ಕನೆಕ್ಟೆಡ್ ಕಾರುಗಳು(Connected Cars)

ಜಯತೀರ್ಥ ನಾಡಗೌಡ.

ಮಿಂಬಲೆ(ಇಂಟರ್ನೆಟ್)ಗೆ ಬೆಸೆದುಕೊಂಡಿರುವ ಯಾವುದೇ ಕಾರನ್ನು ಕನೆಕ್ಟೆಡ್ ಕಾರು ಎನ್ನಬಹುದು. ಕನೆಕ್ಟೆಡ್ ಕಾರು ಮಿಂಬಲೆ ಮೂಲಕ ಡೇಟಾ ಹಂಚಿಕೊಂಡು ಬೇರೆ ಎಲೆಕ್ಟ್ರಾನಿಕ್ ವಸ್ತುಗಳೊಂದಿಗೆ ವ್ಯವಹರಿಸುವುದು. ಈ ವಸ್ತು ಇಲ್ಲವೇ ಉಪಕರಣಗಳು ಕಾರಿನ ಒಳಗೂ ಇರುವಂತ ಇಲ್ಲವೇ ಹೊರಗಿರುವಂತವವೂ ಆಗಿರಬಹುದು. ಉದಾಹರಣೆಗೆ ಕಾರೊಂದು ಮಿಂಬಲೆ ಮೂಲಕ ಇನ್ನೊಂದು ಕಾರಿನೊಂದಿಗೆ ಇಲ್ಲವೇ ಸ್ಮಾರ್ಟ್‌ಫೋನ್ /ಸ್ಮಾರ್ಟ್‌ವಾಚ್‌ಗಳಂತ ಬೇರೆ ಉಪಕರಣೊಂದಿಗೆ ಮಾಹಿತಿ ಹಂಚಿಕೆ ಅಥವಾ ಮಾಹಿತಿ ಪಡೆದುಕೊಳ್ಳಬಹುದು. ಈ ರೀತಿ ಕಾರೊಂದು ಇನ್ನೊಂದು  ವಸ್ತುವಿನೊಂದಿಗೆ ಬೆಸೆದುಕೊಂಡರೆ ಅದು ಬೆಸುಗೆಯ ಕಾರು ಎನ್ನಿಸಿಕೊಳ್ಳುತ್ತದೆ.

ಕಾರುಗಳು ಹೇಗೆ ಬೆಸೆದುಕೊಳ್ಳುತ್ತವೆ? ಇದರ ಕೆಲಸ ಮಾಡುವ ವಿಧಾನ ಹೇಗೆ?

ಈ ಬೆಸುಗೆಯ ಕಾರುಗಳು ಕೆಳಗೆ ನೀಡಿರುವ ಎರಡರಲ್ಲಿ ಒಂದು ಏರ್ಪಾಟಿನ ಮೂಲಕ ಕೆಲಸ ಮಾಡುತ್ತವೆ.

  1. ಮೊದಲನೇ ಏರ್ಪಾಟು, ಟೆಥೆರ್ಡ್(Tethered) – ಟೆಥೆರ್ ಅಂದರೆ ವ್ಯಾಪ್ತಿ/ಮಿತಿಯೊಳಗೆ ಎಂಬ ಅರ್ಥ ಬರುತ್ತದೆ. ಈ ಏರ್ಪಾಟಿನಲ್ಲಿ ಕಾರು ಪಯಣಿಗರ ಮೊಬೈಲ್ ನೊಂದಿಗೆ ಬೆಸೆದುಕೊಳ್ಳುವ ಸಾಮರ್ಥ್ಯ ಹೊಂದಿರುತ್ತದೆ.
  2. ಎರಡನೇ ಏರ್ಪಾಟು, ಎಂಬೆಡೆಡ್(Embedded) – ಈ ಏರ್ಪಾಟನ್ನು ಕನ್ನಡದಲ್ಲಿ ನಾಟಿದ/ಹುದುಗಿಸಿದ ಏರ್ಪಾಟು ಎನ್ನಬಹುದು. ಇದರಲ್ಲಿ ಗಾಡಿಯ ಒಳಗಿನ ಟೆಲೆಮಾಟಿಕ್ಸ್ ಕಂಟ್ರೋಲರ್ ದಲ್ಲಿ(Telematics ECU) ಎಂಟೆನ್ನಾ(Antenna) ಮತ್ತು ಸೆಮಿಕಂಡಕ್ಟರ್ ಚಿಪ್ ಸೇರಿರುತ್ತದೆ. ಇವುಗಳ ಮೂಲಕ ಗಾಡಿಯು ಬೇರೆ ದೂರದ ಉಪಕರಣಗಳೊಂದಿಗೆ ಸುಲಭವಾಗಿ ಸಂಪರ್ಕ ಮಾಡಬಹುದು.

ಇದನ್ನು ಒಟ್ಟಾರೆಯಾಗಿ ಹೇಳಬೇಕೆಂದರೆ, ಮೊಬೈಲ್ ಫೋನ್‌ಗೆ ಬರುವ ತಂತ್ರಾಂಶದ ಅಪ್ಡೇಟ್‌ಗಳಂತೆ, ಬೆಸುಗೆಯ ಕಾರುಗಳು ಈ ರೀತಿ ಸಾಫ್ಟ್‌ವೇರ್ ಅಪ್ಡೇಟ್‌ಗಳನ್ನು ಪಡೆದು ಕೆಳಗಿಸಿಕೊಳ್ಳಬಲ್ಲವು, ಹೊರ ಜಗತ್ತಿನ ವಸ್ತುಗಳೊಂದಿಗೆ ಸಂಪರ್ಕ ಪಡೆಯಬಲ್ಲವು ಮತ್ತು ತನ್ನ ಸುತ್ತಲಿನ ಮಿತಿಯಲ್ಲಿನ ಇತರೆ ವಸ್ತುಗಳೊಂದಿಗೆ ಮಿಂಬಲೆ ಇಲ್ಲವೇ ಕಾರಿನ ವೈಫೈ (Wifi) ಮೂಲಕ ಸಂಪರ್ಕ ಹೊಂದಬಲ್ಲವು.

ಬೆಸುಗೆಯ ಕಾರುಗಳು ಹೇಗೆ ಮಾತುಕತೆ ನಡೆಸಬಲ್ಲವು?

ಬೆಸುಗೆಯ ಕಾರುಗಳು ಹೊರಜಗತ್ತಿನ ವಸ್ತುಗಳೊಂದಿಗೆ ವ್ಯವಹಾರ/ಸಂಪರ್ಕ ಮಾಡುವುದನ್ನು 5 ಬಗೆಗಳಾಗಿ ವಿಂಗಡಿಸಬಹುದು.

  1. ಒಂದು ಬಂಡಿ(ಕಾರು/ಗಾಡಿ) ಮತ್ತೊಂದು ಬಂಡಿ ಇಲ್ಲವೇ ಬಂಡಿಗಳೊಂದಿಗೆ ಮಾಹಿತಿ ಸಂಪರ್ಕ ಮಾಡಬಹುದು. ಇದನ್ನು ವೆಹಿಕಲ್ ಟು ವೆಹಿಕಲ್ ಮಾಹಿತಿ ಒಡನಾಟ ಎನ್ನುತ್ತಾರೆ(V2V). ಒಂದು ಕಾರು ನಿರ್ದಿಷ್ಟ ಜಾಗದಲ್ಲಿ ಸಾಗುತ್ತಿರುತ್ತದೆ, ಅದು ಸಾಗುವ ವೇಗ, ದಾರಿ, ತಡೆತದ ಸ್ಥಿತಿ(braking situation) ಮುಂತಾದ ಮಾಹಿತಿಯನ್ನು ಈ ಕಾರು ಕಲೆ ಹಾಕಿ ಇನ್ನೊಂದು ಕಾರಿಗೆ ಕಳಿಸಬಹುದು. ಈ ವಿಧದ ಮೂಲಕ ಬೇಜವ್ದಾರಿ ಬಂಡಿ ಓಡಿಸುಗರನ್ನು, ಇಲ್ಲವೇ ದಾರಿ ತಪ್ಪಿಸಿ ಬೇರೆ ದಾರಿಯಲ್ಲಿ ಹೋಗುವ ಬಂಡಿಗಳನ್ನು ಗುರುತಿಸಿ, ಅಗತ್ಯ ಕ್ರಮ ಕೈಗೊಳ್ಳಬಹುದು. ಬಹುತೇಕ ಕ್ಯಾಬ್/ಟ್ಯಾಕ್ಸಿ ಸೇವೆಗಳನ್ನು ಒದಗಿಸುವ ಕಂಪನಿಯವರು ತಮ್ಮ ಕಾರುಗಳು ಸರಿಯಾದ ದಾರಿಯಲ್ಲಿ ಸಾಗುತ್ತಿವೆಯೇ  ಇಲ್ಲವೇ ಎಂಬುದನ್ನು ಪತ್ತೆ ಹಚ್ಚಬಹುದು. ಗಾಡಿಗಳಲ್ಲಿ ಪರಾರಿಯಾಗುವ ಕಳ್ಳಕಾಕರನ್ನು/ಅಪಹರಣಕಾರರನ್ನು, ಅವರು ಸಾಗುವ ದಾರಿಯ ಬಗ್ಗೆ ನಿಖರ ಮಾಹಿತಿ ನೀಡುವ ಮೂಲಕ ಈ ಬಗೆಯು ಪೋಲೀಸ್‍ರಿಗೆ ನೆರವಾಗುತ್ತದೆ. 
  2. ಎರಡನೇ ಬಗೆ, ಗಾಡಿ ಮತ್ತು ದಾರಿಹೋಕರ ನಡುವೆ ಸಂಪರ್ಕ(V2P-ವೆಹಿಕಲ್ ಟು ಪೆಡೆಸ್ಟ್ರಿಯನ್):

ಇಲ್ಲಿ ಕಾರು ದಾರಿಯಲ್ಲಿ ಓಡಾಡುವ ಇತರೆ ದಾರಿಹೋಕರನ್ನು ಅರಿವುಕಗಳ ಮೂಲಕ ಗುರುತಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿ ಅಪಘಾತ ತಡೆಯುತ್ತದೆ.

  1. ಗಾಡಿ ಮತ್ತು ಇತರೆ ಮೂಲಭೂತ ಸೌಕರ್ಯಗಳ ನಡುವಿನ ಸಂಪರ್ಕ(V2I-ವೆಹಿಕಲ್ ಟು ಇನ್ಫ್ರಾಸ್ಟ್ರಕ್ಚರ್): 

ಈ ಬಗೆಯಲ್ಲಿ ಕಾರು ತನ್ನ ಸುತ್ತಲಿನ ಪರಿಸರ, ಸೇತುವೆ, ಕಟ್ಟಡ, ಬೀದಿ ದೀಪ, ಸಂಚಾರದ ದಟ್ಟಣೆ, ಎದುರಾಗುವ ಸಂಚಾರಿ ಸಿಗ್ನಲ್ ಹೀಗೆ ಹಲವಾರು ಮಾಹಿತಿಯನ್ನು ಪಡೆದು ಅದನ್ನು ಹಂಚಿಕೊಳ್ಳಬಲ್ಲದು. ಈ ಮಾಹಿತಿ ಸಂಚಾರ ದಟ್ಟಣೆ ನಿರ್ವಹಿಸುವ ಪೋಲೀಸ್‍ರಿಗೆ, ತುರ್ತು ಸಮಯದಲ್ಲಿ ಅಂಬ್ಯುಲೆನ್ಸ್‌ಗಳಿಗೆ ನೆರವಾಗುತ್ತವೆ. ನಮ್ಮ ಮೊಬೈಲ್‌ಗಳಲ್ಲಿ ಕಂಡುಬರುವ ದಾರಿತಲುಪು ಏರ್ಪಾಟು(Navigation System) ಮಾಹಿತಿಗಿಂತಲೂ ಇಲ್ಲಿ ಹೆಚ್ಚು ನಿಖರ ಮತ್ತು ನೇರವಾದ ಮಾಹಿತಿ(Real time Data) ಒದಗಿಸುವ ವ್ಯವಸ್ತೆ ಇರುತ್ತದೆ.

  1. ಗಾಡಿ ಮತ್ತು ಕ್ಲೌಡ್ ಮಾಹಿತಿ ಸಂಪರ್ಕ(V2C-ವೆಹಿಕಲ್ ಟು ಕ್ಲೌಡ್): ಕಾರುಗಳು ಮೂಲಕ ಕ್ಲೌಡ್‍ನಲ್ಲಿ ಮಾಹಿತಿ ಕೂಡಿಟ್ಟುಕೊಳ್ಳಬಹುದು. ಉದಾಹರಣೆಗೆ, ಗಾಡಿಯೊಂದು ಎಷ್ಟು ಬಾರಿ ರಿಪೇರಿಯಾಗಿದೆ, ಎಷ್ಟು ಸಲ ಸರ್ವೀಸ್ ಮಾಡಿಸಲ್ಪಟ್ಟಿದೆ, ದಾರಿ ಮಧ್ಯೆದಲ್ಲಿ ಕಾರು ಕೆಟ್ಟು ನಿಂತ ಪರಿಸ್ಥಿತಿ, ಹೀಗೆ ಎಲ್ಲ ದಾಖಲೆಗಳನ್ನು ಕ್ಲೌಡ್ ಮೂಲಕ ಕೂಡಿಟ್ಟು, ಬೇಕೆಂದಾಗ ಅದನ್ನು ಬಳಸಿಕೊಳ್ಳಬಹುದು.
  2. ಗಾಡಿ ಮತ್ತು ಮೇಲಿನ ಎಲ್ಲವೂಗಳೊಂದಿಗೆ ಸಂಪರ್ಕ(V2X-ವೆಹಿಕಲ್ ಟು ಎವೆರಿಥಿಂಗ್):

ಈ ವಿಧದಲ್ಲಿ ಗಾಡಿಯೊಂದು ಮೇಲೆ ತಿಳಿಸಿದ ಎಲ್ಲವೂಗಳೊಂದಿಗೆ ಮಾಹಿತಿ ಪಡೆಯುವುದು-ಹಂಚುವುದನ್ನು ಮಾಡಬಹುದು. ಇದರಿಂದ ಗಾಡಿಯೊಂದು ಒಂದೇ ಸಮಯದಲ್ಲಿ ಬೇರೆ ಗಾಡಿಯೊಂದಕ್ಕೆ ಬೆಸೆದುಕೊಂಡು ಸುತ್ತಲಿನ ವಾತಾವರಣದ ಮಾಹಿತಿ ಹಂಚಿ, ಸಂಚಾರ ದಟ್ಟಣೆಯ ಮಾಹಿತಿ ಪಡೆದು, ದಾರಿಹೋಕರು ಎದುರಾದರೆ ಗಾಡಿ ನಿಲ್ಲಿಸುವಂತೆ ಓಡಿಸುಗನನ್ನು ಎಚ್ಚರಿಸಬಹುದು. ಮತ್ತೆ ಎಲ್ಲ ಮಾಹಿತಿಯನ್ನು ಮುಂದೆ ಬಳಸಲು ಕ್ಲೌಡ್‌ನಲ್ಲಿ ಕೂಡಿಡಬಹುದು. ಈ ಎಲ್ಲವೂ ಒಟ್ಟಿಗೆ ನಡೆದು,  ಸಾಕಷ್ಟು ಮಾಹಿತಿ ಒಂದು ಗಾಡಿಯಿಂದ ಇನ್ನೊಂದು ಗಾಡಿಗೆ ರವಾನೆಯಾಗುತ್ತಿರುತ್ತದೆ.

ಬೆಸುಗೆಯ ಕಾರುಗಳ ಅನುಕೂಲಗಳೇನು?

ಗಾಡಿಯೊಳಗಡೆ ಮನೋರಂಜನೆ, ಭದ್ರತೆ ಮತ್ತು ಅಪಘಾತ ತಡೆಯುವಿಕೆ, ಸಾರಿಗೆ ದಟ್ಟಣೆ, ಬಂಡಿಯನ್ನು ಸುಲಭವಾಗಿ ಹಿಡಿತದಲ್ಲಿಟ್ಟುಕೊಳ್ಳುವ ವಿಷಯಗಳಲ್ಲಿ ಬೆಸುಗೆಯ ಕಾರುಗಳು ಮಹತ್ತರ ಪಾತ್ರ ವಹಿಸಲಿವೆ. ಹೆಚ್ಚುತ್ತಿರುವ ಜನಸಂಖ್ಯೆಗೆ ತಕ್ಕಂತೆ ಹೆಚ್ಚಿನ ಬಂಡಿಗಳ ಓಡಾಟವನ್ನು ಸುಲಭ ಸರಳಗೊಳಿಸಿ, ಸಾರಿಗೆ ಏರ್ಪಾಟಿನಲ್ಲಿ ಸೂಕ್ತ ಬದಲಾವಣೆ ತರುವಲ್ಲಿ ಬೆಸುಗೆಯ ಕಾರುಗಳು ನೆರವಾಗುವುದು ಖಚಿತ.

