ಜೇನುಹುಳವು ಗೂಡನ್ನು ಕಟ್ಟುವ ಬಗೆ

ರತೀಶ ರತ್ನಾಕರ.

1024px-Natural_Beehive_and_Honeycombs

ಗಿಡದ ಟೊಂಗೆಯಲ್ಲೋ, ಮರದ ಪೊಟರೆಯಲ್ಲೋ ಇಲ್ಲವೇ ದೊಡ್ಡ ಕಟ್ಟಡದ ಮಾಳಿಗೆಯಲ್ಲೋ ನಾವು ಜೇನುಗೂಡುಗಳನ್ನು ಕಂಡಿರುತ್ತೇವೆ. ಹೀಗೆ ಸಾವಿರಾರು ಹುಳಗಳು ಸೇರಿ ಗೂಡನ್ನು ಕಟ್ಟಿ, ಸಿಹಿಯನ್ನು ಕೂಡಿಟ್ಟು ಬದುಕನ್ನು ನಡೆಸುವ ಪರಿ ಬೆರಗಿನಿಂದ ಕೂಡಿದೆ. ಇವು ಒಂದೇ ಗೂಡಿನಲ್ಲಿ ಹೆಚ್ಚುಕಾಲ ವಾಸಮಾಡದೇ ತಮ್ಮ ಗೂಡನ್ನು ಆಗಾಗ ಬದಲಿಸುತ್ತಲೇ ಇರುತ್ತವೆ. ಹೊಸ ಜಾಗವೊಂದನ್ನು ಹುಡುಕಿ, ಹೊಸ ಗೂಡೊಂದನ್ನು ಕಟ್ಟಿ ತಮ್ಮ ಬಾಳ್ವೆಯನ್ನು ಮುಂದುವರಿಸುತ್ತವೆ. ಈ ಜೇನುಹುಳಗಳು ಹೊಸ ಗೂಡನ್ನು ಹೇಗೆ ಕಟ್ಟುತ್ತವೆ, ಅದರ ವಿಶೇಷತೆಗಳೇನು ಎಂಬುದರ ಮೇಲೆ ಬೆಳಕು ಚೆಲ್ಲುವ ಪ್ರಯತ್ನವೇ ಈ ಬರಹ.

ಹಳೆಯ ಗೂಡನ್ನು ಬಿಟ್ಟು…
ಜೇನುಹುಳದ ಬಾಳ್ಮೆಸುತ್ತು ಬರಹದಲ್ಲಿ ಓದಿದ ಹಾಗೆ ಒಂದು ಗೂಡಿನಲ್ಲಿ ಹೊಸ ಒಡತಿ ಜೇನು ಹುಟ್ಟಿದರೆ, ಆಗ ಹಳೆಯ ಒಡತಿ ಜೇನುಹುಳವು ಒಂದಷ್ಟು ದುಡಿಮೆಗಾರ ಹುಳಗಳ ಜೊತೆಗೂಡಿ ಹೊಸ ಗೂಡನ್ನು ಕಟ್ಟಲು ಹೊರಡುತ್ತದೆ. ಇದಲ್ಲದೇ, ಈಗಿರುವ ಜೇನುಗೂಡಿಗೆ ಇತರ ಪ್ರಾಣಿಗಳು, ಬಿರುಗಾಳಿ ಇಲ್ಲವೇ ಜೋರಾದ ಮಳೆಯಿಂದಾಗಿ ಏನಾದರು ತೊಂದರೆಯಾದರೆ ಅವು ಇರುವ ಗೂಡನ್ನು ಬಿಡಬೇಕಾಗವುದು. ಹೀಗೆ ಗೂಡನ್ನು ಬಿಟ್ಟು ಹೋಗುವ ಕೆಲದಿನಗಳ ಮುಂಚೆ ಜೇನುಹುಳಗಳು ಕೆಲವು ಸಿದ್ಧತೆಗಳನ್ನು ಮಾಡಿಕೊಳ್ಳುತ್ತವೆ. ಅವನ್ನು ಈ ಕೆಳಗೆ ನೀಡಲಾಗಿದೆ;

1. ಮೊಟ್ಟೆಯನ್ನು ಇಡುತ್ತಿರುವ ಹಳೆಯ ಒಡತಿಯು ಹೆಚ್ಚು ದೂರ ಹಾರುವ ತಾಕತ್ತನ್ನು ಹೊಂದಿರುವುದಿಲ್ಲ, ಅದಕ್ಕಾಗಿ ಗೂಡು ಬಿಡುವ ಕೆಲವು ದಿನಗಳ ಮುಂಚೆ ದುಡಿಮೆಗಾರ ಹುಳಗಳು ಒಡತಿ ಹುಳಕ್ಕೆ ‘ಜೇನುಗಂಜಿ‘(Royal Jelly) ನೀಡುವುದನ್ನು ನಿಲ್ಲಿಸುತ್ತವೆ. ಇದರಿಂದ ಒಡತಿಯು ಮೊಟ್ಟೆ ಇಡುವುದನ್ನು ನಿಲ್ಲಿಸುತ್ತದೆ, ಇದು ಒಡತಿಗೆ ದೂರ ಹಾರಲು ನೆರವಾಗುತ್ತದೆ.
2. ಈಗಿರುವ ಗೂಡಿನ ಹತ್ತಿರದಲ್ಲೇ ಇರುವ ತಕ್ಕುದಾದ ಜಾಗವನ್ನು ‘ಬೇಹುಗಾರ’ ಹುಳಗಳು ಗುರುತಿಸಿರುತ್ತವೆ. ಗೂಡನ್ನು ಬಿಟ್ಟು ಹಾರುವ ಹುಳಗಳು ನೇರವಾಗಿ ಹೊಸ ಗೂಡು ಕಟ್ಟುವ ಜಾಗಕ್ಕೆ ಹೋಗುವುದಿಲ್ಲ, ಬದಲಾಗಿ ಬೇಹುಗಾರ ಹುಳಗಳು ಗುರುತಿಸಿದ ಜಾಗದಲ್ಲಿ ತುಸುಹೊತ್ತು ತಂಗಿರುತ್ತವೆ.

ಒಡತಿಯೊಂದಿಗೆ ಗೂಡನ್ನು ಬಿಡುವಾಗ ಹೊಟ್ಟೆ ತುಂಬಾ ಜೇನನ್ನು ಹೀರಿಕೊಂಡು ಹಾರುತ್ತವೆ. ಹೊಸ ಜಾಗವನ್ನು ತಲುಪುವವರೆಗೆ ತಮ್ಮ ಹಸಿವನ್ನು ನೀಗಿಸಿಕೊಳ್ಳಲು ಇದು ನೆರವಾಗುತ್ತದೆ. ಸುಮಾರು 1000 ದಿಂದ 10,000 ಸಾವಿರ ಹುಳಗಳು ಗೂಡುಬಿಟ್ಟು ಒಮ್ಮೆಲೆ ಹೊರ ಹೋಗಬಹುದು. ಗೂಡುಬಿಟ್ಟು ಹಾರುವ ಜೇನುಹುಳದ ಹಿಂಡು ಮೊದಲು ಬೇಹುಗಾರ ಹುಳಗಳು ಗುರುತಿಸಿದ ಹತ್ತಿರದ ಜಾಗಕ್ಕೆ ಬಂದು ತಂಗುತ್ತವೆ. ಅಲ್ಲಿಂದ ಸುಮಾರು 25-50 ಬೇಹುಗಾರ ಹುಳಗಳು ಹೊಸ ಜಾಗವನ್ನು ಅರಸುತ್ತಾ ಹೊರಡುತ್ತವೆ. ಈ ಹೊತ್ತಿನಲ್ಲಿ ಉಳಿದ ದುಡಿಮೆಗಾರ ಹುಳಗಳು ಒಡತಿಯನ್ನು ಸುತ್ತುವರೆದು ಒಡತಿಗೆ ಬೇಕಾದ ಬಿಸಿಯನ್ನು ಕಾಯ್ದುಕೊಳ್ಳುತ್ತವೆ. ಗೂಡಿನಲ್ಲಿ ಹೀರಿದ ಜೇನನ್ನು ಹೆಚ್ಚುಹೊತ್ತು ಉಳಿಸಿಕೊಳ್ಳಲು ದುಡಿಮೆಗಾರ ಹುಳಗಳು ಯಾವುದೇ ಕೆಲಸವನ್ನು ಮಾಡದೆ ಒಡತಿಯನ್ನು ಸುತ್ತುವರಿದಿರುತ್ತವೆ.

ಬೇಹುಗಾರ ಹುಳಗಳು ಕೆಲವು ಗಂಟೆ ಇಲ್ಲವೇ ಒಂದು ದಿನದೊಳಗಾಗಿ ಹೊಸ ಜಾಗದ ಮಾಹಿತಿಯನ್ನು ತರುತ್ತವೆ. ಇರುವ ಹಲವಾರು ಬೇಹುಗಾರ ಹುಳಗಳು ಬೇರೆ ಬೇರೆ ಜಾಗದ ಮಾಹಿತಿಯನ್ನು ತಂದಿರುತ್ತವೆ. ಆ ಹುಳಗಳು ಹೊಸ ಜಾಗದ ಮಾಹಿತಿಯನ್ನು ‘ಜೇನುಹುಳದ ಕುಣಿತ‘ದ ಮೂಲಕ ಇತರೆ ಬೇಹುಗಾರ ಹುಳಗಳಿಗೆ ತಿಳಿಸುತ್ತವೆ. ಒಂದು ಬೇಹುಗಾರ ಹುಳವು ತಾನು ಕಂಡುಬಂದ ಜಾಗವು, ಗೂಡುಕಟ್ಟಲು ತುಂಬಾ ಚೆನ್ನಾಗಿದೆ ಎಂದು ತಿಳಿಸಲು ಹೆಚ್ಚು ಹುರುಪಿನಿಂದ ಕುಣಿತವನ್ನು ಹಾಕುತ್ತದೆ. ಉಳಿದ ಬೇಹುಗಾರ ಹುಳಗಳು ಬೇಕಾದರೆ ಒಮ್ಮೆ ಆ ಜಾಗವನ್ನು ಹೋಗಿ ನೋಡಿಕೊಂಡು ಬರುತ್ತವೆ. ಕೊನೆಗೆ, ಹೆಚ್ಚು ಬೇಹುಗಾರ ಹುಳಗಳಿಗೆ ಒಪ್ಪಿತವಾಗುವ ಜಾಗಕ್ಕೆ ಎಲ್ಲಾ ಹುಳಗಳು ಪ್ರಯಾಣ ಮಾಡುತ್ತವೆ. ಹೀಗೆ ಹಿಂಡು ಹಿಂಡಾಗಿ ಸಾಗಿ ಹೊಸ ಗೂಡನ್ನು ಕಟ್ಟುವ ಬಗೆಗೆ ‘ಜೇನುಹುಳದ ಬಿಡಯ‘ (Swarming) ಎಂದು ಕರೆಯುತ್ತಾರೆ.

ಜೇನುಗೂಡು:
ಜೇನುಹುಳಗಳು ಗೂಡನ್ನು ಕಟ್ಟಲು ಹೊರಗಿನ ಪ್ರಾಣಿಗಳಿಂದ ಹೆಚ್ಚು ತೊಂದರೆಗಳಿಲ್ಲದ ಮತ್ತು ವಾಸಕ್ಕೆ ಬೇಕಾದ ಬಿಸುಪು (temperature) ಇರುವ ಜಾಗವನ್ನು ಆರಿಸಿಕೊಳ್ಳುತ್ತವೆ. ಹೊಸ ಗೂಡನ್ನು ಕಟ್ಟುವ ಜಾಗವನ್ನು ತಲುಪಿದೊಡನೆ ದುಡಿಮೆಗಾರ ಹುಳಗಳು ಗೂಡು ಕಟ್ಟುವ ಕೆಲಸವನ್ನು ಮೊದಲು ಮಾಡುತ್ತವೆ. ಜೇನುಗೂಡನ್ನು ‘ಜೇನುಮೇಣ’ದಿಂದ ಕಟ್ಟಲಾಗುತ್ತದೆ. ಆರ‍್ಮೂಲೆಯ (hexagon) ಆಕಾರದಲ್ಲಿರುವ ಚಿಕ್ಕಚಿಕ್ಕ ಕೋಣೆಗಳು (Cells) ಸೇರಿ ಒಂದು ಜೇನುಗೂಡಾಗಿರುತ್ತದೆ. ಒಂದು ಗೂಡಿನಲ್ಲಿ ಸುಮಾರು 1 ಲಕ್ಶದವರೆಗೆ ಕೋಣೆಗಳಿರುತ್ತವೆ. ಇದಕ್ಕಾಗಿ ಸುಮಾರು 1 ರಿಂದ 1.5 ಕೆ.ಜಿ. ಗಳಷ್ಟು ಜೇನುಮೇಣವು ಬೇಕಾಗುತ್ತದೆ. ಜೇನುಗೂಡಿನ ಮೇಲ್ಬಾಗದ ಕೋಣೆಗಳಲ್ಲಿ ಸಿಹಿ, ನಡುಭಾಗದಲ್ಲಿ ಮೊಟ್ಟೆ ಹಾಗು ಗೂಡುಹುಳಗಳು ಮತ್ತು ಕೆಳಭಾಗದ ಕೋಣೆಗಳಲ್ಲಿ ಗಂಡು ಜೇನುಹುಳಗಳಿರುತ್ತವೆ. ಒಡತಿ ಹುಳಕ್ಕಾಗಿ ಗೂಡಿನ ಕೆಳಭಾಗದಲ್ಲಿ ಒಂದು ವಿಶೇಷ ಕೋಣೆಯಿರುತ್ತದೆ.

ಜೇನುಗೂಡು ಕಟ್ಟುವ ಬಗೆ:
ಜೇನುಗೂಡನ್ನು ಕಟ್ಟಲು ಬೇಕಾದ ಜೇನುಮೇಣವು ಹೇಗೆ ಸಿಗುತ್ತದೆ ಎಂಬುದನ್ನು ಮೊದಲು ನೋಡೋಣ; ದುಡಿಮೆಗಾರ ಹುಳಗಳು ಸುಮಾರು 6 ವಾರಗಳಷ್ಟು ಮಾತ್ರ ಬದುಕುತ್ತವೆ. ತಮ್ಮ 10-16 ನೇ ದಿನದ ವಯಸ್ಸಿನಲ್ಲಿದ್ದಾಗ ಇವುಗಳ ಹೊಟ್ಟೆಯ ಭಾಗದಲ್ಲಿರುವ ಮೇಣದ ಸುರಿಗೆ(Wax gland)ಯಿಂದ ಮೇಣವು ಒಸರುತ್ತದೆ(secrete). ಹೀಗೆ ಒಸರಿದ ಮೇಣವು ಹೊಟ್ಟೆಯ ಹೊರಭಾಗದಲ್ಲಿರುವ ಹೊಟ್ಟೆಯ ತಟ್ಟೆಗಳ (Abdominal plates) ಸುತ್ತಲೂ ಅಂಟಿಕೊಂಡು ಚಿಕ್ಕ ಹಲ್ಲೆಗಳ ರೂಪದಲ್ಲಿ ಇರುತ್ತದೆ. ಮೇಣವು ಅಂಟಿರುವ ಹೊಟ್ಟೆಯ ತಟ್ಟೆಗಳನ್ನು ಕೆಳಗೆ ನೀಡಿರುವ ಚಿತ್ರದಲ್ಲಿ ನೋಡಬಹುದು.

Wax and mandible

ಹೀಗಿರುವ ಮೇಣವನ್ನು ಜೇನುಹುಳಗಳು ತಮ್ಮ ಹಿಂಗಾಲುಗಳ ನೆರವಿನಿಂದ ಕೆರೆದು ಕೆಳದವಡೆಗಳಿಗೆ ಸಾಗಿಸುತ್ತವೆ. ಕೆಳದವಡೆಗಳ ನೆರವಿನಿಂದ ಮೇಣವನ್ನು ಚೆನ್ನಾಗಿ ಜಗಿದು ತಮಗೆ ಬೇಕಾದ ಹಾಗೆ ಬಾಗುವಂತೆ ಮೆತ್ತಗೆ ಮಾಡಿಕೊಂಡು, ಗೂಡನ್ನು ಕಟ್ಟಲು ಬಳಸುತ್ತವೆ. ಸುಮಾರು ಅರ‍್ದ ಕೆ.ಜಿ. ಮೇಣಕ್ಕಾಗಿ, ಹೆಚ್ಚು-ಕಡಿಮೆ 4 ಕೆ.ಜಿ ಜೇನನ್ನು ದುಡಿಮೆಗಾರ ಹುಳವು ತಿನ್ನಬೇಕಾಗುತ್ತದೆ. ಹಾಗಾಗಿ, ಜೇನುಹುಳಗಳ ಮಟ್ಟಿಗೆ ಈ ಮೇಣವು ತುಂಬಾ ಬೆಲೆಬಾಳುವಂತದ್ದು. ಮೇಣದಿಂದ ಕಟ್ಟುವ ಜೇನುಗೂಡಿನ ಹಲ್ಲೆಯನ್ನು ಜೇನುಹಲ್ಲೆ ಇಲ್ಲವೇ ಜೇನುಹುಟ್ಟು (honeycomb) ಎಂದು ಕರೆಯುತ್ತಾರೆ.

ಜೇನುಮೇಣದ ವಿವರ:
– ತಿರುಳಿನ ಅಡಕದ ಬರೆಹ: C15 H31 CO2 C30 H61
– ನೀರಿನಲ್ಲಿ ಇದು ಕರಗುವುದಿಲ್ಲ.
– ಸುಮಾರು 18 ಡಿಗ್ರಿ ಸೆಲ್ಶಿಯಸ್ ನಲ್ಲಿ ಗರಗಾಗಿ (brittle) ಬಿರುಕು ಬಿರುಕಾಗುವ ಗುಣಹೊಂದಿದೆ.
– ಸುಮಾರು 35- 40 ಡಿಗ್ರಿ ಸೆಲ್ಶಿಯಸ್ ನಲ್ಲಿ ಮೆದುವಾಗಿ ಮೇಣದಂತಿರುತ್ತದೆ.
– 65 ಡಿಗ್ರಿ ಸೆಲ್ಶಿಯಸ್ ನಲ್ಲಿ ಇದು ಕರಗುತ್ತದೆ.
– ಯಾವ ಕಾಲಕ್ಕೂ ಇದು ಹದಗೆಡುವುದಿಲ್ಲ. ಹಲವು ಪಳೆಯುಳಿಕೆಗಳಲ್ಲಿಯೂ ಕೂಡ ಜೇನುಮೇಣ ಸಿಕ್ಕಿದೆ.

ದುಡಿಮೆಗಾರ ಹುಳಗಳು ತಮ್ಮ ಗೂಡು ಕಟ್ಟುವಿಕೆಯನ್ನು ಮೇಲಿನಿಂದ ಕೆಳಕ್ಕೆ ಮಾಡುತ್ತವೆ. ಮರದ ಪೊಟರೆ, ಟೊಂಗೆ, ಕಲ್ಲಿನ ಹಾಸು ಇಲ್ಲವೇ ಗೋಡೆಯ ಭಾಗವನ್ನು, ಗೂಡು ಕಟ್ಟಲೆಂದು ಮೊದಲು ನಿಗದಿಮಾಡಿಕೊಳ್ಳುತ್ತವೆ. ಆ ಜಾಗವನ್ನು ಎಲ್ಲಾ ದುಡಿಮೆಗಾರ ಹುಳಗಳು ಕೂಡಿ ಚೊಕ್ಕಮಾಡುತ್ತವೆ. ಮರ, ಗೋಡೆ ಇಲ್ಲವೇ ಕಲ್ಲಿನ ಯಾವ ಭಾಗಕ್ಕೆ ಗೂಡು ಅಂಟಿಕೊಳ್ಳುವುದೋ ಆ ಜಾಗದಲ್ಲಿರುವ ಕಸ-ಕಡ್ಡಿಗಳನ್ನು, ಟೊಳ್ಳಾದ ಭಾಗಗಳನ್ನು ತಮ್ಮ ಕಾಲುಗಳ ನೆರವಿನಿಂದ ಕೆಳಗೆ ಉದುರಿಸುತ್ತವೆ. ಬಳಿಕ ತಮ್ಮ ಜೇನುಮೇಣವನ್ನು ಅಂಟಿಸಿ ಒಂದೊಂದಾಗಿ ಆರ‍್ಮೂಲೆ(hexagon) ಆಕಾರದ ಕೋಣೆಗಳನ್ನು ಮೇಲಿನಿಂದ ಕೆಳಕ್ಕೆ ಹಂತ ಹಂತವಾಗಿ ಕಟ್ಟುತ್ತಾ ಬರುತ್ತವೆ. ಈ ಕೆಳಗಿನ ಚಿತ್ರದಲ್ಲಿ ಜೇನುಗೂಡನ್ನು ಬೇರೆ ಬೇರೆ ಹಂತದಲ್ಲಿ ಕಟ್ಟುವ ಬಗೆಯನ್ನು ಕಾಣಬಹುದು.

jenugoodu halle

ಆರ‍್ಮೂಲೆಯೇ ಏಕೆ?
ಜೇನುಗೂಡಿನಲ್ಲಿರುವ ಆರ‍್ಮೂಲೆಯ ಕೋಣೆಗಳ ಬಗ್ಗೆ ಅರಿಯಲು ಹಲವು ಅರಕೆಗಳೇ ನಡೆದಿವೆ. ಜೇನುಗೂಡಿನ ಹಲ್ಲೆಯನ್ನು ನೋಡಿದರೆ ಆರುಬದಿಯ ಕೋಣೆಗಳು ಒಂದರ ಹಿಂದೆ ಒಂದು ಇರುತ್ತವೆ. (ಕೆಳಗಿನ ಚಿತ್ರವನ್ನು ನೋಡಿ) ಸಾವಿರಾರು ವರುಶಗಳಿಂದ ಗೂಡುಗಳನ್ನು ಕಟ್ಟುತ್ತಾ ಬಂದಿರುವ ಜೇನುಹುಳಗಳು ಆರ‍್ಮೂಲೆಯ ಆಕಾರದಲ್ಲಿಯೇ ಏಕೆ ಕೋಣೆಗಳನ್ನು ಕಟ್ಟುತ್ತವೆ? ಇದು ಹೇಗೆ ನೆರವಾಗುತ್ತದೆ? ಇಂತಹ ಕುತೂಹಲ ಹಲವರಲ್ಲಿತ್ತು. ಅದಕ್ಕೆ ಸಿಕ್ಕ ಮರುನುಡಿಯೇ ‘ಜೇನುಹುಟ್ಟಿನ ಗೆರೆಯರಿಮೆ‘ (Geometry of Honeycomb).800px-Bienenwabe_mit_Eiern_und_Brut_5

ನಾವು ಮೊದಲೇ ತಿಳಿದಂತೆ ಜೇನುಹುಳಗಳಿಗೆ ಜೇನುಮೇಣವು ತುಂಬಾ ಬೆಲೆಬಾಳುವಂತದ್ದು. ಹಾಗಾಗಿ ಅವು ಕಡಿಮೆ ಮೇಣವನ್ನು ಬಳಸಿ ಹೆಚ್ಚು ಸಿಹಿಯನ್ನು ಕೂಡಿಡುವ ಗೂಡನ್ನು ಕಟ್ಟಬೇಕು. ಗೂಡನ್ನು ಕಟ್ಟುವಾಗ ಜೇನುಹುಳಗಳಿಗೆ ಇದೇ ಮೂಲ ಗುರಿ. ಮುಮ್ಮೂಲೆ (triangle), ನಾಲ್ಮೂಲೆ (quadrangle) ಹಾಗು ಆರ‍್ಮೂಲೆ ಆಕಾರದಲ್ಲಿರುವ ಕೋಣೆಗಳ ಆಳವು ಒಂದೇ ಆಗಿದ್ದರೆ ಅವುಗಳಲ್ಲಿ ಒಂದೇ ಅಳತೆಯ ಜೇನನ್ನು ಕೂಡಿಡಬಹುದು. ಆದರೆ ಒಂದು ಜಾಗದಲ್ಲಿ ಮುಮ್ಮೂಲೆ ಮತ್ತು ನಾಲ್ಮೂಲೆಯ ಕೋಣೆಗಳನ್ನು ಕಟ್ಟಲು ಆರ‍್ಮೂಲೆಗಿಂತ ಹೆಚ್ಚಿನ ಮೇಣ ಬೇಕಾಗುತ್ತದೆ. ಮೂಮ್ಮೂಲೆ ಮತ್ತು ನಾಲ್ಮೂಲೆಯಲ್ಲಿ ಬದಿಗಳು ದೊಡ್ಡದಾದ್ದರಿಂದ ಅವು ಹೆಚ್ಚು ಮೇಣವನ್ನು ಬಳಸಿಕೊಳ್ಳುತ್ತವೆ. ಇನ್ನು ಸುತ್ತುಗಳ ಆಕಾರದಲ್ಲಿ ಇದ್ದರೂ ಹೆಚ್ಚಿನ ಮೇಣ ಬೇಕಾಗುತ್ತದೆ. ಆದರೆ ಆರ‍್ಮೂಲೆಯ ಸುತ್ತಳತೆಯು ಉಳಿದ ಆಕಾರಗಳಿಗಿಂತ ಕಡಿಮೆ ಇದ್ದು ಉಳಿದ ಆಕಾರಗಳಷ್ಟೇ ಜೇನನ್ನು ಕೂಡಿಡಬಲ್ಲದು. ಸಾವಿರಾರು ವರುಶಗಳ ಲೆಕ್ಕಾಚಾರ ಜೇನುಹುಳಗಳನ್ನು ಈ ಆಕಾರದಲ್ಲಿ ಕೋಣೆಯನ್ನು ಕಟ್ಟುವಂತೆ ಮಾಡಿದೆ.

Jenu goodu

ಹುಳಗಳು ಮೊದಲು ಕೋಣೆಯ ತಳವನ್ನು ಕಟ್ಟತೊಡಗುತ್ತವೆ. ಒಂದು ಗೂಡಿನಲ್ಲಿ ಹೆಚ್ಚಾಗಿ ಎರೆಡು ಪದರದ ಕೋಣೆಗಳು ಒಂದರ ಹಿಂದೆ ಒಂದು ಇರುತ್ತವೆ, ಇವು ಒಂದೇ ತಳವನ್ನು ಹಂಚಿಕೊಳ್ಳುತ್ತವೆ. ಕೆಳಗಿನ ಚಿತ್ರದಲ್ಲಿ (ಅ) ತೋರಿಸಿರುವಂತೆ ಎರಡು ಬದಿಯ ಕೋಣೆಗಳಿಗೆ ಒಂದೇ ತಳವಿದೆ. ಚಿತ್ರ (ಇ) ದಲ್ಲಿ ತೋರಿಸಿರುವಂತೆ ತಳದ ಬದಿಗಳಾಗಿ 1, 2, 3 ಸರಿಬದಿಯುಳ್ಳ ನಾಲ್ಮೂಲೆಗಳನ್ನು ಮೊದಲು ಕಟ್ಟುತ್ತವೆ, ಈ ನಾಲ್ಮೂಲೆಗಳನ್ನು ಇನ್ನೊಂದು ಬದಿಯಲ್ಲಿರುವ ಕೋಣೆಗಳಿಗೂ ತಳವಾಗಿ ಬಳಸಲಾಗುತ್ತದೆ. ಹೀಗೆ, ತಳವು ಎರಡೂ ಬದಿಗೆ ಹಂಚಿಕೆಯಾಗುವುದರಿಂದ ಕಡಿಮೆ ಜೇನುಮೇಣದಿಂದ ಹೆಚ್ಚು ಕೋಣೆಗಳನ್ನು ಕಟ್ಟಬಹುದು, ಮತ್ತು ಗೂಡನ್ನು ಕಟ್ಟಲು ಬೇಕಾಗುವ ಹೊತ್ತು ಮತ್ತು ಹುರುಪನ್ನು ಕಡಿಮೆಮಾಡಬಹುದು ಎಂಬುದು ಜೇನುಹುಳಗಳ ಲೆಕ್ಕಾಚಾರ! ಬಳಿಕ ಉದ್ದದ ಬದಿಯನ್ನು ಹುಳಗಳು ಕಟ್ಟುತ್ತವೆ. ತಳವು ಮೂರು ನಾಲ್ಮೂಲೆಗಳಿಂದ ಮಾಡಿರುವುದರಿಂದ ಅದು ಹೊಂಡದಂತಾಗಿ ಆಳವು ಹೆಚ್ಚಿರುತ್ತದೆ, ಇದು ಹೆಚ್ಚು ಜೇನನ್ನು ಕೂಡಿಡಲು ನೆರವಾಗುತ್ತದೆ. ಜೇನುಹುಳದ ಆರುಕಾಲುಗಳು ಆರ‍್ಮೂಲೆಯ ಕೋಣೆಯನ್ನು ಒಂದೇ ಅಳತೆಯಲ್ಲಿ ಕಟ್ಟಲು ನೆರವಾಗುತ್ತದೆ ಎಂದು ಕೆಲವು ಅರಿಗರ ಅನಿಸಿಕೆ.

