಾಗುತ್ತಿದೆ. ಇಂತ ಬೆನ್ನುತಟ್ಟುವ ಕೆಲಸವೊಂದು ನಡೆಯುತ್ತಿದ್ದರೂ ಇದು ಪರಿಣಾಮಕಾರಿಯಾಗಿರಲಾರದು ಎಂಬುದು ಕೆಲವರ ವಾದ. ಈ ಚಳಕ ತೊಡಕಿನಿಂದ ಕೂಡಿದೆ, ಇಥಿಯೋಪಿಯಾದ ಹಳ್ಳಿಗರು ಇದನ್ನು ಬಳಸಿಕೊಳ್ಳುವುದು ಮತ್ತು ಇದು ಕೆಟ್ಟಾಗ, ಸರಿಪಡಿಸುವುದು ಸುಲಭವಲ್ಲವೆಂಬುದು ವಾದಿಸುವರ ಹೇಳಿಕೆ. ಈ ಹಮ್ಮುಗೆಯಲ್ಲಿ ಹಣದ ವೆಚ್ಚ ಹೆಚ್ಚಿದ್ದು ಮುಂಬೊತ್ತಿನ (future) ದಿನಗಳಲ್ಲಿ ಇದನ್ನು ಸರಿದೂಗಿಸಿಕೊಂಡು ಹೋಗುವದಕ್ಕೂ ಹೆಚ್ಚಿನ ಹಣ ತಗಲುತ್ತದೆಂದು ಇವರು ಹೇಳಿದ್ದಾರೆ.

ಕುಡಿಯುವ ನೀರನ್ನು ಚೊಕ್ಕಗೊಳಿಸಲು ಹಲವರು ಹರಸಾಹಸ ಪಡುತ್ತಿರುವ ಈ ಹೊತ್ತಿನಲ್ಲೇ ಅರ್ಟುರೋ ವಿಟ್ಟೋರಿ (Arturo Vittori) ಎಂಬ ಕೈಗಾರಿಕೆ ಈಡುಗಾರ (Industrial Designer) ಮತ್ತು ಅವರ ಜೊತೆ ಕೆಲಸಗಾರ ಆಂಡ್ರಿಯಾಸ್ ವೊಗ್ಲರ್ (Andreas Vogler) ಇಬ್ಬರೂ ಸೇರಿ ಸುಲಭ, ಸರಳ ಮತ್ತು ಅಗ್ಗದ ಮಾಡುಗೆಯೊಂದನ್ನು (product) ಮುಂದಿಟ್ಟಿದ್ದಾರೆ. ಈ ಉತ್ಪನ್ನದ ಹೆಸರು ವಾರ್ಕಾ ವಾಟರ್. ಬೀಸುವ ಗಾಳಿಯಲ್ಲಿರುವ ನೀರನ್ನು ಹಿಡಿದು ಅದನ್ನೇ ಕುಡಿಯುವ ನೀರಾಗಿ ಮಾರ್ಪಡಿಸುವ ಚಳಕ. ವಾರ್ಕಾ ವಾಟರ್ (Warka Water) ಅನ್ನು ತೊಡಕಿಲ್ಲದೆ ಸುಲಭವಾಗಿ ಜೋಡಿಸಬಹುದಾಗಿದ್ದು ಇದರ ಬೆಲೆಯು ಅಗ್ಗವಾಗಿದೆ.

ವಾರ್ಕಾ ವಾಟರ್ ಮೂವತ್ತು ಅಡಿ ಉದ್ದವಾಗಿದ್ದು ಹೂದಾನಿಯ ಆಕಾರದ ಗೋಪುರವೆನ್ನಬಹುದು. ಇಥಿಯೋಪಿಯಾದ ಪ್ರಮುಖ ಮರವೊಂದರಿಂದ ವಾರ್ಕಾ ಎನ್ನುವ ಹೆಸರು ಮೂಡಿದೆ. ವಾರ್ಕಾ ವಾಟರ್ ಗೋಪುರದ ಹೊರಮೈ ಇಲಾಸ್ಟಿಕ್ ಕೊಳವೆಯಂತ ವಸ್ತುವಿನಿಂದ ತಯಾರಿಸಲಾಗಿದೆ. ಇದರಿಂದ ತೂಕವು ಹಗುರವಾಗಿರುತ್ತದೆ. ಈ ಕೊಳವೆಗಳು ಒಂದಕ್ಕೊಂದು ಬದಿಯಲ್ಲಿ ಗಟ್ಟಿಯಾಗಿ ಹೆಣೆಯಲ್ಪಟ್ಟಿರಿವುದರಿಂದ ಜೋರಾಗಿ ಬೀಸುವ ಗಾಳಿಗೆ ಮಯ್ಯೊಡ್ಡಿದಾಗಲೂ, ಗಟ್ಟಿಯಾಗಿ ನಿಂತು ಗಾಳಿಯು ತಮ್ಮ ಮೂಲಕ ಹಾಯ್ದು ಹೋಗುವಂತೆ ನೋಡಿಕೊಳ್ಳುತ್ತವೆ. ಇದರೊಳಗೆ ನೈಲಾನ್ ಬಲೆಯೊಂದನ್ನು ತೂಗು ಹಾಕಲಾಗಿದ್ದು ಇದು ಚೀನಿಯರ ದೊಡ್ಡ ಕೈಬೆಳಕಿನಂತೆ (Lantern) ಕಾಣಿಸುತ್ತದೆ. ಜೋರು ಗಾಳಿ ಇದರಲ್ಲಿ ಹಾಯ್ದು ಹೋದಾಗ ಗಾಳಿಯಲ್ಲಿನ ನೀರಿನ ಇಬ್ಬನಿಗಳು ಕೂಡಿಡಲ್ಪಡುತ್ತವೆ. ಗಾಳಿಯು ಇಂಗುತ್ತಲೆ ಈ ಇಬ್ಬನಿಯ ಹನಿಗಳು ನೀರಾಗಿ ಕೆಳ ಭಾಗಕ್ಕೆ ಹರಿಯುತ್ತ ಬುಗುಣಿಯಲ್ಲಿ ಬಂದು ಸೇರುತ್ತವೆ. ಈ ಬುಗುಣಿಗೆ ಕೊಳವೆ ಜೋಡಿಸಿ ನಲ್ಲಿಯಂತೆ ನೀರು ಪಡೆಯಬಹುದಾಗಿರುತ್ತದೆ.

ವಿಟ್ಟೋರಿಯವರ ಈ ಅರಕೆ ಹೊಸದೇನು ಅಲ್ಲ, ಈ ಹಿಂದೆ ಪ್ರಖ್ಯಾತ ಎಮ್.ಐ.ಟಿ (MIT) ಕಲಿಕೆವೀಡಿನ ಓದುಗನೊಬ್ಬ ಇದನ್ನೇ ಹೋಲುವ ಎಣಿಕೆಯೊಂದನ್ನು(Concept)  ಬೆಳವಣಿಗೆಗೊಳಿಸಿದ್ದ. ಆದರೆ ಈ ಹಿಂದೆ ಬೆಳವಣಿಗೆ ಹೊಂದಿದ ಎಲ್ಲ ಎಣಿಕೆಗಳಿಂತ ವಿಟ್ಟೋರಿಯವರ ಮಾದರಿಯು ಅಗ್ಗದ ಬೆಲೆಯಲ್ಲಿ ಹೆಚ್ಚು ನೀರನ್ನು ನೀಡುವಂತದ್ದಾಗಿರುವುದರಿಂದ ಜಗತ್ತಿನೆಲ್ಲೆಡೆ ಸುದ್ದಿ ಮಾಡುತ್ತಿದೆ.

ಇಥಿಯೋಪಿಯಾದಂತ ನಾಡುಗಳಲ್ಲಿ ಮಂದಿಗೆ ಬೇಕಾಗುವ ಸೌಕರ್ಯಗಳ ಕೊರತೆಯಿದೆ. ಕೊಳವೆ ಬಾವಿಯನ್ನು ಮಾಡಿಸಲು ಸಾವಿರಾರು ಅಡಿ ಭೂಮಿಯನ್ನು ಕೊರೆಯಬೇಕು. ನಂತರ ಭೂಮಿಯಿಂದ ನೀರನ್ನು ಮೇಲೆತ್ತಲು ಒತ್ತುಕಗಳನ್ನು(Pump) ಬಳಸಬೇಕಾಗುತ್ತದೆ. ನೆನಪಿರಲಿ ಈ ಒತ್ತುಕಗಳಿಗೆ ಮಿಂಚಿನ ಕಸುವಿನ(Electricity) ಅಗತ್ಯವಿರುತ್ತದೆ. ಇಷ್ಟೆಲ್ಲ ಮಾಡಲು ಸಾಕಷ್ಟು ದುಡ್ಡನ್ನು ಹೂಡಿಕೆ ಮಾಡಬೇಕು. ಇದಕ್ಕೆ ವಾರ್ಕಾ ವಾಟರ್ ಪರಿಹಾರವಾಗಲಿದೆ ಎಂಬುದು ವಿಟ್ಟೋರಿಯವರ ಅಂಬೋಣ.

ವಾರ್ಕಾ ಗೋಪುರಗಳ ಒರೆಗೆ ಹಚ್ಚುವ(Testing) ಕೆಲಸ ನಡೆಯುತ್ತಿದ್ದು, ಇದು ದಿನವೊಂದಕ್ಕೆ 25 ಗ್ಯಾಲನ್ ಅಂದರೆ ಸುಮಾರು 95 ಲೀಟರ್ ಗಳಶ್ಟು ನೀರನ್ನು ಒದಗಿಸಬಲ್ಲದು. ಬಿಸುಪಿನ ಏರುಪೇರು ಹೆಚ್ಚಿರುವ ಮರಳುಗಾಡಿನಲ್ಲೂ ಇವುಗಳ ಕೆಲಸ ಪರಿಣಾಮಕಾರಿಯಾಗಿರುವ ಸುದ್ದಿ ವಿಟ್ಟೋರಿಯವರ ಹುರುಪು ಹೆಚ್ಚಾಗಿಸಿದೆ. ಈ ಗೋಪುರಗಳ ಕಟ್ಟಲು ಸುಲಭವಾಗಿ ಅಳಿದುಹೋಗಬಲ್ಲ ಸಾಮಗ್ರಿ ಬಳಸಲಾಗಿದೆ ಇದರಿಂದ ವಾತಾವರಣಕ್ಕೂ ಯಾವುದೇ ತೊಂದರೆಯುಂಟಾಗುವುದಿಲ್ಲ. ಅಲ್ಲದೇ ಸ್ಥಳೀಯರಿಗೆ ಇದರ ಬಳಕೆ, ಜೋಡಿಸುವಿಕೆ ಮತ್ತು ಸರಿದೂಗಿಸುವಿಕೆಯ ಬಗ್ಗೆ ಅರಿವು ಮಾಡಿಕೊಟ್ಟರೆ ಸುಲಭವಾಗಿ ಕಾಯ್ದುಕೊಂಡು ಹೋಗಬಹುದಂತೆ. ಇದಕ್ಕೆಂದೇ ವಿಶೇಷ ಪಳಗಿದ ಕೆಲಸಗಾರರು ಬೇಕಿಲ್ಲ.

ವಾರ್ಕಾ ಗೋಪುರವೊಂದನ್ನು ಆಣಿಗೊಳಿಸಿ ಜೋಡಿಸಲು 500 ಡಾಲರ್ ಹಣ ಸಾಕಂತೆ. ಬಿಲ್ ಗೇಟ್ಸ್, ಮ್ಯಾಟ್ ಡಮೋನ್ ಹಮ್ಮುಗೆ ಬಳಸುತ್ತಿರುವ ಕೊಳಚೆ ನೀರು ಚೊಕ್ಕಗೊಳಿಸುವ ಚಳಕಕ್ಕಿಂತ ಮುಕ್ಕಾಲು ಭಾಗ ಕಡಿಮೆ (ಇದರ ಬೆಲೆ ಸುಮಾರು 2200 ಡಾಲರ್ ). ಹೆಚ್ಚಿನ ಸಂಖ್ಯೆಯಲ್ಲಿ ಅಣಿಗೊಳಿಸಿದರೆ ಬೆಲೆಯು ಇನ್ನೂ ಅಗ್ಗವಾಗಿರಲಿದೆ ಎಂದು ಹೇಳುತ್ತಾರೆ ವಿಟ್ಟೋರಿ. ಮುಂದಿನ ದಿನಗಳಲ್ಲಿ ವಾರ್ಕಾ ವಾಟರ್ ಗೋಪುರಗಳನ್ನು ಇಥಿಯೋಪಿಯಾದಲ್ಲಿ ನೆಡಲು ತಯಾರಿ ನಡೆಸಿರುವ ವಿಟ್ಟೋರಿಯವರು ಇದಕ್ಕೆ ಬಂಡವಾಳ ಹೂಡಿಕೆದಾರರ ಹುಡುಕುವ ಕೆಲಸದಲ್ಲಿದ್ದಾರೆ.

ವಿಟ್ಟೋರಿಯವರು ಹೇಳುವ ಪ್ರಕಾರ “ಚೊಕ್ಕ ಕುಡಿಯುವ ನೀರನ್ನು ಒದಗಿಸುವುದಷ್ಟೇ ಈ ಹಮ್ಮುಗೆಯ ಉದ್ದೇಶವಲ್ಲ, ಕುಡಿಯುವ ನೀರು ಹೊತ್ತು ತರಲು ಇಥಿಯೋಪಿಯಾ ಮಕ್ಕಳು ಪೋಲು ಮಾಡುತ್ತಿರುವ ಹೊತ್ತನ್ನು ಇದು ಅಳಿಸಿಹಾಕಬಲ್ಲದು. ಈ ಹೊತ್ತನ್ನು ಕಲಿಕೆಯಂತ ಇತರೆ ಕೆಲಸಗಳಲ್ಲಿ ತೊಡಗಿಸಿದರೆ ಮಕ್ಕಳ ಮುಂಬೊತ್ತು ಬೆಳಗಲಿದೆ”. ಇಂತ ಸಾಮಾಜಿಕ ಕಳಕಳಿಯ ಅರಕೆಗಳು ಜಗತ್ತಿನಲ್ಲಿ ಇಮ್ಮಡಿಗೊಳ್ಳಲಿ, ವಿಟ್ಟೋರಿಯವರ ಹಮ್ಮುಗೆಗೆ ಒಳ್ಳೆಯದಾಗಲಿ.

 

ಮರಗಿಡಗಳು ಬೆಳೆಯುವುದು ಹೇಗೆ?

ರತೀಶ ರತ್ನಾಕರ.

ಚಳಿಗಾಲದ ಮೊದಲು ತನ್ನ ಎಲೆಗಳನ್ನು ಉದುರಿಸಿ ಚಳಿಗಾಲದುದ್ದಕ್ಕೂ ಮರಗಿಡಗಳು ಯಾವುದೇ ಹೊಸ ಎಲೆಗಳನ್ನು ಚಿಗುರಿಸದೆ ಒರಗಿದ (dormant) ಸ್ಥಿತಿಯಲ್ಲಿ ಇರುತ್ತವೆ. ಮಳೆ ಬಿದ್ದೊಡನೆ ಚಿಗುರಿಕೊಂಡು ತನ್ನ ಬೆಳವಣಿಗೆಯನ್ನು ಮುಂದುವರಿಸುತ್ತವೆ. ಮರಗಳ ಈ ಬೆಳವಣಿಗೆ ಹೇಗೆ ನಡೆಯುತ್ತದೆ ಎಂದು ಒಮ್ಮೆ ಇಣುಕಿ ನೋಡಿಕೊಂಡು ಬರೋಣ.

ಮೊಳಕೆಯೊಡೆದ ಗಿಡದ ಎಲೆಯು ನೇಸರನ ಬೆಳಕು, ಮಣ್ಣಿನಿಂದ ಸಿಗುವ ನೀರು, ಆರಯ್ಕೆ (Nutrition), ಗಾಳಿಯಲ್ಲಿರುವ ಕಾರ್ಬನ್ ಡಯ್ ಆಕ್ಸಯ್ಡ್ ಮತ್ತು ಎಲೆಯಲ್ಲಿರುವ ಎಲೆಹಸಿರು (Chlorophyl) ಅನ್ನು ಬಳಸಿಕೊಂಡು ‘ಬೆಳಕಿನ ಅಡುಗೆ’ (Photo Synthesis)ಯ ಮೂಲಕ ಗಿಡಕ್ಕೆ ಬೇಕಾದ ಊಟವನ್ನು ಸಿದ್ದ ಮಾಡುತ್ತದೆ, ಜೊತೆಗೆ ಆಕ್ಸಿಜನ್ ಅನ್ನು ಹೊರಗಾಳಿಗೆ ಬಿಡುತ್ತದೆ. ಹೀಗೆ ಸಿದ್ದ ಮಾಡಿದ ಊಟವು ಗಿಡದ ಉಳಿದ ಭಾಗಗಳಿಗೆ ಹರಡಲಾಗುತ್ತದೆ ಇದು ಗಿಡದ ಬೆಳವಣಿಗೆಯಲ್ಲಿ ಮುಖ್ಯವಾದ ಪಾತ್ರ ವಹಿಸುತ್ತದೆ. ಮರಗಿಡಗಳು ಎರೆಡು ಬಗೆಯಲ್ಲಿ ಬೆಳೆಯುತ್ತವೆ, ಅವುಗಳ ಕುರಿತು ಅರಿಯೋಣ ಬನ್ನಿ.

