ಬಿತ್ತಿದ ಬೀಜ ಮೊಳಕೆ ಒಡೆದೀತು ಹೇಗೆ?

ರತೀಶ ರತ್ನಾಕರ.

ಮಣ್ಣಿನಲ್ಲಿ ಬಿತ್ತಿರುವ, ನೀರಿನಲ್ಲಿ ಕಟ್ಟಿಟ್ಟಿರುವ ಇಲ್ಲವೇ ಮಣ್ಣಿನ ಮೇಲೆ ಬಿದ್ದಿರುವ ಬೀಜಗಳು ಮೊಳಕೆಯೊಡೆದಿರುವುದನ್ನು ನಾವು ನೋಡಿರುತ್ತೇವೆ. ಬೀಜವನ್ನು ಯಾವುದಾದರು ಒಂದು ಡಬ್ಬಿಯೊಳಗೆ ಹಾಗೆಯೇ ಇಟ್ಟಿದ್ದಲ್ಲಿ ಅದು ಯಾವ ಬದಲಾವಣೆಯೂ ಆಗದೆ ಹಾಗೆಯೇ ಇರುವ ಬೀಜವು ಮಣ್ಣಿನ ಇಲ್ಲವೇ ನೀರಿನ ಜಾಗಕ್ಕೆ ಬಿದ್ದೊಡನೆ ಮೊಳಕೆಯೊಡೆದು ಗಿಡವಾಗ ತೊಡಗುತ್ತದೆ. ತಾನಾಗಿಯೇ ಆಗುವ ಈ ಕೆಲಸ ಹಲವು ಹಂತಗಳಲ್ಲಿ ನಡೆಯುತ್ತದೆ. ಇದು ಹೇಗೆ ಎಂದು ತಿಳಿದುಕೊಳ್ಳೋಣ ಬನ್ನಿ.

ಬೀಜವು ಹೇಗೆ ಮೊಳಕೆಯೊಡೆಯುತ್ತದೆ ಎಂದು ಅರಿಯುವ ಮೊದಲು ಬೀಜದ ಏರ್ಪಾಟಿನ (structure) ಬಗ್ಗೆ ತಿಳಿದುಕೊಳ್ಳೋಣ. ಯಾವುದೇ ಬೀಜದಲ್ಲಿ ಈ ಕೆಳಗಿನ ಮೂರು ಭಾಗಗಳಿರುತ್ತವೆ.

ಬಸಿರ ಪೊರೆಕ (Endosperm) : ಬೀಜದ ಹೆಚ್ಚಿನ ಭಾಗವನ್ನು ಇದು ಪಡೆದುಕೊಂಡಿರುತ್ತದೆ. ಬೀಜದ ಬಸಿರಿಗೆ ಬೇಕಾಗುವ ಊಟವನ್ನು ಮತ್ತು ಆರಯ್ಕೆಯನ್ನು ಗಂಜಿಯ ರೂಪದಲ್ಲಿ ಈ ಬಸಿರ ಪೊರೆಕ ನೀಡುತ್ತದೆ, ಅಲ್ಲದೇ ಇದರಲ್ಲಿ ಎಣ್ಣೆ ಹಾಗು ಮುನ್ನು (protein) ಅಂಶಗಳು ಇರುತ್ತದೆ. ಇದು ಬಸಿರಿಗೆ ಬೇಕಾಗುವ ಆರಯ್ಕೆಯನ್ನು ಮಾಡುವುದಲ್ಲದೇ ಅದರ ಊಟವನ್ನು ಕೂಡಿಡುವ ಕೆಲಸವನ್ನು ಮಾಡುತ್ತದೆ. ಬೀಜದ ಹೆಚ್ಚಿನ ಪಾಲು ಬಸಿರ ಪೊರೆಕದಿಂದ ಕೂಡಿರುತ್ತದೆ.

ಬಸಿರು (Embryo): ಬೀಜದ ಬಸಿರು ಇದಾಗಿದ್ದು ಮುಂದೆ ಬೀಜವು ಮೊಳಕೆಯೊಡೆದು ಬೇರು, ಕಾಂಡ ಹಾಗು ಎಲೆಗಳಾಗಲು ಬೇಕಾಗುವಂತಹ ಗೂಡುಕಟ್ಟುಗಳನ್ನು (tissue) ಇದು ಹೊಂದಿರುತ್ತದೆ. ಜೊತೆಗೆ ಮೊಳಕೆ ಎಲೆಯ (cotyledon) ಗೂಡುಕಟ್ಟುಗಳು ಕೂಡ ಇರುತ್ತವೆ. ಇವು ಬೀಜದ ಬಸಿರಿಗೆ ಬೇಕಾಗಿರುವ ಊಟವನ್ನು ಪಕ್ಕದಲ್ಲಿರುವ ಬಸಿರ ಪೊರೆಕದಿಂದ ಬಸಿರಿಗೆ ಸಾಗಿಸುವಲ್ಲಿ ನೆರವಾಗುತ್ತವೆ. ಅಲ್ಲದೇ, ಬೀಜವು ಬಿಡುವ ಮೊದಲ ಎಲೆಯನ್ನು ಕಾಪಾಡಲು ಬೇಕಾಗಿರುವ ಕಾಪು (shield) ಈ ಮೊಳಕೆ ಎಲೆಯಲ್ಲಿ ಇರುತ್ತದೆ. ಬೀಜವು ಒಂದೆಲೆ ಗಿಡವಾಗಬೇಕೋ ಇಲ್ಲವೇ ಎರಡಲೆ ಗಿಡವಾಗಬೇಕೋ ಎಂಬುದು ಈ ಮೊಳಕೆ ಎಲೆಯ ಗೂಡುಕಟ್ಟುಗಳಲ್ಲೇ ಇರುತ್ತದೆ.

ಸಿಪ್ಪೆ: ಬಸಿರು ಹಾಗು ಬಸಿರ ಪೊರೆಕವನ್ನು ಸುತ್ತಿಕೊಂಡು ಎರವಾಗದಂತೆ ಕಾಪಾಡುವುದೇ ಸಿಪ್ಪೆ. ಸಿಪ್ಪೆಯು ಕೆಲವು ಬೀಜಗಳಲ್ಲಿ ತೆಳುವಾಗಿ (ಕಡಲೇ ಬೀಜದಲ್ಲಿರುವ ಹಾಗೆ), ಇನ್ನು ಕೆಲವು ಬೀಜಗಳಲ್ಲಿ ದಪ್ಪನಾಗಿ (ತೆಂಗಿನಕಾಯಿಯಲ್ಲಿರುವ ಹಾಗೆ) ಇರುತ್ತದೆ. ಹೊರಗಿನ ಹಾನಿಗಳಿಂದ ಬಸಿರನ್ನು ಕಾಪಾಡುವುದೇ ಇದರ ಮುಖ್ಯ ಕೆಲಸವಾಗಿರುತ್ತದೆ.

ಒಂದು ಬೀಜವು ಮೊಳಕೆಯೊಡೆಯಲು ಅದಕ್ಕೆ ತಕ್ಕನಾದ ಉಸಿರುಗಾಳಿ (oxygen), ನೀರು ಹಾಗು ಕಾವು ಬೇಕಾಗುತ್ತದೆ. ಬೀಜವು ಯಾವ ತಳಿ ಎಂಬುದರ ಮೇಲೆ ಬೇಕಾಗಿರುವ ಗಾಳಿ, ನೀರು ಮತ್ತು ಬಿಸುಪು ತೀರ್ಮಾನವಾಗುತ್ತದೆ. ಕೆಲವು ಬಗೆಯ ಬೀಜಗಳು ಮೊಳಕೆ ಒಡೆಯುವಲ್ಲಿ ಬೆಳಕು ಕೂಡ ತನ್ನ ಪಾತ್ರ ವಹಿಸುತ್ತದೆ. ಒಂದು ಬೀಜವು ತಾನು ಮೊಳಕೆಯೊಡೆಯಲು ಬೇಕಾದ ನೀರು, ಉಸಿರುಗಾಳಿ ಮತ್ತು ಬಿಸುಪಿಗೆ ತೆರೆದುಕೊಳ್ಳುವವರೆಗೂ ಒರಗಿದ (dormant) ಸ್ಥಿತಿಯಲ್ಲಿ ಇರುತ್ತದೆ. ಅದರ ಒಳಗಿರುವ ಬಸಿರಿಗೆ ಬಸಿರ ಪೊರೆಕ ಊಟ ಒದಗಿಸುತ್ತಿರುತ್ತದೆ, ಇದನ್ನು ಬಿಟ್ಟರೆ ಅದರಲ್ಲಿ ಯಾವ ಬೆಳವಣಿಗೆಯು ಆಗುತ್ತಿರುವುದಿಲ್ಲ. ಒಮ್ಮೆ ಬೇಕಾದ ನೀರು, ಉಸಿರುಗಾಳಿ ಹಾಗು ಬಿಸುಪಿಗೆ ತೆರೆದುಕೊಂಡಾಗ ಅದು ಮೊಳಕೆ ಒಡೆಯುವ ಕೆಲಸವನ್ನು ಆರಂಭಿಸುತ್ತದೆ.