Soolugoodu

ಹೀಗೆ ಕಟ್ಟಿದ ಕೋಣೆಗಳು ಹೆಚ್ಚಾಗಿ ನೆಲಕ್ಕೆ ಒಂದೇ ತೆರಪಿನಲ್ಲಿರುತ್ತವೆ (parallel – 0 ಡಿಗ್ರಿ ಕೋನ). ಒಂದು ಹಂತದ ಗೂಡನ್ನು ಕಟ್ಟಿದ ಕೂಡಲೆ ಕೆಲವು ದುಡಿಮೆಗಾರ ಹುಳಗಳು ತಮ್ಮ ತಲೆ ಹಾಗು ಬಗ್ಗರಿಯ ಭಾಗವನ್ನು ಕೋಣೆಯ ಒಳಕ್ಕೆ ಹಾಕಿ ಸುಮಾರು 9 ರಿಂದ 14 ಡಿಗ್ರಿಗಳಷ್ಟು ಮೇಲ್ಬದಿಗೆ ಬಾಗಿಸುತ್ತವೆ. ದುಡಿಮೆಗಾರ ಹುಳಗಳ ಮೈಬಿಸಿಯಿಂದ ಮೇಣವು ಕೊಂಚ ಸಡಿಲಾಗಿ ಕೋಣೆಯು ಬಾಗುತ್ತದೆ. ಇದರಿಂದ ಕೋಣೆಯ ಬಾಯಿಯು ಮೇಲ್ಮುಕವಾಗಿ, ಕೂಡಿಟ್ಟ ಜೇನು/ಮೊಟ್ಟೆ ಸೋರಿ ನೆಲಕ್ಕೆ ಬೀಳುವುದಿಲ್ಲ.

ಕೋಣೆಗಳ ಕಟ್ಟುವಿಕೆ ಮುಗಿಯುತ್ತಿದ್ದಂತೆ ಕೆಲವು ದುಡಿಮೆಗಾರ ಹುಳಗಳು ಅದನ್ನು ಚೊಕ್ಕ ಮಾಡುತ್ತಾ ಬರುತ್ತವೆ. ಗೂಡಿನಲ್ಲಿರುವ ಸಣ್ಣ ಕಸ-ಕಡ್ಡಿಗಳನ್ನು ತೆಗೆಯುತ್ತವೆ, ಯಾವುದಾದರು ಸಣ್ಣ ಬಿರುಕಿದ್ದರೆ ಅದನ್ನು ಮರದಂಟಿನಿಂದ (propolis) ಇವು ಮುಚ್ಚುತ್ತವೆ. ಈ ಮರದಂಟನ್ನು ಗಿಡ ಇಲ್ಲವೇ ಮರದ ಮೇಣ ಮತ್ತು ಜೇನುಮೇಣವನ್ನು ಕೂಡಿಸಿ ಮಾಡಿರುತ್ತವೆ. ಇದಕ್ಕೆ ಬ್ಯಾಕ್ಟೀರಿಯಗಳನ್ನು ಕೊಲ್ಲುವ ತಾಕತ್ತಿರುತ್ತದೆ, ಅಲ್ಲದೇ ಜೇನುಮೇಣಕ್ಕಿಂತ ಹೆಚ್ಚು ಅಂಟುವ ಮೇಣವಾಗಿರುತ್ತದೆ. ಈ ಮೇಣವನ್ನು ಬಳಸಿ ಗೂಡುಗಳ ಬಿರುಕು ಮತ್ತು ಗೋಡೆಗಳ ಏರು-ತಗ್ಗುಗಳನ್ನು ಮುಚ್ಚುವುದರಿಂದ ಕೋಣೆಗಳಿಗೆ ನೀರು ಸೋರುವುದು ಮತ್ತು ಸಿಹಿಯನ್ನು ಹಾಳುಗೆಡುವ ‘ಸೀರುಸಿರಿ‘ಗಳ (micro organisms) ಬೆಳವಣಿಗೆ ನಿಲ್ಲುತ್ತದೆ.

ಇಶ್ಟೆಲ್ಲಾ ಕಷ್ಟಪಟ್ಟು ಕಟ್ಟುವ ಗೂಡನ್ನು ಕಾಪಾಡಿಕೊಳ್ಳಲು ಜೇನುಹುಳಗಳು ಸಾಕಷ್ಟು ಕೆಲಸ ಮಾಡುತ್ತವೆ. ಜೇನುಮೇಣವನ್ನು ಹಾಳುಮಾಡುವ ಕೀಟಗಳನ್ನು ಮತ್ತು ಜೇನನ್ನು ತಿನ್ನಲು ಬರುವ ಇರುವೆಗಳಿಗೆ ಅವಕಾಶ ಮಾಡಿಕೊಡುವುದಿಲ್ಲ. ಹಲವು ದುಡಿಮೆಗಾರ ಹುಳಗಳಿಗೆ ಇವುಗಳಿಂದ ಗೂಡನ್ನು ಕಾಪಾಡುವುದೇ ಕೆಲಸವಾಗಿರುತ್ತದೆ. ಇದಲ್ಲದೇ ಗೂಡಿನ ಬಿಸುಪನ್ನು ಯಾವಾಗಲು 35 ಡಿಗ್ರಿ ಸೆಲ್ಶಿಯಸ್ ಆಸುಪಾಸಿನಲ್ಲಿ ಕಾದುಕೊಳ್ಳಬೇಕು, ಗೂಡಿನ ತೇವಾಂಶ (humidity)ವನ್ನು ಮತ್ತು ಗಾಳಿಯ ಹರಿದಾಟವನ್ನು ಕೂಡ ಕಾದುಕೊಳ್ಳಬೇಕಾಗುತ್ತದೆ. ಇಲ್ಲದಿದ್ದರೆ ಗೂಡಿನಲ್ಲಿರುವ ಮೊಟ್ಟೆ, ಮರಿಹುಳ, ಗೂಡುಹುಳದ ಬೆಳವಣಿಗೆಗೆ ತೊಂದರೆಯಾಗುತ್ತದೆ ಮತ್ತು ಕೂಡಿಟ್ಟಿರುವ ಜೇನು ಕೆಡುವ ಸಾದ್ಯತೆ ಇರುತ್ತದೆ.

ಚಳಿಗಾಲ ಇಲ್ಲವೇ ಮಳೆಗಾಲದಲ್ಲಿ ಹೊರಗಿನ ಬಿಸುಪು ಕಡಿಮೆಯಿರುತ್ತದೆ ಆಗ ಗೂಡಿನ ಬಿಸುಪು 35 ಡಿಗ್ರಿಗಿಂತ ಕೆಳಗಿಳಿಯುತ್ತದೆ, ಆಗ ಹುಳಗಳು ಗೂಡನ್ನು ಸುತ್ತುವರಿದು ಗೊಂಚಲ ಹಾಗೆ ಆಗುತ್ತವೆ, ಜೊತೆಗೆ ತಮ್ಮ ಹಾರುವ ಕಂಡಗಳನ್ನು (flight muscles) ಜೋರಾಗಿ ಅಲುಗಾಡಿಸುತ್ತವೆ. ಇದರಿಂದ ಹುಳದ ಮೈಬಿಸಿ ಹೆಚ್ಚಿ ಅದು ಗೂಡಿನ ಒಟ್ಟಾರೆ ಬಿಸುಪನ್ನು ಏರಿಸಲು ನೆರವಾಗುತ್ತದೆ. ಇನ್ನು, ಬೇಸಿಗೆಯ ಕಾಲದಲ್ಲಿ ಹೊರಗಿನ ಬಿಸುಪಿನಿಂದ ಗೂಡಿನ ಬಿಸುಪು ಹೆಚ್ಚಾಗುತ್ತದೆ ಆಗ ಹುಳಗಳು ತಮ್ಮ ರಕ್ಕೆಯನ್ನು ಬೀಸಣಿಗೆಯಂತೆ ಬಡಿದು ಗಾಳಿಯನ್ನು ಬೀಸಿ ಗೂಡಿನ ಬಿಸುಪನ್ನು ಕಡಿಮೆಗೊಳಿಸುತ್ತವೆ.

ಗೂಡಿನಲ್ಲಿರುವ ಜೇನಿನ ಗುಣಮಟ್ಟವನ್ನು ಕಾಯ್ದುಕೊಳ್ಳಲು ತೇವಾಂಶ, ಬಿಸುಪು ಮತ್ತು ಗಾಳಿಯ ಹರಿದಾಟದ ಜೊತೆಗೆ ಹೊರಗಿನ ಕೀಟಗಳು ಗೂಡಿಗೆ ಲಗ್ಗೆ ಹಾಕದಂತೆ ನೋಡಿಕೊಳ್ಳುತ್ತವೆ, ಗೂಡಿನ ಒಳಗೇ ಸೀರುಸಿರಿಗಳು, ಬ್ಯಾಕ್ಟೀರಿಯಗಳು ಬೆಳೆಯದಂತೆ ತಡೆಯಲು ಮರದಂಟನ್ನು (propolis) ಬಳಸುತ್ತವೆ. ಹಾಗೇನಾದರು ಇವುಗಳ ಬೆಳವಣಿಗೆ ಕಂಡು ಬಂದರೆ ಮರದಂಟಿನಿಂದ ಆ ಜಾಗವನ್ನು ಮುಚ್ಚುತ್ತವೆ. ಗೂಡಿನಲ್ಲಿ ಸತ್ತಿರುವ ಜೇನುಹುಳ, ಮರಿಹುಳ, ಗೂಡುಹುಳ ಮತ್ತು ಹಾಳಾದ ಮೊಟ್ಟೆಗಳನ್ನು ಗೂಡಿನಿಂದ ಹೊರಹಾಕುತ್ತವೆ. ಹೀಗೆ ತಮ್ಮ ಹೊಟ್ಟೆಗೆ ಬೇಕಾದ ಜೇನನ್ನು ಕಾಪಾಡಿಕೊಂಡು ಬದುಕನ್ನು ನಡೆಸಲು ಜೇನುಹುಳಗಳು ಗೂಡನ್ನು ಕಟ್ಟಿಕೊಂಡು ಬಾಳುತ್ತವೆ.

(ಮಾಹಿತಿ ಸೆಲೆ: westmtnapairy.cominsect.tamu.eduiflscience.com)

ಜೇನುಹುಳದ ಕುಣಿತ

ರತೀಶ ರತ್ನಾಕರ.

“ಧಾರವಾಡದ ಅಂಗಡಿಯಲ್ಲಿ ಹಾಲಿನ ಪೇಡ ತುಂಬಾ ಚೆನ್ನಾಗಿರುತ್ತೆ.” “ಬೆಂಗಳೂರಿನ ತಿಂಡಿ ಬೀದಿಯಲ್ಲಿ ಬಗೆಬಗೆಯ ತಿನಿಸು ಸಿಗುತ್ತೆ…” – ನಮಗೆ ಬೇಕಾದ ಊಟ-ತಿಂಡಿಗಳ ಬಗ್ಗೆ ಮತ್ತೊಬ್ಬರಿಗೆ ತಿಳಿಸುವಾಗ ನಾವು ಹೇಗೆಲ್ಲಾ ಮಾತನಾಡಿ ತಿಳಿಸುತ್ತೇವೆ ಅಲ್ಲವೇ? ಯಾವ ಯಾವ ಊರಿನಲ್ಲಿ, ಕೇರಿಯಲ್ಲಿ, ಅಂಗಡಿಯಲ್ಲಿ ಯಾವ ತಿನಿಸುಗಳು ಎಲ್ಲಿ ಸಿಗುತ್ತವೆ ಎಂದು ಸರಿಯಾದ ವಿಳಾಸದೊಂದಿಗೆ ನಮ್ಮ ಮಾತಿನ ಮೂಲಕವೋ ಬರಹದ ಮೂಲಕವೋ ಇನ್ನೊಬ್ಬರಿಗೆ ತಿಳಿಸುತ್ತೇವೆ. ನಮ್ಮ ಮಾತಿನದ್ದೇನೋ ಸರಿ, ಆದರೆ ಯಾವುದೋ ಹೂವಿನ ತೋಟದಲ್ಲಿ ಸಿಗುವ ಹೂ ಜೇನಿನ ದಾರಿಯನ್ನು ಒಂದು ಜೇನುಹುಳವು ಮತ್ತೊಂದು ಹುಳಕ್ಕೆ ಹೇಗೆ ತಿಳಿಸಬಹುದು? ಜೇನುಹುಳಗಳು ಒಂದಕ್ಕೊಂದು ಮಾತನಾಡುತ್ತವೆಯೇ? ಅವುಗಳ ನುಡಿ ಯಾವುದು? ಬನ್ನಿ, ಈ ಪ್ರಶ್ನೆಗಳಿಗೆ ಮರುನುಡಿ ಹುಡುಕುವ ಪ್ರಯತ್ನ ಮಾಡೋಣ.

ಜೇನುಹುಳಗಳ ಮೇವು ಎಂದರೆ ಅದು ಹೂವಿನ ಬಂಡು (pollen), ಜೇನು (nectar) ಹಾಗು ನೀರು. ಹೂವಿನ ಬಂಡು ಮತ್ತು ಜೇನನ್ನು ಅವು ಹೂವುಗಳಿಂದಲೇ ಹುಡುಕಿ ತರಬೇಕು. ಹಿಂದಿನ ಬರಹದಲ್ಲಿ ತಿಳಿದಂತೆ ಒಂದು ಜೇನುಗೂಡಿನಲ್ಲಿ ಸವಿಯಾದ ಜೇನನ್ನು ಕೂಡಿಡುವ ಕೆಲಸ ದುಡಿಮೆಗಾರ ಹುಳಗಳದ್ದಾಗಿರುತ್ತದೆ. ಈ ದುಡಿಮೆಗಾರ ಹುಳಗಳಲ್ಲಿ ಸುಮಾರು 5-25% ಹುಳಗಳು ಬೇಹುಗಾರ(scouts) ಹುಳಗಳಾಗಿರುತ್ತವೆ. ಅಂದರೆ, ಮೇವಿಗಾಗಿ ಸುತ್ತಮುತ್ತಲಿನ ಜಾಗದಲ್ಲಿ ಹುಡುಕಾಟವನ್ನು ನಡೆಸಿ, ಸೊಂಪಾಗಿ ಹೂವುಗಳು ಸಿಗುವ ಜಾಗವನ್ನು ಕಂಡುಹಿಡಿದು, ಗೂಡಿಗೆ ಹಿಂತಿರುಗಿ ಉಳಿದ ದುಡಿಮೆಗಾರ ಜೇನುಹುಳಗಳಿಗೆ ಹೂವುಗಳಿರುವ ಜಾಗವನ್ನು ತಿಳಿಸುವುದು ಈ ಬೇಹುಗಾರ ಹುಳಗಳ ಕೆಲಸವಾಗಿರುತ್ತದೆ.

ಹಾಗಾದರೆ ಈ ಬೇಹುಗಾರ ಹುಳಗಳು ಉಳಿದ ಜೇನುಹುಳಗಳಿಗೆ ಹೂವು ಸಿಗುವ ಜಾಗವನ್ನು ಹೇಗೆ ತಿಳಿಸುತ್ತವೆ? ಜೇನುಗೂಡಿನಿಂದ ಹೂವುಗಳು ಎಷ್ಟು ದೂರದಲ್ಲಿವೆ ಮತ್ತು ಯಾವ ದಿಕ್ಕಿನಲ್ಲಿವೆ ಎಂಬ ವಿವರವನ್ನು ಹೇಗೆ ತೋರಿಸುತ್ತವೆ? ಈ ಎಲ್ಲಾ ಕುತೂಹಲಗಳಿಗೆ ಮರುನುಡಿಯೇ ‘ಜೇನುಹುಳದ ಕುಣಿತ‘! ಹೌದು, ಬೇಹುಗಾರ ಜೇನುಹುಳಗಳು ಉಳಿದ ಜೇನುಹುಳಗಳಿಗೆ ಸೊಂಪಾಗಿ ಸಿಗುವ ಮೇವಿನ ಜಾಗದ ವಿವರವನ್ನು ಕುಣಿತದ ಮೂಲಕ ತಿಳಿಸುತ್ತವೆ. ಇದನ್ನೇ ಜೇನುಹುಳದ ಕುಣಿತ ಎನ್ನಲಾಗುತ್ತದೆ.

ಜೇನುಹುಳಗಳು ಹೇಗೆ ಮಾತನಾಡಿಕೊಳ್ಳುತ್ತವೆ ಎನ್ನುವುದನ್ನು ಅರಿಯಲು ಸಾಕಷ್ಟು ಅರಕೆಗಳನ್ನು ಮಾಡಲಾಗಿದೆ. ಬೇಹುಗಾರ ಜೇನುಹುಳಗಳು ಮೇವಿನ ಜಾಗವನ್ನು ಹುಡುಕಾಡಿ, ಅಲ್ಲಿರುವ ಹೂವಿನ ಬಂಡು ಮತ್ತು ಜೇನನ್ನು ಹೊತ್ತುಕೊಂಡು ಗೂಡಿಗೆ ಹಿಂತಿರುಗುತ್ತವೆ. ಬೇಹುಗಾರ ಜೇನುಹುಳವು ತಂದ ಬಂಡಿನ ನರುಗಂಪಿನ (odor) ಜಾಡನ್ನು ಹಿಡಿದು ಉಳಿದ ದುಡಿಮೆಗಾರ ಹುಳಗಳು ಮೇವಿನ ಜಾಗವನ್ನು ಕಂಡುಹಿಡಿಯುತ್ತವೆ ಎಂದು ಈ ಮೊದಲು ನಂಬಲಾಗಿತ್ತು. ಬಳಿಕ ನಡೆದ ಹೆಚ್ಚಿನ ಅರಕೆಗಳಲ್ಲಿ ಜೇನುಹುಳದ ಕುಣಿತವು ಬೆಳಕಿಗೆ ಬಂದಿತು. ಜರ್ಮನಿಯ ಅರಕೆಗಾರ ಕಾರ‍್ಲ್ ವೊನ್ ಪ್ರಿಸ್ಕ್ ಅರಕೆಯನ್ನು ನಡೆಸಿ, ಜೇನುಹುಳದ ಕುಣಿತವನ್ನು ಪರಿಚಯಿಸಿದರು, ಅದಕ್ಕಾಗಿ ಅವರು ನೊಬೆಲ್ ಪ್ರಶಸ್ತಿಯನ್ನು ಕೂಡ ಪಡೆದರು.

ಏನಿದು ಜೇನುಹುಳದ ಕುಣಿತ?
ಮೇವನ್ನು ಅರಸಿ ಗೂಡಿನಿಂದ ಹೊರಹೋದ ಬೇಹುಗಾರ ಹುಳಗಳು ಗೂಡಿನ ಯಾವುದೋ ದಿಕ್ಕಿನಲ್ಲಿರುವ, ಎಷ್ಟೋ ದೂರದಲ್ಲಿರುವ ಹೂಗಳ ರಾಶಿಯನ್ನು ಹುಡುಕುತ್ತವೆ. ಆ ಹೂವಿನಿಂದ ಸಾಕಷ್ಟು ಜೇನನ್ನು ಹೀರಿ, ಹೂವಿನ ಬಂಡನ್ನು ಕೂಡ ತೆಗೆದುಕೊಂಡು ಜೇನುಗೂಡಿಗೆ ಮರಳುತ್ತವೆ. ಜೇನುಗೂಡಿನಲ್ಲಿರುವ ಉಳಿದ ದುಡಿಮೆಗಾರ ಹುಳಗಳಿಗೆ ತಾನು ಕಂಡ ಮೇವಿನ ಜಾಗವನ್ನು ತಿಳಿಸಲು ಅದು ಗೂಡಿನ ಪಕ್ಕದಲ್ಲಿ ಕುಣಿತವನ್ನು ಮಾಡುತ್ತದೆ. ಈ ಕುಣಿತವು ಮೇವು ಸಿಗುವ ದೂರ ಮತ್ತು ದಿಕ್ಕನ್ನು ತಿಳಿಸುತ್ತದೆ! ಅದು ಹೇಗೆ ಎಂದು ಈಗ ನೋಡೋಣ.

ಮೇವು ಸಿಗುವ ದೂರ:
ಮೇವು ಜೇನುಗೂಡಿನಿಂದ 50 ಮೀಟರ್ ಗಿಂತ ಕಡಿಮೆ ದೂರದಲ್ಲಿದ್ದರೆ, ಬೇಹುಗಾರ ಹುಳವು ‘ಸುತ್ತು ಕುಣಿತ’ವನ್ನು (round dance) ಹಾಕುತ್ತದೆ. (ಕೆಳಗಿನ ಚಿತ್ರ ವನ್ನು ನೋಡಿ). ಹುಳವು ಒಂದು ಬಾರಿ ಇಲ್ಲವೇ ಗೂಡಿನ ಸುತ್ತಲೂ ಹಲವು ಬಾರಿ ಸುತ್ತು ಕುಣಿತವನ್ನು ಹಾಕಿ, ಮೇವಿನ ಜಾಗದ ಬಗ್ಗೆ ಮಾಹಿತಿಯನ್ನು ನೀಡುವುದು. ಸುತ್ತು ಕುಣಿತವನ್ನು ಹಾಕಿದ ಮೇಲೆ, ತಾನು ಹೊತ್ತು ತಂದ ಹೂವಿನ ಬಂಡು ಮತ್ತು ಜೇನನ್ನು ಗೂಡಿನಲ್ಲಿರುವ ಮತ್ತೊಂದು ಜೇನಿಗೆ ಸಾಗಿಸಿ, ಮತ್ತೊಂದು ಕಡೆ ಮೇವನ್ನು ಹುಡುಕಲು ಹೋಗುತ್ತದೆ. ಸುತ್ತು ಕುಣಿತವು ಕೇವಲ ದೂರವನ್ನು ತಿಳಿಸುತ್ತದೆ, ಗೂಡಿನಿಂದ ಕೇವಲ 50 ಮೀ ದೂರದಲ್ಲಿ ಇರುವುದರಿಂದ ದಿಕ್ಕನ್ನು ತಿಳಿಸುವ ಅವಶ್ಯಕತೆ ಇಲ್ಲ. ಸುತ್ತು ಕುಣಿತವನ್ನು ನೋಡಿದ ಉಳಿದ ದುಡಿಮೆಗಾರ ಹುಳಗಳು, ಹತ್ತಿರದಲ್ಲೇ ಹೂವು ಇದೆ ಎಂದು ಅರಿತು, ಹೂವಿನ ಕಂಪಿನ ಜಾಡನ್ನು ಹಿಡಿದು ಮೇವನ್ನು ತರಲು ಹೋರಡುತ್ತವೆ.

ಒಂದು ವೇಳೆ ಮೇವು ಸಿಗುವ ಜಾಗವು 50 ರಿಂದ 150 ಮೀಟರ್ ದೂರದಲ್ಲಿ ಇದ್ದರೆ ಆಗ ಬೇಹುಗಾರ ಹುಳವು ‘ಕುಡುಗೋಲು ಕುಣಿತ‘ವನ್ನು(sickle dance) ಹಾಕುತ್ತದೆ. ಹೆಸರೇ ಹೇಳುವಂತೆ ಕುಡುಗೋಲಿನ ಆಕಾರದಲ್ಲಿ ಹುಳವು ಓಡಾಡಿ ಮೇವಿನ ಜಾಗದ ಬಗ್ಗೆ ತಿಳಿಸುತ್ತದೆ. ಕುಡುಗೋಲು ಕುಣಿತವು ಕೂಡ ಕೇವಲ ದೂರವನ್ನು ತಿಳಿಸುತ್ತದೆಯೇ ಹೊರತು ದಿಕ್ಕನ್ನಲ್ಲ.

ಇನ್ನು 150 ಮೀ. ಗಿಂತ ದೂರದಲ್ಲಿರುವ ಮೇವಿನ ಮಾಹಿತಿಯನ್ನು ತಿಳಿಸಲು ಬೇಹುಗಾರ ಹುಳವು ‘ಓಲಾಟದ ಕುಣಿತ‘ವನ್ನು (waggle dance) ಮಾಡುತ್ತದೆ. ಈ ಓಲಾಟದ ಕುಣಿತವು ದೂರ ಮತ್ತು ದಿಕ್ಕು ಎರಡನ್ನೂ ತಿಳಿಸುತ್ತದೆ. ಓಲಾಟದ ಕುಣಿತಕ್ಕೆ ಚಿತ್ರ 2 ನ್ನು ನೋಡಿ. ಓಲಾಟದ ಕುಣಿತದಲ್ಲಿ ಬೇಹುಗಾರ ಹುಳವು ಒಂದಷ್ಟು ದೂರ ನೇರವಾಗಿ ಹಾರುತ್ತದೆ, ಬಳಿಕ ಬಲ/ಎಡಕ್ಕೆ ಅರೆಸುತ್ತನ್ನು ಹಾಕಿ ಹಾರಾಟವನ್ನು ಶುರುಮಾಡಿದ ಜಾಗಕ್ಕೆ ಬಂದು ತಲುಪುತ್ತದೆ, ಮತ್ತೆ ಮೊದಲು ಓಡಿದ ನೇರದಾರಿಯಲ್ಲೇ ಹಾರಿ, ತಿರುಗಿ ಎಡ/ಬಲಕ್ಕೆ ಅರೆಸುತ್ತನ್ನು ಹಾಕಿ ಹಾರಾಟವನ್ನು ಶುರುಮಾಡಿದ ಜಾಗಕ್ಕೆ ಬರುತ್ತದೆ. ಈ ಕುಣಿತದಲ್ಲಿ ಹುಳವು ನೇರದಾರಿಯಲ್ಲಿ ಹಾರುವಾಗ ತನ್ನ ಹೊಟ್ಟೆಯ ಭಾಗವನ್ನುಅಲ್ಲಾಡಿಸಿಕೊಂಡು ಇಲ್ಲವೇ ಓಲಾಡಿಸಿಕೊಂಡು ಹಾರುತ್ತದೆ, ಇದು ಬಾಲವನ್ನು ಅಲ್ಲಾಡಿಸಿದಂತೆ ಕಾಣಿಸುತ್ತದೆ. ಆದ್ದರಿಂದ ಇದನ್ನು ಓಲಾಟದ ಕುಣಿತ ಎನ್ನುತ್ತಾರೆ. ಅಲ್ಲದೇ ನೇರದಾರಿಯಲ್ಲಿ ಹಾರುವಾಗ ‘ಜುಂಯ್’ ಎಂಬ ಸದ್ದನ್ನು ಕೂಡ ಮಾಡಿ ಹಾರುತ್ತದೆ.