ಮೊದಲನೆಯ ಬೆಳವಣಿಗೆಯು ಮರಗಿಡದ ಕೊಂಬೆ/ರಕ್ಕೆಗಳಲ್ಲಿ ನಡೆಯುತ್ತದೆ. ಗಿಡವು ಎತ್ತರವಾಗಿ ಬೆಳೆಯಲು ಇದು ನೆರವಾಗುತ್ತದೆ. ರಕ್ಕೆಯ ತುದಿಯಲ್ಲಿ ಕುಡಿ (Meristem) ಇರುತ್ತದೆ ಇದು ಗಿಡದ ಬೆಳವಣಿಗೆಗೆ ಬೇಕಾದ ಒಂದೇ ಬಗೆಯ ಸೂಲುಗೂಡುಗಳನ್ನು ಹೊಂದಿರುತ್ತದೆ. ಗಿಡದ ಬೇರಿನಿಂದ ನೀರು ಹಾಗು ಆರಯ್ಕೆ ದೊರೆತೊಡನೆ ಈ ಸೂಲುಗೂಡುಗಳು ಹಿಗ್ಗತೊಡಗುತ್ತವೆ ಮತ್ತು ಒಡೆದು ತನ್ನ ಎಣಿಕೆಯನ್ನು ಹೆಚ್ಚಿಸತೊಡಗುತ್ತದೆ. ಈ ಸೂಲುಗೂಡುಗಳ ಒಡೆಯುವಿಕೆಯಿಂದ ಗಿಡದ ಕೊಂಬೆಗಳಲ್ಲಿ ಕುಡಿಯು ಉದ್ದವಾಗಿ ಬೆಳೆದು ಹೊಸ ಎಲೆ/ಮೊಗ್ಗು ಚಿಗುರಲಾರಂಬಿಸುತ್ತದೆ. ಈ ಕೆಲಸ ನಡೆಯಲು ಗಿಡಕ್ಕೆ ಬೇಕಾದ ನೇಸರನ ಬೆಳಕು, ಕಾವು, ಗಾಳಿ, ನೀರು ಮತ್ತು ಮಣ್ಣಿನಿಂದ ಸಿಗುವ ಆರಯ್ಕೆಯ ಪಾತ್ರ ದೊಡ್ಡದಿದೆ. ಚಳಿಗಾಲದಲ್ಲಿ ಇರುಳಿಗಿಂತ ಹಗಲು ಚಿಕ್ಕದಾಗಿರುತ್ತದೆ, ಬಿಸುಪು ಕಡಿಮೆಯಿರುತ್ತದೆ, ಸಾಕಷ್ಟು ನೀರು ಸಿಗುವುದಿಲ್ಲ ಮತ್ತು ನೇಸರನ ಬೆಳಕಿನ ತೀವ್ರತೆ ಕೂಡ ಕಡಿಮೆಯಿರುತ್ತದೆ.

ಹಾಗಾಗಿ ಚಳಿಗಾಲದ ಗಾಳಿಪಾಡು ಒಟ್ಟಾರೆಯಾಗಿ ಮರಗಿಡಗಳ ಬೆಳವಣಿಗೆಗೆ ಅನುಕೂಲಕರವಾಗಿರುವುದಿಲ್ಲ. ಆದ್ದರಿಂದ ಇವು ಚಳಿಗಾಲದಲ್ಲಿ ಒರಗಿದ ಸ್ಥಿತಿಯಲ್ಲಿ ಇರುತ್ತವೆ. ಬೇಸಿಗೆ ಶುರುವಾಗುವ ಮುನ್ನ ಒಂದು ಮಳೆ ಬಿದ್ದೊಡನೆ ಮರಗಿಡಗಳ ಬೆಳವಣಿಗೆಗೆ ಬೇಕಾದ ಗಾಳಿಪಾಡು ಸಿಗುತ್ತದೆ ಮತ್ತು ಇವು ಚಿಗುರತೊಡಗುತ್ತವೆ. ಇದಲ್ಲದೇ, ಬೇರುಗಳ ತುದಿಯಲ್ಲಿಯೂ ಕೂಡ ಈ ಬೇರಿನ ಕುಡಿ (Root apical meristem) ಇರುತ್ತದೆ, ಇವು ಕೂಡ ತನ್ನ ಬೆಳವಣಿಗೆಗೆ ಬೇಕಾದ ಗಾಳಿಪಾಡು ಸಿಕ್ಕೊಡನೆ ತನ್ನ ಸೂಲುಗೂಡುಗಳನ್ನು ಹಿಗ್ಗಿಸಿ, ಒಡೆದು ಬೆಳೆಯುತ್ತಾ ಹೋಗುತ್ತವೆ. ಮರಗಿಡಗಳ ತಳಿಗಳಿಗೆ ತಕ್ಕಂತೆ ಬೇರಿನ ಇಲ್ಲವೇ ಕಾಂಡದ ಬೆಳವಣಿಗೆ ನಡೆಯುತ್ತದೆ.

ಎರಡನೆ ಬಗೆಯ ಬೆಳವಣಿಗೆಯಲ್ಲಿ ಬಗೆಯಲ್ಲಿ ಮರದ ಕಾಂಡವು ತನ್ನ ಅಗಲವನ್ನು ಹೆಚ್ಚಿಸುತ್ತಾ ಹೋಗುತ್ತದೆ. ಮರದ ಕಾಂಡದಲ್ಲಿ ಒಟ್ಟು ನಾಲ್ಕು ಭಾಗಗಳಿರುತ್ತವೆ ಅವು ತೊಗಟೆ/ಸಿಪ್ಪೆ, ನೀರ‍್ಗೊಳವೆ (Xylem), ಕೂಳ್ಗೊಳವೆ(Phloem), ತಿರುಳು (Cambium) ಮತ್ತು ನಡುಮರ (heartwood). ಇವುಗಳ ಕುರಿತು ಮಾಹಿತಿಯನ್ನು ಪಡೆಯೋಣ.

ತಿರುಳು: ಕಾಂಡದಲ್ಲಿ ಬೆಳೆಯುವ ತುಂಬಾ ಮುಖ್ಯವಾದ ಭಾಗ ಇದಾಗಿದೆ. ಇದರ ಸೂಲುಗೂಡುಗಳು ಅತಿ ಹೆಚ್ಚು ಹುರುಪಿನಿಂದ ಇರುತ್ತವೆ, ಗಿಡದ ಬೆಳವಣಿಗೆಗೆ ಅನುಕೂಲಕರ ಗಾಳಿಪಾಡು ಸಿಕ್ಕಾಗ ತಿರುಳಿನಲ್ಲಿರುವ ಸೂಲುಗೂಡುಗಳು ಬೆಳೆದು ಒಡೆದು ಹೊಸ ಹೊಸ ಸೂಲುಗೂಡುಗಳಾಗು ಮಾರ್ಪಾಡಾಗುತ್ತವೆ. ಹೀಗೆ ಮೂಡಿದ ಕೆಲವು ಹೊಸ ಸೂಲುಗೂಡುಗಳು ತಿರುಳಿನ ಹೊರ ಭಾಗಕ್ಕೆ ಸಾಗಿ ಕೂಳ್ಗೊಳವೆ ಆಗುತ್ತದೆ. ಮತ್ತೆ ಕೆಲವು ಹೊಸ ಸೂಲುಗೂಡುಗಳು ತಿರುಳಿನ ಒಳಭಾಗಕ್ಕೆ ಸಾಗಿ ನೀರ‍್ಗೊಳವೆ ಆಗುತ್ತದೆ. ಹಾಗಾಗಿ ಈ ತಿರುಳು ಕೂಳ್ಗೊಳವೆ ಮತ್ತು ನೀರ‍್ಗೊಳವೆಯ ನಡುವೆ ಇರುತ್ತದೆ.

ನೀರ‍್ಗೊಳವೆ: ತಿರುಳಿನ ಒಳಭಾಗಕ್ಕೆ ಇರುವ ಈ ಕೊಳವೆಯು ತಿರುಳಿನಿಂದ ಒಳಭಾಗಕ್ಕೆ ಸರಿದ ಹೊಸ ಸೂಲುಗೂಡುಗಳಿಂದ ಆಗಿರುತ್ತದೆ. ಮರಗಿಡಗಳ ಬೇರಿನಲ್ಲಿ ಸಣ್ಣ ಸಣ್ಣ ಬೇರು ಕೂದಲುಗಳು ಇರುತ್ತವೆ, ಈ ಕೂದಲುಗಳ ನೆರವಿನಿಂದ ಮಣ್ಣಿನಲ್ಲಿರುವ ನೀರು ಮತ್ತು ಆರಯ್ಕೆಯನ್ನು ಬೇರುಗಳು ಎಳೆದುಕೊಳ್ಳುತ್ತವೆ. ಹೀಗೆ ಎಳೆದುಕೊಂಡ ನೀರು ಮತ್ತು ಆರಯ್ಕೆಯನ್ನು ನೀರ‍್ಗೊಳವೆಯ ಮೂಲಕ ಗಿಡದ ಎಲೆಗಳಿಗೆ ಸಾಗಿಸುತ್ತದೆ. ಮೊದಲೆ ತಿಳಿಸಿದಂತೆ ಗಿಡದ ಎಲೆಗಳ ಬೆಳಗಿನ ಒಂದುಗೆಗೆ ಇದು ಬೇಕಾಗುತ್ತದೆ. ಹೀಗೆ ನೀರ‍್ಗೊಳವೆಗಳು ನೆರವಾಗುತ್ತವೆ.

ನಡುಮರ: ತಿರುಳಿನಿಂದ ಹೊಸ ಹೊಸ ಸೂಲುಗೂಡುಗಳು ನೀರ‍್ಗೊಳವೆಯ ಜಾಗಕ್ಕೆ ಸರಿಯುತ್ತಿರುತ್ತವೆ ಹಾಗಾಗಿ ನೀರ‍್ಗೊಳವೆಯ ಸೂಲುಗೂಡುಗಳು ಮತ್ತಷ್ಟು ಒಳಕ್ಕೆ ಸರಿದು ಗಟ್ಟಿಯಾಗುತ್ತಾ ಹೋಗುತ್ತವೆ ಹೀಗೆ ಮರದ ಒಳಭಾಗಕ್ಕೆ ಸರಿದು ಗಟ್ಟಿಯಾದ ಸೂಲುಗೂಡುಗಳಿಂದ ನಡುಮರ ಉಂಟಾಗಿರುತ್ತದೆ. ಮರವು ಮೇಲಕ್ಕೆ ಬೆಳೆಯುತ್ತಿದ್ದಂತೆ ಬೇಕಾದ ಗಟ್ಟಿತನವನ್ನು ಇದು ಒದಗಿಸುತ್ತದೆ.

ಕೂಳ್ಗೊಳವೆ: ಬೆಳಕಿನ ಅಡುಗೆಯ (Photo Synthesis) ಮೂಲಕ ಎಲೆಗಳು ತನ್ನ ಊಟವನ್ನು ಸಿದ್ದ ಮಾಡುತ್ತವೆ ಎಂದು ಮೊದಲೇ ತಿಳಿದೆವು. ಹೀಗೆ ಸಿದ್ಧ ಮಾಡಿದ ಊಟವನ್ನು ಗಿಡದ ಉಳಿದ ಭಾಗಗಳಿಗೆ ಕೂಳ್ಗೊಳವೆಯ ಮೂಲಕ ಹರಡುತ್ತದೆ. ಕೂಳ್ಗೊಳವೆಯು ತಿರುಳಿನ ಹೊರಭಾಗಕ್ಕೆ ಇದ್ದು, ತಿರುಳಿನ ಹೊಸ ಸೂಲುಗೂಡುಗಳಿಂದ ಉಂಟಾಗಿರುತ್ತದೆ.

ತೊಗಟೆ/ಸಿಪ್ಪೆ: ತಿರುಳಿನ ಹೊಸ ಹೊಸ ಸೂಲುಗೂಡುಗಳು ಕೂಳ್ಗೊಳವೆಯ ಜಾಗಕ್ಕೆ ಸರಿಯುತ್ತಿರುತ್ತವೆ ಹಾಗಾಗಿ ಕೂಳ್ಗೊಳವೆಯ ಸೂಲುಗೂಡುಗಳು ಮತ್ತಷ್ಟು ಹೊರಕ್ಕೆ ಸರಿದು ಗಟ್ಟಿಯಾಗಿ ತೊಗಟೆ/ಸಿಪ್ಪೆ ಆಗುತ್ತದೆ. ಕಾಂಡದ ಒಳಭಾಗವನ್ನು ಗಾಳಿಪಾಡಿನಿಂದ ಕಾಪಾಡಲು ಇದು ನೆರವಾಗುತ್ತದೆ.

ಹೀಗೆ, ಕಾಂಡದ ತಿರುಳಿನಲ್ಲಿರುವ ಸೂಲುಗೂಡುಗಳು ಬೆಳೆದು ಒಡೆದು ಹೊಸ ಹೊಸ ಸೂಲುಗೂಡುಗಳಾಗಿ, ನೀರ‍್ಗೊಳವೆ, ಕೂಳ್ಗೊಳವೆ, ನಡುಮರ ಮತ್ತು ತೊಗಟೆ ಸಿಪ್ಪೆಗಳಾಗಿ ಅಗಲವಾಗಿ ಬೆಳೆಯುತ್ತಾ ಹೋಗುತ್ತದೆ. ಒಟ್ಟಾರೆಯಾಗಿ, ಮರದ ಬೆಳವಣಿಗೆಯು ಬೇಸಿಗೆ ಹಾಗು ಮಳೆಗಾಲದಲ್ಲಿ ಹೆಚ್ಚಾಗಿ ಇರುತ್ತದೆ ಮರಕ್ಕೆ ಬೇಕಾದ ಗಾಳಿಪಾಡು ಈ ಕಾಲಗಳಲ್ಲಿ ಸಿಗುವುದು ಇದಕ್ಕೆ ಮುಖ್ಯ ಕಾರಣ. ಆದ್ದರಿಂದ ನಾವು ಮಾರ್ಚ್ ತಿಂಗಳಲ್ಲಿ ಬೀಳುವ ಮಳೆಗೆ ಮರಗಿಡಗಳ ತುಂಬೆಲ್ಲಾ ಚಿಗುರನ್ನು ನೋಡುತ್ತೇವೆ.

ಸೆಲೆ: www.sciencedirect.com hort.ifas.ufl.edu 

 

ಎ.ಸಿ.(ಏರ್ ಕಂಡಿಷನರ್) ಹೇಗೆ ಕೆಲಸ ಮಾಡುತ್ತದೆ?

ಜಯತೀರ್ಥ ನಾಡಗೌಡ.

ಇಂದು ಎ.ಸಿ. ಸರ್ವೇ ಸಾಮಾನ್ಯವಾಗಿ ಎಲ್ಲಕಡೆ ಕಂಡುಬರುವ ಉಪಕರಣ. ನಾವಿರುವ ಕೋಣೆಯ ಒಳಗಿನ ಬಿಸುಪನ್ನು ಹೊರಗಟ್ಟಿ ತಂಪಾದ ಗಾಳಿ ಒದಗಿಸುವುದು ಇದರ ಕೆಲಸ. ಭಾರತದಂತ ಹೆಚ್ಚು ಬಿಸುಪಿನ ದೇಶಗಳಲ್ಲಂತೂ ಬೇಸಿಗೆಯಲ್ಲಿ ಎ.ಸಿ.ಯಿರದೇ ಎಷ್ಟೋ ಕಚೇರಿ, ಹೋಟೆಲ್, ಸಿನಿಮಾ ಮಂದಿರ, ಬ್ಯಾಂಕ್‌ಗಳು ಕೆಲಸ ಮಾಡಲಾರದಷ್ಟು ಇವುಗಳ ಬೇಡಿಕೆ. ತಂಪುಗಾಳಿ ನೀಡಿ ಸೆಕೆಯ ವಾತಾವರಣಕ್ಕೆ ಕಡಿವಾಣ ಹಾಕುವ ಎ.ಸಿ.ಗಳು ಹೇಗೆ ಕೆಲಸ ಮಾಡುತ್ತವೆ ನೋಡೋಣ ಬನ್ನಿ.

ಎ.ಸಿ. ಹೇಗೆ ಕೆಲಸ ಮಾಡುತ್ತದೆ ಎಂದು ತಿಳಿಯಲು, ಅದರ ಪ್ರಮುಖ ಬಿಡಿಭಾಗಗಳು ಯಾವುವೆಂದು ಅರಿಯೋಣ. ಯಾವುದೇ ಎ.ಸಿ.ಯಲ್ಲಿ ಕೆಳಕಂಡ ಭಾಗಗಳು ಪ್ರಮುಖವಾಗಿರುತ್ತವೆ:

ಒತ್ತುಕ(Compressor)

ಇಂಗಿಸುಕ(Condenser)

ಸೋಸುಕ(Filter)

ಬೀಸಣಿಗೆ(Fan)

ತಂಪುಕ(Refrigerant Chemical)

ಸಾಮಾನ್ಯವಾಗಿ ತಂಪುಕ ಒಂದು ಬಿಸುಪನ್ನು ಹೀರುವ ರಾಸಾಯನಿಕವಾಗಿದ್ದು, ಗಾಳಿಯ ರೂಪದಲ್ಲಿ ಎ.ಸಿ.ಯಲ್ಲಿ ಕೂಡಿಟ್ಟಿರುತ್ತಾರೆ.