ಇಂದು ಮಾರುಕಟ್ಟೆಯಲ್ಲಿರುವ ಬಹುತೇಕ ಕಾರುಗಳು ಒಳ್ಳೆಯ ಗುಣಮಟ್ಟದ ತಿಳಿನಲಿ ಏರ್ಪಾಟು(Infotainment System), ಅಂಡ್ರ್ಯಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಏರ್ಪಾಟಿನಿಂದ ಸರಳವಾಗಿ ಜೋಡಣೆಗೊಳ್ಳುತ್ತವೆ. ಈ ಏರ್ಪಾಟುಗಳಿಗೆ ಹೆಚ್ಚಿನ ನಿಖರ ಮಾಹಿತಿ ಒದಗಿಸಿ ಕಾರು ಓಡಿಸುಗರಿಗೆ ದಾರಿತೋರಲಿದೆ ಬೆಸುಗೆಯ ಕಾರುಗಳು. ಒಬ್ಬ ವ್ಯಕ್ತಿ ಕಾರಿನಲ್ಲಿ ಮಾರುಕಟ್ಟೆಗೆ ಹೋಗಿದ್ದಾಗ,, ಅವಸರದಲ್ಲಿ ಕಾರು ಪಾರ್ಕ್ ಮಾಡಿ, ಕಾರಿಗೆ ಬೀಗ ಹಾಕದೇ ದೂರ ಬಂದಾಗ, ಕಾರಿಗೆ ಬೀಗ ಹಾಕದೇ ಇರುವುದು ನೆನಪಾಗುತ್ತದೆ. ಆದರೆ,ಆ ವ್ಯಕ್ತಿಗೆ ನೆನಪಾಗುವ ಮೊದಲೇ ಆತನ ಮೊಬೈಲ್ ತಕ್ಷಣ ಎಚ್ಚರಿಕೆ ಸಂದೇಶ ನೀಡುತ್ತದೆ. ಕನೆಕ್ಟೆಡ್ ಕಾರ್ ತಂತ್ರಜ್ಞಾನದ ಮೂಲಕ ಬೆಸೆದುಕೊಂಡ ಕಾರು ಮತ್ತು ಮೊಬೈಲ್, ಇಂತ ಹೊತ್ತಲ್ಲಿ ಸಹಾಯಕ್ಕೆ ಬರುತ್ತದೆ. ಟ್ಯಾಕ್ಸಿ ಕಂಪನಿಯ ಮಾಲೀಕನೊಬ್ಬ ತನ್ನ ಮೊಬೈಲ್ ಮೂಲಕವೇ ತನ್ನ ಹತ್ತಾರು ಟ್ಯಾಕ್ಸಿಗಳು ಸರಿಯಾದ ದಾರಿಯಲ್ಲಿ ಸಾಗುತ್ತಿವೆಯೇ ಇಲ್ಲವೇ ಎಂಬುದನ್ನು ಕ್ಷಣಾರ್ಧದಲ್ಲಿ ಕಂಡುಕೊಳ್ಳಬಹುದು. ತನ್ನ ಟ್ಯಾಕ್ಸಿ ಓಡಿಸುಗರಿಗೆ ಸಾಗುವ ದಾರಿಯ ಸಂಚಾರ ದಟ್ಟಣೆಯ ಮಾಹಿತಿ ಒದಗಿಸಿ, ಅದಕ್ಕೆ ತಕ್ಕಂತೆ ಮಾರ್ಗ ಬದಲಿಸಿ ಸುಲಭವಾಗಿ ಊರು ಮುಟ್ಟುವ ಸಲಹೆ ನೀಡಬಹುದು. ಕಾರಿನಲ್ಲಿ ದೂರದ ಊರಿಗೆ ಸಾಗುತ್ತಿದ್ದೀರಿ, ಮನೆಯಲ್ಲಿ ಗೀಸರ್ ಆಫ್ ಮಾಡುವುದು ಆಗ ನೆನಪಾಗುತ್ತದೆ, ಚಿಂತೆ ಬೇಡ ನಿಮ್ಮ ಕಾರು ಮನೆಯಲ್ಲಿನ ಗೀಸರ್ ಆಫ್ ಮಾಡುತ್ತದೆ. ನೀವು ಮತ್ತು ಕುಟುಂಬ, ವಾರದ ಕೊನೆಯಲ್ಲಿ ಮಾಲ್‍ವೊಂದಕ್ಕೆ ಹೋಗಬೇಕೆಂದುಕೊಂಡಿರುತ್ತೀರಿ, ಆ ಮಾಲ್‍ನಲ್ಲಿ ಪಾರ್ಕಿಂಗ್‌ಗೆ ಎಷ್ಟು ಜಾಗಗಳು ಖಾಲಿ ಇವೆ ಎಂಬುದನ್ನು ನಿಮ್ಮ ಕಾರು ನಿಮಗೆ ತಿಳಿಸುತ್ತದೆ. ಮಾಲ್‌ನ ಸುತ್ತಮುತ್ತಲಿನ ಪರಿಸರದ ನೇರ ಮಾಹಿತಿ ಕನೆಕ್ಟೆಡ್ ಕಾರ್ ಮೂಲಕ ನಿಮ್ಮ ಕಾರು ಪಡೆದುಕೊಂಡು ನಿಮಗೆ ಮಾಹಿತಿ ನೀಡುತ್ತದೆ. ಆಗ ನೀವು ಪಾರ್ಕಿಂಗ್‍ಗಾಗಿ ಅಲೆದಾಡುವ-ಸಮಯ ಕಳೆಯುವ ಅಗತ್ಯ ಇರುವುದಿಲ್ಲ. ಇನ್ನೊಂದು ಪ್ರಮುಖ ಅನುಕೂಲವೆಂದರೆ ಜಿಯೋ ಫೆನ್ಸಿಂಗ್(Geo-Fencing). ಅಂದರೆ ನಿರ್ದಿಷ್ಟ ದಾರಿಯಲ್ಲಿ, ನಿರ್ದಿಷ್ಟ ವಾತಾವರಣದಲ್ಲಿ ಮಾತ್ರ ಗಾಡಿ ಓಡಿಸುವಂತೆ ಮಾಡುವುದು. ಉದಾಹರಣೆಗೆ ನೀವು ನಿಮ್ಮ ಮನೆಯಲ್ಲಿ  ಮಗ/ಮಗಳಿಗೆ ಕಾಲೇಜಿಗೆ ಹೋಗಿಬರಲು ಕಾರನ್ನು ಕೊಡಿಸುತ್ತೀರಿ ಎಂದುಕೊಳ್ಳಿ. ದಿನವೂ ಮಕ್ಕಳು ಕಾಲೇಜಿಗೆ ಅದೇ ದಾರಿಯಲ್ಲಿ ಸಾಗಿ ಮರಳಿ ಬರುವಂತೆ ಮಾಡಬಹುದು, ಬಂಡಿ ಅದೇ ವಾತಾವರಣದಲ್ಲಿ ಸಾಗಿ ಬರುವ ಮಾಹಿತಿಯನ್ನು ಒಮ್ಮೆ ಜಿಯೋ ಫೆನ್ಸಿಂಗ್ ಮೂಲಕ ಫೀಡ್ ಮಾಡಿ, ಕನೆಕ್ಟೆಡ್ ಕಾರು ಮೂಲಕ ನಿಮ್ಮ ಮೊಬೈಲ್ ಮತ್ತು ಕಾರು ಬೆಸೆದುಕೊಂಡಿದ್ದರೆ, ಈ ದೈನಂದಿನ ಕಾಲೇಜಿಗೆ ಹೋಗಿ ಬರುವ ದಾರಿಯಲ್ಲಿ ವ್ಯತ್ಯಾಸವಾದರೆ ಕೂಡಲೇ ನಿಮ್ಮ ಮೊಬೈಲ್‌ಗೆ ಎಚ್ಚರಿಕೆ ಸಂದೇಶ ಬರುತ್ತದೆ. ಹೀಗೆ ಕಾರು ಓಡಾಡುವ ಚಟುವಟಿಕೆಯ ಮೇಲೆ ಸುಲಭವಾಗಿ ಕಣ್ಣಿಡಬಹುದು. ಕಾರೊಂದು ದಾರಿಯಲ್ಲಿ ಸಾಗುವಾಗ ಅಪಘಾತಕ್ಕೀಡಾದರೆ, ಕೂಡಲೇ ಹತ್ತಿರದ ಸಂಚಾರಿ ಪೋಲೀಸ್‍ರಿಗೂ ಇಲ್ಲ ಅಪಘಾತವಾದ ವ್ಯಕ್ತಿಗಳ ಕುಟುಂಬಕ್ಕೆ ಕೂಡಲೇ ಕಾರು ಮಾಹಿತಿ ಒದಗಿಸಿ ಜೀವ ಉಳಿಸುವ ಕೆಲಸ ಮಾಡುತ್ತದೆ. ಮಳೆಗಾಲದಲ್ಲಿ ಗಾಡಿಯೊಂದು ಘಾಟಿ ಪ್ರದೇಶದಲ್ಲಿ ಸಾಗುತ್ತಿದೆ, ಮುಂದೆ ಹತ್ತಾರು ಮೈಲಿ ದೂರದಲ್ಲಿ ಗುಡ್ಡ ಕುಸಿತ, ಭೂಕುಸಿತವಾದರೆ, ಕೂಡಲೇ ಅದರ ಮಾಹಿತಿ ಗಾಡಿಗೆ ತಲುಪುತ್ತದೆ. ಆಗ ಓಡಿಸುಗ ಮುಂದೆ ಸಾಗುವ ಅಪಾಯವನ್ನು ಅರಿತು ಗಾಡಿಯ ಸಾಗುವ ದಾರಿಯನ್ನು ಬದಲಿಸಿಯೋ ಇಲ್ಲವೇ ಭದ್ರವಾದ ಜಾಗವನ್ನು ಸೇರಿಕೊಳ್ಳಬಹುದು. ದೈನಂದಿನ ವ್ಯವಹಾರದ ಮೇಲೆ ಕಣ್ಣಿಡಲು, ಕಳ್ಳ-ಕಾಕರ ಚಟುವಟಿಕೆಗಳ ಮಾಹಿತಿ ಪಡೆದು ಪೋಲೀಸ್ ವ್ಯವಸ್ಥೆಗೆ ನೆರವಾಗಲು ಬೆಸುಗೆಯ ಗಾಡಿಗಳ ಅಗತ್ಯವಿರಲಿದೆ.

ಅನಾನುಕೂಲಗಳ ವಿಷಯ ಬಂದಾಗ, ಕಾರುಗಳ ಹ್ಯಾಕಿಂಗ್ ಮುಖ್ಯವಾದ ತೊಡಕಾಗುವ ಸಾಧ್ಯತೆ ಇದೆ. ಮಿಂಬಲೆ ಮೂಲಕ ಬೆಸೆದುಕೊಂಡಿರುವ ಗಾಡಿಗಳನ್ನು ವೆಬ್ಸೈಟ್ ಹ್ಯಾಕ್ ಮಾಡುವಂತೆ ದೂರದಲೆಲ್ಲೋ ಇರುವ ವ್ಯಕ್ತಿಯೊಬ್ಬ ಹ್ಯಾಕ್ ಮಾಡಿ ತನ್ನ ವಶಕ್ಕೆ ತೆಗೆದುಕೊಂಡರೆ ಆಗುವ ಅನಾಹುತಗಳನ್ನು ಯೋಚಿಸಿ. ಇನ್ನೂ ದಿಗಿಲುಕೋರರು ಕಾರುಗಳನ್ನು ತಮ್ಮ ವಶಕ್ಕೆ ಪಡೆದು, ಯಾವುದೋ ದೇಶದ ಮೂಲೆಯಿಂದ ಕಾರನ್ನು ಅದರ ಮಾಲೀಕನ ಮೊಬೈಲ್ ಹೀಗೆ ಎಲ್ಲವನ್ನೂ ತನ್ನ ಹಿಡಿತಕ್ಕೆ ಪಡೆದು ಕೊಲೆ ಸುಲಿಗೆ ಮಾಡುವ ಅಪಾಯ ತಪ್ಪಿದ್ದಲ್ಲ. ಮಾದಕ ವಸ್ತು ಸಾಗಾಟಗಾರರು ಈ ತಂತ್ರಜ್ಞಾನದ ಮೂಲಕ ಕಳ್ಳದಾರಿಗಳ ಮೂಲಕ ಯಾರಿಗೂ ತಿಳಿಯದಂತೆ ಮಾದಕ ವಸ್ತುಗಳನ್ನು ಸಾಗಾಟ ಮಾಡಿ ಸಮಾಜವನ್ನು ಹಾಳುಗೆಡುವಬಹುದು. 

ಮಾಹಿತಿ ಗುಟ್ಟನ್ನು ಕಾಪಾಡಿಕೊಳ್ಳುವುದು ಕಷ್ಟ. ಬೆಸುಗೆಯ ಗಾಡಿಗಳನ್ನು ಕ್ಲೌಡ್, ಆಪ್ ಮೂಲಕ ಸಾಕಷ್ಟು ಮಾಹಿತಿಯನ್ನು ಕೂಡಿಟ್ಟುಕೊಳ್ಳುವುದರಿಂದ ಕಾರಿನೊಡೆಯರ ವೈಯುಕ್ತಿಕ ಮಾಹಿತಿ ಕಾರು ತಯಾರಕರಿಗೆ ಸುಲಭವಾಗಿ ತಲುಪುತ್ತದೆ. ಇಂತ ಮಾಹಿತಿಗೆ ಪ್ರವೇಶವಕಾಶ(Access) ಹೊಂದಿರುವವರು ತಮಗಿಷ್ಟದಂತೆ ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. 

ಬೆಸುಗೆಯ ಗಾಡಿಗಳ ಸಾಧಕ ಬಾಧಕಗಳ ಚರ್ಚೆಗಳು ದಿನೇದಿನೇ ಜೋರಾಗಿ ನಡೆಯುತ್ತಲೇ ಇವೆ. ಬೆಸುಗೆಯ ಗಾಡಿಗಳ ಅನಾನುಕೂಲಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸಗಳು ಭರದಲ್ಲಿ ಸಾಗಿವೆ. ಇದರ ಮಧ್ಯೆಯೇ ಸಾಕಷ್ಟು ಬೆಸುಗೆಯ ಗಾಡಿಗಳು ಭಾರತ ಸೇರಿದಂತೆ ಹಲವು ದೇಶಗಳಲ್ಲಿ ದಿನವೂ ಓಡಾಡುತ್ತಿವೆ.

ಮಾಹಿತಿ ಸೆಲೆ: connected cars
ತಿಟ್ಟ ಸೆಲೆ: connected cars pic

ಅಣು ಕೂಡಿಕೆಯಿಂದ ಮಿಂಚು – ಸವಾಲುಗಳೇನು?

ರಘುನಂದನ್.

ಹಿಂದಿನ ಬರಹದಲ್ಲಿ ಅಣುಕೂಡಿಕೆಯಿಂದ ಮಿಂಚನ್ನು ಪಡೆಯುವ ಬಗೆಯನ್ನು ತಿಳಿದೆವು. ಅಣು ಕೂಡಿಕೆಯ ಹೊಲಬಿನಿಂದ ಸುತ್ತಮುತ್ತಲಿನ ಪರಿಸರಕ್ಕೆ ಯಾವುದೇ ತೊಂದರೆಯಿಲ್ಲ(environmental friendly). ಬೂದಿ(ash), ಇಂಗಾಲ (carbon), ಹೊಗೆ(smoke), ಕೊಳಕು ನೀರು(polluted water) ಮತ್ತು ಕೆಟ್ಟಗಾಳಿ ಇಂತಹ ಯಾವುದೇ ಹಾನಿಯಿಲ್ಲ, ಆದರೂ ಅಣು ಕೂಡಿಕೆಯಿಂದ ನಾವು ಮಿಂಚನ್ನು ಯಾಕೆ ಬಳಸುತ್ತಿಲ್ಲ ಎಂಬುದನ್ನು ಈ ಬರಹದಲ್ಲಿ ತಿಳಿಯೋಣ.

ಅಣು ಕೂಡಿಕೆಯನ್ನು ಯಾಕೆ ನಾವು ಯಾಕೆ ಬಳಸುತ್ತಿಲ್ಲ?

1. ಅಣು ಕೂಡಿಕೆಯಲ್ಲಿ ಡ್ಯೂಟಿರಿಯಮ್-ಟ್ರೈಶಿಯಮ್ ಅಣುಗಳು ಒಂದಕ್ಕೊಂದು ಕೂಡಬೇಕಾದರೆ ತುಂಬಾ ಹೆಚ್ಚು ಕಾವಳತೆ (Temperature) ಬೇಕಾಗುತ್ತದೆ, ಅಂದರೆ 100 ಮಿಲಿಯ ಡಿಗ್ರಿಗಳಷ್ಟು (100 million degree centigrade). ಹೆಚ್ಚು ಹರವು ಮತ್ತು ಕಾಲದಲ್ಲಿ ಅಷ್ಟು ಕಾವಳತೆ ಹೇಗೆ ಉಂಟು ಮಾಡಬಹುದೆಂಬುದು ಇನ್ನೂ ಗೊತ್ತಿಲ್ಲ, ನೇಸರನಲ್ಲಿ ಈ ಮಟ್ಟದ ಕಾವಳತೆ ಕಾಣಬಹುದು. ಅಲ್ಲಿ ಕೂಡ ಇದೇ ಅಣು ಕೂಡಿಕೆ ನಡೆಯುತ್ತಿದ್ದು ನಮಗೆ ದಿನಾಲು ಬೆಳಕು ಮತ್ತು ಹುರುಪು ನೇಸರನಿಂದ ದೊರಕುತ್ತಿರುವುದು ಇದೇ ಮಾದರಿಯಲ್ಲಿ. ಅದರಿಂದ ಗಿಡ ಮರಗಳು ಬದುಕುತ್ತಿವೆ. ನಾವು ಬೆಳೆಗಳನ್ನು ಬೆಳೆಯುತ್ತಿದ್ದೇವೆ. ಅದೇ ಮನುಷ್ಯರಿಗೆ ಊಟ ದೊರಕಿಸುತ್ತಿದೆ. ಈ ಭೂಮಿಯ ಮೇಲೆ ಜೀವಿಗಳು ಇರುವುದೇ ಅಣು ಕೂಡಿಕೆಯಿಂದ ಬರುವ ಬೆಳಕು ಮತ್ತು ಹುರುಪಿನಿಂದ ಎಂದು ಹೇಳಬಹುದು.

2. ಅಷ್ಟು ಕಾವಳತೆಯನ್ನು(Temperature) ಉಂಟುಮಾಡಿದೆವು ಎಂದು ಇಟ್ಟುಕೊಳ್ಳೋಣ. ಆಗ ಅದನ್ನು ಹಿಡಿದಿಟ್ಟುಕೊಳ್ಳಬಹುದಾದ ವಸ್ತು ಯಾವುದಾದರು ಇದೆಯೇ? ಏಕೆಂದರೆ ಬರಿಯ ಮೂರು ಸಾವಿರ ಡಿಗ್ರಿಗಳಿಗಷ್ಟೇ ಎಲ್ಲಾ ಗೊತ್ತಿರುವ ವಸ್ತುಗಳು ಕರಗಿ ಹೋಗುತ್ತವೆ. ಇದಕ್ಕೆ ಬಗೆಹರಿಕೆ ಎಂದರೆ ಡ್ಯೂಟಿರಿಯಮ್-ಟ್ರೈಶಿಯಮ್ ಬೆರಕೆಯನ್ನು ಸೆಳೆ-ಸುರುಳಿಗಳ(magnetic coils) ಮೂಲಕ ಎರಕದ ಇರವಿನಲ್ಲಿ ಇರಿಸಬಹುದೇ ಎಂದು ವಿಜ್ಞಾನಿಗಳು ಯೋಚಿಸುತ್ತಿದ್ದಾರೆ. ಹಾಗಾದಾಗ ಹೆಚ್ಚು ಕಾದ ಭಾಗಗಳು ಸುತ್ತಲಿನ ವಸ್ತುವಿಗೆ ತಾಕದಂತೆ ನೋಡಿಕೊಳ್ಳಬಹುದು. ಈ ಬಗೆಯ ಏರ್ಪಾಟಿಗೆ ಟೋಕಾಮಾಕ್ (Tokamak) ಎನ್ನುತ್ತಾರೆ. ಟೋಕಾಮಾಕಿನಲ್ಲಿ ಬಿಡಿ ಎಲೆಕ್ಟ್ರಾನ್ಗಳು ಮತ್ತು ಅಣುಗಳು ಪ್ಲಾಸ್ಮಾ/ಎರಕದ ಇರವಿನಲ್ಲಿ(molten state/plasma) ಇರುವುದರಿಂದ ಒಂದಕ್ಕೊಂದು ಡಿಕ್ಕಿ ಹೊಡೆದಾಗ ಹೀಲಿಯಮ್ ರೂಪುಗೊಳ್ಳುತ್ತದೆ. ಅದರಿಂದ ಉಂಟಾಗುವ ಬಿಸಿ ಕಾವಿನಿಂದ ಮಿಂಚು / ವಿದ್ಯುತ್ ಅನ್ನು ಹುಟ್ಟುಹಾಕಬಹುದು.

ಅಮೇರಿಕಾದ ದೊಡ್ಡ ಕಂಪೆನಿಗಳಲ್ಲಿ ಒಂದಾದ ಲಾಕ್‌ಹೀಡ್ ಮಾರ್ಟಿನ್ (Lockheed Martin) ಅಣು ಕೂಡಿಕೆಯ ಕುರಿತಾಗಿ ಸುದ್ದಿಯೊಂದನ್ನು ಬಿಡುಗಡೆ ಮಾಡಿದೆ. ಲಾಕ್‌ಹೀಡ್ ಮಾರ್ಟಿನ್ ನ ತಾಮಸ್ ಮೆಗ್ವೈರ್ ಕಳೆದ ತಿಂಗಳಿನ ಸುದ್ದಿಕೂಟದಲ್ಲಿ ಹೀಗೆ ಹೇಳಿದ್ದಾರೆ –

“ಹೊಸ ಅಣುವಿನ ಶಕೆಯೊಂದನ್ನು ಮೊದಲು ಮಾಡೋಣ. ಪ್ರಪಂಚಕ್ಕೆ ಹಸನಾದ ಹುರುಪನ್ನು ಕೊಡುವುದು ನಮ್ಮ ಮುಂದಿನ ಗುರಿಯಾಗಿದೆ”.

ಈ ಚಳಕದರಿಮೆಯ ಮೂಲಕ ಮಿಂಚನ್ನು ತಯಾರಿಸಲಾಗುತ್ತದೆ ಎಂದು ಲಾಕ್‌ಹೀಡ್ ಮಾರ್ಟಿನ್ ಹೇಳಿಕೊಂಡಿದೆ. ಇದರಿಂದಾಗಿ ಅರಿಮೆಯ ಕೂಟಗಳಲ್ಲಿ (scientific circles) ಈ ಸುದ್ದಿ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ತಾಮಸ್ ಮೆಗ್ವೈರ್ ಪ್ರಕಾರ ಟೋಕಾಮಾಕ್‌ಗಳ ಒಳಗೆ ಇರುವ ಪ್ಲಾಸ್ಮಾ/ಎರಕದ ಒತ್ತಡ ಹೆಚ್ಚಾದರೆ ಅದರ ಸುತ್ತಲಿನ ವಸ್ತುವಿಗೆ ತೊಂದರೆಯಾಗುತ್ತದೆ. ಅದರ ಬದಲು ಒತ್ತಡವನ್ನು ಕಡಿಮೆ ಮಾಡಿದಲ್ಲಿ ಅಣುಗಳು ಒಂದಕ್ಕೊಂದು ಡಿಕ್ಕಿ ಹೊಡೆಯುವ ಸಲದೆಣಿಕೆ(Frequency) ಕಡಿಮೆಯಾಗುತ್ತದೆ ಮತ್ತು ಟೋಕಾಮಾಕ್ ಗಳನ್ನು ತಯಾರಿಸಿದ ವಸ್ತುವಿನ ಮೇಲೆ ಯಾವುದೇ ತೊಂದರೆಯಾಗುವುದಿಲ್ಲ. ಆದರೆ ಈ ಬಗೆಯಲ್ಲಿ ಮಾಡಿದರೆ, ಹಣಕಾಸಿನ ಲೆಕ್ಕಾಚಾರದಲ್ಲಿ ನೋಡಿದರೆ ಅಷ್ಟು ಗಿಟ್ಟುವ ಏರ್ಪಾಟು (profitable venture) ಎನಿಸುವುದಿಲ್ಲ. ಅದಕ್ಕಾಗಿ ಲಾಕ್‌ಹೀಡ್ ಅವರು ಮೊಗೆಸಿರುವ ಟೋಕಾಮಾಕಿನಲ್ಲಿ ಪ್ಲಾಸ್ಮಾವು ಗೋಡೆಯ ಹತ್ತಿರ ಬರುತ್ತಿದ್ದಂತೆ ಸೆಳೆ-ಸುರುಳಿಗಳ ಹರಹು ಹೆಚ್ಚಾಗುತ್ತಾ ಹೋಗುತ್ತದೆ. ಹಾಗಾಗಿ ಆ ಎಡೆಯಲ್ಲಿ ಒತ್ತಡ ಹೆಚ್ಚಾಗಿರುತ್ತದೆ. ಮತ್ತು ಆ ಭಾಗದಲ್ಲಿ ಹೆಚ್ಚು ಮರುಎಸಕಗಳು ಆಗುತ್ತವೆ,ಹೆಚ್ಚು ಹುರುಪು ದೊರೆಯುತ್ತದೆ.