ಬೀಜವು ಮೊಳಕೆ ಒಡೆಯಲು ಬೇಕಾದ ನೀರಿಗೆ ತಾಕಿದಾಗ ಹೊರಗಿನ ನೀರು ಬೀಜದ ಸಿಪ್ಪೆಯೊಳಗೆ ಒಳಹೀರಿಕೆಯ (imbibition) ಮೂಲಕ ಬರುತ್ತದೆ. ಸಿಪ್ಪೆಯೊಳಗೆ ಬಂದ ನೀರನ್ನು ಬಳಸಿಕೊಂಡು ಬಸಿರಿನಲ್ಲಿರುವ ಸೂಲುಗೂಡುಗಳು (cells) ತಮ್ಮ ತರುಮಾರ್ಪುವ (metabolism) ಕೆಲಸವನ್ನು ಹೆಚ್ಚುಗೊಳಿಸಿ ಹಿಗ್ಗಲಾರಂಬಿಸುತ್ತವೆ ಮತ್ತು ಕೆಲವು ಸೂಲುಗೂಡುಗಳು ಒಡೆದು ಹೆಚ್ಚಲಾರಂಬಿಸುತ್ತವೆ. ಬೆಳವಿಕ (auxins) ಮತ್ತು ಇತರೆ ಸುರಿಗೆಗಳು (harmones) ಕೂಡ ಬಸಿರಿನ ಬೆಳವಣಿಗೆಯನ್ನು ಹುರಿದುಂಬಿಸುತ್ತವೆ.

ಬೀಜದ ಒಳಗೆ ಬಂದಿರುವ ನೀರು, ನೀರ‍್ದೊಳೆಗಳನ್ನು (hydrolytic Enzymes) ಚುರುಕುಗೊಳಿಸುತ್ತವೆ ಇವು ಬಸಿರ ಪೊರೆಕದಲ್ಲಿರುವ ಎಣ್ಣೆ, ಮುನ್ನು (protien) ಮತ್ತು ಗಂಜಿಯನ್ನು ಒಡೆದು ಬಸಿರಿನ ತರುಮಾರ್ಪಿಗೆ ನೆರವಾಗುವಂತಹ ರಾಸಾಯನಿಕಗಳನ್ನು ಕೊಡುತ್ತವೆ. ಉಸಿರುಗಾಳಿ ಮತ್ತು ಬಿಸುಪು ಕೂಡ ಬಸಿರಿನ ತರುಮಾರ್ಪಿಗೆ ನೆರವಾಗುತ್ತವೆ. ಇವನ್ನೆಲ್ಲಾ ಬಳಸಿಕೊಂಡು ಬಸಿರು ಮತ್ತಷ್ಟು ಬೆಳೆಯುತ್ತಾ ಹೋಗುತ್ತದೆ. ಹೀಗೆ ಬೆಳೆಯುತ್ತಿರುವ ಬಸಿರಿಗೆ ಬೇಕಾಗಿರುವ ಆರಯ್ಕೆಯನ್ನು ಬಸಿರ ಪೊರೆಕ ಕೊಡುತ್ತಿರುತ್ತದೆ. ಮೊಳಕೆಯು ಒಡೆದು ಎಲೆಯನ್ನು ಬಿಟ್ಟು ನೇಸರನ ಬೆಳಕಿನ ನೆರವಿನಿಂದ ‘ಬೆಳಕಿನ ಒಂದುಗೆ’ (photosynthesis) ನಡೆಸಿ ತನ್ನ ಊಟವನ್ನು ತಾನೇ ಸಿದ್ದ ಮಾಡಿಕೊಳ್ಳುವವರೆಗೂ ಈ ಬಸಿರ ಪೊರೆಕ ನೋಡಿಕೊಳ್ಳುತ್ತಿರುತ್ತದೆ.

ಸಿಪ್ಪೆಯ ಒಳಗೆ ಬಸಿರು ಬೆಳೆಯುತ್ತಿದ್ದಂತೆ ಒಳಗಿನ ಒತ್ತಡ ಹೆಚ್ಚಾಗಿ ಸಿಪ್ಪೆಯು ಒಡೆದು ಬಿಡುತ್ತದೆ. ಸಿಪ್ಪೆಯನ್ನು ಒಡೆದ ಬಸಿರು ಮೊದಲು ತಾಯಿಬೇರಾಗಿ (radicle) ಹೊರಬರುತ್ತದೆ. ಈ ತಾಯಿಬೇರು ಸುತ್ತಲಿನಲ್ಲಿರುವ ಮಣ್ಣನ್ನು ಸೀಳಿಕೊಂಡು ಬೆಳೆಯತೊಡಗುತ್ತದೆ. ಮಣ್ಣಿನಲ್ಲಿರುವ ನೀರು, ಉಸಿರುಗಾಳಿ, ಬಿಸುಪು ಮತ್ತು ಆರಯ್ಕೆಗಳನ್ನು ಬಳಸಿಕೊಂಡು ಬಸಿರು ಮತ್ತಷ್ಟು ಬೆಳೆಯುತ್ತದೆ.

ಒಮ್ಮೆ ತಾಯಿಬೇರಿನ ಬೆಳವಣಿಗೆ ಗಟ್ಟಿಗೊಂಡಮೇಲೆ ಎಳೆಗರಿಯ(plumule) ಬೆಳವಣಿಗೆ ಶುರುವಾಗುತ್ತದೆ. ಎಳೆಗರಿಯು ಮಣ್ಣಿನ ಒಳಗಿನಿಂದ ನೇಸರನ ಬೆಳಕನ್ನು ಹುಡುಕಿಕೊಂಡು ನೆಲದ ಮೇಲ್ಭಾಗಕ್ಕೆ ಬರುತ್ತದೆ. ಹಲವು ಬಗೆಯ ಮೊಳಕೆಗಳಲ್ಲಿ ಎಳೆಗರಿಯನ್ನು ಕಾಯಲು ಬೀಜದ ಸಿಪ್ಪೆಯ ಭಾಗಗಳು ಅಂಟಿಕೊಂಡಿರುತ್ತದೆ. ಎಳೆಗರಿಯು ಬೆಳೆದು ಮೊದಲ ಮೊಳಕೆ ಎಲೆಗಳನ್ನು (Cotyledons) ಬಿಡುತ್ತದೆ ಆಗ ಈ ಸಿಪ್ಪೆಯ ಬಾಗಗಳು ಉದುರಿ ಬೀಳುತ್ತವೆ. ಈ ಎಲೆಗಳು ನೇಸರನ ಬೆಳಕಿನ ನೆರವಿನಿಂದ ತಮ್ಮ ಊಟವನ್ನು ಸಿದ್ದಮಾಡಲಾರಂಬಿಸುತ್ತವೆ. ಈ ಹೊತ್ತಿನಲ್ಲಿ ತಾಯಿಬೇರು ಕೂಡ ಕವಲೊಡೆದು ಹರಡಿಕೊಂಡು ಬೆಳೆಯುತ್ತಾ ಹೋಗುತ್ತದೆ. ಮುಂದೆ ಮೊಳಕೆಯೊಡೆದ ಬೀಜದ ಕಾಂಡ ಹಾಗು ಎಲೆಗಳು ಬಿಟ್ಟು ಬೆಳೆಯುತ್ತದೆ.

ಹೀಗೆ ಒಂದು ಬೀಜವು ಮಣ್ಣಿಗೆ ಸೇರಿ ಮೊಳೆಕೆ ಒಡೆದು ಎಲೆಯಾಗುವವರೆಗೂ ಹಲವು ಹಂತಗಳಲ್ಲಿ ಬದಲಾವಣೆಗಳು ನಡೆಯುತ್ತಿರುತ್ತವೆ. ಈ ಕೆಲಸದಲ್ಲಿ, ಗಾಳಿ, ನೀರು, ಬಿಸುಪು ಮತ್ತು ಬೆಳಕು ದೊಡ್ಡ ಪಾತ್ರವನ್ನು ವಹಿಸುತ್ತವೆ.

 

(ಮಾಹಿತಿ ಸೆಲೆ :intechopen.comnature.com wikipedia.org), (ಚಿತ್ರ ಸೆಲೆ : commons.wikimedia.org)

ಎಲ್ಲೆ ದಾಟಿದ ವೋಯಜರ್ – 1

ಪ್ರಶಾಂತ ಸೊರಟೂರ.

ಚಿತ್ರ: ವೋಯಜರ್ – 1

12.09.2013, ಅಮೇರಿಕಾ ಕಳುಹಿಸಿದ ಬಾನಬಂಡಿ (space craft) ವೋಯಜರ್–1 ಮೊಟ್ಟಮೊದಲ ಬಾರಿಗೆ ನೇಸರ-ಕೂಟದ (solar system) ಎಲ್ಲೆ ದಾಟುವ ಮೂಲಕ ಮಾನವರು ಮಾಡಿದ ವಸ್ತುಗಳಲ್ಲಿ ಎಲ್ಲಕ್ಕಿಂತ ಹೆಚ್ಚು ದೂರದಲ್ಲಿರುವ ವಸ್ತು ಅನ್ನುವ ಹೆಗ್ಗಳಿಕೆಯನ್ನು ತನ್ನತಾಗಿಸಿಕೊಂಡಿತು.