ಎ.ಸಿ. ಶುರುವಾದ ಮೇಲೆ,ಮೊದಲು ಆವಿಯಾಗಿಸುಕದ(Evaporator) ಬಳಿಯಿರುವ ಬೀಸಣಿಗೆ ಕೋಣೆಯ ಬಿಸಿಗಾಳಿಯನ್ನು ಎಳೆದುಕೊಳ್ಳುತ್ತದೆ. ಈ ಬಿಸುಪಿನ ಗಾಳಿಯಲ್ಲಿರುವ ಕಸ, ಧೂಳನ್ನು ಸೋಸುಕ ಬೇರ್ಪಡಿಸಿ, ಆವಿಯಾಗಿಸುಕದ ಸುರುಳಿಗಳ(Evaporator Coils) ಮೇಲೆ ಹರಿಸುತ್ತದೆ. ಆಗ ತಂಪಾದ ಈ ಸುರುಳಿಗಳು, ಬಿಸಿ ಗಾಳಿಯಲ್ಲಿರುವ ಬಿಸುಪನ್ನು ಕಡಿಮೆಯಾಗಿಸಿ ಬೀಸಣಿಗೆ ಮೂಲಕ ಕೋಣೆಗೆ ತಂಪು ಗಾಳಿಯನ್ನು ಹೊರಸೂಸುತ್ತವೆ. ಇದೆಲ್ಲ ಕೋಣೆಯಲ್ಲಿರುವ ಎ.ಸಿ.ಯ ಮುಂಭಾಗದಲ್ಲಿ ನಡೆಯುತ್ತದೆ. ಕೋಣೆಯ ಹಿಂದಿರುವ ಎ.ಸಿ.ಯ ಹಿಂಭಾಗದಲ್ಲಿ,  ತಂಪುಕವು ಒತ್ತುಕದ ಮೂಲಕ ಸಾಗಿ, ಹೆಚ್ಚಿನ ಒತ್ತಡ ಮತ್ತು ಬಿಸುಪಿಗೇರುತ್ತದೆ. ಹೆಚ್ಚು ಬಿಸಿಯಾಗಿರುವ  ತಂಪುಕ ಇಂಗಿಸುಕದ ಮೂಲಕ ಸಾಗಿದಾಗ ಅಲ್ಲಿನ ವಾತಾವರಣದ ಕಡಿಮೆ ಬಿಸುಪಿನ ಗಾಳಿ ಮತ್ತು ತಂಪುಕದ ನಡುವೆ ಬಿಸುಪು ವಿನಿಮಯವಾಗಿ(Heat Exchange), ಬಿಸಿಯಾಗಿರುವ ತಂಪುಕ ತನ್ನ ಬಿಸುಪನ್ನು ಕಳೆದುಕೊಳ್ಳುತ್ತದೆ, ತಂಪುಕದ ಬಿಸುಪು ಪಡೆದ ಅಲ್ಲಿನ ಗಾಳಿಯನ್ನು ಇಂಗಿಸುಕದ ಹಿಂದಿರುವ ಬೀಸಣಿಗೆ ಹೊರಹಾಕುತ್ತದೆ. ಮುಂದೆ, ತಂಪುಕ ಹಿಗ್ಗುವ ತೆರಪಿನ(Expansion Valve) ಮೂಲಕ ಸಾಗಿದಾಗ ದ್ರವರೂಪದಿಂದ ತಂಪಾದ ಗಾಳಿ ರೂಪಕ್ಕೆ ಮಾರ್ಪಾಡುಗೊಳ್ಳುತ್ತೆ. ಇದೇ ತಂಪಾದ ತಂಪುಕ ಗಾಳಿ ಆವಿಯಾಗಿಸುಕದ ಮೇಲೆ ಸಾಗಿದಾಗ, ಅದೇ ಪ್ರಕ್ರಿಯೆ ಮರುಕಳಿಸುತ್ತದೆ. ಈ ಸಂಪೂರ್ಣ ಪ್ರಕ್ರಿಯೆಯಲ್ಲಿ ಎ.ಸಿ.ಯು, ಯಾವುದೇ ಹೊರಗಿನ ತಾಜಾ ಗಾಳಿಯನ್ನು ತನ್ನೊಳಗೆಳೆದುಕೊಂಡು  ಕೋಣೆ/ ಕೊಠಡಿಗಳನ್ನು ತಂಪಾಗಿಸುವುದಿಲ್ಲ. ಬದಲಿಗೆ,ಕೋಣೆಯಲ್ಲಿರುವ ಬಿಸಿಗಾಳಿಯನ್ನೇ ಒಳಗೆಳೆದುಕೊಂಡು ತಂಪಾಗಿಸಿ ಮತ್ತೆ ಕೋಣೆಗೆ ಸೂಸುತ್ತದೆ. ಇದನ್ನು ಬಿಸಿಗಾಳಿಯ ಮರುಬಳಕೆ ಎನ್ನಬಹುದು. ಈ ಬಿಸುಪಿನ ವಿನಿಮಯ ಪ್ರಕ್ರಿಯೆಯಲ್ಲಿ ಕೋಣೆಯ ಗಾಳಿಯಲ್ಲಿನ ತೇವಾಂಶವನ್ನು ಹೀರುವ ಕೆಲಸವೂ ನಡೆದಿರುತ್ತದೆ.

ಮನೆಗಳಲ್ಲಿ ಕಂಡುಬರುವ ಎ.ಸಿ.ಯ ಬಿಡಿಭಾಗಗಳು

ಎ.ಸಿ.ಗಳಲ್ಲಿ ಪ್ರಮುಖವಾಗಿ ಎರಡು ಬಗೆ. ನಡುನಟ್ಟ ಎ.ಸಿ.(Centralized AC) ಒಂದು ಬಗೆಯಾದರೆ, ಭಾಗವಾದ ಅಂದರೆ ಸ್ಪ್ಲಿಟ್ ಎ.ಸಿ.(Split AC) ಇನ್ನೊಂದು ಪ್ರಮುಖ ಬಗೆಯಾಗಿದೆ. ಒಂದೆಡೆ ಕೇಂದ್ರಿತ ಎ.ಸಿ.ಗಳು ದೊಡ್ಡ ಕಚೇರಿ, ಬ್ಯಾಂಕ್, ಮುಂತಾದೆಡೆ ಜೋಡಿಸಲು ಮತ್ತು ಬಳಸಲು ಸೂಕ್ತ. ದೊಡ್ಡ ಕಚೇರಿ, ಬ್ಯಾಂಕ್, ಆಸ್ಪತ್ರೆಯ ಗ್ಯಾರೇಜ್, ತಳಮಹಡಿಯಲ್ಲೋ ಎ.ಸಿ.ಯ ಮುಂಭಾಗವನ್ನು ಅಳವಡಿಸಿ, ಕೊಳವೆಗಳ(Ducts) ಮೂಲಕ ತಂಪಾದ ಗಾಳಿಯನ್ನು ಬೇಕಾದ ಹಲವಾರು ಕೋಣೆಗಳಿಗೆ ಸಾಗುವಂತೆ ಏರ್ಪಾಟು ಮಾಡಿರುತ್ತಾರೆ. ಇಂತಹ ಎ.ಸಿ.ಗಳು ಕಡಿಮೆ ಅಳವಡಿಕೆಯ ವೆಚ್ಚ, ಒಂದೆಡೆಯಿಂದ ಎಲ್ಲ ಕೋಣೆಗಳ ಗಾಳಿಯ ನಿಯಂತ್ರಣ ಮತ್ತು ಎಲ್ಲ ಕೋಣೆಗಳು ಒಂದೇ ಗುಣಮಟ್ಟದ ಗಾಳಿ ಒದಗಿಸುವ ಅನುಕೂಲಗಳನ್ನು ಹೊಂದಿವೆ. ಕಚೇರಿ, ಆಸ್ಪತ್ರೆ ಮುಂತಾದೆಡೆ ನಡುನಟ್ಟ ಎ.ಸಿ. ಒದಗಿಸಲು ಕೊಳವೆಗಳನ್ನು ಜೋಡಿಸಿಕೊಳ್ಳಬೇಕು, ಇದಕ್ಕೆ ಹೆಚ್ಚಿನ ವೆಚ್ಚ ಮತ್ತು ಜಾಗ ತಗುಲುತ್ತದೆ. ಇಂತಹ ಎ.ಸಿ.ಗಳ ಅಳವುತನವೂ ಕಡಿಮೆಯಿರುವುದರಿಂದ ಹೆಚ್ಚಿನ ವಿದ್ಯುತ್ ಬಿಲ್‌ಗೆ ಹಣ ನೀಡಬೇಕಾಗುತ್ತದೆ.

ಚಿಕ್ಕದಾದ ಸ್ಪ್ಲಿಟ್ ಎ.ಸಿ.ಗಳನ್ನು ಮನೆಗಳಲ್ಲಿ ಹೆಚ್ಚಾಗಿ ಕಾಣುತ್ತೇವೆ. ಮನೆಯ ಮಲಗುವ ಕೋಣೆಗೆ ಮಾತ್ರವೇ ಎ.ಸಿ. ಬೇಕಿದ್ದರೆ, ಈ ಚಿಕ್ಕದಾದ ಎ.ಸಿ.ಗಳು ಹೆಚ್ಚು ತಕ್ಕುದಾಗಿವೆ. ಹೆಚ್ಚು ಕಸುವಿನ ಅಳವುತನ(Energy Efficiency), ಅಳವಡಿಸಲು ಕಡಿಮೆ ಜಾಗ, ನಡುನಟ್ಟ ಎ.ಸಿ.ಗಳಿಗಿಂತ ಕಡಿಮೆ ವಿದ್ಯುತ ಬಿಲ್ ಇವೆಲ್ಲ ಅನುಕೂಲಗಳನ್ನು ಹೊಂದಿದೆ. ಮನೆಯೊಂದರಲ್ಲಿ ಕೋಣೆಗೊಂದರಂತೆ ಈ ಸ್ಪ್ಲಿಟ್ ಎ.ಸಿ. ಅಳವಡಿಸಿದರೆ, ಅಳವಡಿಕೆ ವೆಚ್ಚ ಹೆಚ್ಚಾಗುತ್ತದೆ. ಪ್ರತಿಕೋಣೆಯಲೂ ಎ.ಸಿ.ಯ ಮುಂಭಾಗ ಇರಲೇಬೇಕು, ಇದರಿಂದ ಗೋಡೆಗಳ/ ಮನೆಯ ಒಳಾಂಗಣದ ಅಂದ ಹಾಳಗೆಡುವುತ್ತವೆ. ನಡುನಟ್ಟ ಅಳವಡಿಕೆಯ ಎ.ಸಿ.ಗಳಲ್ಲಿ ಕಂಡುಬರುವ ಸೋಸುಕಗಳು ಹೆಚ್ಚಿನ ಕಸ ಕಡ್ಡಿ ಧೂಳು ಬೇರ್ಪಡಿಸುವ ಸಾಮರ್ಥ್ಯ ಹೊಂದಿರುವುದರಿಂದ ಅವು ಸ್ಪ್ಲಿಟ್ ಎ.ಸಿ.ಗಿಂತ ಒಳ್ಳೆಯ ಗುಣಮಟ್ಟದ ಗಾಳಿಯನ್ನು ಹೊರಸೂಸುತ್ತವೆ.

 

ಮಾಹಿತಿ ಮತ್ತು ತಿಟ್ಟ ಸೆಲೆ:

A Guide to How a Split Air Conditioner Works


https://point-s.ca/en/blog-and-advices/how-does-your-cars-air-conditioning-work
https://www.carrier.com/residential/en/us/products/air-conditioners/how-do-air-conditioners-work/

How Does an Air Conditioner Work?

ಬಿತ್ತಿದ ಬೀಜ ಮೊಳಕೆ ಒಡೆದೀತು ಹೇಗೆ?

ರತೀಶ ರತ್ನಾಕರ.

ಮಣ್ಣಿನಲ್ಲಿ ಬಿತ್ತಿರುವ, ನೀರಿನಲ್ಲಿ ಕಟ್ಟಿಟ್ಟಿರುವ ಇಲ್ಲವೇ ಮಣ್ಣಿನ ಮೇಲೆ ಬಿದ್ದಿರುವ ಬೀಜಗಳು ಮೊಳಕೆಯೊಡೆದಿರುವುದನ್ನು ನಾವು ನೋಡಿರುತ್ತೇವೆ. ಬೀಜವನ್ನು ಯಾವುದಾದರು ಒಂದು ಡಬ್ಬಿಯೊಳಗೆ ಹಾಗೆಯೇ ಇಟ್ಟಿದ್ದಲ್ಲಿ ಅದು ಯಾವ ಬದಲಾವಣೆಯೂ ಆಗದೆ ಹಾಗೆಯೇ ಇರುವ ಬೀಜವು ಮಣ್ಣಿನ ಇಲ್ಲವೇ ನೀರಿನ ಜಾಗಕ್ಕೆ ಬಿದ್ದೊಡನೆ ಮೊಳಕೆಯೊಡೆದು ಗಿಡವಾಗ ತೊಡಗುತ್ತದೆ. ತಾನಾಗಿಯೇ ಆಗುವ ಈ ಕೆಲಸ ಹಲವು ಹಂತಗಳಲ್ಲಿ ನಡೆಯುತ್ತದೆ. ಇದು ಹೇಗೆ ಎಂದು ತಿಳಿದುಕೊಳ್ಳೋಣ ಬನ್ನಿ.

ಬೀಜವು ಹೇಗೆ ಮೊಳಕೆಯೊಡೆಯುತ್ತದೆ ಎಂದು ಅರಿಯುವ ಮೊದಲು ಬೀಜದ ಏರ್ಪಾಟಿನ (structure) ಬಗ್ಗೆ ತಿಳಿದುಕೊಳ್ಳೋಣ. ಯಾವುದೇ ಬೀಜದಲ್ಲಿ ಈ ಕೆಳಗಿನ ಮೂರು ಭಾಗಗಳಿರುತ್ತವೆ.

ಬಸಿರ ಪೊರೆಕ (Endosperm) : ಬೀಜದ ಹೆಚ್ಚಿನ ಭಾಗವನ್ನು ಇದು ಪಡೆದುಕೊಂಡಿರುತ್ತದೆ. ಬೀಜದ ಬಸಿರಿಗೆ ಬೇಕಾಗುವ ಊಟವನ್ನು ಮತ್ತು ಆರಯ್ಕೆಯನ್ನು ಗಂಜಿಯ ರೂಪದಲ್ಲಿ ಈ ಬಸಿರ ಪೊರೆಕ ನೀಡುತ್ತದೆ, ಅಲ್ಲದೇ ಇದರಲ್ಲಿ ಎಣ್ಣೆ ಹಾಗು ಮುನ್ನು (protein) ಅಂಶಗಳು ಇರುತ್ತದೆ. ಇದು ಬಸಿರಿಗೆ ಬೇಕಾಗುವ ಆರಯ್ಕೆಯನ್ನು ಮಾಡುವುದಲ್ಲದೇ ಅದರ ಊಟವನ್ನು ಕೂಡಿಡುವ ಕೆಲಸವನ್ನು ಮಾಡುತ್ತದೆ. ಬೀಜದ ಹೆಚ್ಚಿನ ಪಾಲು ಬಸಿರ ಪೊರೆಕದಿಂದ ಕೂಡಿರುತ್ತದೆ.

ಬಸಿರು (Embryo): ಬೀಜದ ಬಸಿರು ಇದಾಗಿದ್ದು ಮುಂದೆ ಬೀಜವು ಮೊಳಕೆಯೊಡೆದು ಬೇರು, ಕಾಂಡ ಹಾಗು ಎಲೆಗಳಾಗಲು ಬೇಕಾಗುವಂತಹ ಗೂಡುಕಟ್ಟುಗಳನ್ನು (tissue) ಇದು ಹೊಂದಿರುತ್ತದೆ. ಜೊತೆಗೆ ಮೊಳಕೆ ಎಲೆಯ (cotyledon) ಗೂಡುಕಟ್ಟುಗಳು ಕೂಡ ಇರುತ್ತವೆ. ಇವು ಬೀಜದ ಬಸಿರಿಗೆ ಬೇಕಾಗಿರುವ ಊಟವನ್ನು ಪಕ್ಕದಲ್ಲಿರುವ ಬಸಿರ ಪೊರೆಕದಿಂದ ಬಸಿರಿಗೆ ಸಾಗಿಸುವಲ್ಲಿ ನೆರವಾಗುತ್ತವೆ. ಅಲ್ಲದೇ, ಬೀಜವು ಬಿಡುವ ಮೊದಲ ಎಲೆಯನ್ನು ಕಾಪಾಡಲು ಬೇಕಾಗಿರುವ ಕಾಪು (shield) ಈ ಮೊಳಕೆ ಎಲೆಯಲ್ಲಿ ಇರುತ್ತದೆ. ಬೀಜವು ಒಂದೆಲೆ ಗಿಡವಾಗಬೇಕೋ ಇಲ್ಲವೇ ಎರಡಲೆ ಗಿಡವಾಗಬೇಕೋ ಎಂಬುದು ಈ ಮೊಳಕೆ ಎಲೆಯ ಗೂಡುಕಟ್ಟುಗಳಲ್ಲೇ ಇರುತ್ತದೆ.

ಸಿಪ್ಪೆ: ಬಸಿರು ಹಾಗು ಬಸಿರ ಪೊರೆಕವನ್ನು ಸುತ್ತಿಕೊಂಡು ಎರವಾಗದಂತೆ ಕಾಪಾಡುವುದೇ ಸಿಪ್ಪೆ. ಸಿಪ್ಪೆಯು ಕೆಲವು ಬೀಜಗಳಲ್ಲಿ ತೆಳುವಾಗಿ (ಕಡಲೇ ಬೀಜದಲ್ಲಿರುವ ಹಾಗೆ), ಇನ್ನು ಕೆಲವು ಬೀಜಗಳಲ್ಲಿ ದಪ್ಪನಾಗಿ (ತೆಂಗಿನಕಾಯಿಯಲ್ಲಿರುವ ಹಾಗೆ) ಇರುತ್ತದೆ. ಹೊರಗಿನ ಹಾನಿಗಳಿಂದ ಬಸಿರನ್ನು ಕಾಪಾಡುವುದೇ ಇದರ ಮುಖ್ಯ ಕೆಲಸವಾಗಿರುತ್ತದೆ.

ಒಂದು ಬೀಜವು ಮೊಳಕೆಯೊಡೆಯಲು ಅದಕ್ಕೆ ತಕ್ಕನಾದ ಉಸಿರುಗಾಳಿ (oxygen), ನೀರು ಹಾಗು ಕಾವು ಬೇಕಾಗುತ್ತದೆ. ಬೀಜವು ಯಾವ ತಳಿ ಎಂಬುದರ ಮೇಲೆ ಬೇಕಾಗಿರುವ ಗಾಳಿ, ನೀರು ಮತ್ತು ಬಿಸುಪು ತೀರ್ಮಾನವಾಗುತ್ತದೆ. ಕೆಲವು ಬಗೆಯ ಬೀಜಗಳು ಮೊಳಕೆ ಒಡೆಯುವಲ್ಲಿ ಬೆಳಕು ಕೂಡ ತನ್ನ ಪಾತ್ರ ವಹಿಸುತ್ತದೆ. ಒಂದು ಬೀಜವು ತಾನು ಮೊಳಕೆಯೊಡೆಯಲು ಬೇಕಾದ ನೀರು, ಉಸಿರುಗಾಳಿ ಮತ್ತು ಬಿಸುಪಿಗೆ ತೆರೆದುಕೊಳ್ಳುವವರೆಗೂ ಒರಗಿದ (dormant) ಸ್ಥಿತಿಯಲ್ಲಿ ಇರುತ್ತದೆ. ಅದರ ಒಳಗಿರುವ ಬಸಿರಿಗೆ ಬಸಿರ ಪೊರೆಕ ಊಟ ಒದಗಿಸುತ್ತಿರುತ್ತದೆ, ಇದನ್ನು ಬಿಟ್ಟರೆ ಅದರಲ್ಲಿ ಯಾವ ಬೆಳವಣಿಗೆಯು ಆಗುತ್ತಿರುವುದಿಲ್ಲ. ಒಮ್ಮೆ ಬೇಕಾದ ನೀರು, ಉಸಿರುಗಾಳಿ ಹಾಗು ಬಿಸುಪಿಗೆ ತೆರೆದುಕೊಂಡಾಗ ಅದು ಮೊಳಕೆ ಒಡೆಯುವ ಕೆಲಸವನ್ನು ಆರಂಭಿಸುತ್ತದೆ.

