ಪಾತಿಯ ಬುಟ್ಟಿಗಳಲ್ಲಿ ಕಾಫಿಗಿಡದ ಬೆಳವಣಿಗೆ

ರತೀಶ ರತ್ನಾಕರ.

ಕಾಫಿ ಬಿತ್ತನೆ ಮತ್ತು ಆರೈಕೆಯ ಬರಹದಲ್ಲಿ ಮಣ್ಣಿನ ಹಾಸಿಗೆಯನ್ನು ಬಳಸಿಕೊಂಡು ಕಾಫಿ ಬೀಜದ ಬಿತ್ತನೆ ಮಾಡಿ, ಅದನ್ನು ನೋಡಿಕೊಳ್ಳುವುದರ ಬಗ್ಗೆ ತಿಳಿದೆವು. ಮಣ್ಣಿನ ಹಾಸಿಗೆಯಲ್ಲಿ ಮೊಳಕೆಯೊಡೆದ ಕಾಫಿ ಬೀಜವು ಸುಮಾರು 40 ರಿಂದ 50 ದಿನದಲ್ಲಿ 200 – 300 ಮಿ.ಮೀ ಬೆಳೆಯುತ್ತದೆ. ಈ ಮೊಳಕೆಯ ಗಿಡಗಳನ್ನು ಮಣ್ಣಿನ ಹಾಸಿಗೆಯಿಂದ ಪ್ಲಾಸ್ಟಿಕ್ ಬುಟ್ಟಿಗಳಿಗೆ ಸಾಗಿಸಿ ಎರಡನೇ ಹಂತದ ಬೆಳವಣಿಗೆಯನ್ನು ನೋಡಿಕೊಳ್ಳಲಾಗುತ್ತದೆ.

ಪಾತಿ ಮಾಡುವುದು:
ಮೊಳಕೆಯೊಡೆದ ಕಾಫಿಗಿಡದ ಮುಂದಿನ ಬೆಳವಣಿಗೆಗಾಗಿ ಪ್ಲಾಸ್ಟಿಕ್ ಬುಟ್ಟಿಗಳಲ್ಲಿ ನೆಟ್ಟು, ಪಾತಿಯನ್ನು ಮಾಡಿ ನೋಡಿಕೊಳ್ಳಲಾಗುತ್ತದೆ. ಕಾಫಿಗಿಡಗಳಿಗೆ ಕಡಿಮೆ ಎಂದರು 8 ಇಂಚು ಎತ್ತರ ಮತ್ತು 3 ಇಂಚು ಅಡ್ಡಗಲ ಇರುವ ಪ್ಲಾಸ್ಟಿಕ್ ಬುಟ್ಟಿಗಳು ಬೇಕು. ಮಣ್ಣಿನಲ್ಲಿರುವ ಕೊಳಚೆ ಹಾಗು ಹೆಚ್ಚಿನ ನೀರು ಹರಿದು ಹೋಗುವಂತೆ ಚಿಕ್ಕ ಚಿಕ್ಕ ಕಿಂಡಿಗಳು ಪ್ಲಾಸ್ಟಿಕ್ ಬುಟ್ಟಿಯಲ್ಲಿರಬೇಕು.

ಈ ಪ್ಲಾಸ್ಟಿಕ್ ಬುಟ್ಟಿಗಳಿಗೆ ತುಂಬುವ ಮಣ್ಣಿನಲ್ಲಿ ಸಾಕಷ್ಟು ಸಾರವಿರಬೇಕು. ಸಾರವಿರುವ ಕಾಡಿನ ಮಣ್ಣಿಗೆ ಕೊಟ್ಟಿಗೆ ಗೊಬ್ಬರವನ್ನು ಕಲೆಸಿ, ಮಣ್ಣು ಅಂಟಿಕೊಳ್ಳದಂತೆ ಸಡಿಲವಾಗಿರಲು ಮರಳನ್ನು ಕೂಡ ಸೇರಿಸಿ ಮಣ್ಣನ್ನು ಅಣಿಗೊಳಿಸಲಾಗುವುದು. ಗಿಡದ ಬೆಳವಣಿಗೆಗೆ ಬೇಕಾದ ಪಾಸ್ಪೇಟ್ ಹಾಗು ನೈಟ್ರೋಜನ್ ಹೊಂದಿರುವ ಗೊಬ್ಬರವನ್ನು ಕೂಡ ಬಳಸಲಾಗುತ್ತದೆ. ಕಾಫಿ ಸಿಪ್ಪೆಯ ಗೊಬ್ಬರವನ್ನು ಕೂಡ ಈ ಮಣ್ಣಿಗೆ ಬೆರೆಸಿದರೆ ಮಣ್ಣಿನ ಸಾರ ಹೆಚ್ಚುತ್ತದೆ. ಹೀಗೆ ಗೊಬ್ಬರವನ್ನು ಹೊಂದಿರುವ, ಹುಡಿಯಾಗಿರುವ ಮಣ್ಣನ್ನು ಚೆನ್ನಾಗಿ ಕಲೆಸಿ ಪ್ಲಾಸ್ಟಿಕ್ ಬುಟ್ಟಿಗಳಿಗೆ ತುಂಬಿಸಬೇಕು. ಪ್ಲಾಸ್ಟಿಕ್ ಬುಟ್ಟಿಗಳಿಗೆ ತುಂಬಿಸುವಾಗ ಹೆಚ್ಚು ಒತ್ತಿ ತುಂಬಿಸದೆ, ಬುಟ್ಟಿಯೊಳಗಿರುವ ಮಣ್ಣಿನಲ್ಲಿ ಗಾಳಿ ಮತ್ತು ನೀರು ಯಾವ ತೊಡಕಿಲ್ಲದೆ ಓಡಾಡಲು ಆಗುವಂತೆ ಮಣ್ಣನ್ನು ತುಂಬಿಸಬೇಕು.

ಒಂದು ಪಾತಿಯ ಸಾಲು ಸುಮಾರು 3 ಅಡಿ ಅಗಲ ಮತ್ತು 20 ರಿಂದ 30 ಅಡಿಗಳಷ್ಟು ಉದ್ದವಿರುತ್ತದೆ. ಪಾತಿಯ ಸಾಲಿನ ಬದಿಗೆ ಬಿದಿರಿನ ತಟ್ಟೆಗಳನ್ನು ಹೊಡೆದು ಇಲ್ಲವೇ ಮರದ ಹಲಗೆಗಳನ್ನು ಇರಿಸಿ 30 x 3 ಅಡಿ ಉದ್ದಗಲದ ಕಟ್ಟೆಯನ್ನು ಮಾಡಲಾಗುತ್ತದೆ. ಈ ಕಟ್ಟೆಯ ಒಳಗೆ ಮಣ್ಣು ತುಂಬಿರುವ ಪ್ಲಾಸ್ಟಿಕ್ ಬುಟ್ಟಿಗಳನ್ನು ನೇರವಾಗಿ ಮತ್ತು ಸಾಲಾಗಿ ಒಂದರ ಪಕ್ಕ ಒಂದರಂತೆ ಜೋಡಿಸಿಡಲಾಗುತ್ತದೆ. (ಈ ಕೆಳಗಿನ ಚಿತ್ರವನ್ನು ನೋಡಿ) ಇದು ಬುಟ್ಟಿಗಳು ಗಟ್ಟಿಯಾಗಿ ಹಾಗು ನೇರವಾಗಿ ನಿಲ್ಲಲು ನೆರವಾಗುತ್ತದೆ.

ಮಣ್ಣಿನ ಹಾಸಿಗೆಯಲ್ಲಿ ಮೊಳಕೆಯೊಡೆದ ಗಿಡಗಳನ್ನು ಕಿತ್ತು, ಜೋಡಿಸಿಟ್ಟ ಬುಟ್ಟಿಗಳಿಗೆ ತಂದು ನೆಡಬೇಕು. ಈ ಹಂತದಲ್ಲಿ ಕೆಳಗಿನ ಮಾಹಿತಿಗಳನ್ನು ಗಮನದಲ್ಲಿಡಬೇಕು.

  1. ಮಣ್ಣಿನ ಹಾಸಿಗೆಯಿಂದ ಗಿಡಗಳನ್ನು ಕೀಳುವಾಗ ಸಾಕಷ್ಟು ಎಚ್ಚರದಿಂದ ಕೀಳಬೇಕು. ಮೊಳಕೆಯೊಡೆದ ಗಿಡಗಳಿಗೆ ಮತ್ತು ಬೇರುಗಳಿಗೆ ಗಾಯವಾಗದಂತೆ ನೋಡಿಕೊಳ್ಳಬೇಕು.
  2. ಕಿತ್ತ ಗಿಡಗಳಲ್ಲಿ ಚೆನ್ನಾಗಿ ಕುಡಿಯೊಡೆದಿರುವ ಮತ್ತು ನಲ್ಲಿಬೇರುಗಳು (tap roots) ನೇರವಾಗಿರುವ ಗಿಡಗಳನ್ನು ಮಾತ್ರ ಆರಿಸಿಕೊಳ್ಳಬೇಕು.
  3. ಗಿಡದ ಬೇರುಗಳು ಡೊಂಕಾಗಿದ್ದರೆ ಇಲ್ಲವೇ ಬೇರುಗಳಲ್ಲಿ ಕೂದಲುಗಳು (root hairs) ಕಡಿಮೆಯಿದ್ದರೆ ಅವನ್ನು ಬಳಸಬಾರದು.
  4. ಹುಳ ತಿಂದಿರುವ ಇಲ್ಲವೇ ಜಡ್ಡು ಹಿಡಿದಿರುವ ಮೊಳೆಕೆಯ ಗಿಡಗಳನ್ನು ಬಳಸಬಾರದು.
  5. ಅಗತ್ಯಕ್ಕಿಂತ ಹೆಚ್ಚು ಎಲೆಗಳನ್ನು ಹೊಂದಿರುವ ಗಿಡಗಳನ್ನು ಆರಿಸಿಕೊಳ್ಳಬಾರದು. ಏಕೆಂದರೆ, ಮುಂದೆ ಇವುಗಳ ಬೆಳವಣಿಗೆ ತೀರಾ ಕಡಿಮೆಯಾಗುತ್ತದೆ.

ಹೀಗೆ ಆರಿಸಿಕೊಂಡ ಮೊಳಕೆಯ ಗಿಡಗಳನ್ನು ಕೂಡಲೆ ಪ್ಲಾಸ್ಟಿಕ್ ಬುಟ್ಟಿಗಳಲ್ಲಿ ಈ ಕೆಳಗಿನ ಹಂತಗಳ ಮೂಲಕ ನೆಡಬೇಕು.

  1. ತಂಪಾದ ಹೊತ್ತಿನಲ್ಲಿ ಗಿಡನೆಡುವ ಕೆಲಸವಿಟ್ಟುಕೊಳ್ಳಬೇಕು, ಅಂದರೆ ಬೆಳಗಿನ ಜಾವ ಇಲ್ಲವೇ ಸಂಜೆಯ ಹೊತ್ತು.
  2. ಪಾತಿಯ ಬುಟ್ಟಿಗಳಿಗೆ ಚೆನ್ನಾಗಿ ನೀರುಣಿಸಬೇಕು.
    ಪಾತಿಯ ಬುಟ್ಟಿಗಳಿಗೆ ನೀರುಣಿಸಿದ ಮೇಲೆ, ಚೂಪಾದ ಕಡ್ಡಿಯಿಂದ ಸುಮಾರು 50 ಮಿ.ಮೀ ತೂತವನ್ನು ಕೊರೆಯಬೇಕು.
  3. ಮಣ್ಣಿನ ಹಾಸಿಗೆಯಿಂದ ಕಿತ್ತು ಆರಿಸಿದ ಗಿಡವನ್ನು ತಂದು ಬುಟ್ಟಿಗೆ ನೆಡಬೇಕು. ಮೊಳಕೆಯ ಗಿಡವನ್ನು ನೆಡುವಾಗ ನಲ್ಲಿಬೇರು ಬಾಗದಂತೆ ನೇರವಾಗಿ ನೆಟ್ಟು, ಬುಟ್ಟಿಯ ಮೇಲಿರುವ ಮಣ್ಣಿನಿಂದ ಮೆದುವಾಗಿ ಒತ್ತಬೇಕು.
  4. ಒಂದು ವೇಳೆ ನಲ್ಲಿಬೇರಿನ ಉದ್ದ ಹೆಚ್ಚಾಗಿದ್ದರೆ ಅದರ ಉದ್ದಕ್ಕೆ ಬೇಕಾದ ತೂತವನ್ನು ಬುಟ್ಟಿಯೊಳಗೆ ಮಾಡಿ ನೆಡಬೇಕು.
  5. ಗಿಡವನ್ನು ನೆಟ್ಟ ಮೇಲೆ ಪಾತಿಗೆ ಚೆನ್ನಾಗಿ ನೀರುಣಿಸಬೇಕು. ಆದರೆ ಅಗತ್ಯಕ್ಕಿಂತ ಹೆಚ್ಚು ನೀರುಣಿಸಬಾರದು.
  6. ಪಾತಿಯನ್ನು ಮಳೆ ಮತ್ತು ಬಿಸಿಲಿನಿಂದ ಕಾಪಾಡಲು ಮೊದಲೇ ಚಪ್ಪರವನ್ನು ಮಾಡಿರಬೇಕು. ಹಸಿರು ಮನೆಯ ಒಳಗೂ ಪಾತಿಯನ್ನು ಮಾಡಬಹುದು. ಗಿಡಗಳ ಬೆಳವಣಿಗೆಯಲ್ಲಿ ಹಸಿರು ಮನೆಯು ಹೇಗೆ ನೆರವಾಗುತ್ತದೆ ಎಂದು ‘ಹಸಿರುಮನೆಯ ಗುಟ್ಟು’ ಬರಹದಲ್ಲಿ ತಿಳಿಯಬಹುದು.
  7. ಪಾತಿಯ ಒಳಗೆ ಸಾಕಷ್ಟು ಗಾಳಿ ಮತ್ತು ಬೆಳಕು ಬರುವಂತಿರಬೇಕು.
  8. ಕಾಫಿ ಬುಟ್ಟಿಗಳಲ್ಲಿ ಬರುವ ಕಳೆಗಿಡಗಳನ್ನು ತೆಗೆಯುತ್ತಿರಬೇಕು.
  9. ಪ್ರತಿ ಹದಿನೈದು ದಿನಗಳಿಗೊಮ್ಮೆ ಯೂರಿಯ (46:0:0) ಗೊಬ್ಬರವನ್ನು ಗಿಡದ ಬುಡಕ್ಕೆ ಹಾಕಬೇಕು. ಸುಮಾರು 60 ಗ್ರಾಂ ಯೂರಿಯ ಗೊಬ್ಬರವನ್ನು 100 ಗಿಡಗಳಿಗೆ ಆಗುವಷ್ಟು ಹಾಕಬಹುದು. ಸಾವಯವ ಬೇಸಾಯ ಮಾಡುವವರು ಕೊಟ್ಟಿಗೆ ಗೊಬ್ಬರವನ್ನು ಚೆನ್ನಾಗಿ ಹುಡಿಮಾಡಿ ಹಾಕಬಹುದು. ಕಾಫಿ ಗಿಡದ ಎಲೆಗಳು ಕಂದು ಹಸಿರು ಬಣ್ಣಕ್ಕೆ ತಿರುಗುವಂತಿದ್ದರೆ ಗೊಬ್ಬರವನ್ನು ಕೊಡುವುದು ನಿಲ್ಲಿಸಬೇಕು.
  10. ಪಾತಿಯಲ್ಲಿ ಯಾವುದೇ ಹುಳ-ಹುಪ್ಪಟೆಗಳು ಆಗದಂತೆ ನೋಡಿಕೊಳ್ಳುತ್ತಿರಬೇಕು. ಯಾವುದಾದರು ಗಿಡಕ್ಕೆ ಜಡ್ಡು ಬಂದರೆ ಕೂಡಲೆ ಆ ಗಿಡದ ಬುಟ್ಟಿಯನ್ನು ಬೇರೆ ಮಾಡಿ ಸುಡಬೇಕು ಇಲ್ಲವೇ ದೂರೆ ಎಸೆಯಬೇಕು.

ಪಾತಿಯ ಬುಟ್ಟಿಯಲ್ಲಿನ ಗಿಡಗಳು ಸುಮಾರು 3 ತಿಂಗಳಿಗೆ ಒಂದರಿಂದ ಒಂದೂವರೆ ಅಡಿ ಎತ್ತರಕ್ಕೆ ಬೆಳೆಯಬಲ್ಲವು. ಈಗ ಈ ಗಿಡಗಳು ತೋಟದ ಮಣ್ಣಿನಲ್ಲಿ ನೆಡಲು ಸಿದ್ದವಾದಂತೆ. ಜನವರಿ-ಪ್ರೆಬ್ರವರಿಯಲ್ಲಿ ಮಣ್ಣಿನ ಹಾಸಿಗೆಗೆ ಹೋದ ಕಾಫಿ ಬೀಜಗಳು, ಮಾರ್ಚ್-ಏಪ್ರಿಲ್ ನಲ್ಲಿ ಮೊಳಕೆಯೊಡೆದು ಮೊದಲ ಹಂತದ ಬೆಳವಣಿಗೆಯನ್ನು ಮುಗಿಸುತ್ತವೆ. ಏಪ್ರಿಲ್ ನಿಂದ ಜೂನ್ ವರೆಗೆ ಪಾತಿಯ ಬುಟ್ಟಿಗಳಲ್ಲಿ ತಮ್ಮ ಎರಡನೇ ಹಂತದ ಬೆಳವಣಿಗೆಯನ್ನು ಮುಗಿಸಿಕೊಂಡು, ಸರಿಯಾಗಿ ಮಳೆಗಾಲದ ಹೊತ್ತಿಗೆ ಅಂದರೆ ಜೂನ್ – ಜುಲೈ ತಿಂಗಳಿನಲ್ಲಿ ತೋಟದ ಜಾಗದಲ್ಲಿ ನೆಡಲು ಸಿಗುತ್ತವೆ. ಜನವರಿಯಿಂದ ಜುಲೈವರೆಗೆ ಬೆಳೆಯುವ ಬುಟ್ಟಿಗಿಡಗಳನ್ನು ‘ಒಂದು ನೀರು’ ಗಿಡ ಎಂದು ಕರೆಯುತ್ತಾರೆ. ಒಂದು ವೇಳೆ ಈ ಜುಲೈ ಮಳೆಗಾಲಕ್ಕೆ ನೆಡದೇ ಮುಂದಿನ ವರುಶದ ಜುಲೈ ಮಳೆಗಾಲದ ವರೆಗೂ ಕಾಫಿಗಿಡಗಳು ಬುಟ್ಟಿಯಲ್ಲೇ ಬೆಳೆದರೆ ಅವನ್ನು ‘ಎರೆಡು ನೀರು’ ಗಿಡ ಎಂದು ಕರೆಯಲಾಗುತ್ತದೆ.

ಕಾಫಿಗಿಡವನ್ನು ತೋಟದ ಮಣ್ಣಿನಲ್ಲಿ ನೆಡುವುದಕ್ಕಿಂತ ಮುಂಚೆ ಹೀಗೆ ಎರೆಡು ಹಂತಗಳಲ್ಲಿ ಗಿಡದ ಆರೈಕೆಯನ್ನು ಮಾಡಬೇಕಾಗುತ್ತದೆ.

(ಚಿತ್ರ ಸೆಲೆ: dailycoffeenews.comwikimedia )

ಕಾಫಿಬೀಜದ ಬಿತ್ತನೆ ಮತ್ತು ಆರೈಕೆ

ರತೀಶ ರತ್ನಾಕರ.

ಚುಮುಚುಮು ಚಳಿಯ ಹೊತ್ತಿಗೆ ಬಿಸಿ ಬಿಸಿ ಕಾಫಿಯನ್ನು ಹೀರುವಾಗ, ಇಲ್ಲವೇ ಒತ್ತಡಗಳ ನಡುವೆ ಮನಸ್ಸಿನ ಉಲ್ಲಾಸಕ್ಕೆಂದು ಕಾಫಿ ಗುಟುಕನ್ನು ಕುಡಿಯುವಾಗ,ಕಾಫಿಯು ಕಾಫಿಯಾಗಲು ಮಾಡಬೇಕಾದ ಕೆಲಸಗಳೆಷ್ಟು ಎಂಬ ಅರಿವು ಇರುವುದಿಲ್ಲ. ಇದು ಕಾಫಿಗೆ ಮಾತ್ರವಲ್ಲ, ನಾವು ತಿನ್ನುವ ಬೇಳೆ-ಕಾಳುಗಳು, ಇತರೆ ತಿನಿಸುಗಳು ಬೆಳೆದು ಬಂದ ಬಗೆ ಹೆಚ್ಚಾಗಿ ನಮಗೆ ತಿಳಿದಿರುವುದಿಲ್ಲ. ಕಾಫಿ ಬೆಳೆಯುವ ಕುಟುಂಬದಿಂದಲೇ ಬೆಳೆದು, ಕಾಫಿ ಬೆಳೆಯುವ ಬಗೆಯನ್ನು ತೀರಾ ಹತ್ತಿರದಿಂದ ಕಂಡಿರುವುದರಿಂದ ಇದರ ಬೇಸಾಯದ ಅರಿವನ್ನು ಆದಷ್ಟು ಹಂಚಿಕೊಳ್ಳುವ ನಿಟ್ಟಿನಲ್ಲಿ ಈ ಸರಣಿ ಬರಹ ಮಾಡುತ್ತಿರುವೆ. ಹಿಂದಿನ ಬರಹಗಳಲ್ಲಿ ಕಾಫಿಯ ಹುಟ್ಟು ಮತ್ತು ಹರವು ಹಾಗು ಅರಾಬಿಕಾ ಮತ್ತು ರೊಬಸ್ಟಾ ಬೆಳೆಗಳ ನಡುವಿನ ಬೇರ‍್ಮೆಯನ್ನು ತಿಳಿದೆವು. ಈ ಬರಹದಲ್ಲಿ ಕಾಫಿಯನ್ನು ಬೆಳೆಯುವ ಮೊದಲ ಹಂತವಾದ ಕಾಫಿ ಗಿಡಮನೆ (Nursery) ಮಾಡುವುದರ ಕುರಿತು ಕೊಂಚ ಅರಿಯೋಣ.

ಬೀಜಗಳ ಆಯ್ಕೆ:
ಕಾಫಿಯ ಮುಂದಿನ ತಲೆಮಾರಿಗೆ ಬೇಕಾದ ಕಾಫಿ ಬೀಜವನ್ನು ಆಯ್ದುಕೊಳ್ಳುವುದು ಒಂದು ಅರಿದಾದ ಕೆಲಸ. ತೋಟದ ನಡುವೆ ಇರುವ ಆರೋಗ್ಯಕರವಾದ, ಒಳ್ಳೆಯ ಇಳುವರಿಯನ್ನು ಕೊಡುತ್ತಿರುವ ಕಾಫಿ ಗಿಡದಿಂದ ತುಂಬಾನೇ ಚೆನ್ನಾಗಿರುವ ಹಣ್ಣುಗಳನ್ನು ಆಯ್ದುಕೊಳ್ಳಬೇಕು. ಹಣ್ಣುಗಳು ದೊಡ್ಡದಿದ್ದಷ್ಟು ಒಳ್ಳೆಯದು. ಮೊದಲೇ ತಿಳಿದಿರುವಂತೆ ನವೆಂಬರ್ ಕೊನೆಯ ವಾರದಿಂದ ಜನವರಿ ಮೊದಲ ವಾರದವರೆಗು ಕಾಫಿ ಹಣ್ಣಿನ ಕಾಲ. ಈ ಹೊತ್ತಿನಲ್ಲಿ, ಗಿಡದಲ್ಲಿರುವ ಕಾಫಿಯು ಚೆನ್ನಾಗಿ ಹಣ್ಣಾದ ಕೂಡಲೇ ಹಣ್ಣುಗಳನ್ನು ಕಿತ್ತುಕೊಂಡಿರಬೇಕು.