ಓಲಾಟದ ಕುಣಿತದಲ್ಲಿ ನೇರದಾರಿಯನ್ನು ಸಾಗಲು ಹುಳವು ಎಷ್ಟು ಹೊತ್ತು ತೆಗೆದುಕೊಳ್ಳುತ್ತದೆ ಎಂಬುದರ ಮೇಲೆ ಮೇವು ಸಿಗುವ ದೂರವನ್ನು ಲೆಕ್ಕಹಾಕಲಾಗುತ್ತದೆ. ನೇರದಾರಿಯಲ್ಲಿ ಕಡಿಮೆ ಹೊತ್ತು ಹಾರಿದರೆ ಮೇವಿನ ಜಾಗವು ಕಡಿಮೆ ದೂರವೆಂದು, ಹೆಚ್ಚು ಹೊತ್ತು ಹಾರಿದರೆ ಹೆಚ್ಚು ದೂರವೆಂದು ತಿಳಿಯಲಾಗುತ್ತದೆ. ಉದಾಹರಣೆಗೆ, ನೇರದಾರಿಯಲ್ಲಿ 2 ಸೆಕೆಂಡ್ ಹಾರಿದರೆ ಮೇವಿನ ದೂರ 2000 ಮೀ. ಇದೆ ಎಂದು, 4 ಸೆಕೆಂಡ್ ಹಾರಿದರೆ ಸುಮಾರು 4400 ಮೀ. ದೂರದಲ್ಲಿ ಮೇವು ಇದೆ ಎಂದು ಅಂದಾಜಿಸಲಾಗುತ್ತದೆ. ಇದಲ್ಲದೇ, ನೇರದಾರಿಯಲ್ಲಿ ಹಾರುವಾಗ ಮಾಡುವ ಓಲಾಟದ ಉರುಬು (tempo) ಮತ್ತು ಎಷ್ಟು ಹೊತ್ತು ‘ಜಂಯ್’ ಎಂದು ಮಾಡುವ ಸದ್ದು ಮಾಡುವುದು ಎಂಬುದನ್ನು ಕೂಡ ಲೆಕ್ಕಕ್ಕೆ ತೆಗೆದುಕೊಂಡು, ಮೇವು ಇರುವ ದೂರವನ್ನು ದುಡಿಮೆಗಾರ ಹುಳಗಳು ಕಂಡುಕೊಳ್ಳುತ್ತವೆ.

ಹೀಗೆ ಮೇವಿನ ದೂರವನ್ನು ಓಲಾಟದ ಕುಣಿತದಲ್ಲಿ ಲೆಕ್ಕಹಾಕಲಾಗುತ್ತದೆ. ಮೇವಿನ ದೂರ ಮತ್ತು ನೇರದಾರಿಯಲ್ಲಿ ಹಾರುವ ಹೊತ್ತಿನ ನಡುವೆ ಇರುವ ನಂಟನ್ನು ಈ ಕೆಳಗಿನ ಚಿತ್ರದಲ್ಲಿ ಕಾಣಬಹುದು.

ಮೇವು ಇರುವ ದಿಕ್ಕು ಮತ್ತು ಓಲಾಟದ ಕುಣಿತ:

ಓಲಾಟದ ಕುಣಿತದಲ್ಲಿ ಮೇವು ಇರುವ ದಿಕ್ಕು ಕಂಡುಹಿಡಿಯುವುದನ್ನು ನೋಡಿದರೆ, ಜೇನುಹುಳಗಳು ಲೆಕ್ಕದಲ್ಲಿ ಎತ್ತಿದ ಕೈ ಎನ್ನಬಹುದು. ಓಲಾಟದ ಕುಣಿತದ ನೇರದಾರಿಯಲ್ಲಿ ಜೇನುಹುಳವು ಯಾವ ದಿಕ್ಕಿನಲ್ಲಿ ಹಾರುತ್ತದೆ, ಜೇನುಗೂಡಿಗೆ ಯಾವ ಕೋನದಲ್ಲಿ ಹಾರುತ್ತಿದೆ ಮತ್ತು ನೇಸರನು ಯಾವ ದಿಕ್ಕಿನಲ್ಲಿ ಇದ್ದಾನೆ ಎಂಬುದರ ಮೇಲೆ ದಿಕ್ಕನ್ನು ಕಂಡುಕೊಳ್ಳಲಾಗುತ್ತದೆ. ಇದನ್ನು ಸುಳುವಾಗಿ ತಿಳಿಸಲು ಈ ಕೆಳಗಿನ ಚಿತ್ರವನ್ನು ನೋಡಿ.

– ಮೇವು ಸಿಗುವ ಜಾಗವು ನೇಸರನು ಇರುವ ದಿಕ್ಕಿನ ಕಡೆ ಇದ್ದರೆ, ಕುಣಿತದ ನೇರದಾರಿಯು ಗೂಡಿಗೆ ಒಂದೇ ತೆರಪಿನಲ್ಲಿ (parallel) ಇರುತ್ತದೆ (ಅಂದರೆ 0 ಡಿಗ್ರಿ ಕೋನ) ಮತ್ತು ನೇರದಾರಿಯ ದಿಕ್ಕು ಗೂಡಿನ ಮೇಲ್ಮುಖವಾಗಿ ಇರುತ್ತದೆ.

– ಮೇವು ಸಿಗುವ ಜಾಗವು ನೇಸರನ ಎದುರು ದಿಕ್ಕಿನಲ್ಲಿ ಇದ್ದರೆ, ಕುಣಿತದ ನೇರದಾರಿಯು ಗೂಡಿಗೆ ಒಂದೇ ತೆರಪಿನಲ್ಲಿ ಇರುತ್ತದೆ ಆದರೆ ಹಾರಾಟದ ದಿಕ್ಕು ಗೂಡಿನ ಕೆಳಮುಖವಾಗಿ ಇರುತ್ತದೆ.

– ಒಂದು ವೇಳೆ ಮೇವು ಸಿಗುವ ಜಾಗವು ನೇಸರನಿಂದ ಬಲಕ್ಕೆ ಸುಮಾರು 30 ಡಿಗ್ರಿ ಕೋನದಲ್ಲಿ ಇದ್ದರೆ. ಕುಣಿತದ ನೇರದಾರಿಯ ಕೋನವು ಗೂಡಿನಿಂದ 30 ಡಿಗ್ರಿ ಬಲಕ್ಕೆ ಬಾಗಿರುತ್ತದೆ.

– ಹಾಗೆಯೇ ಮೇವು ನೇಸರನಿಂದ ಎಡಕ್ಕೆ 90 ಡಿಗ್ರಿಯಲ್ಲಿ ಇದ್ದರೆ ಕುಣಿತದ ನೇರದಾರಿಯ ಕೋನವು ಗೂಡಿಗೆ 90 ಡಿಗ್ರಿಯಲ್ಲಿ ಬಲಕ್ಕೆ ಬಾಗಿರುತ್ತದೆ.

ಈ ಓಲಾಟದ ಕುಣಿತವು ನೇಸರನ ಜಾಗದ ಮೇಲೆ ಹೆಚ್ಚು ನೆಚ್ಚಿಕೊಂಡಿರುತ್ತದೆ. ಉದಾಹರಣೆಗೆ, ಬೇಹುಗಾರ ಹುಳವು ಮೂಡಣ ದಿಕ್ಕಿನಲ್ಲಿರುವ ಮೇವಿನ ಬಗ್ಗೆ ಉಳಿದ ಹುಳಗಳಿಗೆ ತಿಳಿಸಬೇಕಿದೆ ಎಂದಿಟ್ಟುಕೊಳ್ಳೋಣ. ಒಂದು ವೇಳೆ ಬೆಳಗಿನ ಹೊತ್ತು ಆ ದಿಕ್ಕನ್ನು ತಿಳಿಸಬೇಕೆಂದರೆ ಬೇಹುಗಾರ ಹುಳವು ತನ್ನ ಕುಣಿತದ ನೇರದಾರಿಯಲ್ಲಿ ಮೇಲ್ಮುಖವಾಗಿ ಸಾಗಬೇಕು, ಏಕೆಂದರೆ ನೇಸರ ಮತ್ತು ಮೇವು ಒಂದೇ ದಿಕ್ಕಿನಲ್ಲಿವೆ. ಅದೇ ಮೂಡಣ ದಿಕ್ಕಿನಲ್ಲಿರುವ ಮೇವಿನ ಬಗ್ಗೆ ಸಂಜೆಯ ಹೊತ್ತು ತಿಳಿಸಬೇಕೆಂದರೆ ಹುಳವು ಕುಣಿತದ ನೇರದಾರಿಯಲ್ಲಿ ಕೆಳಮುಖವಾಗಿ ಸಾಗಬೇಕು. ಏಕೆಂದರೆ ನೇಸರನು ಈಗ ಪಡುವಣ ದಿಕ್ಕಿನಲ್ಲಿ ಇದ್ದಾನೆ ಮತ್ತು ಮೇವು ನೇಸರನ ಎದುರು ದಿಕ್ಕಿನಲ್ಲಿದೆ.

ಇದು ಬೇಹುಗಾರ ಹುಳಗಳು ತಮ್ಮದೇ ಆದ ಕುಣಿತದ ಮೂಲಕ ಗೂಡಿನ ಉಳಿದ ಹುಳಗಳಿಗೆ ಮೇವು ಸಿಗುವ ದೂರ ಮತ್ತು ದಿಕ್ಕನ್ನು ತಿಳಿಸುವ ಬಗೆ. ಈ ಕುಣಿತವಷ್ಟೆ ಅಲ್ಲದೆ ಬೇಹುಗಾರ ಹುಳಗಳು ಹೊತ್ತು ತರುವ ಹೂವಿನ ಬಂಡು ಮತ್ತು ಜೇನಿನ ನರುಗಂಪಿನ ನೆರವನ್ನು ಪಡೆದುಕೊಂಡು, ದುಡಿಮೆಗಾರ ಹುಳಗಳು ಹೂವು ಸಿಗುವ ಜಾಗವನ್ನು ಕಂಡುಹಿಡಿಯುತ್ತವೆ. ಬಳಿಕ ಗೂಡಿಗೆ ಬೇಕಾದ ಜೇನನ್ನು ಹೊತ್ತು ತಂದು ಕೂಡಿಕೊಳ್ಳುತ್ತವೆ.

ಹೆಚ್ಚಿನ ಮಾಹಿತಿಗಾಗಿ ಯೂಟ್ಯೂಬಿನಲ್ಲಿರುವ ಕೆಲವು ವೀಡಿಯೊಗಳು:

(ಮಾಹಿತಿ ಮತ್ತು ಚಿತ್ರ ಸೆಲೆ: cals.ncsuusers.rcn.comwestmtnapairypinterest.com)

ಜೇನುಹುಳದ ಬಾಳ್ಮೆಸುತ್ತು

ರತೀಶ ರತ್ನಾಕರ.

ಸಿಹಿಯಾದ ಜೇನನ್ನು ನೀಡುವ ಜೇನುಹುಳುಗಳ ಹುಟ್ಟು ಮತ್ತು ಬೆಳವಣಿಗೆಯು ಹಲವು ಕುತೂಹಲಕಾರಿ ಅಂಶಗಳನ್ನು ಒಳಗೊಂಡಿದೆ. ಪುಟ್ಟಗೂಡಿನಲ್ಲಿ ದೊಡ್ಡ ಸಂಸಾರವನ್ನು ನಡೆಸಿಕೊಂಡು ಹೋಗುವ ಈ ಕೀಟಗಳ ಬದುಕಿನ ಬಗೆಯಲ್ಲಿ ಸಾಕಷ್ಟು ಹಲತನವಿದೆ. ಒಂದು ಜೇನಿನ ಗೂಡಿನಲ್ಲಿ ಒಡತಿ, ಗಂಡು ಜೇನು ಮತ್ತು ದುಡಿಮೆಗಾರ ಜೇನುಹುಳಗಳೆಂಬ ಮೂರು ಬಗೆಯ ಹುಳಗಳಿರುತ್ತವೆ. ಎಲ್ಲಾ ಜೇನುಹುಳಗಳು ಮೊಟ್ಟೆ, ಮರಿಹುಳ (larvae), ಗೂಡುಹುಳ (pupa) ಮತ್ತು ಜೇನುಹುಳವೆಂಬ ನಾಲ್ಕು ಹಂತಗಳಲ್ಲಿ ಜೇನುಗೂಡಿನಲ್ಲಿ ಬದುಕು ನಡೆಸುತ್ತಿರುತ್ತವೆ.

ಜೇನುಹುಳದ ಬಾಳ್ಮೆಸುತ್ತು (Life cycle):

ಜೇನುಗೂಡಿನಲ್ಲಿ ಸಾಕಷ್ಟು ಹೆಣ್ಣು ಜೇನುಹುಳಗಳಿದ್ದರೂ ಒಡತಿ ಜೇನುಹುಳವು ಮಾತ್ರ ಎರುಬುಳ್ಳ (fertile) ಹುಳವಾಗಿದೆ. ಒಡತಿ ಜೇನು ಮಾತ್ರ ಮೊಟ್ಟೆಗಳನ್ನಿಡುವ ಕಸುವನ್ನು ಹೊಂದಿದೆ. ಜೇನುಹುಳು ಎರಡು ಬಗೆಯ ಮೊಟ್ಟೆಯಿಂದ ಹುಟ್ಟಬಹುದು;
1) ಹೆಣ್ಣು ಗಂಡಿನೊಡನೆ ಕೂಡುವಿಕೆಯ ಬಳಿಕ ಇಟ್ಟ ಮೊಟ್ಟೆ 2) ಹೆಣ್ಣು ಗಂಡಿನೊಂದಿಗೆ ಕೂಡದೆಯೇ ಇಟ್ಟ ಮೊಟ್ಟೆ
ಮೊದಲ ಬಗೆಯಲ್ಲಿ ಹುಟ್ಟಿದ ಜೇನುಹುಳುಗಳು ಯಾವಾಗಲೂ ಹೆಣ್ಣು ಜೇನುಗಳಾಗಿರುತ್ತವೆ ಅದೇ ಎರಡನೇ ಬಗೆಯಲ್ಲಿ ಹುಟ್ಟಿದ ಜೇನುಹುಳುಗಳು ಗಂಡಾಗಿರುತ್ತವೆ; ಒಡತಿ ಹುಳವು ಗಂಡು ಹುಳದೊಡನೆ ಕೂಡಿದಾಗ ಅದರ ಗಂಡು ಬಿತ್ತುಗಳನ್ನು ಪಡೆದು ತನ್ನಲ್ಲಿ ಅಡಗಿಸಿಟ್ಟುಕೊಳ್ಳುತ್ತದೆ. ಯಾವಾಗ ಹೆಣ್ಣು ಜೇನುಹುಳುಗಳನ್ನು ಹುಟ್ಟಿಸಬೇಕು ಮತ್ತು ಯಾವಾಗ ಗಂಡು ಜೇನುಗಳನ್ನು ಅನ್ನುವುದನ್ನು ಒಡತಿ ಜೇನು ತೀರ್ಮಾನಿಸುತ್ತದೆ. ಹೆಣ್ಣು ಜೇನುಹುಳುಗಳು ಬೇಕೆಂದಾಗ ಒಡತಿ ಜೇನು ತನ್ನಲ್ಲಿ ಕೂಡಿಟ್ಟುಕೊಂಡಿರುವ ಗಂಡುಬಿತ್ತುಗಳನ್ನು(sperm) ತನ್ನ ಮೊಟ್ಟೆಯೊಡನೆ ಬೆರಸಿ ಹೆಣ್ಣು ಜೇನುಹುಳುಗಳನ್ನು ಹುಟ್ಟಿಸುತ್ತದೆ. ಒಡತಿ ಜೇನು ಗಂಡು ಜೇನುಹುಳಗಳನ್ನು ಹುಟ್ಟಿಸಬೇಕೆಂದಾಗ ಗಂಡುಬಿತ್ತುಗಳೊಂದಿಗೆ ಬೆರಸದೆಯೇ ಬರೀ ಮೊಟ್ಟೆಗಳನ್ನು ಇಡುತ್ತದೆ!

ಒಡತಿ ಜೇನುಹುಳವು ಗೂಡಿನಲ್ಲಿ ಮೊಟ್ಟೆಗಳನಿಟ್ಟ ಮೂರು ದಿನಗಳ ಬಳಿಕ ಮೊಟ್ಟೆಯೊಡೆದು ಮರಿಹುಳು(larvae) ಹೊರಗಡೆ ಬರುತ್ತದೆ. ಈ ಮರಿಹುಳಗಳಿಗೆ ದುಡಿಮೆಗಾರ ಜೇನುಹುಳಗಳು ಬೇಕಾದ ಊಟವನ್ನು ಒದಗಿಸುತ್ತವೆ. ಮರಿಹುಳಗಳಿಗೆ ಒದಗಿಸುವ ಊಟವು ‘ಜೇನುಗಂಜಿ‘ (Royal jelly) ಮತ್ತು ಜೇನುರೊಟ್ಟಿ (Bee Bread) ಆಗಿರುತ್ತದೆ. ಹೆಚ್ಚು ಮುನ್ನುಗಳಿರುವ (protein) ಹೂವಿನ ಬಂಡು (pollen), ಜೇನುತುಪ್ಪ ಮತ್ತು ಜೇನುಹುಳಗಳೇ ಹೊರಹಾಕುವ ದೊಳೆ(enzyme)ಗಳನ್ನು ಸೇರಿಸಿ ಜೇನುಗಂಜಿಯನ್ನು ಈ ದುಡಿಮೆಗಾರ ಹುಳಗಳು ಅಣಿಮಾಡುತ್ತವೆ. ಜೇನುರೊಟ್ಟಿ ಎಂಬುದನ್ನು ಜೇನುತುಪ್ಪ ಮತ್ತು ಹೂವಿನ ಬಂಡನ್ನು ಸೇರಿಸಿ ಹುಳಗಳು ತಯಾರಿಸಿರುತ್ತವೆ.

ಹೀಗೆ ದುಡಿಮೆಗಾರ ಹುಳಗಳಿಂದ ಆರೈಕೆ ಮಾಡಿಸಿಕೊಂಡ ಮರಿಹುಳಗಳು ಬೆಳೆಯುತ್ತಿದ್ದಂತೆ, ಅವುಗಳ ಗೂಡುಗಳನ್ನು ದುಡಿಮೆಗಾರ ಹುಳಗಳು ಮೇಲಿನಿಂದ ಮೇಣವನ್ನು ಬಳಸಿ ಮುಚ್ಚುತ್ತವೆ, ಇದು ಮರಿಹುಳಗಳನ್ನು ಹೊರಗಿನ ತೊಂದರೆಗಳಿಂದ ಕಾಪಾಡುತ್ತದೆ ಮತ್ತು ಅವುಗಳ ಬೆಳವಣಿಗೆಗೆ ಬೇಕಾದ ಬಿಸುಪನ್ನು ಕಾದುಕೊಳ್ಳುತ್ತದೆ. ಮುಚ್ಚಿದ ಗೂಡಿನೊಳಗಿರುವ ಮರಿಹುಳ ಮತ್ತಷ್ಟು ಬೆಳೆದು ಗೂಡುಹುಳದಹಂತಕ್ಕೆ ಹೋಗುತ್ತದೆ. ಬಳಿಕ ಗೂಡುಹುಳದಿಂದ ಜೇನುಹುಳ ಹೊರಗೆ ಬರುತ್ತದೆ. ಇದು ಗೂಡಿನ ಮುಚ್ಚನ್ನು ಒಡೆದು ಹೊರಬಂದು ಉಳಿದ ಹುಳಗಳೊಡನೆ ಬೆರೆತು ಬೆಳೆಯುತ್ತದೆ.

ಮೊಟ್ಟೆಯಿಂದ ಒಡತಿ, ಗಂಡುಹುಳ ಮತ್ತು ದುಡಿಮೆಗಾರ ಹುಳಗಳು ಆಗುವ ಬಗೆಯನ್ನು ಈ ಕೆಳಗಿನ ಚಿತ್ರದಲ್ಲಿ ಕಾಣಬಹುದು:

ಒಡತಿ ಜೇನುಹುಳ:

ದುಡಿಮೆಗಾರ ಜೇನುಹುಳಗಳು ಯಾವ ಮರಿಹುಳವು ಒಡತಿ ಜೇನುಹುಳವಾಗಬೇಕೆಂದು ಆರಿಸುತ್ತವೆ. ಹಾಗಾಗಿ, ಒಡತಿಯಾಗುವ ಆ ಮರಿಹುಳಕ್ಕೆ ಹೆಚ್ಚು ಜೇನುಗಂಜಿಯನ್ನು ಒದಗಿಸುತ್ತವೆ. ತನ್ನ ಮರಿಹುಳದ ಹಂತದ ಕೊನೆಯವರೆಗೂ ಒಡತಿಯು ಊಟವನ್ನು ಪಡೆಯುತ್ತದೆ. ಇದು ಒಡತಿಯ ಹೆರುವ ಅಂಗಗಳು ಮತ್ತು ಸುರಿಗೆ(hormone)ಗಳ ಬೆಳವಣಿಗೆಗೆ ನೆರವಾಗುತ್ತದೆ. ಒಡತಿಯು ದುಡಿಮೆಗಾರ ಹುಳಕ್ಕಿಂತ ಒಂದೂವರೆ ಪಟ್ಟು ದೊಡ್ಡದಿರುತ್ತದೆ. ತನ್ನ ಬಾಳಿನುದ್ದಕ್ಕೂ ಇದು ಜೇನುಗಂಜಿಯನ್ನು ತಿಂದೇ ಬದುಕುತ್ತದೆ.

ಮೊಟ್ಟೆಯೊಡೆದು ಹೊರಬರುವ ಹೊಸ ಒಡತಿ ಹುಳವು ಮೊದಲು ಮಾಡುವ ಕೆಲಸವೆಂದರೆ, ಉಳಿದ ಗೂಡುಗಳಿಗೆ ಹೋಗಿ ಅಲ್ಲಿ ಯಾವುದಾದರು ಒಡತಿಯಾಗುತ್ತಿರುವ ಗೂಡುಹುಳವಿದ್ದರೆ ಅದಕ್ಕೆ ತನ್ನ ಕೊಂಡಿಯಿಂದ ನಂಜನ್ನು ಚುಚ್ಚಿ ಸಾಯಿಸುವುದು. ಬಳಿಕ ಜೇನುಗೂಡಿನ ತುಂಬೆಲ್ಲಾ ಓಡಾಡಿ ಆಗುತ್ತಿರುವ ಕೆಲಸವನ್ನು ಗಮನಿಸುತ್ತದೆ. ಈ ಹೊಸ ಒಡತಿ ಹುಳವನ್ನು ಒಮ್ಮೆಲೆ ಒಡತಿ ಹುಳವೆಂದು ಉಳಿದ ದುಡಿಮೆಗಾರ ಹುಳಗಳು ಒಪ್ಪಿಕ್ಕೊಳ್ಳುವುದಿಲ್ಲ. ಒಡತಿ ಎಂದು ಹೇಳಿ ತಿರುಗುತ್ತಿರುವ ಈ ಹುಳವು ಗೂಡಿನಿಂದ ಹೊರಬಂದ ಎರಡು ಮೂರು ವಾರಗಳಲ್ಲಿ ಗಂಡು ಜೇನುಹುಳದ ಜೊತೆ ಒಂದಾಗಿ ಮೊಟ್ಟೆಗಳನ್ನಿಡುವ ಸುಳಿವನ್ನು ನೀಡಬೇಕು. ಆಗ ಮಾತ್ರ ಇದನ್ನು ಒಡತಿ ಎಂದು ಎಲ್ಲರು ಒಪ್ಪಿಕೊಳ್ಳುತ್ತಾರೆ, ಇಲ್ಲವಾದರೆ ದುಡಿಮೆಗಾರ ಹುಳಗಳು ಈ ಒಡತಿಯ ಸಾಯಿಸಿಯೋ, ಓಡಿಸಿಯೋ ಇನ್ನೊಂದು ಒಡತಿ ಹುಳವನ್ನು ನೇಮಿಸುತ್ತವೆ.

ಗೂಡಿನಿಂದ ಹೊರಬಂದ ಆರನೇ ದಿನಕ್ಕೆ ಒಡತಿ ಹುಳವು ಮೈನೆರೆದು ಗಂಡು ಹುಳದೊಡನೆ ಒಂದಾಗಲು ಸಿದ್ಧವಾಗಿರುತ್ತದೆ. ಮೊದಲು ಗೂಡಿನ ಸುತ್ತಲು ಅದು ತನ್ನ ಹಾರಾಟವನ್ನು ಆರಂಬಿಸುತ್ತದೆ. ಗೂಡಿನ ಸುತ್ತ ಹಾರಾಡುವುದರಿಂದ ಅದರ ಕಂಡಗಳು ಬಲಗೊಳ್ಳುತ್ತವೆ. ಕಂಡಗಳು ಬಲಗೊಳ್ಳುವುದರಿಂದ ಹೆಚ್ಚು ಗಂಡು ಹುಳಗಳ ಜೊತೆ ಒಂದಾಗಲು ಸಾಧ್ಯವಾಗುತ್ತದೆ, ಹಾಗಾಗಿ ಹೆಚ್ಚು ಗಂಡುಬಿತ್ತುಗಳನ್ನು (sperms) ಪಡೆದುಕೊಳ್ಳಲು ನೆರವಾಗುತ್ತದೆ. ಇದರಿಂದ ಒಡತಿ ಜೇನುಹುಳದ ಹುಟ್ಟಿಸುವಿಕೆಯ ಕಸುವು ಹೆಚ್ಚುತ್ತದೆ. ಇದು ಎರಡು ವಾರಗಳಲ್ಲಿ ಗಂಡು ಹುಳಗಳ ಜೊತೆ ಒಂದಾಗಿ ಮೊಟ್ಟೆಗಳನ್ನು ಇಡುವ ಸೂಚನೆ ಕೊಡಬೇಕು, ಇಲ್ಲವಾದರೆ ಅದು ಬೇಟದ (sexual) ಹರೆಯ ದಾಟಿದೆ ಎಂದು ಬೇರೆ ಒಡತಿಯನ್ನು ನೇಮಿಸಲಾಗುತ್ತದೆ.

ಒಂದು ಒಡತಿ ಹುಳವು ತನ್ನ ಹರೆಯದಲ್ಲಿ ಸುಮಾರು 40 ಗಂಡು ಹುಳಗಳ ಜೊತೆ ಒಂದಾಗುತ್ತವೆ. ತಾನು ಮೊಟ್ಟೆಯಿಡಲು ಶುರುಮಾಡಿದರೆ ದಿನಕ್ಕೆ 2000 ದ ತನಕ ಮೊಟ್ಟೆಗಳನ್ನಿಡುತ್ತವೆ. ಒಂದು ಒಡತಿ ಹುಳವು ಸುಮಾರು 5 ವರುಶಗಳವರೆಗೆ ಬದುಕಬಲ್ಲದು, ಆದರೆ ವಯಸ್ಸಾದಂತೆ ಅದರೆ ಮೊಟ್ಟೆಗಳನ್ನಿಡುವ ಕಸುವು ಕಡಿಮೆಯಾಗುತ್ತದೆ. ಆಗ ಗೂಡಿನ ಹುಳಗಳು ಅದನ್ನು ಬದಲು ಮಾಡಬಹುದು. ಅಲ್ಲದೇ, ಗಾಳಿಪಾಡು (weather) ಮತ್ತು ಹೊರಗಿನ ತೊಂದರೆಗಳಿಂದಲೂ ಇದು ತನ್ನ ಮೊಟ್ಟೆಯಿಡುವ ಕಸುವನ್ನು ಕಳೆದುಕೊಂಡು ಒಡತಿಯ ಜಾಗದಿಂದ ಕೆಳಗಿಳಿಯಬಹುದು. ಹೊಸ ಒಡತಿಯೊಂದು ಗೂಡಿನಲ್ಲಿ ಬೆಳೆಯುವಾಗ ಈಗಾಗಲೇ ಇರುವ ಒಡತಿ ಏನಾಗುತ್ತದೆ ಎಂಬ ಪ್ರಶ್ನೆ ನಮ್ಮಲ್ಲಿ ಮೂಡುತ್ತದೆ. ಈಗಾಗಲೇ ಗೂಡಿನಲ್ಲಿರುವ ಒಡತಿ ತನ್ನ ಮೊಟ್ಟೆಯಿಡುವ ಕಸುವನ್ನು ಚೆನ್ನಾಗಿರಿಸಿಕೊಂಡಿದ್ದರೆ ಅದು ಕೆಲವು ದುಡಿಮೆಗಾರ ಹುಳಗಳ ಒಡನೆ ಇನ್ನೊಂದು ಜಾಗಕ್ಕೆ ಹಾರಿಹೋಗುತ್ತದೆ, ಅಲ್ಲಿ ಮತ್ತೊಂದು ಜೇನುಗೂಡು ಹುಟ್ಟುತ್ತದೆ.