ಬೀಜವು ಮೊಳಕೆ ಒಡೆಯಲು ಬೇಕಾದ ನೀರಿಗೆ ತಾಕಿದಾಗ ಹೊರಗಿನ ನೀರು ಬೀಜದ ಸಿಪ್ಪೆಯೊಳಗೆ ಒಳಹೀರಿಕೆಯ (imbibition) ಮೂಲಕ ಬರುತ್ತದೆ. ಸಿಪ್ಪೆಯೊಳಗೆ ಬಂದ ನೀರನ್ನು ಬಳಸಿಕೊಂಡು ಬಸಿರಿನಲ್ಲಿರುವ ಸೂಲುಗೂಡುಗಳು (cells) ತಮ್ಮ ತರುಮಾರ್ಪುವ (metabolism) ಕೆಲಸವನ್ನು ಹೆಚ್ಚುಗೊಳಿಸಿ ಹಿಗ್ಗಲಾರಂಬಿಸುತ್ತವೆ ಮತ್ತು ಕೆಲವು ಸೂಲುಗೂಡುಗಳು ಒಡೆದು ಹೆಚ್ಚಲಾರಂಬಿಸುತ್ತವೆ. ಬೆಳವಿಕ (auxins) ಮತ್ತು ಇತರೆ ಸುರಿಗೆಗಳು (harmones) ಕೂಡ ಬಸಿರಿನ ಬೆಳವಣಿಗೆಯನ್ನು ಹುರಿದುಂಬಿಸುತ್ತವೆ.

ಬೀಜದ ಒಳಗೆ ಬಂದಿರುವ ನೀರು, ನೀರ‍್ದೊಳೆಗಳನ್ನು (hydrolytic Enzymes) ಚುರುಕುಗೊಳಿಸುತ್ತವೆ ಇವು ಬಸಿರ ಪೊರೆಕದಲ್ಲಿರುವ ಎಣ್ಣೆ, ಮುನ್ನು (protien) ಮತ್ತು ಗಂಜಿಯನ್ನು ಒಡೆದು ಬಸಿರಿನ ತರುಮಾರ್ಪಿಗೆ ನೆರವಾಗುವಂತಹ ರಾಸಾಯನಿಕಗಳನ್ನು ಕೊಡುತ್ತವೆ. ಉಸಿರುಗಾಳಿ ಮತ್ತು ಬಿಸುಪು ಕೂಡ ಬಸಿರಿನ ತರುಮಾರ್ಪಿಗೆ ನೆರವಾಗುತ್ತವೆ. ಇವನ್ನೆಲ್ಲಾ ಬಳಸಿಕೊಂಡು ಬಸಿರು ಮತ್ತಷ್ಟು ಬೆಳೆಯುತ್ತಾ ಹೋಗುತ್ತದೆ. ಹೀಗೆ ಬೆಳೆಯುತ್ತಿರುವ ಬಸಿರಿಗೆ ಬೇಕಾಗಿರುವ ಆರಯ್ಕೆಯನ್ನು ಬಸಿರ ಪೊರೆಕ ಕೊಡುತ್ತಿರುತ್ತದೆ. ಮೊಳಕೆಯು ಒಡೆದು ಎಲೆಯನ್ನು ಬಿಟ್ಟು ನೇಸರನ ಬೆಳಕಿನ ನೆರವಿನಿಂದ ‘ಬೆಳಕಿನ ಒಂದುಗೆ’ (photosynthesis) ನಡೆಸಿ ತನ್ನ ಊಟವನ್ನು ತಾನೇ ಸಿದ್ದ ಮಾಡಿಕೊಳ್ಳುವವರೆಗೂ ಈ ಬಸಿರ ಪೊರೆಕ ನೋಡಿಕೊಳ್ಳುತ್ತಿರುತ್ತದೆ.

ಸಿಪ್ಪೆಯ ಒಳಗೆ ಬಸಿರು ಬೆಳೆಯುತ್ತಿದ್ದಂತೆ ಒಳಗಿನ ಒತ್ತಡ ಹೆಚ್ಚಾಗಿ ಸಿಪ್ಪೆಯು ಒಡೆದು ಬಿಡುತ್ತದೆ. ಸಿಪ್ಪೆಯನ್ನು ಒಡೆದ ಬಸಿರು ಮೊದಲು ತಾಯಿಬೇರಾಗಿ (radicle) ಹೊರಬರುತ್ತದೆ. ಈ ತಾಯಿಬೇರು ಸುತ್ತಲಿನಲ್ಲಿರುವ ಮಣ್ಣನ್ನು ಸೀಳಿಕೊಂಡು ಬೆಳೆಯತೊಡಗುತ್ತದೆ. ಮಣ್ಣಿನಲ್ಲಿರುವ ನೀರು, ಉಸಿರುಗಾಳಿ, ಬಿಸುಪು ಮತ್ತು ಆರಯ್ಕೆಗಳನ್ನು ಬಳಸಿಕೊಂಡು ಬಸಿರು ಮತ್ತಷ್ಟು ಬೆಳೆಯುತ್ತದೆ.

ಒಮ್ಮೆ ತಾಯಿಬೇರಿನ ಬೆಳವಣಿಗೆ ಗಟ್ಟಿಗೊಂಡಮೇಲೆ ಎಳೆಗರಿಯ(plumule) ಬೆಳವಣಿಗೆ ಶುರುವಾಗುತ್ತದೆ. ಎಳೆಗರಿಯು ಮಣ್ಣಿನ ಒಳಗಿನಿಂದ ನೇಸರನ ಬೆಳಕನ್ನು ಹುಡುಕಿಕೊಂಡು ನೆಲದ ಮೇಲ್ಭಾಗಕ್ಕೆ ಬರುತ್ತದೆ. ಹಲವು ಬಗೆಯ ಮೊಳಕೆಗಳಲ್ಲಿ ಎಳೆಗರಿಯನ್ನು ಕಾಯಲು ಬೀಜದ ಸಿಪ್ಪೆಯ ಭಾಗಗಳು ಅಂಟಿಕೊಂಡಿರುತ್ತದೆ. ಎಳೆಗರಿಯು ಬೆಳೆದು ಮೊದಲ ಮೊಳಕೆ ಎಲೆಗಳನ್ನು (Cotyledons) ಬಿಡುತ್ತದೆ ಆಗ ಈ ಸಿಪ್ಪೆಯ ಬಾಗಗಳು ಉದುರಿ ಬೀಳುತ್ತವೆ. ಈ ಎಲೆಗಳು ನೇಸರನ ಬೆಳಕಿನ ನೆರವಿನಿಂದ ತಮ್ಮ ಊಟವನ್ನು ಸಿದ್ದಮಾಡಲಾರಂಬಿಸುತ್ತವೆ. ಈ ಹೊತ್ತಿನಲ್ಲಿ ತಾಯಿಬೇರು ಕೂಡ ಕವಲೊಡೆದು ಹರಡಿಕೊಂಡು ಬೆಳೆಯುತ್ತಾ ಹೋಗುತ್ತದೆ. ಮುಂದೆ ಮೊಳಕೆಯೊಡೆದ ಬೀಜದ ಕಾಂಡ ಹಾಗು ಎಲೆಗಳು ಬಿಟ್ಟು ಬೆಳೆಯುತ್ತದೆ.

ಹೀಗೆ ಒಂದು ಬೀಜವು ಮಣ್ಣಿಗೆ ಸೇರಿ ಮೊಳೆಕೆ ಒಡೆದು ಎಲೆಯಾಗುವವರೆಗೂ ಹಲವು ಹಂತಗಳಲ್ಲಿ ಬದಲಾವಣೆಗಳು ನಡೆಯುತ್ತಿರುತ್ತವೆ. ಈ ಕೆಲಸದಲ್ಲಿ, ಗಾಳಿ, ನೀರು, ಬಿಸುಪು ಮತ್ತು ಬೆಳಕು ದೊಡ್ಡ ಪಾತ್ರವನ್ನು ವಹಿಸುತ್ತವೆ.

 

(ಮಾಹಿತಿ ಸೆಲೆ :intechopen.comnature.com wikipedia.org), (ಚಿತ್ರ ಸೆಲೆ : commons.wikimedia.org)

ಎಲ್ಲೆ ದಾಟಿದ ವೋಯಜರ್ – 1

ಪ್ರಶಾಂತ ಸೊರಟೂರ.

ಚಿತ್ರ: ವೋಯಜರ್ – 1

12.09.2013, ಅಮೇರಿಕಾ ಕಳುಹಿಸಿದ ಬಾನಬಂಡಿ (space craft) ವೋಯಜರ್–1 ಮೊಟ್ಟಮೊದಲ ಬಾರಿಗೆ ನೇಸರ-ಕೂಟದ (solar system) ಎಲ್ಲೆ ದಾಟುವ ಮೂಲಕ ಮಾನವರು ಮಾಡಿದ ವಸ್ತುಗಳಲ್ಲಿ ಎಲ್ಲಕ್ಕಿಂತ ಹೆಚ್ಚು ದೂರದಲ್ಲಿರುವ ವಸ್ತು ಅನ್ನುವ ಹೆಗ್ಗಳಿಕೆಯನ್ನು ತನ್ನತಾಗಿಸಿಕೊಂಡಿತು.

ಸೆಪ್ಟೆಂಬರ್ 2023 ಕ್ಕೆ ನೇಸರನಿಂದ ವೋಯಜರ್ – 1 ರ ದೂರ 161 AU ಅಂದರೆ ಸುಮಾರು 24 ಬಿಲಿಯನ್ ಕಿಲೋ ಮೀಟರಗಳಷ್ಟು! ನೇಸರ ಮತ್ತು ನಮ್ಮ ಭೂಮಿಗೆ ಇರುವ ದೂರವನ್ನು 1 ಬಾನಳತೆ ಇಲ್ಲವೇ ಅಸ್ಟ್ರೋನಾಮಿಕಲ್ ಯುನಿಟ್ (Astronomical Unit – AU) ಅಂತ ಕರೆಯುತ್ತಾರೆ. ಅಂದರೆ ನಮ್ಮಿಂದ ನೇಸರಕ್ಕೆ ಇರುವ ದೂರದ ಸರಿಸುಮಾರು 161 ಪಟ್ಟು ಹೆಚ್ಚು ದೂರದಲ್ಲಿ ವೋಯಜರ್ ಈಗ ಸಾಗುತ್ತಿದೆ.

ನೇಸರನ ಸುತ್ತ ಸುತ್ತುವ 8 ಗ್ರಹಗಳು (planets) ಮತ್ತು ಅವುಗಳ ಸ್ಯಾಟಲೈಟ್ ಗಳನ್ನ ಒಳಗೊಂಡ ಏರ್ಪಾಟಿಗೆ ‘ನೇಸರ-ಕೂಟ’ (Solar System) ಅಂತ ಕರೆಯಲಾಗುತ್ತದೆ. ನೇಸರನ ಒಂಬತ್ತನೇ ಗ್ರಹ ಎಂದು ಗುರುತಿಸಲಾಗಿದ್ದ ಪ್ಲೂಟೋವನ್ನು 2006 ರಲ್ಲಿ ಪಟ್ಟಿಯಿಂದ ಹೊರಗಿಡಲಾಯಿತು ಹಾಗಾಗಿ ನೇಸರ ಕೂಟದಲ್ಲಿ ಇದೀಗ 8 ಗ್ರಹಗಳನ್ನಷ್ಟೇ ಎಣಿಸಲಾಗುತ್ತದೆ. ಇವೆಲ್ಲವುಗಳನ್ನು ದಾಟಿಕೊಂಡು ವೋಯಜರ್–1 ಮುನ್ನಡೆಯುತ್ತಿದೆ.

ವೋಯಜರ್ – 1 ಇಂದಿಗೆ ಸಾಗಿದ ದೂರ ಹಾಗು ಬಾನಿನ 3D ನೋಟವನ್ನು ನಾಸಾ ಮಿಂದಾಣನದಲ್ಲಿ ನೋಡಬಹುದು, ಕೆಳಗಿನ ಕೊಂಡಿಯನ್ನು ಒತ್ತಿ.

 ವೋಯಜರ್ – 1 ಸಾಗಿದ ದೂರ

ಸಪ್ಟಂಬರ್ 5, 1977 ರಂದು ಅಮೇರಿಕಾದ ಬಾನರಿಮೆಯ ಕೂಟ ನಾಸಾ (NASA), ನೇಸರಕೂಟದ ಆಚೆಗಿನ ಮಾಹಿತಿಗಳನ್ನು ತಿಳಿದುಕೊಳ್ಳಲು ವೋಯಜರ್–1 (Voyager-1) ಬಾನಬಂಡಿಯನ್ನು ಹಾರಿಸಿತ್ತು. ಬಾನ ತೆರವು (space) ತಲುಪಿದ ಮೇಲೆ 1979 ರಲ್ಲಿ ಗುರುವಿನ ಏರ್ಪಾಟು (Jovian system) ಮತ್ತು 1980 ರಲ್ಲಿ ಶನಿಯ ಏರ್ಪಾಟಿನ (Saturnine system) ಕುರಿತು ಹಲವಾರು ವಿಷಯಗಳನ್ನು ವೋಯಜರ್–1 ತಿಳಿಸಿಕೊಟ್ಟಿತ್ತು.

ವೋಯಜರ್ – 1 ತೆಗೆದ ಗುರು ಮತ್ತು ಶನಿಯ ಚಿತ್ರಗಳು

        

 ವೋಯಜರ್ – ಏರ್ಪಾಟುಗಳು.

ಬಾನಾಡಿರುವಿನಲ್ಲಿ (ಸ್ಪೇಸ್) ದೊರೆಯುವ ಮಾಹಿತಿಗಳನ್ನು ಕಲೆಹಾಕಲು ವೋಯಜರ್–1 ಹಲವು ಬಗೆಯ ಸಲಕರಣೆಗಳನ್ನು ಹೊಂದಿದೆ. ಚಿತ್ರಗಳನ್ನು ಸೆರೆಹಿಡಿಯಲು ಕ್ಯಾಮೆರಾಗಳ ಏರ್ಪಾಟು, ಸುತ್ತಣದ ಗುಣಗಳನ್ನು ತಿಳಿದುಕೊಳ್ಳಲು ನೆರವಾಗುವು ರೆಡಿಯೋ ಅಲೆಗಳ ಸಲಕರಣೆಗಳು, ಸೆಳೆತದ ಹರವನ್ನು (magnetic field) ಅಳೆಯುವ ಸೆಳೆಯಳಕಗಳು (magnetometers), ಸಲಕರಣೆಗಳನ್ನು ಹಿಡಿತದಲ್ಲಿಡುವ ಕಂಪ್ಯೂಟರ್ ಮುಂತಾದವುಗಳನ್ನು ವೋಯಜರ್ ಒಳಗೊಂಡಿದೆ. ಸಲಕರಣೆಗಳಿಗೆ ಕಸುವು ನೀಡಲು ವೋಯಜರಿನಲ್ಲಿ ಪ್ಲುಟೋನಿಯಮ್-238 ಆಕ್ಸಾಯಡ್ಸನಿಂದ ಮಾಡಿದ ಬ್ಯಾಟರಿಗಳಿವೆ.

ವೋಯಜರ್ – 1 ರ 3D ಚಿತ್ರಣ

ಬಾನಾಚೆಗೆ ಸಾಗುತ್ತಿರುವ ವೋಯಜರ್–1 ಬಾನಬಂಡಿಗೆ ಯಾವುದಾದರೂ (ಯಾರಾದರೂ!) ಜಾಣ್ಮೆ, ತಿಳುವಳಿಕೆ ಹೊಂದಿದ ಜೀವಿಗಳು ಎದುರಾದರೆ ನಮ್ಮ ಕುರಿತು, ನಾವಿರುವ ನೆಲದ ಕುರಿತು ತಿಳಿಸಿಕೊಡಲು ಮೇಲಿನ ಸಲಕರಣೆಗಳ ಜೊತೆಗೆ ಚಿನ್ನದ ಹೊದಿಕೆಯಿರುವ ಅಡಕತಟ್ಟೆಯೊಂದನ್ನು ಇರಿಸಲಾಗಿದೆ. ಈ ಅಡಕತಟ್ಟೆಯಲ್ಲಿ ನೆಲದ ತಿಟ್ಟಗಳು, ಜೀವಿಗಳ ಬದುಕು, ಅರಿಮೆಯ ಹಲವಾರು ವಿಷಯಗಳು, ಮುಂದಾಳುಗಳ ಹಾರಯ್ಕೆಗಳು ಅಡಕಗೊಂಡಿವೆ. ’ನೆಲದ ದನಿಗಳು’ (sounds of earth) ಎಂದು ಹೆಸರಿಟ್ಟಿರುವ ಕಡತದಲ್ಲಿ ತಿಮಿಂಗಲಿನ ಕೂಗಾಟ, ಮಗುವಿನ ಅಳುವು, ಕಡಲ ತೆರೆಗಳ ಅಪ್ಪಳಿಸುವ ದನಿ ಮತ್ತು ಹಲವು ಬಗೆಯ ಇನಿತದ (music) ಕಟ್ಟುಗಳಿವೆ.

1977 ಕ್ಕಿಂತ ಮುಂಚೆಯೇ ಬಾನಿನಲ್ಲಿ ತೇಲಿದ ವೋಯಜರ್–1, ತನಗೊಪ್ಪಿಸಿದ ಕೆಲಸವನ್ನು ಕೊರತೆಯಿಲ್ಲದಂತೆ ಮಾಡಿ ತೋರಿಸಿದೆ. ಇಷ್ಟು ವರುಷಗಳ ಬಳಿಕವೂ, ಅಷ್ಟೊಂದು ದೂರ ಸಾಗಿದರೂ ನಮ್ಮೊಡನೆ ಒಡನಾಡುತ್ತಿರುವ ವೋಯಜರ್, ಅರಿಮೆಯ ಹಿರಿಮೆಯನ್ನು ಎತ್ತಿ ತೋರಿಸುತ್ತಿದೆ.

2025 ಕ್ಕೆ ಬ್ಯಾಟರಿಗಳ ಕಸುವು ಕೊನೆಗೊಳ್ಳುವದರಿಂದ ವೋಯೋಜರ್–1, ಭೂಮಿಯ ಒಡನಾಟವನ್ನು ಕಡಿದುಕೊಳ್ಳುತ್ತ ಕೊನೆಯಿರದ ಬಾನಂಗಳದಲ್ಲಿ ಕಣ್ಮರೆಯಾಗಲಿದೆ.

ಮಾಹಿತಿ ಮತ್ತು ಚಿತ್ರ ಸೆಲೆ: ನಾಸಾ

 

ಬೆಂಕಿ ಆರಿಸುಕ ಹೇಗೆ ಕೆಲಸ ಮಾಡುತ್ತದೆ?

ಜಯತೀರ್ಥ ನಾಡಗೌಡ.