ಕಿತ್ತ ಕಾಫಿ ಹಣ್ಣಿನ ಸಿಪ್ಪೆಗಳನ್ನು ಬಿಡಿಸಿ, ಕಾಫಿ ಬೀಜಗಳನ್ನು ಆರಿಸಬೇಕು. ನೆನಪಿರಲಿ, ಒಂದು ಕಾಫಿ ಹಣ್ಣಿನಲ್ಲಿ ಎರೆಡು ಕಾಫಿ ಬೀಜಗಳಿರುತ್ತವೆ. ಒಂದು ವೇಳೆ ಕಾಫಿ ಹಣ್ಣಿನಲ್ಲಿ ಒಂದೇ ಬೀಜವಿದ್ದರೆ ಇಲ್ಲವೇ ಒಂದು ಬೀಜ ದೊಡ್ಡದಾಗಿದ್ದು ಇನ್ನೊಂದು ತುಂಬಾ ಚಿಕ್ಕದಾಗಿದ್ದರೆ ಅಂತಹ ಬೀಜಗಳನ್ನು ಮೊಳಕೆ ಬರಿಸಲು ಆಯ್ದುಕೊಳ್ಳಬಾರದು. ಹೀಗೆ ಸಿಪ್ಪೆ ಬಿಡಿಸಿದ ಬೀಜಗಳ ಮೇಲ್ಮೈನಲ್ಲಿ ಲೋಳೆಯು ಇರುತ್ತದೆ, ಈ ಲೋಳೆಯಿಂದಾಗಿ ಬೀಜಗಳು ಒಂದಕ್ಕೊಂದು ಅಂಟಿಕೊಳ್ಳುವ ಸಾಧ್ಯತೆ ಹೆಚ್ಚು, ಅಂಟಿಕೊಂಡ ಅವನ್ನು ಬಿಡಿಸಿದಾಗ ಬೀಜಗಳಿಗೆ ಗಾಯವಾಗಿ ಹಾಳಾಗುವ ಸಾದ್ಯತೆ ಹೆಚ್ಚು. ಅದಕ್ಕಾಗಿ ಕೆಲವರು ಕಾಫಿ ಹಣ್ಣನ್ನು ಬಿಡಿಸಿದ ಕೂಡಲೇ ತೊಳೆಯುತ್ತಾರೆ ಇಲ್ಲವೇ ಬೂದಿಯನ್ನು ಬೀಜಗಳಿಗೆ ಹಾಕಿ ಕಲಿಸುತ್ತಾರೆ. ಬೂದಿಯನ್ನು ಬಳಸುವುದರಿಂದ ಇನ್ನೊಂದು ಉಪಕಾರವೆಂದರೆ, ಬೂದಿಯು ಬೀಜದ ಸುತ್ತಲೂ ಅಂಟಿಕೊಳ್ಳುವುದರಿಂದ ಇರುವೆ ಇಲ್ಲವೇ ಮತ್ತಿತರ ಕೀಟಗಳಿಂದ ಬೀಜಗಳನ್ನು ಕಾಪಾಡಿಕೊಳ್ಳಬಹುದು. ಇದೇ ಕೆಲಸ ಮಾಡುವಂತಹ ಯಾವುದಾದರು ಸಾಮಾಗ್ರಿಗಳು ಮಾರುಕಟ್ಟೆಯಲ್ಲಿ ಸಿಕ್ಕರೆ ಅವನ್ನು ಕೂಡ ಬಳಸಬಹುದು. ಬೂದಿಯನ್ನು ಬಳಸುವುದು ಕೊಂಚ ಹಳೆಯ ಪದ್ದತಿ, ಬೂದಿಯನ್ನು ಬೀಜಗಳ ಜೊತೆ ಕಲೆಸುವಾಗ ಬೀಜದ ಮೇಲಿನ ಸಿಪ್ಪೆಗೆ ಗಾಯವಾಗುವ ಸಾದ್ಯತೆಗಳೂ ಇವೆ.

ಹೀಗೆ ಅಣಿಗೊಳಿಸಿದ ಬೀಜಗಳನ್ನು ಬಲೆಯಂತಿರುವ ತಟ್ಟೆಗಳು ಇಲ್ಲವೇ ಗೋಣಿಚೀಲದ ಮೇಲೆ ಹರಡಿ ನೆರಳಿನಲ್ಲಿಟ್ಟು ಎರೆಡರಿಂದ ಮೂರು ದಿನಗಳ ಕಾಲ ಆರಿಸಬೇಕು. ಹರಡಿರುವ ಬೀಜಗಳ ನಡುವೆ ಚೆನ್ನಾಗಿ ಗಾಳಿ ಓಡಾಡುವಂತಿರಬೇಕು. ಬೀಜದಲ್ಲಿರುವ ಪಸೆ (moisture) 10% ಗಿಂತ ಕಡಿಮೆ ಆಗದಂತೆ ಎಚ್ಚರ ವಹಿಸಬೇಕು. ಬಿಸಿಲಿನಲ್ಲಿ ಇಲ್ಲವೇ ಹೆಚ್ಚು ದಿನಗಳ ಕಾಲ ಒಣಗಿಸಿದರೆ ಪಸೆಯು 10% ಗಿಂತ ಕಡಿಮೆಯಾಗಬಹುದು. ಆರಿದ ಬೀಜಗಳಿಂದ ಗಾಯಗೊಂಡ ಇಲ್ಲವೇ ಚೆನ್ನಾಗಿಲ್ಲದ ಬೀಜಗಳನ್ನು ಆರಿಸಿ ತೆಗೆಯಬೇಕು. ಈಗ ನಿಮ್ಮ ಮುಂದಿನ ತಲೆಮಾರಿನ ಕಾಫಿಗಿಡಗಳಿಗೆ ಬೇಕಾದ ಬೀಜಗಳು ಸಿದ್ದವಾದಂತೆ. ಹೀಗೆ ಸಿದ್ದವಾದ ಬೀಜಗಳನ್ನು ಆದಷ್ಟು ಬೇಗ ಮೊಳಕೆಗಾಗಿ ನೆಡಬೇಕು ಇಲ್ಲವಾದರೆ ಮೊಳಕೆ ಬರುವ ಸಾದ್ಯತೆಗಳು ಕಡಿಮೆ. ಬೀಜಗಳನ್ನು ಆದಷ್ಟು ಕಡಿಮೆ ಬಿಸುಪು ಮತ್ತು ಹೆಚ್ಚು ಪಸೆಯಿರುವ ಜಾಗದಲ್ಲಿ ಕಾಪಿಟ್ಟುಕೊಳ್ಳಬೇಕು.

ಮೊಳಕೆಗೆ ಬೀಜ ಬಿತ್ತನೆ:

ಬೀಜಗಳನ್ನು ಮೊಳಕೆಗೆ ಹಾಕುವ ಮೊದಲು ಎಷ್ಟು ಗಿಡಗಳು ತಮಗೆ ಬೇಕಾಗಬಹುದು ಎಂಬ ಲೆಕ್ಕಾಚಾರವನ್ನು ಮಾಡಿಟ್ಟುಕೊಳ್ಳಬೇಕು. ಒಂದು ಕೆ.ಜಿ. ಕಾಫಿ ಬೀಜದಲ್ಲಿ ಸುಮಾರು 3000ದಿಂದ 4000 ಬೀಜಗಳು ಸಿಗುತ್ತವೆ. ಇವುಗಳಲ್ಲಿ 75% ನಷ್ಟು ಬೀಜಗಳು ಮೊಳಕೆ ಬರಬಹುದು ಎಂಬ ಲೆಕ್ಕಾಚಾರವಿದೆ. ತಮಗೆ ಎಷ್ಟು ಕಾಫಿಗಿಡಗಳು ಬೇಕಾಗಬಹುದು ಎಂದು ಎಣಿಸಿಕೊಂಡು ಮೊಳಕೆಗೆ ಅಷ್ಟು ಬೀಜಗಳನ್ನು ಅಣಿಗೊಳಿಸಬೇಕು.

ಮೊಳಕೆಗೆ ಹಾಕಲು ಮೊದಲು ಮಣ್ಣಿನ ಹಾಸಿಗೆಯನ್ನು ಅಣಿಮಾಡಬೇಕು. ಮಣ್ಣಿನ ಹಾಸಿಗೆಯು ಸುಮಾರು 1.2 ಮೀಟರ್ ಅಗಲವಾಗಿರಬೇಕು ಮತ್ತು ಸಾಕಷ್ಟು ಉದ್ದ ಅಂದರೆ ಸುಮಾರು 6 ಮೀಟರ್ ನಷ್ಟು ಇರಬೇಕು. ಮಣ್ಣಿನ ಹಾಸಿಗೆಯ ಎತ್ತರ ನೆಲದಿಂದ ಸುಮಾರು 15 ಸೆ.ಮೀ ನಷ್ಟಿರಬೇಕು. ಹಾಸಿಗೆಯಲ್ಲಿರುವ ಮಣ್ಣನ್ನು ಚೆನ್ನಾಗಿ ಅಗೆದು ಸಡಿಲಗೊಳಿಸರಬೇಕು, ಸಾಕಷ್ಟು ಸಾರವಿರುವ ಕಾಡಿನ ಮಣ್ಣನ್ನು ತಂದು ಇದರ ಜೊತೆ ಸೇರಿಸಿದರೆ ಒಳ್ಳೆಯದು. ಬೀಜಗಳಿಗೆ ಬೇಕಾದ ಗೊಬ್ಬರಕ್ಕಾಗಿ ಸಗಣಿ ಗೊಬ್ಬರವನ್ನು ಮಣ್ಣಿನ ಜೊತೆ ಬೆರೆಸಬೇಕು. ಇದರ ಜೊತೆಗೆ ಬೀಜದ ಮೊಳಕೆಗೆ ನೆರವಾಗುವಂತಹ ಪಾಸ್ಪೇಟ್ ಗೊಬ್ಬರ (ಸಾವಯವ ಇಲ್ಲವೇ ರಾಸಾಯನಿಕ ಎಂಬುದು ಬೆಳೆಗಾರರಿಗೆ ಬಿಟ್ಟದ್ದು) ವನ್ನು ಬಳಸಬೇಕು. ಸುಮಾರು 1 ಮೀ. ಉದ್ದದ ಜಾಗಕ್ಕೆ 100 ಗ್ರಾಂ ಪಾಸ್ಪೇಟ್ ಗೊಬ್ಬರ ಬೇಕಾಗುತ್ತದೆ. ಕೇವಲ ಮಣ್ಣು ಮತ್ತು ಗೊಬ್ಬರವನ್ನು ಕಲೆಸಿದಾಗ ಮಣ್ಣೇನಾದರು ಕೊಂಚ ಗಟ್ಟಿಯಾದರೆ ಇಲ್ಲವೇ ಅಂಟು ಅಂಟಾದರೆ ಮರಳನ್ನು ಸೇರಿಸಿ ಕಲೆಸಿದರೆ ಒಳ್ಳೆಯದು ಆಗ ಮಣ್ಣು ಸಡಿಲವಾಗಿ ಮೊಳಕೆ ಬರಲು ನೆರವಾಗುತ್ತದೆ. ಒಂದಕ್ಕಿಂತ ಹೆಚ್ಚಿನ ಮಣ್ಣಿನ ಹಾಸಿಗೆಯನ್ನು ಮಾಡುವುದಾದರೆ ಒಂದು ಹಾಸಿಗೆಯಿಂದ ಇನ್ನೊಂದರ ನಡುವೆ ಕಡಿಮೆ ಎಂದರೂ 60 ಸೆ.ಮೀ ಜಾಗವಿರಬೇಕು.

ಹೀಗೆ ಆಣಿಗೊಳಿಸಿದ ಮಣ್ಣಿನ ಹಾಸಿಗೆಯ ಮೇಲೆ ಈಗ ಬೀಜಗಳನ್ನು ನೆಡುವ ಕೆಲಸ. ಇದನ್ನು ಈ ಕೆಳಗಿನಂತೆ ಮಾಡಬಹುದು

  1. ಮೊಳಕೆಗೆ ಬೀಜ ನೆಡುವ ಮೊದಲು ಮಣ್ಣಿನ ಹಾಸಿಗೆಗೆ ಚೆನ್ನಾಗಿ ನೀರು ಹಾಕಬೇಕು.
  2. ಒಂದು ಚೂಪಾದ ಕಡ್ದಿಯಿಂದ ಮಣ್ಣಿನ ಹಾಸಿಗೆಯ ಮೇಲೆ 12 ಮಿ.ಮೀ ಆಳದ ಸಾಲುಗುಂಡಿಗಳನ್ನು ಮಾಡಬೇಕು. ಒಂದು ಸಾಲಿನ ಎರೆಡು ಗುಂಡಿಗಳ ನಡುವೆ 25 ಮಿ.ಮೀ ಜಾಗವಿರಬೇಕು.
  3. ಮಣ್ಣಿನ ಹಾಸಿಗೆಯ ಒಂದು ಸಾಲಿನಿಂದ ಇನ್ನೊಂದು ಸಾಲಿಗೆ ಸುಮಾರು 100 ಮಿ.ಮೀ ದೂರವಿರಬೇಕು.
  4. ಆರಿಸಿದ ಬೀಜಗಳನ್ನು 12 ಮಿ.ಮೀ ಗುಂಡಿಯೊಳಗೆ ಮೆದುವಾಗಿ ಊರಬೇಕು. ನೆನಪಿರಲಿ, ಬೀಜವು ಹೆಚ್ಚು ಆಳಕ್ಕೆ ಹೋಗಬಾರದು.
  5. ಕಾಫಿ ಬೀಜದ ಆಕಾರದಲ್ಲಿ ಒಂದು ಕಡೆ ಮಟ್ಟವಾಗಿದ್ದು ಇನ್ನೊಂದು ಕಡೆ ಅರೆ ಮೊಟ್ಟೆಯಾಕಾರದಲ್ಲಿರುತ್ತದೆ. ಮಟ್ಟವಾಗಿರುವ ಕಡೆಯನ್ನು ನೆಲಕ್ಕೆ ಮುಖಮಾಡಿ ಬೀಜವನ್ನು ಬಿತ್ತಬೇಕು.
  6. ಮಣ್ಣಿನ ಹಾಸಿಗೆಯಲ್ಲಿರುವ ಪಸೆಯು ಆರದಂತೆ ಮತ್ತು ಬಿಸಿಲಿನಿಂದ ಬಿತ್ತನೆಯನ್ನು ಕಾಪಾಡಲು ಒಣಗಿದ ಹುಲ್ಲು ಇಲ್ಲವೇ ಅಡಿಕೆ ಸೋಗೆಯನ್ನು ಈ ಹಾಸಿಗೆಯ ಮೇಲೆ ತೆಳುವಾಗಿ ಹರಡಬೇಕು. ಹೆಚ್ಚಿನ ಬಿಸಿಲು ಇಲ್ಲವೇ ಮಳೆಯಿದ್ದಲ್ಲಿ ಬಿತ್ತನೆಯನ್ನು ಕಾಪಾಡಲು ಮಣ್ಣಿನ ಹಾಸಿಗೆಯ ಮೇಲೆ ಸುಮಾರು ಒಂದು ಮೀಟರ್ ಎತ್ತರದ ಚಪ್ಪರವನ್ನು ಹಾಕಿ ಪ್ಲಾಸ್ಟಿಕ್ ಇಲ್ಲವೇ ಸೊಪ್ಪಿನಿಂದ ಮುಚ್ಚಬೇಕು. ಆದರೆ ಸಾಕಷ್ಟು ಗಾಳಿ ಒಡಾಡಲು ಜಾಗವಿರಬೇಕು.
  7. ಮಣ್ಣಿನ ಹಾಸಿಗೆಗೆ ಪ್ರತಿ ದಿನ ಬೆಳಗ್ಗೆ ಹಾಗು ಸಂಜೆ ನೀರುಣಿಸಬೇಕು. ನೀರುಣಿಸುವಾಗ ಮಣ್ಣು ಸರಿದು ಬೀಜವು ಮಣ್ಣಿನಿಂದ ಹೊರಗೆ ಬಾರದಂತೆ ಎಚ್ಚರವಹಿಸಬೇಕು.
  8. ಬಿತ್ತನೆಯ ಆರೈಕೆಯ ಮೇಲೆ ನಿಗಾವಹಿಸಬೇಕು. ಬಿತ್ತನೆಗೆ ತೊಂದರೆ ಕೊಡುವಂತಹ ಕೀಟಗಳು, ರೋಗ ತರುವಂತಹ ಗಿಡಗಳು ಮತ್ತು ಕಳೆಗಿಡಗಳನ್ನು ತೆಗೆಯುತ್ತಿರಬೇಕು.

ಬಿತ್ತಿದ ಬೀಜವು ಹೇಗೆ ಮೊಳಕೆ ಒಡೆಯುತ್ತದೆ ಎಂದು ವಿವರವಾಗಿ ನಾವು ‘ಬಿತ್ತಿದ ಬೀಜ ಮೊಳಕೆಯಾದೀತು ಹೇಗೆ?‘ ಬರಹದಲ್ಲಿ ತಿಳಿಯಬಹುದು. ಬಿತ್ತಿದ ನಾಲ್ಕು ವಾರಗಳಲ್ಲಿ ಮೊದಲು ತಾಯಿಬೇರು (Radicle) ಬರುತ್ತದೆ, ಬಳಿಕ ಎರೆಡು ಮೊಳಕೆ ಎಲೆಗಳು (Cotyledon) ಮೂಡುತ್ತವೆ. ಈ ಮೊಳಕೆ ಎಲೆಗಳು ಮೊಟ್ಟೆಯಾಕಾರದಲ್ಲಿ ಇದ್ದು ಸುಮಾರು 20 ರಿಂದ 50 ಮಿ.ಮೀ ಅಡ್ಡಗಲವನ್ನು ಹೊಂದಿರುತ್ತದೆ. ಸುಮಾರು ಐದರಿಂದ ಆರನೇ ವಾರದಲ್ಲಿ ಮೊದಲ ಕುಡಿ ಎಲೆಗಳು (Primary leaves) ಮೂಡುತ್ತವೆ. ಇವು ಮೂಡಿದ ಬಳಿಕ ಮೊಳಕೆ ಎಲೆಗಳು ಉದುರಿ ಬೀಳುತ್ತವೆ. ಈ ಹಂತದಲ್ಲಿ ಕುಡಿ ಎಲೆಗಳು ‘ಬೆಳಕಿನ ಅಡುಗೆ’ (Photosynthesis) ನಡೆಸಿ ಸಾಕಷ್ಟು ಊಟವನ್ನು ಗಿಡಕ್ಕೆ ನೀಡುತ್ತಾ ಹೋಗುತ್ತದೆ. ಆಗ ಗಿಡದ ಬೇರುಗಳು ಬೆಳೆದು ಗಟ್ಟಿಯಾಗುತ್ತಾ ಹೋಗುತ್ತವೆ.

ಮಣ್ಣಿನ ಹಾಸಿಗೆಗೆ ಹರಡಿದ್ದ ಹುಲ್ಲಿನ ಮುಚ್ಚುಗೆಯನ್ನು ಬೀಜವು ಮೊಳಕೆಯೊಡದಂತೆ ಹಂತ ಹಂತವಾಗಿ ತೆಗೆಯುತ್ತಾ ಹೋಗಬೇಕಾಗುತ್ತದೆ. ಆಗ ಎಳೆಯ ಮೊಳಕೆಗೆ ಸಾಕಷ್ಟು ಗಾಳಿ ಮತ್ತು ಬೆಳಕು ಸಿಕ್ಕಿ ಬೆಳವಣಿಗೆಗೆ ನೆರವಾಗುತ್ತದೆ. ಸುಮಾರು 40 ರಿಂದ 50 ದಿನದಲ್ಲಿ ಬೀಜವು ಮೊಳಕೆಯೊಡೆದು 200 – 300 ಮಿ.ಮೀ ಬೆಳೆಯುತ್ತದೆ. ಈಗ ಈ ಮೊಳಕೆಯ ಗಿಡಗಳನ್ನು ಮಣ್ಣಿನ ಹಾಸಿಗೆಯಿಂದ ಪ್ಲಾಸ್ಟಿಕ್ ಬುಟ್ಟಿಗಳಿಗೆ ಸಾಗಿಸಲು ಅಣಿಯಾದಂತೆ. ಪ್ಲಾಸ್ಟಿಕ್ ಬುಟ್ಟಿಗಳಲ್ಲಿ ಗಿಡದ ಎರಡನೇ ಹಂತದ ಬೆಳವಣಿಯನ್ನು ನೋಡಿಕೊಳ್ಳಲಾಗುತ್ತದೆ. ಈ ಎರಡನೇ ಹಂತಹ ಬೆಳವಣಿಗೆಯನ್ನು ಮುಂದಿನ ಬರಹದಲ್ಲಿ ತಿಳಿಯೋಣ.

(ಮಾಹಿತಿ ಮತ್ತು ಚಿತ್ರ ಸೆಲೆ: fao.org)

 

ಅರಾಬಿಕಾ ಮತ್ತು ರೊಬಸ್ಟಾ ಕಾಫಿಗಳ ಬೇರ‍್ಮೆ

ರತೀಶ ರತ್ನಾಕರ.

ಹಿಂದಿನ ಬರಹದಲ್ಲಿ ಕಾಫಿಯ ಹುಟ್ಟು ಮತ್ತು ಹರವಿನ ಬಗ್ಗೆ ಕೊಂಚ ತಿಳಿದುಕೊಂಡೆವು. ಈ ಬರಹದಲ್ಲಿ ತಿಳಿಸಿರುವಂತೆ ಜಗತ್ತಿನಲ್ಲಿ ಬೆಳೆಯುತ್ತಿರುವ ಕಾಫಿಯಲ್ಲಿ 75% ಅರಾಬಿಕವನ್ನು ಬೆಳೆದರೆ ಉಳಿದ ಹೆಚ್ಚಿನ ಭಾಗ ರೊಬಸ್ಟಾವನ್ನು ಬೆಳೆಯುತ್ತಾರೆ. ಹಾಗಾದರೆ ಈ ಅರಾಬಿಕಾ ಹಾಗು ರೊಬಸ್ಟಾ ಕಾಫಿಯ ನಡುವಿನ ಬೇರ‍್ಮೆಗಳೇನು ಎಂಬುದನ್ನು ಈ ಬರಹದಲ್ಲಿ ತಿಳಿಯೋಣ.

ಅರಾಬಿಕಾ ಮತ್ತು ರೊಬಸ್ಟಾ ಕಾಫಿಗಳು ನೋಡುವುದಕ್ಕೆ ಹೆಚ್ಚುಕಡಿಮೆ ಒಂದೇ ರೀತಿಯಲ್ಲಿ ಕಂಡರೂ, ಬೆಳೆಯುವ ಬಗೆ ಮತ್ತು ಅವುಗಳ ಗುಣಗಳಲ್ಲಿ ಹಲವು ಬೇರ‍್ಮೆಗಳನ್ನು ಕಾಣಬಹುದು. ಆ ಗುಣಗಳು ಮತ್ತು ಅದರ ಬೇರ‍್ಮೆಗಳನ್ನು ಈ ಕೆಳಗೆ ನೀಡಲಾಗಿದೆ.

ಕಾಫಿಯ ತಳಿ:

ಅರಾಬಿಕಾ ಕಾಫಿಯೂ ‘ಕಾಫಿಯೇಯ್ ಅರಾಬಿಕಾ‘(Coffea Arabica) ಎಂಬ ತಳಿಯಾಗಿದ್ದು ಈ ತಳಿಯ ಇರುವಿಕೆಯನ್ನು 1753 ರಲ್ಲಿ ಕಂಡು ಹಿಡಿಯಲಾಯಿತು. ಮೊತ್ತ ಮೊದಲನೆಯದಾಗಿ ಬೇಸಾಯ ಮಾಡಿ ಬೆಳೆಯಲು ಆರಂಬಿಸಿದ ತಳಿ ಎಂಬ ಹೆಗ್ಗಳಿಗೆಯನ್ನು ಇದು ಹೊಂದಿದೆ. ಅತಿ ಎತ್ತರದ ಮತ್ತು ಬೆಟ್ಟದ ಸಾಲುಗಳಲ್ಲಿ ಬೆಳೆಯಲು ಸೂಕ್ತವಾಗಿರುವ ಬೆಳೆಯಾದ ಇದು ‘ಬೆಟ್ಟದ ಕಾಫಿ’ ಎಂದು ಹೆಸರುವಾಸಿಯಾಗಿದೆ. ಈ ಕಾಫಿಯಲ್ಲಿರುವ ‘ಕಾಫಿನ್’ (Caffeine) ಅಂಶವು ಕಾಫಿಯ ಉಳಿದ ಎಲ್ಲಾ ತಳಿಗಳಿಗಿಂತ ಕಡಿಮೆಯಿದೆ, ಹಾಗಾಗಿ ಉಳಿದ ಕಾಫಿಯ ತಳಿಗಳಿಗಿಂತ ರುಚಿಕರವಾದ ಕಾಫಿ ಎಂದು ಕೂಡ ಕರೆಸಿಕೊಳ್ಳುತ್ತದೆ.