ಒಡತಿ, ಗಂಡು ಮತ್ತು ದುಡಿಮೆಗಾರ ಹುಳಗಳ ಬೆಳವಣಿಗೆಯ ದಿನದ ಹಂತಗಳನ್ನು ಈ ಕೆಳಗಿನ ಪಟ್ಟಿಯಲ್ಲಿ ನೋಡಬಹುದು.

ಗಂಡು ಜೇನುಹುಳ:

ನಾವು ಮೊದಲೇ ತಿಳಿದಂತೆ ಒಡತಿ ಹುಳವು ಗಂಡು ಹುಳದ ಜೊತೆ ಒಂದಾಗದೆ, ಬಸಿರಿಲ್ಲದೆಯೂ ಕೂಡ ಮೊಟ್ಟೆಗಳನ್ನು ಇಡಬಲ್ಲದು. ಇಂತಹ ಬಸಿರಿಲ್ಲದೆ ಇಟ್ಟ ಮೊಟ್ಟೆಗಳಿಂದ ಮೂಡಿದ ಹುಳಗಳೇ ಗಂಡುಹುಳಗಳು. ಮೊಟ್ಟೆಯೊಡೆದ ಹದಿನಾರು ದಿನಗಳಿಗೆ ಗಂಡು ಹುಳವು ಮೈನೆರೆಯುತ್ತದೆ. ಜೇನುಗೂಡಿನ ಸುತ್ತ ಹಾರಾಡುತ್ತ ಒಡತಿ ಜೇನುಹುಳವನ್ನು ಕಂಡು ಒಂದಾಗುವುದು ಇದರ ಕೆಲಸವಾಗಿರುತ್ತದೆ.

ಈ ಗಂಡುಹುಳದ ಮುಕ್ಯ ಕೆಲಸವೇ ಒಡತಿ ಹುಳದ ಜೊತೆ ಒಂದಾಗಿ ಜೇನು ಹುಳದ ಸಂತತಿಯನ್ನು ಬೆಳೆಸುವುದು, ಈ ಕೆಲಸಕ್ಕಾಗಿ ಅದಕ್ಕೆ ದಕ್ಕುವ ಬಹುಮಾನ ಎಂದರೆ ಸಾವು! ಹೌದು, ಒಂದು ಗಂಡು ಜೇನುಹುಳವು, ಒಮ್ಮೆ ಒಡತಿ ಜೇನಿನ ಜೊತೆ ಒಂದಾದ ಕೂಡಲೆ ಅದರ ಬೇಟದ ಅಂಗವು (sexual organ) ಕಿತ್ತು ಒಡತಿ ಹುಳದೊಳಗೆ ಉಳಿಯುತ್ತದೆ. ಇದರಿಂದ ಗಂಡು ಹುಳವು ಸಾವನ್ನಪ್ಪುತ್ತದೆ ಮತ್ತು ಒಡತಿ ಹುಳವು 100% ಗಂಡುಬಿತ್ತನ್ನು (Sperm) ಪಡೆದು ತನ್ನಲ್ಲಿಟ್ಟುಕೊಳ್ಳುತ್ತದೆ. ಗಂಡು ಹುಳಗಳು ಗೂಡಿನಲ್ಲಿ ಯಾವುದೇ ಹೆಚ್ಚಿನ ಕೆಲಸ ಮಾಡುವುದಿಲ್ಲ. ಚಳಿಗಾಲದಲ್ಲಿ ರಕ್ಕೆಯನ್ನು ಬಡಿದು ಗೂಡಿನ ಬಿಸುಪನ್ನು ಕಾಯ್ದುಕೊಳ್ಳಲು ಇವು ನೆರವು ನೀಡುತ್ತವೆ ಅದನ್ನು ಬಿಟ್ಟರೆ ಗೂಡುಕಟ್ಟುವುದಾಗಲಿ, ಮೇವು ತರುವುದಾಗಲಿ ಇನ್ನಿತರ ಯಾವ ಕೆಲಸವನ್ನು ಮಾಡುವುದಿಲ್ಲ. ಗಂಡುಹುಳಗಳು ಒಡತಿಯ ಜೊತೆ ಒಂದಾದಾಗ ಸಾಯುತ್ತವೆ, ಇಲ್ಲವೇ ಹಸಿವಿನಿಂದ, ಹೊರಗಿನ ದಾಳಿಯಿಂದ ಸಾಯುತ್ತವೆ.

ದುಡಿಮೆಗಾರ ಹುಳಗಳು:
ಒಡತಿಯು ಗಂಡು ಹುಳಗಳ ಜೊತೆ ಒಂದಾಗಿ ಬಸಿರಾಗಿ ಇಡುವ ಮೊಟ್ಟೆಗಳಿಂದ ಮೂಡಿಬರುವ ಹುಳಗಳೇ ದುಡಿಮೆಗಾರ ಹುಳಗಳು. ಈ ಬಗೆಯಲ್ಲಿ ಹುಟ್ಟುವ ದುಡಿಮೆಗಾರ ಹುಳಗಳು ಹೆಣ್ಣು ಹುಳಗಳೇ ಆಗಿರುತ್ತವೆ. ಒಡತಿ ಮತ್ತು ಗಂಡುಹುಳಕ್ಕಿಂತ ಚಿಕ್ಕದಾಗಿ ಕಾಣುವ ಇವು ಗೂಡನ್ನು ಕಟ್ಟುವುದು, ಮೊಟ್ಟೆಗಳ ಆರೈಕೆ, ಒಡತಿಯ ಆರೈಕೆ, ಗೂಡಿನ ಆರೈಕೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಹೂವಿಂದ ಹೂವಿಗೆ ಹಾರಿ ಜೇನನ್ನು ತುಂಬಿಕೊಂಡು ಬಂದು ಕೂಡಿಡುವುದು. ಅದಕ್ಕಾಗಿ ಇವು ನಿಜವಾದ ದುಡಿಮೆಗಾರ ಹುಳಗಳು.

ಗೂಡಿನ ಎಲ್ಲಾ ಕೆಲಸಗಳನ್ನು ನೋಡಿಕೊಂಡು ಎಣಿಕೆಯಲ್ಲಿಯೂ ಕೂಡ ಹೆಚ್ಚಿರುವ ಈ ದುಡಿಮೆಗಾರ ಹುಳಗಳನ್ನು, ‘ಜೇನುಗೂಡಿನ ಬೆನ್ನೆಲುಬು’ ಎಂದು ಕರೆಯುತ್ತಾರೆ. ಚಳಿಗಾಲದಲ್ಲಿ ಹೆಚ್ಚಾಗಿ ಗೂಡಿನಲ್ಲೇ ಇರುವ ದುಡಿಮೆಗಾರ ಹುಳಗಳು ರಕ್ಕೆಯನ್ನು ಬಡಿದು ಗೂಡಿನ ಬಿಸುಪನ್ನು ಕಾಪಾಡುತ್ತವೆ. ಮೇವಿಗಾಗಿ ಹೆಚ್ಚು ಹಾರಾಟ ನಡೆಸದೇ ಹೋದಲ್ಲಿ ಇವುಗಳು 4-5 ತಿಂಗಳು ಬದುಕುತ್ತವೆ. ಆದರೆ ಮೇವಿಗಾಗಿ ಹೂವಿಂದ ಹೂವಿಗೆ ಹೆಚ್ಚು ತಿರುಗಾಟ ಮಾಡುತ್ತಿದ್ದರೆ ಕೇವಲ 1-2 ತಿಂಗಳು ಮಾತ್ರ ಬದುಕುತ್ತವೆ.
ಹೀಗೆ ಒಡತಿ, ಗಂಡು ಮತ್ತು ದುಡಿಮೆಗಾರ ಹುಳಗಳು ತಮ್ಮ ಕೆಲಸಗಳನ್ನು ನಡೆಸುತ್ತ, ಒಂದಕ್ಕೊಂದು ನೆರವಾಗಿ ಜೇನುಗೂಡಿನಲ್ಲಿ ಸಂಸಾರ ನಡೆಸುತ್ತಿರುತ್ತವೆ.

(ಮಾಹಿತಿ ಮತ್ತು ಚಿತ್ರಸೆಲೆ: theholyhabibee.comgetbuzzingaboutbees.com)

ಕಾಫಿಗಿಡ ನೆಡುವುದು ಮತ್ತು ಆರಯ್ಕೆ

ರತೀಶ ರತ್ನಾಕರ.

ಹಿಂದಿನ ಬರಹಗಳಲ್ಲಿ ಕಾಫಿ ಬೀಜದ ಬಿತ್ತನೆ ಮತ್ತು ಪಾತಿಯ ಬುಟ್ಟಿಗಳಲ್ಲಿ ಕಾಫಿ ಗಿಡದ ಬೆಳವಣಿಗೆಯ ಕುರಿತು ತಿಳಿದುಕೊಂಡೆವು. ಬುಟ್ಟಿಯಲ್ಲಿರುವ ಕಾಫಿ ಗಿಡಗಳನ್ನು ತೋಟದ ಜಾಗದಲ್ಲಿ ನೆಡುವುದು ಮುಂದಿನ ಕೆಲಸವಾಗಿರುತ್ತದೆ. ಈ ಕೆಲಸದ ಕುರಿತು ಈ ಬರಹದಲ್ಲಿ ಅರಿಯೋಣ.

ತೋಟಕ್ಕೆಂದು ಜಾಗದ ಆಯ್ಕೆ:
ಕಾಫಿ ಬೆಳೆಯಲು ಬೇಕಾದ ಗಾಳಿಪಾಡು ಮತ್ತು ಜಾಗದ ಗುಣದ ವಿವರವನ್ನು ಕೂಡ ಕಾಫಿಯ ಹುಟ್ಟು ಮತ್ತು ಹರವು ಬರಹದಲ್ಲಿ ತಿಳಿದಿದ್ದೇವೆ. ಕಾಫಿಗೆ ಇಳಿಜಾರಿನ, ತಂಪಿರುವ ಹಾಗು ಸಾಕಷ್ಟು ಮಳೆಯಾಗುವ ಜಾಗವು ಬೇಕಾಗುತ್ತದೆ. ತೋಟದ ಮಣ್ಣು ಸಾಕಷ್ಟು ಫಲವತ್ತತೆಯಿಂದ ಕೂಡಿರಬೇಕು. ಕಾಫಿಯ ಬೆಳವಣಿಗೆ ಚೆನ್ನಾಗಿರಲು ಮಣ್ಣಿನ ಹುಳಿಯಳತೆಯು (pH) 6.1 ಇರಬೇಕು. ಗಿಡಗಳ ಬೆಳವಣಿಗೆಗೆ ಬೇಕಾಗಿರುವ, ಮಣ್ಣಿನಲ್ಲಿರುವ ಆರಯ್ಕೆಯು ಹಾಳಾಗದಂತಿರಲು ಈ ಹುಳಿಯಳತೆಯನ್ನು ಕಾಪಾಡಿಕೊಳ್ಳಬೇಕಾಗುತ್ತದೆ. ಪ್ರತಿ 2-3 ತಿಂಗಳಿಗೊಮ್ಮೆ ಮಣ್ಣನ್ನು ಹುಳಿಯಳಕದಲ್ಲಿ ಒರೆಹಚ್ಚಿ ಇದರ ಹುಳಿಯಳತೆಯನ್ನು ಅರಿತುಕೊಳ್ಳಬೇಕು, ಮತ್ತು ಅದು ಹೆಚ್ಚು-ಕಡಿಮೆಯಾಗಿದ್ದರೆ ರಾಸಾಯನಿಕ ಇಲ್ಲವೇ ಸಾವಯವ ಪದ್ಧತಿಯಿಂದ ಮಣ್ಣಿನ ಹುಳಿಯಳತೆ ಸರಿಪಡಿಸಿಕೊಳ್ಳಬೇಕು.

ಹೆಚ್ಚಾಗಿ ಇಳಿಜಾರಿನ ಬೆಟ್ಟದಂತಹ ಜಾಗಗಳೇ ಕಾಫಿ ಬೆಳೆಯಲು ಬೇಕಾಗಿರುವುದರಿಂದ ಈ ಇಳಿಜಾರಿನ ಜಾಗದಲ್ಲಿ ಸಾಕಷ್ಟು ನೆರಳು ಇರಬೇಕಾಗುತ್ತದೆ. ತೋಟದ ಜಾಗವು ಯಾವುದೇ ಮರಗಳಿಲ್ಲದೆ ಬೋಳುಬೆಟ್ಟವಾಗಿದ್ದರೆ, ನೆರಳಿಗಾಗಿ ಸಿಲ್ವರ್, ಅಗರ್, ಶ್ರಿಗಂದ, ಸಾಗುವಾನಿಯಂತಹ ಮರಮಟ್ಟಾಗುವ (Timber) ಗಿಡಗಳನ್ನು ಮೊದಲು ನೆಡಬೇಕು. ಇಲ್ಲವೇ ಬೆಳೆಯುವವರು ತಾವೇ ಆಯ್ದುಕೊಂಡ ಗಿಡಗಳನ್ನು ನೆರಳಿಗಾಗಿ ನೆಡಬಹುದು. ಈಗಾಗಲೇ ಸಾಕಷ್ಟು ಮರಗಳು ತೋಟದ ಜಾಗದಲ್ಲಿದ್ದರೆ ಮರಗಸಿ ಮಾಡಿ ಬೇಕಾದಷ್ಟು ನೆರಳನ್ನು ಮಾತ್ರ ಕಾಯ್ದುಕೊಳ್ಳಬೇಕು. ಕಡುಹೆಚ್ಚು ನೆರಳು ಇಲ್ಲವೇ ಹೆಚ್ಚು ಬಿಸಿಲು ಗಿಡದ ಬೆಳವಣಿಗೆಯನ್ನು ಹಾಳುಮಾಡುತ್ತದೆ.

ಗಿಡನೆಡುವ ಮೊದಲು ಜಾಗದಲ್ಲಿರುವ ಕಳೆಗಿಡ ಮತ್ತು ಕಾಡುಗಿಡಗಳನ್ನು ತೆಗೆಯಬೇಕು. ಕಳೆಗಿಡಗಳನ್ನು ತೆಗೆದು, ಒಣಗಿಸಿ ಸುಡುವ ಪರಿಪಾಟ ಈ ಹಿಂದೆ ಇತ್ತು, ಆದರೆ ಅದು ತೋಟದ ಜಾಗದಲ್ಲಿನ ಉಸಿರಿಗಳ ಬದುಕನ್ನು ಹಾಳುಗೆಡುವುತ್ತದೆ ಮತ್ತು ಮಣ್ಣಿನ ಫಲವತ್ತತೆಗೆ ಒಂದಲ್ಲ ಒಂದು ಬಗೆಯಲ್ಲಿ ನೆರವಾಗುವ ಗಿಡ, ಕೀಟ ಹಾಗು ಪ್ರಾಣಿಗಳನ್ನು ಸಾಯಿಸುತ್ತದೆ. ಆದ್ದರಿಂದ ಈಗ ಕಳೆಗಿಡಗಳನ್ನು ತೆಗೆದು ಅಲ್ಲಿಯೇ ಕೊಳೆಯಿಸಿ ಮಣ್ಣಿಗೆ ಗೊಬ್ಬರವಾಗುವಂತೆ ಮಾಡುತ್ತಾರೆ.

ತೋಟದ ಜಾಗವನ್ನು ಸರಿಮಟ್ಟದ ದೊಡ್ಡ ತುಂಡುಗಳನ್ನಾಗಿ ಅಳತೆ ಮಾಡಿಕೊಳ್ಳಬೇಕು. ಒಂದೊಂದು ತುಂಡಿನಲ್ಲೂ ಕಾಫಿಗಿಡಗಳನ್ನು ಹಲವು ಸಾಲುಗಳಲ್ಲಿ ನೆಡಲಾಗುವುದು. ಎರೆಡು ತುಂಡುಗಳ ನಡುವೆ ನಾಲ್ಕು ಗಾಲಿಯ ಗಾಡಿಗಳು ಓಡಾಡುವಷ್ಟು ಜಾಗವಿದ್ದರೆ ಒಳ್ಳೆಯದು. ಪ್ರತಿ ತುಂಡಿನಲ್ಲೂ ಕಾಫಿಗಿಡಗಳನ್ನು ಸಾಲಾಗಿ ನೆಡಲು ಗುರುತುಗಳನ್ನು ಮೊದಲು ಮಾಡಬೇಕಾಗುತ್ತದೆ. ಅರಾಬಿಕಾ ಮತ್ತು ರೊಬಸ್ಟಾ ಗಿಡಗಳನ್ನು ಈ ಕೆಳಗಿನ ಅಳತೆಯಲ್ಲಿ ಹಲವು ಸಾಲುಗಳಲ್ಲಿ ನೆಡಬಹುದು.

ಅರಾಬಿಕಾ – 7‍ X 7, 5 X 5 ಇಲ್ಲವೇ 8 X 8 ಅಡಿಗಳು (ಒಂದು ಸಾಲಿನಲ್ಲಿರುವ ಗಿಡಗಳ ನಡುವಿನ ದೂರ x ಎರೆಡು ಸಾಲುಗಳ ನಡುವಿನ ದೂರ)
ರೊಬಸ್ಟಾ – 8 X 8 ಇಲ್ಲವೇ 10 X 10 ಅಡಿಗಳು

ಗುಂಡಿ ತೆಗೆಯುವುದು:

ಕಾಫಿ ಗಿಡಗಳನ್ನು ನೆಡಲು ಗುರುತು ಮಾಡಿರುವ ಸಾಲಿನಲ್ಲಿ ಗುಂಡಿಯನ್ನು ತೆಗೆಯುವುದು ಮುಂದಿನ ಕೆಲಸವಾಗಿರುತ್ತದೆ. ಈ ಗುಂಡಿಗಳನ್ನು ತೆಗೆಯುವಾಗ ಹಲವು ಅಂಶಗಳನ್ನು ಗಮನಿಸಬೇಕಾಗುತ್ತದೆ;

1. ಕಾಫಿಗಿಡದಲ್ಲಿ ನಲ್ಲಿಬೇರುಗಳಿರುತ್ತವೆ ಇವು ಮಣ್ಣಿನ ಆಳಕ್ಕೆ ನೇರವಾಗಿ ಹೋಗುತ್ತವೆ. ಕಾಫಿಗಿಡದ ಬದಿಯ ಬೇರುಗಳು ಕೂಡ ಮಣ್ಣಿನಲ್ಲಿ ಸಾಕಷ್ಟು ಹರಡಿಕೊಳ್ಳುತ್ತವೆ. ಹೀಗಾಗಿ ಮಣ್ಣು ಸಡಿಲವಾಗಿದ್ದರೆ ಒಳ್ಳೆಯದು ಮತ್ತು ಗುಂಡಿಯು ಆಳವಿದ್ದಷ್ಟು ಒಳ್ಳೆಯದು.

2. ಗಿಡ ನೆಡಲು ಗುರುತು ಮಾಡಿರುವ ಜಾಗದ ಸುತ್ತ, ಬೇರುಗಳ ಬೆಳವಣಿಗೆಗೆ ಅಡ್ಡಿಯಾಗುವ ಕಲ್ಲುಗಳು ಇರದಂತೆ ನೋಡಿಕೊಳ್ಳಬೇಕು.

3. ಹೆಚ್ಚಾಗಿ ಕಾಫಿಗಿಡಗಳನ್ನು ಜುಲೈ ಇಲ್ಲವೇ ಆಗಸ್ಟ್ ತಿಂಗಳಿನ ಮುಂಗಾರು ಮಳೆಯ ಹೊತ್ತಿನಲ್ಲಿ ತೋಟದಲ್ಲಿ ನೆಡಲಾಗುವುದು. ಅದಕ್ಕಾಗಿ ಬೇಕಾದ ಕಾಫಿಗುಂಡಿಗಳನ್ನು ಎರೆಡು ತಿಂಗಳು ಮುಂಚೆಯೇ ತೋಡಿದರೆ ಒಳ್ಳೆಯದು. ಇದರಿಂದ ಗಿಡನೆಡುವ ಜಾಗದ ಸುತ್ತಲಿನ ಮಣ್ಣು ಸಡಿಲವಾಗುತ್ತದೆ.

4. ಕಾಫಿಗುಂಡಿಯು 1.5 ‍X 1.5 X 1.5 (ಉದ್ದ x ಅಗಲ x ಆಳ) ಅಡಿಗಳಷ್ಟು ಇರಬೇಕು.

5. ಬೇಕಾದ ಆಳದ ಗುಂಡಿಯನ್ನು ತೆಗೆದ ಬಳಿಕ ಗುಂಡಿಯನ್ನು ಕೇವಲ ಮಣ್ಣಿನಿಂದ ಮುಚ್ಚಬೇಕು. ಮಣ್ಣನ್ನು ಯಾವುದೇ ಕಾರಣಕ್ಕೂ ಗುಂಡಿಗೆ ಒತ್ತಿ ತುಂಬಬಾರದು. ಸಣ್ಣ ಕಲ್ಲು ಮತ್ತು ಇತರೆ ಕಸಗಳಿದ್ದರೆ ಅವನ್ನು ತುಂಬಬಾರದು. ಹೀಗೆ ಮಣ್ಣು ಮುಚ್ಚಿದ ಗುಂಡಿಯ ಮೇಲೆ ಗುರುತಿಗಾಗಿ ಒಂದು ಬಿದಿರಿನ ಕಡ್ಡಿಯನ್ನೋ, ಕೋಲನ್ನೋ ನೆಡಬಹುದು (ನೆನಪಿರಲಿ, ನಾವಿನ್ನು ಕಾಫಿಗಿಡವನ್ನು ನೆಟ್ಟಿಲ್ಲ)

ಗಿಡನೆಡುವುದು ಮತ್ತು ಆರಯ್ಕೆ:
ಪಾತಿಯ ಬುಟ್ಟಿಗಳಲ್ಲಿರುವ ಕಾಫಿಗಿಡಗಳನ್ನು ತೋಟದ ಜಾಗಕ್ಕೆ ಸಾಗಿಸಿಟ್ಟಿರಬೇಕು. ಈಗಾಗಲೇ ಮಣ್ಣನ್ನು ಮುಚ್ಚಿರುವ ಕಾಫಿಗುಂಡಿಗಳನ್ನು ಕೈಯಿಂದಲೇ ಬಗೆಯಬಹುದು, ಕಾಫಿ ಬುಟ್ಟಿಯ ಅಳತೆಗೆ ಸರಿಹೊಂದುವಂತೆ ಗುಂಡಿಗೆ ಮುಚ್ಚಿದ್ದ ಮಣ್ಣನ್ನು ಕೈಯಿಂದ ತೆಗೆಯಬೇಕು. ಪ್ಲಾಸ್ಟಿಕ್ ಬುಟ್ಟಿಯನ್ನು ಜೋಪಾನವಾಗಿ ಹರಿದು ತೆಗೆದು, ಕಾಫಿ ಗಿಡದ ಬೇರಿನ ಸುತ್ತಲಿನ ಮಣ್ಣು ಒಡೆದುಹೋಗದಂತೆ, ಆ ಬುಟ್ಟಿಯ ಮಣ್ಣಿನ ಸಮೇತ ಗಿಡವನ್ನು ಗುಂಡಿಯೊಳಗೆ ನೇರವಾಗಿ ನೆಡಬೇಕು. ಬಳಿಕ ಸುತ್ತಲಿನ ಮಣ್ಣಿನಿಂದ ಮುಚ್ಚಿ ಗಿಡವನ್ನು ಗಟ್ಟಿಯಾಗಿ ಊರಬೇಕು. ಹೀಗೆ ನೆಟ್ಟ ಗಿಡವು ಬಾಗದಂತೆ ನೆರವಿಗಾಗಿ ಒಂದು ಮರದ ಕೋಲನ್ನು ನೆಡುವುದು ಒಳ್ಳೆಯದು.

ಗಿಡವನ್ನು ನೆಡುವಾಗ ಕೊಟ್ಟಿಗೆ ಗೊಬ್ಬರ ಇಲ್ಲವೇ ಪ್ರತಿ ಗುಂಡಿಗೆ 50-100 ಗ್ರಾಂ ನಷ್ಟು ರಾಕ್ ಪಾಸ್ಪೇಟ್ ರಾಸಾಯನಿಕ ಗೊಬ್ಬರವನ್ನು ಹಾಕಿದರೆ ಗಿಡದ ಬೆಳವಣಿಗೆಗೆ ನೆರವಾಗುತ್ತದೆ. ಸಾವಯವ ಬೆಳೆಗಾರರು ಬೆಳವಣಿಗೆಗೆ ನೆರವಾಗುವ ಸಾವಯವ ಗೊಬ್ಬರವನ್ನು ಬಳಸಬಹುದು.

ಆರಯ್ಕೆ:

1. ಗಿಡವನ್ನು ನೆಟ್ಟ ಒಂದು ತಿಂಗಳೊಳಗೆ ಮಳೆ ಬಂದರೆ ಒಳ್ಳೆಯದು ಇಲ್ಲವಾದರೆ ಗಿಡಕ್ಕೆ ನೀರಿನ ಏರ್ಪಾಡನ್ನು ಮಾಡಬೇಕು.

2. ಮಳೆಗಾಲ ಮುಗಿಯುವ ಹೊತ್ತಿಗೆ, ಕಾಡುಮರದ ಸೊಪ್ಪಿನಿಂದ ಗಿಡದ ಸುತ್ತಲು ಮರೆಯನ್ನು ಮಾಡಿ ನೇಸರನ ಬಿಸಿಲು ಸುಡದಂತೆ ಎಚ್ಚರ ವಹಿಸಬೇಕು.

3. ಗಿಡವನ್ನು ನೆಟ್ಟ ಕೆಲವು ದಿನದಲ್ಲಿ ಅದರ ಬುಡದಲ್ಲಿರುವ ಮಣ್ಣು ಮಳೆಯ ನೀರಿಗೆ ಕೊಚ್ಚಿ ಹೋಗಿದ್ದರೆ, ಗಿಡದ ಸುತ್ತಲಿನ ಮಣ್ಣನ್ನು ಕಡೆದು ಗಿಡದ ಬುಡಕ್ಕೆ ಹಾಕಿ ಮಣ್ಣನ್ನು ಏರಿಸಬೇಕು. ಇದು ಗಿಡವು ಗಟ್ಟಿಯಾಗಿ ಹಾಗು ನೇರವಾಗಿ ಬೆಳೆಯಲು ನೆರವಾಗುತ್ತದೆ.

4. ಕಾಫಿ ಗಿಡದ ಸಾಲುಗಳ ನಡುವೆ, ಹೆಚ್ಚಿನ ನೆರಳು ಮತ್ತು ಸೊಪ್ಪಿನ ಗೊಬ್ಬರಕ್ಕಾಗಿ ಹಾಲುವಾಣ/ಪಂಗಾರು ಗಿಡಗಳನ್ನು ನೆಡುತ್ತಾರೆ. ಇದು ಗಿಡಕ್ಕೆ ಬೇಕಾದ ನೆರಳನ್ನು ಒದಗಿಸುತ್ತದೆ. ಕಾಫಿಗಿಡಗಳು ಸಾಕಷ್ಟು ಎತ್ತರಕ್ಕೆ ಬಂದಾಗ ನೆರಳು ಹೆಚ್ಚಾದರೆ ಇವನ್ನು ಕಡಿದು ತೆಗೆಯಲಾಗುತ್ತದೆ. ಈ ಗಿಡಗಳ ಸೊಪ್ಪು ತೊಟಕ್ಕೆ ಒಳ್ಳೆಯ ಗೊಬ್ಬರವಾಗಿದೆ.

5. ಸಾವಯವ ಇಲ್ಲವೇ ರಾಸಾಯನಿಕ ಬೇಸಾಯ ಪದ್ಧತಿಯ ಆದಾರದ ಮೇಲೆ ಗಿಡಕ್ಕೆ ಗೊಬ್ಬರವನ್ನು ಹಾಕಬೇಕು.