ತಾಮಸ್ ಮೆಗ್ವೈರ್ ತಂಡವು ತಯಾರಿಸುತ್ತಿರುವ ಟೋಕಾಮಾಕ್‍ಗಳು ಎಷ್ಟು ಚಿಕ್ಕದಾಗಿ ಇರುತ್ತವೆಯೆಂದರೆ ಅದನ್ನು ಒಂದು ಟ್ರಕ್ ಇಲ್ಲವೇ ಲಾರಿಯ ಹಿಂದೆ ಅಳವಡಿಸಬಹುದು, ಹೀಗೆ ಮಾಡುವುದು ಸುಲಭದ ಮಾತಲ್ಲ ಎಂದು ಜಗತ್ತಿನ ವಿಜ್ಞಾನಿಗಳ ಅನಿಸಿಕೆ. ಈ ಹಮ್ಮುಗೆಯ ವಿಷಯವಾಗಿ ಲಾಕ್‌ಹೀಡ್ ಯಾವುದೇ ಗುಟ್ಟುಗಳನ್ನು ಹೊರಹಾಕಿಲ್ಲ. ಈ ಹಮ್ಮುಗೆ ಗೆಲುವು ಕಂಡಲ್ಲಿ ಜಗತ್ತು ಎದುರಿಸುತ್ತಿರುವ ಎಲೆಕ್ಟ್ರಿಸಿಟಿ ತೊಂದರೆ ಕೊನೆಗೊಳ್ಳಬಹುದು. ಇನ್ನೂ ಹಲವು ವರ್ಷ ಕಾದುನೋಡಬೇಕಿದೆ. ಇದರ ಕುರಿತಾಗಿ ಲಾಕ್‌ಹೀಡ್ ಮಾರ್ಟಿನ್ ಬಿಡುಗಡೆ ಮಾಡಿರುವ ಒಂದು ವಿಡಿಯೋ ಇಲ್ಲಿದೆ.

(ಚಿತ್ರ ಸೆಲೆ: chenected.ichewikipediawired.com)

ದುಂಡಾಕಾರದ ರನ್‌ವೇ

ಜಯತೀರ್ಥ ನಾಡಗೌಡ.

ಜಗತ್ತಿನೆಲ್ಲೆಡೆ ಹೆಚ್ಚು ಮಂದಿಯ ಓಡಾಟ, ವಿಮಾನ ಸಾರಿಗೆಯ ಮೇಲೂ ದಟ್ಟಣೆ ಹೆಚ್ಚಿಸಿದೆ. ನಮ್ಮ ರಾಜ್ಯದ ಬೆಂಗಳೂರು, ಮಂಗಳೂರು ಸೇರಿದಂತೆ ಭಾರತದ ಪ್ರಮುಖ ಬಾನೋಡತಾಣಗಳು ಇಂದು ಕಿಕ್ಕಿರಿದಿರುತ್ತವೆ. ದುಬೈ, ಫ್ರಾಂಕ್‌ಪರ್ಟ್, ಪ್ಯಾರಿಸ್, ಲಂಡನ್, ಸಿಂಗಪುರ್, ನ್ಯೂಯಾರ್ಕ್ ಮುಂತಾದ ಬಾನೋಡ ತಾಣಗಳ ಮೂಲಕ ಪ್ರತಿ ವರುಶ ಕೋಟಿಗಟ್ಟಲೆ ಪ್ರವಾಸಿಗರು ಓಡಾಡುತ್ತಾರೆ. ದಿನವೊಂದಕ್ಕೆ ನೂರಾರು ಬಾನೋಡಗಳು ಇಲ್ಲಿಗೆ ಬಂದಿಳಿಯುತ್ತವೆ ಮತ್ತು ಇಲ್ಲಿಂದ ಬೇರೆಡೆಗೆ ಹಾರುತ್ತವೆ. ಹೀಗಾಗಿ ಈ ಬಾನೋಡ ತಾಣಗಳ ಓಡುದಾರಿ(Runway) ಯಾವಾಗಲೂ ಬ್ಯುಸಿ. ಲಂಡನ್ ಬಾನೋಡತಾಣದಲ್ಲಿ ಪ್ರತಿ 45 ಸೆಕೆಂಡ್‌ಗಳಿಗೊಮ್ಮೆ ಬಾನೋಡವೊಂದು ಮುಗಿಲಿನತ್ತ ಹಾರುತ್ತದೆ. ದಿನವೊಂದಕ್ಕೆ ಹಾರುವ ಮತ್ತು ಬಂದಿಳಿಯುವ ಒಟ್ಟು ಬಾನೋಡಗಳು 1400, ಅಂದರೆ ಪ್ರತಿ ವರುಷಕ್ಕೆ 5 ಲಕ್ಷಕ್ಕೂ ಹೆಚ್ಚು ಬಾನೋಡಗಳು. ನಮ್ಮ ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಬಾನೋಡತಾಣದ ಅಂಕಿ ಸಂಖ್ಯೆಗಳತ್ತ ಗಮನ ಹಾಯಿಸಿದರೆ, ಪ್ರತಿ ವರುಶ 2 ಕೋಟಿಗೂ ಹೆಚ್ಚಿನ ಪ್ರಯಾಣಿಕರು ಇಲ್ಲಿ ಓಡಾಟ ನಡೆಸುತ್ತಾರಂತೆ. ಅಂದರೆ ದಿನವೊಂದಕ್ಕೆ ಸುಮಾರು 55 ಸಾವಿರ ಪ್ರಯಾಣಿಕರು. ಒಂದೇ ದಿನದಲ್ಲಿ ಸುಮಾರು 500 ಬಾನೋಡಗಳು ಕೆಂಪೇಗೌಡ ಬಾನೋಡತಾಣದಲ್ಲಿ ಓಡಾಟ ನಡೆಸುತ್ತವೆ.

 ಈ ಓಡುದಾರಿಗಳು ಬ್ಯುಸಿಯಾಗಿರುವುದರಿಂದ ಮುಂಬರುವ ದಿನಗಳಲ್ಲಿ ಹೆಚ್ಚಿನ ಬಾನೋಡ ತಾಣಗಳನ್ನು ಕಟ್ಟುವ ಅಗತ್ಯವಿದೆ. ಹೊಸ ಬಾನೋಡ ತಾಣಗಳನ್ನು ಕಟ್ಟಲು ಸಾವಿರಾರು ಎಕರೆಗಳಷ್ಟು ಜಾಗಬೇಕು. ಬಾನೋಡತಾಣಗಳ ಈ ಸಮಸ್ಯೆಯ ಬಗ್ಗೆ ಆಳವಾದ ಅರಕೆ ನಡೆಸಿರುವ ನೆದರ್‌ಲ್ಯಾಂಡ್ಸ್ ಏರ್‌ಪೋರ್ಟ್ಸ್ ಸೆಂಟರ್‌ನ(NLR) ಮುಖ್ಯ ಸಂಶೋಧನಾ ವಿಜ್ಞಾನಿ ಹೆಂಕ್ ಹೆಸ್ಸಿಲಿಂಕ್(Henk Hesselink), ಒಂದು ಹೊಸದಾದ ಯೋಜನೆಯನ್ನು(Concept) ಮುಂದಿಟ್ಟಿದ್ದಿದ್ದಾರೆ. ಅದೇ “ದುಂಡಾಕಾರದ ಓಡುದಾರಿ”  ಇಂಗ್ಲಿಷ್‌ನಲ್ಲಿ ಎಂಡ್‌ಲೆಸ್ ರನ್‍ವೇ ಇಲ್ಲವೇ ಸರ್ಕ್ಯೂಲರ್ ರನ್‍ವೇ (Endless Runway/Circular Runway) ಎಂಬುದು.

ಒಂದು ಬಾನೋಡ ಹಾರುವುದು ಇಲ್ಲವೇ ನೆಲಕ್ಕೆ ಬಂದಿಳಿಯುವುದು ಸುಲಭದ ಕೆಲಸ ಅಲ್ಲ. ಒಂದು ಬಾನೋಡ ನೆಲಕ್ಕಿಳಿಯುತ್ತಿರುವಾಗ ಅದು ಸಾಕಷ್ಟು ಗಾಳಿಯೊತ್ತಡಕ್ಕೆ ಒಳಗಾಗುತ್ತದೆ. ಹೀಗಾಗಿ ಬಾನೋಡವೊಂದು ಗಾಳಿ ಬೀಸುವ ದಿಕ್ಕಿಗೆ ವಿರುದ್ದವಾಗಿ ಕೆಳಗಿಳಿಸುವುದು ಕಷ್ಟ. ಇದನ್ನು ಕ್ರಾಸ್‌ವಿಂಡ್ ಲ್ಯಾಂಡಿಂಗ್ ಎನ್ನುತ್ತಾರೆ. ಹೆಚ್ಚಿನ ಬಾನೋಡಗಳು ಗಾಳಿ ಬೀಸುವ ದಿಕ್ಕಿನಲ್ಲೇ ಇಳಿಯುತ್ತವೆ. ಅದಕ್ಕೆಂದೇ ಬಾನೋಡವೊಂದನ್ನು ಕೆಳಗಿಳಿಸುವಾಗ ನಿಧಾನಕ್ಕೆ ಅದನ್ನು ಗಾಳಿ ಬೀಸುವ ದಿಕ್ಕಿಗೆ ತರುತ್ತ ಇಳಿಸುತ್ತಾರೆ. ಇಂತಹದ್ದಕ್ಕೆಲ್ಲ ಹತ್ತಾರು ಕಿಲೋಮೀಟರ್ ಗಟ್ಟಲೆ ದೊಡ್ಡ ಓಡುದಾರಿ ಕಟ್ಟಿಸಬೇಕು. ಇವುಗಳಿಗೆ ಸಾಕಷ್ಟು ಜಾಗ ಬೇಕಾಗುತದೆ. ಹೆಸ್ಸಿಲಿಂಕ್ ಅವರ ದುಂಡಾಕಾರದ ಓಡುದಾರಿಗೆ ಕೇವಲ 3.5 ಕಿಲೋಮೀಟರ್ ವ್ಯಾಸದ(Diameter) ದುಂಡಷ್ಟೇ(Circle) ಸಾಕಂತೆ. ಈ ದುಂಡಿನ ಸುತ್ತಲೂ ಒಂದೇ ಕಾಲಕ್ಕೆ 3 ಬಾನೋಡಗಳು ಹಾರಬಹುದು ಮತ್ತು 3 ಬಾನೋಡಗಳು ಕೆಳಗಿಳಿಯಬಹುದು. ಹೆಸ್ಸೆಲಿಂಕ್ ಅವರ ದುಂಡಾಕಾರದ ಓಡುದಾರಿಯ ಪ್ರಮುಖ ಅನುಕೂಲಗಳು(Advantages) ಹೀಗಿವೆ: 

ಈಗಿರುವ ಬಾನೋಡತಾಣಗಳಿಗಿಂತ, ದುಂಡನೆಯ ಓಡುದಾರಿಯ ಬಾನೋಡ ತಾಣಗಳು 2/3ರಷ್ಟು ಜಾಗವನ್ನು ಉಳಿತಾಯ ಮಾಡುತ್ತವೆ.ಸಾಮಾನ್ಯವಾಗಿ ಬಾನೋಡ ತಾಣಗಳಲ್ಲಿ ಬಾನೋಡಗಳು ಒಂದೇ ಕಡೆಯಿಂದ ಮೇಲೇರುವುದು ಮತ್ತು ಬಂದಿಳಿಯುವುದರಿಂದ ಒಂದೆಡೆ ದಿಕ್ಕಿನಲ್ಲಿ ಹೆಚ್ಚು ಸದ್ದು ಗದ್ದಲ ಇರುತ್ತದೆ. ಓಡುದಾರಿ ದುಂಡಿನ ಸುತ್ತಲೂ ಬಾನೋಡಗಳು ಏರುವುದು-ಇಳಿಯುವುದು ಮಾಡುವುದರಿಂದ, ಸದ್ದಿನ ಪರಿಣಾಮ ಎಲ್ಲೆಡೆ ಒಂದೇ ಸಮನಾಗಿರುತ್ತದೆ. ಹೀಗಾಗಿ ಬಾನೋಡ ತಾಣಗಳ ಅಕ್ಕ ಪಕ್ಕದ ಮನೆ ಮಾಡಿಕೊಂಡಿರುವವರಿಗೆ ಸದ್ದು ಗದ್ದಲ ಕಡಿಮೆಯಾಗಲಿದೆ.

ಒಂದೇ ಹೊತ್ತಿಗೆ ಹಲವಾರು ಬಾನೋಡಗಳು ಹಾರಲು-ಇಳಿಯಲು ಸಾಧ್ಯವಾಗುವುದರಿಂದ, ಒಂದೇ ಬಾನೋಡತಾಣ ಕಡಿಮೆ ಹೊತ್ತಿನಲ್ಲಿ ಹೆಚ್ಚಿನ ಸಂಖ್ಯೆಯ ಬಾನೋಡಗಳ ಹಾರಾಟಕ್ಕೆ ಅನುವು ಮಾಡಿಕೊಟ್ಟು, ಬಾನೋಡತಾಣಗಳ ಸಿಬ್ಬಂದಿ ಮತ್ತು ಪ್ರಯಾಣಿಕರ ಹೊತ್ತು ಉಳಿತಾಯವಾಗಲಿದೆ.ಈ ದುಂಡಾಕಾರದ ಓಡುದಾರಿಗಳ ಬಳಕೆಯಿಂದ, ಈಗಿನ ನೇರವಾಗಿರುವ ಓಡುದಾರಿಗಳಿಗೆ ತಗಲುವ ಸಿಬ್ಬಂದಿಯಲ್ಲಿ ಮುಕ್ಕಾಲು ಭಾಗ ಕಡಿತಗೊಳ್ಳಬಹುದೆಂದು ಹೆಸ್ಸಿಲಿಂಕ್ ಹೇಳಿದ್ದಾರೆ. ಬಾನೋಡತಾಣಗಳ ಅಳವು(Capacity) ಹೆಚ್ಚಲಿದೆ. ಬಾನೋಡಗಳು ಗಾಳಿಯ ಒತ್ತಡಕ್ಕೆ ತಕ್ಕಂತೆ ಇಳಿಯಬೇಕೆಂಬ ತೊಂದರೆಯೂ ಇರುವುದಿಲ್ಲ.

ಹೆಸ್ಸಿಲಿಂಕ್ ಮತ್ತವರ ತಂಡ, ಈ ಯೋಜನೆಗಾಗಿ ಗಣಕಯಂತ್ರಗಳ ಮೂಲಕ ಅಣುಕು(Simulations) ಮಾಡಿನೋಡಿದ್ದಾರೆ. “ಈ ಯೋಜನೆ ಸಾಕಾರಗೊಳ್ಳಲು ಹೆಚ್ಚಿನ ಹೊತ್ತು ತಗುಲುತ್ತದೆ. ದುಂಡಗಿನ ಓಡುದಾರಿ ಇನ್ನೂ ಈಗ ತಾನೆ ಹುಟ್ಟಿದ ಮಗುವಿನ ಹಂತದಲ್ಲಿದೆ. ಅಣುಕುಗಳ ಮೂಲಕ ಕೆಲವು ಮಾದರಿಗಳನ್ನು ತಯಾರಿಸಿ, ಡ್ರ‍ೋನ್‌ಗಳನ್ನು ಬಳಸಿ ಪರೀಕ್ಷೆಗಳು ನಡೆಸಬೇಕಾಗಿದೆ. ನಂತರ ಮಾದರಿ ಬಾನೋಡ ತಾಣ ಕಟ್ಟಿಸಿ ಅಲ್ಲಿ ಎಲ್ಲವನ್ನು ನೈಜ ಪರೀಕ್ಷೆ ನಡೆಸುವ ಕೆಲಸವಾಗಬೇಕು. ಇದೆಲ್ಲ ಕೂಡಲೇ ಆಗುವಂತ ಕೆಲಸವಲ್ಲ, ಏನಿಲ್ಲವೆಂದರೂ ಹತ್ತಾರು ವರುಶಗಳ ಬಳಿಕವೇ ಇಂತ ಒಂದು ಬಾನೋಡ ತಾಣವನ್ನು ನಾವು ನೋಡಬಹುದು” ಎನ್ನುತ್ತಾರೆ ಹೆಸ್ಸಿಲಿಂಕ್. ಪ್ಯಾರಿಸ್‌ನ ಸಿ.ಡಿ.ಜಿ.(Charles de Gaulle) ಬಾನೋಡ ತಾಣದಲ್ಲಿ ಹೆಚ್ಚಿನ ಪ್ರಯಾಣಿಕರು, ಬಾನೋಡಗಳು ತುಂಬಿ ಗಿಜಿಗಿಡುವ ದಿನವನ್ನೇ ನಮ್ಮ ಅಣುಕುಗಳಿಗೆ ಬಳಸಿಕೊಂಡಿದ್ದೇವೆ. ಒಳ್ಳೆಯ ಫಲಿತಾಂಶಗಳು(Results) ಕಂಡುಬಂದಿವೆ ಎಂದು ಹಿಗ್ಗಿನಿಂದ ಹೇಳಿಕೊಂಡಿದ್ದಾರೆ ಹೆಸ್ಸಿಲಿಂಕ್.

ಈ ದುಂಡಾಕಾರದ ಓಡುದಾರಿಯ ಬಗ್ಗೆ ಸಾಕಶ್ಟು ಪ್ರಶ್ನೆಗಳು ಎದ್ದಿವೆ. ಇದೆಲ್ಲದಕ್ಕೂ ತಕ್ಕ ಉತ್ತರಗಳನ್ನು ಹೆಸ್ಸಿಲಿಂಕ್ ಮತ್ತವರ ತಂಡದವರು ಕಂಡುಕೊಂಡಿದ್ದಾರೆ. ಕ್ರಾಸ್‌ವಿಂಡ್ ಲ್ಯಾಂಡಿಗ್ ಮಾಡುವಾಗ ಉಂಟಾಗುವ ತೊಂದರೆಗಳ ಬಗ್ಗೆಯೂ ಈ ತಂಡ ಪರಿಹಾರ ಕಂಡುಕೊಂಡಿದೆ. [ಕ್ರಾಸ್‌ವಿಂಡ್ ಲ್ಯಾಂಡಿಗ್ ಅಂದರೆ ಓಡುದಾರಿಗೆ ಅಡ್ಡವಾಗಿ (Perpendicular) ಗಾಳಿ ಬೀಸುತ್ತಿರುತ್ತದೆ, ಆಗ ಬಾನೋಡ ಓಲಾಟಕ್ಕೆ(Yaw), ಉರುಳಾಟಕ್ಕೆ (Rolling) ಒಳಪಡುವ ಸಾಧ್ಯತೆ ಹೆಚ್ಚು. ಇದು ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತದೆ]. ನೆದರ್‌ಲ್ಯಾಂಡ್ಸ್ ಬಾನೋಡ ಸಂಶೋಧನಾಲಯದ ಈ ಕೆಲಸಕ್ಕೆ ಜರ್ಮನಿ, ಫ್ರಾನ್ಸ್, ಪೋಲ್ಯಾಂಡ್ ಮತ್ತು ಸ್ಪೇನ್ ದೇಶಗಳ ವಿವಿಧ ಬಾನೋಡ ಸಂಶೋಧನಾಲಯಗಳು ಕೈಜೋಡಿಸಿವೆ. ಇಂತ ಓಡುದಾರಿಯುಳ್ಳ ಬಾನೋಡ ತಾಣ ಕಟ್ಟಿಸಲು , ಈಗಿರುವ ಬಾನೋಡ ತಾಣಗಳಿಗಿಂತ ಅರ್ಧಪಟ್ಟು ಹೆಚ್ಚು ಹಣ ಹೂಡಬೇಕಾಗಬಹುದಂತೆ. ಆದರೆ ಇದರಿಂದ ಸಾಕಷ್ಟು ಜಾಗ/ಭೂಮಿ ಉಳಿತಾಯವಾಗಲಿದೆ ಮತ್ತು ಮೇಲೆ ತಿಳಿಸಿದ ಅನುಕೂಲಗಳನ್ನು ಪಡೆಯಬಹುದಾಗಿದೆ. ಈ ದುಂಡಾಕಾರದ ಓಡುದಾರಿ ಸಾಕಾರಗೊಳ್ಳುವುದನ್ನು ನಾವಿನ್ನೂ ಕಾಯಲೇಬೇಕು.

(ಬಾನೋಡಗಳ ಹಾರಾಟದ ಕುರಿತಾಗಿ ಮೇಲ್ಕಂಡ ಅಂಕಿ-ಅಂಶಗಳು ಕೋವಿಡ್ ಮುಂಚಿನ ಅಂಕಿ-ಅಂಶಗಳಾಗಿವೆ. ಜಗತ್ತು ಕೋವಿಡ್ ಮುಂಚಿನ ರೀತಿಗೆ ಮರಳುತ್ತಿದೆ. ಆದ್ದರಿಂದ ಅಂಕಿ-ಅಂಶಗಳಲ್ಲಿ ಚಿಕ್ಕಪುಟ್ಟ ಬದಲಾವಣೆ ಕಾಣಬಹುದು).

 

ಅಣು ಕೂಡಿಕೆಯಿಂದ ಮಿಂಚು

ರಘುನಂದನ್.

ನಮ್ಮ ಮನೆಗಳನ್ನು ಬೆಳಗುವ ಕರೆಂಟ್ ಎಲ್ಲಿಂದ ಬರುತ್ತದೆ ಮತ್ತು ಹೇಗೆ ಹುಟ್ಟುತ್ತದೆ ಎಂಬ ಕುತೂಹಲ ಸಾಮಾನ್ಯವಾಗಿ ಎಲ್ಲರಿಗೂ ಇರುತ್ತದೆ. ರಾಯಚೂರು, ಶರಾವತಿ, ಕೈಗಾ ಮತ್ತು ಶಿವನಸಮುದ್ರಗಳಲ್ಲಿ ಪವರ್ ಪ್ಲಾಂಟ್‌ಗಳಿವೆ (ಶಕ್ತಿ ಸ್ಥಾವರಗಳು) ಎಂದು ಕಂಡು ಕೇಳಿರುತ್ತೇವೆ. ಪವರ್ ಪ್ಲಾಂಟ್‍ಗಳಲ್ಲಿ ಅರಿಮೆ ಮತ್ತು ಚಳಕಗಳೆರಡೂ ಬಳಸಿ ಮಿಂಚನ್ನು (electric current) ಹುಟ್ಟಿಸಿ ಮನೆಮನೆಗಳಿಗೆ, ಊರುಗಳಿಗೆ ತಲುಪಿಸುತ್ತಾರೆ. 1902ರಲ್ಲಿ ಏಶಿಯಾದಲ್ಲಿಯೇ ಮೊಟ್ಟಮೊದಲಿಗೆ ಶಿವನಸಮುದ್ರದ ಅಬ್ಬಿಗಳಿಂದ(waterfalls) ಮಿಂಚನ್ನು (electric current) ತಯಾರಿಸಿ ಬೆಂಗಳೂರಿಗೆ ತಲುಪಿಸಲಾಗಿತ್ತು.