ಸೆಪ್ಟೆಂಬರ್ 2023 ಕ್ಕೆ ನೇಸರನಿಂದ ವೋಯಜರ್ – 1 ರ ದೂರ 161 AU ಅಂದರೆ ಸುಮಾರು 24 ಬಿಲಿಯನ್ ಕಿಲೋ ಮೀಟರಗಳಷ್ಟು! ನೇಸರ ಮತ್ತು ನಮ್ಮ ಭೂಮಿಗೆ ಇರುವ ದೂರವನ್ನು 1 ಬಾನಳತೆ ಇಲ್ಲವೇ ಅಸ್ಟ್ರೋನಾಮಿಕಲ್ ಯುನಿಟ್ (Astronomical Unit – AU) ಅಂತ ಕರೆಯುತ್ತಾರೆ. ಅಂದರೆ ನಮ್ಮಿಂದ ನೇಸರಕ್ಕೆ ಇರುವ ದೂರದ ಸರಿಸುಮಾರು 161 ಪಟ್ಟು ಹೆಚ್ಚು ದೂರದಲ್ಲಿ ವೋಯಜರ್ ಈಗ ಸಾಗುತ್ತಿದೆ.

ನೇಸರನ ಸುತ್ತ ಸುತ್ತುವ 8 ಗ್ರಹಗಳು (planets) ಮತ್ತು ಅವುಗಳ ಸ್ಯಾಟಲೈಟ್ ಗಳನ್ನ ಒಳಗೊಂಡ ಏರ್ಪಾಟಿಗೆ ‘ನೇಸರ-ಕೂಟ’ (Solar System) ಅಂತ ಕರೆಯಲಾಗುತ್ತದೆ. ನೇಸರನ ಒಂಬತ್ತನೇ ಗ್ರಹ ಎಂದು ಗುರುತಿಸಲಾಗಿದ್ದ ಪ್ಲೂಟೋವನ್ನು 2006 ರಲ್ಲಿ ಪಟ್ಟಿಯಿಂದ ಹೊರಗಿಡಲಾಯಿತು ಹಾಗಾಗಿ ನೇಸರ ಕೂಟದಲ್ಲಿ ಇದೀಗ 8 ಗ್ರಹಗಳನ್ನಷ್ಟೇ ಎಣಿಸಲಾಗುತ್ತದೆ. ಇವೆಲ್ಲವುಗಳನ್ನು ದಾಟಿಕೊಂಡು ವೋಯಜರ್–1 ಮುನ್ನಡೆಯುತ್ತಿದೆ.

ವೋಯಜರ್ – 1 ಇಂದಿಗೆ ಸಾಗಿದ ದೂರ ಹಾಗು ಬಾನಿನ 3D ನೋಟವನ್ನು ನಾಸಾ ಮಿಂದಾಣನದಲ್ಲಿ ನೋಡಬಹುದು, ಕೆಳಗಿನ ಕೊಂಡಿಯನ್ನು ಒತ್ತಿ.

 ವೋಯಜರ್ – 1 ಸಾಗಿದ ದೂರ

ಸಪ್ಟಂಬರ್ 5, 1977 ರಂದು ಅಮೇರಿಕಾದ ಬಾನರಿಮೆಯ ಕೂಟ ನಾಸಾ (NASA), ನೇಸರಕೂಟದ ಆಚೆಗಿನ ಮಾಹಿತಿಗಳನ್ನು ತಿಳಿದುಕೊಳ್ಳಲು ವೋಯಜರ್–1 (Voyager-1) ಬಾನಬಂಡಿಯನ್ನು ಹಾರಿಸಿತ್ತು. ಬಾನ ತೆರವು (space) ತಲುಪಿದ ಮೇಲೆ 1979 ರಲ್ಲಿ ಗುರುವಿನ ಏರ್ಪಾಟು (Jovian system) ಮತ್ತು 1980 ರಲ್ಲಿ ಶನಿಯ ಏರ್ಪಾಟಿನ (Saturnine system) ಕುರಿತು ಹಲವಾರು ವಿಷಯಗಳನ್ನು ವೋಯಜರ್–1 ತಿಳಿಸಿಕೊಟ್ಟಿತ್ತು.

ವೋಯಜರ್ – 1 ತೆಗೆದ ಗುರು ಮತ್ತು ಶನಿಯ ಚಿತ್ರಗಳು

        

 ವೋಯಜರ್ – ಏರ್ಪಾಟುಗಳು.

ಬಾನಾಡಿರುವಿನಲ್ಲಿ (ಸ್ಪೇಸ್) ದೊರೆಯುವ ಮಾಹಿತಿಗಳನ್ನು ಕಲೆಹಾಕಲು ವೋಯಜರ್–1 ಹಲವು ಬಗೆಯ ಸಲಕರಣೆಗಳನ್ನು ಹೊಂದಿದೆ. ಚಿತ್ರಗಳನ್ನು ಸೆರೆಹಿಡಿಯಲು ಕ್ಯಾಮೆರಾಗಳ ಏರ್ಪಾಟು, ಸುತ್ತಣದ ಗುಣಗಳನ್ನು ತಿಳಿದುಕೊಳ್ಳಲು ನೆರವಾಗುವು ರೆಡಿಯೋ ಅಲೆಗಳ ಸಲಕರಣೆಗಳು, ಸೆಳೆತದ ಹರವನ್ನು (magnetic field) ಅಳೆಯುವ ಸೆಳೆಯಳಕಗಳು (magnetometers), ಸಲಕರಣೆಗಳನ್ನು ಹಿಡಿತದಲ್ಲಿಡುವ ಕಂಪ್ಯೂಟರ್ ಮುಂತಾದವುಗಳನ್ನು ವೋಯಜರ್ ಒಳಗೊಂಡಿದೆ. ಸಲಕರಣೆಗಳಿಗೆ ಕಸುವು ನೀಡಲು ವೋಯಜರಿನಲ್ಲಿ ಪ್ಲುಟೋನಿಯಮ್-238 ಆಕ್ಸಾಯಡ್ಸನಿಂದ ಮಾಡಿದ ಬ್ಯಾಟರಿಗಳಿವೆ.

ವೋಯಜರ್ – 1 ರ 3D ಚಿತ್ರಣ

ಬಾನಾಚೆಗೆ ಸಾಗುತ್ತಿರುವ ವೋಯಜರ್–1 ಬಾನಬಂಡಿಗೆ ಯಾವುದಾದರೂ (ಯಾರಾದರೂ!) ಜಾಣ್ಮೆ, ತಿಳುವಳಿಕೆ ಹೊಂದಿದ ಜೀವಿಗಳು ಎದುರಾದರೆ ನಮ್ಮ ಕುರಿತು, ನಾವಿರುವ ನೆಲದ ಕುರಿತು ತಿಳಿಸಿಕೊಡಲು ಮೇಲಿನ ಸಲಕರಣೆಗಳ ಜೊತೆಗೆ ಚಿನ್ನದ ಹೊದಿಕೆಯಿರುವ ಅಡಕತಟ್ಟೆಯೊಂದನ್ನು ಇರಿಸಲಾಗಿದೆ. ಈ ಅಡಕತಟ್ಟೆಯಲ್ಲಿ ನೆಲದ ತಿಟ್ಟಗಳು, ಜೀವಿಗಳ ಬದುಕು, ಅರಿಮೆಯ ಹಲವಾರು ವಿಷಯಗಳು, ಮುಂದಾಳುಗಳ ಹಾರಯ್ಕೆಗಳು ಅಡಕಗೊಂಡಿವೆ. ’ನೆಲದ ದನಿಗಳು’ (sounds of earth) ಎಂದು ಹೆಸರಿಟ್ಟಿರುವ ಕಡತದಲ್ಲಿ ತಿಮಿಂಗಲಿನ ಕೂಗಾಟ, ಮಗುವಿನ ಅಳುವು, ಕಡಲ ತೆರೆಗಳ ಅಪ್ಪಳಿಸುವ ದನಿ ಮತ್ತು ಹಲವು ಬಗೆಯ ಇನಿತದ (music) ಕಟ್ಟುಗಳಿವೆ.

1977 ಕ್ಕಿಂತ ಮುಂಚೆಯೇ ಬಾನಿನಲ್ಲಿ ತೇಲಿದ ವೋಯಜರ್–1, ತನಗೊಪ್ಪಿಸಿದ ಕೆಲಸವನ್ನು ಕೊರತೆಯಿಲ್ಲದಂತೆ ಮಾಡಿ ತೋರಿಸಿದೆ. ಇಷ್ಟು ವರುಷಗಳ ಬಳಿಕವೂ, ಅಷ್ಟೊಂದು ದೂರ ಸಾಗಿದರೂ ನಮ್ಮೊಡನೆ ಒಡನಾಡುತ್ತಿರುವ ವೋಯಜರ್, ಅರಿಮೆಯ ಹಿರಿಮೆಯನ್ನು ಎತ್ತಿ ತೋರಿಸುತ್ತಿದೆ.

2025 ಕ್ಕೆ ಬ್ಯಾಟರಿಗಳ ಕಸುವು ಕೊನೆಗೊಳ್ಳುವದರಿಂದ ವೋಯೋಜರ್–1, ಭೂಮಿಯ ಒಡನಾಟವನ್ನು ಕಡಿದುಕೊಳ್ಳುತ್ತ ಕೊನೆಯಿರದ ಬಾನಂಗಳದಲ್ಲಿ ಕಣ್ಮರೆಯಾಗಲಿದೆ.

ಮಾಹಿತಿ ಮತ್ತು ಚಿತ್ರ ಸೆಲೆ: ನಾಸಾ

 

ಬೆಂಕಿ ಆರಿಸುಕ ಹೇಗೆ ಕೆಲಸ ಮಾಡುತ್ತದೆ?

ಜಯತೀರ್ಥ ನಾಡಗೌಡ.