6. ಗಿಡಗಳನ್ನು ತೋಟದಲ್ಲಿ ನೆಟ್ಟಾಗ ಗಿಡಗಳ ನಡುವೆ ಸಾಕಷ್ಟು ಜಾಗ ಇರುವುದರಿಂದ ಅಲ್ಲಿ ಕಳೆಗಿಡಗಳು ಹುಟ್ಟುತ್ತಲೇ ಇರುತ್ತವೆ. ಕಳೆಗಿಡಗಳು ಗಿಡದ ಬೆಳವಣಿಗೆಗೆ ತೊಂದರೆ ನೀಡುತ್ತವೆ. ಈ ಕಳೆಗಿಡಗಳನ್ನು ಕೊಚ್ಚಿ ತೆಗೆಯುತ್ತಿರಬೇಕು ಇದನ್ನು ‘ಹಳ ಹೊಡೆಯುವುದು’ ಎಂದು ನಮ್ಮಲ್ಲಿ ಕರೆಯುತ್ತಾರೆ.

ಹೀಗೆ ಗಿಡವನ್ನು ನೆಟ್ಟ ಮೊದಲ ವರುಶ ಅದರ ಆರಯ್ಕೆಯನ್ನು ಚೆನ್ನಾಗಿ ನೋಡಿಕೊಳ್ಳಬೇಕಾಗುತ್ತದೆ. ಕಾಫಿಗಿಡವು ಬೆಳೆದು ಇಳುವರಿಯನ್ನು ಕೊಡಲು ಸುಮಾರು ನಾಲ್ಕರಿಂದ ಅಯ್ದು ವರುಶಗಳು ಬೇಕಾಗುತ್ತವೆ. ಇಳುವರಿ ಕೊಡುತ್ತಿರುವ ಗಿಡದಿಂದ ವರುಶಕ್ಕೆ ಒಮ್ಮೆ ಕಾಫಿಬೆಳೆಯ ಕುಯ್ಯಲನ್ನು ಮಾಡಬಹುದು. ಕಾಫಿ ತೋಟಕ್ಕೆಂದು ಇರುವ ಜಾಗದಲ್ಲಿ ಹೆಚ್ಚಿನ ಮರಗಳನ್ನು ಕಡಿಸದೇ, ಇತರೆ ಉಸಿರಿಗಳ ಬದುಕಿಗೆ ಹಾನಿ ಮಾಡದೇ, ಕಾಡಿನ ನಡುವೆಯೇ ಒಂದು ಬೆಳೆ ನೀಡುವ ಗಿಡಗಳಾಗಿ ಈ ಕಾಫಿಗಿಡಗಳನ್ನು ಬೆಳೆಸಬಹುದು. ತಾನೂ ಒಂದು ಬಗೆಯ ಗಿಡವಾಗಿ ಕಾಡಿನಲ್ಲಿರುವ ಮರಗಿಡಗಳ ಹಲತನದೊಂದಿಗೆ ಸೇರಿಕೊಳ್ಳುವುದು ಈ ಬೆಳೆಯ ಮೇಲ್ಮೆ.

(ಚಿತ್ರಸೆಲೆ: homongfoundation)

ಪಾತಿಯ ಬುಟ್ಟಿಗಳಲ್ಲಿ ಕಾಫಿಗಿಡದ ಬೆಳವಣಿಗೆ

ರತೀಶ ರತ್ನಾಕರ.

ಕಾಫಿ ಬಿತ್ತನೆ ಮತ್ತು ಆರೈಕೆಯ ಬರಹದಲ್ಲಿ ಮಣ್ಣಿನ ಹಾಸಿಗೆಯನ್ನು ಬಳಸಿಕೊಂಡು ಕಾಫಿ ಬೀಜದ ಬಿತ್ತನೆ ಮಾಡಿ, ಅದನ್ನು ನೋಡಿಕೊಳ್ಳುವುದರ ಬಗ್ಗೆ ತಿಳಿದೆವು. ಮಣ್ಣಿನ ಹಾಸಿಗೆಯಲ್ಲಿ ಮೊಳಕೆಯೊಡೆದ ಕಾಫಿ ಬೀಜವು ಸುಮಾರು 40 ರಿಂದ 50 ದಿನದಲ್ಲಿ 200 – 300 ಮಿ.ಮೀ ಬೆಳೆಯುತ್ತದೆ. ಈ ಮೊಳಕೆಯ ಗಿಡಗಳನ್ನು ಮಣ್ಣಿನ ಹಾಸಿಗೆಯಿಂದ ಪ್ಲಾಸ್ಟಿಕ್ ಬುಟ್ಟಿಗಳಿಗೆ ಸಾಗಿಸಿ ಎರಡನೇ ಹಂತದ ಬೆಳವಣಿಗೆಯನ್ನು ನೋಡಿಕೊಳ್ಳಲಾಗುತ್ತದೆ.

ಪಾತಿ ಮಾಡುವುದು:
ಮೊಳಕೆಯೊಡೆದ ಕಾಫಿಗಿಡದ ಮುಂದಿನ ಬೆಳವಣಿಗೆಗಾಗಿ ಪ್ಲಾಸ್ಟಿಕ್ ಬುಟ್ಟಿಗಳಲ್ಲಿ ನೆಟ್ಟು, ಪಾತಿಯನ್ನು ಮಾಡಿ ನೋಡಿಕೊಳ್ಳಲಾಗುತ್ತದೆ. ಕಾಫಿಗಿಡಗಳಿಗೆ ಕಡಿಮೆ ಎಂದರು 8 ಇಂಚು ಎತ್ತರ ಮತ್ತು 3 ಇಂಚು ಅಡ್ಡಗಲ ಇರುವ ಪ್ಲಾಸ್ಟಿಕ್ ಬುಟ್ಟಿಗಳು ಬೇಕು. ಮಣ್ಣಿನಲ್ಲಿರುವ ಕೊಳಚೆ ಹಾಗು ಹೆಚ್ಚಿನ ನೀರು ಹರಿದು ಹೋಗುವಂತೆ ಚಿಕ್ಕ ಚಿಕ್ಕ ಕಿಂಡಿಗಳು ಪ್ಲಾಸ್ಟಿಕ್ ಬುಟ್ಟಿಯಲ್ಲಿರಬೇಕು.

ಈ ಪ್ಲಾಸ್ಟಿಕ್ ಬುಟ್ಟಿಗಳಿಗೆ ತುಂಬುವ ಮಣ್ಣಿನಲ್ಲಿ ಸಾಕಷ್ಟು ಸಾರವಿರಬೇಕು. ಸಾರವಿರುವ ಕಾಡಿನ ಮಣ್ಣಿಗೆ ಕೊಟ್ಟಿಗೆ ಗೊಬ್ಬರವನ್ನು ಕಲೆಸಿ, ಮಣ್ಣು ಅಂಟಿಕೊಳ್ಳದಂತೆ ಸಡಿಲವಾಗಿರಲು ಮರಳನ್ನು ಕೂಡ ಸೇರಿಸಿ ಮಣ್ಣನ್ನು ಅಣಿಗೊಳಿಸಲಾಗುವುದು. ಗಿಡದ ಬೆಳವಣಿಗೆಗೆ ಬೇಕಾದ ಪಾಸ್ಪೇಟ್ ಹಾಗು ನೈಟ್ರೋಜನ್ ಹೊಂದಿರುವ ಗೊಬ್ಬರವನ್ನು ಕೂಡ ಬಳಸಲಾಗುತ್ತದೆ. ಕಾಫಿ ಸಿಪ್ಪೆಯ ಗೊಬ್ಬರವನ್ನು ಕೂಡ ಈ ಮಣ್ಣಿಗೆ ಬೆರೆಸಿದರೆ ಮಣ್ಣಿನ ಸಾರ ಹೆಚ್ಚುತ್ತದೆ. ಹೀಗೆ ಗೊಬ್ಬರವನ್ನು ಹೊಂದಿರುವ, ಹುಡಿಯಾಗಿರುವ ಮಣ್ಣನ್ನು ಚೆನ್ನಾಗಿ ಕಲೆಸಿ ಪ್ಲಾಸ್ಟಿಕ್ ಬುಟ್ಟಿಗಳಿಗೆ ತುಂಬಿಸಬೇಕು. ಪ್ಲಾಸ್ಟಿಕ್ ಬುಟ್ಟಿಗಳಿಗೆ ತುಂಬಿಸುವಾಗ ಹೆಚ್ಚು ಒತ್ತಿ ತುಂಬಿಸದೆ, ಬುಟ್ಟಿಯೊಳಗಿರುವ ಮಣ್ಣಿನಲ್ಲಿ ಗಾಳಿ ಮತ್ತು ನೀರು ಯಾವ ತೊಡಕಿಲ್ಲದೆ ಓಡಾಡಲು ಆಗುವಂತೆ ಮಣ್ಣನ್ನು ತುಂಬಿಸಬೇಕು.

ಒಂದು ಪಾತಿಯ ಸಾಲು ಸುಮಾರು 3 ಅಡಿ ಅಗಲ ಮತ್ತು 20 ರಿಂದ 30 ಅಡಿಗಳಷ್ಟು ಉದ್ದವಿರುತ್ತದೆ. ಪಾತಿಯ ಸಾಲಿನ ಬದಿಗೆ ಬಿದಿರಿನ ತಟ್ಟೆಗಳನ್ನು ಹೊಡೆದು ಇಲ್ಲವೇ ಮರದ ಹಲಗೆಗಳನ್ನು ಇರಿಸಿ 30 x 3 ಅಡಿ ಉದ್ದಗಲದ ಕಟ್ಟೆಯನ್ನು ಮಾಡಲಾಗುತ್ತದೆ. ಈ ಕಟ್ಟೆಯ ಒಳಗೆ ಮಣ್ಣು ತುಂಬಿರುವ ಪ್ಲಾಸ್ಟಿಕ್ ಬುಟ್ಟಿಗಳನ್ನು ನೇರವಾಗಿ ಮತ್ತು ಸಾಲಾಗಿ ಒಂದರ ಪಕ್ಕ ಒಂದರಂತೆ ಜೋಡಿಸಿಡಲಾಗುತ್ತದೆ. (ಈ ಕೆಳಗಿನ ಚಿತ್ರವನ್ನು ನೋಡಿ) ಇದು ಬುಟ್ಟಿಗಳು ಗಟ್ಟಿಯಾಗಿ ಹಾಗು ನೇರವಾಗಿ ನಿಲ್ಲಲು ನೆರವಾಗುತ್ತದೆ.

ಮಣ್ಣಿನ ಹಾಸಿಗೆಯಲ್ಲಿ ಮೊಳಕೆಯೊಡೆದ ಗಿಡಗಳನ್ನು ಕಿತ್ತು, ಜೋಡಿಸಿಟ್ಟ ಬುಟ್ಟಿಗಳಿಗೆ ತಂದು ನೆಡಬೇಕು. ಈ ಹಂತದಲ್ಲಿ ಕೆಳಗಿನ ಮಾಹಿತಿಗಳನ್ನು ಗಮನದಲ್ಲಿಡಬೇಕು.

  1. ಮಣ್ಣಿನ ಹಾಸಿಗೆಯಿಂದ ಗಿಡಗಳನ್ನು ಕೀಳುವಾಗ ಸಾಕಷ್ಟು ಎಚ್ಚರದಿಂದ ಕೀಳಬೇಕು. ಮೊಳಕೆಯೊಡೆದ ಗಿಡಗಳಿಗೆ ಮತ್ತು ಬೇರುಗಳಿಗೆ ಗಾಯವಾಗದಂತೆ ನೋಡಿಕೊಳ್ಳಬೇಕು.
  2. ಕಿತ್ತ ಗಿಡಗಳಲ್ಲಿ ಚೆನ್ನಾಗಿ ಕುಡಿಯೊಡೆದಿರುವ ಮತ್ತು ನಲ್ಲಿಬೇರುಗಳು (tap roots) ನೇರವಾಗಿರುವ ಗಿಡಗಳನ್ನು ಮಾತ್ರ ಆರಿಸಿಕೊಳ್ಳಬೇಕು.
  3. ಗಿಡದ ಬೇರುಗಳು ಡೊಂಕಾಗಿದ್ದರೆ ಇಲ್ಲವೇ ಬೇರುಗಳಲ್ಲಿ ಕೂದಲುಗಳು (root hairs) ಕಡಿಮೆಯಿದ್ದರೆ ಅವನ್ನು ಬಳಸಬಾರದು.
  4. ಹುಳ ತಿಂದಿರುವ ಇಲ್ಲವೇ ಜಡ್ಡು ಹಿಡಿದಿರುವ ಮೊಳೆಕೆಯ ಗಿಡಗಳನ್ನು ಬಳಸಬಾರದು.
  5. ಅಗತ್ಯಕ್ಕಿಂತ ಹೆಚ್ಚು ಎಲೆಗಳನ್ನು ಹೊಂದಿರುವ ಗಿಡಗಳನ್ನು ಆರಿಸಿಕೊಳ್ಳಬಾರದು. ಏಕೆಂದರೆ, ಮುಂದೆ ಇವುಗಳ ಬೆಳವಣಿಗೆ ತೀರಾ ಕಡಿಮೆಯಾಗುತ್ತದೆ.

ಹೀಗೆ ಆರಿಸಿಕೊಂಡ ಮೊಳಕೆಯ ಗಿಡಗಳನ್ನು ಕೂಡಲೆ ಪ್ಲಾಸ್ಟಿಕ್ ಬುಟ್ಟಿಗಳಲ್ಲಿ ಈ ಕೆಳಗಿನ ಹಂತಗಳ ಮೂಲಕ ನೆಡಬೇಕು.

  1. ತಂಪಾದ ಹೊತ್ತಿನಲ್ಲಿ ಗಿಡನೆಡುವ ಕೆಲಸವಿಟ್ಟುಕೊಳ್ಳಬೇಕು, ಅಂದರೆ ಬೆಳಗಿನ ಜಾವ ಇಲ್ಲವೇ ಸಂಜೆಯ ಹೊತ್ತು.
  2. ಪಾತಿಯ ಬುಟ್ಟಿಗಳಿಗೆ ಚೆನ್ನಾಗಿ ನೀರುಣಿಸಬೇಕು.
    ಪಾತಿಯ ಬುಟ್ಟಿಗಳಿಗೆ ನೀರುಣಿಸಿದ ಮೇಲೆ, ಚೂಪಾದ ಕಡ್ಡಿಯಿಂದ ಸುಮಾರು 50 ಮಿ.ಮೀ ತೂತವನ್ನು ಕೊರೆಯಬೇಕು.
  3. ಮಣ್ಣಿನ ಹಾಸಿಗೆಯಿಂದ ಕಿತ್ತು ಆರಿಸಿದ ಗಿಡವನ್ನು ತಂದು ಬುಟ್ಟಿಗೆ ನೆಡಬೇಕು. ಮೊಳಕೆಯ ಗಿಡವನ್ನು ನೆಡುವಾಗ ನಲ್ಲಿಬೇರು ಬಾಗದಂತೆ ನೇರವಾಗಿ ನೆಟ್ಟು, ಬುಟ್ಟಿಯ ಮೇಲಿರುವ ಮಣ್ಣಿನಿಂದ ಮೆದುವಾಗಿ ಒತ್ತಬೇಕು.
  4. ಒಂದು ವೇಳೆ ನಲ್ಲಿಬೇರಿನ ಉದ್ದ ಹೆಚ್ಚಾಗಿದ್ದರೆ ಅದರ ಉದ್ದಕ್ಕೆ ಬೇಕಾದ ತೂತವನ್ನು ಬುಟ್ಟಿಯೊಳಗೆ ಮಾಡಿ ನೆಡಬೇಕು.
  5. ಗಿಡವನ್ನು ನೆಟ್ಟ ಮೇಲೆ ಪಾತಿಗೆ ಚೆನ್ನಾಗಿ ನೀರುಣಿಸಬೇಕು. ಆದರೆ ಅಗತ್ಯಕ್ಕಿಂತ ಹೆಚ್ಚು ನೀರುಣಿಸಬಾರದು.
  6. ಪಾತಿಯನ್ನು ಮಳೆ ಮತ್ತು ಬಿಸಿಲಿನಿಂದ ಕಾಪಾಡಲು ಮೊದಲೇ ಚಪ್ಪರವನ್ನು ಮಾಡಿರಬೇಕು. ಹಸಿರು ಮನೆಯ ಒಳಗೂ ಪಾತಿಯನ್ನು ಮಾಡಬಹುದು. ಗಿಡಗಳ ಬೆಳವಣಿಗೆಯಲ್ಲಿ ಹಸಿರು ಮನೆಯು ಹೇಗೆ ನೆರವಾಗುತ್ತದೆ ಎಂದು ‘ಹಸಿರುಮನೆಯ ಗುಟ್ಟು’ ಬರಹದಲ್ಲಿ ತಿಳಿಯಬಹುದು.
  7. ಪಾತಿಯ ಒಳಗೆ ಸಾಕಷ್ಟು ಗಾಳಿ ಮತ್ತು ಬೆಳಕು ಬರುವಂತಿರಬೇಕು.
  8. ಕಾಫಿ ಬುಟ್ಟಿಗಳಲ್ಲಿ ಬರುವ ಕಳೆಗಿಡಗಳನ್ನು ತೆಗೆಯುತ್ತಿರಬೇಕು.
  9. ಪ್ರತಿ ಹದಿನೈದು ದಿನಗಳಿಗೊಮ್ಮೆ ಯೂರಿಯ (46:0:0) ಗೊಬ್ಬರವನ್ನು ಗಿಡದ ಬುಡಕ್ಕೆ ಹಾಕಬೇಕು. ಸುಮಾರು 60 ಗ್ರಾಂ ಯೂರಿಯ ಗೊಬ್ಬರವನ್ನು 100 ಗಿಡಗಳಿಗೆ ಆಗುವಷ್ಟು ಹಾಕಬಹುದು. ಸಾವಯವ ಬೇಸಾಯ ಮಾಡುವವರು ಕೊಟ್ಟಿಗೆ ಗೊಬ್ಬರವನ್ನು ಚೆನ್ನಾಗಿ ಹುಡಿಮಾಡಿ ಹಾಕಬಹುದು. ಕಾಫಿ ಗಿಡದ ಎಲೆಗಳು ಕಂದು ಹಸಿರು ಬಣ್ಣಕ್ಕೆ ತಿರುಗುವಂತಿದ್ದರೆ ಗೊಬ್ಬರವನ್ನು ಕೊಡುವುದು ನಿಲ್ಲಿಸಬೇಕು.
  10. ಪಾತಿಯಲ್ಲಿ ಯಾವುದೇ ಹುಳ-ಹುಪ್ಪಟೆಗಳು ಆಗದಂತೆ ನೋಡಿಕೊಳ್ಳುತ್ತಿರಬೇಕು. ಯಾವುದಾದರು ಗಿಡಕ್ಕೆ ಜಡ್ಡು ಬಂದರೆ ಕೂಡಲೆ ಆ ಗಿಡದ ಬುಟ್ಟಿಯನ್ನು ಬೇರೆ ಮಾಡಿ ಸುಡಬೇಕು ಇಲ್ಲವೇ ದೂರೆ ಎಸೆಯಬೇಕು.

ಪಾತಿಯ ಬುಟ್ಟಿಯಲ್ಲಿನ ಗಿಡಗಳು ಸುಮಾರು 3 ತಿಂಗಳಿಗೆ ಒಂದರಿಂದ ಒಂದೂವರೆ ಅಡಿ ಎತ್ತರಕ್ಕೆ ಬೆಳೆಯಬಲ್ಲವು. ಈಗ ಈ ಗಿಡಗಳು ತೋಟದ ಮಣ್ಣಿನಲ್ಲಿ ನೆಡಲು ಸಿದ್ದವಾದಂತೆ. ಜನವರಿ-ಪ್ರೆಬ್ರವರಿಯಲ್ಲಿ ಮಣ್ಣಿನ ಹಾಸಿಗೆಗೆ ಹೋದ ಕಾಫಿ ಬೀಜಗಳು, ಮಾರ್ಚ್-ಏಪ್ರಿಲ್ ನಲ್ಲಿ ಮೊಳಕೆಯೊಡೆದು ಮೊದಲ ಹಂತದ ಬೆಳವಣಿಗೆಯನ್ನು ಮುಗಿಸುತ್ತವೆ. ಏಪ್ರಿಲ್ ನಿಂದ ಜೂನ್ ವರೆಗೆ ಪಾತಿಯ ಬುಟ್ಟಿಗಳಲ್ಲಿ ತಮ್ಮ ಎರಡನೇ ಹಂತದ ಬೆಳವಣಿಗೆಯನ್ನು ಮುಗಿಸಿಕೊಂಡು, ಸರಿಯಾಗಿ ಮಳೆಗಾಲದ ಹೊತ್ತಿಗೆ ಅಂದರೆ ಜೂನ್ – ಜುಲೈ ತಿಂಗಳಿನಲ್ಲಿ ತೋಟದ ಜಾಗದಲ್ಲಿ ನೆಡಲು ಸಿಗುತ್ತವೆ. ಜನವರಿಯಿಂದ ಜುಲೈವರೆಗೆ ಬೆಳೆಯುವ ಬುಟ್ಟಿಗಿಡಗಳನ್ನು ‘ಒಂದು ನೀರು’ ಗಿಡ ಎಂದು ಕರೆಯುತ್ತಾರೆ. ಒಂದು ವೇಳೆ ಈ ಜುಲೈ ಮಳೆಗಾಲಕ್ಕೆ ನೆಡದೇ ಮುಂದಿನ ವರುಶದ ಜುಲೈ ಮಳೆಗಾಲದ ವರೆಗೂ ಕಾಫಿಗಿಡಗಳು ಬುಟ್ಟಿಯಲ್ಲೇ ಬೆಳೆದರೆ ಅವನ್ನು ‘ಎರೆಡು ನೀರು’ ಗಿಡ ಎಂದು ಕರೆಯಲಾಗುತ್ತದೆ.

ಕಾಫಿಗಿಡವನ್ನು ತೋಟದ ಮಣ್ಣಿನಲ್ಲಿ ನೆಡುವುದಕ್ಕಿಂತ ಮುಂಚೆ ಹೀಗೆ ಎರೆಡು ಹಂತಗಳಲ್ಲಿ ಗಿಡದ ಆರೈಕೆಯನ್ನು ಮಾಡಬೇಕಾಗುತ್ತದೆ.

(ಚಿತ್ರ ಸೆಲೆ: dailycoffeenews.comwikimedia )

ಕಾಫಿಬೀಜದ ಬಿತ್ತನೆ ಮತ್ತು ಆರೈಕೆ

ರತೀಶ ರತ್ನಾಕರ.

ಚುಮುಚುಮು ಚಳಿಯ ಹೊತ್ತಿಗೆ ಬಿಸಿ ಬಿಸಿ ಕಾಫಿಯನ್ನು ಹೀರುವಾಗ, ಇಲ್ಲವೇ ಒತ್ತಡಗಳ ನಡುವೆ ಮನಸ್ಸಿನ ಉಲ್ಲಾಸಕ್ಕೆಂದು ಕಾಫಿ ಗುಟುಕನ್ನು ಕುಡಿಯುವಾಗ,ಕಾಫಿಯು ಕಾಫಿಯಾಗಲು ಮಾಡಬೇಕಾದ ಕೆಲಸಗಳೆಷ್ಟು ಎಂಬ ಅರಿವು ಇರುವುದಿಲ್ಲ. ಇದು ಕಾಫಿಗೆ ಮಾತ್ರವಲ್ಲ, ನಾವು ತಿನ್ನುವ ಬೇಳೆ-ಕಾಳುಗಳು, ಇತರೆ ತಿನಿಸುಗಳು ಬೆಳೆದು ಬಂದ ಬಗೆ ಹೆಚ್ಚಾಗಿ ನಮಗೆ ತಿಳಿದಿರುವುದಿಲ್ಲ. ಕಾಫಿ ಬೆಳೆಯುವ ಕುಟುಂಬದಿಂದಲೇ ಬೆಳೆದು, ಕಾಫಿ ಬೆಳೆಯುವ ಬಗೆಯನ್ನು ತೀರಾ ಹತ್ತಿರದಿಂದ ಕಂಡಿರುವುದರಿಂದ ಇದರ ಬೇಸಾಯದ ಅರಿವನ್ನು ಆದಷ್ಟು ಹಂಚಿಕೊಳ್ಳುವ ನಿಟ್ಟಿನಲ್ಲಿ ಈ ಸರಣಿ ಬರಹ ಮಾಡುತ್ತಿರುವೆ. ಹಿಂದಿನ ಬರಹಗಳಲ್ಲಿ ಕಾಫಿಯ ಹುಟ್ಟು ಮತ್ತು ಹರವು ಹಾಗು ಅರಾಬಿಕಾ ಮತ್ತು ರೊಬಸ್ಟಾ ಬೆಳೆಗಳ ನಡುವಿನ ಬೇರ‍್ಮೆಯನ್ನು ತಿಳಿದೆವು. ಈ ಬರಹದಲ್ಲಿ ಕಾಫಿಯನ್ನು ಬೆಳೆಯುವ ಮೊದಲ ಹಂತವಾದ ಕಾಫಿ ಗಿಡಮನೆ (Nursery) ಮಾಡುವುದರ ಕುರಿತು ಕೊಂಚ ಅರಿಯೋಣ.

ಬೀಜಗಳ ಆಯ್ಕೆ:
ಕಾಫಿಯ ಮುಂದಿನ ತಲೆಮಾರಿಗೆ ಬೇಕಾದ ಕಾಫಿ ಬೀಜವನ್ನು ಆಯ್ದುಕೊಳ್ಳುವುದು ಒಂದು ಅರಿದಾದ ಕೆಲಸ. ತೋಟದ ನಡುವೆ ಇರುವ ಆರೋಗ್ಯಕರವಾದ, ಒಳ್ಳೆಯ ಇಳುವರಿಯನ್ನು ಕೊಡುತ್ತಿರುವ ಕಾಫಿ ಗಿಡದಿಂದ ತುಂಬಾನೇ ಚೆನ್ನಾಗಿರುವ ಹಣ್ಣುಗಳನ್ನು ಆಯ್ದುಕೊಳ್ಳಬೇಕು. ಹಣ್ಣುಗಳು ದೊಡ್ಡದಿದ್ದಷ್ಟು ಒಳ್ಳೆಯದು. ಮೊದಲೇ ತಿಳಿದಿರುವಂತೆ ನವೆಂಬರ್ ಕೊನೆಯ ವಾರದಿಂದ ಜನವರಿ ಮೊದಲ ವಾರದವರೆಗು ಕಾಫಿ ಹಣ್ಣಿನ ಕಾಲ. ಈ ಹೊತ್ತಿನಲ್ಲಿ, ಗಿಡದಲ್ಲಿರುವ ಕಾಫಿಯು ಚೆನ್ನಾಗಿ ಹಣ್ಣಾದ ಕೂಡಲೇ ಹಣ್ಣುಗಳನ್ನು ಕಿತ್ತುಕೊಂಡಿರಬೇಕು.