ಬೆಂಕಿ ಆರಿಸುಕ ಇಂದು ಬಹುತೇಕ ಎಲ್ಲ ಕಡೆ ಕಾಣಸಿಗುತ್ತದೆ. ಮಾಲ್, ಕಚೇರಿ, ಬ್ಯಾಂಕ್, ಬಾನೋಡತಾಣ, ಸಿನೆಮಾ ಮಂದಿರ, ಶಾಲೆ, ಕಾರ್ಖಾನೆ, ಹೀಗೆ ಎಲ್ಲೆಡೆ ಕೆಂಪು ಬಣ್ಣದ ಸಿಲಿಂಡರ್ ಆಕಾರದ ಚಿಕ್ಕ,ದೊಡ್ಡ ಅಳತೆಯ ಬೆಂಕಿ ಆರಿಸುಕವನ್ನು ನಾವುಗಳು ನೋಡಿರುತ್ತೇವೆ. ಬೆಂಕಿ ಹತ್ತಿ ಅವಗಡ ಸಮಯದಲ್ಲಿ ಇವುಗಳು ಬಹಳ ನೆರವಿಗೆ ಬರುತ್ತವೆ. ಆದರೆ ಇವುಗಳು ಹೇಗೆ ಕೆಲಸ ಮಾಡುತ್ತವೆ? ಕಷ್ಟದ ಸಂದರ್ಭಗಳಲ್ಲಿ ಇವುಗಳನ್ನು ಹೇಗೆ ಬಳಸಬೇಕು ಎಂಬುದು ತಿಳಿಯೋಣ ಬನ್ನಿ. 

ಸಾಮಾನ್ಯವಾಗಿ ತಿಳಿದಿರುವಂತೆ, ಬೆಂಕಿ ಹೊತ್ತಿಕೊಳ್ಳಲು ಆಕ್ಸಿಜನ್ ಗಾಳಿ ಮತ್ತು ಉರುವಲು ಬೇಕಾಗುತ್ತದೆ. ಆದರೆ ಕೇವಲ ಆಕ್ಸಿಜನ್ ಗಾಳಿ, ಉರುವಲು ಇದ್ದರೆ ಬೆಂಕಿ ಉರಿಯಲ್ಲ. ಉರುವಲು ತನ್ನ ಉರಿತದ ಕಾವಳತೆ ಮಟ್ಟ(Ignition Temperature) ತಲುಪಿರಬೇಕು. ಒಟ್ಟಾಗಿ ಹೇಳುವುದಾದರೆ ಬೆಂಕಿ ಕಿಡಿಹೊತ್ತಿಕೊಳ್ಳಲು, ಆಕ್ಸಿಜನ್, ಉರುವಲು ಮತ್ತು ಬಿಸುಪು ಈ ಮೂರು ಇರಲೇಬೇಕು. ಬೆಂಕಿ ಆರಿಸಲು ಈ ಮೂರರಲ್ಲಿ ಒಂದನ್ನು ಕಡಿತಗೊಳಿಸಿಯೋ, ಇಲ್ಲವಾಗಿಸಿಯೋ ಬೆಂಕಿ ಆರಿಸಬಹುದು. ಸಣ್ಣದಾಗಿ ಬೆಂಕಿ ಹತ್ತಿದ್ದರೆ ದಪ್ಪ ಕಂಬಳಿ ಬಿಸಾಕಿ ಅದನ್ನು ನಿಲ್ಲಿಸುವುದನ್ನು ನೋಡಿರುತ್ತೇವೆ. ಕಂಬಳಿ ಬೆಂಕಿ ಮೇಲೆ ಬಿದ್ದಾಗ ವಾತಾವರಣದ ಆಕ್ಸಿಜನ್ ಪೂರೈಕೆ ನಿಂತು, ಬೆಂಕಿ ಆರುತ್ತದೆ. ಬೆಂಕಿ ಆರಿಸುಕ ಗಾಡಿಗಳು(Fire fighting Vehicles) ನೀರು ಸಿಡಿಸಿ ಬೆಂಕಿ ನಿಲ್ಲಿಸುತ್ತವೆ, ನೀರು ಸಿಂಪಡಿಸಿದಾಗ ಬಿಸುಪು ತಣ್ಣಗಾಗಿ ಬೆಂಕಿ ಆರುತ್ತದೆ. ಇದೇ ವಿಜ್ಞಾನ ಆಧಾರವಾಗಿಟ್ಟುಕೊಂಡು ಬೆಂಕಿ ಆರಿಸುಕಗಳನ್ನು ತಯಾರಿಸಲಾಗುತ್ತದೆ.

ಸಾಮಾನ್ಯವಾಗಿ ಬೆಂಕಿ ಆರಿಸುಕಗಳಲ್ಲಿ 4 ಬಗೆ.  ಅವು ಕೆಳಗಿನಂತಿವೆ:

  1. ನೀರಿನ ಬೆಂಕಿ ಆರಿಸುಕಗಳು
  2. ಕಾರ್ಬನ್ ಡೈ ಆಕ್ಸೈಡ್ ಬೆಂಕಿ ಆರಿಸುಕಗಳು
  3. ನೊರೆಯ ಬೆಂಕಿ ಆರಿಸುಕಗಳು
  4. ಪುಡಿ ತುಂಬಿದ ಬೆಂಕಿ ಆರಿಸುಕಗಳು

ನೀರಿನ ಬೆಂಕಿ ಆರಿಸುಕಗಳು ನೀರನ್ನು ಬೆಂಕಿ ಆರಿಸುವ ಮಾಧ್ಯಮವಾಗಿ ಬಳಕೆ ಮಾಡುತ್ತವೆ. ಒಂದು ಚಿಕ್ಕ ಸಿಲಿಂಡರ್ ಗಾತ್ರದ ಕೊಳಾಯಿಯಲ್ಲಿ ಬಹುಪಾಲು ನೀರು ತುಂಬಿರುತ್ತದೆ. ಅದರೊಳಗೆ ಒಂದು ಪುಟ್ಟ ಗಾಳಿ ತುಂಬಿದ ಡಬ್ಬಿ(canister) ಇರುತ್ತದೆ ಮತ್ತು ನೀರು ಚಿಮ್ಮಲು ಒಂದು ಕೊಳವೆ. ಈ ಕೊಳವೆಯು ಸಿಲಿಂಡರ್‌ನ ಒಂದು ಮೇಲ್ಭಾಗದ ಬಲಬದಿಗೆ ನೀರು ಚಿಮ್ಮಲು ಬಾಯಿ ತೆರೆದಿರುತ್ತದೆ. ಸಿಲಿಂಡರ್ ಮೇಲೆ ಉಂಗುರದ ಮೂಲಕ ಆಪರೇಟ್ ಮಾಡಬಹುದಾದ ಒಂದು ಹಿಡಿಕೆ. ಉಂಗುರ ಎಳೆದಾಗ ಹಿಡಿಕೆಯು ರಿಲೀಸ್ ಆಗಿ ಕೆಳಗಿನ ಗಾಳಿ ತುಂಬಿದ ಡಬ್ಬಿಯ ತೆರಪು(Valve) ತೆರೆಯುವಂತೆ ಮಾಡುತ್ತದೆ. ಇದರಿಂದ ಗಾಳಿಯು ಸಿಲಿಂಡರ್ ತುಂಬಾ ಸೇರಿ ನೀರನ್ನು ಕೆಳಕ್ಕೆ ದಬ್ಬುತ್ತದೆ. ಇದರಿಂದ ನೀರಿನ ಮೇಲೆ ಒತ್ತಡ ಉಂಟಾಗಿ, ಕೊಳವೆ ಮೂಲಕ ಹೊರಕ್ಕೆ ಚಿಮ್ಮಲ್ಪಡುತ್ತದೆ. ಹೀಗೆ ನೀರು, ಬೆಂಕಿಯ ಬಿಸುಪನ್ನು ಹೀರಿ ಬೆಂಕಿ ಆರುವ ಕೆಲಸ ನಡೆಯುತ್ತದೆ.

ನೊರೆಯ ಬೆಂಕಿ ಆರಿಸುಕಗಳು: ಇವುಗಳು ನೀರಿನ ಬೆಂಕಿ ಆರಿಸುಕಗಳಂತೆ ಕೆಲಸ ಮಾಡುತ್ತವೆ. ಆದರೆ ಕೊಳಾಯಿಯ ಒಳಗೆ ನೀರಿನ ಜೊತೆ ನೊರೆಯು ಸೇರಿರುತ್ತದೆ. ಈ ನೊರೆಯು ಸೋಡಿಯಮ್ ಬೈಕಾರ್ಬೋನೆಟ್‍ನಿಂದ ತಯಾರಿಸಿದ್ದಾಗಿರುತ್ತದೆ. ಕೊಳಾಯಿ ಮೇಲ್ಭಾಗದ ಹಿಡಿಕೆಯ ಉಂಗುರ ಎಳೆದಾಗ ನೊರೆಯ ಜೊತೆ ನೀರು ಸೇರಿ ದೊಡ್ಡ ಗಾತ್ರದ ನೊರೆಯು ಉರಿಯುತ್ತಿರುವ ಬೆಂಕಿಯ ಮೇಲೆ ಸಿಂಪಡನೆಗೊಂಡು ಬೆಂಕಿಗೆ ಆಕ್ಸಿಜನ್ ಹರಿವನ್ನು ತಡೆಯುತ್ತದೆ ಮತ್ತು ಬಿಸುಪನ್ನು ಹೀರಿಕೊಳ್ಳುತ್ತ ಬೆಂಕಿ ನಿಲ್ಲಿಸುತ್ತವೆ.

ಪುಡಿಯ ಬೆಂಕಿ ಆರಿಸುಕಗಳು: ಪುಡಿ ಬೆಂಕಿ ಆರಿಸುಕಗಳು ಹೆಚ್ಚು ಕಡಿಮೆ ನೀರು ಇಲ್ಲವೇ ನೊರೆಯ ಆರಿಸುಕಗಳಂತೆ ಈಡುಗಾರಿಕೆ(Design) ಹೊಂದಿರುತ್ತವೆ. ಆದರೆ ಇಲ್ಲಿ ನೊರೆ ಇಲ್ಲವೇ ನೀರಿನ ಬದಲು ಬೆಂಕಿ ಆರಿಸಲು ನೆರವಾಗುವ ಮೊನೊಅಮೋನಿಯಂ ಫಾಸ್ಫೇಟ್(Monoammonium Phosphate) ಪುಡಿಯನ್ನು ಬಳಸುತ್ತಾರೆ. ಇದರೊಟ್ಟಿಗೆ ಪೊಟ್ಯಾಸಿಯಂ ಬೈಕಾರ್ಬೋನೆಟ್ ಇಲ್ಲವೇ ಸೋಡಿಯಂ ಬೈಕಾರ್ಬೋನೆಟ್ ಪುಡಿಗಳನ್ನು ಬಳಕೆ ಮಾಡುತ್ತಾರೆ. ಈ ಪುಡಿ ಬೆಂಕಿಯ ಮೇಲೆ ಬಿದ್ದಾಗ ರಾಸಾಯನಿಕ ಕ್ರಿಯೆಯಿಂದ ಬೆಂಕಿಯ ಬಿಸುಪನ್ನು ಹೀರಿ, ಕರಗುತ್ತ ಉರುವಲಿನ ಆವಿಯಾಗಿಸಿ ಬೆಂಕಿಗೆ ಅವಶ್ಯವಿರುವ ಆಕ್ಸಿಜನ್ ಹರಿವನ್ನು ಕಡಿತ ಮಾಡುತ್ತದೆ. 

(ಈ ಮೇಲಿರುವ ತಿಟ್ಟದಲ್ಲಿ ಸಾಮಾನ್ಯವಾಗಿ ಬೆಂಕಿ ಆರಿಸುಕಗಳು ಹೇಗೆ ಕೆಲಸ ಮಾಡುತ್ತವೆ ಎಂಬುದನ್ನು ತೋರಿಸಲಾಗಿದೆ).

 ಪುಡಿ, ನೀರು ಮತ್ತು ನೊರೆಯ ಈ ಮೂರು ತರಹದ ಬೆಂಕಿ ಆರಿಸುಕಗಳಲ್ಲಿ ಮುನ್ನುಗ್ಗುಕವೊಂದನ್ನು(Propellent) ಬಳಸುತ್ತಾರೆ. ಕ್ಯಾನಿಸ್ಟರ್(ಡಬ್ಬಿ)ಗಳಲ್ಲಿ ಇದೇ ಮುನ್ನುಗ್ಗುಕ ಗಾಳಿಯನ್ನು ಕೂಡಿಡುತ್ತಾರೆ. ಹೆಚ್ಚಾಗಿ ಸಾರಜನಕ(ನೈಟ್ರೋಜನ್) ಇಲ್ಲವೇ ಕಾರ್ಬನ್ ಡೈಆಕ್ಸೈಡ್‍ಗಳನ್ನೇ ಮುನ್ನುಗ್ಗುಕವಾಗಿ ಬಳಸುತ್ತಾರೆ. ಬೆಂಕಿ ಆರಿಸುಕಗಳಲ್ಲಿ, ಹೆಚ್ಚಿನ ಒತ್ತಡದಲ್ಲಿ ಕೂಡಿಟ್ಟಿರುವ ಮುನ್ನುಗ್ಗುಕ ಸ್ಪೋಟಗೊಳ್ಳಬಾರದೆಂದು ಗಟ್ಟಿಮುಟ್ಟಾದ ಉಕ್ಕಿನಿಂದ ತಯಾರಿಸಿಲಾಗಿರುತ್ತದೆ.

ಕಾರ್ಬನ್ ಡೈಆಕ್ಸೈಡ್ ಬೆಂಕಿ ಆರಿಸುಕಗಳು ಕೂಡ ಕೆಂಪು ಬಣ್ಣದ ಸಿಲಿಂಡರ್‌ಗಳಿಂದಾಗಿರುತ್ತವೆ. ಇಲ್ಲಿ ನೀರಿನ ಬದಲು ಕಾರ್ಬನ್ ಡೈಆಕ್ಸೈಡ್ ಗಾಳಿಯನ್ನು ಬಳಸುತ್ತಾರೆ. ಈ ತರದ ಆರಿಸುಕಗಳು ದೊಡ್ಡದಾದ ಕೋನ್  ಆಕಾರದ ಬಾಯಿ ಹೊಂದಿರುತ್ತವೆ. ಇದಕ್ಕೆ ಹಾರ್ನ್ ಎಂದು ಹೇಳಲಾಗುತ್ತದೆ, ಈ ದೊಡ್ಡ ಹಾರ್ನ್ ಮೂಲಕವೇ ಇವುಗಳು ಇಂಗಾಲದ ಬೆಂಕಿ ಆರಿಸುಕಗಳು ಎಂದು ಗುರುತಿಸಬಹುದು. ಇಲ್ಲಿ ಕೂಡ ಮೇಲ್ಭಾಗದಲ್ಲಿ ಹಿಡಿಕೆ-ಅದಕ್ಕೆ ಜೋಡಿಸಲ್ಪಟ್ಟ ತೆರಪಿನ ಏರ್ಪಾಟು ಇರುತ್ತದೆ. ಕೆಂಪು ಕೊಳಾಯಿಯ ಒಳಗೆ ದ್ರವರೂಪದಲ್ಲಿ ಇಂಗಾಲದ ಡೈಆಕ್ಸೈಡ್ ತುಂಬಿರುತ್ತಾರೆ. ಹಿಡಿಕೆಯನ್ನು ಜೋರಾಗಿ ಅದುಮಿದಾಗ ತೆರಪು ತೆರೆದುಕೊಂಡು, ವೇಗದಿಂದ CO2 ಮಂಜಿನಂತೆ ಉರಿಯುವ ಬೆಂಕಿಗೆ  ಬಿಳಿಯ ದಟ್ಟ ಹೊಗೆ ರೂಪದಲ್ಲಿ ಸಿಂಪಡನೆಗೊಂಡು, ಅದನ್ನು ನಿಲ್ಲಿಸುತ್ತದೆ. ಇಲ್ಲಿ ಕೋನ್  ಆಕಾರದ ಹಾರ್ನ್ ರಚನೆ ಬಲುಮುಖ್ಯ.. ವೇಗದಿಂದ ಬರುವ ಕಾರ್ಬನ್ ಡೈಆಕ್ಸೈಡ್ ಬಿರುಸಾದ ಹರಿವಿನಿಂದ ಹಿಗ್ಗುತ್ತಾ ತಂಪಾದ ಮಂಜಿನ ಗಾಳಿ ಹೊರಸೂಸಲು ಅನುಕೂಲವಾಗುವಂತೆ ಹಾರ್ನ್ ಈಡುಗಾರಿಕೆ ಮಾಡಲಾಗಿರುತ್ತದೆ. 

ಈ ಎಲ್ಲ ಬಗೆಯ ಬೆಂಕಿ ಆರಿಸುಕಗಳನ್ನು ಎಲ್ಲ ರೀತಿಯ ಬೆಂಕಿ ಅವಘಡಗಳಲ್ಲಿ ಬಳಸಲಾಗದು. ತಪ್ಪು ಬಳಕೆಯಿಂದ ಅಪಾಯವಾಗುವ ಸಾಧ್ಯತೆಯುಂಟು. ಅದಕ್ಕೆಂದೇ ಬೆಂಕಿಯನ್ನು ಅವುಗಳು ಉಂಟಾದ ಮೂಲದಿಂದ ಬಗೆಗಳಾಗಿ ಗುರುತಿಸಿ, ಅದಕ್ಕೆ ತಕ್ಕುದಾದ ಬೆಂಕಿ ಆರಿಸುಕಗಳನ್ನು ಬಳಸಬೇಕು. ಕ್ಲಾಸ್ ಎ,ಬಿ,ಸಿ,ಡಿ,ಈ ಮತ್ತು ಎಫ್ ಎಂಬ 6 ಬಗೆಯ ಬೆಂಕಿಗಳನ್ನು ಗುರುತಿಸಲಾಗಿದೆ.

ಕ್ಲಾಸ್ ಎ – ಸೌದೆ/ಕಟ್ಟಿಗೆ, ಕಾಗದ, ಪ್ಲ್ಯಾಸ್ಟಿಕ್, ರಬ್ಬರ್ ಮುಂತಾದ ಗಟ್ಟಿವಸ್ತುಗಳಿಂದ ಹೊತ್ತಿಕೊಂಡಿರುವ ಬೆಂಕಿಯು ಈ ಸಾಲಿಗೆ ಸೇರುತ್ತದೆ. ಇದನ್ನು ನೀರಿನ ಬೆಂಕಿ ಆರಿಸುಕ ಬಳಸಿ ತಡೆಹಿಡಿಯಬಹುದು.

ಕ್ಲಾಸ್ ಬಿ – ದ್ರವರೂಪದ ಗಾಳಿ, ದ್ರವ ವಸ್ತುಗಳಿಂದ ಹೊತ್ತಿರುವ ಬೆಂಕಿಯನ್ನು ಕ್ಲಾಸ್ ಬಿ ತರಹದ ಬೆಂಕಿ. ಇಂತ ಬೆಂಕಿ ಆರಿಸಲು ನೊರೆಯ ಬೆಂಕಿ ಆರಿಸುಕ ಬಳಸಬಹುದು.