ರಾಯಚೂರಿನಲ್ಲಿ ಇದ್ದಿಲಿನಿಂದ ಮಿಂಚನ್ನು ತಯಾರಿಸಲಾಗುತ್ತದೆ. ಅಂದರೆ ಇದ್ದಿಲನ್ನು ಚೆನ್ನಾಗಿ ಕಾಯಿಸಿ ಅದರ ಕಾವಿನಿಂದ ನೀರನ್ನು ದೊಡ್ಡ ಹಂಡೆಗಳಲ್ಲಿ(boiler) ಕುದಿಸಲಾಗುತ್ತದೆ. ನೀರು ಕುದ್ದ ಬಳಿಕ ಅದರಿಂದ ಬರುವ ಆವಿಯ ಒತ್ತಡವನ್ನು ಹೆಚ್ಚಿಸಿ ತಿರುಗಾಲಿಗಳ(turbine) ಮೂಲಕ ಹರಿದುಹೋಗಲು ಬಿಡಲಾಗುತ್ತದೆ. ಒತ್ತಡದ ಆವಿಯಲ್ಲಿ ಅಡಗಿರುವ ಹುರುಪು ಆ ತಿರುಗಾಲಿಗಳನ್ನು ಕಡುಹೆಚ್ಚು ಬಿರುಸಿನಲ್ಲಿ ತಿರುಗಿಸುತ್ತದೆ. ಈ ತಿರುಗಾಲಿಗಳು ಬಳಿಕ ಮಿಂಚುಟ್ಟುಕಗಳನ್ನು(electric generators) ತಿರುಗಿಸುತ್ತವೆ. ಅಲ್ಲಿಂದ ತಂತಿಗಳ ಮೂಲಕ ಮನೆಮನೆಗಳಿಗೆ ಮಿಂಚನ್ನು ತಲುಪಿಸಲಾಗುತ್ತದೆ.

ಶರಾವತಿಯಲ್ಲಿ ನೀರಿನಿಂದ ಮಿಂಚನ್ನು ಉಂಟುಮಾಡಲಾಗುತ್ತದೆ. ಅಂದರೆ ಹೊಳೆಯಿಂದ ಬರುವ ನೀರನ್ನು ಅಣೆಕಟ್ಟುಗಳ ನೆರವಿನಿಂದ ತಡೆದುಹಿಡಿಯಲಾಗುತ್ತದೆ. ಅಣೆಕಟ್ಟುಗಳಲ್ಲಿ ಒಂದು ಎತ್ತರದ ಮಟ್ಟದಲ್ಲಿ ನೀರನ್ನು ಹಿಡಿದಿಡಲಾಗುತ್ತದೆ. ಕೆಳಗಿನ ಮಟ್ಟದಲ್ಲಿ ನೀರು ತಿರುಗಾಲಿಗಳನ್ನು ಅಳವಡಿಸಿರುತ್ತಾರೆ. ಅಣೆಕಟ್ಟುಗಳ ಬಾಗಿಲು ತೆರೆದಾಗ ದುಮ್ಮಿಕ್ಕಿ ಬಿರುಸಿನಿಂದ ಬರುವ ನೀರನ್ನು ತಿರುಗಾಲಿಗಳ ಸುತ್ತಕ್ಕೆ (periphery) ತಾಕುವಂತೆ ಹರಿಸಲಾಗುತ್ತದೆ. ತಿರುಗಾಲಿಗಳು ಹೆಚ್ಚು ಬಿರುಸಿನಲ್ಲಿ ತಿರುಗುತ್ತವೆ . ಈ ತಿರುಗಾಲಿಗಳನ್ನು(turbines) ಮಿಂಚುಟ್ಟುಕಗಳಿಗೆ (electric generators) ತಳುಕಿಸಿದಾಗ ಅವು ಕೂಡ ತಿರುಗುತ್ತವೆ ಮತ್ತು ಮಿಂಚು ತಯಾರಾಗುತ್ತದೆ. ಅದನ್ನು ತಂತಿಗಳ ಮೂಲಕ ಮನೆಗಳಿಗೆ ತಲುಪಿಸುತ್ತಾರೆ.

ನಮ್ಮ ನಾಡಿನ ಕೈಗಾದಲ್ಲಿರುವ ಅಣುಶಕ್ತಿ ಸ್ಥಾವರದ ಬಗ್ಗೆ ಸುದ್ದಿಹಾಳೆಗಳಲ್ಲಿ ಓದಿರುತ್ತೇವೆ. ಅಣುಶಕ್ತಿ ಕುರಿತಾಗಿ ಜಗತ್ತಿನಲ್ಲಿ ಮಾತುಕತೆಗಳು, ವಾದವಿವಾದಗಳು ನಡೆಯುತ್ತಲೇ ಇರುತ್ತವೆ. ಅಣುಗಳ ಮೂಲಕ ಹೇಗೆ ಮಿಂಚಿನ ಶಕ್ತಿಯನ್ನು(electric energy) ತಯಾರಿಸಲಾಗುತ್ತದೆ ಎಂಬುದನ್ನು ನೋಡೋಣ.

ಅಣುಶಕ್ತಿ ತಯಾರಿಸುವಲ್ಲಿ ಎರಡು ಬಗೆಯಿದೆ:

1. ಅಣು ಒಡೆತ (nuclear fission)
2. ಅಣು ಕೂಡಿಕೆ (nuclear fusion)

ಈಗ ಜಗತ್ತಿನಲ್ಲಿರುವ ಎಲ್ಲಾ ಅಣುಶಕ್ತಿ ತಯಾರಿಕೆಯು ಅಣು ಒಡೆತದ ಮೂಲಕವೇ ಆಗುತ್ತಿದೆ. ಅಣು ಒಡೆತದ ಹೊಲಬಿನಲ್ಲಿ(process) ಹೆಚ್ಚು ತೂಕವಿರುವ ಬೇರಡಕವಾದ (ಬೇರು+ಅಡಕ – element) ಯುರೇನಿಯಮ್ ಅನ್ನು ನ್ಯೂಟ್ರಾನ್‌ಗಳ ಮೂಲಕ ಸಿಡಿಸಲಾಗುತ್ತದೆ. ಆಗ ಅದು ಎರಡು ಕಡಿಮೆ ತೂಕವಿರುವ ಬೇರಡಕಗಳಾಗಿ ಮಾರ್ಪಾಟಾಗುತ್ತದೆ. ಅದರ ಜೊತೆ ಇನ್ನೊ ಹೆಚ್ಚು ನ್ಯೂಟ್ರಾನ್‌ಗಳನ್ನು, ಗಾಮಾ ಕದಿರುಗಳನ್ನು(gamma rays) ಹುಟ್ಟಿಸುತ್ತದೆ ಮತ್ತು ಮಿಕ್ಕಿರುವ ತೂಕ ಹುರುಪಾಗಿ(mass to energy) ಮಾರ್ಪಾಟಾಗುತ್ತದೆ. ಅಣು ಒಡೆತದಿಂದ ಬರುವ ಹುರುಪು ತುಂಬಾ ಕಾವನ್ನು(heat energy) ಹೊರಸೂಸುತ್ತದೆ. ಈ ಕಾವನ್ನು ನೀರನ್ನು ಕುದಿಸಲಿಕ್ಕೆ ಬಳಸಲಾಗುತ್ತದೆ. ನೀರು ಕುದ್ದ ಬಳಿಕ ಬರುವ ಆವಿಯನ್ನು(steam) ಮುಂಚೆ ತಿಳಿಸಿದಂತೆ ಮಿಂಚಿನ ಶಕ್ತಿಯನ್ನು (electric energy) ತಯಾರಿಸುವುದಕ್ಕೆ ಬಳಸುತ್ತಾರೆ. ತೋರಿಯಮ್ (Th) ಮತ್ತು ಪ್ಲುಟೋನಿಯಮನ್ನು (Pu) ಕೂಡ ಅಣುಶಕ್ತಿ ಹುಟ್ಟಿಸುವುದಕ್ಕೆ ಬಳಸಲಾಗುತ್ತದೆ.

ಈಗ ಮೂರು ಬೇರೆ ಬೇರೆ ಬಗೆಗಳಲ್ಲಿ ಮಿಂಚನ್ನು ತಯಾರಿಸುವದನ್ನು ಮೇಲೆ ಕಂಡಿದ್ದೇವೆ. ಈ ಮೂರು ಬಗೆಗಳಿಗೆ ಅದರದ್ದೇ ಕೊರತೆಗಳಿವೆ.
1. ಮೊದಲಿಗೆ ರಾಯಚೂರಿನಲ್ಲಿ ಇದ್ದಿಲಿನ ಮೂಲಕ ತಯಾರಾಗುವ ಮಿಂಚಿನ ಶಕ್ತಿಯಲ್ಲಿ ಯಾವಾಗಲೂ ಇದ್ದಿಲಿನ ಪೂರೈಕೆಯನ್ನು ನೆಚ್ಚಿರುತ್ತದೆ. ಹಾಗಾಗಿ ಇದ್ದಿಲು ಇಲ್ಲ ಅಂದರೆ ಮಿಂಚನ್ನು ತಯಾರಿಸಲಾಗುವುದಿಲ್ಲ. ಮತ್ತೆ ಇದ್ದಿಲು ನೆಲದಲ್ಲಿ ಸಿಗುವ ಪಳೆಯುಳಿಕೆಯ ಉರವಲಾದ್ದರಿಂದ(fossil fuel) ಹೆಚ್ಚು ದಿನಗಳ ಕಾಲ ಅದನ್ನು ನೆಚ್ಚಿ ಕೂರಲಾಗುವುದಿಲ್ಲ. ಅದಕ್ಕಿಂತ ಹೆಚ್ಚಾಗಿ ಇದ್ದಿಲಿನಿಂದ ಬರುವ ಕಸ ಸುತ್ತಮುತ್ತಲ ಪರಿಸರವನ್ನು ಹಾಳುಗೆಡುವುದರಿಂದ ಈ ಬಗೆಯ ತಯಾರಿಕೆ ಅಂತಹ ಹಸನಾದದುದಲ್ಲ(clean energy) ಎಂಬುದು ಸಾಮಾನ್ಯ ಅನಿಸಿಕೆ.

2. ಶರಾವತಿ, ಶಿವನಸಮುದ್ರದಲ್ಲಿ ತಯಾರಾಗುವ ಮಿಂಚಿನ ಶಕ್ತಿ ಯಾವಾಗಲು ಹರಿಯುವ ಹೊಳೆಯನ್ನು ನೆಚ್ಚಿರುತ್ತದೆ. ಅಂದರೆ ಒಳ್ಳೆ ಮಳೆ ಆದರೆ ಅಣೆಕಟ್ಟುಗಳಿಗೆ ನೀರು ತುಂಬುತ್ತದೆ. ಇಲ್ಲವಾದರೆ ತಿರುಗಾಲಿಗಳಿಗೆ ನೀರು ಒದಗಿಸಲಾಗುವುದಿಲ್ಲ.

3. ಕೈಗಾದಲ್ಲಿ ತಯಾರುಗುವ ಮಿನ್ಕೆ ಅಣು ಒಡೆತದ (nuclear fission) ಮೂಲಕ ತಯಾರಾಗುತ್ತದೆ. ಹೆಚ್ಚು ಅಣುತೂಕವುಳ್ಳ ಯುರೇನಿಯಮ್, ಪ್ಲುಟೋನಿಯಮ್ ಇಲ್ಲವೇ ತೋರಿಯಮನ್ನು ನ್ಯೂಟ್ರಾನ್‌ಗಳ ಮೂಲಕ ಸಿಡಿಸಿ ಎರಡು ಕಡಿಮೆ ಅಣುತೂಕವುಳ್ಳ ಬೇರಡಕಗಳಾಗಿ ಮಾರ್ಪಾಡಾಗುತ್ತದೆ. ಈ ಹೊಲಬಿನಲ್ಲಿ ಆಲ್ಪಾ, ಗಾಮಾ ಕದಿರುಗಳು ಕೂಡ ಹುಟ್ಟಿಕೊಳ್ಳುತ್ತವೆ. ಹೊಸದಾಗಿ ಹುಟ್ಟಿದ ಎರಡು ಬೇರಡಕಗಳೂ ರೇಡಿಯೋಆಕ್ಟಿವ್ ಆಗಿರುತ್ತದೆ. ಅಂದರೆ ಅವು ಕೂಡ ಕದಿರುಗಳನ್ನು ಹೊರಸೂಸುತ್ತಿರುತ್ತವೆ. ಮಿಕ್ಕುಳಿದ ಯುರೇನಿಯಮ್, ಪ್ಲುಟೋನಿಯಮ್ ಗಳೂ ಕೂಡ ಹಾನಿಕಾರಕವೇ. ಒಟ್ಟಾರೆ ಇವೆಲ್ಲವನ್ನು ಅಣುಕಸ(nuclear waste) ಎಂದು ಗುರುತಿಸಲಾಗುತ್ತದೆ. ಇವು ಮಾನವನ ಹದುಳಕ್ಕೆ (human health) ಕುತ್ತನ್ನು(hazardous) ಉಂಟುಮಾಡುವಂತಹ ವಸ್ತುಗಳು.

ಅಣುಕಸವನ್ನು ಹೇಗೆ ಅಡಗಿಸಬೇಕು ಎಂಬುದು ಸಾಕಷ್ಟು ಮಾತುಕತೆಗೆ ಒಳಗಾಗಿರುವ ವಿಷಯವಾಗಿದೆ. ಈ ಮೇಲಿನ ಮೂರು ಕಾರಣಗಳಿಂದಾಗಿ ಈಗ ಸದ್ಯದಲ್ಲಿ ಅಣು ಕೂಡಿಕೆಯ(Nuclear Fusion) ಮೂಲಕ ಮಿಂಚಿನ ಶಕ್ತಿಯನ್ನು ತಯಾರಿಸುವುದು ಹೆಚ್ಚೆಚ್ಚು ಗಮನ ಸೆಳೆಯುತ್ತಿದೆ.

ಅಣು ಕೂಡಿಕೆಯ ಮೂಲಕ ಹೇಗೆ ಮಿಂಚನ್ನು ತಯಾರಿಸಬಹುದು?

ಅಣು ಒಡೆತದ ಹೊಲಬಿನಲ್ಲಿ (process) ಒಂದು ಹೆಚ್ಚು ತೂಕವುಳ್ಳ ಅಣುವನ್ನು ಎರಡು ಕಡಿಮೆ ತೂಕವುಳ್ಳ ಅಣುಗಳಾಗಿ ಒಡೆಯಲಾಗುತ್ತದೆ. ಆದರೆ ಅಣು ಕೂಡಿಕೆಯಲ್ಲಿ ಎರಡು ಚಿಕ್ಕ ಅಣುಗಳು ಕೂಡುತ್ತವೆ. ಹೊಸದಾಗಿ ರೂಪಗೊಂಡ ಅಣುವಿಗೂ ಮೊದಲು ಕೂಡಿಕೆಯಾದ ಎರಡು ಚಿಕ್ಕ ಅಣುಗಳಿಗೂ ಇರುವ ತೂಕದ ವ್ಯತ್ಯಾಸವು (mass deficit) ಶಕ್ತಿಯಾಗಿ ಮಾರ್ಪಾಡಾಗುತ್ತದೆ.

ಈಗ ಹೈಡ್ರೋಜನನ್ನು ಉದಾಹರಣೆಯಾಗಿ ತೆಗೆದುಕೊಂಡು ಅಣು ಕೂಡಿಕೆಯ ಮೂಲಕ ಹೇಗೆ ಶಕ್ತಿಯನ್ನು ಹುಟ್ಟಿಸಬಹುದು ಎಂದು ನೋಡೋಣ. ಹೈಡ್ರೋಜನ್ ಒಂದು ಪ್ರೋಟಾನ್ ಇರುವ ಅಣು. ಆದರೆ ಒಂದಕ್ಕಿಂತ ಹೆಚ್ಚು ನ್ಯೂಟ್ರಾನ್‌ಗಳು ಇರಬಲ್ಲವು. ಒಂದು ನ್ಯೂಟ್ರಾನ್ ಇದ್ದರೆ ಡ್ಯೂಟಿರಿಯಮ್ ಮತ್ತು ಎರಡು ನ್ಯೂಟ್ರಾನ್‌ಗಳಿದ್ದರೆ ಟ್ರೈಶಿಯಮ್ ಎನ್ನುತ್ತಾರೆ. ಇವರೆಡನ್ನು ಕೂಡಿದಾಗ ಏನಾಗುತ್ತದೆ ನೋಡೋಣ. ಕೆಳಗಿನ ಚಿತ್ರದಲ್ಲಿ ಕಾಣುವಂತೆ ಡ್ಯೂಟಿರಿಯಮ್ ಮತ್ತು ಟ್ರೈಶಿಯನ್ ಕೂಡಿದಾಗ ಹೊಸ ಅಣುವಾದ ಹೀಲಿಯಮ್ ರೂಪಗೊಳ್ಳುತ್ತದೆ. ಇದರೊಟ್ಟಿಗೆ ಒಂದು ನ್ಯೂಟ್ರಾನ್ ಕೂಡ ಹೊರಬರುತ್ತದೆ ಮತ್ತು ಹೆಚ್ಚು ಶಕ್ತಿ ಹುಟ್ಟುತ್ತದೆ.

ಈ ಕೂಡಿಕೆಯಿಂದ ಎಷ್ಟು ಶಕ್ತಿ ಹುಟ್ಟುತ್ತದೆ ಎಂದು ಲೆಕ್ಕ ಹಾಕಬಹುದು. ಮೇಲೆ ತೋರಿದ ರಿಯಾಕ್ಷನ್ ಅನ್ನು ಸರಿದೂಗಿಸೋಣ (balancing the reaction).

2D1 + 3T1 -> 4He + 1n0

mD = (2-0.000994) mH

mT = (3-0.006284)mH

mHe = (4-0.027404)mH

mn = (1+0.001378)mH

dm = 0.0187mH

mH = 1.6727. 10-27 kg

E = mc2 = 0.0187mHc2 = 2.8184. 10-12 J

E = 2.8184. 10-12 / 1.6022.10-19 eV = 17.56MeV

ಒಂದು ಕೆಜಿ ಡ್ಯೂಟಿರಿಯಮ್ ಟ್ರೈಶಿಯಮ್ ಬೆರಕೆಗೆ ಒಟ್ಟು ರಿಯಾಕ್ಷನ್ ಗಳ ಎಣಿಕೆ(total number of reactions);

N = (0.5)/2.5 X 1.67 X 10-27 = 1.2 X 1026

E = N 2.8184. 10-12 J = 3.4 X 1014 J

24 ಗಂಟೆಗಳಲ್ಲಿ 4 GW ಶಕ್ತಿ.

ಬರಿ ಒಂದು ಕೆಜಿ ಡ್ಯೂಟಿರಿಯಮ್-ಟ್ರೈಶಿಯಮ್ ಬೆರೆತದಿಂದ ಈ ಮಟ್ಟದಲ್ಲಿ ಶಕ್ತಿಯನ್ನು ಹುಟ್ಟಿಸಬಹುದು. ಅದರ ಜೊತೆ ಅಣು ಕೂಡಿಕೆಯ ಹೊಲಬಿನಿಂದ ಸುತ್ತಮುತ್ತಲಿನ ಪರಿಸರಕ್ಕೆ ಯಾವುದೇ ತೊಂದರೆಯಿಲ್ಲ(environmental friendly). ಬೂದಿ(ash), ಕರ‍್ಪು(carbon), ಹೊಗೆ(smoke), ಕೊಳಕು ನೀರು(polluted water) ಮತ್ತು ಕೆಟ್ಟಗಾಳಿ ಇಂತಹ ಯಾವುದೇ ಹಾನಿಯಿಲ್ಲ.

ಹಾಗಾದರೆ ಅಣು ಕೂಡಿಕೆಯನ್ನು ಯಾಕೆ ನಾವು ಯಾಕೆ ಬಳಸುತ್ತಿಲ್ಲ ಎಂಬುದನ್ನು ಮುಂದಿನ ಬರಹದಲ್ಲಿ ನೋಡೋಣ.

(ಚಿತ್ರ ಸೆಲೆ: wikipediakompulsa.com)

ಅಡಾಸ್- ಅಡ್ವಾನ್ಸ್ ಡ್ರೈವರ್ ಅಸ್ಸಿಸ್ಟ್ ಸಿಸ್ಟಮ್(Advance Driver Assist System)

ಜಯತೀರ್ಥ ನಾಡಗೌಡ.

ಅಡಾಸ್ – ಕಳೆದ 10-12 ವರುಶಗಳಿಂದ ಆಟೋಮೊಬೈಲ್ ಕೈಗಾರಿಕೆಯಲ್ಲಿ ಈ ಹೆಸರು ಕೇಳದವರು ಅತಿ ವಿರಳ. ಚಕ್ರದಿಂದ ಎತ್ತಿನಗಾಡಿಯಾಗಿ, ಮುಂದೆ ಜುಮ್ಮನೆ ಸಾಗುವ ಕಾರು-ಬಸ್ಸು ಮುಂತಾದವುಗಳನ್ನು ನಿರ್ಮಿಸುತ್ತಲೇ ಹೋದ ಮನುಕುಲ, ಸಾರಿಗೆ ಏರ್ಪಾಟಿನಲ್ಲಿ ಸಾಕಷ್ಟು ಬದಲಾವಣೆ ಮಾಡುತ್ತಲೇ ಸಾಗಿದೆ. ತನ್ನಿಂದ ತಾನೇ ಓಡುವ ಕಾರು ಬಳಸುವ ಯುಗದ ಹೊಸ್ತಿಲು ತಲುಪಿದ್ದೇವೆ. ಇದೆಲ್ಲವೂ ಅಡಾಸ್ ತಂತ್ರಜ್ಞಾನದ ಫಲ.