ರೊಬಸ್ಟಾ ಕಾಫಿಯೂ ‘ಕಾಫಿಯೇಯ್ ಕನೆಪೋರಾ‘ (Coffea Canephora) ಎಂಬ ತಳಿಯಾಗಿದ್ದು ಇದನ್ನು 1895ರಲ್ಲಿ ಕಂಡು ಹಿಡಿಯಲಾಯಿತು. ವ್ಯಾವಹಾರಿಕ ಉದ್ದೇಶಕ್ಕಾಗಿಯೇ ಈ ಕಾಫಿಯ ತಳಿಯನ್ನು ಕಂಡು ಹಿಡಿಯಲಾಗಿದೆ. ಅರಾಬಿಕಾ ಕಾಫಿಗಿಂತ ಹೆಚ್ಚಿನ ಇಳುವರಿಯನ್ನು ರೊಬಸ್ಟಾ ಕಾಫಿಬೆಳೆಯಲ್ಲಿ ಕಾಣಬಹುದು. ಅರಾಬಿಕಾ ಕಾಫಿಯ ಬೆಳೆಗೆ ಹೋಲಿಸಿದರೆ ಇದು ಕೀಟ ಮತ್ತು ರೋಗಕ್ಕೆ ಕೂಡಲೇ ತುತ್ತಾಗುವುದಿಲ್ಲ ಮತ್ತು ಬದಲಾಗುವ ಗಾಳಿಪಾಡಿಗೆ ಹೊಂದಿಕೊಂಡು ಬೆಳೆಯುತ್ತದೆ ಹಾಗಾಗಿ ರೊಬಸ್ಟಾ ಬೆಳೆಯನ್ನು ಅರಾಬಿಕಕ್ಕಿಂತ ಕಡಿಮೆ ಆರೈಕೆ ಕೊಟ್ಟು ಸುಲಭವಾಗಿ ಬೆಳೆಯಬಹುದು.

ಕಾಫಿ ಬೆಳೆಯುವ ಗಾಳಿಪಾಡು:
ಅರಾಬಿಕಾ ಕಾಫಿ ಬೆಳೆಯಲು ವರುಶದ ಬಿಸುಪು 15-24 ಡಿಗ್ರಿ ಸೆಂಟಿಗ್ರೇಡ್ ಮತ್ತು ವರುಶಕ್ಕೆ 1200 – 2200 ಮಿ.ಮೀ ಮಳೆ ಬೀಳುವಂತಿರಬೇಕು. ಕಡಲ ಮಟ್ಟದಿಂದ ಅರಾಬಿಕಾ ಕಾಫಿ ಬೆಳೆಯುವ ಜಾಗ ಕಡಿಮೆ ಎಂದರೂ 1200 -2200 ಮೀಟರ್ ನಷ್ಟು ಎತ್ತರದಲ್ಲಿರಬೇಕು. ಆದರೆ ಹಿಮ ಬೀಳುವ ಪ್ರದೇಶದಲ್ಲಿ ಈ ಬೆಳೆಯನ್ನು ಬೆಳೆಯಲು ಸಾಧ್ಯವಿಲ್ಲ.

ರೊಬಸ್ಟಾ ಕಾಫಿಬೆಳೆಯಲು ವರುಶದ ಬಿಸುಪು 18-35 ಡಿಗ್ರಿಯವರೆಗೆ ಮತ್ತು ವರುಶಕ್ಕೆ ಅರಾಬಿಕಾಕ್ಕಿಂತ ಹೆಚ್ಚಿನ ಮಳೆ ಅಂದರೆ 2200 ರಿಂದ 3000 ಮಿ.ಮೀ ಮಳೆ ಬೀಳುವಂತಿರಬೇಕು. ಕಡಲ ಮಟ್ಟದಿಂದ ತೀರ ಎತ್ತರವಿಲ್ಲದ ಜಾಗದಲ್ಲಿಯೂ ಕೂಡ ಇದನ್ನು ಬೆಳೆಯಬಹುದು. ಇದನ್ನು ಬೆಳೆಯಲು ಕಡಲ ಮಟ್ಟದಿಂದ ಸುಮಾರು 0-800 ಮೀಟರ್ ನಷ್ಟು ಎತ್ತರದಲ್ಲಿರುವ ಜಾಗವಿದ್ದರೂ ಸಾಕು.

ಕಾಫಿ ಬೀಜ ಮತ್ತು ಗಿಡದ ಏರ್ಪಾಟು:

ಅರಾಬಿಕಾ ಕಾಫಿಯೂ ನೆಲದಿಂದ 9-12 ಮೀಟರ್ ನವರೆಗೆ ಬೆಳೆಯುತ್ತವೆ. ಎಲೆಗಳು ಕಂದು ಹಸಿರು ಬಣ್ಣದಲ್ಲಿದ್ದು ಕೊಂಚ ಹೊಳೆಯವಂತಿರುತ್ತವೆ. ಮೊಟ್ಟೆಯಾಕಾರದ ಎಲೆಗಳು ಸುಮಾರು 6-12 ಸೆ.ಮೀ. ಉದ್ದ ಮತ್ತು 4-8 ಸೆ.ಮೀ. ಅಗಲವಿರುತ್ತವೆ. ಅರಾಬಿಕಾ ಕಾಫಿಯ ಹಣ್ಣುಗಳು 10-15 ಮಿ.ಮಿ ಅಡ್ಡಳತೆ ಹೊಂದಿದ್ದು ಎರೆಡು ಬೇಳೆಗಳನ್ನು ಒಳಗೊಂಡಿರುತ್ತದೆ. ಈ ಬೇಳೆಗಳೇ ಕಾಫಿ ಬೀಜಗಳು. ಕಾಫಿ ಬೀಜವು ಉದ್ದ-ಉರುಟಾದ (Elliptical) ಆಕಾರವನ್ನು ಹೊಂದಿರುತ್ತವೆ. ಅರಾಬಿಕಾ ಕಾಫಿಯ ಬೇರುಗಳು ರೊಬಸ್ಟಾಗೆ ಹೋಲಿಸಿದರೆ ಹೆಚ್ಚು ಆಳಕ್ಕೆ ಹರಡಿಕೊಂಡಿರುತ್ತದೆ.      

ರೊಬಸ್ಟಾ ಕಾಫಿಯೂ ಕೂಡ ನೆಲದಿಂದ 10 ಮೀಟರ್ ವರೆಗೆ ಬೆಳೆಯುತ್ತವೆ. ಆದರೆ ಇದರ ಕಾಂಡವು ಅರಾಬಿಕಾಕ್ಕಿಂತ ಹೆಚ್ಚು ದಪ್ಪನಾಗಿದ್ದು ಎಲೆಗಳು ಕೂಡ ದೊಡ್ಡದಾಗಿರುತ್ತವೆ. ಕಾಫಿಬೀಜವು ಉಂಡನೆಯ ಆಕಾರದಲ್ಲಿದ್ದು ಹೆಚ್ಚು ಕಡಿಮೆ ಮೊಟ್ಟೆಯಾಕಾರದಲ್ಲಿರುತ್ತವೆ (Oval).

ಕಾಫಿಗಿಡಗಳು ಹೊರಗಿನ ರೋಗ ಮತ್ತು ಕೀಟಗಳಿಂದ ಕಾಪಾಡಿಕೊಳ್ಳಲು ತಮ್ಮ ಕಾಫಿ ಬೀಜಗಳಲ್ಲಿ ಕೆಫಿನ್ ಮತ್ತು ಕ್ಲೋರೊಜೆನಿಕ್ ಹುಳಿ(Chlorogenic Acid) ಯನ್ನು ಹೊಂದಿರುತ್ತವೆ. ಅರಾಬಿಕಾ ಕಾಫಿ ಬೀಜವು 0.8 – 1.4% ನಷ್ಟು ಕೆಪಿನ್ ಹಾಗು 5.5-8.0% ನಷ್ಟು ಕ್ಲೋರೋಜೆನಿಕ್ ಹುಳಿಯನ್ನು ಹೊಂದಿದೆ. ರೊಬಸ್ಟಾವು ಅರಾಬಿಕಾಕ್ಕಿಂತ ಎರೆಡು ಪಟ್ಟು ಅಂದರೆ 1.7 – 4% ನಷ್ಟು ಕೆಪಿನ್ ಮತ್ತು 7-10% ಕ್ಲೋರೋಜೆನಿಕ್ ಹುಳಿಯನ್ನು ಹೊಂದಿದೆ. ಇದರಿಂದ ರೊಬಸ್ಟಾ ಕಾಫಿಯು ಕೀಟ ಹಾಗು ರೋಗಗಳಿಗೆ ಬೇಗನೆ ತುತ್ತಾಗುವುದಿಲ್ಲ ಮತ್ತು ಅರಾಬಿಕಾಕ್ಕಿಂತ ಗಟ್ಟಿಮುಟ್ಟಾಗಿ ಬೆಳೆಯುತ್ತದೆ.

ಅರಾಬಿಕಾ ಕಾಫಿಯೂ ರೊಬಸ್ಟಾಗಿಂತ ಸರಿಸುಮಾರು 60% ಹೆಚ್ಚು ಸೀರೆಣ್ಣೆ(Lipids) ಯನ್ನು ಮತ್ತು ರೊಬಸ್ಟಾಗಿಂತ ಎರೆಡುಪಟ್ಟು ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದೆ. ಅರಾಬಿಕಾದಲ್ಲಿ 6-9% ಸಕ್ಕರೆ ಅಂಶವಿದ್ದರೆ ರೊಬಸ್ಟಾದಲ್ಲಿ 3-7% ಇದೆ. 15-17% ಸೀರೆಣ್ಣೆ ಅರಾಬಿಕಾ ಬೀಜದಲ್ಲಿ ಇದ್ದರೆ 10-11.5% ರೊಬಸ್ಟಾದಲ್ಲಿದೆ, ಇದರಿಂದಾಗಿ ಅರಾಬಿಕ ಕಾಫಿಯ ಹುಳಿತ (Acidity) ಹೆಚ್ಚಿದೆ. ಸಕ್ಕರೆಯ ಅಂಶ ಕಡಿಮೆಯಿದ್ದು ಕೆಪಿನ್ ಅಂಶ ಹೆಚ್ಚಿರುವುದರಿಂದ ರೊಬಸ್ಟಾ ಕಾಫಿಯು ಹೆಚ್ಚು ಕಹಿಯಾಗಿದೆ.

ಇದಲ್ಲದೇ ಕಾಫಿ ಬೀಜದಲ್ಲಿ ಹಲವು ರಾಸಾಯನಿಕ ಅಂಶಗಳವೆ. ಅವುಗಳಲ್ಲಿ ಕ್ವಿನಿಕ್ (Quinic), ಕ್ಲೋರೋಜೆನಿಕ್ (Chlorogenic), ಸಿಟ್ರಿಕ್ (Citric), ಪಾಸ್ಪರಿಕ್ (Phosphoric) , ಅಸಿಟಿಕ್ (Acetic) ಹುಳಿಗಳು (Acids), ಟ್ರೈಗೊನೆಲೈನ್, ಕೆಪಿನ್, ಸೀರೆಣ್ಣೆ ಮತ್ತು ಕಾರ‍್ಬೋಹೈಡ್ರೇಟ್ಸ್.

ಇದಲ್ಲದೇ, ಈ ಕಾಫಿಯ ತಳಿಗಳ ನಡುವೆ ಮತ್ತಷ್ಟು ಬೇರ‍್ಮೆಗಳಿವೆ ಮೇಲಿನವು ಕೆಲವು ಮುಖ್ಯವಾದವು ಮಾತ್ರ. ಈ ಬೇರ‍್ಮೆಗಳ ಕಾರಣದಿಂದ ಅರಾಬಿಕಾ ಹಾಗು ರೊಬಸ್ಟಾ ಬೆಳೆಗಳ ಬೇಸಾಯದಲ್ಲಿಯೂ ಕೂಡ ಬೇರ‍್ಮೆಗಳನ್ನು ಕಾಣಬಹುದು. ಅರಾಬಿಕಾ ಕಾಫಿಕಾಫಿಯನ್ನು ಹೆಚ್ಚು ನಿಗಾವಹಿಸಿ ಕೀಟ ಹಾಗು ರೋಗಗಳಿಂದ ಕಾಪಾಡಿಕೊಂಡು ಬೆಳೆಯ ಬೇಕಾಗುತ್ತದೆ. ಅಲ್ಲದೇ ಗಾಳಿಪಾಡಿನ ಹೆಚ್ಚುಕಡಿಮೆ ಕೂಡ ಅರಾಬಿಕಾ ಗಿಡವನ್ನು ತೊಂದರೆಗೆ ಈಡು ಮಾಡುತ್ತದೆ. ಇದಕ್ಕೆ ಹೆಚ್ಚಿನ ನೆರಳಿನ ಅವಶ್ಯಕತೆ ಇದೆ. ಆದರೆ ರೊಬಸ್ಟಾ ಬೆಳೆ ಹಾಗಲ್ಲ, ಇದನ್ನು ಬೆಳೆಯುವುದು ಅರಾಬಿಕಾಕ್ಕಿಂತ ಸುಲಭ ಹಾಗು ಹೆಚ್ಚಿನ ನಿಗಾ ವಹಿಸುವ ಅವಶ್ಯಕತೆ ಇರುವುದಿಲ್ಲ.

ಬೇರ‍್ಮೆಗಳು ಏನೇ ಇದ್ದರು ಎರೆಡೂ ಬಗೆಯ ಕಾಫಿಗಳು ತಮ್ಮ ಒಂದಲ್ಲ ಒಂದು ಗುಣಗಳಿಂದ ಹೆಸರುವಾಸಿಯಾಗಿವೆ. ಇವುಗಳನ್ನು ಬೆಳೆಯುವ ಬಗೆಯನ್ನು ಮುಂದಿನ ಬರಹಗಳಲ್ಲಿ ಅರಿಯೋಣ.

(ಮಾಹಿತಿ ಸೆಲೆ: fao.orgwikipediacoffeeresearch.org)

ಏನಿದು ಓಟಾ ತಂತ್ರಜ್ಞಾನ?

ಜಯತೀರ್ಥ ನಾಡಗೌಡ.

ಓಟಾ(OTA) ಎಂದರೆ ಓವರ್-ದಿ-ಏರ್(Over-the-Air) ಎಂದು ಬಿಡಿಸಿ ಹೇಳಬಹುದು. ಚೂಟಿಯುಲಿ(Smartphone), ಕಂಪ್ಯೂಟರ್, ಸ್ಮಾರ್ಟ್ ಕೈಗಡಿಯಾರ ಮುಂತಾದ ಗ್ಯಾಜೆಟ್ ಬಳಸುವ ಹಲವರು ಈ ಹೆಸರು ಕೇಳಿರುತ್ತೀರಿ. ಬಹುತೇಕ ಚೂಟಿಯುಲಿ, ಕಂಪ್ಯೂಟರ್‌ಗಳ ಬಳಕೆದಾರರಿಗೆ ನವಿರಣಿಗೆ (Software) ಹೊಸದಾಗಿಸಲು ಸಂದೇಶಗಳು ಬಂದಿರುವುದು ಸಹಜ. ಹಲವಾರು ಬಾರಿ ಈ ಸಂದೇಶಗಳನ್ನು ಕ್ಲಿಕ್ಕಿಸಿ ಚೂಟಿಯುಲಿ, ಕಂಪ್ಯೂಟರ್ ನವಿರಣಿಗೆಯನ್ನು ಹೊಸದಾಗಿಸಿಕೊಂಡಿರುತ್ತೆವೆ.ಆದರೆ ಈ ಸಂದೇಶ/ಮುನ್ಸೂಚನೆಗಳು(Notification) ಹೇಗೆ ತಾನಾಗೇ ಬರುತ್ತವೆ? ಇವುಗಳನ್ನು ಯಾರು ಕಳಿಸುತ್ತಾರೆ? ಇವೆಲ್ಲ ಪ್ರಶ್ನೆಗಳಿಗೆ ಉತ್ತರವೇ ಓವರ್-ದಿ-ಏರ್  ತಂತ್ರಜ್ಞಾನ. 

ತಂತಿಯಿಲ್ಲದ, ವೈಫೈ ಇಲ್ಲವೇ ಸೆಲ್ಯುಲಾರ್ ಸಂಪರ್ಕಗಳ ಮೂಲಕ ಚೂಟಿಯುಲಿ, ಕಂಪ್ಯೂಟರ್,ಸೆಟ್-ಟಾಪ್ ಬಾಕ್ಸ್, ಕಾರುಗಳ ಟೆಲಿಕಮ್ಯುನಿಕೇಶನ್ ಮುಂತಾದ ಎಂಬೆಡೆಡ್(Embedded) ಉಪಕರಣಗಳಿಗೆ ಹೊಸದಿಕೆ(update) ಮಾಡುವ ಏರ್ಪಾಟನ್ನು ಓವರ್-ದಿ-ಏರ್ ಅಪ್ಡೇಟ್ ಚಳಕ ಎನ್ನುತ್ತಾರೆ. ಇದರಲ್ಲಿ ಯಾವುದೇ ತಂತ್ರಜ್ಞರ(Technician) ಅಗತ್ಯವಿರುವುದಿಲ್ಲ.  ಅಗತ್ಯ ಉಪಕರಣಗಳಿಗೆ ನೇರವಾಗಿ ಸಂದೇಶದ ಮೂಲಕ ಈ ಅಪ್ಡೇಟ್‍ಗಳನ್ನು ಕಳುಹಿಸಿಕೊಡಲಾಗುತ್ತದೆ. ಈ ತಂತ್ರಜ್ಞಾನದ ಅಳವಡಿಕೆಯ ಮೊದಲು ತಂತ್ರಜ್ಞರು ನೇರವಾಗಿ ಇಲ್ಲವೇ ನೆರವುದಾಣಗಳಿಗೆ(Service Centre) ಭೇಟಿ ನೀಡಿಯೋ , ಕಂಪ್ಯೂಟರ್, ಚೂಟಿ ಕೈಗಡಿಯಾರ(Smart Watch) ಮುಂತಾದವುಗಳ ನವಿರಣಿಗೆಯನ್ನು ಹೊಸದಾಗಿಸಿಕೊಂಡು ಬರಬೇಕಿತ್ತು. ಓಟಾ ಚಳಕದ ಮೂಲಕ ನಮ್ಮ ಉಪಕರಣಗಳಿಗೆ ನೇರವಾಗಿ ಹೊಸದಾದ ಸಾಫ್ಟ್‌ವೇರ್ ಬಂದಿರುತ್ತದೆ, ನಮಗೆ ಬೇಕೆಂದಾಗ ಹೊಸದಾಗಿಸಿಕೊಳ್ಳುವ ಸೌಲಭ್ಯವನ್ನು ಇದು ಒದಗಿಸಿಕೊಟ್ಟಿದೆ. ಈ ಓಟಾ ಚಳಕ ಕೆಲಸ ಮಾಡುವ ಬಗೆಯನ್ನು ಸುಮಾರು 7-8 ಭಾಗಗಳಾಗಿ ಬಿಡಿಸಬಹುದು. ಇದನ್ನು ವಿವರಿಸಲು ಉದಾಹರಣೆಗಾಗಿ, ಚೂಟಿಯುಲಿಯೊಂದರ ಸಾಫ್ಟ್‌ವೇರ್ ಹೊಸದಾಗಿಸುವಿಕೆ ಹೇಗೆ ನಡೆಯುತ್ತದೆ ಎಂದು ನೋಡೋಣ. 

  1. ಮೊದನೇಯದಾಗಿ, ಉಪಕರಣ ಸಂಪರ್ಕ ಸಾಧಿಸುವುದು. ಮೊಬೈಲ್‌ನ ಸೆಟ್ಟಿಂಗ್ಸ್ ಹೋಗಿ ನಾವು ಸಾಫ್ಟ್‌ವೇರ್ ಅಪ್ಡೇಟ್ ಮೇಲೆ ಬೆರಳು ಒತ್ತಿದಾಗ ಉಪಕರಣವು ಸಂಪರ್ಕ ಸಾಧಿಸಿದಂತೆ. 
  2. ಎರಡನೇ ಹಂತದಲ್ಲಿ ಸಂಪರ್ಕ ಸಾಧನೆ ಮಾಡಿದ ಮೊಬೈಲ್ ಭದ್ರತೆಯ ಧೃಡೀಕರಣಕ್ಕೆ ಒಳಪಡುತ್ತದೆ. ಅಂದರೆ ಸಂಪರ್ಕ ಸಾಧಿಸಿದ ಪೋನ್ ಸಾಫ್ಟ್‌ವೇರ್ ಪಡೆಯಲು ತಕ್ಕುದಾಗಿದೆಯೇ ಎಂಬ ಪರೀಕ್ಷೆಗೊಳಪಡುತ್ತದೆ. ಅನಧಿಕೃತ ಪೋನ್‌ಗಳು ಸಂಪರ್ಕ ಸಾಧಿಸದಂತೆ ಇದು ತಡೆಯುತ್ತದೆ.
  3. ಮೂರನೇ ಹಂತವನ್ನು ಡೇಟಾ ಸಾಗಣೆಯ ಮಿಂಕಟ್ಟಲೆಯ ಆಯ್ಕೆಯ(Selection of Data Transmission Protocol) ಹಂತವೆಂದು ಕರೆಯುತ್ತಾರೆ. ಸರ್ವರ್‌ನಿಂದ ಯಾವ ಮಿಂಕಟ್ಟಲೆ(Protocol) ಮೂಲಕ ಹೊಸದಾದ ಡೇಟಾ ಕಳುಹಿಸಬೇಕೆಂಬುದು ನಿರ್ಧಾರವಾಗುತ್ತದೆ. ಮೊಬೈಲ್ ಫೋನ್ ವೈಫೈ ಮೂಲಕವೋ, ಒಂದು ವೇಳೆ ಮೊಬೈಲ್ ವೈಫೈ ಸಂಪರ್ಕದಲ್ಲಿರದಿದ್ದರೆ ಸೆಲ್ಯುಲಾರ್ ನೆಟ್‌ವರ್ಕ್ ಮೂಲಕ ಕಳುಹಿಸಬೇಕೆಂದು ನಿರ್ಧಾರವಾಗುತ್ತದೆ. IoT ಮೂಲಕ ಬೆಸೆದುಕೊಂಡಿರುವ ಕೆಲವು ಉಪಕರಣಗಳಾದ ಟಿವಿ, ಸೆಟ್-ಟಾಪ್-ಬಾಕ್ಸ್, ವಾಶಿಂಗ್ ಮಶೀನ್‌ಗಳಿಗೆ low-power protocol ಗಳಾದ MQTT, CoAP ಮೂಲಕ ಸರ್ವರ್‌ಗಳಿಂದ ಡೇಟಾ ಸಾಗಣೆ ಮಾಡಲಾಗುತ್ತದೆ.
  4. ಈ ಹಂತದಲ್ಲಿ ಸಾಗಿಸಲ್ಪಟ್ಟ ಹೊಸದಾದ ಸಾಫ್ಟ್‌ವೇರ್ ಮೊಬೈಲ್ ಸಾಧನಕ್ಕಿಳಿಸಿಕೊಳ್ಳುವ(Download) ಕೆಲಸ ನಡೆಯುತ್ತದೆ.
  5. 5ನೇ ಹಂತದಲ್ಲಿ ಡೇಟಾ, ಪ್ಯಾಕೆಟ್‌ಗಳಲ್ಲಿ ಬಂದು ಮೊಬೈಲ್ ಸಾಧನದಲ್ಲಿರುತ್ತದೆ. ವಿವಿಧ ಪ್ಯಾಕೆಟ್ ಗಳ ರೂಪದಲ್ಲಿ ಬಂದು ಸೇರಿದ ಈ ಡೇಟಾವನ್ನು ಮೊಬೈಲ್ ಫೋನ್ ಒಟ್ಟುಗೂಡಿಸುತ್ತದೆ.
  6. 6ನೇ ಹಂತದಲ್ಲಿ ಸರಿಯಾದ, ಭದ್ರವಾದ ಡೇಟಾವನ್ನು ಮೊಬೈಲ್‌ಗೆ ಅಳವಡಿಸಲಾಗುತ್ತದೆ(Installation). 
  7. ಕೊನೆಯ ಹಂತ: ಕೊನೆಯದಾಗಿ, ಬಂದ ಡೇಟಾವನ್ನು ಸರಿಯಾಗಿ ಅಳವಡಿಸಲಾಗಿದೆಯೆಂದು ಮೊಬೈಲ್ ಸಾಧನ ಸರ್ವರ್‌ಗೆ ತಲುಪೊಪ್ಪಿಗೆಯನ್ನು(Acknowledgement) ಕಳುಹಿಸುವದರೊಂದಿಗೆ ಓಟಾದ ಕೆಲಸ ಮುಗಿಯುತ್ತದೆ.