ಕ್ಲಾಸ್ ಸಿ – ಒತ್ತಡದಲ್ಲಿ ಕೂಡಿಟ್ಟ ದ್ರವ ಇಲ್ಲವೇ ದ್ರವರೂಪದ ಗಾಳಿಯಿಂದ ಹೊತ್ತಿಕೊಂಡ ಬೆಂಕಿ ಕ್ಲಾಸ್ ಸಿ ಬಗೆಯ ಬೆಂಕಿ. ಉದಾಹರಣೆಗೆ:ಎಲ್ಪಿಜಿ ಸಿಲಿಂಡರ್ ಮುಂತಾದವುಗಳಿಂದ ಹೊತ್ತಿದ ಬೆಂಕಿ. ಇಂತಹ ಬೆಂಕಿ ಆರಿಸಲು ಪುಡಿಯ ಬೆಂಕಿ ಆರಿಸುಕಗಳು ನೆರವಾಗಬಹುದು.

ಕ್ಲಾಸ್ ಡಿ – ಸರಳವಾಗಿ ಹೊತ್ತಿಯುರಿಯುವ ಮಾಗ್ನೇಸಿಯಂ, ಅಲ್ಯುಮಿನಿಯಂ, ಸತು, ಪೊಟ್ಯಾಸಿಯಂ, ಸೋಡಿಯಮ್ ಮುಂತಾದ ಜಲ್ಲಿಗಳಿಂದ ಹತ್ತುವ ಬೆಂಕಿ ಕ್ಲಾಸ್ ಡಿ. ಇಂತಹ ಬೆಂಕಿ ಆರಿಸಲು ಪುಡಿಯ ಬೆಂಕಿ ಆರಿಸುಕಗಳು ನೆರವಾಗಬಹುದು.

ಕ್ಲಾಸ್ ಈ – ಎಲೆಕ್ಟ್ರಿಕಲ್ ವಾಹಕ ವಸ್ತುಗಳಿಂದ ಉಂಟಾದ ಬೆಂಕಿ. ಕಾರ್ಬನ್ ಡೈ ಆಕ್ಸೈಡ್ ಮತ್ತು ಪುಡಿಯ ಬೆಂಕಿ ಆರಿಸುಕಗಳು ಇದಕ್ಕೆ ತಕ್ಕುದಾಗಿವೆ.

ಕ್ಲಾಸ್ ಎಫ್ – ಅಡುಗೆ ಎಣ್ಣೆ, ಕೊಬ್ಬು ಮುಂತಾದ ವಸ್ತುಗಳಿಂದ ಉಂಟಾದ ಬೆಂಕಿ. ಪುಡಿಯ ಬೆಂಕಿ ಆರಿಸುಕಗಳು ಇದಕ್ಕೆ ತಕ್ಕುದಾಗಿವೆ.

ಹೀಗೆ ಬೆಂಕಿಗಳ ಬಗೆಗಳಿಗೆ ತಕ್ಕ ಬೆಂಕಿ ಆರಿಸುಕ ಬಳಸಬೇಕು. ಒಂದು ಬಗೆಯ ಬೆಂಕಿಗೆ ಬೇರೆ ಬೇರೆ ಬಗೆಯ 2-3 ಬಗೆಯ ಬೆಂಕಿ ಆರಿಸುಕಗಳನ್ನು ಬಳಸಬಹುದಾಗಿರುತ್ತದೆ.  ಯಾವ ಬೆಂಕಿ ಆರಿಸುಕ ಯಾವ ಬಗೆಯ ಬೆಂಕಿಗೆ ಸೂಕ್ತ ಎಂಬುದನ್ನು ನುರಿತ ತರಬೇತುದಾರರಿಂದ ತರಬೇತಿ ಪಡೆದವರು ಬಳಸಬೇಕು. ನೀರಿನ ಬೆಂಕಿ ಆರಿಸುಕಗಳಿಗೆ ಕೆಂಪು, ನೊರೆಯ ಬೆಂಕಿ ಆರಿಸುಕ ಹಳದಿ, ಪುಡಿಯ ಬೆಂಕಿ ಆರಿಸುಕಕ್ಕೆ ನೀಲಿ ಮತ್ತು ಕಾರ್ಬನ್ ಡೈ ಆಕ್ಸೈಡ್ ಬೆಂಕಿ ಆರಿಸುಕಗಳಿಗೆ ಕಪ್ಪು ಬಣ್ಣದ ಗುರುತು ಹಾಕಿರಲಾಗಿರುತ್ತದೆ.

ಬಳಸುವ ಬಗೆ:  ಬೆಂಕಿ ಆರಿಸುಕದ ಮೂತಿ ಇಲ್ಲವೇ ಚಿಮ್ಮುಕವನ್ನು ಬೆಂಕಿ ಇರುವ ಕಡೆ ತಿರುಗಿಸಿ ಬೆಂಕಿಗೆ ಗುರಿಯಾಗಿಸಿ, ಹಿಡಿಕೆಯ ಮೇಲಿರುವ ಉಂಗುರ ಎಳೆಯಬೇಕು ಆಗ ಬೆಂಕಿ ಮೆಲ್ಲಗೆ ಆರ ತೊಡಗುತ್ತದೆ. ಇದು ಒಂದು ರೀತಿಯಲ್ಲಿ ಬಂದೂಕನ್ನು ಸರಿಯಾದ ಗುರಿಯತ್ತ ತಿರುಗಿಸಿ ಟ್ರಿಗ್ಗರ್ ಅದುಮಿದಂತೆ ಎನ್ನಬಹುದು. ಬೆಂಕಿ ಆರಿಸುಕ ಬಳಸಲು ಕಚೇರಿ, ಮಾಲ್, ಬ್ಯಾಂಕ್, ಬಾನೋಡತಾಣ ಮುಂತಾದ ಕಡೆ ಭದ್ರತಾ ಸಿಬ್ಬಂದಿಗೆ ವಿಶೇಷ ತರಬೇತಿ ನೀಡಲಾಗುತ್ತದೆ. ಈ ತರಬೇತಿ ನೀಡಿದ ವ್ಯಕ್ತಿಗಳಿಗೆ ಮಾತ್ರ ಬೆಂಕಿ ಆರಿಸುಕವನ್ನು ಸರಿಯಾಗಿ ಬಳಸಬಹುದು. ಬೆಂಕಿ ಆರಿಸುಕ ಬಳಸುವ ಮುನ್ನ ಯಾರೇ ಆಗಲಿ ಈ ತರಬೇತಿ ಪಡೆಯಲೇಬೇಕು. ಸರಿಯಾದ ತರಬೇತಿ ಇರದೇ ಬಳಸಲು ಹೋಗಿ ಹಲವರು ತಮಗೆ ಅಪಾಯ ಮಾಡಿಕೊಂಡ ಹಲವು ಘಟನೆಗಳು ನಡೆದಿವೆ.

ಮಾಹಿತಿ ಮತ್ತು ತಿಟ್ಟ ಸೆಲೆ:explainthatstuff.com

ಕಾಯಿಯೊಂದು ಹಣ್ಣಾಗುವ ಬಗೆ

ರತೀಶ ರತ್ನಾಕರ.

ಹಣ್ಣುಗಳೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಬಣ್ಣ-ಬಣ್ಣದ, ರುಚಿ-ರುಚಿಯಾದ ಹಣ್ಣುಗಳು ಹೆಚ್ಚಿನವರನ್ನು ಸೆಳೆಯುತ್ತವೆ. ಯಾವುದೇ ಮರ ಇಲ್ಲವೇ ಗಿಡದಿಂದ ಸಿಗುವ ಹಣ್ಣು, ಹಣ್ಣಾಗುವ ಮೊದಲು ಕಾಯಿಯಾಗಿರುತ್ತದೆ. ಯಾವುದೇ ಒಂದು ಕಾಯಿ ಮತ್ತು ಹಣ್ಣಿನ ನಡುವೆ ಬೇರ್ಮೆಯನ್ನು ಗುರುತಿಸಿದರೆ ಅದು ಹೆಚ್ಚಾಗಿ ಅದರ ಬಣ್ಣ ಮತ್ತು ರುಚಿಯಲ್ಲಿ ಬೇರೆ ಬೇರೆಯಾಗಿರುತ್ತವೆ. ಕಾಯಿಗಳು ಹೆಚ್ಚಾಗಿ ಹಸಿರು ಬಣ್ಣದಲ್ಲಿದ್ದು, ರುಚಿ ಮತ್ತು ಕಂಪು ಇಲ್ಲದೆ ಗಟ್ಟಿಯಾಗಿ ಇರುತ್ತವೆ. ಕಾಯಿಯು ಹಣ್ಣಾಗುತ್ತಾ ಬಂದಂತೆ ಬೇರೆ ಬಣ್ಣವನ್ನು ಪಡೆಯುತ್ತದೆ, ಕಾಯಿಗಿಂತ ಮೆತ್ತಗಾಗುತ್ತದೆ, ರುಚಿ ಮತ್ತು ಕಂಪನ್ನು ಪಡೆದುಕೊಳ್ಳುತ್ತದೆ. ಈ ಕಾರಣದಿಂದಾಗಿ ಹಣ್ಣುಗಳು ಪ್ರಾಣಿ ಮತ್ತು ಹಕ್ಕಿಗಳನ್ನು ಸೆಳೆಯುತ್ತವೆ.

ಹೌದಲ್ಲ, ಈ ಕಾಯಿಯು ಹಣ್ಣಾದ ಮೇಲೆ ನಮಗೆ ಉಪಕಾರಿ. ಹಾಗಾದರೆ ಈ ಕಾಯಿಯು ಹೇಗೆ ಹಣ್ಣಾಗುತ್ತದೆ? ಬಣ್ಣ, ರುಚಿ, ಕಂಪನ್ನು ಹೇಗೆ ಪಡೆದುಕೊಳ್ಳುತ್ತದೆ? ಕಾಯಿಯಲ್ಲಿ ನಡೆಯುವ ಯಾವ ತಿರುಳು ಹಣ್ಣಾಗಲು ಕಾರಣ? ಬನ್ನಿ, ಈ ವಿಷಯಗಳ ಕುರಿತು ನಾವಿಂದು ಅರಿಯೋಣ.

ಹೂವಿನ ಗಂಡೆಳೆಗಳು(Anther) ಹೆಣ್ದುಂಡುಗಳೊಡನೆ(Stigma) ಸೇರುವುದನ್ನು ಹೂದುಂಬುವಿಕೆ (Pollination) ಎಂದು ಕರೆಯಲಾಗುತ್ತದೆ. ಯಾವುದೇ ಗಿಡ ಇಲ್ಲವೇ ಮರದಲ್ಲಿ ಹೂದುಂಬುವಿಕೆ ನಡೆದಾಗ ಹೀಚುಗಾಯಿ ಉಂಟಾಗುತ್ತದೆ. ಹೀಗೆ ಉಂಟಾದ ಹೀಚುಗಾಯಿಯ ತತ್ತಿಚೀಲದೊಳಗೆ(Ovary) ಹೊಸ ಬೀಜ ಹುಟ್ಟುತ್ತದೆ. ಈ ಬೀಜಗಳು ಬೆಳೆಯುತ್ತಿದ್ದಂತೆ ಸಯ್ಟೋಕಿನಿನ್ಸ್ (Cytokinins) ಎನ್ನುವ ಸೋರುಗೆಯನ್ನು (Hormone) ಹೊರಹಾಕುತ್ತವೆ. ಈ ಸೋರುಗೆಗಳು ತತ್ತಿಚೀಲದ ಗೋಡೆಯ ಬಳಿ ಬಂದು ಸೂಲುಗೂಡುಗಳನ್ನು (Cells) ಒಡೆದು ಹೊಸ ಹೊಸ ಸೂಲುಗೂಡುಗಳು ಮೂಡಿ ಹೀಚುಗಾಯಿ ದೊಡ್ಡದಾಗುತ್ತಾ ಹೋಗುತ್ತದೆ. ಹಾಗೆಯೇ ಮುಂದುವರಿದು ಈ ಬೀಜಗಳು ಜಿಬ್ಬೆರೆಲಿಕ್ (Gibberellic) ಹುಳಿಯನ್ನು ಹೊರಹಾಕುತ್ತವೆ. ಈ ಹುಳಿಯು ಸೂಲುಗೂಡುಗಳನ್ನು ಹಿಗ್ಗಿಸಲು ನೆರವಾಗುತ್ತದೆ. ಹೀಗೆ ಸೂಲುಗೂಡುಗಳ ಒಡೆಯುವಿಕೆ ಮತ್ತು ಹಿಗ್ಗುವಿಕೆಯಿಂದ ಹೀಚುಗಾಯಿ ದೊಡ್ಡದಾಗುತ್ತಾ ಹೋಗುತ್ತದೆ.

ಮರ, ಗಿಡ ಹಾಗು ಬಳ್ಳಿಗಳ ತಳಿಗಳ ಆಧಾರದ ಮೇಲೆ ಕಾಯಿಯು ಒಂದು ಹಂತದವರೆಗೆ ದೊಡ್ಡದಾಗುತ್ತಾ ಹೋಗುತ್ತದೆ. ಕಾಯಿಯು ಸಾಕಷ್ಟು ದೊಡ್ಡದಾದ ಮೇಲೆ ತಾಯಿಗಿಡವು ಅಬ್ಸಿಸಿಕ್ ಎನ್ನುವ ಸೋರುಗೆಯನ್ನು ಹೊರಬಿಡುತ್ತದೆ ಅದು ಕಾಯಿಯ ಬೀಜದೊಳಗಿರುವ ಬಸಿರನ್ನು (Embryo) ಒರಗಿದ(Dormant) ಸ್ಥಿತಿಯಲ್ಲಿ ದೂಡುತ್ತದೆ. ಆಗ ಬೀಜ ಮತ್ತು ಕಾಯಿ ತನ್ನ ಬೆಳವಣಿಗೆಯನ್ನು ನಿಲ್ಲಿಸುತ್ತವೆ.

ಒಂದು ಕಾಯಿಯಲ್ಲಿ ಸಾಮಾನ್ಯವಾಗಿ ಈ ಕೆಳಗಿನ ರಾಸಾಯನಿಕಗಳು ಇರುತ್ತವೆ.

ಗಂಜಿ (Starch) – ಕಾಯಿಯು ರುಚಿಯಾಗದಿರಲು ಇದೇ ಕಾರಣವಾಗಿರುತ್ತದೆ.
ಎಲೆಹಸಿರು (Chlorophyll) – ಕಾಯಿಯ ಹಸಿರು ಬಣ್ಣಕ್ಕೆ ಇದು ಕಾರಣವಾಗಿರುತ್ತದೆ.
ಹುಳಿ (acids) – ಇದರಿಂದ ಕಾಯಿಯು ತುಂಬಾ ಹುಳಿ ಹುಳಿಯಾಗಿ ಇಲ್ಲವೇ ಒಗರಾಗಿರುತ್ತದೆ.
ಪೆಕ್ಟಿನ್ (Pectin) – ಇದೊಂದು ಬಗೆಯ ಪಾಲಿಸೆಕರಯ್ಡ್ ಆಗಿದ್ದು, ಕಾಯಿಯಲ್ಲಿನ ಸೂಲುಗೂಡುಗಳು ಒಂದಕ್ಕೊಂದು ಗಟ್ಟಿಯಾಗಿ ಅಂಟಿಕೊಂಡಿರುವಂತೆ ನೋಡಿಕೊಳ್ಳುತ್ತದೆ. ಪೆಕ್ಟಿನ್ ದೆಸೆಯಿಂದಾಗಿ ಕಾಯಿಯು ಗಟ್ಟಿಯಾಗಿರುತ್ತದೆ.
ಹೆಬ್ಬುಸುರಿ (Large Organics)- ಇವು ಒಂದು ಬಗೆಯ ಸೀರಕೂಟಗಳಾಗಿದ್ದು (Molecules) ಕಾಯಿಯಲ್ಲಿ ಇರುತ್ತವೆ.

ಹಾಗಾದರೆ ಹಣ್ಣಾಗುವುದು ಹೇಗೆ?

ಯಾವುದೇ ಕಾಯಿಯು ಹಣ್ಣಾಗುವುದರಲ್ಲಿ ಇತಯ್ಲಿನ್ (Ethylene) ಪ್ರಮುಖ ಪಾತ್ರ ವಹಿಸುತ್ತದೆ. ಗಿಡದಲ್ಲಿರುವ ETR1 ಮತ್ತು CTR1 ಎಂಬ ಪೀಳಿಗಳು(genes) ಕಾಯಿಯನ್ನು ಹಣ್ಣಾಗದಂತೆ ತಡೆಹಿಡಿದಿರುತ್ತವೆ. ಯಾವುದೇ ಒಂದು ಮರ, ಗಿಡ ಇಲ್ಲವೇ ಬಳ್ಳಿಯ ಗುಣವೆಂದರೆ ತನ್ನಲ್ಲಿರುವ ಕಾಯಿ ಇಲ್ಲವೇ ಹಣ್ಣುಗಳಿಗೆ ಗಾಯವಾದಾಗ, ಕಾಯಿ/ಹಣ್ಣನ್ನು ಗಿಡದಿಂದ ಕಿತ್ತಾಗ, ಸುತ್ತಲಿನ ಗಾಳಿಪಾಡಿನಲ್ಲಿ ಏರುಪೇರಾಗಿ ತನ್ನ ಎಂದಿನ ಚಟುವಟಿಕೆಗಳಿಗೆ ಒತ್ತಡ ಬಂದಾಗ, ಒಟ್ಟಿನಲ್ಲಿ ಹೇಳುವುದಾದರೆ ತನ್ನ ಎಂದಿನ ಚಟುವಟಿಕೆಗೆ ಯಾವುದೇ ತೊಡಕಾದ ಕೂಡಲೆ ಅದು ಇತಯ್ಲಿನ್ ಗಾಳಿಯನ್ನು ಹೊರಹಾಕತೊಡಗುತ್ತದೆ. ಇತಯ್ಲಿನ್ ಅನ್ನು ತನ್ನ ಕಾಂಡ, ಬೇರು, ಹೂವು, ಕಾಯಿಗಳ ಮೂಲಕ ತನ್ನ ಸುರಕ್ಷತೆಗಾಗಿ ಹೊರಹಾಕುತ್ತದೆ. ಈ ಇತಯ್ಲಿನ್ ಮುಂದೆ ಕಾಯಿ ಹಣ್ಣಾಗುವಲ್ಲಿ ನೆರವಾಗುತ್ತದೆ.