ನಮ್ಮಲ್ಲಿ ಹಲವು ಇಂಜಿನೀಯರ್, ತಂತ್ರಜ್ಞಾನಿಗಳಿಗೆ ಈ ಅಡಾಸ್ ಪದ ಹೊಸದೇನಲ್ಲ. ಇನ್ನೂ ಕೆಲವು ಕಾರು ಬಳಕೆದಾರರು ಈ ತಂತ್ರಜ್ಞಾನ ಬಳಸಿದ್ದರೂ ಅವರಿಗೆ ಇದರ ಬಗ್ಗೆ ಅರಿವಿರುವುದಿಲ್ಲ. ಆಟೋಮೊಬೈಲ್ ಉದ್ಯಮದ ಚಿತ್ರಣವನ್ನೇ ಬದಲು ಮಾಡಲಿರುವ ಈ ಹೊಸ ಚಳಕದ ಬಗ್ಗೆ ಅರಿಯೋಣ ಬನ್ನಿ. 

ಅಡಾಸ್- ಅಡ್ವಾನ್ಸ್ ಡ್ರೈವರ್ ಅಸ್ಸಿಸ್ಟ್ ಸಿಸ್ಟಮ್(Advance Driver Assist System) ಇದರ ಕಿರುರೂಪವೇ ಅಡಾಸ್(ADAS). ಸರಳವಾಗಿ ಕನ್ನಡದಲ್ಲಿ ಹೇಳಬೇಕೆಂದರೆ, ಗಾಡಿ ಓಡಿಸುಗನಿಗೆ ನೆರವಾಗಬಲ್ಲ ಒಂದು ಚೂಟಿ ಏರ್ಪಾಟು ಇದು.  ಇಂದು ಜಗತ್ತಿನಾದ್ಯಂತ ಓಡಾಡುವ ಬಹುತೇಕ ಎಲ್ಲ ಕಾರು,ಬಸ್ಸು,ಲಾರಿಗಳಲ್ಲಿ ಅಳವಡಿಸಲ್ಪಟ್ಟ ಹಲವಾರು ಏರ್ಪಾಟುಗಳಲ್ಲಿ ಗಣಕಗಳ ಬಳಕೆ ಮಾಡಲಾಗುತ್ತದೆ. ಈ ಎಲ್ಲ ಗಣಕಗಳಿಗೆ ಮಾಹಿತಿ ನೀಡಿ ಕಾರನ್ನು ಸರಾಗವಾಗಿ ಕೊಂಡೊಯ್ಯಲು ಹಲವು ಅರಿವುಕಗಳನ್ನು ಕಾರುಗಳಲ್ಲಿ ಜೋಡಿಸಲಾಗಿರುತ್ತದೆ. ಇದು ಕೂಡ ಅಡಾಸ್ ವ್ಯವಸ್ಥೆಯ ಒಂದು ಭಾಗವೇ.

ಎಷ್ಟೇ ಜಾಗರೂಕರಾಗಿದ್ದರೂ ಮನುಷ್ಯನು ಮಾಡುವ ತಪ್ಪುಗಳಿಂದ ಸಾರಿಗೆಯ ಅಪಘಾತ, ಅವಘಡಗಳು ಕಡಿಮೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಕೆಲಸಕ್ಕಿಳಿದ ಆಟೋಮೊಬೈಲ್ ಉದ್ಯಮದವರು, ಅಡಾಸ್ ವಿಶೇಷತೆಗಳನ್ನು ಗಾಡಿಗಳಲ್ಲಿ ಬಳಸಿ ಸಾರಿಗೆ ಅಪಘಾತಗಳನ್ನು ಕಡಿಮೆ ಮಾಡುವತ್ತ ಸಾಗಿದ್ದಾರೆ. ಇದೇ ಅಡಾಸ್ ತಂತ್ರಜ್ಞಾನ ಮುನ್ನೆಲೆಗೆ ಬರಲು ಕಾರಣ. ಅಪಘಾತ, ಗಾಡಿಗಳ ಡಿಕ್ಕಿಯಾಗುವಂತ ತುರ್ತು ಸಂದರ್ಭಗಳನ್ನು ಕೂಡಲೇ ಅರಿತು ಓಡಿಸುಗನನ್ನು ಎಚ್ಚರಿಸಿ ಅಪಘಾತಗಳನ್ನು ತಡೆಯುವುದೇ ಅಡಾಸ್ ಚಳಕದ(Technology) ಮುಖ್ಯ ಕೆಲಸ. ಈ ಚಳಕವೇ ನಮ್ಮ ಕಾರುಗಳಲ್ಲಿ ಸುರಕ್ಷತೆಯ ಏರ್ಪಾಟುಗಳನ್ನು ಹೆಚ್ಚಿಸುತ್ತಿದೆ. ಇಂದು ಹಲವಾರು ಗಾಡಿಗಳಲ್ಲಿ ಓಡಿಸುಗ ಕೂರುಮಣೆಯ ಪಟ್ಟಿ (ಸೀಟ್ ಬೆಲ್ಟ್) ಬಳಸದೇ ಹೋದರೆ ಇಂಜೀನ್ ಶುರುವಾಗಲ್ಲ, ಗಾಡಿಯ ಗಾಲಿಗಳಲ್ಲಿ ಗಾಳಿಯು ಕಡಿಮೆಯಾದರೆ ತಕ್ಷಣ ಓಡಿಸುಗನ ಮುಂದಿರುವ ತೋರುಮಣೆಯಲ್ಲಿ ಅಲಾರ್ಮ್ ಬರುತ್ತದೆ, ಗಾಡಿಯ ವೇಗ 80-100 ಕಿ.ಮೀ.ಪ್ರತಿಗಂಟೆ ದಾಟುತ್ತಿದ್ದಂತೆ ಗಾಡಿಯ ಅಲಾರ್ಮ್ ಎಚ್ಚರಿಕೆಯ ಗಂಟೆ ಬಾರಿಸತೊಡಗುತ್ತದೆ. ಇವೆಲ್ಲವೂ ಅಪಘಾತ, ಗುದ್ದಾಟ ತಡೆಗಟ್ಟಬಲ್ಲ ಅಡಾಸ್‌ನ ಒಂದು ಭಾಗ.ಈ ಹೊಸ ಅಡಾಸ್ ಅನ್ನು ಬಲು ಮುಖ್ಯವಾಗಿ ಈ ಕೆಳಕಂಡ ಭದ್ರತೆಯ ಏರ್ಪಾಟುಗಳಲ್ಲಿ ಬಳಸಲಾಗುತ್ತಿದೆ.

1. ಬೀದಿಗಳಲ್ಲಿ ಸಾಗುವಾಗ ಜನ/ಜಾನುವಾರುಗಳ ಗುರುತಿಸುವಿಕೆ

2. ಹೆದ್ದಾರಿಗಳಲ್ಲಿ ಸಾಗುವಾಗ ಲೇನ್ ಬದಲಾವಣೆ ಗುರುತಿಸುವಿಕೆ ಮತ್ತು ಎಚ್ಚರಿಸುವಿಕೆ

3. ಸಂಚಾರ ದಟ್ಟಣೆಯ ಸಿಗ್ನಲ್ ಗುರುತಿಸುವಿಕೆ

4. ತುರ್ತು ಸಮಯಗಳಲ್ಲಿ ಗಾಡಿ ತಡೆಯುವಿಕೆ

5. ದಿಡೀರನೆ ಎದುರಾಗಬಲ್ಲ ತಿರುವುಗಳ ಗುರುತಿಸುವಿಕೆ

 ಈ ಎಲ್ಲ ಭದ್ರತೆಯ ವಿಷಯಗಳಲ್ಲಿ ಅಡಾಸ್ ಅಳವಡಿಸಿಕೊಳ್ಳಲು ಸಾಕಷ್ಟು ಅರಿವುಕ(Sensor), ರಡಾರ್ ಮತ್ತು ಕ್ಯಾಮೆರಾಗಳ ಬಳಕೆ ಮಾಡಲಾಗುತ್ತದೆ. ಗಾಡಿಯ ಸುತ್ತಮುತ್ತಲಿನ ಆಗುಹೋಗುಗಳು, ಬಗೆ ಬಗೆಯ ಸದ್ದು ಸಪ್ಪಳಗಳನ್ನು ಈ ಅರಿವುಕಗಳು, ರಡಾರ್ ಗಳು ಯಾವ ತಪ್ಪಿಲ್ಲದಂತೆ ಅರಿತು ಗಾಡಿಯ ಗಣಕದ ಮೂಲಕ ಓಡಿಸುಗನಿಗೆ ಸಂದೇಶ ಕಳಿಸುವಲ್ಲಿ ತೊಡಗಿರುತ್ತವೆ. ಗಾಡಿಯ ಸುತ್ತಲೂ 360 ಡಿಗ್ರಿ ಕ್ಯಾಮೆರಾಗಳು ಚಕಚಕನೆ ಪಟಗಳನ್ನು ಸೆರೆಹಿಡಿದು ಗಾಡಿಯ ಗಣಕಕ್ಕೆ ಮಾಹಿತಿ ನೀಡುತ್ತವೆ, ಇದರಿಂದ ಮುಂದೆ ಆಗಬಹುದಾದ ಅನಾಹುತಗಳ ಬಗ್ಗೆ ಮುಂಚೆಯೇ ಎಚ್ಚರಿಸಿ ಅವುಗಳನ್ನು ತಪ್ಪಿಸುವಲ್ಲಿ ನೆರವಾಗುತ್ತವೆ.

ಅಡಾಸ್‌ನ ವಿವಿಧ ವಿಶೇಷತೆಗಳ ತೋರುವ ಚಿತ್ರ

ಹೀಗೆ ಅಡಾಸ್ ನ ಆಳ ಅರಿತ ಆಟೋಮೊಬೈಲ್ ಕೈಗಾರಿಕೆ, ಅಡಾಸ್ ನ ವಿವಿಧ ಹಂತಗಳಾಗಿ ವಿಂಗಡಿಸಿದೆ. ಒಟ್ಟು 6 ಹಂತಗಳ ಅಡಾಸ್ ನೋಡಬಹುದು. ಇವುಗಳು ಹೀಗಿವೆ.

ಸೊನ್ನೆ ಹಂತ: ಇದರಲ್ಲಿ ಎಲ್ಲವೂ ಮನುಷ್ಯನ ಹಿಡಿತ ಅಂದರೆ ಗಾಡಿಯ ಬಹುಪಾಲು ಏರ್ಪಾಟುಗಳು ಓಡಿಸುಗರ ಹಿಡಿತದಲ್ಲಿರುತ್ತವೆ. ತಂತಾನೇ ಕೆಲಸ ಮಾಡುವ ಗಣಕ, ರಡಾರ್, ಅರಿವುಕಗಳು ಕಡಿಮೆಯೇ. ತಿಗುರಿ(Steering), ತಡೆತ(Brake), ವೇಗ ಏರಿಸುಕ(Accelerator) ಎಲ್ಲವನ್ನೂ ಓಡಿಸುಗನೇ ಮಾಡಬೇಕು. ಆದರೆ ಭದ್ರತೆಯ ಕೆಲವು ವಿಶೇಷತೆಗಳಾದ ಕ್ಯಾಮೆರಾ, ದಿಡೀರ್ ಎದುರಾಗುವ ತಿರುವುಗಳ ಬಗ್ಗೆ ಮುನ್ಸೂಚನೆ ನೀಡುವ ಏರ್ಪಾಟು, ಗಾಡಿಗಳಲ್ಲಿ ಅಳವಡಿಸಬಹುದು.

ಮೊದಲ ಹಂತ: ಚಿಕ್ಕ ಪ್ರಮಾಣದಲ್ಲಿ ಗಾಡಿ ಹಿಡಿತದ ವಿಶೇಷತೆಗಳನ್ನು ನೀಡಲಾಗಿರುತ್ತದೆ. ಮಾರ್ಪಾಟುಗೊಳ್ಳುವ ಸುಯ್ ಅಂಕೆ ಏರ್ಪಾಟು(Adaptive Cruise Control) ಇದಕ್ಕೆ ಒಳ್ಳೆಯ ಉದಾಹರಣೆ. ಹೆದ್ದಾರಿಯಲ್ಲಿ ಚಲಿಸುವಾಗ, ಗಾಡಿಯು ದಾರಿಯ ಸ್ಥಿತಿಗತಿಗೆ ತಕ್ಕಂತೆ  ವೇಗ ಮಾರ್ಪಾಟು ಮಾಡಿಕೊಂಡು ಸಾಗುತ್ತಿರುತ್ತದೆ. ಸಂದರ್ಭಕ್ಕೆ ತಕ್ಕಂತೆ ವೇಗ ಏರಿಸುಕ(Accelerator) ಮತ್ತು ಬೇರ್ಪಡಕಗಳ(Clutch) ಮೇಲಿನ ಕಾಲ್ತೆಗೆದು, ಓಡಿಸುಗ ನೆಮ್ಮದಿಯಿಂದ ಸಾಗಬಹುದು.

ಎರಡನೇ ಹಂತ: ಇದನ್ನು ಅರೆ-ಸ್ವತಂತ್ರದ ಗಾಡಿಯೆನ್ನಬಹುದು. ಇದರಲ್ಲಿ ತಿಗುರಿ ಮತ್ತು ಗಾಡಿಯ ವೇಗ ಏರಿಸುವ ಕೆಲಸಗಳನ್ನು ಗಾಡಿಯೇ ನೋಡಿಕೊಳ್ಳುತ್ತದೆ. ಓಡಿಸುಗ ಕೂಡ ಇದನ್ನು ನಿರ್ವಹಿಸಬಹುದು. ಇನ್ನೂ ಗಾಡಿಯ ತಡೆಯೊಡ್ಡುವಿಕೆ(braking), ಲೇನ್ ಬದಲಾವಣೆ(Lane Change), ನಿಲುಗಡೆ ವ್ಯವಸ್ಥೆಯನ್ನು(Parking) ಓಡಿಸುಗನೇ ನೋಡಿಕೊಳ್ಳಬೇಕು.

ಮೂರನೇ ಹಂತ: ಈ ಹಂತದಲ್ಲಿ ಗಾಡಿಯು ಬಹುತೇಕ ಎಲ್ಲ ಏರ್ಪಾಟುಗಳನ್ನು ಸ್ವತಹ ತಾನೇ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಲ್ಲದಾದರೂ ಕೆಲವು ಸಂದರ್ಭಗಳಲ್ಲಿ ಓಡಿಸುಗನ ನಿಯಂತ್ರಣ ಬೇಕೇಬೇಕು. ಉದಾಹರಣೆಗೆ, ಸಂಚಾರ ದಟ್ಟಣೆಯ ಸಂದರ್ಭಗಳಲ್ಲಿ ಗಾಡಿಯ ಗಣಕ ಏರ್ಪಾಟು ಗಾಡಿಯ ಸಂಪೂರ್ಣ ಹಿಡಿತ ಪಡೆಯಬಲ್ಲುದು. ಓಡಿಸುಗ ಹಾಯಾಗಿ ಪತ್ರಿಕೆ ಓದುತ್ತಲೋ, ಮೊಬೈಲ್ ನೋಡುತ್ತಲೋ ಕಾಲ ಕಳೆಯಬಹುದು. ಕೆಲವೊಮ್ಮೆ ಅವಶ್ಯವೆನಿಸಿದಾಗ ಗಾಡಿಯು ತೋರುಮಣೆಯ(Dashboard) ಮೂಲಕ ಓಡಿಸುಗನಿಗೆ ಸಂದೇಶ ನೀಡಿ, ಹಿಡಿತವನ್ನು ಓಡಿಸುಗ ತೆಗೆದುಕೊಳ್ಳುವಂತೆ ಎಚ್ಚರಿಸುತ್ತದೆ.

ನಾಲ್ಕನೇ ಹಂತದ ಅಡಾಸ್ – ಗಾಡಿಯು ನಿರ್ದಿಷ್ಟ ಸನ್ನಿವೇಶಗಳಲ್ಲಿ ಸಂಪೂರ್ಣ ತನ್ನ ಹಿಡಿತದಲ್ಲೇ ಓಡುವ ಸಾಮರ್ಥ್ಯ ಹೊಂದಿರುತ್ತದೆ. ಗಾಡಿಯು ಒಂದು ನಿರ್ದಿಷ್ಟ ಪರಿಮಿತಿಯಲ್ಲಿ ಎಲ್ಲವನ್ನೂ ಸ್ವತಹ ನಿರ್ವಹಿಸುವ ಸಾಮರ್ಥ್ಯ ಹೊಂದಿರುತ್ತದೆ. ಆದರೆ ಆ ಪರಿಮಿತಿಯನ್ನು ಮೀರಿದ ಸಂದರ್ಭಗಳಲ್ಲಿ ಅದು ಓಡಿಸುಗನೇ ಗಾಡಿ ನಿರ್ವಹಿಸುವಂತೆ ಸಂದೇಶ ನೀಡುತ್ತದೆ. ಉದಾಹರಣೆಗೆ, ಅತಿಯಾದ ಮಂಜುಗಡ್ಡೆಯಿಂದ ಕೂಡಿದ ದಾರಿಗಳಲ್ಲಿ ಗಾಡಿ ಓಡಿಸುಗನ ಹಿಡಿತಕ್ಕೆ ಮರಳಬಹುದು. 

ಐದನೇಯ ಹಂತ: ಕೊನೆಯ ಹಂತದಲ್ಲಿ ಗಾಡಿಯು ಸಂಪೂರ್ಣವಾಗಿ ತನ್ನಿಂದ ತಾನೇ ಓಡಬಲ್ಲದು. ಇದಕ್ಕೆ ಬೇಕಾದ ಎಲ್ಲ ಏರ್ಪಾಟುಗಳನ್ನು ಗಾಡಿಯು ತಾನೇ ಮಾಡುವ ಸಾಮರ್ಥ್ಯ ಹೊಂದಿರುತ್ತದೆ. ಇದರಲ್ಲಿ ಯಾವುದೇ ತೆರನಾಗಿ ಓಡಿಸುಗ ಬೇಕಾಗಿರುವುದಿಲ್ಲ. ಕಾರಿನಲ್ಲಿ ಬರೀ ಸವಾರರು ಕುಳಿತು ಆದೇಶ ನೀಡಿದರೆ ಕಾರು ಸಾಗಿಕೊಂಡು ಹೋಗುತ್ತದೆ.

ಇಲ್ಲಿ ಗಮನಿಸಬೇಕಾದ ಅಂಶಗಳೆಂದರೆ, ಗಾಡಿ ತಯಾರಕರು ತಮಗೆ ಬೇಕಾದ ಹಂತವನ್ನು ಆಯ್ದುಕೊಂಡು ಅದಕ್ಕೆ ತಕ್ಕ ಏರ್ಪಾಟುಗಳನ್ನು ಅರಿವುಕ, ಕ್ಯಾಮೆರಾ, ರಡಾರ್ ಬಳಸಿ ನೀಡಿರುತ್ತಾರೆ. ನೀವು ಒಂದಕ್ಕಿಂತ ಒಂದು ಮೇಲ್ ಹಂತಕ್ಕೆ ಹೋದಂತೆ ಹೆಚ್ಚಿನ ಅರಿವುಕ, ರಡಾರ್ ಮತ್ತು ಅದಕ್ಕೆ ತಕ್ಕುದಾದ ಗಣಕ ತಂತ್ರಾಂಶಗಳನ್ನು ಬಳಸಬೇಕು, ಅದಕ್ಕೆ ಹೆಚ್ಚಿನ ಹಣವೂ ಬೇಕಾಗುತ್ತದೆ. ಅದಕ್ಕಾಗಿ, ಗಾಡಿ ತಯಾರಕರು ನಮ್ಮದು 2ನೇ ಹಂತದ ಅಡಾಸ್ ವಿಶೇಶತೆಗಳುಳ್ಳ ಗಾಡಿಯೆಂದೋ, 3ನೇ ಹಂತದ ಅಡಾಸ್ ಗಾಡಿಯೆಂದೋ ತಯಾರಿಸಿ ಮಾರುಕಟ್ಟೆ ತರುತ್ತಿದ್ದಾರೆ.

ಹಂತ ಹೆಚ್ಚಿದಂತೆ ಗಾಡಿಯ ಹಿಡಿತ ಹೆಚ್ಚಾಗುತ್ತ ಸಾಗುವುದು

ಜಗತ್ತಿನಾದ್ಯಂತ ಇಂದು ಎರಡನೇ ಹಂತದ ಅಡಾಸ್ ವಿಶೇಷತೆಗಳುಳ್ಳ ಹಲವು ಕಾರುಗಳು ಬಿಡುಗಡೆಯಾಗಿವೆ. ಮುಂದಿನ ಹಂತದ ಅಡಾಸ್ ವಿಶೇಷತೆಗಳ ಗಾಡಿಗಳನ್ನು ಟೆಸ್ಲಾ, ಗೂಗಲ್, ಜಿಎಮ್ ಸೇರಿದಂತೆ ದೊಡ್ಡ ಕಂಪನಿಗಳು ಸಿದ್ಧಪಡಿಸಿದ್ದರೂ ಇನ್ನೂ ಮಾರಾಟಕ್ಕೆ ಲಭ್ಯವಾಗಿಲ್ಲ. ಅದರಲ್ಲೂ 4 ಮತ್ತು 5ನೇ ಹಂತದ ಅಡಾಸ್ ವಿಶೇಷತೆಯೆಂದರೆ ಹೆಚ್ಚು ಕಡಿಮೆ ತನ್ನಿಂದ ತಾನೇ ಓಡುವ ಕಾರುಗಳು. ತಂತ್ರಜ್ಞಾನ ಬೆಳೆದರೂ ಅದಕ್ಕೆ ತಕ್ಕ ಕಾನೂನು-ಕಟ್ಟುಪಾಡುಗಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಸಿದ್ಧಗೊಂಡಿಲ್ಲ.