ಕಿತ್ತ ಕಾಫಿ ಹಣ್ಣಿನ ಸಿಪ್ಪೆಗಳನ್ನು ಬಿಡಿಸಿ, ಕಾಫಿ ಬೀಜಗಳನ್ನು ಆರಿಸಬೇಕು. ನೆನಪಿರಲಿ, ಒಂದು ಕಾಫಿ ಹಣ್ಣಿನಲ್ಲಿ ಎರೆಡು ಕಾಫಿ ಬೀಜಗಳಿರುತ್ತವೆ. ಒಂದು ವೇಳೆ ಕಾಫಿ ಹಣ್ಣಿನಲ್ಲಿ ಒಂದೇ ಬೀಜವಿದ್ದರೆ ಇಲ್ಲವೇ ಒಂದು ಬೀಜ ದೊಡ್ಡದಾಗಿದ್ದು ಇನ್ನೊಂದು ತುಂಬಾ ಚಿಕ್ಕದಾಗಿದ್ದರೆ ಅಂತಹ ಬೀಜಗಳನ್ನು ಮೊಳಕೆ ಬರಿಸಲು ಆಯ್ದುಕೊಳ್ಳಬಾರದು. ಹೀಗೆ ಸಿಪ್ಪೆ ಬಿಡಿಸಿದ ಬೀಜಗಳ ಮೇಲ್ಮೈನಲ್ಲಿ ಲೋಳೆಯು ಇರುತ್ತದೆ, ಈ ಲೋಳೆಯಿಂದಾಗಿ ಬೀಜಗಳು ಒಂದಕ್ಕೊಂದು ಅಂಟಿಕೊಳ್ಳುವ ಸಾಧ್ಯತೆ ಹೆಚ್ಚು, ಅಂಟಿಕೊಂಡ ಅವನ್ನು ಬಿಡಿಸಿದಾಗ ಬೀಜಗಳಿಗೆ ಗಾಯವಾಗಿ ಹಾಳಾಗುವ ಸಾದ್ಯತೆ ಹೆಚ್ಚು. ಅದಕ್ಕಾಗಿ ಕೆಲವರು ಕಾಫಿ ಹಣ್ಣನ್ನು ಬಿಡಿಸಿದ ಕೂಡಲೇ ತೊಳೆಯುತ್ತಾರೆ ಇಲ್ಲವೇ ಬೂದಿಯನ್ನು ಬೀಜಗಳಿಗೆ ಹಾಕಿ ಕಲಿಸುತ್ತಾರೆ. ಬೂದಿಯನ್ನು ಬಳಸುವುದರಿಂದ ಇನ್ನೊಂದು ಉಪಕಾರವೆಂದರೆ, ಬೂದಿಯು ಬೀಜದ ಸುತ್ತಲೂ ಅಂಟಿಕೊಳ್ಳುವುದರಿಂದ ಇರುವೆ ಇಲ್ಲವೇ ಮತ್ತಿತರ ಕೀಟಗಳಿಂದ ಬೀಜಗಳನ್ನು ಕಾಪಾಡಿಕೊಳ್ಳಬಹುದು. ಇದೇ ಕೆಲಸ ಮಾಡುವಂತಹ ಯಾವುದಾದರು ಸಾಮಾಗ್ರಿಗಳು ಮಾರುಕಟ್ಟೆಯಲ್ಲಿ ಸಿಕ್ಕರೆ ಅವನ್ನು ಕೂಡ ಬಳಸಬಹುದು. ಬೂದಿಯನ್ನು ಬಳಸುವುದು ಕೊಂಚ ಹಳೆಯ ಪದ್ದತಿ, ಬೂದಿಯನ್ನು ಬೀಜಗಳ ಜೊತೆ ಕಲೆಸುವಾಗ ಬೀಜದ ಮೇಲಿನ ಸಿಪ್ಪೆಗೆ ಗಾಯವಾಗುವ ಸಾದ್ಯತೆಗಳೂ ಇವೆ.

ಹೀಗೆ ಅಣಿಗೊಳಿಸಿದ ಬೀಜಗಳನ್ನು ಬಲೆಯಂತಿರುವ ತಟ್ಟೆಗಳು ಇಲ್ಲವೇ ಗೋಣಿಚೀಲದ ಮೇಲೆ ಹರಡಿ ನೆರಳಿನಲ್ಲಿಟ್ಟು ಎರೆಡರಿಂದ ಮೂರು ದಿನಗಳ ಕಾಲ ಆರಿಸಬೇಕು. ಹರಡಿರುವ ಬೀಜಗಳ ನಡುವೆ ಚೆನ್ನಾಗಿ ಗಾಳಿ ಓಡಾಡುವಂತಿರಬೇಕು. ಬೀಜದಲ್ಲಿರುವ ಪಸೆ (moisture) 10% ಗಿಂತ ಕಡಿಮೆ ಆಗದಂತೆ ಎಚ್ಚರ ವಹಿಸಬೇಕು. ಬಿಸಿಲಿನಲ್ಲಿ ಇಲ್ಲವೇ ಹೆಚ್ಚು ದಿನಗಳ ಕಾಲ ಒಣಗಿಸಿದರೆ ಪಸೆಯು 10% ಗಿಂತ ಕಡಿಮೆಯಾಗಬಹುದು. ಆರಿದ ಬೀಜಗಳಿಂದ ಗಾಯಗೊಂಡ ಇಲ್ಲವೇ ಚೆನ್ನಾಗಿಲ್ಲದ ಬೀಜಗಳನ್ನು ಆರಿಸಿ ತೆಗೆಯಬೇಕು. ಈಗ ನಿಮ್ಮ ಮುಂದಿನ ತಲೆಮಾರಿನ ಕಾಫಿಗಿಡಗಳಿಗೆ ಬೇಕಾದ ಬೀಜಗಳು ಸಿದ್ದವಾದಂತೆ. ಹೀಗೆ ಸಿದ್ದವಾದ ಬೀಜಗಳನ್ನು ಆದಷ್ಟು ಬೇಗ ಮೊಳಕೆಗಾಗಿ ನೆಡಬೇಕು ಇಲ್ಲವಾದರೆ ಮೊಳಕೆ ಬರುವ ಸಾದ್ಯತೆಗಳು ಕಡಿಮೆ. ಬೀಜಗಳನ್ನು ಆದಷ್ಟು ಕಡಿಮೆ ಬಿಸುಪು ಮತ್ತು ಹೆಚ್ಚು ಪಸೆಯಿರುವ ಜಾಗದಲ್ಲಿ ಕಾಪಿಟ್ಟುಕೊಳ್ಳಬೇಕು.

ಮೊಳಕೆಗೆ ಬೀಜ ಬಿತ್ತನೆ:

ಬೀಜಗಳನ್ನು ಮೊಳಕೆಗೆ ಹಾಕುವ ಮೊದಲು ಎಷ್ಟು ಗಿಡಗಳು ತಮಗೆ ಬೇಕಾಗಬಹುದು ಎಂಬ ಲೆಕ್ಕಾಚಾರವನ್ನು ಮಾಡಿಟ್ಟುಕೊಳ್ಳಬೇಕು. ಒಂದು ಕೆ.ಜಿ. ಕಾಫಿ ಬೀಜದಲ್ಲಿ ಸುಮಾರು 3000ದಿಂದ 4000 ಬೀಜಗಳು ಸಿಗುತ್ತವೆ. ಇವುಗಳಲ್ಲಿ 75% ನಷ್ಟು ಬೀಜಗಳು ಮೊಳಕೆ ಬರಬಹುದು ಎಂಬ ಲೆಕ್ಕಾಚಾರವಿದೆ. ತಮಗೆ ಎಷ್ಟು ಕಾಫಿಗಿಡಗಳು ಬೇಕಾಗಬಹುದು ಎಂದು ಎಣಿಸಿಕೊಂಡು ಮೊಳಕೆಗೆ ಅಷ್ಟು ಬೀಜಗಳನ್ನು ಅಣಿಗೊಳಿಸಬೇಕು.

ಮೊಳಕೆಗೆ ಹಾಕಲು ಮೊದಲು ಮಣ್ಣಿನ ಹಾಸಿಗೆಯನ್ನು ಅಣಿಮಾಡಬೇಕು. ಮಣ್ಣಿನ ಹಾಸಿಗೆಯು ಸುಮಾರು 1.2 ಮೀಟರ್ ಅಗಲವಾಗಿರಬೇಕು ಮತ್ತು ಸಾಕಷ್ಟು ಉದ್ದ ಅಂದರೆ ಸುಮಾರು 6 ಮೀಟರ್ ನಷ್ಟು ಇರಬೇಕು. ಮಣ್ಣಿನ ಹಾಸಿಗೆಯ ಎತ್ತರ ನೆಲದಿಂದ ಸುಮಾರು 15 ಸೆ.ಮೀ ನಷ್ಟಿರಬೇಕು. ಹಾಸಿಗೆಯಲ್ಲಿರುವ ಮಣ್ಣನ್ನು ಚೆನ್ನಾಗಿ ಅಗೆದು ಸಡಿಲಗೊಳಿಸರಬೇಕು, ಸಾಕಷ್ಟು ಸಾರವಿರುವ ಕಾಡಿನ ಮಣ್ಣನ್ನು ತಂದು ಇದರ ಜೊತೆ ಸೇರಿಸಿದರೆ ಒಳ್ಳೆಯದು. ಬೀಜಗಳಿಗೆ ಬೇಕಾದ ಗೊಬ್ಬರಕ್ಕಾಗಿ ಸಗಣಿ ಗೊಬ್ಬರವನ್ನು ಮಣ್ಣಿನ ಜೊತೆ ಬೆರೆಸಬೇಕು. ಇದರ ಜೊತೆಗೆ ಬೀಜದ ಮೊಳಕೆಗೆ ನೆರವಾಗುವಂತಹ ಪಾಸ್ಪೇಟ್ ಗೊಬ್ಬರ (ಸಾವಯವ ಇಲ್ಲವೇ ರಾಸಾಯನಿಕ ಎಂಬುದು ಬೆಳೆಗಾರರಿಗೆ ಬಿಟ್ಟದ್ದು) ವನ್ನು ಬಳಸಬೇಕು. ಸುಮಾರು 1 ಮೀ. ಉದ್ದದ ಜಾಗಕ್ಕೆ 100 ಗ್ರಾಂ ಪಾಸ್ಪೇಟ್ ಗೊಬ್ಬರ ಬೇಕಾಗುತ್ತದೆ. ಕೇವಲ ಮಣ್ಣು ಮತ್ತು ಗೊಬ್ಬರವನ್ನು ಕಲೆಸಿದಾಗ ಮಣ್ಣೇನಾದರು ಕೊಂಚ ಗಟ್ಟಿಯಾದರೆ ಇಲ್ಲವೇ ಅಂಟು ಅಂಟಾದರೆ ಮರಳನ್ನು ಸೇರಿಸಿ ಕಲೆಸಿದರೆ ಒಳ್ಳೆಯದು ಆಗ ಮಣ್ಣು ಸಡಿಲವಾಗಿ ಮೊಳಕೆ ಬರಲು ನೆರವಾಗುತ್ತದೆ. ಒಂದಕ್ಕಿಂತ ಹೆಚ್ಚಿನ ಮಣ್ಣಿನ ಹಾಸಿಗೆಯನ್ನು ಮಾಡುವುದಾದರೆ ಒಂದು ಹಾಸಿಗೆಯಿಂದ ಇನ್ನೊಂದರ ನಡುವೆ ಕಡಿಮೆ ಎಂದರೂ 60 ಸೆ.ಮೀ ಜಾಗವಿರಬೇಕು.

ಹೀಗೆ ಆಣಿಗೊಳಿಸಿದ ಮಣ್ಣಿನ ಹಾಸಿಗೆಯ ಮೇಲೆ ಈಗ ಬೀಜಗಳನ್ನು ನೆಡುವ ಕೆಲಸ. ಇದನ್ನು ಈ ಕೆಳಗಿನಂತೆ ಮಾಡಬಹುದು

  1. ಮೊಳಕೆಗೆ ಬೀಜ ನೆಡುವ ಮೊದಲು ಮಣ್ಣಿನ ಹಾಸಿಗೆಗೆ ಚೆನ್ನಾಗಿ ನೀರು ಹಾಕಬೇಕು.
  2. ಒಂದು ಚೂಪಾದ ಕಡ್ದಿಯಿಂದ ಮಣ್ಣಿನ ಹಾಸಿಗೆಯ ಮೇಲೆ 12 ಮಿ.ಮೀ ಆಳದ ಸಾಲುಗುಂಡಿಗಳನ್ನು ಮಾಡಬೇಕು. ಒಂದು ಸಾಲಿನ ಎರೆಡು ಗುಂಡಿಗಳ ನಡುವೆ 25 ಮಿ.ಮೀ ಜಾಗವಿರಬೇಕು.
  3. ಮಣ್ಣಿನ ಹಾಸಿಗೆಯ ಒಂದು ಸಾಲಿನಿಂದ ಇನ್ನೊಂದು ಸಾಲಿಗೆ ಸುಮಾರು 100 ಮಿ.ಮೀ ದೂರವಿರಬೇಕು.
  4. ಆರಿಸಿದ ಬೀಜಗಳನ್ನು 12 ಮಿ.ಮೀ ಗುಂಡಿಯೊಳಗೆ ಮೆದುವಾಗಿ ಊರಬೇಕು. ನೆನಪಿರಲಿ, ಬೀಜವು ಹೆಚ್ಚು ಆಳಕ್ಕೆ ಹೋಗಬಾರದು.
  5. ಕಾಫಿ ಬೀಜದ ಆಕಾರದಲ್ಲಿ ಒಂದು ಕಡೆ ಮಟ್ಟವಾಗಿದ್ದು ಇನ್ನೊಂದು ಕಡೆ ಅರೆ ಮೊಟ್ಟೆಯಾಕಾರದಲ್ಲಿರುತ್ತದೆ. ಮಟ್ಟವಾಗಿರುವ ಕಡೆಯನ್ನು ನೆಲಕ್ಕೆ ಮುಖಮಾಡಿ ಬೀಜವನ್ನು ಬಿತ್ತಬೇಕು.
  6. ಮಣ್ಣಿನ ಹಾಸಿಗೆಯಲ್ಲಿರುವ ಪಸೆಯು ಆರದಂತೆ ಮತ್ತು ಬಿಸಿಲಿನಿಂದ ಬಿತ್ತನೆಯನ್ನು ಕಾಪಾಡಲು ಒಣಗಿದ ಹುಲ್ಲು ಇಲ್ಲವೇ ಅಡಿಕೆ ಸೋಗೆಯನ್ನು ಈ ಹಾಸಿಗೆಯ ಮೇಲೆ ತೆಳುವಾಗಿ ಹರಡಬೇಕು. ಹೆಚ್ಚಿನ ಬಿಸಿಲು ಇಲ್ಲವೇ ಮಳೆಯಿದ್ದಲ್ಲಿ ಬಿತ್ತನೆಯನ್ನು ಕಾಪಾಡಲು ಮಣ್ಣಿನ ಹಾಸಿಗೆಯ ಮೇಲೆ ಸುಮಾರು ಒಂದು ಮೀಟರ್ ಎತ್ತರದ ಚಪ್ಪರವನ್ನು ಹಾಕಿ ಪ್ಲಾಸ್ಟಿಕ್ ಇಲ್ಲವೇ ಸೊಪ್ಪಿನಿಂದ ಮುಚ್ಚಬೇಕು. ಆದರೆ ಸಾಕಷ್ಟು ಗಾಳಿ ಒಡಾಡಲು ಜಾಗವಿರಬೇಕು.
  7. ಮಣ್ಣಿನ ಹಾಸಿಗೆಗೆ ಪ್ರತಿ ದಿನ ಬೆಳಗ್ಗೆ ಹಾಗು ಸಂಜೆ ನೀರುಣಿಸಬೇಕು. ನೀರುಣಿಸುವಾಗ ಮಣ್ಣು ಸರಿದು ಬೀಜವು ಮಣ್ಣಿನಿಂದ ಹೊರಗೆ ಬಾರದಂತೆ ಎಚ್ಚರವಹಿಸಬೇಕು.
  8. ಬಿತ್ತನೆಯ ಆರೈಕೆಯ ಮೇಲೆ ನಿಗಾವಹಿಸಬೇಕು. ಬಿತ್ತನೆಗೆ ತೊಂದರೆ ಕೊಡುವಂತಹ ಕೀಟಗಳು, ರೋಗ ತರುವಂತಹ ಗಿಡಗಳು ಮತ್ತು ಕಳೆಗಿಡಗಳನ್ನು ತೆಗೆಯುತ್ತಿರಬೇಕು.

ಬಿತ್ತಿದ ಬೀಜವು ಹೇಗೆ ಮೊಳಕೆ ಒಡೆಯುತ್ತದೆ ಎಂದು ವಿವರವಾಗಿ ನಾವು ‘ಬಿತ್ತಿದ ಬೀಜ ಮೊಳಕೆಯಾದೀತು ಹೇಗೆ?‘ ಬರಹದಲ್ಲಿ ತಿಳಿಯಬಹುದು. ಬಿತ್ತಿದ ನಾಲ್ಕು ವಾರಗಳಲ್ಲಿ ಮೊದಲು ತಾಯಿಬೇರು (Radicle) ಬರುತ್ತದೆ, ಬಳಿಕ ಎರೆಡು ಮೊಳಕೆ ಎಲೆಗಳು (Cotyledon) ಮೂಡುತ್ತವೆ. ಈ ಮೊಳಕೆ ಎಲೆಗಳು ಮೊಟ್ಟೆಯಾಕಾರದಲ್ಲಿ ಇದ್ದು ಸುಮಾರು 20 ರಿಂದ 50 ಮಿ.ಮೀ ಅಡ್ಡಗಲವನ್ನು ಹೊಂದಿರುತ್ತದೆ. ಸುಮಾರು ಐದರಿಂದ ಆರನೇ ವಾರದಲ್ಲಿ ಮೊದಲ ಕುಡಿ ಎಲೆಗಳು (Primary leaves) ಮೂಡುತ್ತವೆ. ಇವು ಮೂಡಿದ ಬಳಿಕ ಮೊಳಕೆ ಎಲೆಗಳು ಉದುರಿ ಬೀಳುತ್ತವೆ. ಈ ಹಂತದಲ್ಲಿ ಕುಡಿ ಎಲೆಗಳು ‘ಬೆಳಕಿನ ಅಡುಗೆ’ (Photosynthesis) ನಡೆಸಿ ಸಾಕಷ್ಟು ಊಟವನ್ನು ಗಿಡಕ್ಕೆ ನೀಡುತ್ತಾ ಹೋಗುತ್ತದೆ. ಆಗ ಗಿಡದ ಬೇರುಗಳು ಬೆಳೆದು ಗಟ್ಟಿಯಾಗುತ್ತಾ ಹೋಗುತ್ತವೆ.

ಮಣ್ಣಿನ ಹಾಸಿಗೆಗೆ ಹರಡಿದ್ದ ಹುಲ್ಲಿನ ಮುಚ್ಚುಗೆಯನ್ನು ಬೀಜವು ಮೊಳಕೆಯೊಡದಂತೆ ಹಂತ ಹಂತವಾಗಿ ತೆಗೆಯುತ್ತಾ ಹೋಗಬೇಕಾಗುತ್ತದೆ. ಆಗ ಎಳೆಯ ಮೊಳಕೆಗೆ ಸಾಕಷ್ಟು ಗಾಳಿ ಮತ್ತು ಬೆಳಕು ಸಿಕ್ಕಿ ಬೆಳವಣಿಗೆಗೆ ನೆರವಾಗುತ್ತದೆ. ಸುಮಾರು 40 ರಿಂದ 50 ದಿನದಲ್ಲಿ ಬೀಜವು ಮೊಳಕೆಯೊಡೆದು 200 – 300 ಮಿ.ಮೀ ಬೆಳೆಯುತ್ತದೆ. ಈಗ ಈ ಮೊಳಕೆಯ ಗಿಡಗಳನ್ನು ಮಣ್ಣಿನ ಹಾಸಿಗೆಯಿಂದ ಪ್ಲಾಸ್ಟಿಕ್ ಬುಟ್ಟಿಗಳಿಗೆ ಸಾಗಿಸಲು ಅಣಿಯಾದಂತೆ. ಪ್ಲಾಸ್ಟಿಕ್ ಬುಟ್ಟಿಗಳಲ್ಲಿ ಗಿಡದ ಎರಡನೇ ಹಂತದ ಬೆಳವಣಿಯನ್ನು ನೋಡಿಕೊಳ್ಳಲಾಗುತ್ತದೆ. ಈ ಎರಡನೇ ಹಂತಹ ಬೆಳವಣಿಗೆಯನ್ನು ಮುಂದಿನ ಬರಹದಲ್ಲಿ ತಿಳಿಯೋಣ.

(ಮಾಹಿತಿ ಮತ್ತು ಚಿತ್ರ ಸೆಲೆ: fao.org)

 

ಕಾಫಿ ಬೆಳೆ: ಹುಟ್ಟು ಮತ್ತು ಹರವು

ರತೀಶ ರತ್ನಾಕರ.

 

ಹೀಗೊಂದು ಹಳೆಯ ಕತೆ, ಸುಮಾರು ಒಂದು ಸಾವಿರ ವರ್ಷಗಳ ಹಿಂದೆ ಆಫ್ರಿಕಾದ ಇತಿಯೋಪಿಯಾದ ಕಾಡುಗಳಲ್ಲಿ ಹಲವು ಬುಡಕಟ್ಟು ಜನಾಂಗಗಳು ಬದುಕು ನಡೆಸುತಿದ್ದವು. ಅವರು ಕುರಿ, ಕೋಳಿಯಂತಹ ಸಾಕುಪ್ರಾಣಿಗಳನ್ನೂ ಸಾಕಿಕೊಂಡಿದ್ದರು. ಇವರಲ್ಲಿ ಕಾಲ್ಡಿ ಎಂಬಾತನೊಬ್ಬ ಹಲವು ಕುರಿಗಳನ್ನು ಸಾಕಿದ್ದ. ಒಂದು ದಿನ ಆತನ ಕುರಿಗಳು ಕಾಡಿನ ನಡುವೆ ಸಿಕ್ಕ ಒಂದು ಬಗೆಯ ಹಣ್ಣನ್ನು ತಿಂದೊಡನೆ ಕುಣಿದು ಕುಪ್ಪಳಿಸ ತೊಡಗಿದವು. ಹಣ್ಣಿನಲ್ಲಿರುವ ಯಾವುದೋ ಒಂದು ಅಂಶ ಕುರಿಗಳಿಗೆ ನಲಿವನ್ನು ತರುತ್ತಿದೆ ಎಂದು ಅರಿತು ಕಾಲ್ಡಿಯೂ ಆ ಹಣ್ಣನ್ನು ತಿಂದು ನೋಡಿದ. ಒಂದು ಬಗೆಯ ರುಚಿಯ ಜೊತೆಗೆ ಮನಸ್ಸಿಗೆ ಉಲ್ಲಾಸ ನೀಡಿದ ಆ ಹಣ್ಣನ್ನು ತನ್ನವರಿಗೂ ಪರಿಚಯಿಸಿದ.

ಉಲ್ಲಾಸ ನೀಡುವಂತಹ ಆ ಹಣ್ಣನ್ನು ಆಫ್ರಿಕಾದ ಬುಡಕಟ್ಟಿನವರು ಮೊದಲು ಹಾಗೆಯೇ ತಿನ್ನುತ್ತ ಬಳಿಕ ತಮ್ಮ ಊಟದ ಜೊತೆ ತಿನ್ನತೊಡಗಿದರು. ಹೀಗೆ ಮನುಷ್ಯನ ಊಟದ ಪಾಲಿನಲ್ಲಿ ಸೇರಿಕೊಂಡ ಆ ಹಣ್ಣು ಮುಂದೆ ಹಲವಾರು ಬಗೆಯಲ್ಲಿ ಮಾರ್ಪಾಟುಗೊಂಡು ಬೆಳಗ್ಗೆ ಎದ್ದಾಗ ಇಲ್ಲವೇ ಸಂಜೆಯ ಹೊತ್ತಿಗೆ ಕುಡಿಯುವ ಕಾಫಿಯಾಗಿ ನಮ್ಮ ಬದುಕಿನ ಭಾಗವಾಗಿ ಹೋಗಿದೆ. ಕಾಲ್ಡಿಯು ಮೊತ್ತ ಮೊದಲ ಬಾರಿಗೆ ತನ್ನ ಕುರಿಗಳ ನೆರವಿನಿಂದ ಆ ಹಣ್ಣನ್ನು ತಿಂದ ಜಾಗದ ಹೆಸರು ‘ಕಪ’ ಎಂದು. ‘ಕಪ’ ಎಂಬ ಜಾಗದಲ್ಲಿ ದೊರೆತ ಹಣ್ಣು ಕಾಫಿಯಾಗಿ ಈಗ ನಮ್ಮ ನಡುವೆ ಹೆಸರುವಾಸಿಯಾಗಿದೆ.

ಹೌದು, ನಾವು ತಿನ್ನುವ ಹಾಗು ಕುಡಿಯುವ ವಸ್ತುಗಳ ಹಿಂದೆ ಸಾಕಷ್ಟು ಹಳಮೆ ಹಾಗು ಅರಿಮೆಯಿದೆ. ಕಾಫಿಯ ಹಳಮೆ ಮೇಲೆ ಹೇಳಿದ ಕತೆಯಿಂದ ಮೊದಲಾಗುತ್ತದೆ, ಈ ಹಳಮೆಯ ಜೊತೆ ನಾವು ಅರಿಯಬೇಕಾದ ಕಾಫಿಯ ಅರಿಮೆ ಕೂಡ ಸಾಕಷ್ಟಿದೆ. ಕಾಫಿಯ ಅರಿಮೆಯ ಮೇಲೆ ಕೊಂಚವಾದರು ಬೆಳಕು ಚೆಲ್ಲಬೇಕೆಂದು ಈ ಸರಣಿ ಬರಹ.

ಜಗತ್ತಿನ ಕಾಫಿ ಬೆಳೆಯುವ ನಾಡುಗಳಲ್ಲಿ ಇಂಡಿಯಾವು ಆರನೇ ಜಾಗದಲ್ಲಿದೆ. ಇಂಡಿಯಾದ ಕಾಫಿ ಬೆಳೆಯುವ ರಾಜ್ಯಗಳಲ್ಲಿ ಕರ್ನಾಟಕಕ್ಕೇ ಮೊದಲ ಜಾಗ. ಇಂಡಿಯಾದಲ್ಲಿ ಬೆಳೆಯುವ ಕಾಫಿಯಲ್ಲಿ 71% ಕರ್ನಾಟಕದಲ್ಲಿ ಬೆಳೆಯಲಾಗುತ್ತದೆ. ಕರ್ನಾಟಕದ ಚಿಕ್ಕಮಗಳೂರು, ಹಾಸನ ಹಾಗು ಕೊಡಗು ಕಾಫಿ ಬೆಳೆಯುವ ಮುಖ್ಯ ಜಿಲ್ಲೆಗಳು. ಬೇರೆ ಬೇರೆ ರಾಜ್ಯಗಳಲ್ಲಿಕಾಫಿಯನ್ನು ಬೆಳೆಯುವ ಜಾಗದ ಮಾಹಿತಿಯನ್ನು ಕೆಳಗಿನ ಪಟ್ಟಿಯಲ್ಲಿ ನೋಡಿ.

ಕರ್ನಾಟಕದಲ್ಲಿ ಬೆಳೆಯುವ ಕಾಫಿಯನ್ನು ನೆರಳಿನ ಜಾಗದಲ್ಲಿ ಬೆಳೆಯುವ ಜಗತ್ತಿನ ರುಚಿಕರವಾದ ಕಾಫಿ ಎಂದು ಗುರುತಿಸಲಾಗಿದೆ. ಜಗತ್ತಿನ ಬೇರೆ ಬೇರೆ ಕಡೆ ನೇಸರನ ಬಿಸಿಲಿಗೆ ನೇರವಾಗಿ ಗಿಡವನ್ನು ಬೆಳೆಸಿ ಕಾಫಿಯನ್ನು ಬೆಳೆಯಲಾಗುತ್ತದೆ. ಕರ್ನಾಟಕದ ಬೆಟ್ಟದ ಸಾಲುಗಳಲ್ಲಿ ಹಲವು ಬಗೆಯ ಮರದ ನೆರಳಿನಲ್ಲಿ ಕಾಫಿಯನ್ನು ಬೆಳೆಯಲಾಗುತ್ತದೆ.

ಕಾಫಿ ಗಿಡದ ಬಗ್ಗೆ:
ಕಾಫಿಯು ಗಿಡ ಇಲ್ಲವೇ ಚಿಕ್ಕ ಮರದ ರೂಪದಲ್ಲಿ ಬೆಳೆಯುತ್ತದೆ. ಕಾಫಿಯೇಯ್ (coffeeae) ಎಂಬ ಗಿಡಗಳ ಬುಡಕಟ್ಟು ಮತ್ತು ರುಬಿಯೇಸಿಯಯ್ (Rubiaceae) ಎಂಬ ಕುಟುಂಬಕ್ಕೆ ಈ ತಳಿಯು ಸೇರುತ್ತದೆ. ಕಾಫಿ ಗಿಡವು ಸುಮಾರು 14 ರಿಂದ 15 ಅಡಿಗಳ ವರೆಗೆ ಬೆಳೆಯುತ್ತದೆ. ದಪ್ಪನಾದ ಹಾಗು ಉದ್ದನೆಯ ಒಂದು ಕಾಂಡ ನೆಲದಿಂದ ಹೊರಬಂದು, ಬಳಿಕ ಮೂರು ಹಂತದಲ್ಲಿ ರಕ್ಕೆಗಳು ಕವಲೊಡೆದು, ಒಂದು ದೊಡ್ಡದಾದ ಪೊದೆಯ ಗಿಡದಂತೆ ಕಾಫಿ ಗಿಡವು ಕಾಣುತ್ತದೆ. ಕೊಂಚ ಹೊಳೆಯುವ, ಕೊಂಚ ಮೇಣದ ಪದರ ಮತ್ತು ಕಂದು ಹಸಿರುಬಣ್ಣವನ್ನು ಕಾಫಿಗಿಡದ ಎಲೆಯು ಹೊಂದಿರುತ್ತದೆ. ಕಾಫಿಗಿಡದ ಎಲೆಗಳು ಸುಮಾರು 7 ರಿಂದ 8 ಇಂಚಿನವರೆಗೂ ಉದ್ದವಾಗಿರುತ್ತವೆ.