ಬೆಂಕಿ ಆರಿಸುಕ ಇಂದು ಬಹುತೇಕ ಎಲ್ಲ ಕಡೆ ಕಾಣಸಿಗುತ್ತದೆ. ಮಾಲ್, ಕಚೇರಿ, ಬ್ಯಾಂಕ್, ಬಾನೋಡತಾಣ, ಸಿನೆಮಾ ಮಂದಿರ, ಶಾಲೆ, ಕಾರ್ಖಾನೆ, ಹೀಗೆ ಎಲ್ಲೆಡೆ ಕೆಂಪು ಬಣ್ಣದ ಸಿಲಿಂಡರ್ ಆಕಾರದ ಚಿಕ್ಕ,ದೊಡ್ಡ ಅಳತೆಯ ಬೆಂಕಿ ಆರಿಸುಕವನ್ನು ನಾವುಗಳು ನೋಡಿರುತ್ತೇವೆ. ಬೆಂಕಿ ಹತ್ತಿ ಅವಗಡ ಸಮಯದಲ್ಲಿ ಇವುಗಳು ಬಹಳ ನೆರವಿಗೆ ಬರುತ್ತವೆ. ಆದರೆ ಇವುಗಳು ಹೇಗೆ ಕೆಲಸ ಮಾಡುತ್ತವೆ? ಕಷ್ಟದ ಸಂದರ್ಭಗಳಲ್ಲಿ ಇವುಗಳನ್ನು ಹೇಗೆ ಬಳಸಬೇಕು ಎಂಬುದು ತಿಳಿಯೋಣ ಬನ್ನಿ. 

ಸಾಮಾನ್ಯವಾಗಿ ತಿಳಿದಿರುವಂತೆ, ಬೆಂಕಿ ಹೊತ್ತಿಕೊಳ್ಳಲು ಆಕ್ಸಿಜನ್ ಗಾಳಿ ಮತ್ತು ಉರುವಲು ಬೇಕಾಗುತ್ತದೆ. ಆದರೆ ಕೇವಲ ಆಕ್ಸಿಜನ್ ಗಾಳಿ, ಉರುವಲು ಇದ್ದರೆ ಬೆಂಕಿ ಉರಿಯಲ್ಲ. ಉರುವಲು ತನ್ನ ಉರಿತದ ಕಾವಳತೆ ಮಟ್ಟ(Ignition Temperature) ತಲುಪಿರಬೇಕು. ಒಟ್ಟಾಗಿ ಹೇಳುವುದಾದರೆ ಬೆಂಕಿ ಕಿಡಿಹೊತ್ತಿಕೊಳ್ಳಲು, ಆಕ್ಸಿಜನ್, ಉರುವಲು ಮತ್ತು ಬಿಸುಪು ಈ ಮೂರು ಇರಲೇಬೇಕು. ಬೆಂಕಿ ಆರಿಸಲು ಈ ಮೂರರಲ್ಲಿ ಒಂದನ್ನು ಕಡಿತಗೊಳಿಸಿಯೋ, ಇಲ್ಲವಾಗಿಸಿಯೋ ಬೆಂಕಿ ಆರಿಸಬಹುದು. ಸಣ್ಣದಾಗಿ ಬೆಂಕಿ ಹತ್ತಿದ್ದರೆ ದಪ್ಪ ಕಂಬಳಿ ಬಿಸಾಕಿ ಅದನ್ನು ನಿಲ್ಲಿಸುವುದನ್ನು ನೋಡಿರುತ್ತೇವೆ. ಕಂಬಳಿ ಬೆಂಕಿ ಮೇಲೆ ಬಿದ್ದಾಗ ವಾತಾವರಣದ ಆಕ್ಸಿಜನ್ ಪೂರೈಕೆ ನಿಂತು, ಬೆಂಕಿ ಆರುತ್ತದೆ. ಬೆಂಕಿ ಆರಿಸುಕ ಗಾಡಿಗಳು(Fire fighting Vehicles) ನೀರು ಸಿಡಿಸಿ ಬೆಂಕಿ ನಿಲ್ಲಿಸುತ್ತವೆ, ನೀರು ಸಿಂಪಡಿಸಿದಾಗ ಬಿಸುಪು ತಣ್ಣಗಾಗಿ ಬೆಂಕಿ ಆರುತ್ತದೆ. ಇದೇ ವಿಜ್ಞಾನ ಆಧಾರವಾಗಿಟ್ಟುಕೊಂಡು ಬೆಂಕಿ ಆರಿಸುಕಗಳನ್ನು ತಯಾರಿಸಲಾಗುತ್ತದೆ.

ಸಾಮಾನ್ಯವಾಗಿ ಬೆಂಕಿ ಆರಿಸುಕಗಳಲ್ಲಿ 4 ಬಗೆ.  ಅವು ಕೆಳಗಿನಂತಿವೆ:

  1. ನೀರಿನ ಬೆಂಕಿ ಆರಿಸುಕಗಳು
  2. ಕಾರ್ಬನ್ ಡೈ ಆಕ್ಸೈಡ್ ಬೆಂಕಿ ಆರಿಸುಕಗಳು
  3. ನೊರೆಯ ಬೆಂಕಿ ಆರಿಸುಕಗಳು
  4. ಪುಡಿ ತುಂಬಿದ ಬೆಂಕಿ ಆರಿಸುಕಗಳು

ನೀರಿನ ಬೆಂಕಿ ಆರಿಸುಕಗಳು ನೀರನ್ನು ಬೆಂಕಿ ಆರಿಸುವ ಮಾಧ್ಯಮವಾಗಿ ಬಳಕೆ ಮಾಡುತ್ತವೆ. ಒಂದು ಚಿಕ್ಕ ಸಿಲಿಂಡರ್ ಗಾತ್ರದ ಕೊಳಾಯಿಯಲ್ಲಿ ಬಹುಪಾಲು ನೀರು ತುಂಬಿರುತ್ತದೆ. ಅದರೊಳಗೆ ಒಂದು ಪುಟ್ಟ ಗಾಳಿ ತುಂಬಿದ ಡಬ್ಬಿ(canister) ಇರುತ್ತದೆ ಮತ್ತು ನೀರು ಚಿಮ್ಮಲು ಒಂದು ಕೊಳವೆ. ಈ ಕೊಳವೆಯು ಸಿಲಿಂಡರ್‌ನ ಒಂದು ಮೇಲ್ಭಾಗದ ಬಲಬದಿಗೆ ನೀರು ಚಿಮ್ಮಲು ಬಾಯಿ ತೆರೆದಿರುತ್ತದೆ. ಸಿಲಿಂಡರ್ ಮೇಲೆ ಉಂಗುರದ ಮೂಲಕ ಆಪರೇಟ್ ಮಾಡಬಹುದಾದ ಒಂದು ಹಿಡಿಕೆ. ಉಂಗುರ ಎಳೆದಾಗ ಹಿಡಿಕೆಯು ರಿಲೀಸ್ ಆಗಿ ಕೆಳಗಿನ ಗಾಳಿ ತುಂಬಿದ ಡಬ್ಬಿಯ ತೆರಪು(Valve) ತೆರೆಯುವಂತೆ ಮಾಡುತ್ತದೆ. ಇದರಿಂದ ಗಾಳಿಯು ಸಿಲಿಂಡರ್ ತುಂಬಾ ಸೇರಿ ನೀರನ್ನು ಕೆಳಕ್ಕೆ ದಬ್ಬುತ್ತದೆ. ಇದರಿಂದ ನೀರಿನ ಮೇಲೆ ಒತ್ತಡ ಉಂಟಾಗಿ, ಕೊಳವೆ ಮೂಲಕ ಹೊರಕ್ಕೆ ಚಿಮ್ಮಲ್ಪಡುತ್ತದೆ. ಹೀಗೆ ನೀರು, ಬೆಂಕಿಯ ಬಿಸುಪನ್ನು ಹೀರಿ ಬೆಂಕಿ ಆರುವ ಕೆಲಸ ನಡೆಯುತ್ತದೆ.

ನೊರೆಯ ಬೆಂಕಿ ಆರಿಸುಕಗಳು: ಇವುಗಳು ನೀರಿನ ಬೆಂಕಿ ಆರಿಸುಕಗಳಂತೆ ಕೆಲಸ ಮಾಡುತ್ತವೆ. ಆದರೆ ಕೊಳಾಯಿಯ ಒಳಗೆ ನೀರಿನ ಜೊತೆ ನೊರೆಯು ಸೇರಿರುತ್ತದೆ. ಈ ನೊರೆಯು ಸೋಡಿಯಮ್ ಬೈಕಾರ್ಬೋನೆಟ್‍ನಿಂದ ತಯಾರಿಸಿದ್ದಾಗಿರುತ್ತದೆ. ಕೊಳಾಯಿ ಮೇಲ್ಭಾಗದ ಹಿಡಿಕೆಯ ಉಂಗುರ ಎಳೆದಾಗ ನೊರೆಯ ಜೊತೆ ನೀರು ಸೇರಿ ದೊಡ್ಡ ಗಾತ್ರದ ನೊರೆಯು ಉರಿಯುತ್ತಿರುವ ಬೆಂಕಿಯ ಮೇಲೆ ಸಿಂಪಡನೆಗೊಂಡು ಬೆಂಕಿಗೆ ಆಕ್ಸಿಜನ್ ಹರಿವನ್ನು ತಡೆಯುತ್ತದೆ ಮತ್ತು ಬಿಸುಪನ್ನು ಹೀರಿಕೊಳ್ಳುತ್ತ ಬೆಂಕಿ ನಿಲ್ಲಿಸುತ್ತವೆ.