ಅಡಾಸ್ ನಮಗೆ ಹೇಗೆ ಉಪಯೋಗವಾಗಲಿದೆ?

ಅಡಾಸ್ ಅಭಿವ್ರದ್ಧಿ ಪಡಿಸಿದ್ದೇ, ಅಪಘಾತ, ಗುದ್ದುವಿಕೆಯಂತ ಅಪಾಯಗಳನ್ನು ತಡೆದು ಗಾಡಿಯಲ್ಲಿ ಸಾಗುವವರು ಸುರಕ್ಷಿತವಾಗಿ ಪ್ರಯಾಣ ಮಾಡಲೆಂದು. ಇಂದು ಸಾಕಷ್ಟು ಗಾಡಿಗಳಲ್ಲಿ ಹೆಚ್ಚಿನ ಭದ್ರತೆಯ ವಿಶೇಷತೆಗಳು ಕಾಣುತ್ತಿರುವುದು ಅಡಾಸ್ ಬಳಕೆಯಿಂದ. ಅಡಾಸ್ ಬಳಕೆಯಿಂದ ನಮ್ಮ ಕಾರುಗಳು ಹೆಚ್ಚು ಭದ್ರವಾಗಲಿವೆ. ನಮ್ಮ ದೇಶದಲ್ಲಿ ಮಾರಾಟವಾಗುತ್ತಿರುವ ಹಲವು ಕಾರುಗಳಲ್ಲೂ ಇಂದು ಅಡಾಸ್ ವಿಶೇಷತೆಗಳಿಂದ ಕೂಡಿವೆ. ಕಾರು ಓಡಿಸುವಾತ ಅಕಸ್ಮಾತ್ ನಿದ್ದೆಗೆ ಜಾರಿದರೆ ಎಚ್ಚರಿಕೆ, ಗಾಡಿಯ ವೇಗ > 80-100 ಕಿಮೀ/ಗಂಟೆ ಮೀರಿದರೆ ಎಚ್ಚರಿಕೆ, ಗಾಲಿಯ ಒತ್ತಡ ಕಡಿಮೆಯಾದರೆ ಎಚ್ಚರಿಕೆ, ಗಾಡಿ ನಿಲುಗಡೆಗೆ ನೆರವಾಗಲು ಹಿಂಬದಿಯ ಕ್ಯಾಮೆರಾ, ಹೀಗೆ ಕಾಪಿನ ವಿಶೇಷತೆಗಳು ಇಂದಿನ ಹಲವು ಕಾರುಗಳಲ್ಲಿ ಕಂಡು ಬರುತ್ತವೆ. ಕಾರುಗಳು ಆಟೋನೊಮಸ್ ಆದಂತೆ ನಾವು ಟ್ರಾಫಿಕ್ ಅಪಘಾತ ಕಡಿತಗೊಳಿಸಿ, ಸಂಚಾರ ದಟ್ಟಣೆಯ ಸಮಸ್ಯೆಗೆ ಪರಿಹಾರ ಕೊಂಡುಕೊಳ್ಳಬಹುದು.

ಇಂದು ಜಗತ್ತಿನ ಹಲವೆಡೆ ಮಾರಾಟಗೊಳ್ಳುವ ಬಹುತೇಕ ಕಾರುಗಳು 2ನೇ ಹಂತದ ವರೆಗಿನ ಅಡಾಸ್ ವಿಶೇಷತೆಗಳನ್ನು ಪಡೆದು ಬರುತ್ತಿವೆ.ಜಪಾನ್, ಅಮೇರಿಕಾ, ಯುರೋಪ್ ಒಕ್ಕೂಟದ ದೇಶಗಳು, ಕೊರಿಯಾ ಮುಂತಾದ ದೇಶಗಳಲ್ಲಿ 1-2 ನೇ ಹಂತದವರೆಗಿನ ಅಡಾಸ್ ಕಾರುಗಳು ಹೆಚ್ಚುತ್ತಿವೆ. ನಮ್ಮ ದೇಶದಲ್ಲಿ ಅಡಾಸ್ 2ನೇ ಹಂತದ ಹಲವು ಕಾರುಗಳು ಮಾರಾಟಗೊಳ್ಳುತ್ತಿವೆ. ಮಹೀಂದ್ರಾ ಎ‍‍ಕ್ಸ್‌ಯುವಿ 7ಒ‍ಒ, ಹೋಂಡಾ ಸಿಟಿ ಈಹೆಚ್‍ವಿ, ಎಮ್‍ಜಿ ಹೆಕ್ಟರ್, ಗ್ಲಾಸ್ಟರ್,ಝೆಡ್‍ಎಸ್ ಇವಿ, ಹ್ಯುಂಡಾಯ್ ಟುಕ್ಸಾನ್, ಟಾಟಾ ಸಫಾರಿ ಮುಂತಾದವು ಅಡಾಸ್‌ನ ವಿವಿಧ ವಿಶೇಷತೆಗಳನ್ನು ಹೊಂದಿವೆ.

ಅಡಾಸ್ ತಂತ್ರಜ್ಞಾನದ ಸವಾಲುಗಳು:

ತಂತ್ರಜ್ಞಾನ ಇದ್ದಲ್ಲಿ ಸವಾಲುಗಳಿಗೂ ಕೊರತೆ ಇರಲ್ಲ. ಹೊಸ ತಂತ್ರಜ್ಞಾನ ಬಂದಂತೆ ಅದಕ್ಕೆ ಸಂಬಂಧಿಸಿದ ತೊಡಕು ತೊಂದರೆಗಳು ಅದರ ಜೊತೆಯಲ್ಲೇ ಸಾಗಿಬರುತ್ತವೆ. ಅಡಾಸ್ ತಂತ್ರಜ್ಣ್ಯಾನವನ್ನು ಅಪಘಾತ ಅವಘಡ ತಡೆಯಲೆಂದೇ ಅಭಿವೃದ್ಧಿ ಪಡಿಸಿದ್ದರೂ, ಅದೇ ವಿಶೇಷತೆ ನಮಗೆ ತೊಂದರೆ ಉಂಟು ಮಾಡಿದರೆ? ಉದಾಹರಣೆಗೆ 5ನೇ ಹಂತದ ತನ್ನಿಂದ ತಾನೇ ಸಾಗಬಲ್ಲ ಕಾರುಗಳಿಂದ ಅಪಘಾತವಾದರೆ ಯಾರು ಹೊಣೆ? ಯಾಕೆಂದರೆ ಈ ಕಾರುಗಳಲ್ಲಿ ಓಡಿಸುಗನಿರುವುದಿಲ್ಲ, ಬರೀ ಸವಾರರು ಮಾತ್ರ. ಈ ಅಪಘಾತಗಳು ವಿಮೆಯ ವ್ಯಾಪ್ತಿಯ ಒಳಗಡೆ ಬರುತ್ತವೆಯೇ ಇಲ್ಲವೇ ಎಂಬುದು ಮುಂದಿನ ಪ್ರಶ್ನೆ? ಈ ಅಪಘಾತ,ವಿಮೆಯ ವಿಷಯಗಳಿಗೆ ತಕ್ಕ ಕಟ್ಟಳೆ-ಕಟ್ಟಪಾಡುಗಳು ಇನ್ನೂ ಎಳವೆಯಲ್ಲಿವೆ. ಹಲವು ದೇಶಗಳ ಸರ್ಕಾರಗಳು ಕಟ್ಟಳೆ-ಕಟ್ಟಪಾಡುಗಳ ಕುರಿತಾಗಿ ಸಾಕಷ್ಟು ಗೊಂದಲದಲ್ಲಿವೆ. ಇದಕ್ಕೆ ತಕ್ಕ ಪರಿಹಾರ ಕಂಡುಕೊಳ್ಳುವವರೆಗೂ ಇಂತ ಗಾಡಿಗಳನ್ನು ಮಾರಾಟಕ್ಕೆ ಬಿಡಬಾರದೆಂಬ ಕೂಗು ಎದ್ದಿದೆ.

ಎರಡನೇ ಸವಾಲು, ಅಡಾಸ್‌ನ ವಿವಿಧ ವಿಶೇಷತೆಗಳನ್ನು ಬೇರೆ ಬೇರೆ ಹೆಸರುಗಳಿಂದ ಕರೆಯುವುದರಿಂದ ವಿಶೇಷತೆಗಳ ಬಗ್ಗೆ ಹಲವು ಗಾಡಿ ತಯಾರಕರ ನಡುವೆ, ಕೊಳ್ಳುವರ ಮಧ್ಯೆ ಗೊಂದಲಗಳಿವೆ. ಕೆಲವು ವಿಶೇಷತೆಗಳು ಕೆಲವು ಸಂದರ್ಭಗಳಲ್ಲಿ ಮಾತ್ರ ನೆಟ್ಟಗೆ ಕೆಲಸ ಮಾಡಬಲ್ಲವು.ಬೆಟ್ಟ-ಗುಡ್ಡ-ಘಾಟಿ ರಸ್ತೆಗಳಲ್ಲಿ ಗಾಡಿಯಲ್ಲಿರುವ ಅರಿವುಕ, ಕ್ಯಾಮೆರಾ, ರಡಾರ್‌ಗಳಿಗೆ ಸಮಸ್ಯೆ ಎದುರಾಗಲಿದೆ. ಹೆದ್ದಾರಿಗಳಲ್ಲಿ ಲೇನ್ ಅಂದರೆ ಓಣಿಗಳನ್ನು ಸರಿಯಾಗಿ ಬಣ್ಣದಿಂದ ಗುರುತಿಸಿರುತ್ತಾರೆ ಹೀಗಾಗಿ ಗಾಡಿಯ ಕ್ಯಾಮೆರಾಗಳು ಅವುಗಳನ್ನು ಗುರುತಿಸಿ, ಓಣಿ ದಾಟುವಿಕೆಯನ್ನು ಚೆನ್ನಾಗಿ ನಿರ್ವಹಿಸಬಲ್ಲವು. ಅದೇ ಚಿಕ್ಕ ಪುಟ್ಟ ದಾರಿಗಳಲ್ಲಿ ಬಣ್ಣದಿಂದ ಗುರುತಿಸದ ಲೇನ್‍ಗಳಲ್ಲಿ ಓಣಿ ಗುರುತಿಸುವಿಕೆಯಂತ ವಿಶೇಷತೆ ಹೇಗೆ ಕೆಲಸ ಮಾಡುತ್ತವೆ ಎಂಬುದರ ಬಗ್ಗೆ ಪ್ರಶ್ನೆಗಳಿವೆ.

ಹಲವು ಗಣಕಗಳಿಂದ ಕೂಡಿರುವ ಈ ಅಡಾಸ್ ಗಾಡಿಗಳಿಗೆ ಸುಭದ್ರವಾದ ಸೈಬರ್ ಭದ್ರತೆಯ ತಂತ್ರಾಂಶ ಒದಗಿಸುವ ಅವಶ್ಯಕತೆಯಿದೆ. ದಿಗಿಲುಕೋರರು, ಕಳ್ಳ-ಕಾಕರು ಗಾಡಿಯ ಗಣಕಗಳನ್ನು ತಮ್ಮ ಹಿಡಿತಕ್ಕೆ ಪಡೆದು ಬೇಕಾಬಿಟ್ಟಿ ಬಳಕೆ ಮಾಡಿ ಸಮಾಜಕ್ಕೆ ಕೆಡುಕುಂಟು ಮಾಡುವ ಸಾಧ್ಯತೆಗಳಿವೆ. ಇದನ್ನು ಮೆಟ್ಟಿ ನಿಂತು ಅಡಾಸ್ ತಂತ್ರಜ್ಞಾನ ಬೆಳೆಯಲಿ, ಸಮಾಜಕ್ಕೆ ಒಳ್ಳೆಯ ಕೊಡುಗೆಯಾಗಲಿ.

ಏನಿದು ಮೋಡ ಬಿತ್ತನೆ?

ಪ್ರಶಾಂತ ಸೊರಟೂರ.

‘ಮೋಡ ಬಿತ್ತನೆ’, ಕೆಲವು ವರ್ಷಗಳ ಹಿಂದೆ ಹೀಗೊಂದು ಪದ ಒಮ್ಮೆಲೇ ಬೆಳಕಿಗೆ ಬಂತು, ಬರಗಾಲದಿಂದ ತತ್ತರಿಸಿದ್ದ ಕರ್ನಾಟಕಕ್ಕೆ ಮಳೆ ಬರಿಸಲು ಮೋಡದಲ್ಲಿಯೇ ವಿಮಾನದಿಂದ ಬಿತ್ತನೆಯ ಕೆಲಸವಂತೆ, ಅದು ಮಳೆ ತರುತ್ತದಂತೆ ಅನ್ನುವ ಮಾತುಗಳು ಎಲ್ಲೆಡೆ ಹರಡ ತೊಡಗಿದ್ದವು. ನೆಲದಲ್ಲಿ ಬಿತ್ತನೆ ಮಾಡಿದ, ನೋಡಿದ ಕನ್ನಡಿಗರಿಗೆ ಬಾನಿನಲ್ಲಿ ಮಾಡುವ ಇದ್ಯಾವ ಬಗೆಯ ಬಿತ್ತನೆ ಅನ್ನಿಸಿತ್ತು. ಕೆಲ ಊರುಗಳ ಮೇಲೆ ವಿಮಾನಗಳು ಹಾರಾಡಿ ’ಮೋಡ ಬಿತ್ತನೆ’ಯಿಂದ ಮಳೆ ಸುರಿಸಿದ್ದೂ ಸುದ್ದಿಯಾಯಿತು. ಇಡೀ ದೇಶದಲ್ಲಿಯೇ ಈ ತರಹ ಮಳೆ ಸುರಿಸಲು ಮೋಡ ಬಿತ್ತನೆಗೆ ಕೈಹಾಕಿದ ಮೊದಲ ನಾಡು ಕರ್ನಾಟಕ ಅನ್ನುವ ಸುದ್ದಿಯಾಯಿತು.

ಮೋಡ ಬಿತ್ತನೆಯ ಬಗ್ಗೆ ತಿಳಿದುಕೊಳ್ಳುವ ಮುನ್ನ, ಮೋಡ ಮತ್ತು ಮಳೆಯ ಬಗ್ಗೆ ಒಂಚೂರು ತಿಳಿದುಕೊಳ್ಳೋಣ. ಕಡಲು, ಹೊಳೆ ಮತ್ತು ನೆಲದ ಹಲವೆಡೆ ಇರುವ ನೀರು ಬಿಸಿಲಿಗೆ ಕಾಯ್ದು ಆವಿಯಾಗುತ್ತದೆ. ಹೀಗೆ ಉಂಟಾದ ನೀರಾವಿಯು ಗಾಳಿಯೊಡನೆ ಬೆರೆತು ಬಾನಿನೆಡೆಗೆ ಸಾಗ ತೊಡಗುತ್ತದೆ. ಗಾಳಿಯು ಬಿಸಿಯಾದಷ್ಟು ಅದು ತನ್ನಲ್ಲಿ ಹೆಚ್ಚೆಚ್ಚು ನೀರಾವಿಯನ್ನು ಅಡಗಿಸಿಟ್ಟುಕೊಳ್ಳಬಲ್ಲದು, ಆದರೆ ನೆಲದಿಂದ ಮೇಲೆ-ಮೇಲೆ ಹೋದಂತೆಲ್ಲಾ ಅಲ್ಲಿರುವ ಬಿಸುಪು (temperature) ಕಡಿಮೆಯಾಗುತ್ತಾ ಹೋಗುತ್ತದೆ. ಒಂದು ಹಂತದಲ್ಲಿ ಬಿಸುಪು ತುಂಬಾ ಕಡಿಮೆಯಾಗಿ ಗಾಳಿಗೆ ತನ್ನಲ್ಲಿ ಇನ್ನಷ್ಟು ನೀರಾವಿಯನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ಈ ಹಂತದ ಗಾಳಿಯನ್ನು ‘ತಣಿದ ಗಾಳಿ’ (saturated air) ಅಂತಾ ಕರೆಯುತ್ತಾರೆ. ಈ ತಣಿದ ಗಾಳಿಯು ತೂಕವಾದ ನೀರಾವಿಯನ್ನು ಹೊತ್ತುಕೊಂಡು ಬಾನಿನಲ್ಲಿ ಒಂದೆಡೆ ನೆಲೆ ನಿಲ್ಲುತ್ತದೆ, ಇವೇ ಮೋಡಗಳು.

ಹೀಗೆ ನೆಲೆಗೊಂಡ ಮೋಡದಲ್ಲಿ ನೀರ ಹನಿಗಳು ತುಂಬಾ ತಂಪಾಗಿದ್ದು ಅವುಗಳ ಬಿಸುಪು (temperature) ಕೆಲವೊಮ್ಮೆ – 40° ಸೆಲ್ಸಿಯಸ್ ಆಗಿರುತ್ತದೆ. ಇಲ್ಲಿ ಇನ್ನೊಂದು ತಿಳಿದುಕೊಳ್ಳಬೇಕಾದ ವಿಶಯವೆಂದರೆ ಇಷ್ಟು ತಂಪಾಗಿದ್ದರೂ ಎಲ್ಲ ಹನಿಗಳು ಗಟ್ಟಿ ಮಂಜಿನ ರೂಪದಲ್ಲಿರದೇ ಕೆಲವು ಹನಿಗಳು ನೀರಿನ ರೂಪದಲ್ಲೇ ಉಳಿದಿರುತ್ತವೆ. ಇದಕ್ಕೆ ಕಾರಣವೆಂದರೆ ಸಾಮಾನ್ಯ ಒತ್ತಡದಲ್ಲಿ 0° ಸೆ. ಹೆಪ್ಪುಗಟ್ಟುವ ನೀರು ಬಾನಿನಲ್ಲಿ, ಮೇಲೆ ಹೋದಂತೆ ಒತ್ತಡ ಕಡಿಮೆ ಇರುವುದರಿಂದ ಅದರ ಹೆಪ್ಪುಗಟ್ಟುವಿಕೆ ಬಿಸುಪು (freezing temperature) ಕಡಿಮೆಯಾಗುತ್ತಾ ಹೋಗುತ್ತದೆ

ಮೋಡಗಳಲ್ಲಿರುವ ಚಿಕ್ಕ ನೀರಿನ ಹನಿಗಳು ಮತ್ತು ಮಂಜಿನ (ಗಟ್ಟಿ ನೀರು) ಹನಿಗಳು ಒಂದಕ್ಕೊಂದು ಬೆಸೆದು ಇಲ್ಲವೇ ಮೋಡದಲ್ಲಿರುವ ಇತರೆ ಪುಟಾಣಿ ಕಣಗಳನ್ನು ಸುತ್ತುವರೆದು ದೊಡ್ಡದಾಗುತ್ತಾ ಹೋಗುತ್ತವೆ. ಹೀಗೆ ದೊಡ್ಡದಾದ ನೀರಿನ, ಮಂಜಿನ ಹನಿ ಹೊತ್ತುಕೊಂಡಿರುವ ಮೋಡಕ್ಕೆ ಅವುಗಳ ತೂಕ ತಾಳಿಕೊಳ್ಳಲು ಆಗದಂತ ಪರಿಸ್ಥಿತಿ ಬಂದುಬಿಡುತ್ತದೆ. ಆಗಲೇ ಅವು ನೆಲಕ್ಕೆ ಮಳೆಯಾಗಿ ಸುರಿಯ ತೊಡಗುತ್ತವೆ.

ಮೋಡಗಳ ಕುರಿತಾದ ಮೇಲಿನ ವಿಷಯದಲ್ಲಿ ಗಮನಿಸಬೇಕಾದುದೆಂದರೆ, ಮೋಡಗಳು ಮಳೆಯಾಗಬೇಕಾದರೆ ಅವುಗಳಲ್ಲಿರುವ ನೀರಿನ ಹನಿಗಳು ಒಂದೋ ಹೆಚ್ಚಾಗಬೇಕು ಇಲ್ಲವೇ ಆ ನೀರ ಹನಿಗಳು ಒಂದಾಗಿ ದೊಡ್ಡದಾಗಬೇಕು. ಇದರಲ್ಲಿ ಎರಡನೇ ಬಗೆಯನ್ನು ಬಳಸಿ ಮಳೆ ತರಿಸುವುದೇ ‘ಮೋಡ ಬಿತ್ತನೆ’ಯ ಹಿಂದಿರುವ ಚಳಕ. ಮೋಡ ಬಿತ್ತನೆಯಲ್ಲಿ, ಬೆಳ್ಳಿಯ ಆಯೋಡಾಯಡ್ ಇಲ್ಲವೇ ಒಣ ಮಂಜು ಎಂದು ಕರೆಯಲ್ಪಡುವ ಗಟ್ಟಿ ಕಾರ್ಬನ್ ತುಣುಕುಗಳನ್ನು ವಿಮಾನಗಳ ಮೂಲಕ ಮೋಡಗಳ ಮೇಲೆ ಚಿಮುಕಿಸಲಾಗುತ್ತದೆ. ಹೀಗೆ ಚಿಮುಕಿಸಿದ ತುಣುಕುಗಳು ಮೋಡದಲ್ಲಿರುವ ನೀರಿನ, ಮಂಜಿನ ಹನಿಗಳನ್ನು ತನ್ನೆಡೆಗೆ ಸೆಳೆದು ದೊಡ್ಡದಾಗಿಸುತ್ತವೆ. ಹೀಗೆ ಒಂದುಗೂಡಿ ದೊಡ್ಡದಾದ ನೀರ ಹನಿಗಳ ಬಾರ ತಾಳಲಾಗದೇ ಮೋಡಗಳು, ಮಳೆಯಾಗಿ ಸುರಿಯ ತೊಡಗುತ್ತವೆ.