ಪ್ರತಿಹಂತದಲ್ಲೂ ಸರ್ವರ್‌ನಿಂದ ಮೊಬೈಲ್‌ಗೆ ಸರಿಯಾದ, ಭದ್ರವಾದ ಮತ್ತು ಅಳುವುಳ್ಳ(Efficient) ಮಾಹಿತಿ ಸಾಗಣೆಯಾಗುವುದನ್ನು ಸಾಗಣೆ ನಿರ್ವಹಣಾ ಮಿಂಕಟ್ಟಲೆ(Transmission Control Protocol) ನೋಡಿಕೊಳ್ಳುತ್ತದೆ.

ಓಟಾ, ಹಲವಾರು ಬೇರೆ ಹೆಸರುಗಳಿಂದಲೂ ಕರೆಯಲ್ಪಡುತ್ತದೆ. ಅವುಗಳು ಹೀಗಿವೆ:

ಫೋಟಾ- ಫರ್ಮ್‌ವೇರ್ ಓವರ್-ದಿ-ಏರ್ Firmware-over-the-air (FOTA) 

ಸೋಟಾ- ಸಾಫ್ಟ್‌ವೇರ್ ಓವರ್-ದಿ-ಏರ್ Software over-the-air (SOTA) 

ಓಟಾಪ್- ಓವರ್-ದಿ-ಏರ್ ಪ್ರೊವಿಸಿನಿಂಗ್ Over-the-air provisioning (OTAP) 

ಓಟಾಸ್ಪ್- ಓವರ್-ದಿ-ಏರ್ ಸರ್ವೀಸ್ ಪ್ರೊವಿಸಿನಿಂಗ್ Over-the-air service provisioning (OTASP) 

ಓಟಾಪಾ- ಓವರ್-ದಿ-ಏರ್ ಪ್ಯಾರಮೀಟರ್ ಅಡ್ಮಿನಿಸ್ಟ್ರೇಶನ್- Over-the-air parameter administration (OTAPA).

 

ಓಟಾ ತಂತ್ರಜ್ಞಾನದ ಪ್ರಮುಖ ಅನುಕೂಲಗಳು ಹೀಗಿವೆ:

1.ಸರಿಯಾದ, ಭದ್ರವಾದ ಮಾಹಿತಿಯ ಸಾಗಣೆ.

2.ಯಾವುದೇ ತಂತ್ರಜ್ಞರ ನೆರವು ಬೇಕಾಗಿಲ್ಲ. ಮೊಬೈಲ್, ಕಾರು, ಟಿವಿ ಆಯಾ ಉಪಕರಣಗಳ ಮಾಲೀಕರೇ ನೇರವಾಗಿ ಡೇಟಾ ಪಡೆದು ಅಪ್ಡೇಟ್ ಮಾಡಿಕೊಳ್ಳಬಹುದು.

3.ನೆರವುದಾಣ, ರಿಪೇರಿ ಅಂಗಡಿಗಳಿಗೆ ಹೋಗಬೇಕಾಗಿಲ್ಲ. ಸಮಯ ಮತ್ತು ಹಣದ ಉಳಿತಾಯ.

4.ಬೇಕೆಂದಾಗ,ಬೇಕಾದ ಸಮಯದಲ್ಲಿ ಅಪ್ಡೇಟ್ ಮಾಡಿಕೊಳ್ಳುವ ಸವಲತ್ತು.

 

ಕಾಫಿ ಬೆಳೆ: ಹುಟ್ಟು ಮತ್ತು ಹರವು

ರತೀಶ ರತ್ನಾಕರ.

 

ಹೀಗೊಂದು ಹಳೆಯ ಕತೆ, ಸುಮಾರು ಒಂದು ಸಾವಿರ ವರ್ಷಗಳ ಹಿಂದೆ ಆಫ್ರಿಕಾದ ಇತಿಯೋಪಿಯಾದ ಕಾಡುಗಳಲ್ಲಿ ಹಲವು ಬುಡಕಟ್ಟು ಜನಾಂಗಗಳು ಬದುಕು ನಡೆಸುತಿದ್ದವು. ಅವರು ಕುರಿ, ಕೋಳಿಯಂತಹ ಸಾಕುಪ್ರಾಣಿಗಳನ್ನೂ ಸಾಕಿಕೊಂಡಿದ್ದರು. ಇವರಲ್ಲಿ ಕಾಲ್ಡಿ ಎಂಬಾತನೊಬ್ಬ ಹಲವು ಕುರಿಗಳನ್ನು ಸಾಕಿದ್ದ. ಒಂದು ದಿನ ಆತನ ಕುರಿಗಳು ಕಾಡಿನ ನಡುವೆ ಸಿಕ್ಕ ಒಂದು ಬಗೆಯ ಹಣ್ಣನ್ನು ತಿಂದೊಡನೆ ಕುಣಿದು ಕುಪ್ಪಳಿಸ ತೊಡಗಿದವು. ಹಣ್ಣಿನಲ್ಲಿರುವ ಯಾವುದೋ ಒಂದು ಅಂಶ ಕುರಿಗಳಿಗೆ ನಲಿವನ್ನು ತರುತ್ತಿದೆ ಎಂದು ಅರಿತು ಕಾಲ್ಡಿಯೂ ಆ ಹಣ್ಣನ್ನು ತಿಂದು ನೋಡಿದ. ಒಂದು ಬಗೆಯ ರುಚಿಯ ಜೊತೆಗೆ ಮನಸ್ಸಿಗೆ ಉಲ್ಲಾಸ ನೀಡಿದ ಆ ಹಣ್ಣನ್ನು ತನ್ನವರಿಗೂ ಪರಿಚಯಿಸಿದ.

ಉಲ್ಲಾಸ ನೀಡುವಂತಹ ಆ ಹಣ್ಣನ್ನು ಆಫ್ರಿಕಾದ ಬುಡಕಟ್ಟಿನವರು ಮೊದಲು ಹಾಗೆಯೇ ತಿನ್ನುತ್ತ ಬಳಿಕ ತಮ್ಮ ಊಟದ ಜೊತೆ ತಿನ್ನತೊಡಗಿದರು. ಹೀಗೆ ಮನುಷ್ಯನ ಊಟದ ಪಾಲಿನಲ್ಲಿ ಸೇರಿಕೊಂಡ ಆ ಹಣ್ಣು ಮುಂದೆ ಹಲವಾರು ಬಗೆಯಲ್ಲಿ ಮಾರ್ಪಾಟುಗೊಂಡು ಬೆಳಗ್ಗೆ ಎದ್ದಾಗ ಇಲ್ಲವೇ ಸಂಜೆಯ ಹೊತ್ತಿಗೆ ಕುಡಿಯುವ ಕಾಫಿಯಾಗಿ ನಮ್ಮ ಬದುಕಿನ ಭಾಗವಾಗಿ ಹೋಗಿದೆ. ಕಾಲ್ಡಿಯು ಮೊತ್ತ ಮೊದಲ ಬಾರಿಗೆ ತನ್ನ ಕುರಿಗಳ ನೆರವಿನಿಂದ ಆ ಹಣ್ಣನ್ನು ತಿಂದ ಜಾಗದ ಹೆಸರು ‘ಕಪ’ ಎಂದು. ‘ಕಪ’ ಎಂಬ ಜಾಗದಲ್ಲಿ ದೊರೆತ ಹಣ್ಣು ಕಾಫಿಯಾಗಿ ಈಗ ನಮ್ಮ ನಡುವೆ ಹೆಸರುವಾಸಿಯಾಗಿದೆ.

ಹೌದು, ನಾವು ತಿನ್ನುವ ಹಾಗು ಕುಡಿಯುವ ವಸ್ತುಗಳ ಹಿಂದೆ ಸಾಕಷ್ಟು ಹಳಮೆ ಹಾಗು ಅರಿಮೆಯಿದೆ. ಕಾಫಿಯ ಹಳಮೆ ಮೇಲೆ ಹೇಳಿದ ಕತೆಯಿಂದ ಮೊದಲಾಗುತ್ತದೆ, ಈ ಹಳಮೆಯ ಜೊತೆ ನಾವು ಅರಿಯಬೇಕಾದ ಕಾಫಿಯ ಅರಿಮೆ ಕೂಡ ಸಾಕಷ್ಟಿದೆ. ಕಾಫಿಯ ಅರಿಮೆಯ ಮೇಲೆ ಕೊಂಚವಾದರು ಬೆಳಕು ಚೆಲ್ಲಬೇಕೆಂದು ಈ ಸರಣಿ ಬರಹ.

ಜಗತ್ತಿನ ಕಾಫಿ ಬೆಳೆಯುವ ನಾಡುಗಳಲ್ಲಿ ಇಂಡಿಯಾವು ಆರನೇ ಜಾಗದಲ್ಲಿದೆ. ಇಂಡಿಯಾದ ಕಾಫಿ ಬೆಳೆಯುವ ರಾಜ್ಯಗಳಲ್ಲಿ ಕರ್ನಾಟಕಕ್ಕೇ ಮೊದಲ ಜಾಗ. ಇಂಡಿಯಾದಲ್ಲಿ ಬೆಳೆಯುವ ಕಾಫಿಯಲ್ಲಿ 71% ಕರ್ನಾಟಕದಲ್ಲಿ ಬೆಳೆಯಲಾಗುತ್ತದೆ. ಕರ್ನಾಟಕದ ಚಿಕ್ಕಮಗಳೂರು, ಹಾಸನ ಹಾಗು ಕೊಡಗು ಕಾಫಿ ಬೆಳೆಯುವ ಮುಖ್ಯ ಜಿಲ್ಲೆಗಳು. ಬೇರೆ ಬೇರೆ ರಾಜ್ಯಗಳಲ್ಲಿಕಾಫಿಯನ್ನು ಬೆಳೆಯುವ ಜಾಗದ ಮಾಹಿತಿಯನ್ನು ಕೆಳಗಿನ ಪಟ್ಟಿಯಲ್ಲಿ ನೋಡಿ.

ಕರ್ನಾಟಕದಲ್ಲಿ ಬೆಳೆಯುವ ಕಾಫಿಯನ್ನು ನೆರಳಿನ ಜಾಗದಲ್ಲಿ ಬೆಳೆಯುವ ಜಗತ್ತಿನ ರುಚಿಕರವಾದ ಕಾಫಿ ಎಂದು ಗುರುತಿಸಲಾಗಿದೆ. ಜಗತ್ತಿನ ಬೇರೆ ಬೇರೆ ಕಡೆ ನೇಸರನ ಬಿಸಿಲಿಗೆ ನೇರವಾಗಿ ಗಿಡವನ್ನು ಬೆಳೆಸಿ ಕಾಫಿಯನ್ನು ಬೆಳೆಯಲಾಗುತ್ತದೆ. ಕರ್ನಾಟಕದ ಬೆಟ್ಟದ ಸಾಲುಗಳಲ್ಲಿ ಹಲವು ಬಗೆಯ ಮರದ ನೆರಳಿನಲ್ಲಿ ಕಾಫಿಯನ್ನು ಬೆಳೆಯಲಾಗುತ್ತದೆ.

ಕಾಫಿ ಗಿಡದ ಬಗ್ಗೆ:
ಕಾಫಿಯು ಗಿಡ ಇಲ್ಲವೇ ಚಿಕ್ಕ ಮರದ ರೂಪದಲ್ಲಿ ಬೆಳೆಯುತ್ತದೆ. ಕಾಫಿಯೇಯ್ (coffeeae) ಎಂಬ ಗಿಡಗಳ ಬುಡಕಟ್ಟು ಮತ್ತು ರುಬಿಯೇಸಿಯಯ್ (Rubiaceae) ಎಂಬ ಕುಟುಂಬಕ್ಕೆ ಈ ತಳಿಯು ಸೇರುತ್ತದೆ. ಕಾಫಿ ಗಿಡವು ಸುಮಾರು 14 ರಿಂದ 15 ಅಡಿಗಳ ವರೆಗೆ ಬೆಳೆಯುತ್ತದೆ. ದಪ್ಪನಾದ ಹಾಗು ಉದ್ದನೆಯ ಒಂದು ಕಾಂಡ ನೆಲದಿಂದ ಹೊರಬಂದು, ಬಳಿಕ ಮೂರು ಹಂತದಲ್ಲಿ ರಕ್ಕೆಗಳು ಕವಲೊಡೆದು, ಒಂದು ದೊಡ್ಡದಾದ ಪೊದೆಯ ಗಿಡದಂತೆ ಕಾಫಿ ಗಿಡವು ಕಾಣುತ್ತದೆ. ಕೊಂಚ ಹೊಳೆಯುವ, ಕೊಂಚ ಮೇಣದ ಪದರ ಮತ್ತು ಕಂದು ಹಸಿರುಬಣ್ಣವನ್ನು ಕಾಫಿಗಿಡದ ಎಲೆಯು ಹೊಂದಿರುತ್ತದೆ. ಕಾಫಿಗಿಡದ ಎಲೆಗಳು ಸುಮಾರು 7 ರಿಂದ 8 ಇಂಚಿನವರೆಗೂ ಉದ್ದವಾಗಿರುತ್ತವೆ.

ಕಾಫಿ ಗಿಡದ ಬೇರುಗಳು ಮುಖ್ಯವಾಗಿ ಮೂರು ಬಗೆಯವು. ಬದಿಯ ಬೇರು (Lateral Roots), ನಲ್ಲಿ ಬೇರು (Tap Roots) ಮತ್ತು ಮೇವಿನ ಬೇರು (Feeder roots). ಬದಿಯ ಬೇರುಗಳು ಗಿಡದಿಂದ ಸುಮಾರು 2 ಮೀಟರ್ಗಳವರೆಗೂ ಹರಡಿಕೊಳ್ಳಬಲ್ಲವು. ನಲ್ಲಿ ಬೇರುಗಳು ನೆಲದ ಅಡಿಗೆ ಸುಮಾರು 1 ರಿಂದ 1.5 ಅಡಿಗಳಷ್ಟು ಬೆಳೆಯಬಲ್ಲವು. ಮೇವಿನ ಬೇರುಗಳು ನೆಲದಿಂದ ಕೇವಲ 20 ಸೆ.ಮೀ. ನಷ್ಟು ಕೆಳಗೆ ಇರುತ್ತವೆ ಆದರೆ ಇವು ಗಿಡದ ಬುಡದಿಂದ ಸುಮಾರು 60-90 ಸೆ.ಮೀ. ದೂರದಿಂದ ಹರಡಿಕೊಂಡಿರುತ್ತವೆ. ಒಟ್ಟಿನಲ್ಲಿ ಗಿಡದ ಬುಡದಿಂದ 30 ರಿಂದ 60 ಸೆ. ಮೀ. ನಷ್ಟು ಆಳಕ್ಕೆ ಸಾಕಷ್ಟು ಕಾಫಿಗಿಡದ ಬೇರುಗಳನ್ನು ಕಾಣಬಹುದು. ಒಂದು ಕಾಫಿ ಗಿಡದ ಬೇರು ಸುಮಾರು 500 ಚದರ ಮೀಟರಿನಷ್ಟು ನೆಲದ ಜಾಗದಿಂದ ನೀರು ಮತ್ತು ಆರಯ್ಕೆಯನ್ನು ಹೀರಿಕೊಳ್ಳಬಲ್ಲವು. ಗಟ್ಟಿಯಾದ ಮತ್ತು ದಪ್ಪನಾಗಿರುವ ಕಾಫಿ ಗಿಡದ ಬೇರು ಬೆಳೆಯಲು ನೈಟ್ರೋಜನ್, ಕ್ಯಾಲ್ಶಿಯಂ ಮತ್ತು ಮೆಗ್ನೇಶಿಯಂ ನ ಅವಶ್ಯಕತೆ ತೀರಾ ಇದೆ, ಅವನ್ನು ಹೀರಿಕೊಳ್ಳಲು ನೆರವಾಗುವಂತಹ ಬೇರಿನ ರೂಪು ರೇಶೆಯನ್ನು ಕಾಫಿ ಗಿಡವು ಹೊಂದಿದೆ.

ಕಾಫಿ ಬೆಳೆಯಲು ಬೇಕಾದ ಗಾಳಿಪಾಡು:
ಕಾಫಿಯ ಬೆಳವಣಿಗೆಗೆ ಸುಮಾರು 15 -28 ಡಿಗ್ರಿ ಸೆಲ್ಶಿಯಸ್ ಬಿಸುಪು ವರುಶವಿಡಿ ಇದ್ದರೆ ಒಳಿತು. ಕೊರೆಯುವ ಚಳಿಯಿದ್ದು, ಹಿಮ ಬೀಳುವಂತಹ ಜಾಗಗಳಲ್ಲಿ ಕಾಫಿಯ ಬೆಳವಣಿಗೆ ಸಾಧ್ಯವಿಲ್ಲ . ಹಾಗೆಯೇ ವರುಶಕ್ಕೆ 60-80 ಇಂಚು ಮಳೆ ಬೀಳಬೇಕು, ಜೊತೆಗೆ ಎರೆಡರಿಂದ ಮೂರು ತಿಂಗಳುಗಳ ಕಾಲ ಅತಿ ಕಡಿಮೆ ಮಳೆಯಿದ್ದು ಬಿಸಿಲು ಸಿಗುವಂತಿರಬೇಕು. ಮಳೆ ಇಲ್ಲವೇ ಚಳಿಯಿಂದ ಕಾಫಿಯ ಗಿಡಕ್ಕೆ ತಂಪು ಹೆಚ್ಚಾದರೆ ಅದರ ಬೆಳವಣಿಗೆಗೆ ಪೆಟ್ಟು ನೀಡಿದಂತೆ, ಹಾಗಾಗಿ ಮಳೆ ಬಿದ್ದೊಡನೆ ಅದರ ನೀರು ಹರಿದು ಹೋಗುವಂತೆ ಮತ್ತು ಗಾಳಿಯು ಚೆನ್ನಾಗಿ ಹರಿದಾಡುವಂತೆ ಇರುವ ಇಳಿಜಾರಿನ ಜಾಗಗಳಲ್ಲಿ ಕಾಫಿಯನ್ನು ಬೆಳಯಲಾಗುತ್ತದೆ. ನೀರು ಹರಿದುಕೊಂಡು ಹೋಗುವಂತಹ ಮತ್ತು ಗಾಳಿಗೆ ಸುಳಿದಾಡಲು ಜಾಗ ಕೊಡುವಂತಹ ಬೆಟ್ಟ-ಗುಡ್ಡದ ಜಾಗವು ಒಳ್ಳೆಯದಾಗಿರುತ್ತದೆ.

ಕಾಫಿ ಬೆಳೆಯಲು ಬೇಕಾಗಿರುವ ಮಣ್ಣಿನಲ್ಲಿ ಸಾವಯವ ಅಂಶಗಳು ಹೆಚ್ಚಿರಬೇಕು ಮತ್ತು ಕೊಂಚ ಹುಳಿಯಾಗಿರಬೇಕು, ಅಂದರೆ ಮಣ್ಣಿನ ಹುಳಿಯಳತೆ (pH) 6.0 – 6.5 ಇರಬೇಕು. ಈ ಎಲ್ಲಾ ಗಾಳಿಪಾಡುಗಳು ಸಿಗಬೇಕೆಂದರೆ ಕಡಲಿನಿಂದ 1000 – 1500 ಮೀಟರ್ ನಷ್ಟು ಎತ್ತರದಲ್ಲಿರುವ ಬೆಟ್ಟ-ಗುಡ್ಡದ ಜಾಗಗಳನ್ನು ಕಾಫಿ ಬೆಳೆಯಲು ಆಯ್ಕೆ ಮಾಡಬೇಕಾಗುತ್ತದೆ. ಕರ್ನಾಟಕದ ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿರುವ ಬೆಟ್ಟಗುಡ್ಡದ ಜಾಗಗಳು ಈ ಗಾಳಿಪಾಡನ್ನು ಹೊಂದಿದ್ದು ಕಾಫಿ ಬೆಳೆಯಲು ಸೂಕ್ತವಾಗಿವೆ.

ಕರ್ನಾಟಕದಲ್ಲಿ ಕಾಫಿಯ ಜೊತೆ ಕಾಳುಮೆಣಸು, ಶುಂಟಿ, ಅಡಿಕೆ, ಚಕ್ಕೆ ಹೀಗೆ ಕೆಲವು ಬೆಳೆಗಳನ್ನು ಒಟ್ಟೊಟ್ಟಿಗೆ ಬೆಳೆಯಲಾಗುತ್ತದೆ. ಮೊದಲೇ ತಿಳಿಸಿದಂತೆ ಕಾಡುಮರಗಳ ಜೊತೆಗೆ ಸಿಲ್ವರ್ ಇಲ್ಲವೇ ಇತರೆ ಮರಮಟ್ಟುಗಳಿಗೆ ನೆರವಾಗುವ ಮರಗಳ ಜೊತೆ ನೆರಳಿನಲ್ಲಿ ಬೆಳೆಯಲಾಗುತ್ತದೆ.

ಕಾಫಿ ಗಿಡದ ಬಗೆಗಳು:
ಕುಡಿಯುವ ಕಾಫಿಯಲ್ಲಿ ನಾವು ಹಲವಾರು ಬಗೆಗಳನ್ನು ಕಾಣುತ್ತೇವೆ ಹಾಗೆಯೇ ಕಾಫಿಯ ಗಿಡಗಳಲ್ಲಿಯೂ ಹಲವಾರು ಬಗೆಗಳಿವೆ, ಅವುಗಳಲ್ಲಿ ಕೆಲವೆಂದರೆ ಲಿಬೆರಿಕಾ (Liberica), ಗ್ರಾಸ್ ಇಂಡೆಂಟೆ (Gros Indente), ಎಕ್ಸೆಲ್ಸ (Excelsa), ಕುಯ್ಲೂ (Kouilou), ಪೆಟಿಟ್ ಇಂಡೇನಿಜೆ (Petit Indénizé), ಅರಾಬಿಕಾ ಮತ್ತು ರೊಬಸ್ಟಾ. ಇವುಗಳಲ್ಲಿ ಅರಾಬಿಕಾವನ್ನು ಜಗತ್ತಿನಲ್ಲೇ ಅತಿ ಹೆಚ್ಚು ಅಂದರೆ ನೂರಕ್ಕೆ 75% ನಷ್ಟು ಬೆಳೆಯಲಾಗುತ್ತದೆ ಅದನ್ನು ಬಿಟ್ಟರೆ ರೊಬಸ್ಟಾ ಎರಡನೆಯ ಜಾಗವನ್ನು ತೆಗೆದುಕೊಳ್ಳುತ್ತದೆ. ಆದರೆ ಕರ್ನಾಟಕದಲ್ಲಿ ಅತಿ ಹೆಚ್ಚು ರೊಬಸ್ಟಾವನ್ನು ಬೆಳೆಯಲಾಗುತ್ತದೆ. ಕರ್ನಾಟಕದಲ್ಲಿ ಬೆಳೆಯುವ ಒಟ್ಟು ಕಾಫಿಯಲ್ಲಿ 67.3% ರೊಬಸ್ಟಾ ಮತ್ತು ಉಳಿದ 32.7% ಅರಾಬಿಕ ಬೆಳೆಯಲಾಗುತ್ತದೆ.

ಹಾಗದರೆ ಅರಾಬಿಕಾ ಮತ್ತು ರೊಬಸ್ಟಾ ನಡುವಿನ ವ್ಯತ್ಯಾಸವೇನು?ಕಾಫಿಯನ್ನು ಮೊಳಕೆ ಬರಿಸುವುದರಿಂದ ಹಿಡಿದು ಹಣ್ಣು ಕುಯ್ಯುವುದರವರೆಗೂ ಇರುವ ಹಂತಗಳಾವವು? ಕುಡಿಯುವ ಕಾಫಿಯಲ್ಲಿ ಹಲವು ಬಗೆಗಳಿವೆ, ಅವುಗಳ ನಡುವಿನ ವ್ಯತ್ಯಾಸವೇನು? ಕಾಫಿಯ ಕುರಿತು ಮತ್ತೇನಾದರು ಸೋಜಿಗದ ಸುದ್ದಿಗಳು ಇದೆಯೇ? ಹೀಗೆ ಹಲವಾರು ಪ್ರಶ್ನೆಗಳು ನಮ್ಮಲ್ಲಿ ಮೂಡುತ್ತವೆ. ಬನ್ನಿ, ಮುಂದಿನ ಬರಹಗಳಲ್ಲಿ ಈ ಮೇಲಿನ ಕೇಳ್ವಿಗಳಿಗೆ ಹೇಳ್ವಿಗಳನ್ನು ಹುಡುಕೋಣ.

(ಮಾಹಿತಿ ಸೆಲೆ: fao.orgwikipediacoffeeresearch.org)

(ಚಿತ್ರ ಸೆಲೆ: Wikimediagktodaycoffeeplanet.nl)

 

ಹಸಿರುಮನೆಯ ಗುಟ್ಟು

ರತೀಶ ರತ್ನಾಕರ.