ಪುಡಿಯ ಬೆಂಕಿ ಆರಿಸುಕಗಳು: ಪುಡಿ ಬೆಂಕಿ ಆರಿಸುಕಗಳು ಹೆಚ್ಚು ಕಡಿಮೆ ನೀರು ಇಲ್ಲವೇ ನೊರೆಯ ಆರಿಸುಕಗಳಂತೆ ಈಡುಗಾರಿಕೆ(Design) ಹೊಂದಿರುತ್ತವೆ. ಆದರೆ ಇಲ್ಲಿ ನೊರೆ ಇಲ್ಲವೇ ನೀರಿನ ಬದಲು ಬೆಂಕಿ ಆರಿಸಲು ನೆರವಾಗುವ ಮೊನೊಅಮೋನಿಯಂ ಫಾಸ್ಫೇಟ್(Monoammonium Phosphate) ಪುಡಿಯನ್ನು ಬಳಸುತ್ತಾರೆ. ಇದರೊಟ್ಟಿಗೆ ಪೊಟ್ಯಾಸಿಯಂ ಬೈಕಾರ್ಬೋನೆಟ್ ಇಲ್ಲವೇ ಸೋಡಿಯಂ ಬೈಕಾರ್ಬೋನೆಟ್ ಪುಡಿಗಳನ್ನು ಬಳಕೆ ಮಾಡುತ್ತಾರೆ. ಈ ಪುಡಿ ಬೆಂಕಿಯ ಮೇಲೆ ಬಿದ್ದಾಗ ರಾಸಾಯನಿಕ ಕ್ರಿಯೆಯಿಂದ ಬೆಂಕಿಯ ಬಿಸುಪನ್ನು ಹೀರಿ, ಕರಗುತ್ತ ಉರುವಲಿನ ಆವಿಯಾಗಿಸಿ ಬೆಂಕಿಗೆ ಅವಶ್ಯವಿರುವ ಆಕ್ಸಿಜನ್ ಹರಿವನ್ನು ಕಡಿತ ಮಾಡುತ್ತದೆ. 

(ಈ ಮೇಲಿರುವ ತಿಟ್ಟದಲ್ಲಿ ಸಾಮಾನ್ಯವಾಗಿ ಬೆಂಕಿ ಆರಿಸುಕಗಳು ಹೇಗೆ ಕೆಲಸ ಮಾಡುತ್ತವೆ ಎಂಬುದನ್ನು ತೋರಿಸಲಾಗಿದೆ).

 ಪುಡಿ, ನೀರು ಮತ್ತು ನೊರೆಯ ಈ ಮೂರು ತರಹದ ಬೆಂಕಿ ಆರಿಸುಕಗಳಲ್ಲಿ ಮುನ್ನುಗ್ಗುಕವೊಂದನ್ನು(Propellent) ಬಳಸುತ್ತಾರೆ. ಕ್ಯಾನಿಸ್ಟರ್(ಡಬ್ಬಿ)ಗಳಲ್ಲಿ ಇದೇ ಮುನ್ನುಗ್ಗುಕ ಗಾಳಿಯನ್ನು ಕೂಡಿಡುತ್ತಾರೆ. ಹೆಚ್ಚಾಗಿ ಸಾರಜನಕ(ನೈಟ್ರೋಜನ್) ಇಲ್ಲವೇ ಕಾರ್ಬನ್ ಡೈಆಕ್ಸೈಡ್‍ಗಳನ್ನೇ ಮುನ್ನುಗ್ಗುಕವಾಗಿ ಬಳಸುತ್ತಾರೆ. ಬೆಂಕಿ ಆರಿಸುಕಗಳಲ್ಲಿ, ಹೆಚ್ಚಿನ ಒತ್ತಡದಲ್ಲಿ ಕೂಡಿಟ್ಟಿರುವ ಮುನ್ನುಗ್ಗುಕ ಸ್ಪೋಟಗೊಳ್ಳಬಾರದೆಂದು ಗಟ್ಟಿಮುಟ್ಟಾದ ಉಕ್ಕಿನಿಂದ ತಯಾರಿಸಿಲಾಗಿರುತ್ತದೆ.

ಕಾರ್ಬನ್ ಡೈಆಕ್ಸೈಡ್ ಬೆಂಕಿ ಆರಿಸುಕಗಳು ಕೂಡ ಕೆಂಪು ಬಣ್ಣದ ಸಿಲಿಂಡರ್‌ಗಳಿಂದಾಗಿರುತ್ತವೆ. ಇಲ್ಲಿ ನೀರಿನ ಬದಲು ಕಾರ್ಬನ್ ಡೈಆಕ್ಸೈಡ್ ಗಾಳಿಯನ್ನು ಬಳಸುತ್ತಾರೆ. ಈ ತರದ ಆರಿಸುಕಗಳು ದೊಡ್ಡದಾದ ಕೋನ್  ಆಕಾರದ ಬಾಯಿ ಹೊಂದಿರುತ್ತವೆ. ಇದಕ್ಕೆ ಹಾರ್ನ್ ಎಂದು ಹೇಳಲಾಗುತ್ತದೆ, ಈ ದೊಡ್ಡ ಹಾರ್ನ್ ಮೂಲಕವೇ ಇವುಗಳು ಇಂಗಾಲದ ಬೆಂಕಿ ಆರಿಸುಕಗಳು ಎಂದು ಗುರುತಿಸಬಹುದು. ಇಲ್ಲಿ ಕೂಡ ಮೇಲ್ಭಾಗದಲ್ಲಿ ಹಿಡಿಕೆ-ಅದಕ್ಕೆ ಜೋಡಿಸಲ್ಪಟ್ಟ ತೆರಪಿನ ಏರ್ಪಾಟು ಇರುತ್ತದೆ. ಕೆಂಪು ಕೊಳಾಯಿಯ ಒಳಗೆ ದ್ರವರೂಪದಲ್ಲಿ ಇಂಗಾಲದ ಡೈಆಕ್ಸೈಡ್ ತುಂಬಿರುತ್ತಾರೆ. ಹಿಡಿಕೆಯನ್ನು ಜೋರಾಗಿ ಅದುಮಿದಾಗ ತೆರಪು ತೆರೆದುಕೊಂಡು, ವೇಗದಿಂದ CO2 ಮಂಜಿನಂತೆ ಉರಿಯುವ ಬೆಂಕಿಗೆ  ಬಿಳಿಯ ದಟ್ಟ ಹೊಗೆ ರೂಪದಲ್ಲಿ ಸಿಂಪಡನೆಗೊಂಡು, ಅದನ್ನು ನಿಲ್ಲಿಸುತ್ತದೆ. ಇಲ್ಲಿ ಕೋನ್  ಆಕಾರದ ಹಾರ್ನ್ ರಚನೆ ಬಲುಮುಖ್ಯ.. ವೇಗದಿಂದ ಬರುವ ಕಾರ್ಬನ್ ಡೈಆಕ್ಸೈಡ್ ಬಿರುಸಾದ ಹರಿವಿನಿಂದ ಹಿಗ್ಗುತ್ತಾ ತಂಪಾದ ಮಂಜಿನ ಗಾಳಿ ಹೊರಸೂಸಲು ಅನುಕೂಲವಾಗುವಂತೆ ಹಾರ್ನ್ ಈಡುಗಾರಿಕೆ ಮಾಡಲಾಗಿರುತ್ತದೆ. 

ಈ ಎಲ್ಲ ಬಗೆಯ ಬೆಂಕಿ ಆರಿಸುಕಗಳನ್ನು ಎಲ್ಲ ರೀತಿಯ ಬೆಂಕಿ ಅವಘಡಗಳಲ್ಲಿ ಬಳಸಲಾಗದು. ತಪ್ಪು ಬಳಕೆಯಿಂದ ಅಪಾಯವಾಗುವ ಸಾಧ್ಯತೆಯುಂಟು. ಅದಕ್ಕೆಂದೇ ಬೆಂಕಿಯನ್ನು ಅವುಗಳು ಉಂಟಾದ ಮೂಲದಿಂದ ಬಗೆಗಳಾಗಿ ಗುರುತಿಸಿ, ಅದಕ್ಕೆ ತಕ್ಕುದಾದ ಬೆಂಕಿ ಆರಿಸುಕಗಳನ್ನು ಬಳಸಬೇಕು. ಕ್ಲಾಸ್ ಎ,ಬಿ,ಸಿ,ಡಿ,ಈ ಮತ್ತು ಎಫ್ ಎಂಬ 6 ಬಗೆಯ ಬೆಂಕಿಗಳನ್ನು ಗುರುತಿಸಲಾಗಿದೆ.

ಕ್ಲಾಸ್ ಎ – ಸೌದೆ/ಕಟ್ಟಿಗೆ, ಕಾಗದ, ಪ್ಲ್ಯಾಸ್ಟಿಕ್, ರಬ್ಬರ್ ಮುಂತಾದ ಗಟ್ಟಿವಸ್ತುಗಳಿಂದ ಹೊತ್ತಿಕೊಂಡಿರುವ ಬೆಂಕಿಯು ಈ ಸಾಲಿಗೆ ಸೇರುತ್ತದೆ. ಇದನ್ನು ನೀರಿನ ಬೆಂಕಿ ಆರಿಸುಕ ಬಳಸಿ ತಡೆಹಿಡಿಯಬಹುದು.