‘ಮೋಡ ಬಿತ್ತನೆ’ಯ ಕೆಲಸ ಯಾವಾಗಲೂ ಗೆಲುವು ಕಾಣುತ್ತದೆ ಅನ್ನಲಾಗದು, ಮೋಡದಲ್ಲಿರುವ ನೀರ ಹನಿಗಳ ಗಾತ್ರ, ಅವುಗಳ ಸುತ್ತಿರುವ ವಾತಾವರಣ ಇದರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಜಗತ್ತಿನ ಹಲವೆಡೆ ಮೋಡ ಬಿತ್ತನೆಯ ಕೆಲಸವನ್ನು ಕೈಗೊಂಡರೂ ಎಲ್ಲಾ ಕಡೆ ಇದಕ್ಕೆ ಒಪ್ಪಿಗೆ ಪಡೆಯಲು ಇನ್ನೂ ಆಗಿಲ್ಲ. ಆದರೆ ಚೀನಾ ದೇಶ ಯಾವುದೇ ಅನುಮಾನಗಳನ್ನು ಇಟ್ಟುಕೊಳ್ಳದೇ ’ಮೋಡ ಬಿತ್ತನೆ’ಯಲ್ಲಿ ಪ್ರತಿ ವರ್ಷ ಹೆಚ್ಚಿನ ದುಡ್ಡು ತೊಡಗಿಸುತ್ತಾ ಹೊರಟಿದೆ. ಬೀಜಿಂಗ್ ಒಲಂಪಿಕ್ಸಿನಲ್ಲಿ ಮಳೆಯಿಂದ ಆಟ ಹಾಳಾಗಬಾರದೆಂದು, ಮೋಡ ಬಿತ್ತನೆ ಮಾಡಿ ಆಟಕ್ಕಿಂತ ಹಲವು ದಿನಗಳ ಮೊದಲೇ ಮೋಡಗಳನ್ನು ಮಳೆಯಾಗಿಸಿದ್ದು ಇಲ್ಲಿ ನೆನಪಿಸಿಕೊಳ್ಳಬಹುದು. ಕರ್ನಾಟಕದಲ್ಲಿ 2003 ರಿಂದ ಮೋಡಬಿತ್ತನೆಯನ್ನು ಕೈಗೊಳ್ಳಲಾಗಿದೆ .

ಮಾಹಿತಿ ಸೆಲೆ:

 

ಕಡಲ ತೆರೆಗಳಿಂದ ಮಿಂಚು

ಪ್ರಶಾಂತ ಸೊರಟೂರ.

ಕಲ್ಲಿದ್ದಲು, ಪೆಟ್ರೋಲಿಯಂ ಮುಂತಾದ ಮುಗಿದು ಹೋಗಬಹುದಾದಂತಹ ಉರುವಲುಗಳ ಬದಲಾಗಿ ಮುಗಿದು ಹೋಗಲಾರದಂತಹ ಮತ್ತು ಸುತ್ತಣಕ್ಕೆ ಕಡಿಮೆ ತೊಂದರೆಯನ್ನುಂಟು ಮಾಡುವಂತಹ ಕಸುವಿನ ಸೆಲೆಗಳ ಅರಕೆ ಜಗತ್ತಿನೆಲ್ಲೆಡೆ ಎಡೆಬಿಡದೇ ಸಾಗಿದೆ.

ಈ ನಿಟ್ಟಿನಲ್ಲಿ ಗುಡ್ಡ-ಬೆಟ್ಟದ ಮೇಲೆ ಬೀಸುವ ಗಾಳಿ ಇಲ್ಲವೇ ನೇಸರನ ಬೆಳಕಿನಿಂದ ಮಿಂಚು (ಕರೆಂಟ್) ಉಂಟುಮಾಡುವ ಹೊಸ ಸಲಕರಣೆಗಳನ್ನು ಹಲವಾರು ಕಡೆ ಅಳವಡಿಸಲಾಗುತ್ತಿದೆ. ಇದರಂತೆ ಇತ್ತೀಚಿಗೆ ಬಳಕೆಗೆ ತರಲಾಗುತ್ತಿರುವ ಕಸುವಿನ ಇನ್ನೊಂದು ಸೆಲೆಯೆಂದರೆ ಕಡಲ ತೆರೆಗಳನ್ನು ಬಳಸಿ ಕರೆಂಟ್ ಉಂಟುಮಾಡುವುದು.

ದಂಡೆಯಲ್ಲಿ ಹೊಯ್ದಾಡುವ ತೆರೆಗಳನ್ನು ಇಲ್ಲವೇ ಕಡಲ ನಡುವೆ ಏಳುವ ದೊಡ್ಡ ಅಲೆಗಳು ಹೊಮ್ಮಿಸುವ ಕಸುವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳುವಂತಾದರೆ ಜಗತ್ತಿನ ಹಲವು ನಾಡುಗಳಿಗೆ ಯಾವುದೇ ಅಡೆತಡೆ ಇಲ್ಲದೇ ಮಿಂಚು (ಕರೆಂಟ್) ನೀಡಬಹುದೆಂದು ಎಣಿಕೆಮಾಡಲಾಗಿದೆ. ಆದರೆ ಬಿರುಸಾಗಿ ಅಪ್ಪಳಿಸುವ ಕಡಲ ಅಲೆಗಳನ್ನು ತಡೆದುಕೊಂಡು ಮಿಂಚು ಉಂಟಮಾಡಬಲ್ಲ ಗಟ್ಟಿಯಾದ ಮಿಂಚುಟ್ಟುಕಗಳನ್ನು (electric generators) ತಯಾರಿಸುವುದು ಇಂದು ದೊಡ್ಡ ತೊಡಕಾಗಿದೆ. ಹಾಗಾಗಿ ಕಡಲ ತೆರೆಯ ಕರೆಂಟ್ ಸಲಕರಣೆಗಳು ಇನ್ನೂ ಹೆಚ್ಚಾಗಿ ಬಳಕೆಯಾಗುತ್ತಿಲ್ಲ.

ಈ ನಿಟ್ಟಿನಲ್ಲಿ ಅಮೇರಿಕಾದ ‘Ocean Renewable Power Company’ ಹಲವಾರು ಹೊಸ ಅರಕೆಯ ಕೆಲಸಗಳನ್ನು ನಡೆಸುತ್ತಿದ್ದು, ಇತ್ತೀಚಿಗೆ ಕಡಲೊಳಗೆ 150 ಅಡಿ ಆಳದಲ್ಲಿ ಹೊಸದೊಂದು ಮಿಂಚುಟ್ಟುಕವನ್ನು ಅಣಿಗೊಳಿಸಿದೆ. 98 ಅಡಿ ಅಗಲ ಮತ್ತು 31 ಅಡಿ ಎತ್ತರ ಇರುವ ಅಡಿಪಾಯದ ಮೇಲೆ ಅಲೆಗಳಿಂದ ತಿರುಗುವ ಮಿಂಚುಟ್ಟುಕವನ್ನು ಅಳವಡಿಸಲಾಗಿದೆ.

ಮೊದಲ ಹಂತದಲ್ಲಿ ಕಡಲ ಅಲೆಗಳಿಂದ 150 ಕಿಲೋ ವ್ಯಾಟ್ ಕರೆಂಟಿನ ಕಸುವನ್ನು ಉಂಟುಮಾಡಬಲ್ಲ ಈ ಮಿಂಚುಟ್ಟುಕವು ಮುಂದಿನ ಕೆಲವು ವರುಶಗಳಲ್ಲಿ 5 ಮೆಗಾ ವ್ಯಾಟ್ ಕಸುವನ್ನು ಉಂಟು ಮಾಡುವಷ್ಟು ದೊಡ್ಡದಾಗಿಸಲು ಅಮೇರಿಕಾದ ಕೂಟವು ಗುರಿ ಇಟ್ಟುಕೊಂಡಿದೆ.

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಡಲ ತೆರೆಯ ಕಸುವು ಹೇರಳವಾಗಿ ದೊರೆಯುವಂತದು. ಅಮೇರಿಕಾದಂತೆ ಈ ಕಸುವನ್ನು ನಾವು ಕೂಡ ಸರಿಯಾಗಿ ಬಳಸಿಕೊಳ್ಳಬೇಕಾಗಿದೆ.

(ಸುದ್ದಿಸೆಲೆ: popsci)

ಅಗ್ಗದ ಬೆಳ್ಮಿಂಚು

ಜಯತೀರ್ಥ ನಾಡಗೌಡ.

ನೇಸರನ ಕಸುವು ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಕೆಲಸಕ್ಕೆ ಬರುತ್ತಿದೆ. ಅಳಿದು ಹೋಗುವ ಮತ್ತು ಪರಿಸರಕ್ಕೆ ಹಾನಿಯುಂಟುಮಾಡುವ ಕಸುವಿನ ಸೆಲೆಗಳಿಗಿಂತ ನೇಸರನ ಕಸುವು ಹೆಚ್ಚು ಒಳಿತಿನದು ಅಲ್ಲದೇ ಪುಕ್ಕಟೆ ಸಿಗುವಂತದ್ದು ಕೂಡ.ಈ ಮೊದಲು ಹೆಚ್ಚಾಗಿ ಉಪಗ್ರಹಗಳ (satellite) ಮತ್ತು ಮಿಲಿಟರಿ ಕೆಲಸಗಳಿಗೆ ಬಳಕೆಯಾಗುತ್ತಿದ್ದ ನೇಸರನ ಬಲ ಈಗ ಹಲವೆಡೆ ನೆರವಿಗೆ ಬರುತ್ತಿರುವುದು ಇಂದಿನ ದಿನಗಳಿಗೆ ಒಳ್ಳೆಯದೇ ಆಗಿದೆ. ಮುಂಚೆ ಅಂದರೆ 1977 ರಲ್ಲಿ ಒಂದು ವ್ಯಾಟ್ ನೇಸರನ ಬಲ ಉಂಟುಮಾಡಲು ಅಮೇರಿಕದ 77 ಡಾಲರ್ ಖರ್ಚಾಗುತ್ತಿದ್ದರೆ,ಇದೀಗ ಕೇವಲ 80 ಸೆಂಟ್ ಗಳು ಸಾಕು (100 ಸೆಂಟ್ ಗಳು ಸೇರಿದರೆ 1 ಡಾಲರ್).

ಹೆಸರುವಾಸಿ ಆಕ್ಸ‍ಫರ್ಡ್ ವಿಶ್ವವಿದ್ಯಾಲಯದಲ್ಲಿ ಇದರ ಬಗ್ಗೆಯೇ ಅರಕೆ ನಡೆಸುತ್ತಿರುವ ಡಾ.ಸ್ನೈಥ್‍ ಮತ್ತು ತಂಡ ಮುಂಬರುವ ದಿನಗಳಲ್ಲಿ ನೇಸರನ ಬಲ ಉಂಟು ಮಾಡಲು ಇನ್ನೂ ಕಡಿಮೆ ಹಣ ತೆರಬೇಕಾಗುತ್ತದೆಂದು ತಿಳಿಸಿದ್ದಾರೆ. ನೇಸರನ ಬಲ ಉಂಟುಮಾಡಲು ಬಳಸುವ ಸಿಲಿಕಾನ್ ಗೂಡುಗಳ(solar cells made of silicon) ಬದಲಾಗಿ ಹೊಸದೊಂದು ವಸ್ತುವಿನ ಬಳಕೆ ಮಾಡಿ ಕಡಿಮೆ ವೆಚ್ಚದಲ್ಲಿ ತಯಾರಿಸಬಹುದೆಂದು ಡಾ.ಸ್ನೈಥ್‍ರವರ ತಂಡ, ವಾದ ಮುಂದಿಟ್ಟಿದೆ. ಹೊಸ ವಸ್ತುವನ್ನು “ಪೆರೋವ್‍ಸ್ಕೈಟ್” (perovskite)ಎಂದು ಕರೆಯಲಾಗಿದ್ದು ,ಇದರಿಂದ ಒಂದು ವ್ಯಾಟ್ ವಿದ್ಯುತ್ ತಯಾರಿಸಲು ತಗಲುವ ವೆಚ್ಚವು ಮುಕ್ಕಾಲು ಭಾಗ ಕಡಿತಗೊಳ್ಳಲಿದೆ ಎಂಬುದು ಇವರ ಅಂಬೋಣ.

ನಮಗೆ ತಿಳಿದಿರುವಂತೆ ವಿದ್ಯುತ್ ಹುಟ್ಟಲು ಎಲೆಕ್ಟ್ರಾನ್ ಗಳು ಹರಿಯುವಂತೆ ಮಾಡಬೇಕು. ನೇಸರನ ಕಸುವು ಪಡೆಯಲು ಅಣಿಗೊಳಿಸಿದ ಸಿಲಿಕಾನ್ ಗೂಡಿನ ಮೇಲೆ ಬೆಳಕಿನ ಕಿರಣಗಳು ಬಿದ್ದಾಗ , ಬೆಳಕಿನ ಕಿರಣಗಳಲ್ಲಿರುವ ಫೋಟಾನ್‍ಗಳು ಸಿಲಿಕಾನ್ ಎಲೆಕ್ಟ್ರಾನ್‍ಗಳನ್ನು ದೂಡಿ ಹರಿಯುವಂತೆ ಮಾಡಿ ಅಲ್ಲಿ ತೂತುಗಳನ್ನುಂಟು ಮಾಡುತ್ತದೆ. ತೂತುಗಳು(holes) ಮತ್ತು ಎಲೆಕ್ಟ್ರಾನ್‍ಗಳು ಒಂದಕ್ಕೊಂದು ಎದುರು ದಿಕ್ಕಿನಲ್ಲಿ ಚಲಿಸಿ ವಿದ್ಯುತ್ ಹರಿವಿಗೆ ಕಾರಣವಾಗುತ್ತವೆ. ಹೀಗೆ ಉಂಟಾಗುವುದೇ ‘ಬೆಳ್ಮಿಂಚು’ (photo-voltaic electricity)

ಸಿಲಿಕಾನ ವಸ್ತುಗಳು ಅರೆಬಿಡುವೆ (semiconductor) ವಸ್ತುಗಳಾಗಿದ್ದು, ಅವುಗಳಲ್ಲಿ ಎಲೆಕ್ಟ್ರಾನ್‍ಗಳು (electrons) ಹರಿಯಲು ಅನುವಾಗುವಂತೆ ಕಣಗಳಲ್ಲಿ ತೆರವಾದ ತೂತುಗಳು (holes) ದಾರಿ ಮಾಡಿಕೊಡುತ್ತವೆ. ಎಲೆಕ್ಟ್ರಾನ್‍ಗಳು ಹರಿದಷ್ಟು ಹೆಚ್ಚು ಮಿಂಚು ಅಂದರೆ ವಿದ್ಯುತ್ ಹುಟ್ಟಿಕೊಳ್ಳುತ್ತದೆ. ಆದರೆ ಎಲೆಕ್ಟ್ರಾನ್‍ಗಳು ಹರಿದಷ್ಟು ತೂತುಗಳನ್ನ ತುಂಬಿಕೊಂಡು ಅಲ್ಲಿಯೇ ನೆಲೆಗೊಳ್ಳುವುದರ ಮೂಲಕ ಹರಿಯುವಿಕೆ (diffusion) ನಿಲ್ಲುತ್ತದೆ.ಇದನ್ನು ಹರಿಯುವಿಕೆಯ ಉದ್ದ (diffusion length) ಎನ್ನುತ್ತಾರೆ. ಬಹಳ ಹೆಚ್ಚಿನ ಅಳವುತನ (efficiency) ನೀಡುವ ವಸ್ತುಗಳಲ್ಲಿ ಹರಿಯುವಿಕೆಯ ಉದ್ದ ಬಹಳವಾಗಿರುತ್ತದೆ.

ನೀರು ಕಾಯಿಸಲು ಬಳಸುವ ನೇಸರ-ಕಸುವಿನ ಹೀಟರ್(Solar Geyser) ಮುಂತಾದವುಗಳಲ್ಲಿ ಸಿಲಿಕಾನ್ ಬಳಕೆಯಲ್ಲಿದ್ದು ಇವುಗಳ ಹರಿಯುವಿಕೆ ಉದ್ದ ಕಡಿಮೆಯಾಗಿರುತ್ತದೆ. ಇದು 10 ನ್ಯಾನೋ ಮೀಟರ್ ಮಾತ್ರ ಅಂದರೆ ಒಂದು ಮೀಟರ್‌ನ ಬಿಲಿಯನ್‌ನ ಒಂದು ಭಾಗವಷ್ಟೇ! ಇದರಿಂದ ಸಿಲಿಕಾನ್ ಗೂಡುಗಳ ಅಳವುತನ ಶೇಕಡಾ 10. ಅದೇ ಪೆರೋವ್‍ಸ್ಕೈಟ್ ವಸ್ತುವಿನ ಗೂಡುಗಳ ಹರಿಯುವಿಕೆಯ ಉದ್ದ ಸಾವಿರ ನ್ಯಾನೋಮೀಟರ್ ಆಗಿದ್ದು, ಅಳವುತನ ಶೇಕಡಾ 15 ಇಲ್ಲವೇ ಅದಕ್ಕಿಂತ ಹೆಚ್ಚೆಂದು ಡಾ. ಸ್ನೈಥ್‍ ಹೇಳುತ್ತಾರೆ.

ಪೆರೋವ್‍ಸ್ಕೈಟ್ ಎಂಬುದು ಎಂಟುಬದಿಯ ಘನಾಕಾರ ಹರಳುಗಳನ್ನು (cubo-octahedral crysta – ಘನಾಕಾರದ ತುದಿಗಳ ಕತ್ತರಿಸಿದಂತೆ-cube with corners cut-off) ಹೊಂದಿದ ವಸ್ತು. ಆರು ಎಂಟುಬದಿಯ ಮುಖಗಳನ್ನ ಮತ್ತು ಎಂಟು ಮೂಕ್ಕೋನದ ಮುಖ ಹೊಂದಿದೆ. ಪೆರೋವ್‍ಸ್ಕೈಟ್ ಸಹಜವಾದ ಅದಿರು,ಇದು ಹೆಚ್ಚು ಬೆಳಕಿನ ಕಿರಣಗಳನ್ನ ಹೀರಿಕೊಂಡು ಅವುಗಳನ್ನ ಮಿಂಚಾಗಿ ಬದಲಾಯಿಸುವ ಗುಣ ಹೊಂದಿದೆ.

ಡಾ.ಸ್ನೈಥ್‍ ಹೇಳುವಂತೆ ಪೆರೋವ್‍ಸ್ಕೈಟ್ ನುರಿತಾದ ವಸ್ತು. ಇದರ ಜೈವಿಕ(organic) ಭಾಗ ಕಾರ್ಬನ್, ಹೈಡ್ರೋಜನ್ ಮತ್ತು ನೈಟ್ರೋಜನ್‌ಗಳಿಂದ ಕೂಡಿದ್ದರೆ, ಅಜೈವಿಕ (inorganic) ಭಾಗ ಸೀಸ,ಅಯೋಡಿನ್ ಹಾಗೂ ಕ್ಲೋರಿನ್ ನಿಂದ ಕೂಡಿದೆ. ಪೆರೋವ್‍ಸ್ಕೈಟ್ ತಯಾರಿಸಲು ಕಡಿಮೆ ವೆಚ್ಚ ಸಾಕು. ಸಿಲಿಕಾನ್ ಹಸನುಗೊಳಿಸಲು ಹೆಚ್ಚಿನ ಬಿಸುಪಿನ ಅಗತ್ಯ ಇರುವುದರಿಂದ ಸಿಲಿಕಾನ್ ಬಳಸಿ ನೇಸರ ಗೂಡುಗಳನ್ನು ತಯಾರಿಸುವುದು ದುಬಾರಿಯಾಗಿರುತ್ತದೆ. ಪೆರೋವ್‍ಸ್ಕೈಟ್ ಅರಕೆಮನೆಯ ಬಿಸುಪಿವಿನಲ್ಲೇ ತಯಾರಿಸಲು ಅನುಕೂಲವಾಗಿದೆ. ಸ್ನೈಥ್‍ ರವರ ತಂಡ ಅರಕೆಮನೆಯಲ್ಲಿ ಪೆರೋವ್‍ಸ್ಕೈಟ್ ಬಳಸಿಕೊಂಡು ಕೇವಲ 40 ಸೆಂಟ್ಗಳಲ್ಲಿ ಸೂರ‍್ಯನ ಬೆಳಕಿನಿಂದ ಮಿಂಚನ್ನು ತಯಾರಿಸಿ ತೋರಿಸಿದೆ. ಕೈಗಾರಿಕೆ ಮತ್ತು ದಿನದ ಮಂದಿ ಬಳಕೆಯ ಲೆಕ್ಕದಳತೆಯಲ್ಲಿ ಇದನ್ನು ತಯಾರಿಸಿದರೆ ವೆಚ್ಚ ಇದರ ಅರ್ಧ ಅಂದರೆ ಕೇವಲ 20 ಸೆಂಟ್ ಮಾತ್ರವಂತೆ.