ಸಣ್ಣ ಸಣ್ಣ ಗಿಡಗಳನ್ನು ಬೆಳಸಲು ಇಲ್ಲವೇ ಹೆಚ್ಚಾಗಿ ಹೂವಿನ ಗಿಡಗಳನ್ನು ಬೆಳಸಲು ಹಸಿರು ಬಣ್ಣದ ಇಲ್ಲವೇ ಬಣ್ಣವಿಲ್ಲದ ಗಾಜು ಇಲ್ಲವೇ ಪ್ಲಾಸ್ಟಿಕ್ ಹೊದ್ದಿರುವ ‘ಹಸಿರು ಮನೆಗಳನ್ನು’ ಎಲ್ಲಾದರೂ ಕಂಡಿರುತ್ತೇವೆ. ಗಿಡಗಳ ಬೆಳವಣಿಗೆಗೆ ಈ ಬಗೆಯ ಬೆಳಸುವಿಕೆ ನೆರವಾಗುತ್ತದೆ ಎಂದು ಅಲ್ಲಲ್ಲಿ ಕೇಳಿರುತ್ತೇವೆ. ಹಾಗದರೆ ಈ ಹಸಿರು ಮನೆಗಳು ಗಿಡಗಳ ಬೆಳವಣಿಗೆಗೆ ಹೇಗೆ ನೆರವಾಗುತ್ತವೆ? ಇದರ ಕೆಲಸವೇನು ಎಂಬುದನ್ನು ಅರಿಯೋಣ ಬನ್ನಿ.

ಹಸಿರುಮನೆಯ ಹಿಂದಿರುವ ಅರಿಮೆ:

ನೇಸರನಿಂದ ನೆಲಕ್ಕೆ ಬೀಳುವ ಬೆಳಕಿನಿಂದಾಗಿ ನೆಲದಲ್ಲಿರುವ ಮಣ್ಣು, ನೀರು ಹಾಗು ಇತರೆ ವಸ್ತುಗಳು ಬಿಸಿಯಾಗುತ್ತವೆ. ಅಂದರೆ ನೇಸರನ ಬೆಳಕಿನ ಶಕ್ತಿಯನ್ನು ಹೀರಿಕೊಂಡು ಅದೇ ಶಕ್ತಿಯನ್ನು ಬಿಸಿಯ ರೂಪದಲ್ಲಿ ಹೊರಬಿಡುತ್ತವೆ ಹೀಗೆ ಹೊರಸೂಸುವ ಬಿಸಿಯು ತಿಳಿಗೆಂಪು ಕದಿರಾಗಿರುತ್ತದೆ (infrared rays). ನೇಸರನ ಬೆಳಕಿನ ಅಲೆಯಗಲ (wavelength) ಮತ್ತು ಮಣ್ಣು/ನೀರು ಹೊರಬಿಡುವ ತಿಳಿಗೆಂಪು ಕದಿರಿನ (infrared rays) ಅಲೆಯಗಲ ಬೇರೆ ಬೇರೆಯಾಗಿರುತ್ತದೆ. ಈ ಅಲೆಯಗಲದ ಆದಾರದ ಮೇಲೆ ಈ ಕಿರಣಗಳು ಕೆಲವು ವಸ್ತುಗಳ ಮೂಲಕ ಹಾದುಹೋಗಲಾರವು. ಉದಾಹರಣೆಗೆಗೆ , ನೇಸರನ ಬೆಳಕು ಗೋಡೆಗಳ ಮೂಲಕ ಹಾದುಹೋಗಲಾಗದು ಆದರೆ ರೇಡಿಯೋ ಅಲೆಗಳು ಗೋಡೆಗಳಮೂಲಕ ಹಾದುಹೋಗವುವು ಅದಕ್ಕೆ ಕಾರಣ ಅವುಗಳ ಅಲೆಯಗಲವೂ ಒಂದು. ಹೀಗೆ ನೇಸರನ ಬೆಳಕು ಗಾಜು/ಪ್ಲಾಸ್ಟಿಕ್ ಮೂಲಕ ಹಾದುಹೋಗುವುದು ಆದರೆ ತಿಳಿಗೆಂಪು ಕದಿರು ತಮ್ಮ ಅಲೆಯಗಲದಿಂದಾಗಿ ಗಾಜು/ಪ್ಲಾಸ್ಟಿಕ್ ಮೂಲಕ ಹಾದುಹೋಗಲಾರವು.

ಒಂದು ಹಸಿರುಮನೆಯು ಕಾಲಿ ಕೋಣೆಯಂತಿದ್ದು ಅದರ ಗೋಡೆ ಹಾಗು ಮಾಡನ್ನು ಗಾಜು ಇಲ್ಲವೇ ಪ್ಲಾಸ್ಟಿಕ್ ನಿಂದ ಕಟ್ಟಿರುತ್ತಾರೆ. ಈ ಗಾಜು/ಪ್ಲಾಸ್ಟಿಕ್ ನಿಂದ ನೇಸರನ ಬೆಳಕು ಹರಿದು ಹಸಿರುಮನೆಯ ಒಳಗೆ ಬರುತ್ತದೆ. ಹೀಗೆ ಒಳಗೆ ಬಂದ ನೇಸರನ ಬೆಳಕು ಮಣ್ಣಿನ ಮೇಲ್ಬಾಗ ಇಲ್ಲವೇ ಗಿಡಗಳಲ್ಲಿರುವ ತೇವವನ್ನು (humidity) ಆರಿಸುತ್ತದೆ ಮತ್ತು ಬಿಸಿಯನ್ನು ಅಂದರೆ ತಿಳಿಗೆಂಪು ಕದಿರನ್ನು (infrared rays) ಹೊರಹಾಕತೊಡಗುತ್ತವೆ.

ಹಸಿರುಮನೆಯ ಒಳಗಿರುವ ಮಣ್ಣು ನೇಸರನ ಬೆಳಕು ಬಿದ್ದೊಡನೆ ಬಿಸಿಯಾಗಿ ಆ ಬಿಸಿಯನ್ನು ಮಣ್ಣಿನ ಮೇಲ್ಬಾಗದಲ್ಲಿರುವ ಗಾಳಿಗೆ ಸಾಗಿಸುತ್ತದೆ. ಇದರಿಂದ ಮಣ್ಣಿನ ಮೇಲ್ಭಾಗದ ಗಾಳಿ ಮೊದಲು ಬಿಸಿಯಾಗತೊಡಗುತ್ತದೆ. ಹೀಗೆ ಬಿಸಿಯಾದ ಗಾಳಿಯ ದಟ್ಟಣೆ (Density) ಕಡಿಮೆಯಿರುವುದರಿಂದ ಇದು ಹರಡಿಕೊಂಡು ನೆಲದಿಂದ ಮೇಲೇರುವುದು ಅದರ ಗುಣ ಹಾಗಾಗಿ ಬಿಸಿಗಾಳಿಯು ಹರಡಿಕೊಂಡು ಮೇಲೇರುತ್ತದೆ. ಹಸಿರುಮನೆಯ ಚಾವಣಿಯ ಹತ್ತಿರದ ತಂಪನೆಯಗಾಳಿಯು ಬಿಸಿಗಾಳಿಗಿಂತ ಹೆಚ್ಚು ದಟ್ಟಣೆ ಹೊಂದಿರುವುದರಿಂದ ಇದು ಕೆಳಭಾಗಕ್ಕೆ ಬರುತ್ತದೆ. ಈ ತಂಪುಗಾಳಿಯು ಮಣ್ಣಿನಿಂದ ಹೊರಬರುತ್ತಿರುವ ಬಿಸಿಯನ್ನು ಹೀರಿಕೊಂಡು ಬಿಸಿಗಾಳಿಯಾಗಿ ಮತ್ತೆ ಮೇಲೇರತೊಡಗುತ್ತದೆ. ಹೀಗೆ ಮಣ್ಣಿನ ಮೇಲ್ಬಾಗದ ಕಡೆಯಿಂದ ಹಸಿರುಮನೆಯ ಚಾವಣಿಯ ಕಡೆಗೆ ಗಾಳಿಯು ಬಿಸಿಯಾಗತೊಡಗುತ್ತದೆ.

ಹಸಿರುಮನೆಗೆ ಬಳಸುವ ಗಾಜು/ಪ್ಲಾಸ್ಟಿಕ್‍ನ ಗುಣವೆಂದರೆ ಅದು ನೇಸರನ ಬೆಳಕನ್ನು ತನ್ನ ಮೂಲಕ ಹರಿಯಲು ಬಿಡುತ್ತದೆ ಆದರೆ ಹೆಚ್ಚು ಅಲೆಯಗಲ ಹೊಂದಿರುವ ಕಿರಣಗಳನ್ನು ಅಂದರೆ infrared rays ನ್ನು ತನ್ನ ಮೂಲಕ ಹರಿಯಲು ಬಿಡುವುದಿಲ್ಲ ಎಂದು ಮೊದಲೇ ತಿಳಿದಿದ್ದೇವೆ. ಹೀಗಾಗಿ ಮಣ್ಣಿನಿಂದ ಹೊರಬಂದ ಬಿಸಿಯು ಹಸಿರುಮನೆಯ ಗಾಳಿಗೆ ಸೇರಿ ಗಾಜು/ಪ್ಲಾಸ್ಟಿಕ್ ಮೂಲಕ ಹೊರಹೋಗಲಾಗದೆ ಇರುತ್ತದೆ. ಇದರಿಂದ ಹಸಿರುಮನೆಯ ಒಳಗಿನ ಗಾಳಿಯು ಬಿಸಿಯಾಗಿ, ಹಸಿರುಮನೆ ಹೊರಗಿನ ಗಾಳಿಯ ಬಿಸುಪಿಗಿಂತ (temperature) ಹೆಚ್ಚಿನ ಬಿಸುಪನ್ನು ಹೊಂದಿರುತ್ತದೆ. ಈ ಎಲ್ಲಾ ಕಾರಣಗಳಿಂದಾಗಿ ಹಸಿರುಮನೆಯ ಒಳಗೆ ಯಾವಾಗಲೂ ಹೊರಗಿನ ಗಾಳಿಪಾಡಿಗಿಂತ ಹೆಚ್ಚಿನ ಬಿಸುಪು ಇರುತ್ತದೆ. ಈ ಹೆಚ್ಚಿನ ಬಿಸುಪು ಗಿಡಗಳ ಬೆಳವಣಿಗೆಗೆ ಹೇಗೆ ನೆರವಾಗುತ್ತದೆ ಎಂಬುದನ್ನು ಮುಂದೆ ನೋಡೋಣ.

ಹಗಲಿನ ಹೊತ್ತು ನೇಸರನ ಬೆಳಕಿನಿಂದ ಹಸಿರುಮನೆಯ ಒಳಗೆ ಹೆಚ್ಚಿನ ಬಿಸುಪು ಇದ್ದರೆ ಇನ್ನೂ ಇರುಳಿನ ಹೊತ್ತಿನಲ್ಲಿ ಇಲ್ಲಿ ಬೆಚ್ಚಗಿನ ಗಾಳಿ ಇರುತ್ತದೆ. ಇದಕ್ಕೆ ಕಾರಣ, ಹಗಲೆಲ್ಲಾ ನೇಸರನ ಬೆಳಕಿನಿಂದ ಬಿಸಿಯಾದ ಹಸಿರು ಮನೆಯೊಳಗಿನ ಮಣ್ಣು ತನ್ನಲ್ಲಿರುವ ಬಿಸುಪನ್ನು ರಾತ್ರಿಯ ಹೊತ್ತು ಹೊರಗಾಳಿಗೆ ಬಿಡಲಾರಂಬಿಸುತ್ತದೆ. ಹಾಗು ಈ ಬಿಸಿಯನ್ನು ಗಾಜು/ಪ್ಲಾಸ್ಟಿಕ್ಕಿನ ಗೊಡೆಯ ನೆರವಿನಿಂದ ಹಸಿರುಮನೆಯ ಒಳಗೇ ಹಿಡಿದಿಡಿಲಾಗುತ್ತದೆ. ಹಾಗಾಗಿ ಹಸಿರು ಮನೆಯ ಒಳಗಿನ ಬಿಸುಪು ಹೊರಗಿನ ಗಾಳಿಯ ಬಿಸುಪಿಗಿಂತ ಹೆಚ್ಚಿರುತ್ತದೆ ಮತ್ತು ಇದು ಗಿಡಗಳ ಸುತ್ತಲಿನ ಗಾಳಿಯನ್ನು ಕೂಡಲೇ ತಂಪಾಗುವುದನ್ನು ತಡೆಯುತ್ತದೆ.

ಗಿಡಗಳ ಬೆಳವಣಿಗೆಗೆ ಹಸಿರುಮನೆ ಹೇಗೆ ನೆರವಾಗುತ್ತದೆ?
ನೇಸರನ ಬೆಳಕನ್ನು ಹಸಿರುಮನೆಯ ಒಳಗೆ ಹಾಯಿಸಿ ಅದರಿಂದ ಬಿಸಿಯಾದ ಮಣ್ಣು/ಗಿಡ/ನೀರಿನಿಂದ ಹೊರಬರುವ ತಿಳಿಗೆಂಪು ಕದಿರನ್ನು (infrared rays) ಹಿಡಿದಿಟ್ಟುಕೊಳ್ಳುವುದರಿಂದ ಗಿಡಗಳ ಬೆಳವಣಿಗೆಗೆ ಹೇಗೆ ನೆರವಾಗುತ್ತದೆ ಎಂಬುದನ್ನು ನೋಡೋಣ.

 

1. ಹೆಚ್ಚಿನ ಬಿಸುಪು ಗಿಡದ ಬೆಳವಣಿಗೆಗೆ ಉಪಕಾರಿ:
ಪ್ರತಿಯೊಂದು ಮರಗಿಡಗಳು ಸೂಲುಗೂಡುಗಳಿಂದ (cell) ಆಗಿರುತ್ತದೆ. ಈ ಸೂಲುಗೂಡುಗಳಲ್ಲಿ ದಿನಕ್ಕೆ ನೂರಾರು ಬಗೆಯ ರಾಸಾಯನಿಕ ಚಟುವಟಿಕೆಗಳು (chemical reaction) ನಡೆಯುತ್ತಿರುತ್ತವೆ, ಇವು ಸೂಲುಗೂಡುಗಳ ಬೆಳವಣಿಗೆಗೆ ನೆರವಾಗುತ್ತವೆ. ಹೀಗೆ ನಡೆಯುವ ರಾಸಾಯನಿಕ ಚಟುವಟಿಕೆಗಳಿಗೆ ದೊಳೆಗಳು (enzymes) ನೆರವನ್ನು ನೀಡುತ್ತವೆ. ಈ ದೊಳೆಗಳು ರಾಸಾಯನಿಕ ಚಟುವಟಿಕೆಗೆ ಬಿರುಗೆ (catalyst)ಯಂತೆ ಕೆಲಸ ಮಾಡುತ್ತವೆ. ಗಿಡದ ಸೂಲುಗೂಡುಗಳ ರಾಸಾಯನಿಕ ಚಟುವಟಿಕೆಯಲ್ಲಿ ‘ಬೆಳಕಿನ ಅಡುಗೆ ‘(photosynthesis) ಕೂಡ ಒಂದು. ಹೀಗೆ ಬೆಳಕಿನ ಒಂದುಗೆಗೆ ನೆರವಾಗುವ ದೊಳೆಗಳು ಕೆಲವು ಹುಳಿಯಳತೆ (pH) ಮತ್ತು ಬಿಸುಪಿನಲ್ಲಿ ಚೆನ್ನಾಗಿ ಕೆಲಸಮಾಡುತ್ತವೆ. ಅತಿ ಕಡಿಮೆ ಹುಳಿಯಳತೆ ಮತ್ತು ಕಡಿಮೆ ಬಿಸುಪು ಇದ್ದರೆ ಈ ದೊಳೆಗಳ ಕೆಲಸ ಕುಂದುತ್ತದೆ. ಹಾಗೆಯೇ ಅತಿ ಹೆಚ್ಚು ಹುಳಿಯಳತೆ ಮತ್ತು ಬಿಸುಪು ಇದ್ದರೂ ಈ ದೊಳೆಗಳು ತಮ್ಮ ಕೆಲಸಮಾಡಲಾರವು ಮತ್ತು ಸಾಯುಲೂ ಬಹುದು. ಹಾಗಾಗಿ, ಈ ದೊಳೆಗಳು ಚೆನ್ನಾಗಿ ತಮ್ಮ ಬಿರುಗೆಯ ಕೆಲಸವನ್ನು ಚೆನ್ನಾಗಿ ಮಾಡಲು ಒಂದು ಒಳ್ಳೆಯ ಬಿಸುಪು ಇರಬೇಕಾಗುತ್ತದೆ. ದೊಳೆಗಳ ಬಗೆಯ ಆಧಾರದ ಮೇಲೆ ಅವು ಹೆಚ್ಚು ಕೆಲಸ ಮಾಡುವ ಬಿಸುಪು ಬೇರೆ ಬೇರೆಯಾಗಿರುತ್ತದೆ.

ಹಸಿರುಮನೆಯ ಒಳಗೆ ಹೊರಗಿನ ಗಾಳಿಗಿಂತ ಹೆಚ್ಚಿನ ಬಿಸುಪು ಇರುವುದರಿಂದ ಗಿಡದ ಸೂಲುಗೂಡುಗಳ ದೊಳೆಗಳು ಈ ಬಿಸುಪಿನಲ್ಲಿ ತಮ್ಮ ಕೆಲಸವನ್ನು ಚೆನ್ನಾಗಿ ನಡೆಸಿ ಬೆಳಕಿನ ಒಂದುಗೆಯನ್ನು ನಡೆಸುತ್ತಿರುತ್ತವೆ. ಗಿಡಗಳಿಗೆ ಬೇಕಾದ ಬಿಸುಪನ್ನು ಮೊದಲೇ ತಿಳಿದುಕೊಂಡು ಆ ಬಿಸುಪನ್ನು ಹಸಿರುಮನೆಯ ಒಳಗೆ ಕಾದುಕೊಳ್ಳಬೇಕಾಗುತ್ತದೆ. ಒಂದು ವೇಳೆ ನೇಸರನ ಬೆಳಕು ಹೆಚ್ಚಾಗಿ ಹಸಿರುಮನೆಯ ಒಳಗಿನ ಬಿಸುಪು ಬೇಕಾದ ಬಿಸುಪಿಗಿಂತ ಹೆಚ್ಚಾದರೆ ಗಾಳಿಕಿಂಡಿಗಳ (Ventilator) ಮೂಲಕ ಬಿಸಿಗಾಳಿಯನ್ನು ಹೊರಹಾಕಿ ಹೊರಗಿನ ತಂಪುಗಾಳಿಯನ್ನು ಹಸಿರುಮನೆಯ ಒಳಗೆ ಬರುವಂತೆ ಏರ್ಪಾಡು ಮಾಡಬೇಕಾಗುತ್ತದೆ. ಅದಕ್ಕಾಗಿ ಹಸಿರುಮನೆಯಲ್ಲಿ ಗಾಳಿಕಿಂಡಿಗಳನ್ನು ಇಟ್ಟಿರಬೇಕಾಗುತ್ತದೆ. ಹಸಿರುಮನೆಯ ಕಿಟಕಿ ಬಾಗಿಲುಗಳು ಕೂಡ ಗಾಳಿಕಿಂಡಿಗಳಾಗಿ ಕೆಲಸ ಮಾಡುತ್ತವೆ. ಹೀಗೆ ಹಗಲೆಲ್ಲಾ ಬಿಸುಪಿನಲ್ಲಿ ಹೆಚ್ಚಿನ ಏರುಪೇರಾಗದೇ, ಬೇಕಾದ ಬಿಸುಪನ್ನು ಕಾಯ್ದುಕೊಳ್ಳುವುದರಿಂದ ಗಿಡದ ದೊಳೆಗಳು ನೇಸರನ ಬೆಳಕು ಸಿಗುವವರೆಗೂ ಚೆನ್ನಾಗಿ ಕೆಲಸಮಾಡಿ ಬೆಳಕಿನ ಅಡುಗೆಯನ್ನು ನಡೆಸುತ್ತವೆ. ಇದರಿಂದ ಹಸಿರು ಮನೆಯ ಒಳಗೆ ಗಿಡಗಳು ಬೇಗನೇ ಮತ್ತು ಚೆನ್ನಾಗಿ ಬೆಳೆಯುತ್ತವೆ.

2. ಹೆಚ್ಚಿನ ತೇವ (humidity) ಗಿಡದ ಬೆಳವಣಿಗೆಗೆ ಉಪಕಾರಿ:
ನೇಸರನ ಬೆಳಕಿದ್ದಾಗ ಬೆಳಕಿನ ಒಂದುಗೆಯನ್ನು ಗಿಡಗಳು ನಡೆಸುತ್ತವೆ ಎಂದು ನಾವು ಮೊದಲೇ ತಿಳಿದಿದ್ದೇವೆ. ಈ ಬೆಳಕಿನ ಒಂದುಗೆಗೆ ನೀರನ್ನೂ ಕೂಡ ಗಿಡಗಳು ಬಳಸುತ್ತವೆ. ಹಾಗಾಗಿ ಹಸಿರುಮನೆಯ ಒಳಗೆ ಸಾಕಷ್ಟು ನೀರಿನ ಏರ್ಪಾಡು ಗಿಡಗಳಿಗೆ ಬೇಕಾಗುತ್ತದೆ. ಮಣ್ಣಿನಿಂದ ಆವಿಯಾದ ನೀರಿನ ತೇವ ಮತ್ತು ಗಿಡಗಳ ಬೆಳಕಿನ ಅಡುಗೆಯಿಂದ ಹೊರಬಂದ ತೇವ ಹಸಿರುಮನೆಯ ಒಳಗೆಯೇ ಇರುತ್ತದೆ, ಗಾಜು/ಪ್ಲಾಸ್ಟಿಕ್ ಗೋಡೆಗಳನ್ನು ದಾಟಿ ತೇವಾಂಶವು ಹೊರಹೋಗಲಾಗದು. ಇದರಿಂದ ಮಣ್ಣಿನಲ್ಲಿರುವ ನೀರು ಬೇಗನೆ ಆವಿಯಾಗುವುದನ್ನು ತಪ್ಪಿಸಬಹುದು ಮತ್ತು ಈ ನೀರನ್ನು ಗಿಡಗಳ ಬೆಳಕಿನ ಅಡುಗೆಗೆ ಒದಗಿಸುತ್ತಿರ ಬಹುದು. ಒಂದು ವೇಳೆ, ಹಸಿರು ಮನೆಯ ಒಳಗೆ ತೇವಾಂಶವು ಅಗತ್ಯಕ್ಕಿಂತ ಹೆಚ್ಚಾದರೆ ಗಿಡಗಳಿಗೆ ಬೆಳಕಿನ ಅಡುಗೆಯಿಂದ ತೇವಾಂಶವನ್ನು ಹೊರಹಾಕಲು ತೊಡಕಾಗುತ್ತದೆ. ಹಾಗಾಗಿ ತೇವಾಂಶವನ್ನು ಬೇಕಾದಷ್ಟು ಮಾತ್ರ ಕಾಯ್ದುಕೊಳ್ಳಲು ಮತ್ತೊಮ್ಮೆ ಗಾಳಿಕಿಂಡಿಗಳ ನೆರವನ್ನು ಪಡೆಯಬಹುದು. ಒಳಗಿರುವ ತೇವದ ಗಾಳಿ ಹೊರಹೋಗಿ ಹೊರಗಿನ ಗಾಳಿ ಒಳಬರುವಂತೆ ಗಾಳಿಕಿಂಡಿಗಳನ್ನು ಹಸಿರುಮನೆಗಳಲ್ಲಿ ಅಳವಡಿಸಲಾಗಿರುತ್ತದೆ.

3. ಹೊರಗಿನ ಕ್ರಿಮಿಕೀಟಗಳಿಂದ ಕಾಯುವುದು.
ಹಸಿರುಮನೆಯು ಗಾಜು/ಪ್ಲಾಸ್ಟಿಕ್ ನ ಗೋಡೆಗಳಿಂದ ಕಟ್ಟಿರುವುದರಿಂದ ಗಿಡಗಳ ಬೆಳವಣಿಗೆಗೆ ತೊಂದರೆ ಕೊಡುವ ಹೊರಗಿನ ಕ್ರಿಮಿಕೀಟಗಳಿಂದ ದೂರವಿಡಬಹುದಾಗಿದೆ.