ಕ್ಲಾಸ್ ಬಿ – ದ್ರವರೂಪದ ಗಾಳಿ, ದ್ರವ ವಸ್ತುಗಳಿಂದ ಹೊತ್ತಿರುವ ಬೆಂಕಿಯನ್ನು ಕ್ಲಾಸ್ ಬಿ ತರಹದ ಬೆಂಕಿ. ಇಂತ ಬೆಂಕಿ ಆರಿಸಲು ನೊರೆಯ ಬೆಂಕಿ ಆರಿಸುಕ ಬಳಸಬಹುದು.

ಕ್ಲಾಸ್ ಸಿ – ಒತ್ತಡದಲ್ಲಿ ಕೂಡಿಟ್ಟ ದ್ರವ ಇಲ್ಲವೇ ದ್ರವರೂಪದ ಗಾಳಿಯಿಂದ ಹೊತ್ತಿಕೊಂಡ ಬೆಂಕಿ ಕ್ಲಾಸ್ ಸಿ ಬಗೆಯ ಬೆಂಕಿ. ಉದಾಹರಣೆಗೆ:ಎಲ್ಪಿಜಿ ಸಿಲಿಂಡರ್ ಮುಂತಾದವುಗಳಿಂದ ಹೊತ್ತಿದ ಬೆಂಕಿ. ಇಂತಹ ಬೆಂಕಿ ಆರಿಸಲು ಪುಡಿಯ ಬೆಂಕಿ ಆರಿಸುಕಗಳು ನೆರವಾಗಬಹುದು.

ಕ್ಲಾಸ್ ಡಿ – ಸರಳವಾಗಿ ಹೊತ್ತಿಯುರಿಯುವ ಮಾಗ್ನೇಸಿಯಂ, ಅಲ್ಯುಮಿನಿಯಂ, ಸತು, ಪೊಟ್ಯಾಸಿಯಂ, ಸೋಡಿಯಮ್ ಮುಂತಾದ ಜಲ್ಲಿಗಳಿಂದ ಹತ್ತುವ ಬೆಂಕಿ ಕ್ಲಾಸ್ ಡಿ. ಇಂತಹ ಬೆಂಕಿ ಆರಿಸಲು ಪುಡಿಯ ಬೆಂಕಿ ಆರಿಸುಕಗಳು ನೆರವಾಗಬಹುದು.

ಕ್ಲಾಸ್ ಈ – ಎಲೆಕ್ಟ್ರಿಕಲ್ ವಾಹಕ ವಸ್ತುಗಳಿಂದ ಉಂಟಾದ ಬೆಂಕಿ. ಕಾರ್ಬನ್ ಡೈ ಆಕ್ಸೈಡ್ ಮತ್ತು ಪುಡಿಯ ಬೆಂಕಿ ಆರಿಸುಕಗಳು ಇದಕ್ಕೆ ತಕ್ಕುದಾಗಿವೆ.

ಕ್ಲಾಸ್ ಎಫ್ – ಅಡುಗೆ ಎಣ್ಣೆ, ಕೊಬ್ಬು ಮುಂತಾದ ವಸ್ತುಗಳಿಂದ ಉಂಟಾದ ಬೆಂಕಿ. ಪುಡಿಯ ಬೆಂಕಿ ಆರಿಸುಕಗಳು ಇದಕ್ಕೆ ತಕ್ಕುದಾಗಿವೆ.

ಹೀಗೆ ಬೆಂಕಿಗಳ ಬಗೆಗಳಿಗೆ ತಕ್ಕ ಬೆಂಕಿ ಆರಿಸುಕ ಬಳಸಬೇಕು. ಒಂದು ಬಗೆಯ ಬೆಂಕಿಗೆ ಬೇರೆ ಬೇರೆ ಬಗೆಯ 2-3 ಬಗೆಯ ಬೆಂಕಿ ಆರಿಸುಕಗಳನ್ನು ಬಳಸಬಹುದಾಗಿರುತ್ತದೆ.  ಯಾವ ಬೆಂಕಿ ಆರಿಸುಕ ಯಾವ ಬಗೆಯ ಬೆಂಕಿಗೆ ಸೂಕ್ತ ಎಂಬುದನ್ನು ನುರಿತ ತರಬೇತುದಾರರಿಂದ ತರಬೇತಿ ಪಡೆದವರು ಬಳಸಬೇಕು. ನೀರಿನ ಬೆಂಕಿ ಆರಿಸುಕಗಳಿಗೆ ಕೆಂಪು, ನೊರೆಯ ಬೆಂಕಿ ಆರಿಸುಕ ಹಳದಿ, ಪುಡಿಯ ಬೆಂಕಿ ಆರಿಸುಕಕ್ಕೆ ನೀಲಿ ಮತ್ತು ಕಾರ್ಬನ್ ಡೈ ಆಕ್ಸೈಡ್ ಬೆಂಕಿ ಆರಿಸುಕಗಳಿಗೆ ಕಪ್ಪು ಬಣ್ಣದ ಗುರುತು ಹಾಕಿರಲಾಗಿರುತ್ತದೆ.

ಬಳಸುವ ಬಗೆ:  ಬೆಂಕಿ ಆರಿಸುಕದ ಮೂತಿ ಇಲ್ಲವೇ ಚಿಮ್ಮುಕವನ್ನು ಬೆಂಕಿ ಇರುವ ಕಡೆ ತಿರುಗಿಸಿ ಬೆಂಕಿಗೆ ಗುರಿಯಾಗಿಸಿ, ಹಿಡಿಕೆಯ ಮೇಲಿರುವ ಉಂಗುರ ಎಳೆಯಬೇಕು ಆಗ ಬೆಂಕಿ ಮೆಲ್ಲಗೆ ಆರ ತೊಡಗುತ್ತದೆ. ಇದು ಒಂದು ರೀತಿಯಲ್ಲಿ ಬಂದೂಕನ್ನು ಸರಿಯಾದ ಗುರಿಯತ್ತ ತಿರುಗಿಸಿ ಟ್ರಿಗ್ಗರ್ ಅದುಮಿದಂತೆ ಎನ್ನಬಹುದು. ಬೆಂಕಿ ಆರಿಸುಕ ಬಳಸಲು ಕಚೇರಿ, ಮಾಲ್, ಬ್ಯಾಂಕ್, ಬಾನೋಡತಾಣ ಮುಂತಾದ ಕಡೆ ಭದ್ರತಾ ಸಿಬ್ಬಂದಿಗೆ ವಿಶೇಷ ತರಬೇತಿ ನೀಡಲಾಗುತ್ತದೆ. ಈ ತರಬೇತಿ ನೀಡಿದ ವ್ಯಕ್ತಿಗಳಿಗೆ ಮಾತ್ರ ಬೆಂಕಿ ಆರಿಸುಕವನ್ನು ಸರಿಯಾಗಿ ಬಳಸಬಹುದು. ಬೆಂಕಿ ಆರಿಸುಕ ಬಳಸುವ ಮುನ್ನ ಯಾರೇ ಆಗಲಿ ಈ ತರಬೇತಿ ಪಡೆಯಲೇಬೇಕು. ಸರಿಯಾದ ತರಬೇತಿ ಇರದೇ ಬಳಸಲು ಹೋಗಿ ಹಲವರು ತಮಗೆ ಅಪಾಯ ಮಾಡಿಕೊಂಡ ಹಲವು ಘಟನೆಗಳು ನಡೆದಿವೆ.

ಮಾಹಿತಿ ಮತ್ತು ತಿಟ್ಟ ಸೆಲೆ:explainthatstuff.com

ಅಣು ಕೂಡಿಕೆಯಿಂದ ಮಿಂಚು – ಸವಾಲುಗಳೇನು?

ರಘುನಂದನ್.

ಹಿಂದಿನ ಬರಹದಲ್ಲಿ ಅಣುಕೂಡಿಕೆಯಿಂದ ಮಿಂಚನ್ನು ಪಡೆಯುವ ಬಗೆಯನ್ನು ತಿಳಿದೆವು. ಅಣು ಕೂಡಿಕೆಯ ಹೊಲಬಿನಿಂದ ಸುತ್ತಮುತ್ತಲಿನ ಪರಿಸರಕ್ಕೆ ಯಾವುದೇ ತೊಂದರೆಯಿಲ್ಲ(environmental friendly). ಬೂದಿ(ash), ಇಂಗಾಲ (carbon), ಹೊಗೆ(smoke), ಕೊಳಕು ನೀರು(polluted water) ಮತ್ತು ಕೆಟ್ಟಗಾಳಿ ಇಂತಹ ಯಾವುದೇ ಹಾನಿಯಿಲ್ಲ, ಆದರೂ ಅಣು ಕೂಡಿಕೆಯಿಂದ ನಾವು ಮಿಂಚನ್ನು ಯಾಕೆ ಬಳಸುತ್ತಿಲ್ಲ ಎಂಬುದನ್ನು ಈ ಬರಹದಲ್ಲಿ ತಿಳಿಯೋಣ.

ಅಣು ಕೂಡಿಕೆಯನ್ನು ಯಾಕೆ ನಾವು ಯಾಕೆ ಬಳಸುತ್ತಿಲ್ಲ?