 

ಯಾವುದೇ ಕಾಯಿ ಇತಯ್ಲಿನ್ ಗಾಳಿಗೆ ತಾಕಿದಾಗ ಅದರಲ್ಲಿರುವ ETR1 ಮತ್ತು CTR1 ಪೀಳಿಗಳು ತನ್ನ ಕೆಲಸವನ್ನು ನಿಲ್ಲಿಸುತ್ತವೆ ಮತ್ತು ಬೇರೆ ಪೀಳಿಗಳಿಗೆ ಕೆಲಸಮಾಡಲು ದಾರಿ ಮಾಡಿಕೊಡುತ್ತವೆ. ಕಾಯಿಯಲ್ಲಿರುವ ಇತರೆ ಪೀಳಿಗಳು ಅಮಯ್ಲೇಸಸ್ (amylases), ಹಯ್ಡ್ರೋಲೇಸಸ್ (hydrolases), ಕಯ್ನೇಸಸ್(kinases) ಮತ್ತು ಪೆಕ್ಟಿನೇಸಸ್ (pectinases) ಎಂಬ ದೊಳೆಗಳನ್ನು(enzyme) ಬಿಡುಗಡೆ ಮಾಡುತ್ತವೆ. ಈ ದೊಳೆಗಳು ಕಾಯಿಯನ್ನು ಹಣ್ಣು ಮಾಡಲು ನೆರವಾಗುತ್ತವೆ.

– ಅಮಯ್ಲೇಸಸ್ ದೊಳೆಯು ಕಾಯಿಯಲ್ಲಿರುವ ಗಂಜಿಯನ್ನು ಕಾರ್ಬೋಹೈಡ್ರೇಟ್ ಗಳಾಗಿ(Sugars) ಮಾರ್‍ಪಾಟುಗೊಳಿಸುತ್ತವೆ. ಇದು ಹಣ್ಣಿನ ರುಚಿಗೆ ಕಾರಣವಾಗಿರುತ್ತದೆ.
– ಹೈಡ್ರೊಲೇಸಸ್ ದೊಳೆಯು ಕಾಯಿಯಲ್ಲಿರುವ ಎಲೆಹಸಿರನ್ನು ಅಂತೋಸಯ್ನಿನ್ಸ್ (anthocynins) ಆಗಿ ಮಾರ್ಪಾಟುಗೊಳಿಸುತ್ತವೆ. ಇದು ಹಣ್ಣಿನ ಬಣ್ಣವನ್ನು ಹಸಿರಿನಿಂದ ಮತ್ತೊಂದು ಬಣ್ಣಕ್ಕೆ ತಿರುಗಿಸುತ್ತದೆ.
– ಕಯ್ನೇಸಸ್ ದೊಳೆಯು ಕಾಯಿಯಲ್ಲಿರುವ ಹುಳಿಗಳನ್ನು ತಟಸ್ಥ ಸೀರಕೂಟಗಳಾಗಿ (neutral molecules) ಮಾರ್ಪಾಟುಗೊಳಿಸುತ್ತದೆ. ಇದು ಹಣ್ಣಿನ ಹುಳಿ ಮತ್ತು ಒಗರನ್ನು ಕಡಿಮೆ ಮಾಡುತ್ತದೆ.
– ಪೆಕ್ಟಿನೇಸಸ್ ದೊಳೆಯು ಕಾಯಿಯ ಗಟ್ಟಿತನಕ್ಕೆ ಕಾರಣವಾದ ಪೆಕ್ಟಿನಿನ್ ಅನ್ನು ಕಡಿಮೆಗೊಳಿಸಿ ಹಣ್ಣನ್ನು ಕಾಯಿಗಿಂತ ಮೆತ್ತಗಾಗಿಸುತ್ತದೆ.
– ಹೈಡ್ರೊಲೇಸಸ್ ದೊಳೆಯು ಹೆಬ್ಬುಸುರಿಗಳನ್ನು ಕಂಪು ಬೀರುವ ಸೀರುಗಳಾಗಿ (aromatic compounds) ಮಾರ್ಪಾಟುಗೊಳಿಸುತ್ತದೆ. ಇದು ಹಣ್ಣಿನ ಕಂಪಿಗೆ ಕಾರಣವಾಗುತ್ತದೆ.

ಹೀಗೆ ಕಾಯಿಯು ಇತಯ್ಲಿನ್ ಗಾಳಿಗೆ ತೆರೆದುಕೊಂಡೊಡನೆ ಹಲವಾರು ರಾಸಾಯನಿಕೆ ಚಟುವಟಿಕೆಗಳು ನಡೆದು ಹಣ್ಣಾಗುತ್ತದೆ. ಕೆಲವು ಕಾಯಿಗಳು ಮರ/ಗಿಡದಿಂದ ಕಿತ್ತ ಮೇಲೂ ಇತಯ್ಲೀನ್ ಗಾಳಿಯ ನೆರವಿನಿಂದ ಹಣ್ಣಾಗುತ್ತವೆ ಇಂತಹವನ್ನು ಬಿಡಿಮಾಗು (Climacteric) ಹಣ್ಣುಗಳು ಎಂದು ಕರೆಯುತ್ತಾರೆ. ಎತ್ತುಗೆಗೆ, ಸೇಬು, ಬಾಳೆಹಣ್ಣು, ಸೀಬೆಹಣ್ಣು. ಇನ್ನು ಕೆಲವು ಹಣ್ಣುಗಳು ಮರ/ಗಿಡದಲ್ಲಿ ಇದ್ದರೆ ಮಾತ್ರ ಹಣ್ಣಾಗಬಲ್ಲವು, ಕಿತ್ತರೆ ಹಣ್ಣಾಗಲಾರವು ಅಂತವುಗಳನ್ನು ಗಿಡಮಾಗು (Non- Climacteric) ಹಣ್ಣುಗಳು ಎಂದು ಕರೆಯುತ್ತಾರೆ. ಉದಾಹರಣೆಗೆಗೆ ದ್ರಾಕ್ಷಿ, ಸ್ಟ್ರಾಬೆರ್‍ರಿ.

 

ಸೆಲೆ:-

www.researchgate.net, ncbi, www.scientificamerican.com,

ಕನೆಕ್ಟೆಡ್ ಕಾರುಗಳು(Connected Cars)

ಜಯತೀರ್ಥ ನಾಡಗೌಡ.

ಮಿಂಬಲೆ(ಇಂಟರ್ನೆಟ್)ಗೆ ಬೆಸೆದುಕೊಂಡಿರುವ ಯಾವುದೇ ಕಾರನ್ನು ಕನೆಕ್ಟೆಡ್ ಕಾರು ಎನ್ನಬಹುದು. ಕನೆಕ್ಟೆಡ್ ಕಾರು ಮಿಂಬಲೆ ಮೂಲಕ ಡೇಟಾ ಹಂಚಿಕೊಂಡು ಬೇರೆ ಎಲೆಕ್ಟ್ರಾನಿಕ್ ವಸ್ತುಗಳೊಂದಿಗೆ ವ್ಯವಹರಿಸುವುದು. ಈ ವಸ್ತು ಇಲ್ಲವೇ ಉಪಕರಣಗಳು ಕಾರಿನ ಒಳಗೂ ಇರುವಂತ ಇಲ್ಲವೇ ಹೊರಗಿರುವಂತವವೂ ಆಗಿರಬಹುದು. ಉದಾಹರಣೆಗೆ ಕಾರೊಂದು ಮಿಂಬಲೆ ಮೂಲಕ ಇನ್ನೊಂದು ಕಾರಿನೊಂದಿಗೆ ಇಲ್ಲವೇ ಸ್ಮಾರ್ಟ್‌ಫೋನ್ /ಸ್ಮಾರ್ಟ್‌ವಾಚ್‌ಗಳಂತ ಬೇರೆ ಉಪಕರಣೊಂದಿಗೆ ಮಾಹಿತಿ ಹಂಚಿಕೆ ಅಥವಾ ಮಾಹಿತಿ ಪಡೆದುಕೊಳ್ಳಬಹುದು. ಈ ರೀತಿ ಕಾರೊಂದು ಇನ್ನೊಂದು  ವಸ್ತುವಿನೊಂದಿಗೆ ಬೆಸೆದುಕೊಂಡರೆ ಅದು ಬೆಸುಗೆಯ ಕಾರು ಎನ್ನಿಸಿಕೊಳ್ಳುತ್ತದೆ.

ಕಾರುಗಳು ಹೇಗೆ ಬೆಸೆದುಕೊಳ್ಳುತ್ತವೆ? ಇದರ ಕೆಲಸ ಮಾಡುವ ವಿಧಾನ ಹೇಗೆ?

ಈ ಬೆಸುಗೆಯ ಕಾರುಗಳು ಕೆಳಗೆ ನೀಡಿರುವ ಎರಡರಲ್ಲಿ ಒಂದು ಏರ್ಪಾಟಿನ ಮೂಲಕ ಕೆಲಸ ಮಾಡುತ್ತವೆ.

  1. ಮೊದಲನೇ ಏರ್ಪಾಟು, ಟೆಥೆರ್ಡ್(Tethered) – ಟೆಥೆರ್ ಅಂದರೆ ವ್ಯಾಪ್ತಿ/ಮಿತಿಯೊಳಗೆ ಎಂಬ ಅರ್ಥ ಬರುತ್ತದೆ. ಈ ಏರ್ಪಾಟಿನಲ್ಲಿ ಕಾರು ಪಯಣಿಗರ ಮೊಬೈಲ್ ನೊಂದಿಗೆ ಬೆಸೆದುಕೊಳ್ಳುವ ಸಾಮರ್ಥ್ಯ ಹೊಂದಿರುತ್ತದೆ.
  2. ಎರಡನೇ ಏರ್ಪಾಟು, ಎಂಬೆಡೆಡ್(Embedded) – ಈ ಏರ್ಪಾಟನ್ನು ಕನ್ನಡದಲ್ಲಿ ನಾಟಿದ/ಹುದುಗಿಸಿದ ಏರ್ಪಾಟು ಎನ್ನಬಹುದು. ಇದರಲ್ಲಿ ಗಾಡಿಯ ಒಳಗಿನ ಟೆಲೆಮಾಟಿಕ್ಸ್ ಕಂಟ್ರೋಲರ್ ದಲ್ಲಿ(Telematics ECU) ಎಂಟೆನ್ನಾ(Antenna) ಮತ್ತು ಸೆಮಿಕಂಡಕ್ಟರ್ ಚಿಪ್ ಸೇರಿರುತ್ತದೆ. ಇವುಗಳ ಮೂಲಕ ಗಾಡಿಯು ಬೇರೆ ದೂರದ ಉಪಕರಣಗಳೊಂದಿಗೆ ಸುಲಭವಾಗಿ ಸಂಪರ್ಕ ಮಾಡಬಹುದು.

ಇದನ್ನು ಒಟ್ಟಾರೆಯಾಗಿ ಹೇಳಬೇಕೆಂದರೆ, ಮೊಬೈಲ್ ಫೋನ್‌ಗೆ ಬರುವ ತಂತ್ರಾಂಶದ ಅಪ್ಡೇಟ್‌ಗಳಂತೆ, ಬೆಸುಗೆಯ ಕಾರುಗಳು ಈ ರೀತಿ ಸಾಫ್ಟ್‌ವೇರ್ ಅಪ್ಡೇಟ್‌ಗಳನ್ನು ಪಡೆದು ಕೆಳಗಿಸಿಕೊಳ್ಳಬಲ್ಲವು, ಹೊರ ಜಗತ್ತಿನ ವಸ್ತುಗಳೊಂದಿಗೆ ಸಂಪರ್ಕ ಪಡೆಯಬಲ್ಲವು ಮತ್ತು ತನ್ನ ಸುತ್ತಲಿನ ಮಿತಿಯಲ್ಲಿನ ಇತರೆ ವಸ್ತುಗಳೊಂದಿಗೆ ಮಿಂಬಲೆ ಇಲ್ಲವೇ ಕಾರಿನ ವೈಫೈ (Wifi) ಮೂಲಕ ಸಂಪರ್ಕ ಹೊಂದಬಲ್ಲವು.

ಬೆಸುಗೆಯ ಕಾರುಗಳು ಹೇಗೆ ಮಾತುಕತೆ ನಡೆಸಬಲ್ಲವು?

ಬೆಸುಗೆಯ ಕಾರುಗಳು ಹೊರಜಗತ್ತಿನ ವಸ್ತುಗಳೊಂದಿಗೆ ವ್ಯವಹಾರ/ಸಂಪರ್ಕ ಮಾಡುವುದನ್ನು 5 ಬಗೆಗಳಾಗಿ ವಿಂಗಡಿಸಬಹುದು.

  1. ಒಂದು ಬಂಡಿ(ಕಾರು/ಗಾಡಿ) ಮತ್ತೊಂದು ಬಂಡಿ ಇಲ್ಲವೇ ಬಂಡಿಗಳೊಂದಿಗೆ ಮಾಹಿತಿ ಸಂಪರ್ಕ ಮಾಡಬಹುದು. ಇದನ್ನು ವೆಹಿಕಲ್ ಟು ವೆಹಿಕಲ್ ಮಾಹಿತಿ ಒಡನಾಟ ಎನ್ನುತ್ತಾರೆ(V2V). ಒಂದು ಕಾರು ನಿರ್ದಿಷ್ಟ ಜಾಗದಲ್ಲಿ ಸಾಗುತ್ತಿರುತ್ತದೆ, ಅದು ಸಾಗುವ ವೇಗ, ದಾರಿ, ತಡೆತದ ಸ್ಥಿತಿ(braking situation) ಮುಂತಾದ ಮಾಹಿತಿಯನ್ನು ಈ ಕಾರು ಕಲೆ ಹಾಕಿ ಇನ್ನೊಂದು ಕಾರಿಗೆ ಕಳಿಸಬಹುದು. ಈ ವಿಧದ ಮೂಲಕ ಬೇಜವ್ದಾರಿ ಬಂಡಿ ಓಡಿಸುಗರನ್ನು, ಇಲ್ಲವೇ ದಾರಿ ತಪ್ಪಿಸಿ ಬೇರೆ ದಾರಿಯಲ್ಲಿ ಹೋಗುವ ಬಂಡಿಗಳನ್ನು ಗುರುತಿಸಿ, ಅಗತ್ಯ ಕ್ರಮ ಕೈಗೊಳ್ಳಬಹುದು. ಬಹುತೇಕ ಕ್ಯಾಬ್/ಟ್ಯಾಕ್ಸಿ ಸೇವೆಗಳನ್ನು ಒದಗಿಸುವ ಕಂಪನಿಯವರು ತಮ್ಮ ಕಾರುಗಳು ಸರಿಯಾದ ದಾರಿಯಲ್ಲಿ ಸಾಗುತ್ತಿವೆಯೇ  ಇಲ್ಲವೇ ಎಂಬುದನ್ನು ಪತ್ತೆ ಹಚ್ಚಬಹುದು. ಗಾಡಿಗಳಲ್ಲಿ ಪರಾರಿಯಾಗುವ ಕಳ್ಳಕಾಕರನ್ನು/ಅಪಹರಣಕಾರರನ್ನು, ಅವರು ಸಾಗುವ ದಾರಿಯ ಬಗ್ಗೆ ನಿಖರ ಮಾಹಿತಿ ನೀಡುವ ಮೂಲಕ ಈ ಬಗೆಯು ಪೋಲೀಸ್‍ರಿಗೆ ನೆರವಾಗುತ್ತದೆ. 
  2. ಎರಡನೇ ಬಗೆ, ಗಾಡಿ ಮತ್ತು ದಾರಿಹೋಕರ ನಡುವೆ ಸಂಪರ್ಕ(V2P-ವೆಹಿಕಲ್ ಟು ಪೆಡೆಸ್ಟ್ರಿಯನ್):

ಇಲ್ಲಿ ಕಾರು ದಾರಿಯಲ್ಲಿ ಓಡಾಡುವ ಇತರೆ ದಾರಿಹೋಕರನ್ನು ಅರಿವುಕಗಳ ಮೂಲಕ ಗುರುತಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿ ಅಪಘಾತ ತಡೆಯುತ್ತದೆ.

  1. ಗಾಡಿ ಮತ್ತು ಇತರೆ ಮೂಲಭೂತ ಸೌಕರ್ಯಗಳ ನಡುವಿನ ಸಂಪರ್ಕ(V2I-ವೆಹಿಕಲ್ ಟು ಇನ್ಫ್ರಾಸ್ಟ್ರಕ್ಚರ್): 

ಈ ಬಗೆಯಲ್ಲಿ ಕಾರು ತನ್ನ ಸುತ್ತಲಿನ ಪರಿಸರ, ಸೇತುವೆ, ಕಟ್ಟಡ, ಬೀದಿ ದೀಪ, ಸಂಚಾರದ ದಟ್ಟಣೆ, ಎದುರಾಗುವ ಸಂಚಾರಿ ಸಿಗ್ನಲ್ ಹೀಗೆ ಹಲವಾರು ಮಾಹಿತಿಯನ್ನು ಪಡೆದು ಅದನ್ನು ಹಂಚಿಕೊಳ್ಳಬಲ್ಲದು. ಈ ಮಾಹಿತಿ ಸಂಚಾರ ದಟ್ಟಣೆ ನಿರ್ವಹಿಸುವ ಪೋಲೀಸ್‍ರಿಗೆ, ತುರ್ತು ಸಮಯದಲ್ಲಿ ಅಂಬ್ಯುಲೆನ್ಸ್‌ಗಳಿಗೆ ನೆರವಾಗುತ್ತವೆ. ನಮ್ಮ ಮೊಬೈಲ್‌ಗಳಲ್ಲಿ ಕಂಡುಬರುವ ದಾರಿತಲುಪು ಏರ್ಪಾಟು(Navigation System) ಮಾಹಿತಿಗಿಂತಲೂ ಇಲ್ಲಿ ಹೆಚ್ಚು ನಿಖರ ಮತ್ತು ನೇರವಾದ ಮಾಹಿತಿ(Real time Data) ಒದಗಿಸುವ ವ್ಯವಸ್ತೆ ಇರುತ್ತದೆ.