4. ಕೆಟ್ಟ ಗಾಳಿಪಾಡಿನಿಂದ ಕಾಯುವುದು.
ಹಸಿರುಮನೆಯ ಗಿಡಗಳನ್ನು ಅತಿ ಹೆಚ್ಚಿನ ಮಳೆ, ಗಾಳಿ ಮತ್ತು ಬಿಸಿಲಿನಿಂದ ಆಗುವ ತೊಂದರೆಗಳಿಂದ ಕಾಪಾಡಬಹುದು. ಅಲ್ಲದೇ ಇರುಳಿನ ಹೆಚ್ಚು ಹೊತ್ತು ಹಸಿರುಮನೆಯ ಒಳಗೆ ಬೆಚ್ಚಗಿನ ಗಾಳಿ ಇರುವುದರಿಂದ ತಂಪುಗಾಳಿಯಿಂದ ಗಿಡಗಳಿಗೆ ಆಗುವ ತೊಂದರೆಗಳನ್ನು ತಪ್ಪಿಸಬಹುದು. ಕೆಲವು ಕಡೆ ಹಸಿರುಮನೆಗಳಿಗೆ ಹಸಿರುಬಣ್ಣದ ಗಾಜು/ಪ್ಲಾಸ್ಟಿಕ್ ಅನ್ನು ಬಳಸಿರುತ್ತಾರೆ, ಇದು ನೇಸರನ ಬಿಸಿಲು ಅಗತ್ಯಕ್ಕಿಂತ ಹೆಚ್ಚಾಗಿ ಹಸಿರುಮನೆಯ ಒಳಗೆ ಬರದಂತೆ ತಡೆಯುತ್ತದೆ.

ಹೀಗೆ, ಹಸಿರುಮನೆಯನ್ನು ಬಳಸಿ ಗಿಡಗಳನ್ನು ಬೆಳಸುವುದರಿಂದ ಗಿಡಗಳಿಗೆ ಬೇಕಾದ ಬಿಸುಪು ಮತ್ತು ತೇವಾಂಶ ದಿನದ ಹೆಚ್ಚುಕಾಲ ಸಿಗುತ್ತಿರುತ್ತದೆ. ಇದರಿಂದ ಗಿಡಗಳು ತಮ್ಮ ಬೆಳಕಿನ ಒಂದುಗೆಯನ್ನ್ಯು ನಡೆಸಿ ಆದಷ್ಟು ಬೇಗ ಮತ್ತು ಚೆನ್ನಾಗಿ ಬೆಳೆಯುತ್ತವೆ. ಹಸಿರುಮನೆಯ ಬಿಸುಪು ಹಾಗು ತೇವಾಂಶವನ್ನು ನಮಗೆ ಬೇಕಾದ ಬಗೆಯಲ್ಲಿ ಹಿಡಿದಿಟ್ಟುಕೊಳ್ಳಬಹುದಾಗಿದೆ. ಇದು ಹೆಚ್ಚು ಇಳುವರಿ ತರುವಲ್ಲಿ ನೆರವಾಗುತ್ತದೆ.

(ಮಾಹಿತಿ ಸೆಲೆ: www.ishs.org420magazine)

(ಚಿತ್ರ ಸೆಲೆ: wikipedia)

ಮರಗಿಡಗಳು ಬೆಳೆಯುವುದು ಹೇಗೆ?

ರತೀಶ ರತ್ನಾಕರ.

ಚಳಿಗಾಲದ ಮೊದಲು ತನ್ನ ಎಲೆಗಳನ್ನು ಉದುರಿಸಿ ಚಳಿಗಾಲದುದ್ದಕ್ಕೂ ಮರಗಿಡಗಳು ಯಾವುದೇ ಹೊಸ ಎಲೆಗಳನ್ನು ಚಿಗುರಿಸದೆ ಒರಗಿದ (dormant) ಸ್ಥಿತಿಯಲ್ಲಿ ಇರುತ್ತವೆ. ಮಳೆ ಬಿದ್ದೊಡನೆ ಚಿಗುರಿಕೊಂಡು ತನ್ನ ಬೆಳವಣಿಗೆಯನ್ನು ಮುಂದುವರಿಸುತ್ತವೆ. ಮರಗಳ ಈ ಬೆಳವಣಿಗೆ ಹೇಗೆ ನಡೆಯುತ್ತದೆ ಎಂದು ಒಮ್ಮೆ ಇಣುಕಿ ನೋಡಿಕೊಂಡು ಬರೋಣ.

ಮೊಳಕೆಯೊಡೆದ ಗಿಡದ ಎಲೆಯು ನೇಸರನ ಬೆಳಕು, ಮಣ್ಣಿನಿಂದ ಸಿಗುವ ನೀರು, ಆರಯ್ಕೆ (Nutrition), ಗಾಳಿಯಲ್ಲಿರುವ ಕಾರ್ಬನ್ ಡಯ್ ಆಕ್ಸಯ್ಡ್ ಮತ್ತು ಎಲೆಯಲ್ಲಿರುವ ಎಲೆಹಸಿರು (Chlorophyl) ಅನ್ನು ಬಳಸಿಕೊಂಡು ‘ಬೆಳಕಿನ ಅಡುಗೆ’ (Photo Synthesis)ಯ ಮೂಲಕ ಗಿಡಕ್ಕೆ ಬೇಕಾದ ಊಟವನ್ನು ಸಿದ್ದ ಮಾಡುತ್ತದೆ, ಜೊತೆಗೆ ಆಕ್ಸಿಜನ್ ಅನ್ನು ಹೊರಗಾಳಿಗೆ ಬಿಡುತ್ತದೆ. ಹೀಗೆ ಸಿದ್ದ ಮಾಡಿದ ಊಟವು ಗಿಡದ ಉಳಿದ ಭಾಗಗಳಿಗೆ ಹರಡಲಾಗುತ್ತದೆ ಇದು ಗಿಡದ ಬೆಳವಣಿಗೆಯಲ್ಲಿ ಮುಖ್ಯವಾದ ಪಾತ್ರ ವಹಿಸುತ್ತದೆ. ಮರಗಿಡಗಳು ಎರೆಡು ಬಗೆಯಲ್ಲಿ ಬೆಳೆಯುತ್ತವೆ, ಅವುಗಳ ಕುರಿತು ಅರಿಯೋಣ ಬನ್ನಿ.

ಮೊದಲನೆಯ ಬೆಳವಣಿಗೆಯು ಮರಗಿಡದ ಕೊಂಬೆ/ರಕ್ಕೆಗಳಲ್ಲಿ ನಡೆಯುತ್ತದೆ. ಗಿಡವು ಎತ್ತರವಾಗಿ ಬೆಳೆಯಲು ಇದು ನೆರವಾಗುತ್ತದೆ. ರಕ್ಕೆಯ ತುದಿಯಲ್ಲಿ ಕುಡಿ (Meristem) ಇರುತ್ತದೆ ಇದು ಗಿಡದ ಬೆಳವಣಿಗೆಗೆ ಬೇಕಾದ ಒಂದೇ ಬಗೆಯ ಸೂಲುಗೂಡುಗಳನ್ನು ಹೊಂದಿರುತ್ತದೆ. ಗಿಡದ ಬೇರಿನಿಂದ ನೀರು ಹಾಗು ಆರಯ್ಕೆ ದೊರೆತೊಡನೆ ಈ ಸೂಲುಗೂಡುಗಳು ಹಿಗ್ಗತೊಡಗುತ್ತವೆ ಮತ್ತು ಒಡೆದು ತನ್ನ ಎಣಿಕೆಯನ್ನು ಹೆಚ್ಚಿಸತೊಡಗುತ್ತದೆ. ಈ ಸೂಲುಗೂಡುಗಳ ಒಡೆಯುವಿಕೆಯಿಂದ ಗಿಡದ ಕೊಂಬೆಗಳಲ್ಲಿ ಕುಡಿಯು ಉದ್ದವಾಗಿ ಬೆಳೆದು ಹೊಸ ಎಲೆ/ಮೊಗ್ಗು ಚಿಗುರಲಾರಂಬಿಸುತ್ತದೆ. ಈ ಕೆಲಸ ನಡೆಯಲು ಗಿಡಕ್ಕೆ ಬೇಕಾದ ನೇಸರನ ಬೆಳಕು, ಕಾವು, ಗಾಳಿ, ನೀರು ಮತ್ತು ಮಣ್ಣಿನಿಂದ ಸಿಗುವ ಆರಯ್ಕೆಯ ಪಾತ್ರ ದೊಡ್ಡದಿದೆ. ಚಳಿಗಾಲದಲ್ಲಿ ಇರುಳಿಗಿಂತ ಹಗಲು ಚಿಕ್ಕದಾಗಿರುತ್ತದೆ, ಬಿಸುಪು ಕಡಿಮೆಯಿರುತ್ತದೆ, ಸಾಕಷ್ಟು ನೀರು ಸಿಗುವುದಿಲ್ಲ ಮತ್ತು ನೇಸರನ ಬೆಳಕಿನ ತೀವ್ರತೆ ಕೂಡ ಕಡಿಮೆಯಿರುತ್ತದೆ.

ಹಾಗಾಗಿ ಚಳಿಗಾಲದ ಗಾಳಿಪಾಡು ಒಟ್ಟಾರೆಯಾಗಿ ಮರಗಿಡಗಳ ಬೆಳವಣಿಗೆಗೆ ಅನುಕೂಲಕರವಾಗಿರುವುದಿಲ್ಲ. ಆದ್ದರಿಂದ ಇವು ಚಳಿಗಾಲದಲ್ಲಿ ಒರಗಿದ ಸ್ಥಿತಿಯಲ್ಲಿ ಇರುತ್ತವೆ. ಬೇಸಿಗೆ ಶುರುವಾಗುವ ಮುನ್ನ ಒಂದು ಮಳೆ ಬಿದ್ದೊಡನೆ ಮರಗಿಡಗಳ ಬೆಳವಣಿಗೆಗೆ ಬೇಕಾದ ಗಾಳಿಪಾಡು ಸಿಗುತ್ತದೆ ಮತ್ತು ಇವು ಚಿಗುರತೊಡಗುತ್ತವೆ. ಇದಲ್ಲದೇ, ಬೇರುಗಳ ತುದಿಯಲ್ಲಿಯೂ ಕೂಡ ಈ ಬೇರಿನ ಕುಡಿ (Root apical meristem) ಇರುತ್ತದೆ, ಇವು ಕೂಡ ತನ್ನ ಬೆಳವಣಿಗೆಗೆ ಬೇಕಾದ ಗಾಳಿಪಾಡು ಸಿಕ್ಕೊಡನೆ ತನ್ನ ಸೂಲುಗೂಡುಗಳನ್ನು ಹಿಗ್ಗಿಸಿ, ಒಡೆದು ಬೆಳೆಯುತ್ತಾ ಹೋಗುತ್ತವೆ. ಮರಗಿಡಗಳ ತಳಿಗಳಿಗೆ ತಕ್ಕಂತೆ ಬೇರಿನ ಇಲ್ಲವೇ ಕಾಂಡದ ಬೆಳವಣಿಗೆ ನಡೆಯುತ್ತದೆ.

ಎರಡನೆ ಬಗೆಯ ಬೆಳವಣಿಗೆಯಲ್ಲಿ ಬಗೆಯಲ್ಲಿ ಮರದ ಕಾಂಡವು ತನ್ನ ಅಗಲವನ್ನು ಹೆಚ್ಚಿಸುತ್ತಾ ಹೋಗುತ್ತದೆ. ಮರದ ಕಾಂಡದಲ್ಲಿ ಒಟ್ಟು ನಾಲ್ಕು ಭಾಗಗಳಿರುತ್ತವೆ ಅವು ತೊಗಟೆ/ಸಿಪ್ಪೆ, ನೀರ‍್ಗೊಳವೆ (Xylem), ಕೂಳ್ಗೊಳವೆ(Phloem), ತಿರುಳು (Cambium) ಮತ್ತು ನಡುಮರ (heartwood). ಇವುಗಳ ಕುರಿತು ಮಾಹಿತಿಯನ್ನು ಪಡೆಯೋಣ.

ತಿರುಳು: ಕಾಂಡದಲ್ಲಿ ಬೆಳೆಯುವ ತುಂಬಾ ಮುಖ್ಯವಾದ ಭಾಗ ಇದಾಗಿದೆ. ಇದರ ಸೂಲುಗೂಡುಗಳು ಅತಿ ಹೆಚ್ಚು ಹುರುಪಿನಿಂದ ಇರುತ್ತವೆ, ಗಿಡದ ಬೆಳವಣಿಗೆಗೆ ಅನುಕೂಲಕರ ಗಾಳಿಪಾಡು ಸಿಕ್ಕಾಗ ತಿರುಳಿನಲ್ಲಿರುವ ಸೂಲುಗೂಡುಗಳು ಬೆಳೆದು ಒಡೆದು ಹೊಸ ಹೊಸ ಸೂಲುಗೂಡುಗಳಾಗು ಮಾರ್ಪಾಡಾಗುತ್ತವೆ. ಹೀಗೆ ಮೂಡಿದ ಕೆಲವು ಹೊಸ ಸೂಲುಗೂಡುಗಳು ತಿರುಳಿನ ಹೊರ ಭಾಗಕ್ಕೆ ಸಾಗಿ ಕೂಳ್ಗೊಳವೆ ಆಗುತ್ತದೆ. ಮತ್ತೆ ಕೆಲವು ಹೊಸ ಸೂಲುಗೂಡುಗಳು ತಿರುಳಿನ ಒಳಭಾಗಕ್ಕೆ ಸಾಗಿ ನೀರ‍್ಗೊಳವೆ ಆಗುತ್ತದೆ. ಹಾಗಾಗಿ ಈ ತಿರುಳು ಕೂಳ್ಗೊಳವೆ ಮತ್ತು ನೀರ‍್ಗೊಳವೆಯ ನಡುವೆ ಇರುತ್ತದೆ.

ನೀರ‍್ಗೊಳವೆ: ತಿರುಳಿನ ಒಳಭಾಗಕ್ಕೆ ಇರುವ ಈ ಕೊಳವೆಯು ತಿರುಳಿನಿಂದ ಒಳಭಾಗಕ್ಕೆ ಸರಿದ ಹೊಸ ಸೂಲುಗೂಡುಗಳಿಂದ ಆಗಿರುತ್ತದೆ. ಮರಗಿಡಗಳ ಬೇರಿನಲ್ಲಿ ಸಣ್ಣ ಸಣ್ಣ ಬೇರು ಕೂದಲುಗಳು ಇರುತ್ತವೆ, ಈ ಕೂದಲುಗಳ ನೆರವಿನಿಂದ ಮಣ್ಣಿನಲ್ಲಿರುವ ನೀರು ಮತ್ತು ಆರಯ್ಕೆಯನ್ನು ಬೇರುಗಳು ಎಳೆದುಕೊಳ್ಳುತ್ತವೆ. ಹೀಗೆ ಎಳೆದುಕೊಂಡ ನೀರು ಮತ್ತು ಆರಯ್ಕೆಯನ್ನು ನೀರ‍್ಗೊಳವೆಯ ಮೂಲಕ ಗಿಡದ ಎಲೆಗಳಿಗೆ ಸಾಗಿಸುತ್ತದೆ. ಮೊದಲೆ ತಿಳಿಸಿದಂತೆ ಗಿಡದ ಎಲೆಗಳ ಬೆಳಗಿನ ಒಂದುಗೆಗೆ ಇದು ಬೇಕಾಗುತ್ತದೆ. ಹೀಗೆ ನೀರ‍್ಗೊಳವೆಗಳು ನೆರವಾಗುತ್ತವೆ.

ನಡುಮರ: ತಿರುಳಿನಿಂದ ಹೊಸ ಹೊಸ ಸೂಲುಗೂಡುಗಳು ನೀರ‍್ಗೊಳವೆಯ ಜಾಗಕ್ಕೆ ಸರಿಯುತ್ತಿರುತ್ತವೆ ಹಾಗಾಗಿ ನೀರ‍್ಗೊಳವೆಯ ಸೂಲುಗೂಡುಗಳು ಮತ್ತಷ್ಟು ಒಳಕ್ಕೆ ಸರಿದು ಗಟ್ಟಿಯಾಗುತ್ತಾ ಹೋಗುತ್ತವೆ ಹೀಗೆ ಮರದ ಒಳಭಾಗಕ್ಕೆ ಸರಿದು ಗಟ್ಟಿಯಾದ ಸೂಲುಗೂಡುಗಳಿಂದ ನಡುಮರ ಉಂಟಾಗಿರುತ್ತದೆ. ಮರವು ಮೇಲಕ್ಕೆ ಬೆಳೆಯುತ್ತಿದ್ದಂತೆ ಬೇಕಾದ ಗಟ್ಟಿತನವನ್ನು ಇದು ಒದಗಿಸುತ್ತದೆ.

ಕೂಳ್ಗೊಳವೆ: ಬೆಳಕಿನ ಅಡುಗೆಯ (Photo Synthesis) ಮೂಲಕ ಎಲೆಗಳು ತನ್ನ ಊಟವನ್ನು ಸಿದ್ದ ಮಾಡುತ್ತವೆ ಎಂದು ಮೊದಲೇ ತಿಳಿದೆವು. ಹೀಗೆ ಸಿದ್ಧ ಮಾಡಿದ ಊಟವನ್ನು ಗಿಡದ ಉಳಿದ ಭಾಗಗಳಿಗೆ ಕೂಳ್ಗೊಳವೆಯ ಮೂಲಕ ಹರಡುತ್ತದೆ. ಕೂಳ್ಗೊಳವೆಯು ತಿರುಳಿನ ಹೊರಭಾಗಕ್ಕೆ ಇದ್ದು, ತಿರುಳಿನ ಹೊಸ ಸೂಲುಗೂಡುಗಳಿಂದ ಉಂಟಾಗಿರುತ್ತದೆ.

ತೊಗಟೆ/ಸಿಪ್ಪೆ: ತಿರುಳಿನ ಹೊಸ ಹೊಸ ಸೂಲುಗೂಡುಗಳು ಕೂಳ್ಗೊಳವೆಯ ಜಾಗಕ್ಕೆ ಸರಿಯುತ್ತಿರುತ್ತವೆ ಹಾಗಾಗಿ ಕೂಳ್ಗೊಳವೆಯ ಸೂಲುಗೂಡುಗಳು ಮತ್ತಷ್ಟು ಹೊರಕ್ಕೆ ಸರಿದು ಗಟ್ಟಿಯಾಗಿ ತೊಗಟೆ/ಸಿಪ್ಪೆ ಆಗುತ್ತದೆ. ಕಾಂಡದ ಒಳಭಾಗವನ್ನು ಗಾಳಿಪಾಡಿನಿಂದ ಕಾಪಾಡಲು ಇದು ನೆರವಾಗುತ್ತದೆ.

ಹೀಗೆ, ಕಾಂಡದ ತಿರುಳಿನಲ್ಲಿರುವ ಸೂಲುಗೂಡುಗಳು ಬೆಳೆದು ಒಡೆದು ಹೊಸ ಹೊಸ ಸೂಲುಗೂಡುಗಳಾಗಿ, ನೀರ‍್ಗೊಳವೆ, ಕೂಳ್ಗೊಳವೆ, ನಡುಮರ ಮತ್ತು ತೊಗಟೆ ಸಿಪ್ಪೆಗಳಾಗಿ ಅಗಲವಾಗಿ ಬೆಳೆಯುತ್ತಾ ಹೋಗುತ್ತದೆ. ಒಟ್ಟಾರೆಯಾಗಿ, ಮರದ ಬೆಳವಣಿಗೆಯು ಬೇಸಿಗೆ ಹಾಗು ಮಳೆಗಾಲದಲ್ಲಿ ಹೆಚ್ಚಾಗಿ ಇರುತ್ತದೆ ಮರಕ್ಕೆ ಬೇಕಾದ ಗಾಳಿಪಾಡು ಈ ಕಾಲಗಳಲ್ಲಿ ಸಿಗುವುದು ಇದಕ್ಕೆ ಮುಖ್ಯ ಕಾರಣ. ಆದ್ದರಿಂದ ನಾವು ಮಾರ್ಚ್ ತಿಂಗಳಲ್ಲಿ ಬೀಳುವ ಮಳೆಗೆ ಮರಗಿಡಗಳ ತುಂಬೆಲ್ಲಾ ಚಿಗುರನ್ನು ನೋಡುತ್ತೇವೆ.

ಸೆಲೆ: www.sciencedirect.com hort.ifas.ufl.edu 

 

ಬಿತ್ತಿದ ಬೀಜ ಮೊಳಕೆ ಒಡೆದೀತು ಹೇಗೆ?

ರತೀಶ ರತ್ನಾಕರ.

ಮಣ್ಣಿನಲ್ಲಿ ಬಿತ್ತಿರುವ, ನೀರಿನಲ್ಲಿ ಕಟ್ಟಿಟ್ಟಿರುವ ಇಲ್ಲವೇ ಮಣ್ಣಿನ ಮೇಲೆ ಬಿದ್ದಿರುವ ಬೀಜಗಳು ಮೊಳಕೆಯೊಡೆದಿರುವುದನ್ನು ನಾವು ನೋಡಿರುತ್ತೇವೆ. ಬೀಜವನ್ನು ಯಾವುದಾದರು ಒಂದು ಡಬ್ಬಿಯೊಳಗೆ ಹಾಗೆಯೇ ಇಟ್ಟಿದ್ದಲ್ಲಿ ಅದು ಯಾವ ಬದಲಾವಣೆಯೂ ಆಗದೆ ಹಾಗೆಯೇ ಇರುವ ಬೀಜವು ಮಣ್ಣಿನ ಇಲ್ಲವೇ ನೀರಿನ ಜಾಗಕ್ಕೆ ಬಿದ್ದೊಡನೆ ಮೊಳಕೆಯೊಡೆದು ಗಿಡವಾಗ ತೊಡಗುತ್ತದೆ. ತಾನಾಗಿಯೇ ಆಗುವ ಈ ಕೆಲಸ ಹಲವು ಹಂತಗಳಲ್ಲಿ ನಡೆಯುತ್ತದೆ. ಇದು ಹೇಗೆ ಎಂದು ತಿಳಿದುಕೊಳ್ಳೋಣ ಬನ್ನಿ.

ಬೀಜವು ಹೇಗೆ ಮೊಳಕೆಯೊಡೆಯುತ್ತದೆ ಎಂದು ಅರಿಯುವ ಮೊದಲು ಬೀಜದ ಏರ್ಪಾಟಿನ (structure) ಬಗ್ಗೆ ತಿಳಿದುಕೊಳ್ಳೋಣ. ಯಾವುದೇ ಬೀಜದಲ್ಲಿ ಈ ಕೆಳಗಿನ ಮೂರು ಭಾಗಗಳಿರುತ್ತವೆ.

ಬಸಿರ ಪೊರೆಕ (Endosperm) : ಬೀಜದ ಹೆಚ್ಚಿನ ಭಾಗವನ್ನು ಇದು ಪಡೆದುಕೊಂಡಿರುತ್ತದೆ. ಬೀಜದ ಬಸಿರಿಗೆ ಬೇಕಾಗುವ ಊಟವನ್ನು ಮತ್ತು ಆರಯ್ಕೆಯನ್ನು ಗಂಜಿಯ ರೂಪದಲ್ಲಿ ಈ ಬಸಿರ ಪೊರೆಕ ನೀಡುತ್ತದೆ, ಅಲ್ಲದೇ ಇದರಲ್ಲಿ ಎಣ್ಣೆ ಹಾಗು ಮುನ್ನು (protein) ಅಂಶಗಳು ಇರುತ್ತದೆ. ಇದು ಬಸಿರಿಗೆ ಬೇಕಾಗುವ ಆರಯ್ಕೆಯನ್ನು ಮಾಡುವುದಲ್ಲದೇ ಅದರ ಊಟವನ್ನು ಕೂಡಿಡುವ ಕೆಲಸವನ್ನು ಮಾಡುತ್ತದೆ. ಬೀಜದ ಹೆಚ್ಚಿನ ಪಾಲು ಬಸಿರ ಪೊರೆಕದಿಂದ ಕೂಡಿರುತ್ತದೆ.