1. ಅಣು ಕೂಡಿಕೆಯಲ್ಲಿ ಡ್ಯೂಟಿರಿಯಮ್-ಟ್ರೈಶಿಯಮ್ ಅಣುಗಳು ಒಂದಕ್ಕೊಂದು ಕೂಡಬೇಕಾದರೆ ತುಂಬಾ ಹೆಚ್ಚು ಕಾವಳತೆ (Temperature) ಬೇಕಾಗುತ್ತದೆ, ಅಂದರೆ 100 ಮಿಲಿಯ ಡಿಗ್ರಿಗಳಷ್ಟು (100 million degree centigrade). ಹೆಚ್ಚು ಹರವು ಮತ್ತು ಕಾಲದಲ್ಲಿ ಅಷ್ಟು ಕಾವಳತೆ ಹೇಗೆ ಉಂಟು ಮಾಡಬಹುದೆಂಬುದು ಇನ್ನೂ ಗೊತ್ತಿಲ್ಲ, ನೇಸರನಲ್ಲಿ ಈ ಮಟ್ಟದ ಕಾವಳತೆ ಕಾಣಬಹುದು. ಅಲ್ಲಿ ಕೂಡ ಇದೇ ಅಣು ಕೂಡಿಕೆ ನಡೆಯುತ್ತಿದ್ದು ನಮಗೆ ದಿನಾಲು ಬೆಳಕು ಮತ್ತು ಹುರುಪು ನೇಸರನಿಂದ ದೊರಕುತ್ತಿರುವುದು ಇದೇ ಮಾದರಿಯಲ್ಲಿ. ಅದರಿಂದ ಗಿಡ ಮರಗಳು ಬದುಕುತ್ತಿವೆ. ನಾವು ಬೆಳೆಗಳನ್ನು ಬೆಳೆಯುತ್ತಿದ್ದೇವೆ. ಅದೇ ಮನುಷ್ಯರಿಗೆ ಊಟ ದೊರಕಿಸುತ್ತಿದೆ. ಈ ಭೂಮಿಯ ಮೇಲೆ ಜೀವಿಗಳು ಇರುವುದೇ ಅಣು ಕೂಡಿಕೆಯಿಂದ ಬರುವ ಬೆಳಕು ಮತ್ತು ಹುರುಪಿನಿಂದ ಎಂದು ಹೇಳಬಹುದು.

2. ಅಷ್ಟು ಕಾವಳತೆಯನ್ನು(Temperature) ಉಂಟುಮಾಡಿದೆವು ಎಂದು ಇಟ್ಟುಕೊಳ್ಳೋಣ. ಆಗ ಅದನ್ನು ಹಿಡಿದಿಟ್ಟುಕೊಳ್ಳಬಹುದಾದ ವಸ್ತು ಯಾವುದಾದರು ಇದೆಯೇ? ಏಕೆಂದರೆ ಬರಿಯ ಮೂರು ಸಾವಿರ ಡಿಗ್ರಿಗಳಿಗಷ್ಟೇ ಎಲ್ಲಾ ಗೊತ್ತಿರುವ ವಸ್ತುಗಳು ಕರಗಿ ಹೋಗುತ್ತವೆ. ಇದಕ್ಕೆ ಬಗೆಹರಿಕೆ ಎಂದರೆ ಡ್ಯೂಟಿರಿಯಮ್-ಟ್ರೈಶಿಯಮ್ ಬೆರಕೆಯನ್ನು ಸೆಳೆ-ಸುರುಳಿಗಳ(magnetic coils) ಮೂಲಕ ಎರಕದ ಇರವಿನಲ್ಲಿ ಇರಿಸಬಹುದೇ ಎಂದು ವಿಜ್ಞಾನಿಗಳು ಯೋಚಿಸುತ್ತಿದ್ದಾರೆ. ಹಾಗಾದಾಗ ಹೆಚ್ಚು ಕಾದ ಭಾಗಗಳು ಸುತ್ತಲಿನ ವಸ್ತುವಿಗೆ ತಾಕದಂತೆ ನೋಡಿಕೊಳ್ಳಬಹುದು. ಈ ಬಗೆಯ ಏರ್ಪಾಟಿಗೆ ಟೋಕಾಮಾಕ್ (Tokamak) ಎನ್ನುತ್ತಾರೆ. ಟೋಕಾಮಾಕಿನಲ್ಲಿ ಬಿಡಿ ಎಲೆಕ್ಟ್ರಾನ್ಗಳು ಮತ್ತು ಅಣುಗಳು ಪ್ಲಾಸ್ಮಾ/ಎರಕದ ಇರವಿನಲ್ಲಿ(molten state/plasma) ಇರುವುದರಿಂದ ಒಂದಕ್ಕೊಂದು ಡಿಕ್ಕಿ ಹೊಡೆದಾಗ ಹೀಲಿಯಮ್ ರೂಪುಗೊಳ್ಳುತ್ತದೆ. ಅದರಿಂದ ಉಂಟಾಗುವ ಬಿಸಿ ಕಾವಿನಿಂದ ಮಿಂಚು / ವಿದ್ಯುತ್ ಅನ್ನು ಹುಟ್ಟುಹಾಕಬಹುದು.

ಅಮೇರಿಕಾದ ದೊಡ್ಡ ಕಂಪೆನಿಗಳಲ್ಲಿ ಒಂದಾದ ಲಾಕ್‌ಹೀಡ್ ಮಾರ್ಟಿನ್ (Lockheed Martin) ಅಣು ಕೂಡಿಕೆಯ ಕುರಿತಾಗಿ ಸುದ್ದಿಯೊಂದನ್ನು ಬಿಡುಗಡೆ ಮಾಡಿದೆ. ಲಾಕ್‌ಹೀಡ್ ಮಾರ್ಟಿನ್ ನ ತಾಮಸ್ ಮೆಗ್ವೈರ್ ಕಳೆದ ತಿಂಗಳಿನ ಸುದ್ದಿಕೂಟದಲ್ಲಿ ಹೀಗೆ ಹೇಳಿದ್ದಾರೆ –

“ಹೊಸ ಅಣುವಿನ ಶಕೆಯೊಂದನ್ನು ಮೊದಲು ಮಾಡೋಣ. ಪ್ರಪಂಚಕ್ಕೆ ಹಸನಾದ ಹುರುಪನ್ನು ಕೊಡುವುದು ನಮ್ಮ ಮುಂದಿನ ಗುರಿಯಾಗಿದೆ”.

ಈ ಚಳಕದರಿಮೆಯ ಮೂಲಕ ಮಿಂಚನ್ನು ತಯಾರಿಸಲಾಗುತ್ತದೆ ಎಂದು ಲಾಕ್‌ಹೀಡ್ ಮಾರ್ಟಿನ್ ಹೇಳಿಕೊಂಡಿದೆ. ಇದರಿಂದಾಗಿ ಅರಿಮೆಯ ಕೂಟಗಳಲ್ಲಿ (scientific circles) ಈ ಸುದ್ದಿ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ತಾಮಸ್ ಮೆಗ್ವೈರ್ ಪ್ರಕಾರ ಟೋಕಾಮಾಕ್‌ಗಳ ಒಳಗೆ ಇರುವ ಪ್ಲಾಸ್ಮಾ/ಎರಕದ ಒತ್ತಡ ಹೆಚ್ಚಾದರೆ ಅದರ ಸುತ್ತಲಿನ ವಸ್ತುವಿಗೆ ತೊಂದರೆಯಾಗುತ್ತದೆ. ಅದರ ಬದಲು ಒತ್ತಡವನ್ನು ಕಡಿಮೆ ಮಾಡಿದಲ್ಲಿ ಅಣುಗಳು ಒಂದಕ್ಕೊಂದು ಡಿಕ್ಕಿ ಹೊಡೆಯುವ ಸಲದೆಣಿಕೆ(Frequency) ಕಡಿಮೆಯಾಗುತ್ತದೆ ಮತ್ತು ಟೋಕಾಮಾಕ್ ಗಳನ್ನು ತಯಾರಿಸಿದ ವಸ್ತುವಿನ ಮೇಲೆ ಯಾವುದೇ ತೊಂದರೆಯಾಗುವುದಿಲ್ಲ. ಆದರೆ ಈ ಬಗೆಯಲ್ಲಿ ಮಾಡಿದರೆ, ಹಣಕಾಸಿನ ಲೆಕ್ಕಾಚಾರದಲ್ಲಿ ನೋಡಿದರೆ ಅಷ್ಟು ಗಿಟ್ಟುವ ಏರ್ಪಾಟು (profitable venture) ಎನಿಸುವುದಿಲ್ಲ. ಅದಕ್ಕಾಗಿ ಲಾಕ್‌ಹೀಡ್ ಅವರು ಮೊಗೆಸಿರುವ ಟೋಕಾಮಾಕಿನಲ್ಲಿ ಪ್ಲಾಸ್ಮಾವು ಗೋಡೆಯ ಹತ್ತಿರ ಬರುತ್ತಿದ್ದಂತೆ ಸೆಳೆ-ಸುರುಳಿಗಳ ಹರಹು ಹೆಚ್ಚಾಗುತ್ತಾ ಹೋಗುತ್ತದೆ. ಹಾಗಾಗಿ ಆ ಎಡೆಯಲ್ಲಿ ಒತ್ತಡ ಹೆಚ್ಚಾಗಿರುತ್ತದೆ. ಮತ್ತು ಆ ಭಾಗದಲ್ಲಿ ಹೆಚ್ಚು ಮರುಎಸಕಗಳು ಆಗುತ್ತವೆ,ಹೆಚ್ಚು ಹುರುಪು ದೊರೆಯುತ್ತದೆ.