  1. ಗಾಡಿ ಮತ್ತು ಕ್ಲೌಡ್ ಮಾಹಿತಿ ಸಂಪರ್ಕ(V2C-ವೆಹಿಕಲ್ ಟು ಕ್ಲೌಡ್): ಕಾರುಗಳು ಮೂಲಕ ಕ್ಲೌಡ್‍ನಲ್ಲಿ ಮಾಹಿತಿ ಕೂಡಿಟ್ಟುಕೊಳ್ಳಬಹುದು. ಉದಾಹರಣೆಗೆ, ಗಾಡಿಯೊಂದು ಎಷ್ಟು ಬಾರಿ ರಿಪೇರಿಯಾಗಿದೆ, ಎಷ್ಟು ಸಲ ಸರ್ವೀಸ್ ಮಾಡಿಸಲ್ಪಟ್ಟಿದೆ, ದಾರಿ ಮಧ್ಯೆದಲ್ಲಿ ಕಾರು ಕೆಟ್ಟು ನಿಂತ ಪರಿಸ್ಥಿತಿ, ಹೀಗೆ ಎಲ್ಲ ದಾಖಲೆಗಳನ್ನು ಕ್ಲೌಡ್ ಮೂಲಕ ಕೂಡಿಟ್ಟು, ಬೇಕೆಂದಾಗ ಅದನ್ನು ಬಳಸಿಕೊಳ್ಳಬಹುದು.
  2. ಗಾಡಿ ಮತ್ತು ಮೇಲಿನ ಎಲ್ಲವೂಗಳೊಂದಿಗೆ ಸಂಪರ್ಕ(V2X-ವೆಹಿಕಲ್ ಟು ಎವೆರಿಥಿಂಗ್):

ಈ ವಿಧದಲ್ಲಿ ಗಾಡಿಯೊಂದು ಮೇಲೆ ತಿಳಿಸಿದ ಎಲ್ಲವೂಗಳೊಂದಿಗೆ ಮಾಹಿತಿ ಪಡೆಯುವುದು-ಹಂಚುವುದನ್ನು ಮಾಡಬಹುದು. ಇದರಿಂದ ಗಾಡಿಯೊಂದು ಒಂದೇ ಸಮಯದಲ್ಲಿ ಬೇರೆ ಗಾಡಿಯೊಂದಕ್ಕೆ ಬೆಸೆದುಕೊಂಡು ಸುತ್ತಲಿನ ವಾತಾವರಣದ ಮಾಹಿತಿ ಹಂಚಿ, ಸಂಚಾರ ದಟ್ಟಣೆಯ ಮಾಹಿತಿ ಪಡೆದು, ದಾರಿಹೋಕರು ಎದುರಾದರೆ ಗಾಡಿ ನಿಲ್ಲಿಸುವಂತೆ ಓಡಿಸುಗನನ್ನು ಎಚ್ಚರಿಸಬಹುದು. ಮತ್ತೆ ಎಲ್ಲ ಮಾಹಿತಿಯನ್ನು ಮುಂದೆ ಬಳಸಲು ಕ್ಲೌಡ್‌ನಲ್ಲಿ ಕೂಡಿಡಬಹುದು. ಈ ಎಲ್ಲವೂ ಒಟ್ಟಿಗೆ ನಡೆದು,  ಸಾಕಷ್ಟು ಮಾಹಿತಿ ಒಂದು ಗಾಡಿಯಿಂದ ಇನ್ನೊಂದು ಗಾಡಿಗೆ ರವಾನೆಯಾಗುತ್ತಿರುತ್ತದೆ.

ಬೆಸುಗೆಯ ಕಾರುಗಳ ಅನುಕೂಲಗಳೇನು?

ಗಾಡಿಯೊಳಗಡೆ ಮನೋರಂಜನೆ, ಭದ್ರತೆ ಮತ್ತು ಅಪಘಾತ ತಡೆಯುವಿಕೆ, ಸಾರಿಗೆ ದಟ್ಟಣೆ, ಬಂಡಿಯನ್ನು ಸುಲಭವಾಗಿ ಹಿಡಿತದಲ್ಲಿಟ್ಟುಕೊಳ್ಳುವ ವಿಷಯಗಳಲ್ಲಿ ಬೆಸುಗೆಯ ಕಾರುಗಳು ಮಹತ್ತರ ಪಾತ್ರ ವಹಿಸಲಿವೆ. ಹೆಚ್ಚುತ್ತಿರುವ ಜನಸಂಖ್ಯೆಗೆ ತಕ್ಕಂತೆ ಹೆಚ್ಚಿನ ಬಂಡಿಗಳ ಓಡಾಟವನ್ನು ಸುಲಭ ಸರಳಗೊಳಿಸಿ, ಸಾರಿಗೆ ಏರ್ಪಾಟಿನಲ್ಲಿ ಸೂಕ್ತ ಬದಲಾವಣೆ ತರುವಲ್ಲಿ ಬೆಸುಗೆಯ ಕಾರುಗಳು ನೆರವಾಗುವುದು ಖಚಿತ.

ಇಂದು ಮಾರುಕಟ್ಟೆಯಲ್ಲಿರುವ ಬಹುತೇಕ ಕಾರುಗಳು ಒಳ್ಳೆಯ ಗುಣಮಟ್ಟದ ತಿಳಿನಲಿ ಏರ್ಪಾಟು(Infotainment System), ಅಂಡ್ರ್ಯಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಏರ್ಪಾಟಿನಿಂದ ಸರಳವಾಗಿ ಜೋಡಣೆಗೊಳ್ಳುತ್ತವೆ. ಈ ಏರ್ಪಾಟುಗಳಿಗೆ ಹೆಚ್ಚಿನ ನಿಖರ ಮಾಹಿತಿ ಒದಗಿಸಿ ಕಾರು ಓಡಿಸುಗರಿಗೆ ದಾರಿತೋರಲಿದೆ ಬೆಸುಗೆಯ ಕಾರುಗಳು. ಒಬ್ಬ ವ್ಯಕ್ತಿ ಕಾರಿನಲ್ಲಿ ಮಾರುಕಟ್ಟೆಗೆ ಹೋಗಿದ್ದಾಗ,, ಅವಸರದಲ್ಲಿ ಕಾರು ಪಾರ್ಕ್ ಮಾಡಿ, ಕಾರಿಗೆ ಬೀಗ ಹಾಕದೇ ದೂರ ಬಂದಾಗ, ಕಾರಿಗೆ ಬೀಗ ಹಾಕದೇ ಇರುವುದು ನೆನಪಾಗುತ್ತದೆ. ಆದರೆ,ಆ ವ್ಯಕ್ತಿಗೆ ನೆನಪಾಗುವ ಮೊದಲೇ ಆತನ ಮೊಬೈಲ್ ತಕ್ಷಣ ಎಚ್ಚರಿಕೆ ಸಂದೇಶ ನೀಡುತ್ತದೆ. ಕನೆಕ್ಟೆಡ್ ಕಾರ್ ತಂತ್ರಜ್ಞಾನದ ಮೂಲಕ ಬೆಸೆದುಕೊಂಡ ಕಾರು ಮತ್ತು ಮೊಬೈಲ್, ಇಂತ ಹೊತ್ತಲ್ಲಿ ಸಹಾಯಕ್ಕೆ ಬರುತ್ತದೆ. ಟ್ಯಾಕ್ಸಿ ಕಂಪನಿಯ ಮಾಲೀಕನೊಬ್ಬ ತನ್ನ ಮೊಬೈಲ್ ಮೂಲಕವೇ ತನ್ನ ಹತ್ತಾರು ಟ್ಯಾಕ್ಸಿಗಳು ಸರಿಯಾದ ದಾರಿಯಲ್ಲಿ ಸಾಗುತ್ತಿವೆಯೇ ಇಲ್ಲವೇ ಎಂಬುದನ್ನು ಕ್ಷಣಾರ್ಧದಲ್ಲಿ ಕಂಡುಕೊಳ್ಳಬಹುದು. ತನ್ನ ಟ್ಯಾಕ್ಸಿ ಓಡಿಸುಗರಿಗೆ ಸಾಗುವ ದಾರಿಯ ಸಂಚಾರ ದಟ್ಟಣೆಯ ಮಾಹಿತಿ ಒದಗಿಸಿ, ಅದಕ್ಕೆ ತಕ್ಕಂತೆ ಮಾರ್ಗ ಬದಲಿಸಿ ಸುಲಭವಾಗಿ ಊರು ಮುಟ್ಟುವ ಸಲಹೆ ನೀಡಬಹುದು. ಕಾರಿನಲ್ಲಿ ದೂರದ ಊರಿಗೆ ಸಾಗುತ್ತಿದ್ದೀರಿ, ಮನೆಯಲ್ಲಿ ಗೀಸರ್ ಆಫ್ ಮಾಡುವುದು ಆಗ ನೆನಪಾಗುತ್ತದೆ, ಚಿಂತೆ ಬೇಡ ನಿಮ್ಮ ಕಾರು ಮನೆಯಲ್ಲಿನ ಗೀಸರ್ ಆಫ್ ಮಾಡುತ್ತದೆ. ನೀವು ಮತ್ತು ಕುಟುಂಬ, ವಾರದ ಕೊನೆಯಲ್ಲಿ ಮಾಲ್‍ವೊಂದಕ್ಕೆ ಹೋಗಬೇಕೆಂದುಕೊಂಡಿರುತ್ತೀರಿ, ಆ ಮಾಲ್‍ನಲ್ಲಿ ಪಾರ್ಕಿಂಗ್‌ಗೆ ಎಷ್ಟು ಜಾಗಗಳು ಖಾಲಿ ಇವೆ ಎಂಬುದನ್ನು ನಿಮ್ಮ ಕಾರು ನಿಮಗೆ ತಿಳಿಸುತ್ತದೆ. ಮಾಲ್‌ನ ಸುತ್ತಮುತ್ತಲಿನ ಪರಿಸರದ ನೇರ ಮಾಹಿತಿ ಕನೆಕ್ಟೆಡ್ ಕಾರ್ ಮೂಲಕ ನಿಮ್ಮ ಕಾರು ಪಡೆದುಕೊಂಡು ನಿಮಗೆ ಮಾಹಿತಿ ನೀಡುತ್ತದೆ. ಆಗ ನೀವು ಪಾರ್ಕಿಂಗ್‍ಗಾಗಿ ಅಲೆದಾಡುವ-ಸಮಯ ಕಳೆಯುವ ಅಗತ್ಯ ಇರುವುದಿಲ್ಲ. ಇನ್ನೊಂದು ಪ್ರಮುಖ ಅನುಕೂಲವೆಂದರೆ ಜಿಯೋ ಫೆನ್ಸಿಂಗ್(Geo-Fencing). ಅಂದರೆ ನಿರ್ದಿಷ್ಟ ದಾರಿಯಲ್ಲಿ, ನಿರ್ದಿಷ್ಟ ವಾತಾವರಣದಲ್ಲಿ ಮಾತ್ರ ಗಾಡಿ ಓಡಿಸುವಂತೆ ಮಾಡುವುದು. ಉದಾಹರಣೆಗೆ ನೀವು ನಿಮ್ಮ ಮನೆಯಲ್ಲಿ  ಮಗ/ಮಗಳಿಗೆ ಕಾಲೇಜಿಗೆ ಹೋಗಿಬರಲು ಕಾರನ್ನು ಕೊಡಿಸುತ್ತೀರಿ ಎಂದುಕೊಳ್ಳಿ. ದಿನವೂ ಮಕ್ಕಳು ಕಾಲೇಜಿಗೆ ಅದೇ ದಾರಿಯಲ್ಲಿ ಸಾಗಿ ಮರಳಿ ಬರುವಂತೆ ಮಾಡಬಹುದು, ಬಂಡಿ ಅದೇ ವಾತಾವರಣದಲ್ಲಿ ಸಾಗಿ ಬರುವ ಮಾಹಿತಿಯನ್ನು ಒಮ್ಮೆ ಜಿಯೋ ಫೆನ್ಸಿಂಗ್ ಮೂಲಕ ಫೀಡ್ ಮಾಡಿ, ಕನೆಕ್ಟೆಡ್ ಕಾರು ಮೂಲಕ ನಿಮ್ಮ ಮೊಬೈಲ್ ಮತ್ತು ಕಾರು ಬೆಸೆದುಕೊಂಡಿದ್ದರೆ, ಈ ದೈನಂದಿನ ಕಾಲೇಜಿಗೆ ಹೋಗಿ ಬರುವ ದಾರಿಯಲ್ಲಿ ವ್ಯತ್ಯಾಸವಾದರೆ ಕೂಡಲೇ ನಿಮ್ಮ ಮೊಬೈಲ್‌ಗೆ ಎಚ್ಚರಿಕೆ ಸಂದೇಶ ಬರುತ್ತದೆ. ಹೀಗೆ ಕಾರು ಓಡಾಡುವ ಚಟುವಟಿಕೆಯ ಮೇಲೆ ಸುಲಭವಾಗಿ ಕಣ್ಣಿಡಬಹುದು. ಕಾರೊಂದು ದಾರಿಯಲ್ಲಿ ಸಾಗುವಾಗ ಅಪಘಾತಕ್ಕೀಡಾದರೆ, ಕೂಡಲೇ ಹತ್ತಿರದ ಸಂಚಾರಿ ಪೋಲೀಸ್‍ರಿಗೂ ಇಲ್ಲ ಅಪಘಾತವಾದ ವ್ಯಕ್ತಿಗಳ ಕುಟುಂಬಕ್ಕೆ ಕೂಡಲೇ ಕಾರು ಮಾಹಿತಿ ಒದಗಿಸಿ ಜೀವ ಉಳಿಸುವ ಕೆಲಸ ಮಾಡುತ್ತದೆ. ಮಳೆಗಾಲದಲ್ಲಿ ಗಾಡಿಯೊಂದು ಘಾಟಿ ಪ್ರದೇಶದಲ್ಲಿ ಸಾಗುತ್ತಿದೆ, ಮುಂದೆ ಹತ್ತಾರು ಮೈಲಿ ದೂರದಲ್ಲಿ ಗುಡ್ಡ ಕುಸಿತ, ಭೂಕುಸಿತವಾದರೆ, ಕೂಡಲೇ ಅದರ ಮಾಹಿತಿ ಗಾಡಿಗೆ ತಲುಪುತ್ತದೆ. ಆಗ ಓಡಿಸುಗ ಮುಂದೆ ಸಾಗುವ ಅಪಾಯವನ್ನು ಅರಿತು ಗಾಡಿಯ ಸಾಗುವ ದಾರಿಯನ್ನು ಬದಲಿಸಿಯೋ ಇಲ್ಲವೇ ಭದ್ರವಾದ ಜಾಗವನ್ನು ಸೇರಿಕೊಳ್ಳಬಹುದು. ದೈನಂದಿನ ವ್ಯವಹಾರದ ಮೇಲೆ ಕಣ್ಣಿಡಲು, ಕಳ್ಳ-ಕಾಕರ ಚಟುವಟಿಕೆಗಳ ಮಾಹಿತಿ ಪಡೆದು ಪೋಲೀಸ್ ವ್ಯವಸ್ಥೆಗೆ ನೆರವಾಗಲು ಬೆಸುಗೆಯ ಗಾಡಿಗಳ ಅಗತ್ಯವಿರಲಿದೆ.

ಅನಾನುಕೂಲಗಳ ವಿಷಯ ಬಂದಾಗ, ಕಾರುಗಳ ಹ್ಯಾಕಿಂಗ್ ಮುಖ್ಯವಾದ ತೊಡಕಾಗುವ ಸಾಧ್ಯತೆ ಇದೆ. ಮಿಂಬಲೆ ಮೂಲಕ ಬೆಸೆದುಕೊಂಡಿರುವ ಗಾಡಿಗಳನ್ನು ವೆಬ್ಸೈಟ್ ಹ್ಯಾಕ್ ಮಾಡುವಂತೆ ದೂರದಲೆಲ್ಲೋ ಇರುವ ವ್ಯಕ್ತಿಯೊಬ್ಬ ಹ್ಯಾಕ್ ಮಾಡಿ ತನ್ನ ವಶಕ್ಕೆ ತೆಗೆದುಕೊಂಡರೆ ಆಗುವ ಅನಾಹುತಗಳನ್ನು ಯೋಚಿಸಿ. ಇನ್ನೂ ದಿಗಿಲುಕೋರರು ಕಾರುಗಳನ್ನು ತಮ್ಮ ವಶಕ್ಕೆ ಪಡೆದು, ಯಾವುದೋ ದೇಶದ ಮೂಲೆಯಿಂದ ಕಾರನ್ನು ಅದರ ಮಾಲೀಕನ ಮೊಬೈಲ್ ಹೀಗೆ ಎಲ್ಲವನ್ನೂ ತನ್ನ ಹಿಡಿತಕ್ಕೆ ಪಡೆದು ಕೊಲೆ ಸುಲಿಗೆ ಮಾಡುವ ಅಪಾಯ ತಪ್ಪಿದ್ದಲ್ಲ. ಮಾದಕ ವಸ್ತು ಸಾಗಾಟಗಾರರು ಈ ತಂತ್ರಜ್ಞಾನದ ಮೂಲಕ ಕಳ್ಳದಾರಿಗಳ ಮೂಲಕ ಯಾರಿಗೂ ತಿಳಿಯದಂತೆ ಮಾದಕ ವಸ್ತುಗಳನ್ನು ಸಾಗಾಟ ಮಾಡಿ ಸಮಾಜವನ್ನು ಹಾಳುಗೆಡುವಬಹುದು. 

ಮಾಹಿತಿ ಗುಟ್ಟನ್ನು ಕಾಪಾಡಿಕೊಳ್ಳುವುದು ಕಷ್ಟ. ಬೆಸುಗೆಯ ಗಾಡಿಗಳನ್ನು ಕ್ಲೌಡ್, ಆಪ್ ಮೂಲಕ ಸಾಕಷ್ಟು ಮಾಹಿತಿಯನ್ನು ಕೂಡಿಟ್ಟುಕೊಳ್ಳುವುದರಿಂದ ಕಾರಿನೊಡೆಯರ ವೈಯುಕ್ತಿಕ ಮಾಹಿತಿ ಕಾರು ತಯಾರಕರಿಗೆ ಸುಲಭವಾಗಿ ತಲುಪುತ್ತದೆ. ಇಂತ ಮಾಹಿತಿಗೆ ಪ್ರವೇಶವಕಾಶ(Access) ಹೊಂದಿರುವವರು ತಮಗಿಷ್ಟದಂತೆ ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. 

ಬೆಸುಗೆಯ ಗಾಡಿಗಳ ಸಾಧಕ ಬಾಧಕಗಳ ಚರ್ಚೆಗಳು ದಿನೇದಿನೇ ಜೋರಾಗಿ ನಡೆಯುತ್ತಲೇ ಇವೆ. ಬೆಸುಗೆಯ ಗಾಡಿಗಳ ಅನಾನುಕೂಲಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸಗಳು ಭರದಲ್ಲಿ ಸಾಗಿವೆ. ಇದರ ಮಧ್ಯೆಯೇ ಸಾಕಷ್ಟು ಬೆಸುಗೆಯ ಗಾಡಿಗಳು ಭಾರತ ಸೇರಿದಂತೆ ಹಲವು ದೇಶಗಳಲ್ಲಿ ದಿನವೂ ಓಡಾಡುತ್ತಿವೆ.

ಮಾಹಿತಿ ಸೆಲೆ: connected cars
ತಿಟ್ಟ ಸೆಲೆ: connected cars pic