ಕಾಫಿ ಗಿಡದ ಬೇರುಗಳು ಮುಖ್ಯವಾಗಿ ಮೂರು ಬಗೆಯವು. ಬದಿಯ ಬೇರು (Lateral Roots), ನಲ್ಲಿ ಬೇರು (Tap Roots) ಮತ್ತು ಮೇವಿನ ಬೇರು (Feeder roots). ಬದಿಯ ಬೇರುಗಳು ಗಿಡದಿಂದ ಸುಮಾರು 2 ಮೀಟರ್ಗಳವರೆಗೂ ಹರಡಿಕೊಳ್ಳಬಲ್ಲವು. ನಲ್ಲಿ ಬೇರುಗಳು ನೆಲದ ಅಡಿಗೆ ಸುಮಾರು 1 ರಿಂದ 1.5 ಅಡಿಗಳಷ್ಟು ಬೆಳೆಯಬಲ್ಲವು. ಮೇವಿನ ಬೇರುಗಳು ನೆಲದಿಂದ ಕೇವಲ 20 ಸೆ.ಮೀ. ನಷ್ಟು ಕೆಳಗೆ ಇರುತ್ತವೆ ಆದರೆ ಇವು ಗಿಡದ ಬುಡದಿಂದ ಸುಮಾರು 60-90 ಸೆ.ಮೀ. ದೂರದಿಂದ ಹರಡಿಕೊಂಡಿರುತ್ತವೆ. ಒಟ್ಟಿನಲ್ಲಿ ಗಿಡದ ಬುಡದಿಂದ 30 ರಿಂದ 60 ಸೆ. ಮೀ. ನಷ್ಟು ಆಳಕ್ಕೆ ಸಾಕಷ್ಟು ಕಾಫಿಗಿಡದ ಬೇರುಗಳನ್ನು ಕಾಣಬಹುದು. ಒಂದು ಕಾಫಿ ಗಿಡದ ಬೇರು ಸುಮಾರು 500 ಚದರ ಮೀಟರಿನಷ್ಟು ನೆಲದ ಜಾಗದಿಂದ ನೀರು ಮತ್ತು ಆರಯ್ಕೆಯನ್ನು ಹೀರಿಕೊಳ್ಳಬಲ್ಲವು. ಗಟ್ಟಿಯಾದ ಮತ್ತು ದಪ್ಪನಾಗಿರುವ ಕಾಫಿ ಗಿಡದ ಬೇರು ಬೆಳೆಯಲು ನೈಟ್ರೋಜನ್, ಕ್ಯಾಲ್ಶಿಯಂ ಮತ್ತು ಮೆಗ್ನೇಶಿಯಂ ನ ಅವಶ್ಯಕತೆ ತೀರಾ ಇದೆ, ಅವನ್ನು ಹೀರಿಕೊಳ್ಳಲು ನೆರವಾಗುವಂತಹ ಬೇರಿನ ರೂಪು ರೇಶೆಯನ್ನು ಕಾಫಿ ಗಿಡವು ಹೊಂದಿದೆ.

ಕಾಫಿ ಬೆಳೆಯಲು ಬೇಕಾದ ಗಾಳಿಪಾಡು:
ಕಾಫಿಯ ಬೆಳವಣಿಗೆಗೆ ಸುಮಾರು 15 -28 ಡಿಗ್ರಿ ಸೆಲ್ಶಿಯಸ್ ಬಿಸುಪು ವರುಶವಿಡಿ ಇದ್ದರೆ ಒಳಿತು. ಕೊರೆಯುವ ಚಳಿಯಿದ್ದು, ಹಿಮ ಬೀಳುವಂತಹ ಜಾಗಗಳಲ್ಲಿ ಕಾಫಿಯ ಬೆಳವಣಿಗೆ ಸಾಧ್ಯವಿಲ್ಲ . ಹಾಗೆಯೇ ವರುಶಕ್ಕೆ 60-80 ಇಂಚು ಮಳೆ ಬೀಳಬೇಕು, ಜೊತೆಗೆ ಎರೆಡರಿಂದ ಮೂರು ತಿಂಗಳುಗಳ ಕಾಲ ಅತಿ ಕಡಿಮೆ ಮಳೆಯಿದ್ದು ಬಿಸಿಲು ಸಿಗುವಂತಿರಬೇಕು. ಮಳೆ ಇಲ್ಲವೇ ಚಳಿಯಿಂದ ಕಾಫಿಯ ಗಿಡಕ್ಕೆ ತಂಪು ಹೆಚ್ಚಾದರೆ ಅದರ ಬೆಳವಣಿಗೆಗೆ ಪೆಟ್ಟು ನೀಡಿದಂತೆ, ಹಾಗಾಗಿ ಮಳೆ ಬಿದ್ದೊಡನೆ ಅದರ ನೀರು ಹರಿದು ಹೋಗುವಂತೆ ಮತ್ತು ಗಾಳಿಯು ಚೆನ್ನಾಗಿ ಹರಿದಾಡುವಂತೆ ಇರುವ ಇಳಿಜಾರಿನ ಜಾಗಗಳಲ್ಲಿ ಕಾಫಿಯನ್ನು ಬೆಳಯಲಾಗುತ್ತದೆ. ನೀರು ಹರಿದುಕೊಂಡು ಹೋಗುವಂತಹ ಮತ್ತು ಗಾಳಿಗೆ ಸುಳಿದಾಡಲು ಜಾಗ ಕೊಡುವಂತಹ ಬೆಟ್ಟ-ಗುಡ್ಡದ ಜಾಗವು ಒಳ್ಳೆಯದಾಗಿರುತ್ತದೆ.

ಕಾಫಿ ಬೆಳೆಯಲು ಬೇಕಾಗಿರುವ ಮಣ್ಣಿನಲ್ಲಿ ಸಾವಯವ ಅಂಶಗಳು ಹೆಚ್ಚಿರಬೇಕು ಮತ್ತು ಕೊಂಚ ಹುಳಿಯಾಗಿರಬೇಕು, ಅಂದರೆ ಮಣ್ಣಿನ ಹುಳಿಯಳತೆ (pH) 6.0 – 6.5 ಇರಬೇಕು. ಈ ಎಲ್ಲಾ ಗಾಳಿಪಾಡುಗಳು ಸಿಗಬೇಕೆಂದರೆ ಕಡಲಿನಿಂದ 1000 – 1500 ಮೀಟರ್ ನಷ್ಟು ಎತ್ತರದಲ್ಲಿರುವ ಬೆಟ್ಟ-ಗುಡ್ಡದ ಜಾಗಗಳನ್ನು ಕಾಫಿ ಬೆಳೆಯಲು ಆಯ್ಕೆ ಮಾಡಬೇಕಾಗುತ್ತದೆ. ಕರ್ನಾಟಕದ ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿರುವ ಬೆಟ್ಟಗುಡ್ಡದ ಜಾಗಗಳು ಈ ಗಾಳಿಪಾಡನ್ನು ಹೊಂದಿದ್ದು ಕಾಫಿ ಬೆಳೆಯಲು ಸೂಕ್ತವಾಗಿವೆ.

ಕರ್ನಾಟಕದಲ್ಲಿ ಕಾಫಿಯ ಜೊತೆ ಕಾಳುಮೆಣಸು, ಶುಂಟಿ, ಅಡಿಕೆ, ಚಕ್ಕೆ ಹೀಗೆ ಕೆಲವು ಬೆಳೆಗಳನ್ನು ಒಟ್ಟೊಟ್ಟಿಗೆ ಬೆಳೆಯಲಾಗುತ್ತದೆ. ಮೊದಲೇ ತಿಳಿಸಿದಂತೆ ಕಾಡುಮರಗಳ ಜೊತೆಗೆ ಸಿಲ್ವರ್ ಇಲ್ಲವೇ ಇತರೆ ಮರಮಟ್ಟುಗಳಿಗೆ ನೆರವಾಗುವ ಮರಗಳ ಜೊತೆ ನೆರಳಿನಲ್ಲಿ ಬೆಳೆಯಲಾಗುತ್ತದೆ.

ಕಾಫಿ ಗಿಡದ ಬಗೆಗಳು:
ಕುಡಿಯುವ ಕಾಫಿಯಲ್ಲಿ ನಾವು ಹಲವಾರು ಬಗೆಗಳನ್ನು ಕಾಣುತ್ತೇವೆ ಹಾಗೆಯೇ ಕಾಫಿಯ ಗಿಡಗಳಲ್ಲಿಯೂ ಹಲವಾರು ಬಗೆಗಳಿವೆ, ಅವುಗಳಲ್ಲಿ ಕೆಲವೆಂದರೆ ಲಿಬೆರಿಕಾ (Liberica), ಗ್ರಾಸ್ ಇಂಡೆಂಟೆ (Gros Indente), ಎಕ್ಸೆಲ್ಸ (Excelsa), ಕುಯ್ಲೂ (Kouilou), ಪೆಟಿಟ್ ಇಂಡೇನಿಜೆ (Petit Indénizé), ಅರಾಬಿಕಾ ಮತ್ತು ರೊಬಸ್ಟಾ. ಇವುಗಳಲ್ಲಿ ಅರಾಬಿಕಾವನ್ನು ಜಗತ್ತಿನಲ್ಲೇ ಅತಿ ಹೆಚ್ಚು ಅಂದರೆ ನೂರಕ್ಕೆ 75% ನಷ್ಟು ಬೆಳೆಯಲಾಗುತ್ತದೆ ಅದನ್ನು ಬಿಟ್ಟರೆ ರೊಬಸ್ಟಾ ಎರಡನೆಯ ಜಾಗವನ್ನು ತೆಗೆದುಕೊಳ್ಳುತ್ತದೆ. ಆದರೆ ಕರ್ನಾಟಕದಲ್ಲಿ ಅತಿ ಹೆಚ್ಚು ರೊಬಸ್ಟಾವನ್ನು ಬೆಳೆಯಲಾಗುತ್ತದೆ. ಕರ್ನಾಟಕದಲ್ಲಿ ಬೆಳೆಯುವ ಒಟ್ಟು ಕಾಫಿಯಲ್ಲಿ 67.3% ರೊಬಸ್ಟಾ ಮತ್ತು ಉಳಿದ 32.7% ಅರಾಬಿಕ ಬೆಳೆಯಲಾಗುತ್ತದೆ.

ಹಾಗದರೆ ಅರಾಬಿಕಾ ಮತ್ತು ರೊಬಸ್ಟಾ ನಡುವಿನ ವ್ಯತ್ಯಾಸವೇನು?ಕಾಫಿಯನ್ನು ಮೊಳಕೆ ಬರಿಸುವುದರಿಂದ ಹಿಡಿದು ಹಣ್ಣು ಕುಯ್ಯುವುದರವರೆಗೂ ಇರುವ ಹಂತಗಳಾವವು? ಕುಡಿಯುವ ಕಾಫಿಯಲ್ಲಿ ಹಲವು ಬಗೆಗಳಿವೆ, ಅವುಗಳ ನಡುವಿನ ವ್ಯತ್ಯಾಸವೇನು? ಕಾಫಿಯ ಕುರಿತು ಮತ್ತೇನಾದರು ಸೋಜಿಗದ ಸುದ್ದಿಗಳು ಇದೆಯೇ? ಹೀಗೆ ಹಲವಾರು ಪ್ರಶ್ನೆಗಳು ನಮ್ಮಲ್ಲಿ ಮೂಡುತ್ತವೆ. ಬನ್ನಿ, ಮುಂದಿನ ಬರಹಗಳಲ್ಲಿ ಈ ಮೇಲಿನ ಕೇಳ್ವಿಗಳಿಗೆ ಹೇಳ್ವಿಗಳನ್ನು ಹುಡುಕೋಣ.

(ಮಾಹಿತಿ ಸೆಲೆ: fao.orgwikipediacoffeeresearch.org)

(ಚಿತ್ರ ಸೆಲೆ: Wikimediagktodaycoffeeplanet.nl)

 

ಬಿತ್ತಿದ ಬೀಜ ಮೊಳಕೆ ಒಡೆದೀತು ಹೇಗೆ?

ರತೀಶ ರತ್ನಾಕರ.

ಮಣ್ಣಿನಲ್ಲಿ ಬಿತ್ತಿರುವ, ನೀರಿನಲ್ಲಿ ಕಟ್ಟಿಟ್ಟಿರುವ ಇಲ್ಲವೇ ಮಣ್ಣಿನ ಮೇಲೆ ಬಿದ್ದಿರುವ ಬೀಜಗಳು ಮೊಳಕೆಯೊಡೆದಿರುವುದನ್ನು ನಾವು ನೋಡಿರುತ್ತೇವೆ. ಬೀಜವನ್ನು ಯಾವುದಾದರು ಒಂದು ಡಬ್ಬಿಯೊಳಗೆ ಹಾಗೆಯೇ ಇಟ್ಟಿದ್ದಲ್ಲಿ ಅದು ಯಾವ ಬದಲಾವಣೆಯೂ ಆಗದೆ ಹಾಗೆಯೇ ಇರುವ ಬೀಜವು ಮಣ್ಣಿನ ಇಲ್ಲವೇ ನೀರಿನ ಜಾಗಕ್ಕೆ ಬಿದ್ದೊಡನೆ ಮೊಳಕೆಯೊಡೆದು ಗಿಡವಾಗ ತೊಡಗುತ್ತದೆ. ತಾನಾಗಿಯೇ ಆಗುವ ಈ ಕೆಲಸ ಹಲವು ಹಂತಗಳಲ್ಲಿ ನಡೆಯುತ್ತದೆ. ಇದು ಹೇಗೆ ಎಂದು ತಿಳಿದುಕೊಳ್ಳೋಣ ಬನ್ನಿ.

ಬೀಜವು ಹೇಗೆ ಮೊಳಕೆಯೊಡೆಯುತ್ತದೆ ಎಂದು ಅರಿಯುವ ಮೊದಲು ಬೀಜದ ಏರ್ಪಾಟಿನ (structure) ಬಗ್ಗೆ ತಿಳಿದುಕೊಳ್ಳೋಣ. ಯಾವುದೇ ಬೀಜದಲ್ಲಿ ಈ ಕೆಳಗಿನ ಮೂರು ಭಾಗಗಳಿರುತ್ತವೆ.

ಬಸಿರ ಪೊರೆಕ (Endosperm) : ಬೀಜದ ಹೆಚ್ಚಿನ ಭಾಗವನ್ನು ಇದು ಪಡೆದುಕೊಂಡಿರುತ್ತದೆ. ಬೀಜದ ಬಸಿರಿಗೆ ಬೇಕಾಗುವ ಊಟವನ್ನು ಮತ್ತು ಆರಯ್ಕೆಯನ್ನು ಗಂಜಿಯ ರೂಪದಲ್ಲಿ ಈ ಬಸಿರ ಪೊರೆಕ ನೀಡುತ್ತದೆ, ಅಲ್ಲದೇ ಇದರಲ್ಲಿ ಎಣ್ಣೆ ಹಾಗು ಮುನ್ನು (protein) ಅಂಶಗಳು ಇರುತ್ತದೆ. ಇದು ಬಸಿರಿಗೆ ಬೇಕಾಗುವ ಆರಯ್ಕೆಯನ್ನು ಮಾಡುವುದಲ್ಲದೇ ಅದರ ಊಟವನ್ನು ಕೂಡಿಡುವ ಕೆಲಸವನ್ನು ಮಾಡುತ್ತದೆ. ಬೀಜದ ಹೆಚ್ಚಿನ ಪಾಲು ಬಸಿರ ಪೊರೆಕದಿಂದ ಕೂಡಿರುತ್ತದೆ.

ಬಸಿರು (Embryo): ಬೀಜದ ಬಸಿರು ಇದಾಗಿದ್ದು ಮುಂದೆ ಬೀಜವು ಮೊಳಕೆಯೊಡೆದು ಬೇರು, ಕಾಂಡ ಹಾಗು ಎಲೆಗಳಾಗಲು ಬೇಕಾಗುವಂತಹ ಗೂಡುಕಟ್ಟುಗಳನ್ನು (tissue) ಇದು ಹೊಂದಿರುತ್ತದೆ. ಜೊತೆಗೆ ಮೊಳಕೆ ಎಲೆಯ (cotyledon) ಗೂಡುಕಟ್ಟುಗಳು ಕೂಡ ಇರುತ್ತವೆ. ಇವು ಬೀಜದ ಬಸಿರಿಗೆ ಬೇಕಾಗಿರುವ ಊಟವನ್ನು ಪಕ್ಕದಲ್ಲಿರುವ ಬಸಿರ ಪೊರೆಕದಿಂದ ಬಸಿರಿಗೆ ಸಾಗಿಸುವಲ್ಲಿ ನೆರವಾಗುತ್ತವೆ. ಅಲ್ಲದೇ, ಬೀಜವು ಬಿಡುವ ಮೊದಲ ಎಲೆಯನ್ನು ಕಾಪಾಡಲು ಬೇಕಾಗಿರುವ ಕಾಪು (shield) ಈ ಮೊಳಕೆ ಎಲೆಯಲ್ಲಿ ಇರುತ್ತದೆ. ಬೀಜವು ಒಂದೆಲೆ ಗಿಡವಾಗಬೇಕೋ ಇಲ್ಲವೇ ಎರಡಲೆ ಗಿಡವಾಗಬೇಕೋ ಎಂಬುದು ಈ ಮೊಳಕೆ ಎಲೆಯ ಗೂಡುಕಟ್ಟುಗಳಲ್ಲೇ ಇರುತ್ತದೆ.

ಸಿಪ್ಪೆ: ಬಸಿರು ಹಾಗು ಬಸಿರ ಪೊರೆಕವನ್ನು ಸುತ್ತಿಕೊಂಡು ಎರವಾಗದಂತೆ ಕಾಪಾಡುವುದೇ ಸಿಪ್ಪೆ. ಸಿಪ್ಪೆಯು ಕೆಲವು ಬೀಜಗಳಲ್ಲಿ ತೆಳುವಾಗಿ (ಕಡಲೇ ಬೀಜದಲ್ಲಿರುವ ಹಾಗೆ), ಇನ್ನು ಕೆಲವು ಬೀಜಗಳಲ್ಲಿ ದಪ್ಪನಾಗಿ (ತೆಂಗಿನಕಾಯಿಯಲ್ಲಿರುವ ಹಾಗೆ) ಇರುತ್ತದೆ. ಹೊರಗಿನ ಹಾನಿಗಳಿಂದ ಬಸಿರನ್ನು ಕಾಪಾಡುವುದೇ ಇದರ ಮುಖ್ಯ ಕೆಲಸವಾಗಿರುತ್ತದೆ.

ಒಂದು ಬೀಜವು ಮೊಳಕೆಯೊಡೆಯಲು ಅದಕ್ಕೆ ತಕ್ಕನಾದ ಉಸಿರುಗಾಳಿ (oxygen), ನೀರು ಹಾಗು ಕಾವು ಬೇಕಾಗುತ್ತದೆ. ಬೀಜವು ಯಾವ ತಳಿ ಎಂಬುದರ ಮೇಲೆ ಬೇಕಾಗಿರುವ ಗಾಳಿ, ನೀರು ಮತ್ತು ಬಿಸುಪು ತೀರ್ಮಾನವಾಗುತ್ತದೆ. ಕೆಲವು ಬಗೆಯ ಬೀಜಗಳು ಮೊಳಕೆ ಒಡೆಯುವಲ್ಲಿ ಬೆಳಕು ಕೂಡ ತನ್ನ ಪಾತ್ರ ವಹಿಸುತ್ತದೆ. ಒಂದು ಬೀಜವು ತಾನು ಮೊಳಕೆಯೊಡೆಯಲು ಬೇಕಾದ ನೀರು, ಉಸಿರುಗಾಳಿ ಮತ್ತು ಬಿಸುಪಿಗೆ ತೆರೆದುಕೊಳ್ಳುವವರೆಗೂ ಒರಗಿದ (dormant) ಸ್ಥಿತಿಯಲ್ಲಿ ಇರುತ್ತದೆ. ಅದರ ಒಳಗಿರುವ ಬಸಿರಿಗೆ ಬಸಿರ ಪೊರೆಕ ಊಟ ಒದಗಿಸುತ್ತಿರುತ್ತದೆ, ಇದನ್ನು ಬಿಟ್ಟರೆ ಅದರಲ್ಲಿ ಯಾವ ಬೆಳವಣಿಗೆಯು ಆಗುತ್ತಿರುವುದಿಲ್ಲ. ಒಮ್ಮೆ ಬೇಕಾದ ನೀರು, ಉಸಿರುಗಾಳಿ ಹಾಗು ಬಿಸುಪಿಗೆ ತೆರೆದುಕೊಂಡಾಗ ಅದು ಮೊಳಕೆ ಒಡೆಯುವ ಕೆಲಸವನ್ನು ಆರಂಭಿಸುತ್ತದೆ.

ಬೀಜವು ಮೊಳಕೆ ಒಡೆಯಲು ಬೇಕಾದ ನೀರಿಗೆ ತಾಕಿದಾಗ ಹೊರಗಿನ ನೀರು ಬೀಜದ ಸಿಪ್ಪೆಯೊಳಗೆ ಒಳಹೀರಿಕೆಯ (imbibition) ಮೂಲಕ ಬರುತ್ತದೆ. ಸಿಪ್ಪೆಯೊಳಗೆ ಬಂದ ನೀರನ್ನು ಬಳಸಿಕೊಂಡು ಬಸಿರಿನಲ್ಲಿರುವ ಸೂಲುಗೂಡುಗಳು (cells) ತಮ್ಮ ತರುಮಾರ್ಪುವ (metabolism) ಕೆಲಸವನ್ನು ಹೆಚ್ಚುಗೊಳಿಸಿ ಹಿಗ್ಗಲಾರಂಬಿಸುತ್ತವೆ ಮತ್ತು ಕೆಲವು ಸೂಲುಗೂಡುಗಳು ಒಡೆದು ಹೆಚ್ಚಲಾರಂಬಿಸುತ್ತವೆ. ಬೆಳವಿಕ (auxins) ಮತ್ತು ಇತರೆ ಸುರಿಗೆಗಳು (harmones) ಕೂಡ ಬಸಿರಿನ ಬೆಳವಣಿಗೆಯನ್ನು ಹುರಿದುಂಬಿಸುತ್ತವೆ.

ಬೀಜದ ಒಳಗೆ ಬಂದಿರುವ ನೀರು, ನೀರ‍್ದೊಳೆಗಳನ್ನು (hydrolytic Enzymes) ಚುರುಕುಗೊಳಿಸುತ್ತವೆ ಇವು ಬಸಿರ ಪೊರೆಕದಲ್ಲಿರುವ ಎಣ್ಣೆ, ಮುನ್ನು (protien) ಮತ್ತು ಗಂಜಿಯನ್ನು ಒಡೆದು ಬಸಿರಿನ ತರುಮಾರ್ಪಿಗೆ ನೆರವಾಗುವಂತಹ ರಾಸಾಯನಿಕಗಳನ್ನು ಕೊಡುತ್ತವೆ. ಉಸಿರುಗಾಳಿ ಮತ್ತು ಬಿಸುಪು ಕೂಡ ಬಸಿರಿನ ತರುಮಾರ್ಪಿಗೆ ನೆರವಾಗುತ್ತವೆ. ಇವನ್ನೆಲ್ಲಾ ಬಳಸಿಕೊಂಡು ಬಸಿರು ಮತ್ತಷ್ಟು ಬೆಳೆಯುತ್ತಾ ಹೋಗುತ್ತದೆ. ಹೀಗೆ ಬೆಳೆಯುತ್ತಿರುವ ಬಸಿರಿಗೆ ಬೇಕಾಗಿರುವ ಆರಯ್ಕೆಯನ್ನು ಬಸಿರ ಪೊರೆಕ ಕೊಡುತ್ತಿರುತ್ತದೆ. ಮೊಳಕೆಯು ಒಡೆದು ಎಲೆಯನ್ನು ಬಿಟ್ಟು ನೇಸರನ ಬೆಳಕಿನ ನೆರವಿನಿಂದ ‘ಬೆಳಕಿನ ಒಂದುಗೆ’ (photosynthesis) ನಡೆಸಿ ತನ್ನ ಊಟವನ್ನು ತಾನೇ ಸಿದ್ದ ಮಾಡಿಕೊಳ್ಳುವವರೆಗೂ ಈ ಬಸಿರ ಪೊರೆಕ ನೋಡಿಕೊಳ್ಳುತ್ತಿರುತ್ತದೆ.

ಸಿಪ್ಪೆಯ ಒಳಗೆ ಬಸಿರು ಬೆಳೆಯುತ್ತಿದ್ದಂತೆ ಒಳಗಿನ ಒತ್ತಡ ಹೆಚ್ಚಾಗಿ ಸಿಪ್ಪೆಯು ಒಡೆದು ಬಿಡುತ್ತದೆ. ಸಿಪ್ಪೆಯನ್ನು ಒಡೆದ ಬಸಿರು ಮೊದಲು ತಾಯಿಬೇರಾಗಿ (radicle) ಹೊರಬರುತ್ತದೆ. ಈ ತಾಯಿಬೇರು ಸುತ್ತಲಿನಲ್ಲಿರುವ ಮಣ್ಣನ್ನು ಸೀಳಿಕೊಂಡು ಬೆಳೆಯತೊಡಗುತ್ತದೆ. ಮಣ್ಣಿನಲ್ಲಿರುವ ನೀರು, ಉಸಿರುಗಾಳಿ, ಬಿಸುಪು ಮತ್ತು ಆರಯ್ಕೆಗಳನ್ನು ಬಳಸಿಕೊಂಡು ಬಸಿರು ಮತ್ತಷ್ಟು ಬೆಳೆಯುತ್ತದೆ.

ಒಮ್ಮೆ ತಾಯಿಬೇರಿನ ಬೆಳವಣಿಗೆ ಗಟ್ಟಿಗೊಂಡಮೇಲೆ ಎಳೆಗರಿಯ(plumule) ಬೆಳವಣಿಗೆ ಶುರುವಾಗುತ್ತದೆ. ಎಳೆಗರಿಯು ಮಣ್ಣಿನ ಒಳಗಿನಿಂದ ನೇಸರನ ಬೆಳಕನ್ನು ಹುಡುಕಿಕೊಂಡು ನೆಲದ ಮೇಲ್ಭಾಗಕ್ಕೆ ಬರುತ್ತದೆ. ಹಲವು ಬಗೆಯ ಮೊಳಕೆಗಳಲ್ಲಿ ಎಳೆಗರಿಯನ್ನು ಕಾಯಲು ಬೀಜದ ಸಿಪ್ಪೆಯ ಭಾಗಗಳು ಅಂಟಿಕೊಂಡಿರುತ್ತದೆ. ಎಳೆಗರಿಯು ಬೆಳೆದು ಮೊದಲ ಮೊಳಕೆ ಎಲೆಗಳನ್ನು (Cotyledons) ಬಿಡುತ್ತದೆ ಆಗ ಈ ಸಿಪ್ಪೆಯ ಬಾಗಗಳು ಉದುರಿ ಬೀಳುತ್ತವೆ. ಈ ಎಲೆಗಳು ನೇಸರನ ಬೆಳಕಿನ ನೆರವಿನಿಂದ ತಮ್ಮ ಊಟವನ್ನು ಸಿದ್ದಮಾಡಲಾರಂಬಿಸುತ್ತವೆ. ಈ ಹೊತ್ತಿನಲ್ಲಿ ತಾಯಿಬೇರು ಕೂಡ ಕವಲೊಡೆದು ಹರಡಿಕೊಂಡು ಬೆಳೆಯುತ್ತಾ ಹೋಗುತ್ತದೆ. ಮುಂದೆ ಮೊಳಕೆಯೊಡೆದ ಬೀಜದ ಕಾಂಡ ಹಾಗು ಎಲೆಗಳು ಬಿಟ್ಟು ಬೆಳೆಯುತ್ತದೆ.