ಇಷ್ಟೊಂದು ಕಡಿಮೆ ವೆಚ್ಚದಲ್ಲಿ ವಿದ್ಯುತ್ ತಯಾರಿಸಲು ನೆರವಾಗುವ ಪೆರೋವ್‍ಸ್ಕೈಟ್ ಕೆಲವು ಅಡೆತಡೆಗಳನ್ನು ಹೊಂದಿದೆ. ಈ ವಸ್ತುವಿನ ಬಹುಕಾಲದ ಬಾಳಿಕೆ ಬಗ್ಗೆ ಹೆಚ್ಚಿನ ಪರೀಕ್ಷೆ ನಡೆದಿಲ್ಲ. ನೇಸರನ ಬಲಶಾಲಿ ಕಿರಣಗಳಿಗೆ ಮೈಯೊಡ್ಡಿ ಬಹುಕಾಲ ಬಾಳಿಕೆ ಬರುವುದು ಹಲವು ವಸ್ತುಗಳಿಗೆ ಕಷ್ಟದ ಕೆಲಸವೇ ಆಗಿರುವಾಗ, ಪೆರೋವ್‍ಸ್ಕೈಟ್ ಎಷ್ಟು ಕಾಲ ಬಾಳಿಕೆ ಬಂದೀತು ಎಂಬುದು ಹಲವರಿಗೆ ಪ್ರಶ್ನೆಯಾಗಿದೆ. ಇನ್ನೂ ಪ್ರಯೋಗಶಾಲೆಯಲ್ಲಿ ತಯಾರಿಸಿದ್ದಕ್ಕೂ, ದಿನ ಬಳಕೆಯಲ್ಲಿ ಹಲವಾರು ಮೆಗಾ ವ್ಯಾಟ್ ಅಳತೆಯಲ್ಲಿ ತಯಾರಿಸುವುದಕ್ಕೂ ವ್ಯತ್ಯಾಸವಿದ್ದೂ ಇದು ಕಬ್ಬಿಣದ ಕಡಲೆಯೇ ಸರಿ.

ಈ ಪ್ರಮುಖ ಅಡೆತಡೆ ದಾಟಿ ಬಂದರೆ ಪೆರೋವ್‍ಸ್ಕೈಟ್‍ನ ನೇಸರ ಗೂಡಗಳ ವಿದ್ಯುತ್ ಹೆಚ್ಚಿನ ಮನೆಗಳ ದೀಪ ಉರಿಸುವುದು ಖಂಡಿತ.

 

 

ನೀರಿಗೆ ಏಕೆ ಈ ವಿಶೇಷ ಗುಣಗಳು?

ರಘುನಂದನ್.

ಕಳೆದ ಬರಹದಲ್ಲಿ ತಿಳಿದುಕೊಂಡಂತೆ ನಮ್ಮ ಸುತ್ತಣದಲ್ಲಿರುವ ವಸ್ತುಗಳಲ್ಲೇ ನೀರು ವಿಶೇಷವಾದುದು. ಆದರೆ ವಿಶೇಷವಾದ ಗುಣಗಳು ನೀರಿಗೇ ಏಕೆ ಇವೆ ಎಂಬುದು ಕುತೂಹಲವಾದುದು. ಇದಕ್ಕೆ ಕಾರಣ ಅದರ ಅಣುಗಳು ಒಂದಕ್ಕೊಂದು ಹೊಂದಿಕೊಂಡಿರುವ ಬಗೆ. ಮುಂಚೆ ಹೇಳಿದ ಹಾಗೆ ಹೈಡ್ರೋಜನ್ ಬೆಸೆತದ ಏರ್ಪಾಟು (hydrogen bonding arrangement) ನೀರು ಈ ರೀತಿ ಇರುವುದಕ್ಕೆ ಕಾರಣ.

ಜೀವಿಗಳು ಬದುಕಿರುವಾಗ ಅವುಗಳ ಒಡಲಿನಲ್ಲಿ ಸಾಕಷ್ಟು ರಾಸಾಯನಿಕ ಚಟುವಟಿಕೆಗಳು (chemical reactions) ನಡೆಯುತ್ತಿರುತ್ತವೆ, ಈ ರೀತಿಯ ಚಟುವಟಿಕೆಗಳು ನಡೆಯುವುದಕ್ಕೆ ಸಾಕಷ್ಟು ಪ್ರೋಟೀನ್‍ಗಳು, ಎಂಜೈಮ್ಗಳು ಹರಿದಾಡುತ್ತಿರಬೇಕು. ನರ ನಾಡಿಗಳ ಸಂದಿಗೊಂದಿಗಳಲ್ಲಿ ಸಣ್ಣ ಪುಟ್ಟ ಹಾದಿಗಳಲ್ಲಿ ಪ್ರೋಟೀನುಗಳು ಮತ್ತು ಎಂಜೈಮ್ಗಳು ಓಡಾಡುತ್ತಿರಬೇಕು. ಪ್ರೋಟೀನುಗಳು ಹೇಗೆ ಬೇಕೋ ಹಾಗೆ ತಿರುಗುವ, ನುಣುಚಿಕೊಳ್ಳುವ, ಆಕಾರ ಮಾರ್ಪಡಿಸುವುದಕ್ಕೆ ನೀರು ನೆರವಾಗುತ್ತದೆ. ಅದಕ್ಕಾಗಿಯೇ ನೀರು ಭೂಮಿಯ ಮೇಲಿನ ಜೀವಿಗಳೊಂದಿಗೆ ಈ ಬಗೆಯ ನಂಟನ್ನು ಹೊಂದಿದೆ.

ನೀರನ್ನು ಈ ಮಾದರಿಯಲ್ಲಿ ತೋರಿಸಬಹುದು, ನೆಗೆಟಿವ್
ಚಾರ್ಜ್ ಹೈಡ್ರೋಜನ್ ಅಣುಗಳು ಮತ್ತು ಪಾಸಿಟಿವ್ ಚಾರ್ಜ್ ಆಕ್ಸಿಜನ್ ಎಲೆಕ್ಟ್ರಾನ್‍ಗಳ ನಡುವಿನ ಸೆಳೆತ. ಈ ಸೆಳೆತವು ಒಂದು ಬಗೆಯ ನಿರುಗೆಯನ್ನು ಹುಟ್ಟುಹಾಕುತ್ತದೆ. ಈ ಸೆಳೆತಕ್ಕೆ ವಾನ್ ಡರ್ ವಾಲ್ಸ್ ಕಸುವು (Van der Waals force) ಎನ್ನುತ್ತಾರೆ. ಇವು ನೋಡಲಿಕ್ಕೆ ನಾಲ್ಬದಿಗಳಾಗಿ (Tetrahedra) ಕಾಣುತ್ತವೆ. ಕೆಳಗಿನ ಚಿತ್ರವನ್ನು ನೋಡಿ,

ಎಡಗಡೆಯ ಚಿತ್ರದಲ್ಲಿ ನೀವು ನೀರಿನ ಅಣುಕೂಟಗಳು ಹೇಗೆ ಒಂದಕ್ಕೊಂದು ಅಂಟಿಕೊಂಡಿವೆ ಎಂದು ನೋಡಬಹುದು. ಈ ಬಗೆಯ ನಲ್ಬದಿಗಳು ಹೆಚ್ಚು ಹೆಚ್ಚು ಚಾಚಿದಾಗ ಬಲಗಡೆಯ ಚಿತ್ರದಂತೆ ಕಾಣುತ್ತದೆ. ಇಲ್ಲಿ ಕೆಂಪು ಬಣ್ಣದಲ್ಲಿ ಇರುವುದು ಆಕ್ಸಿಜನ್ ಅಣುಗಳು ಮತ್ತು ಬಿಳಿ ಬಣ್ಣದಲ್ಲಿ ಇರುವುದು ಹೈಡ್ರೋಜನ್ ಅಣುಗಳು. ಈ ಅಣುಗಳ ನಡುವೆ ಇರುವ ಗೆರೆಯೇ ಹೈಡ್ರೋಜನ್ ಬೆಸೆತ (Hydrogen Bond).

ಬೇರೆ ಹರಿಯುವ ವಸ್ತುಗಳು (fluids) ಯಾಕೆ ಹೀಗಿಲ್ಲ ಎಂಬುದನ್ನು ಒರೆಹಚ್ಚಲು ಕೆಲವು ವಿಜ್ಞಾನಿಗಳು ಈ ಬಗೆಯ ಪ್ರಯೋಗವೊಂದನ್ನು ಮಾಡಿದರು. ಈ ಪ್ರಯೋಗದಲ್ಲಿ ವಾನ್ ಡರ್ ವಾಲ್ಸ್ ಕಸುವು (Van der Waals force) ಮತ್ತು ಹೈಡ್ರೋಜನ್ ಬೆಸೆತದ (Hydrogen bonding) ಮೊತ್ತಗಳನ್ನು ಕೊಂಚ ಮಟ್ಟಕ್ಕೆ ಮಾರ್ಪಾಟು ಮಾಡುವುದಕ್ಕೆ ಮುಂದಾದರು. ಅಂದರೆ ನೀರಿನಂತೆಯೇ ಆದರೆ ನೀರಲ್ಲ ಎಂಬ ಅಣುಕೂಟಗಳು ಹೇಗಿರುತ್ತವೆ ಎಂದು ತಿಳಿಯುವುದಕ್ಕೆ.

ಈ ಪ್ರಯೋಗದಿಂದ ಕೆಲವು ಅಚ್ಚರಿಯ ಸಂಗತಿಗಳು ಬೆಳಕಿಗೆ ಬಂದವು. ಹೈಡ್ರೋಜನ್ ಬೆಸೆತ ಇಲ್ಲ ಎಂದುಕೊಳ್ಳಿ ಆಗ ನೀರು ಮೇಲಿನ ಚಿತ್ರದಲ್ಲಿ ತೋರಿದಂತೆ ಮೂರು ದಿಕ್ಕುಗಳ ಬಲೆಯಾಗಿ (three dimensional network) ಅಂಟಿಕೊಂಡಿರದೆ ಉದ್ದುದ್ದ ಸರಪಳಿಗಳಾಗಿ ಇರುತ್ತಿತ್ತು (ಅಮೋನಿಯಾ ಮತ್ತು ಹೈಡ್ರೋಜನ್ ಕ್ಲೋರೈಡಿನಲ್ಲಿ ಇರುವಂತೆ). ಆಗ ನೀರಿಗೆ ಮೇಲೆ ಹೇಳಿದಂತ ಸೆಳೆತ ಇರುತ್ತಿರಲಿಲ್ಲ ಮತ್ತು ಪ್ರೋಟೀನುಗಳನ್ನು ಸಾಗಿಸಲು ಆಗುತ್ತಿರಲಿಲ್ಲ. ಈ ಭೂಮಿಯ ಮೇಲೆ ಜೀವಿಗಳೇ ಇರುತ್ತಿರಲಿಲ್ಲ ಎಂದೇ ಹೇಳಬಹುದು! ಹಾಗೆಯೇ ಹೈಡ್ರೋಜನ್ ಬೆಸೆತಗಳ ಮೂಲೆಗಳ (hydrogen bond angles) ಮೊತ್ತವನ್ನು ಮಾರ್ಪಡಿಸಿದರೂ ನೀರಿನ ಕೆಲವು ಗುಣಗಳು ಮಾರ್ಪಾಟಾಗುತ್ತಿದ್ದವು.

ಈ ಮೇಲಿನ ಕಾರಣಗಳಿಗಾಗಿಯೇ ನೀರು ನೀರಾಗಿರುವುದು ಮತ್ತು ಬೇರೆ ವಸ್ತುಗಳಿಗಿಂತ ಬೇರೆಯಾಗಿರುವುದು. ದಿನ ಬಳಸುವ ಸಾಮಾನ್ಯ ನೀರಿನ ಬಗೆಗಿನ ತಿಳುವಳಿಕೆ ಎಷ್ಟು ಸೋಜಿಗವಲ್ಲವೇ !?.

ನೀರಿನ ಬಗ್ಗೆ ಕೆಲವು ಸೋಜಿಗದ ಪ್ರಶ್ನೆಗಳು

ರಘುನಂದನ್.

ಈ ಬರಹದಲ್ಲಿ ನೀರಿನ ಬಗ್ಗೆ ಹಲವು ತಿಳಿಯದ ಕೆಲವು ಸೋಜಿಗದ ಪ್ರಶ್ನೆಗಳನ್ನು ಕೇಳಿಕೊಳ್ಳೋಣ !.

ಎಷ್ಟು ಬಗೆಯ ಮಂಜುಗಡ್ಡೆಗಳಿವೆ ?

ನಿಮಗೆ ಅಚ್ಚರಿಯೆನಿಸಬಹುದು, ಈಗಿನವರೆಗೆ 17 ಬಗೆಯ ಮಂಜುಗಡ್ಡೆಗಳನ್ನು ಗುರುತಿಸಲಾಗಿದೆ. ಅವುಗಳ ಹರಳಿಟ್ಟಳದ (crystal structure) ನೆಲೆಯ ಮೇಲೆ ಈ 17 ಬಗೆಗಳನ್ನು ಗುರುತಿಸಲಾಗಿದೆ. ನಾವು ನೋಡುವುದು ಒಂದೇ ಬಗೆಯ ಮಂಜುಗಡ್ಡೆ. ಮತ್ತೊಂದು ಬಗೆಯು ಹೊರ ಗಾಳಿಪದರದಲ್ಲಿ ಇರುತ್ತದೆ. ಮಿಕ್ಕ 15 ಬಗೆಗಳು ಹೆಚ್ಚಿನ ಒತ್ತಡದಲ್ಲಿ ಮಾತ್ರವೇ ರೂಪವನ್ನು ತಾಳುತ್ತವೆ. ನೀರಿನಲ್ಲಿ ಹೈಡ್ರೋಜನ್ ನಂಟು (hydrogen bond) ಆಕ್ಸಿಜನ್ ಒಟ್ಟಿಗೆ ನಾಲ್ಕುಚಾಚುಗಳ ಬಲೆಯಾಗಿ (tetrahedral network) ಹೆಣೆದುಕೊಂಡಿರುತ್ತವೆ. ಇದರ ಮೇಲೆ ಒತ್ತಡವನ್ನು ಹಾಕಿದರೆ ಬಗೆ ಬಗೆಯ ನೀರು-ಮಂಜುಗಡ್ಡೆಗಳಾಗಿ ಮಾರ‍್ಪಾಟಾಗುತ್ತವೆ. ಆದರೆ ಹದಿನೇಳಕ್ಕಿಂತ ಹೆಚ್ಚಿಗೆ ಇವೆಯೇ ಎಂಬುದು ಗೊತ್ತಿಲ್ಲ.

ಎಷ್ಟು ಬಗೆಯ ನೀರುಗಳಿವೆ ?

ನಿಮಗೆ ಈ ಪ್ರಶ್ನೆ ಬೆರಗೆನಿಸಬಹುದು. ನೀರು ಗಟ್ಟಿಯಾಗಿದ್ದರೆ ಮಂಜುಗಡ್ಡೆ ಎನ್ನುತ್ತೇವೆ. ನೀರು ಉಗಿಯಾದರೆ ಆವಿ ಎನ್ನುತ್ತೇವೆ. ನೀರು ಹರಿದರೆ ನೀರೇ ಎನ್ನುತ್ತೇವೆ. ಆದರೆ ಈ ಹರಿಯುವ ನೀರಿನಲ್ಲಿ ಎರಡು ಬಗೆಗಳಿದ್ದರೆ?

ವಿಜ್ಞಾನಿಗಳ ಪ್ರಕಾರ ನೀರನ್ನು ಕಡುತಂಪಾಗಿಸಿದಾಗ (super-cooled) ಎರಡು ಬಗೆಯ ನೀರುಗಳು ಒಂದಕ್ಕೊಂದು ಮಾರ್ಪಾಟಾಗುವುದನ್ನು ಗಮನಿಸಬಹುದಂತೆ. ಆದರೆ ಕೆಲವು ವಿಜ್ಞಾನಿಗಳು ಇದನ್ನು ನಿರಾಕರಿಸಿದ್ದಾರೆ, ಹಾಗಾಗಿ ಇದರಬಗ್ಗೆ ಇನ್ನು ಹೆಚ್ಚು ಅರಕೆ ಮಾಡಬೇಕಿದೆ.

ನೀರು ಹೇಗೆ ಆವಿಯಾಗುತ್ತದೆ ?

ಇಂದಿಗೂ ಯಾವ ಬಿರುಸಿನಲ್ಲಿ ನೆಲದ ಮೇಲಿರುವ ನೀರು ಆವಿಯಾಗುತ್ತದೆ (rate of evaporation) ಎಂದು ತಿಳಿದಿಲ್ಲ. ಅದು ತಿಳಿದರೆ ಮೋಡದಲ್ಲಿ ನೀರಿನ ಹನಿಗಳು ಹೇಗೆ ಹರಡಿಕೊಂಡಿವೆ ಎಂಬುದನ್ನು ಅರಿಯಬಹುದು. ಅದನ್ನು ಅರಿತರೆ ಮೋಡಗಳು ನೇಸರನು ಸೂಸುವ ಬೆಳಕನ್ನು ಹೇಗೆ ತಿರುಗಿಸುತ್ತವೆ, ಹೇಗೆ ಹೀರುತ್ತವೆ ಮತ್ತು ಹೇಗೆ ಚದರಿಸುತ್ತವೆ ಎಂಬುದನ್ನು ತಿಳಿಯಬಹುದು. ಇದು ತಿಳಿದರೆ ನೆಲದ ಬಿಸಿಯಾಗುವಿಕೆಯ(global warming) ಕುರಿತಾಗಿ ಹೆಚ್ಚು ಅರಕೆ ನಡೆಸಬಹುದು.

ನೀರಿನ ಮೇಲ್ಮೈಯ pH ಎಷ್ಟು ?

ನೀರಿನ pH (ಹುಳಿಯಳತೆ) 7 ಎಂದು ಗೊತ್ತಿದೆ. ಆದರೆ ನೀರಿನ ಮೇಲ್ಮೈ ಯಾವ pH ಅನ್ನು ಹೊಂದಿರುತ್ತದೆ ? ನೀರಿನ ಅಬ್ಬಿಗಳ(water falls) ಸುತ್ತ ಕಾಣುವ ಮಂಜು ಸಾಮಾನ್ಯವಾಗಿ ನೆಗೆಟಿವ್ OH ಮಿನ್ತುಣುಕುಗಳನ್ನು(ions) ಹೊಂದಿರುತ್ತವೆ. ಅಂದರೆ pH 7 ಕ್ಕಿಂತ ಹೆಚ್ಚು ಎನ್ನಬಹುದು. ಆದರೆ ಇತ್ತೀಚಿನ ಅರಕೆಗಳ ಪ್ರಕಾರ ನೀರಿನ ಮೇಲ್ಮಯ್ ಅರೆ-ಹೈಡ್ರೋಜನ್ ನಂಟನ್ನು (broken hydrogen bonds) ಹೊಂದಿರುತ್ತವೆಯಂತೆ. ಹಾಗಾಗಿ ಇವು 7 ಕ್ಕಿಂತ ಕಡಿಮೆ pH ಅನ್ನು ಹೊಂದಿರಬಹುದೆಂದು ಹೇಳಲಾಗುತ್ತಿದೆ. ಹಿಂದಿನ ಬರಹದಲ್ಲಿ ನೋಡಿದಂತೆ ಎಂಜಾಯ್ಂಗಳು, ಪ್ರೋಟೀನುಗಳು ಒಡಲಿನಲ್ಲಿ ಹರಿದಾಡುತ್ತಿರಬೇಕೆಂದರೆ ನೀರು ಮುಖ್ಯ . ಇವೆಲ್ಲವೂ ನೀರಿನ pH ಅನ್ನು ನೆಚ್ಚಿರುತ್ತವೆ. ಆದ್ದರಿಂದ ನೀರಿನ ಮೇಲ್ಮೈಯ pH ತಿಳಿವಳಿಕೆ ಮುಖ್ಯವಾದದ್ದು ಆದರೆ ಆ ತಿಳುವಳಿಕೆ ನಮಗಿನ್ನೂ ಎಟುಕಿಲ್ಲ.

ನ್ಯಾನೋ ನೀರು ಬೇರೆಯದೇ ?

ನೀರೆಂದರೆ ನಮಗೆ ತಟ್ಟನೆ ಹೊಳೆಯುವುದು ದೊಡ್ಡದಾದ ಕಡಲುಗಳು ಹರಿಯುವ ಕಾಲುವೆಗಳು. ಆದರೆ ಕಡುಚಿಕ್ಕದಾದ ಎಡೆಗಳಲ್ಲಿ ನೀರನ್ನು ಸೆರೆಹಿಡಿದಾಗ (ಅಂದರೆ ನ್ಯಾನೋ ಮೀಟರ್ ಮಟ್ಟದಲ್ಲಿ) ಅದು ಬೇರೆ ಬಗೆಯ ಗುಣಗಳನ್ನು ತೋರಬಹುದೇ? ಯಾಕೆಂದರೆ ಬರಿಯ ನ್ಯಾನೋಮೀಟರ್ ಅಗಲದಲ್ಲಿ ನೀರನ್ನು ಹಿಡಿದಿಟ್ಟಾಗ ಕೆಲವೇ ಕೆಲವು ಅಣುಕೂಟಗಳಿರುವ ಸಾಧ್ಯತೆ ಇರುತ್ತದೆ. ಹೀಗಾದಾಗ ಕ್ವಾಂಟಮ್ ಪರಿಣಾಮಗಳು(quantum effects) ಆ ಅಣುಕೂಟಗಳ ಮೇಲೆ ಬೀರಬಹುದಾದ ಕಾರಣದಿಂದ ಅದರ ಗುಣಗಳು ಮಾರ್ಪಾಟಾಗಬಹುದು ಇದರ ಬಗ್ಗೆ ಇನ್ನಷ್ಟು ಅರಕೆ ನಡೆಯಬೇಕಿದೆ.

(ಸೆಲೆ: nautil.us7-themes.com)