ಬಸಿರು (Embryo): ಬೀಜದ ಬಸಿರು ಇದಾಗಿದ್ದು ಮುಂದೆ ಬೀಜವು ಮೊಳಕೆಯೊಡೆದು ಬೇರು, ಕಾಂಡ ಹಾಗು ಎಲೆಗಳಾಗಲು ಬೇಕಾಗುವಂತಹ ಗೂಡುಕಟ್ಟುಗಳನ್ನು (tissue) ಇದು ಹೊಂದಿರುತ್ತದೆ. ಜೊತೆಗೆ ಮೊಳಕೆ ಎಲೆಯ (cotyledon) ಗೂಡುಕಟ್ಟುಗಳು ಕೂಡ ಇರುತ್ತವೆ. ಇವು ಬೀಜದ ಬಸಿರಿಗೆ ಬೇಕಾಗಿರುವ ಊಟವನ್ನು ಪಕ್ಕದಲ್ಲಿರುವ ಬಸಿರ ಪೊರೆಕದಿಂದ ಬಸಿರಿಗೆ ಸಾಗಿಸುವಲ್ಲಿ ನೆರವಾಗುತ್ತವೆ. ಅಲ್ಲದೇ, ಬೀಜವು ಬಿಡುವ ಮೊದಲ ಎಲೆಯನ್ನು ಕಾಪಾಡಲು ಬೇಕಾಗಿರುವ ಕಾಪು (shield) ಈ ಮೊಳಕೆ ಎಲೆಯಲ್ಲಿ ಇರುತ್ತದೆ. ಬೀಜವು ಒಂದೆಲೆ ಗಿಡವಾಗಬೇಕೋ ಇಲ್ಲವೇ ಎರಡಲೆ ಗಿಡವಾಗಬೇಕೋ ಎಂಬುದು ಈ ಮೊಳಕೆ ಎಲೆಯ ಗೂಡುಕಟ್ಟುಗಳಲ್ಲೇ ಇರುತ್ತದೆ.

ಸಿಪ್ಪೆ: ಬಸಿರು ಹಾಗು ಬಸಿರ ಪೊರೆಕವನ್ನು ಸುತ್ತಿಕೊಂಡು ಎರವಾಗದಂತೆ ಕಾಪಾಡುವುದೇ ಸಿಪ್ಪೆ. ಸಿಪ್ಪೆಯು ಕೆಲವು ಬೀಜಗಳಲ್ಲಿ ತೆಳುವಾಗಿ (ಕಡಲೇ ಬೀಜದಲ್ಲಿರುವ ಹಾಗೆ), ಇನ್ನು ಕೆಲವು ಬೀಜಗಳಲ್ಲಿ ದಪ್ಪನಾಗಿ (ತೆಂಗಿನಕಾಯಿಯಲ್ಲಿರುವ ಹಾಗೆ) ಇರುತ್ತದೆ. ಹೊರಗಿನ ಹಾನಿಗಳಿಂದ ಬಸಿರನ್ನು ಕಾಪಾಡುವುದೇ ಇದರ ಮುಖ್ಯ ಕೆಲಸವಾಗಿರುತ್ತದೆ.

ಒಂದು ಬೀಜವು ಮೊಳಕೆಯೊಡೆಯಲು ಅದಕ್ಕೆ ತಕ್ಕನಾದ ಉಸಿರುಗಾಳಿ (oxygen), ನೀರು ಹಾಗು ಕಾವು ಬೇಕಾಗುತ್ತದೆ. ಬೀಜವು ಯಾವ ತಳಿ ಎಂಬುದರ ಮೇಲೆ ಬೇಕಾಗಿರುವ ಗಾಳಿ, ನೀರು ಮತ್ತು ಬಿಸುಪು ತೀರ್ಮಾನವಾಗುತ್ತದೆ. ಕೆಲವು ಬಗೆಯ ಬೀಜಗಳು ಮೊಳಕೆ ಒಡೆಯುವಲ್ಲಿ ಬೆಳಕು ಕೂಡ ತನ್ನ ಪಾತ್ರ ವಹಿಸುತ್ತದೆ. ಒಂದು ಬೀಜವು ತಾನು ಮೊಳಕೆಯೊಡೆಯಲು ಬೇಕಾದ ನೀರು, ಉಸಿರುಗಾಳಿ ಮತ್ತು ಬಿಸುಪಿಗೆ ತೆರೆದುಕೊಳ್ಳುವವರೆಗೂ ಒರಗಿದ (dormant) ಸ್ಥಿತಿಯಲ್ಲಿ ಇರುತ್ತದೆ. ಅದರ ಒಳಗಿರುವ ಬಸಿರಿಗೆ ಬಸಿರ ಪೊರೆಕ ಊಟ ಒದಗಿಸುತ್ತಿರುತ್ತದೆ, ಇದನ್ನು ಬಿಟ್ಟರೆ ಅದರಲ್ಲಿ ಯಾವ ಬೆಳವಣಿಗೆಯು ಆಗುತ್ತಿರುವುದಿಲ್ಲ. ಒಮ್ಮೆ ಬೇಕಾದ ನೀರು, ಉಸಿರುಗಾಳಿ ಹಾಗು ಬಿಸುಪಿಗೆ ತೆರೆದುಕೊಂಡಾಗ ಅದು ಮೊಳಕೆ ಒಡೆಯುವ ಕೆಲಸವನ್ನು ಆರಂಭಿಸುತ್ತದೆ.

ಬೀಜವು ಮೊಳಕೆ ಒಡೆಯಲು ಬೇಕಾದ ನೀರಿಗೆ ತಾಕಿದಾಗ ಹೊರಗಿನ ನೀರು ಬೀಜದ ಸಿಪ್ಪೆಯೊಳಗೆ ಒಳಹೀರಿಕೆಯ (imbibition) ಮೂಲಕ ಬರುತ್ತದೆ. ಸಿಪ್ಪೆಯೊಳಗೆ ಬಂದ ನೀರನ್ನು ಬಳಸಿಕೊಂಡು ಬಸಿರಿನಲ್ಲಿರುವ ಸೂಲುಗೂಡುಗಳು (cells) ತಮ್ಮ ತರುಮಾರ್ಪುವ (metabolism) ಕೆಲಸವನ್ನು ಹೆಚ್ಚುಗೊಳಿಸಿ ಹಿಗ್ಗಲಾರಂಬಿಸುತ್ತವೆ ಮತ್ತು ಕೆಲವು ಸೂಲುಗೂಡುಗಳು ಒಡೆದು ಹೆಚ್ಚಲಾರಂಬಿಸುತ್ತವೆ. ಬೆಳವಿಕ (auxins) ಮತ್ತು ಇತರೆ ಸುರಿಗೆಗಳು (harmones) ಕೂಡ ಬಸಿರಿನ ಬೆಳವಣಿಗೆಯನ್ನು ಹುರಿದುಂಬಿಸುತ್ತವೆ.

ಬೀಜದ ಒಳಗೆ ಬಂದಿರುವ ನೀರು, ನೀರ‍್ದೊಳೆಗಳನ್ನು (hydrolytic Enzymes) ಚುರುಕುಗೊಳಿಸುತ್ತವೆ ಇವು ಬಸಿರ ಪೊರೆಕದಲ್ಲಿರುವ ಎಣ್ಣೆ, ಮುನ್ನು (protien) ಮತ್ತು ಗಂಜಿಯನ್ನು ಒಡೆದು ಬಸಿರಿನ ತರುಮಾರ್ಪಿಗೆ ನೆರವಾಗುವಂತಹ ರಾಸಾಯನಿಕಗಳನ್ನು ಕೊಡುತ್ತವೆ. ಉಸಿರುಗಾಳಿ ಮತ್ತು ಬಿಸುಪು ಕೂಡ ಬಸಿರಿನ ತರುಮಾರ್ಪಿಗೆ ನೆರವಾಗುತ್ತವೆ. ಇವನ್ನೆಲ್ಲಾ ಬಳಸಿಕೊಂಡು ಬಸಿರು ಮತ್ತಷ್ಟು ಬೆಳೆಯುತ್ತಾ ಹೋಗುತ್ತದೆ. ಹೀಗೆ ಬೆಳೆಯುತ್ತಿರುವ ಬಸಿರಿಗೆ ಬೇಕಾಗಿರುವ ಆರಯ್ಕೆಯನ್ನು ಬಸಿರ ಪೊರೆಕ ಕೊಡುತ್ತಿರುತ್ತದೆ. ಮೊಳಕೆಯು ಒಡೆದು ಎಲೆಯನ್ನು ಬಿಟ್ಟು ನೇಸರನ ಬೆಳಕಿನ ನೆರವಿನಿಂದ ‘ಬೆಳಕಿನ ಒಂದುಗೆ’ (photosynthesis) ನಡೆಸಿ ತನ್ನ ಊಟವನ್ನು ತಾನೇ ಸಿದ್ದ ಮಾಡಿಕೊಳ್ಳುವವರೆಗೂ ಈ ಬಸಿರ ಪೊರೆಕ ನೋಡಿಕೊಳ್ಳುತ್ತಿರುತ್ತದೆ.

ಸಿಪ್ಪೆಯ ಒಳಗೆ ಬಸಿರು ಬೆಳೆಯುತ್ತಿದ್ದಂತೆ ಒಳಗಿನ ಒತ್ತಡ ಹೆಚ್ಚಾಗಿ ಸಿಪ್ಪೆಯು ಒಡೆದು ಬಿಡುತ್ತದೆ. ಸಿಪ್ಪೆಯನ್ನು ಒಡೆದ ಬಸಿರು ಮೊದಲು ತಾಯಿಬೇರಾಗಿ (radicle) ಹೊರಬರುತ್ತದೆ. ಈ ತಾಯಿಬೇರು ಸುತ್ತಲಿನಲ್ಲಿರುವ ಮಣ್ಣನ್ನು ಸೀಳಿಕೊಂಡು ಬೆಳೆಯತೊಡಗುತ್ತದೆ. ಮಣ್ಣಿನಲ್ಲಿರುವ ನೀರು, ಉಸಿರುಗಾಳಿ, ಬಿಸುಪು ಮತ್ತು ಆರಯ್ಕೆಗಳನ್ನು ಬಳಸಿಕೊಂಡು ಬಸಿರು ಮತ್ತಷ್ಟು ಬೆಳೆಯುತ್ತದೆ.

ಒಮ್ಮೆ ತಾಯಿಬೇರಿನ ಬೆಳವಣಿಗೆ ಗಟ್ಟಿಗೊಂಡಮೇಲೆ ಎಳೆಗರಿಯ(plumule) ಬೆಳವಣಿಗೆ ಶುರುವಾಗುತ್ತದೆ. ಎಳೆಗರಿಯು ಮಣ್ಣಿನ ಒಳಗಿನಿಂದ ನೇಸರನ ಬೆಳಕನ್ನು ಹುಡುಕಿಕೊಂಡು ನೆಲದ ಮೇಲ್ಭಾಗಕ್ಕೆ ಬರುತ್ತದೆ. ಹಲವು ಬಗೆಯ ಮೊಳಕೆಗಳಲ್ಲಿ ಎಳೆಗರಿಯನ್ನು ಕಾಯಲು ಬೀಜದ ಸಿಪ್ಪೆಯ ಭಾಗಗಳು ಅಂಟಿಕೊಂಡಿರುತ್ತದೆ. ಎಳೆಗರಿಯು ಬೆಳೆದು ಮೊದಲ ಮೊಳಕೆ ಎಲೆಗಳನ್ನು (Cotyledons) ಬಿಡುತ್ತದೆ ಆಗ ಈ ಸಿಪ್ಪೆಯ ಬಾಗಗಳು ಉದುರಿ ಬೀಳುತ್ತವೆ. ಈ ಎಲೆಗಳು ನೇಸರನ ಬೆಳಕಿನ ನೆರವಿನಿಂದ ತಮ್ಮ ಊಟವನ್ನು ಸಿದ್ದಮಾಡಲಾರಂಬಿಸುತ್ತವೆ. ಈ ಹೊತ್ತಿನಲ್ಲಿ ತಾಯಿಬೇರು ಕೂಡ ಕವಲೊಡೆದು ಹರಡಿಕೊಂಡು ಬೆಳೆಯುತ್ತಾ ಹೋಗುತ್ತದೆ. ಮುಂದೆ ಮೊಳಕೆಯೊಡೆದ ಬೀಜದ ಕಾಂಡ ಹಾಗು ಎಲೆಗಳು ಬಿಟ್ಟು ಬೆಳೆಯುತ್ತದೆ.

ಹೀಗೆ ಒಂದು ಬೀಜವು ಮಣ್ಣಿಗೆ ಸೇರಿ ಮೊಳೆಕೆ ಒಡೆದು ಎಲೆಯಾಗುವವರೆಗೂ ಹಲವು ಹಂತಗಳಲ್ಲಿ ಬದಲಾವಣೆಗಳು ನಡೆಯುತ್ತಿರುತ್ತವೆ. ಈ ಕೆಲಸದಲ್ಲಿ, ಗಾಳಿ, ನೀರು, ಬಿಸುಪು ಮತ್ತು ಬೆಳಕು ದೊಡ್ಡ ಪಾತ್ರವನ್ನು ವಹಿಸುತ್ತವೆ.

 

(ಮಾಹಿತಿ ಸೆಲೆ :intechopen.comnature.com wikipedia.org), (ಚಿತ್ರ ಸೆಲೆ : commons.wikimedia.org)

ಎಲ್ಲೆ ದಾಟಿದ ವೋಯಜರ್ – 1

ಪ್ರಶಾಂತ ಸೊರಟೂರ.

ಚಿತ್ರ: ವೋಯಜರ್ – 1

12.09.2013, ಅಮೇರಿಕಾ ಕಳುಹಿಸಿದ ಬಾನಬಂಡಿ (space craft) ವೋಯಜರ್–1 ಮೊಟ್ಟಮೊದಲ ಬಾರಿಗೆ ನೇಸರ-ಕೂಟದ (solar system) ಎಲ್ಲೆ ದಾಟುವ ಮೂಲಕ ಮಾನವರು ಮಾಡಿದ ವಸ್ತುಗಳಲ್ಲಿ ಎಲ್ಲಕ್ಕಿಂತ ಹೆಚ್ಚು ದೂರದಲ್ಲಿರುವ ವಸ್ತು ಅನ್ನುವ ಹೆಗ್ಗಳಿಕೆಯನ್ನು ತನ್ನತಾಗಿಸಿಕೊಂಡಿತು.

ಸೆಪ್ಟೆಂಬರ್ 2023 ಕ್ಕೆ ನೇಸರನಿಂದ ವೋಯಜರ್ – 1 ರ ದೂರ 161 AU ಅಂದರೆ ಸುಮಾರು 24 ಬಿಲಿಯನ್ ಕಿಲೋ ಮೀಟರಗಳಷ್ಟು! ನೇಸರ ಮತ್ತು ನಮ್ಮ ಭೂಮಿಗೆ ಇರುವ ದೂರವನ್ನು 1 ಬಾನಳತೆ ಇಲ್ಲವೇ ಅಸ್ಟ್ರೋನಾಮಿಕಲ್ ಯುನಿಟ್ (Astronomical Unit – AU) ಅಂತ ಕರೆಯುತ್ತಾರೆ. ಅಂದರೆ ನಮ್ಮಿಂದ ನೇಸರಕ್ಕೆ ಇರುವ ದೂರದ ಸರಿಸುಮಾರು 161 ಪಟ್ಟು ಹೆಚ್ಚು ದೂರದಲ್ಲಿ ವೋಯಜರ್ ಈಗ ಸಾಗುತ್ತಿದೆ.

ನೇಸರನ ಸುತ್ತ ಸುತ್ತುವ 8 ಗ್ರಹಗಳು (planets) ಮತ್ತು ಅವುಗಳ ಸ್ಯಾಟಲೈಟ್ ಗಳನ್ನ ಒಳಗೊಂಡ ಏರ್ಪಾಟಿಗೆ ‘ನೇಸರ-ಕೂಟ’ (Solar System) ಅಂತ ಕರೆಯಲಾಗುತ್ತದೆ. ನೇಸರನ ಒಂಬತ್ತನೇ ಗ್ರಹ ಎಂದು ಗುರುತಿಸಲಾಗಿದ್ದ ಪ್ಲೂಟೋವನ್ನು 2006 ರಲ್ಲಿ ಪಟ್ಟಿಯಿಂದ ಹೊರಗಿಡಲಾಯಿತು ಹಾಗಾಗಿ ನೇಸರ ಕೂಟದಲ್ಲಿ ಇದೀಗ 8 ಗ್ರಹಗಳನ್ನಷ್ಟೇ ಎಣಿಸಲಾಗುತ್ತದೆ. ಇವೆಲ್ಲವುಗಳನ್ನು ದಾಟಿಕೊಂಡು ವೋಯಜರ್–1 ಮುನ್ನಡೆಯುತ್ತಿದೆ.

ವೋಯಜರ್ – 1 ಇಂದಿಗೆ ಸಾಗಿದ ದೂರ ಹಾಗು ಬಾನಿನ 3D ನೋಟವನ್ನು ನಾಸಾ ಮಿಂದಾಣನದಲ್ಲಿ ನೋಡಬಹುದು, ಕೆಳಗಿನ ಕೊಂಡಿಯನ್ನು ಒತ್ತಿ.

 ವೋಯಜರ್ – 1 ಸಾಗಿದ ದೂರ

ಸಪ್ಟಂಬರ್ 5, 1977 ರಂದು ಅಮೇರಿಕಾದ ಬಾನರಿಮೆಯ ಕೂಟ ನಾಸಾ (NASA), ನೇಸರಕೂಟದ ಆಚೆಗಿನ ಮಾಹಿತಿಗಳನ್ನು ತಿಳಿದುಕೊಳ್ಳಲು ವೋಯಜರ್–1 (Voyager-1) ಬಾನಬಂಡಿಯನ್ನು ಹಾರಿಸಿತ್ತು. ಬಾನ ತೆರವು (space) ತಲುಪಿದ ಮೇಲೆ 1979 ರಲ್ಲಿ ಗುರುವಿನ ಏರ್ಪಾಟು (Jovian system) ಮತ್ತು 1980 ರಲ್ಲಿ ಶನಿಯ ಏರ್ಪಾಟಿನ (Saturnine system) ಕುರಿತು ಹಲವಾರು ವಿಷಯಗಳನ್ನು ವೋಯಜರ್–1 ತಿಳಿಸಿಕೊಟ್ಟಿತ್ತು.

ವೋಯಜರ್ – 1 ತೆಗೆದ ಗುರು ಮತ್ತು ಶನಿಯ ಚಿತ್ರಗಳು

        

 ವೋಯಜರ್ – ಏರ್ಪಾಟುಗಳು.

ಬಾನಾಡಿರುವಿನಲ್ಲಿ (ಸ್ಪೇಸ್) ದೊರೆಯುವ ಮಾಹಿತಿಗಳನ್ನು ಕಲೆಹಾಕಲು ವೋಯಜರ್–1 ಹಲವು ಬಗೆಯ ಸಲಕರಣೆಗಳನ್ನು ಹೊಂದಿದೆ. ಚಿತ್ರಗಳನ್ನು ಸೆರೆಹಿಡಿಯಲು ಕ್ಯಾಮೆರಾಗಳ ಏರ್ಪಾಟು, ಸುತ್ತಣದ ಗುಣಗಳನ್ನು ತಿಳಿದುಕೊಳ್ಳಲು ನೆರವಾಗುವು ರೆಡಿಯೋ ಅಲೆಗಳ ಸಲಕರಣೆಗಳು, ಸೆಳೆತದ ಹರವನ್ನು (magnetic field) ಅಳೆಯುವ ಸೆಳೆಯಳಕಗಳು (magnetometers), ಸಲಕರಣೆಗಳನ್ನು ಹಿಡಿತದಲ್ಲಿಡುವ ಕಂಪ್ಯೂಟರ್ ಮುಂತಾದವುಗಳನ್ನು ವೋಯಜರ್ ಒಳಗೊಂಡಿದೆ. ಸಲಕರಣೆಗಳಿಗೆ ಕಸುವು ನೀಡಲು ವೋಯಜರಿನಲ್ಲಿ ಪ್ಲುಟೋನಿಯಮ್-238 ಆಕ್ಸಾಯಡ್ಸನಿಂದ ಮಾಡಿದ ಬ್ಯಾಟರಿಗಳಿವೆ.

ವೋಯಜರ್ – 1 ರ 3D ಚಿತ್ರಣ

ಬಾನಾಚೆಗೆ ಸಾಗುತ್ತಿರುವ ವೋಯಜರ್–1 ಬಾನಬಂಡಿಗೆ ಯಾವುದಾದರೂ (ಯಾರಾದರೂ!) ಜಾಣ್ಮೆ, ತಿಳುವಳಿಕೆ ಹೊಂದಿದ ಜೀವಿಗಳು ಎದುರಾದರೆ ನಮ್ಮ ಕುರಿತು, ನಾವಿರುವ ನೆಲದ ಕುರಿತು ತಿಳಿಸಿಕೊಡಲು ಮೇಲಿನ ಸಲಕರಣೆಗಳ ಜೊತೆಗೆ ಚಿನ್ನದ ಹೊದಿಕೆಯಿರುವ ಅಡಕತಟ್ಟೆಯೊಂದನ್ನು ಇರಿಸಲಾಗಿದೆ. ಈ ಅಡಕತಟ್ಟೆಯಲ್ಲಿ ನೆಲದ ತಿಟ್ಟಗಳು, ಜೀವಿಗಳ ಬದುಕು, ಅರಿಮೆಯ ಹಲವಾರು ವಿಷಯಗಳು, ಮುಂದಾಳುಗಳ ಹಾರಯ್ಕೆಗಳು ಅಡಕಗೊಂಡಿವೆ. ’ನೆಲದ ದನಿಗಳು’ (sounds of earth) ಎಂದು ಹೆಸರಿಟ್ಟಿರುವ ಕಡತದಲ್ಲಿ ತಿಮಿಂಗಲಿನ ಕೂಗಾಟ, ಮಗುವಿನ ಅಳುವು, ಕಡಲ ತೆರೆಗಳ ಅಪ್ಪಳಿಸುವ ದನಿ ಮತ್ತು ಹಲವು ಬಗೆಯ ಇನಿತದ (music) ಕಟ್ಟುಗಳಿವೆ.

1977 ಕ್ಕಿಂತ ಮುಂಚೆಯೇ ಬಾನಿನಲ್ಲಿ ತೇಲಿದ ವೋಯಜರ್–1, ತನಗೊಪ್ಪಿಸಿದ ಕೆಲಸವನ್ನು ಕೊರತೆಯಿಲ್ಲದಂತೆ ಮಾಡಿ ತೋರಿಸಿದೆ. ಇಷ್ಟು ವರುಷಗಳ ಬಳಿಕವೂ, ಅಷ್ಟೊಂದು ದೂರ ಸಾಗಿದರೂ ನಮ್ಮೊಡನೆ ಒಡನಾಡುತ್ತಿರುವ ವೋಯಜರ್, ಅರಿಮೆಯ ಹಿರಿಮೆಯನ್ನು ಎತ್ತಿ ತೋರಿಸುತ್ತಿದೆ.

2025 ಕ್ಕೆ ಬ್ಯಾಟರಿಗಳ ಕಸುವು ಕೊನೆಗೊಳ್ಳುವದರಿಂದ ವೋಯೋಜರ್–1, ಭೂಮಿಯ ಒಡನಾಟವನ್ನು ಕಡಿದುಕೊಳ್ಳುತ್ತ ಕೊನೆಯಿರದ ಬಾನಂಗಳದಲ್ಲಿ ಕಣ್ಮರೆಯಾಗಲಿದೆ.

ಮಾಹಿತಿ ಮತ್ತು ಚಿತ್ರ ಸೆಲೆ: ನಾಸಾ

 

ಬೆಂಕಿ ಆರಿಸುಕ ಹೇಗೆ ಕೆಲಸ ಮಾಡುತ್ತದೆ?

ಜಯತೀರ್ಥ ನಾಡಗೌಡ.

ಬೆಂಕಿ ಆರಿಸುಕ ಇಂದು ಬಹುತೇಕ ಎಲ್ಲ ಕಡೆ ಕಾಣಸಿಗುತ್ತದೆ. ಮಾಲ್, ಕಚೇರಿ, ಬ್ಯಾಂಕ್, ಬಾನೋಡತಾಣ, ಸಿನೆಮಾ ಮಂದಿರ, ಶಾಲೆ, ಕಾರ್ಖಾನೆ, ಹೀಗೆ ಎಲ್ಲೆಡೆ ಕೆಂಪು ಬಣ್ಣದ ಸಿಲಿಂಡರ್ ಆಕಾರದ ಚಿಕ್ಕ,ದೊಡ್ಡ ಅಳತೆಯ ಬೆಂಕಿ ಆರಿಸುಕವನ್ನು ನಾವುಗಳು ನೋಡಿರುತ್ತೇವೆ. ಬೆಂಕಿ ಹತ್ತಿ ಅವಗಡ ಸಮಯದಲ್ಲಿ ಇವುಗಳು ಬಹಳ ನೆರವಿಗೆ ಬರುತ್ತವೆ. ಆದರೆ ಇವುಗಳು ಹೇಗೆ ಕೆಲಸ ಮಾಡುತ್ತವೆ? ಕಷ್ಟದ ಸಂದರ್ಭಗಳಲ್ಲಿ ಇವುಗಳನ್ನು ಹೇಗೆ ಬಳಸಬೇಕು ಎಂಬುದು ತಿಳಿಯೋಣ ಬನ್ನಿ. 