ಹೀಗೆ ಒಂದು ಬೀಜವು ಮಣ್ಣಿಗೆ ಸೇರಿ ಮೊಳೆಕೆ ಒಡೆದು ಎಲೆಯಾಗುವವರೆಗೂ ಹಲವು ಹಂತಗಳಲ್ಲಿ ಬದಲಾವಣೆಗಳು ನಡೆಯುತ್ತಿರುತ್ತವೆ. ಈ ಕೆಲಸದಲ್ಲಿ, ಗಾಳಿ, ನೀರು, ಬಿಸುಪು ಮತ್ತು ಬೆಳಕು ದೊಡ್ಡ ಪಾತ್ರವನ್ನು ವಹಿಸುತ್ತವೆ.

 

(ಮಾಹಿತಿ ಸೆಲೆ :intechopen.comnature.com wikipedia.org), (ಚಿತ್ರ ಸೆಲೆ : commons.wikimedia.org)

ಕಾಯಿಯೊಂದು ಹಣ್ಣಾಗುವ ಬಗೆ

ರತೀಶ ರತ್ನಾಕರ.

ಹಣ್ಣುಗಳೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಬಣ್ಣ-ಬಣ್ಣದ, ರುಚಿ-ರುಚಿಯಾದ ಹಣ್ಣುಗಳು ಹೆಚ್ಚಿನವರನ್ನು ಸೆಳೆಯುತ್ತವೆ. ಯಾವುದೇ ಮರ ಇಲ್ಲವೇ ಗಿಡದಿಂದ ಸಿಗುವ ಹಣ್ಣು, ಹಣ್ಣಾಗುವ ಮೊದಲು ಕಾಯಿಯಾಗಿರುತ್ತದೆ. ಯಾವುದೇ ಒಂದು ಕಾಯಿ ಮತ್ತು ಹಣ್ಣಿನ ನಡುವೆ ಬೇರ್ಮೆಯನ್ನು ಗುರುತಿಸಿದರೆ ಅದು ಹೆಚ್ಚಾಗಿ ಅದರ ಬಣ್ಣ ಮತ್ತು ರುಚಿಯಲ್ಲಿ ಬೇರೆ ಬೇರೆಯಾಗಿರುತ್ತವೆ. ಕಾಯಿಗಳು ಹೆಚ್ಚಾಗಿ ಹಸಿರು ಬಣ್ಣದಲ್ಲಿದ್ದು, ರುಚಿ ಮತ್ತು ಕಂಪು ಇಲ್ಲದೆ ಗಟ್ಟಿಯಾಗಿ ಇರುತ್ತವೆ. ಕಾಯಿಯು ಹಣ್ಣಾಗುತ್ತಾ ಬಂದಂತೆ ಬೇರೆ ಬಣ್ಣವನ್ನು ಪಡೆಯುತ್ತದೆ, ಕಾಯಿಗಿಂತ ಮೆತ್ತಗಾಗುತ್ತದೆ, ರುಚಿ ಮತ್ತು ಕಂಪನ್ನು ಪಡೆದುಕೊಳ್ಳುತ್ತದೆ. ಈ ಕಾರಣದಿಂದಾಗಿ ಹಣ್ಣುಗಳು ಪ್ರಾಣಿ ಮತ್ತು ಹಕ್ಕಿಗಳನ್ನು ಸೆಳೆಯುತ್ತವೆ.

ಹೌದಲ್ಲ, ಈ ಕಾಯಿಯು ಹಣ್ಣಾದ ಮೇಲೆ ನಮಗೆ ಉಪಕಾರಿ. ಹಾಗಾದರೆ ಈ ಕಾಯಿಯು ಹೇಗೆ ಹಣ್ಣಾಗುತ್ತದೆ? ಬಣ್ಣ, ರುಚಿ, ಕಂಪನ್ನು ಹೇಗೆ ಪಡೆದುಕೊಳ್ಳುತ್ತದೆ? ಕಾಯಿಯಲ್ಲಿ ನಡೆಯುವ ಯಾವ ತಿರುಳು ಹಣ್ಣಾಗಲು ಕಾರಣ? ಬನ್ನಿ, ಈ ವಿಷಯಗಳ ಕುರಿತು ನಾವಿಂದು ಅರಿಯೋಣ.

ಹೂವಿನ ಗಂಡೆಳೆಗಳು(Anther) ಹೆಣ್ದುಂಡುಗಳೊಡನೆ(Stigma) ಸೇರುವುದನ್ನು ಹೂದುಂಬುವಿಕೆ (Pollination) ಎಂದು ಕರೆಯಲಾಗುತ್ತದೆ. ಯಾವುದೇ ಗಿಡ ಇಲ್ಲವೇ ಮರದಲ್ಲಿ ಹೂದುಂಬುವಿಕೆ ನಡೆದಾಗ ಹೀಚುಗಾಯಿ ಉಂಟಾಗುತ್ತದೆ. ಹೀಗೆ ಉಂಟಾದ ಹೀಚುಗಾಯಿಯ ತತ್ತಿಚೀಲದೊಳಗೆ(Ovary) ಹೊಸ ಬೀಜ ಹುಟ್ಟುತ್ತದೆ. ಈ ಬೀಜಗಳು ಬೆಳೆಯುತ್ತಿದ್ದಂತೆ ಸಯ್ಟೋಕಿನಿನ್ಸ್ (Cytokinins) ಎನ್ನುವ ಸೋರುಗೆಯನ್ನು (Hormone) ಹೊರಹಾಕುತ್ತವೆ. ಈ ಸೋರುಗೆಗಳು ತತ್ತಿಚೀಲದ ಗೋಡೆಯ ಬಳಿ ಬಂದು ಸೂಲುಗೂಡುಗಳನ್ನು (Cells) ಒಡೆದು ಹೊಸ ಹೊಸ ಸೂಲುಗೂಡುಗಳು ಮೂಡಿ ಹೀಚುಗಾಯಿ ದೊಡ್ಡದಾಗುತ್ತಾ ಹೋಗುತ್ತದೆ. ಹಾಗೆಯೇ ಮುಂದುವರಿದು ಈ ಬೀಜಗಳು ಜಿಬ್ಬೆರೆಲಿಕ್ (Gibberellic) ಹುಳಿಯನ್ನು ಹೊರಹಾಕುತ್ತವೆ. ಈ ಹುಳಿಯು ಸೂಲುಗೂಡುಗಳನ್ನು ಹಿಗ್ಗಿಸಲು ನೆರವಾಗುತ್ತದೆ. ಹೀಗೆ ಸೂಲುಗೂಡುಗಳ ಒಡೆಯುವಿಕೆ ಮತ್ತು ಹಿಗ್ಗುವಿಕೆಯಿಂದ ಹೀಚುಗಾಯಿ ದೊಡ್ಡದಾಗುತ್ತಾ ಹೋಗುತ್ತದೆ.

ಮರ, ಗಿಡ ಹಾಗು ಬಳ್ಳಿಗಳ ತಳಿಗಳ ಆಧಾರದ ಮೇಲೆ ಕಾಯಿಯು ಒಂದು ಹಂತದವರೆಗೆ ದೊಡ್ಡದಾಗುತ್ತಾ ಹೋಗುತ್ತದೆ. ಕಾಯಿಯು ಸಾಕಷ್ಟು ದೊಡ್ಡದಾದ ಮೇಲೆ ತಾಯಿಗಿಡವು ಅಬ್ಸಿಸಿಕ್ ಎನ್ನುವ ಸೋರುಗೆಯನ್ನು ಹೊರಬಿಡುತ್ತದೆ ಅದು ಕಾಯಿಯ ಬೀಜದೊಳಗಿರುವ ಬಸಿರನ್ನು (Embryo) ಒರಗಿದ(Dormant) ಸ್ಥಿತಿಯಲ್ಲಿ ದೂಡುತ್ತದೆ. ಆಗ ಬೀಜ ಮತ್ತು ಕಾಯಿ ತನ್ನ ಬೆಳವಣಿಗೆಯನ್ನು ನಿಲ್ಲಿಸುತ್ತವೆ.

ಒಂದು ಕಾಯಿಯಲ್ಲಿ ಸಾಮಾನ್ಯವಾಗಿ ಈ ಕೆಳಗಿನ ರಾಸಾಯನಿಕಗಳು ಇರುತ್ತವೆ.

ಗಂಜಿ (Starch) – ಕಾಯಿಯು ರುಚಿಯಾಗದಿರಲು ಇದೇ ಕಾರಣವಾಗಿರುತ್ತದೆ.
ಎಲೆಹಸಿರು (Chlorophyll) – ಕಾಯಿಯ ಹಸಿರು ಬಣ್ಣಕ್ಕೆ ಇದು ಕಾರಣವಾಗಿರುತ್ತದೆ.
ಹುಳಿ (acids) – ಇದರಿಂದ ಕಾಯಿಯು ತುಂಬಾ ಹುಳಿ ಹುಳಿಯಾಗಿ ಇಲ್ಲವೇ ಒಗರಾಗಿರುತ್ತದೆ.
ಪೆಕ್ಟಿನ್ (Pectin) – ಇದೊಂದು ಬಗೆಯ ಪಾಲಿಸೆಕರಯ್ಡ್ ಆಗಿದ್ದು, ಕಾಯಿಯಲ್ಲಿನ ಸೂಲುಗೂಡುಗಳು ಒಂದಕ್ಕೊಂದು ಗಟ್ಟಿಯಾಗಿ ಅಂಟಿಕೊಂಡಿರುವಂತೆ ನೋಡಿಕೊಳ್ಳುತ್ತದೆ. ಪೆಕ್ಟಿನ್ ದೆಸೆಯಿಂದಾಗಿ ಕಾಯಿಯು ಗಟ್ಟಿಯಾಗಿರುತ್ತದೆ.
ಹೆಬ್ಬುಸುರಿ (Large Organics)- ಇವು ಒಂದು ಬಗೆಯ ಸೀರಕೂಟಗಳಾಗಿದ್ದು (Molecules) ಕಾಯಿಯಲ್ಲಿ ಇರುತ್ತವೆ.

ಹಾಗಾದರೆ ಹಣ್ಣಾಗುವುದು ಹೇಗೆ?

ಯಾವುದೇ ಕಾಯಿಯು ಹಣ್ಣಾಗುವುದರಲ್ಲಿ ಇತಯ್ಲಿನ್ (Ethylene) ಪ್ರಮುಖ ಪಾತ್ರ ವಹಿಸುತ್ತದೆ. ಗಿಡದಲ್ಲಿರುವ ETR1 ಮತ್ತು CTR1 ಎಂಬ ಪೀಳಿಗಳು(genes) ಕಾಯಿಯನ್ನು ಹಣ್ಣಾಗದಂತೆ ತಡೆಹಿಡಿದಿರುತ್ತವೆ. ಯಾವುದೇ ಒಂದು ಮರ, ಗಿಡ ಇಲ್ಲವೇ ಬಳ್ಳಿಯ ಗುಣವೆಂದರೆ ತನ್ನಲ್ಲಿರುವ ಕಾಯಿ ಇಲ್ಲವೇ ಹಣ್ಣುಗಳಿಗೆ ಗಾಯವಾದಾಗ, ಕಾಯಿ/ಹಣ್ಣನ್ನು ಗಿಡದಿಂದ ಕಿತ್ತಾಗ, ಸುತ್ತಲಿನ ಗಾಳಿಪಾಡಿನಲ್ಲಿ ಏರುಪೇರಾಗಿ ತನ್ನ ಎಂದಿನ ಚಟುವಟಿಕೆಗಳಿಗೆ ಒತ್ತಡ ಬಂದಾಗ, ಒಟ್ಟಿನಲ್ಲಿ ಹೇಳುವುದಾದರೆ ತನ್ನ ಎಂದಿನ ಚಟುವಟಿಕೆಗೆ ಯಾವುದೇ ತೊಡಕಾದ ಕೂಡಲೆ ಅದು ಇತಯ್ಲಿನ್ ಗಾಳಿಯನ್ನು ಹೊರಹಾಕತೊಡಗುತ್ತದೆ. ಇತಯ್ಲಿನ್ ಅನ್ನು ತನ್ನ ಕಾಂಡ, ಬೇರು, ಹೂವು, ಕಾಯಿಗಳ ಮೂಲಕ ತನ್ನ ಸುರಕ್ಷತೆಗಾಗಿ ಹೊರಹಾಕುತ್ತದೆ. ಈ ಇತಯ್ಲಿನ್ ಮುಂದೆ ಕಾಯಿ ಹಣ್ಣಾಗುವಲ್ಲಿ ನೆರವಾಗುತ್ತದೆ.

 

ಯಾವುದೇ ಕಾಯಿ ಇತಯ್ಲಿನ್ ಗಾಳಿಗೆ ತಾಕಿದಾಗ ಅದರಲ್ಲಿರುವ ETR1 ಮತ್ತು CTR1 ಪೀಳಿಗಳು ತನ್ನ ಕೆಲಸವನ್ನು ನಿಲ್ಲಿಸುತ್ತವೆ ಮತ್ತು ಬೇರೆ ಪೀಳಿಗಳಿಗೆ ಕೆಲಸಮಾಡಲು ದಾರಿ ಮಾಡಿಕೊಡುತ್ತವೆ. ಕಾಯಿಯಲ್ಲಿರುವ ಇತರೆ ಪೀಳಿಗಳು ಅಮಯ್ಲೇಸಸ್ (amylases), ಹಯ್ಡ್ರೋಲೇಸಸ್ (hydrolases), ಕಯ್ನೇಸಸ್(kinases) ಮತ್ತು ಪೆಕ್ಟಿನೇಸಸ್ (pectinases) ಎಂಬ ದೊಳೆಗಳನ್ನು(enzyme) ಬಿಡುಗಡೆ ಮಾಡುತ್ತವೆ. ಈ ದೊಳೆಗಳು ಕಾಯಿಯನ್ನು ಹಣ್ಣು ಮಾಡಲು ನೆರವಾಗುತ್ತವೆ.

– ಅಮಯ್ಲೇಸಸ್ ದೊಳೆಯು ಕಾಯಿಯಲ್ಲಿರುವ ಗಂಜಿಯನ್ನು ಕಾರ್ಬೋಹೈಡ್ರೇಟ್ ಗಳಾಗಿ(Sugars) ಮಾರ್‍ಪಾಟುಗೊಳಿಸುತ್ತವೆ. ಇದು ಹಣ್ಣಿನ ರುಚಿಗೆ ಕಾರಣವಾಗಿರುತ್ತದೆ.
– ಹೈಡ್ರೊಲೇಸಸ್ ದೊಳೆಯು ಕಾಯಿಯಲ್ಲಿರುವ ಎಲೆಹಸಿರನ್ನು ಅಂತೋಸಯ್ನಿನ್ಸ್ (anthocynins) ಆಗಿ ಮಾರ್ಪಾಟುಗೊಳಿಸುತ್ತವೆ. ಇದು ಹಣ್ಣಿನ ಬಣ್ಣವನ್ನು ಹಸಿರಿನಿಂದ ಮತ್ತೊಂದು ಬಣ್ಣಕ್ಕೆ ತಿರುಗಿಸುತ್ತದೆ.
– ಕಯ್ನೇಸಸ್ ದೊಳೆಯು ಕಾಯಿಯಲ್ಲಿರುವ ಹುಳಿಗಳನ್ನು ತಟಸ್ಥ ಸೀರಕೂಟಗಳಾಗಿ (neutral molecules) ಮಾರ್ಪಾಟುಗೊಳಿಸುತ್ತದೆ. ಇದು ಹಣ್ಣಿನ ಹುಳಿ ಮತ್ತು ಒಗರನ್ನು ಕಡಿಮೆ ಮಾಡುತ್ತದೆ.
– ಪೆಕ್ಟಿನೇಸಸ್ ದೊಳೆಯು ಕಾಯಿಯ ಗಟ್ಟಿತನಕ್ಕೆ ಕಾರಣವಾದ ಪೆಕ್ಟಿನಿನ್ ಅನ್ನು ಕಡಿಮೆಗೊಳಿಸಿ ಹಣ್ಣನ್ನು ಕಾಯಿಗಿಂತ ಮೆತ್ತಗಾಗಿಸುತ್ತದೆ.
– ಹೈಡ್ರೊಲೇಸಸ್ ದೊಳೆಯು ಹೆಬ್ಬುಸುರಿಗಳನ್ನು ಕಂಪು ಬೀರುವ ಸೀರುಗಳಾಗಿ (aromatic compounds) ಮಾರ್ಪಾಟುಗೊಳಿಸುತ್ತದೆ. ಇದು ಹಣ್ಣಿನ ಕಂಪಿಗೆ ಕಾರಣವಾಗುತ್ತದೆ.

ಹೀಗೆ ಕಾಯಿಯು ಇತಯ್ಲಿನ್ ಗಾಳಿಗೆ ತೆರೆದುಕೊಂಡೊಡನೆ ಹಲವಾರು ರಾಸಾಯನಿಕೆ ಚಟುವಟಿಕೆಗಳು ನಡೆದು ಹಣ್ಣಾಗುತ್ತದೆ. ಕೆಲವು ಕಾಯಿಗಳು ಮರ/ಗಿಡದಿಂದ ಕಿತ್ತ ಮೇಲೂ ಇತಯ್ಲೀನ್ ಗಾಳಿಯ ನೆರವಿನಿಂದ ಹಣ್ಣಾಗುತ್ತವೆ ಇಂತಹವನ್ನು ಬಿಡಿಮಾಗು (Climacteric) ಹಣ್ಣುಗಳು ಎಂದು ಕರೆಯುತ್ತಾರೆ. ಎತ್ತುಗೆಗೆ, ಸೇಬು, ಬಾಳೆಹಣ್ಣು, ಸೀಬೆಹಣ್ಣು. ಇನ್ನು ಕೆಲವು ಹಣ್ಣುಗಳು ಮರ/ಗಿಡದಲ್ಲಿ ಇದ್ದರೆ ಮಾತ್ರ ಹಣ್ಣಾಗಬಲ್ಲವು, ಕಿತ್ತರೆ ಹಣ್ಣಾಗಲಾರವು ಅಂತವುಗಳನ್ನು ಗಿಡಮಾಗು (Non- Climacteric) ಹಣ್ಣುಗಳು ಎಂದು ಕರೆಯುತ್ತಾರೆ. ಉದಾಹರಣೆಗೆಗೆ ದ್ರಾಕ್ಷಿ, ಸ್ಟ್ರಾಬೆರ್‍ರಿ.

 

ಸೆಲೆ:-

www.researchgate.net, ncbi, www.scientificamerican.com,

ನೀರಿಗೆ ಏಕೆ ಈ ವಿಶೇಷ ಗುಣಗಳು?

ರಘುನಂದನ್.

ಕಳೆದ ಬರಹದಲ್ಲಿ ತಿಳಿದುಕೊಂಡಂತೆ ನಮ್ಮ ಸುತ್ತಣದಲ್ಲಿರುವ ವಸ್ತುಗಳಲ್ಲೇ ನೀರು ವಿಶೇಷವಾದುದು. ಆದರೆ ವಿಶೇಷವಾದ ಗುಣಗಳು ನೀರಿಗೇ ಏಕೆ ಇವೆ ಎಂಬುದು ಕುತೂಹಲವಾದುದು. ಇದಕ್ಕೆ ಕಾರಣ ಅದರ ಅಣುಗಳು ಒಂದಕ್ಕೊಂದು ಹೊಂದಿಕೊಂಡಿರುವ ಬಗೆ. ಮುಂಚೆ ಹೇಳಿದ ಹಾಗೆ ಹೈಡ್ರೋಜನ್ ಬೆಸೆತದ ಏರ್ಪಾಟು (hydrogen bonding arrangement) ನೀರು ಈ ರೀತಿ ಇರುವುದಕ್ಕೆ ಕಾರಣ.

ಜೀವಿಗಳು ಬದುಕಿರುವಾಗ ಅವುಗಳ ಒಡಲಿನಲ್ಲಿ ಸಾಕಷ್ಟು ರಾಸಾಯನಿಕ ಚಟುವಟಿಕೆಗಳು (chemical reactions) ನಡೆಯುತ್ತಿರುತ್ತವೆ, ಈ ರೀತಿಯ ಚಟುವಟಿಕೆಗಳು ನಡೆಯುವುದಕ್ಕೆ ಸಾಕಷ್ಟು ಪ್ರೋಟೀನ್‍ಗಳು, ಎಂಜೈಮ್ಗಳು ಹರಿದಾಡುತ್ತಿರಬೇಕು. ನರ ನಾಡಿಗಳ ಸಂದಿಗೊಂದಿಗಳಲ್ಲಿ ಸಣ್ಣ ಪುಟ್ಟ ಹಾದಿಗಳಲ್ಲಿ ಪ್ರೋಟೀನುಗಳು ಮತ್ತು ಎಂಜೈಮ್ಗಳು ಓಡಾಡುತ್ತಿರಬೇಕು. ಪ್ರೋಟೀನುಗಳು ಹೇಗೆ ಬೇಕೋ ಹಾಗೆ ತಿರುಗುವ, ನುಣುಚಿಕೊಳ್ಳುವ, ಆಕಾರ ಮಾರ್ಪಡಿಸುವುದಕ್ಕೆ ನೀರು ನೆರವಾಗುತ್ತದೆ. ಅದಕ್ಕಾಗಿಯೇ ನೀರು ಭೂಮಿಯ ಮೇಲಿನ ಜೀವಿಗಳೊಂದಿಗೆ ಈ ಬಗೆಯ ನಂಟನ್ನು ಹೊಂದಿದೆ.

ನೀರನ್ನು ಈ ಮಾದರಿಯಲ್ಲಿ ತೋರಿಸಬಹುದು, ನೆಗೆಟಿವ್
ಚಾರ್ಜ್ ಹೈಡ್ರೋಜನ್ ಅಣುಗಳು ಮತ್ತು ಪಾಸಿಟಿವ್ ಚಾರ್ಜ್ ಆಕ್ಸಿಜನ್ ಎಲೆಕ್ಟ್ರಾನ್‍ಗಳ ನಡುವಿನ ಸೆಳೆತ. ಈ ಸೆಳೆತವು ಒಂದು ಬಗೆಯ ನಿರುಗೆಯನ್ನು ಹುಟ್ಟುಹಾಕುತ್ತದೆ. ಈ ಸೆಳೆತಕ್ಕೆ ವಾನ್ ಡರ್ ವಾಲ್ಸ್ ಕಸುವು (Van der Waals force) ಎನ್ನುತ್ತಾರೆ. ಇವು ನೋಡಲಿಕ್ಕೆ ನಾಲ್ಬದಿಗಳಾಗಿ (Tetrahedra) ಕಾಣುತ್ತವೆ. ಕೆಳಗಿನ ಚಿತ್ರವನ್ನು ನೋಡಿ,

ಎಡಗಡೆಯ ಚಿತ್ರದಲ್ಲಿ ನೀವು ನೀರಿನ ಅಣುಕೂಟಗಳು ಹೇಗೆ ಒಂದಕ್ಕೊಂದು ಅಂಟಿಕೊಂಡಿವೆ ಎಂದು ನೋಡಬಹುದು. ಈ ಬಗೆಯ ನಲ್ಬದಿಗಳು ಹೆಚ್ಚು ಹೆಚ್ಚು ಚಾಚಿದಾಗ ಬಲಗಡೆಯ ಚಿತ್ರದಂತೆ ಕಾಣುತ್ತದೆ. ಇಲ್ಲಿ ಕೆಂಪು ಬಣ್ಣದಲ್ಲಿ ಇರುವುದು ಆಕ್ಸಿಜನ್ ಅಣುಗಳು ಮತ್ತು ಬಿಳಿ ಬಣ್ಣದಲ್ಲಿ ಇರುವುದು ಹೈಡ್ರೋಜನ್ ಅಣುಗಳು. ಈ ಅಣುಗಳ ನಡುವೆ ಇರುವ ಗೆರೆಯೇ ಹೈಡ್ರೋಜನ್ ಬೆಸೆತ (Hydrogen Bond).

ಬೇರೆ ಹರಿಯುವ ವಸ್ತುಗಳು (fluids) ಯಾಕೆ ಹೀಗಿಲ್ಲ ಎಂಬುದನ್ನು ಒರೆಹಚ್ಚಲು ಕೆಲವು ವಿಜ್ಞಾನಿಗಳು ಈ ಬಗೆಯ ಪ್ರಯೋಗವೊಂದನ್ನು ಮಾಡಿದರು. ಈ ಪ್ರಯೋಗದಲ್ಲಿ ವಾನ್ ಡರ್ ವಾಲ್ಸ್ ಕಸುವು (Van der Waals force) ಮತ್ತು ಹೈಡ್ರೋಜನ್ ಬೆಸೆತದ (Hydrogen bonding) ಮೊತ್ತಗಳನ್ನು ಕೊಂಚ ಮಟ್ಟಕ್ಕೆ ಮಾರ್ಪಾಟು ಮಾಡುವುದಕ್ಕೆ ಮುಂದಾದರು. ಅಂದರೆ ನೀರಿನಂತೆಯೇ ಆದರೆ ನೀರಲ್ಲ ಎಂಬ ಅಣುಕೂಟಗಳು ಹೇಗಿರುತ್ತವೆ ಎಂದು ತಿಳಿಯುವುದಕ್ಕೆ.

ಈ ಪ್ರಯೋಗದಿಂದ ಕೆಲವು ಅಚ್ಚರಿಯ ಸಂಗತಿಗಳು ಬೆಳಕಿಗೆ ಬಂದವು. ಹೈಡ್ರೋಜನ್ ಬೆಸೆತ ಇಲ್ಲ ಎಂದುಕೊಳ್ಳಿ ಆಗ ನೀರು ಮೇಲಿನ ಚಿತ್ರದಲ್ಲಿ ತೋರಿದಂತೆ ಮೂರು ದಿಕ್ಕುಗಳ ಬಲೆಯಾಗಿ (three dimensional network) ಅಂಟಿಕೊಂಡಿರದೆ ಉದ್ದುದ್ದ ಸರಪಳಿಗಳಾಗಿ ಇರುತ್ತಿತ್ತು (ಅಮೋನಿಯಾ ಮತ್ತು ಹೈಡ್ರೋಜನ್ ಕ್ಲೋರೈಡಿನಲ್ಲಿ ಇರುವಂತೆ). ಆಗ ನೀರಿಗೆ ಮೇಲೆ ಹೇಳಿದಂತ ಸೆಳೆತ ಇರುತ್ತಿರಲಿಲ್ಲ ಮತ್ತು ಪ್ರೋಟೀನುಗಳನ್ನು ಸಾಗಿಸಲು ಆಗುತ್ತಿರಲಿಲ್ಲ. ಈ ಭೂಮಿಯ ಮೇಲೆ ಜೀವಿಗಳೇ ಇರುತ್ತಿರಲಿಲ್ಲ ಎಂದೇ ಹೇಳಬಹುದು! ಹಾಗೆಯೇ ಹೈಡ್ರೋಜನ್ ಬೆಸೆತಗಳ ಮೂಲೆಗಳ (hydrogen bond angles) ಮೊತ್ತವನ್ನು ಮಾರ್ಪಡಿಸಿದರೂ ನೀರಿನ ಕೆಲವು ಗುಣಗಳು ಮಾರ್ಪಾಟಾಗುತ್ತಿದ್ದವು.

ಈ ಮೇಲಿನ ಕಾರಣಗಳಿಗಾಗಿಯೇ ನೀರು ನೀರಾಗಿರುವುದು ಮತ್ತು ಬೇರೆ ವಸ್ತುಗಳಿಗಿಂತ ಬೇರೆಯಾಗಿರುವುದು. ದಿನ ಬಳಸುವ ಸಾಮಾನ್ಯ ನೀರಿನ ಬಗೆಗಿನ ತಿಳುವಳಿಕೆ ಎಷ್ಟು ಸೋಜಿಗವಲ್ಲವೇ !?.