ಸಾಮಾನ್ಯವಾಗಿ ತಿಳಿದಿರುವಂತೆ, ಬೆಂಕಿ ಹೊತ್ತಿಕೊಳ್ಳಲು ಆಕ್ಸಿಜನ್ ಗಾಳಿ ಮತ್ತು ಉರುವಲು ಬೇಕಾಗುತ್ತದೆ. ಆದರೆ ಕೇವಲ ಆಕ್ಸಿಜನ್ ಗಾಳಿ, ಉರುವಲು ಇದ್ದರೆ ಬೆಂಕಿ ಉರಿಯಲ್ಲ. ಉರುವಲು ತನ್ನ ಉರಿತದ ಕಾವಳತೆ ಮಟ್ಟ(Ignition Temperature) ತಲುಪಿರಬೇಕು. ಒಟ್ಟಾಗಿ ಹೇಳುವುದಾದರೆ ಬೆಂಕಿ ಕಿಡಿಹೊತ್ತಿಕೊಳ್ಳಲು, ಆಕ್ಸಿಜನ್, ಉರುವಲು ಮತ್ತು ಬಿಸುಪು ಈ ಮೂರು ಇರಲೇಬೇಕು. ಬೆಂಕಿ ಆರಿಸಲು ಈ ಮೂರರಲ್ಲಿ ಒಂದನ್ನು ಕಡಿತಗೊಳಿಸಿಯೋ, ಇಲ್ಲವಾಗಿಸಿಯೋ ಬೆಂಕಿ ಆರಿಸಬಹುದು. ಸಣ್ಣದಾಗಿ ಬೆಂಕಿ ಹತ್ತಿದ್ದರೆ ದಪ್ಪ ಕಂಬಳಿ ಬಿಸಾಕಿ ಅದನ್ನು ನಿಲ್ಲಿಸುವುದನ್ನು ನೋಡಿರುತ್ತೇವೆ. ಕಂಬಳಿ ಬೆಂಕಿ ಮೇಲೆ ಬಿದ್ದಾಗ ವಾತಾವರಣದ ಆಕ್ಸಿಜನ್ ಪೂರೈಕೆ ನಿಂತು, ಬೆಂಕಿ ಆರುತ್ತದೆ. ಬೆಂಕಿ ಆರಿಸುಕ ಗಾಡಿಗಳು(Fire fighting Vehicles) ನೀರು ಸಿಡಿಸಿ ಬೆಂಕಿ ನಿಲ್ಲಿಸುತ್ತವೆ, ನೀರು ಸಿಂಪಡಿಸಿದಾಗ ಬಿಸುಪು ತಣ್ಣಗಾಗಿ ಬೆಂಕಿ ಆರುತ್ತದೆ. ಇದೇ ವಿಜ್ಞಾನ ಆಧಾರವಾಗಿಟ್ಟುಕೊಂಡು ಬೆಂಕಿ ಆರಿಸುಕಗಳನ್ನು ತಯಾರಿಸಲಾಗುತ್ತದೆ.

ಸಾಮಾನ್ಯವಾಗಿ ಬೆಂಕಿ ಆರಿಸುಕಗಳಲ್ಲಿ 4 ಬಗೆ.  ಅವು ಕೆಳಗಿನಂತಿವೆ:

  1. ನೀರಿನ ಬೆಂಕಿ ಆರಿಸುಕಗಳು
  2. ಕಾರ್ಬನ್ ಡೈ ಆಕ್ಸೈಡ್ ಬೆಂಕಿ ಆರಿಸುಕಗಳು
  3. ನೊರೆಯ ಬೆಂಕಿ ಆರಿಸುಕಗಳು
  4. ಪುಡಿ ತುಂಬಿದ ಬೆಂಕಿ ಆರಿಸುಕಗಳು

ನೀರಿನ ಬೆಂಕಿ ಆರಿಸುಕಗಳು ನೀರನ್ನು ಬೆಂಕಿ ಆರಿಸುವ ಮಾಧ್ಯಮವಾಗಿ ಬಳಕೆ ಮಾಡುತ್ತವೆ. ಒಂದು ಚಿಕ್ಕ ಸಿಲಿಂಡರ್ ಗಾತ್ರದ ಕೊಳಾಯಿಯಲ್ಲಿ ಬಹುಪಾಲು ನೀರು ತುಂಬಿರುತ್ತದೆ. ಅದರೊಳಗೆ ಒಂದು ಪುಟ್ಟ ಗಾಳಿ ತುಂಬಿದ ಡಬ್ಬಿ(canister) ಇರುತ್ತದೆ ಮತ್ತು ನೀರು ಚಿಮ್ಮಲು ಒಂದು ಕೊಳವೆ. ಈ ಕೊಳವೆಯು ಸಿಲಿಂಡರ್‌ನ ಒಂದು ಮೇಲ್ಭಾಗದ ಬಲಬದಿಗೆ ನೀರು ಚಿಮ್ಮಲು ಬಾಯಿ ತೆರೆದಿರುತ್ತದೆ. ಸಿಲಿಂಡರ್ ಮೇಲೆ ಉಂಗುರದ ಮೂಲಕ ಆಪರೇಟ್ ಮಾಡಬಹುದಾದ ಒಂದು ಹಿಡಿಕೆ. ಉಂಗುರ ಎಳೆದಾಗ ಹಿಡಿಕೆಯು ರಿಲೀಸ್ ಆಗಿ ಕೆಳಗಿನ ಗಾಳಿ ತುಂಬಿದ ಡಬ್ಬಿಯ ತೆರಪು(Valve) ತೆರೆಯುವಂತೆ ಮಾಡುತ್ತದೆ. ಇದರಿಂದ ಗಾಳಿಯು ಸಿಲಿಂಡರ್ ತುಂಬಾ ಸೇರಿ ನೀರನ್ನು ಕೆಳಕ್ಕೆ ದಬ್ಬುತ್ತದೆ. ಇದರಿಂದ ನೀರಿನ ಮೇಲೆ ಒತ್ತಡ ಉಂಟಾಗಿ, ಕೊಳವೆ ಮೂಲಕ ಹೊರಕ್ಕೆ ಚಿಮ್ಮಲ್ಪಡುತ್ತದೆ. ಹೀಗೆ ನೀರು, ಬೆಂಕಿಯ ಬಿಸುಪನ್ನು ಹೀರಿ ಬೆಂಕಿ ಆರುವ ಕೆಲಸ ನಡೆಯುತ್ತದೆ.

ನೊರೆಯ ಬೆಂಕಿ ಆರಿಸುಕಗಳು: ಇವುಗಳು ನೀರಿನ ಬೆಂಕಿ ಆರಿಸುಕಗಳಂತೆ ಕೆಲಸ ಮಾಡುತ್ತವೆ. ಆದರೆ ಕೊಳಾಯಿಯ ಒಳಗೆ ನೀರಿನ ಜೊತೆ ನೊರೆಯು ಸೇರಿರುತ್ತದೆ. ಈ ನೊರೆಯು ಸೋಡಿಯಮ್ ಬೈಕಾರ್ಬೋನೆಟ್‍ನಿಂದ ತಯಾರಿಸಿದ್ದಾಗಿರುತ್ತದೆ. ಕೊಳಾಯಿ ಮೇಲ್ಭಾಗದ ಹಿಡಿಕೆಯ ಉಂಗುರ ಎಳೆದಾಗ ನೊರೆಯ ಜೊತೆ ನೀರು ಸೇರಿ ದೊಡ್ಡ ಗಾತ್ರದ ನೊರೆಯು ಉರಿಯುತ್ತಿರುವ ಬೆಂಕಿಯ ಮೇಲೆ ಸಿಂಪಡನೆಗೊಂಡು ಬೆಂಕಿಗೆ ಆಕ್ಸಿಜನ್ ಹರಿವನ್ನು ತಡೆಯುತ್ತದೆ ಮತ್ತು ಬಿಸುಪನ್ನು ಹೀರಿಕೊಳ್ಳುತ್ತ ಬೆಂಕಿ ನಿಲ್ಲಿಸುತ್ತವೆ.

ಪುಡಿಯ ಬೆಂಕಿ ಆರಿಸುಕಗಳು: ಪುಡಿ ಬೆಂಕಿ ಆರಿಸುಕಗಳು ಹೆಚ್ಚು ಕಡಿಮೆ ನೀರು ಇಲ್ಲವೇ ನೊರೆಯ ಆರಿಸುಕಗಳಂತೆ ಈಡುಗಾರಿಕೆ(Design) ಹೊಂದಿರುತ್ತವೆ. ಆದರೆ ಇಲ್ಲಿ ನೊರೆ ಇಲ್ಲವೇ ನೀರಿನ ಬದಲು ಬೆಂಕಿ ಆರಿಸಲು ನೆರವಾಗುವ ಮೊನೊಅಮೋನಿಯಂ ಫಾಸ್ಫೇಟ್(Monoammonium Phosphate) ಪುಡಿಯನ್ನು ಬಳಸುತ್ತಾರೆ. ಇದರೊಟ್ಟಿಗೆ ಪೊಟ್ಯಾಸಿಯಂ ಬೈಕಾರ್ಬೋನೆಟ್ ಇಲ್ಲವೇ ಸೋಡಿಯಂ ಬೈಕಾರ್ಬೋನೆಟ್ ಪುಡಿಗಳನ್ನು ಬಳಕೆ ಮಾಡುತ್ತಾರೆ. ಈ ಪುಡಿ ಬೆಂಕಿಯ ಮೇಲೆ ಬಿದ್ದಾಗ ರಾಸಾಯನಿಕ ಕ್ರಿಯೆಯಿಂದ ಬೆಂಕಿಯ ಬಿಸುಪನ್ನು ಹೀರಿ, ಕರಗುತ್ತ ಉರುವಲಿನ ಆವಿಯಾಗಿಸಿ ಬೆಂಕಿಗೆ ಅವಶ್ಯವಿರುವ ಆಕ್ಸಿಜನ್ ಹರಿವನ್ನು ಕಡಿತ ಮಾಡುತ್ತದೆ. 

(ಈ ಮೇಲಿರುವ ತಿಟ್ಟದಲ್ಲಿ ಸಾಮಾನ್ಯವಾಗಿ ಬೆಂಕಿ ಆರಿಸುಕಗಳು ಹೇಗೆ ಕೆಲಸ ಮಾಡುತ್ತವೆ ಎಂಬುದನ್ನು ತೋರಿಸಲಾಗಿದೆ).

 ಪುಡಿ, ನೀರು ಮತ್ತು ನೊರೆಯ ಈ ಮೂರು ತರಹದ ಬೆಂಕಿ ಆರಿಸುಕಗಳಲ್ಲಿ ಮುನ್ನುಗ್ಗುಕವೊಂದನ್ನು(Propellent) ಬಳಸುತ್ತಾರೆ. ಕ್ಯಾನಿಸ್ಟರ್(ಡಬ್ಬಿ)ಗಳಲ್ಲಿ ಇದೇ ಮುನ್ನುಗ್ಗುಕ ಗಾಳಿಯನ್ನು ಕೂಡಿಡುತ್ತಾರೆ. ಹೆಚ್ಚಾಗಿ ಸಾರಜನಕ(ನೈಟ್ರೋಜನ್) ಇಲ್ಲವೇ ಕಾರ್ಬನ್ ಡೈಆಕ್ಸೈಡ್‍ಗಳನ್ನೇ ಮುನ್ನುಗ್ಗುಕವಾಗಿ ಬಳಸುತ್ತಾರೆ. ಬೆಂಕಿ ಆರಿಸುಕಗಳಲ್ಲಿ, ಹೆಚ್ಚಿನ ಒತ್ತಡದಲ್ಲಿ ಕೂಡಿಟ್ಟಿರುವ ಮುನ್ನುಗ್ಗುಕ ಸ್ಪೋಟಗೊಳ್ಳಬಾರದೆಂದು ಗಟ್ಟಿಮುಟ್ಟಾದ ಉಕ್ಕಿನಿಂದ ತಯಾರಿಸಿಲಾಗಿರುತ್ತದೆ.

ಕಾರ್ಬನ್ ಡೈಆಕ್ಸೈಡ್ ಬೆಂಕಿ ಆರಿಸುಕಗಳು ಕೂಡ ಕೆಂಪು ಬಣ್ಣದ ಸಿಲಿಂಡರ್‌ಗಳಿಂದಾಗಿರುತ್ತವೆ. ಇಲ್ಲಿ ನೀರಿನ ಬದಲು ಕಾರ್ಬನ್ ಡೈಆಕ್ಸೈಡ್ ಗಾಳಿಯನ್ನು ಬಳಸುತ್ತಾರೆ. ಈ ತರದ ಆರಿಸುಕಗಳು ದೊಡ್ಡದಾದ ಕೋನ್  ಆಕಾರದ ಬಾಯಿ ಹೊಂದಿರುತ್ತವೆ. ಇದಕ್ಕೆ ಹಾರ್ನ್ ಎಂದು ಹೇಳಲಾಗುತ್ತದೆ, ಈ ದೊಡ್ಡ ಹಾರ್ನ್ ಮೂಲಕವೇ ಇವುಗಳು ಇಂಗಾಲದ ಬೆಂಕಿ ಆರಿಸುಕಗಳು ಎಂದು ಗುರುತಿಸಬಹುದು. ಇಲ್ಲಿ ಕೂಡ ಮೇಲ್ಭಾಗದಲ್ಲಿ ಹಿಡಿಕೆ-ಅದಕ್ಕೆ ಜೋಡಿಸಲ್ಪಟ್ಟ ತೆರಪಿನ ಏರ್ಪಾಟು ಇರುತ್ತದೆ. ಕೆಂಪು ಕೊಳಾಯಿಯ ಒಳಗೆ ದ್ರವರೂಪದಲ್ಲಿ ಇಂಗಾಲದ ಡೈಆಕ್ಸೈಡ್ ತುಂಬಿರುತ್ತಾರೆ. ಹಿಡಿಕೆಯನ್ನು ಜೋರಾಗಿ ಅದುಮಿದಾಗ ತೆರಪು ತೆರೆದುಕೊಂಡು, ವೇಗದಿಂದ CO2 ಮಂಜಿನಂತೆ ಉರಿಯುವ ಬೆಂಕಿಗೆ  ಬಿಳಿಯ ದಟ್ಟ ಹೊಗೆ ರೂಪದಲ್ಲಿ ಸಿಂಪಡನೆಗೊಂಡು, ಅದನ್ನು ನಿಲ್ಲಿಸುತ್ತದೆ. ಇಲ್ಲಿ ಕೋನ್  ಆಕಾರದ ಹಾರ್ನ್ ರಚನೆ ಬಲುಮುಖ್ಯ.. ವೇಗದಿಂದ ಬರುವ ಕಾರ್ಬನ್ ಡೈಆಕ್ಸೈಡ್ ಬಿರುಸಾದ ಹರಿವಿನಿಂದ ಹಿಗ್ಗುತ್ತಾ ತಂಪಾದ ಮಂಜಿನ ಗಾಳಿ ಹೊರಸೂಸಲು ಅನುಕೂಲವಾಗುವಂತೆ ಹಾರ್ನ್ ಈಡುಗಾರಿಕೆ ಮಾಡಲಾಗಿರುತ್ತದೆ. 

ಈ ಎಲ್ಲ ಬಗೆಯ ಬೆಂಕಿ ಆರಿಸುಕಗಳನ್ನು ಎಲ್ಲ ರೀತಿಯ ಬೆಂಕಿ ಅವಘಡಗಳಲ್ಲಿ ಬಳಸಲಾಗದು. ತಪ್ಪು ಬಳಕೆಯಿಂದ ಅಪಾಯವಾಗುವ ಸಾಧ್ಯತೆಯುಂಟು. ಅದಕ್ಕೆಂದೇ ಬೆಂಕಿಯನ್ನು ಅವುಗಳು ಉಂಟಾದ ಮೂಲದಿಂದ ಬಗೆಗಳಾಗಿ ಗುರುತಿಸಿ, ಅದಕ್ಕೆ ತಕ್ಕುದಾದ ಬೆಂಕಿ ಆರಿಸುಕಗಳನ್ನು ಬಳಸಬೇಕು. ಕ್ಲಾಸ್ ಎ,ಬಿ,ಸಿ,ಡಿ,ಈ ಮತ್ತು ಎಫ್ ಎಂಬ 6 ಬಗೆಯ ಬೆಂಕಿಗಳನ್ನು ಗುರುತಿಸಲಾಗಿದೆ.

ಕ್ಲಾಸ್ ಎ – ಸೌದೆ/ಕಟ್ಟಿಗೆ, ಕಾಗದ, ಪ್ಲ್ಯಾಸ್ಟಿಕ್, ರಬ್ಬರ್ ಮುಂತಾದ ಗಟ್ಟಿವಸ್ತುಗಳಿಂದ ಹೊತ್ತಿಕೊಂಡಿರುವ ಬೆಂಕಿಯು ಈ ಸಾಲಿಗೆ ಸೇರುತ್ತದೆ. ಇದನ್ನು ನೀರಿನ ಬೆಂಕಿ ಆರಿಸುಕ ಬಳಸಿ ತಡೆಹಿಡಿಯಬಹುದು.

ಕ್ಲಾಸ್ ಬಿ – ದ್ರವರೂಪದ ಗಾಳಿ, ದ್ರವ ವಸ್ತುಗಳಿಂದ ಹೊತ್ತಿರುವ ಬೆಂಕಿಯನ್ನು ಕ್ಲಾಸ್ ಬಿ ತರಹದ ಬೆಂಕಿ. ಇಂತ ಬೆಂಕಿ ಆರಿಸಲು ನೊರೆಯ ಬೆಂಕಿ ಆರಿಸುಕ ಬಳಸಬಹುದು.

ಕ್ಲಾಸ್ ಸಿ – ಒತ್ತಡದಲ್ಲಿ ಕೂಡಿಟ್ಟ ದ್ರವ ಇಲ್ಲವೇ ದ್ರವರೂಪದ ಗಾಳಿಯಿಂದ ಹೊತ್ತಿಕೊಂಡ ಬೆಂಕಿ ಕ್ಲಾಸ್ ಸಿ ಬಗೆಯ ಬೆಂಕಿ. ಉದಾಹರಣೆಗೆ:ಎಲ್ಪಿಜಿ ಸಿಲಿಂಡರ್ ಮುಂತಾದವುಗಳಿಂದ ಹೊತ್ತಿದ ಬೆಂಕಿ. ಇಂತಹ ಬೆಂಕಿ ಆರಿಸಲು ಪುಡಿಯ ಬೆಂಕಿ ಆರಿಸುಕಗಳು ನೆರವಾಗಬಹುದು.

ಕ್ಲಾಸ್ ಡಿ – ಸರಳವಾಗಿ ಹೊತ್ತಿಯುರಿಯುವ ಮಾಗ್ನೇಸಿಯಂ, ಅಲ್ಯುಮಿನಿಯಂ, ಸತು, ಪೊಟ್ಯಾಸಿಯಂ, ಸೋಡಿಯಮ್ ಮುಂತಾದ ಜಲ್ಲಿಗಳಿಂದ ಹತ್ತುವ ಬೆಂಕಿ ಕ್ಲಾಸ್ ಡಿ. ಇಂತಹ ಬೆಂಕಿ ಆರಿಸಲು ಪುಡಿಯ ಬೆಂಕಿ ಆರಿಸುಕಗಳು ನೆರವಾಗಬಹುದು.

ಕ್ಲಾಸ್ ಈ – ಎಲೆಕ್ಟ್ರಿಕಲ್ ವಾಹಕ ವಸ್ತುಗಳಿಂದ ಉಂಟಾದ ಬೆಂಕಿ. ಕಾರ್ಬನ್ ಡೈ ಆಕ್ಸೈಡ್ ಮತ್ತು ಪುಡಿಯ ಬೆಂಕಿ ಆರಿಸುಕಗಳು ಇದಕ್ಕೆ ತಕ್ಕುದಾಗಿವೆ.

ಕ್ಲಾಸ್ ಎಫ್ – ಅಡುಗೆ ಎಣ್ಣೆ, ಕೊಬ್ಬು ಮುಂತಾದ ವಸ್ತುಗಳಿಂದ ಉಂಟಾದ ಬೆಂಕಿ. ಪುಡಿಯ ಬೆಂಕಿ ಆರಿಸುಕಗಳು ಇದಕ್ಕೆ ತಕ್ಕುದಾಗಿವೆ.

ಹೀಗೆ ಬೆಂಕಿಗಳ ಬಗೆಗಳಿಗೆ ತಕ್ಕ ಬೆಂಕಿ ಆರಿಸುಕ ಬಳಸಬೇಕು. ಒಂದು ಬಗೆಯ ಬೆಂಕಿಗೆ ಬೇರೆ ಬೇರೆ ಬಗೆಯ 2-3 ಬಗೆಯ ಬೆಂಕಿ ಆರಿಸುಕಗಳನ್ನು ಬಳಸಬಹುದಾಗಿರುತ್ತದೆ.  ಯಾವ ಬೆಂಕಿ ಆರಿಸುಕ ಯಾವ ಬಗೆಯ ಬೆಂಕಿಗೆ ಸೂಕ್ತ ಎಂಬುದನ್ನು ನುರಿತ ತರಬೇತುದಾರರಿಂದ ತರಬೇತಿ ಪಡೆದವರು ಬಳಸಬೇಕು. ನೀರಿನ ಬೆಂಕಿ ಆರಿಸುಕಗಳಿಗೆ ಕೆಂಪು, ನೊರೆಯ ಬೆಂಕಿ ಆರಿಸುಕ ಹಳದಿ, ಪುಡಿಯ ಬೆಂಕಿ ಆರಿಸುಕಕ್ಕೆ ನೀಲಿ ಮತ್ತು ಕಾರ್ಬನ್ ಡೈ ಆಕ್ಸೈಡ್ ಬೆಂಕಿ ಆರಿಸುಕಗಳಿಗೆ ಕಪ್ಪು ಬಣ್ಣದ ಗುರುತು ಹಾಕಿರಲಾಗಿರುತ್ತದೆ.

ಬಳಸುವ ಬಗೆ:  ಬೆಂಕಿ ಆರಿಸುಕದ ಮೂತಿ ಇಲ್ಲವೇ ಚಿಮ್ಮುಕವನ್ನು ಬೆಂಕಿ ಇರುವ ಕಡೆ ತಿರುಗಿಸಿ ಬೆಂಕಿಗೆ ಗುರಿಯಾಗಿಸಿ, ಹಿಡಿಕೆಯ ಮೇಲಿರುವ ಉಂಗುರ ಎಳೆಯಬೇಕು ಆಗ ಬೆಂಕಿ ಮೆಲ್ಲಗೆ ಆರ ತೊಡಗುತ್ತದೆ. ಇದು ಒಂದು ರೀತಿಯಲ್ಲಿ ಬಂದೂಕನ್ನು ಸರಿಯಾದ ಗುರಿಯತ್ತ ತಿರುಗಿಸಿ ಟ್ರಿಗ್ಗರ್ ಅದುಮಿದಂತೆ ಎನ್ನಬಹುದು. ಬೆಂಕಿ ಆರಿಸುಕ ಬಳಸಲು ಕಚೇರಿ, ಮಾಲ್, ಬ್ಯಾಂಕ್, ಬಾನೋಡತಾಣ ಮುಂತಾದ ಕಡೆ ಭದ್ರತಾ ಸಿಬ್ಬಂದಿಗೆ ವಿಶೇಷ ತರಬೇತಿ ನೀಡಲಾಗುತ್ತದೆ. ಈ ತರಬೇತಿ ನೀಡಿದ ವ್ಯಕ್ತಿಗಳಿಗೆ ಮಾತ್ರ ಬೆಂಕಿ ಆರಿಸುಕವನ್ನು ಸರಿಯಾಗಿ ಬಳಸಬಹುದು. ಬೆಂಕಿ ಆರಿಸುಕ ಬಳಸುವ ಮುನ್ನ ಯಾರೇ ಆಗಲಿ ಈ ತರಬೇತಿ ಪಡೆಯಲೇಬೇಕು. ಸರಿಯಾದ ತರಬೇತಿ ಇರದೇ ಬಳಸಲು ಹೋಗಿ ಹಲವರು ತಮಗೆ ಅಪಾಯ ಮಾಡಿಕೊಂಡ ಹಲವು ಘಟನೆಗಳು ನಡೆದಿವೆ.

ಮಾಹಿತಿ ಮತ್ತು ತಿಟ್ಟ ಸೆಲೆ:explainthatstuff.com