ತಾಮಸ್ ಮೆಗ್ವೈರ್ ತಂಡವು ತಯಾರಿಸುತ್ತಿರುವ ಟೋಕಾಮಾಕ್‍ಗಳು ಎಷ್ಟು ಚಿಕ್ಕದಾಗಿ ಇರುತ್ತವೆಯೆಂದರೆ ಅದನ್ನು ಒಂದು ಟ್ರಕ್ ಇಲ್ಲವೇ ಲಾರಿಯ ಹಿಂದೆ ಅಳವಡಿಸಬಹುದು, ಹೀಗೆ ಮಾಡುವುದು ಸುಲಭದ ಮಾತಲ್ಲ ಎಂದು ಜಗತ್ತಿನ ವಿಜ್ಞಾನಿಗಳ ಅನಿಸಿಕೆ. ಈ ಹಮ್ಮುಗೆಯ ವಿಷಯವಾಗಿ ಲಾಕ್‌ಹೀಡ್ ಯಾವುದೇ ಗುಟ್ಟುಗಳನ್ನು ಹೊರಹಾಕಿಲ್ಲ. ಈ ಹಮ್ಮುಗೆ ಗೆಲುವು ಕಂಡಲ್ಲಿ ಜಗತ್ತು ಎದುರಿಸುತ್ತಿರುವ ಎಲೆಕ್ಟ್ರಿಸಿಟಿ ತೊಂದರೆ ಕೊನೆಗೊಳ್ಳಬಹುದು. ಇನ್ನೂ ಹಲವು ವರ್ಷ ಕಾದುನೋಡಬೇಕಿದೆ. ಇದರ ಕುರಿತಾಗಿ ಲಾಕ್‌ಹೀಡ್ ಮಾರ್ಟಿನ್ ಬಿಡುಗಡೆ ಮಾಡಿರುವ ಒಂದು ವಿಡಿಯೋ ಇಲ್ಲಿದೆ.

(ಚಿತ್ರ ಸೆಲೆ: chenected.ichewikipediawired.com)

ಏನಿದು ಮೋಡ ಬಿತ್ತನೆ?

ಪ್ರಶಾಂತ ಸೊರಟೂರ.

‘ಮೋಡ ಬಿತ್ತನೆ’, ಕೆಲವು ವರ್ಷಗಳ ಹಿಂದೆ ಹೀಗೊಂದು ಪದ ಒಮ್ಮೆಲೇ ಬೆಳಕಿಗೆ ಬಂತು, ಬರಗಾಲದಿಂದ ತತ್ತರಿಸಿದ್ದ ಕರ್ನಾಟಕಕ್ಕೆ ಮಳೆ ಬರಿಸಲು ಮೋಡದಲ್ಲಿಯೇ ವಿಮಾನದಿಂದ ಬಿತ್ತನೆಯ ಕೆಲಸವಂತೆ, ಅದು ಮಳೆ ತರುತ್ತದಂತೆ ಅನ್ನುವ ಮಾತುಗಳು ಎಲ್ಲೆಡೆ ಹರಡ ತೊಡಗಿದ್ದವು. ನೆಲದಲ್ಲಿ ಬಿತ್ತನೆ ಮಾಡಿದ, ನೋಡಿದ ಕನ್ನಡಿಗರಿಗೆ ಬಾನಿನಲ್ಲಿ ಮಾಡುವ ಇದ್ಯಾವ ಬಗೆಯ ಬಿತ್ತನೆ ಅನ್ನಿಸಿತ್ತು. ಕೆಲ ಊರುಗಳ ಮೇಲೆ ವಿಮಾನಗಳು ಹಾರಾಡಿ ’ಮೋಡ ಬಿತ್ತನೆ’ಯಿಂದ ಮಳೆ ಸುರಿಸಿದ್ದೂ ಸುದ್ದಿಯಾಯಿತು. ಇಡೀ ದೇಶದಲ್ಲಿಯೇ ಈ ತರಹ ಮಳೆ ಸುರಿಸಲು ಮೋಡ ಬಿತ್ತನೆಗೆ ಕೈಹಾಕಿದ ಮೊದಲ ನಾಡು ಕರ್ನಾಟಕ ಅನ್ನುವ ಸುದ್ದಿಯಾಯಿತು.

ಮೋಡ ಬಿತ್ತನೆಯ ಬಗ್ಗೆ ತಿಳಿದುಕೊಳ್ಳುವ ಮುನ್ನ, ಮೋಡ ಮತ್ತು ಮಳೆಯ ಬಗ್ಗೆ ಒಂಚೂರು ತಿಳಿದುಕೊಳ್ಳೋಣ. ಕಡಲು, ಹೊಳೆ ಮತ್ತು ನೆಲದ ಹಲವೆಡೆ ಇರುವ ನೀರು ಬಿಸಿಲಿಗೆ ಕಾಯ್ದು ಆವಿಯಾಗುತ್ತದೆ. ಹೀಗೆ ಉಂಟಾದ ನೀರಾವಿಯು ಗಾಳಿಯೊಡನೆ ಬೆರೆತು ಬಾನಿನೆಡೆಗೆ ಸಾಗ ತೊಡಗುತ್ತದೆ. ಗಾಳಿಯು ಬಿಸಿಯಾದಷ್ಟು ಅದು ತನ್ನಲ್ಲಿ ಹೆಚ್ಚೆಚ್ಚು ನೀರಾವಿಯನ್ನು ಅಡಗಿಸಿಟ್ಟುಕೊಳ್ಳಬಲ್ಲದು, ಆದರೆ ನೆಲದಿಂದ ಮೇಲೆ-ಮೇಲೆ ಹೋದಂತೆಲ್ಲಾ ಅಲ್ಲಿರುವ ಬಿಸುಪು (temperature) ಕಡಿಮೆಯಾಗುತ್ತಾ ಹೋಗುತ್ತದೆ. ಒಂದು ಹಂತದಲ್ಲಿ ಬಿಸುಪು ತುಂಬಾ ಕಡಿಮೆಯಾಗಿ ಗಾಳಿಗೆ ತನ್ನಲ್ಲಿ ಇನ್ನಷ್ಟು ನೀರಾವಿಯನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ಈ ಹಂತದ ಗಾಳಿಯನ್ನು ‘ತಣಿದ ಗಾಳಿ’ (saturated air) ಅಂತಾ ಕರೆಯುತ್ತಾರೆ. ಈ ತಣಿದ ಗಾಳಿಯು ತೂಕವಾದ ನೀರಾವಿಯನ್ನು ಹೊತ್ತುಕೊಂಡು ಬಾನಿನಲ್ಲಿ ಒಂದೆಡೆ ನೆಲೆ ನಿಲ್ಲುತ್ತದೆ, ಇವೇ ಮೋಡಗಳು.

ಹೀಗೆ ನೆಲೆಗೊಂಡ ಮೋಡದಲ್ಲಿ ನೀರ ಹನಿಗಳು ತುಂಬಾ ತಂಪಾಗಿದ್ದು ಅವುಗಳ ಬಿಸುಪು (temperature) ಕೆಲವೊಮ್ಮೆ – 40° ಸೆಲ್ಸಿಯಸ್ ಆಗಿರುತ್ತದೆ. ಇಲ್ಲಿ ಇನ್ನೊಂದು ತಿಳಿದುಕೊಳ್ಳಬೇಕಾದ ವಿಶಯವೆಂದರೆ ಇಷ್ಟು ತಂಪಾಗಿದ್ದರೂ ಎಲ್ಲ ಹನಿಗಳು ಗಟ್ಟಿ ಮಂಜಿನ ರೂಪದಲ್ಲಿರದೇ ಕೆಲವು ಹನಿಗಳು ನೀರಿನ ರೂಪದಲ್ಲೇ ಉಳಿದಿರುತ್ತವೆ. ಇದಕ್ಕೆ ಕಾರಣವೆಂದರೆ ಸಾಮಾನ್ಯ ಒತ್ತಡದಲ್ಲಿ 0° ಸೆ. ಹೆಪ್ಪುಗಟ್ಟುವ ನೀರು ಬಾನಿನಲ್ಲಿ, ಮೇಲೆ ಹೋದಂತೆ ಒತ್ತಡ ಕಡಿಮೆ ಇರುವುದರಿಂದ ಅದರ ಹೆಪ್ಪುಗಟ್ಟುವಿಕೆ ಬಿಸುಪು (freezing temperature) ಕಡಿಮೆಯಾಗುತ್ತಾ ಹೋಗುತ್ತದೆ

ಮೋಡಗಳಲ್ಲಿರುವ ಚಿಕ್ಕ ನೀರಿನ ಹನಿಗಳು ಮತ್ತು ಮಂಜಿನ (ಗಟ್ಟಿ ನೀರು) ಹನಿಗಳು ಒಂದಕ್ಕೊಂದು ಬೆಸೆದು ಇಲ್ಲವೇ ಮೋಡದಲ್ಲಿರುವ ಇತರೆ ಪುಟಾಣಿ ಕಣಗಳನ್ನು ಸುತ್ತುವರೆದು ದೊಡ್ಡದಾಗುತ್ತಾ ಹೋಗುತ್ತವೆ. ಹೀಗೆ ದೊಡ್ಡದಾದ ನೀರಿನ, ಮಂಜಿನ ಹನಿ ಹೊತ್ತುಕೊಂಡಿರುವ ಮೋಡಕ್ಕೆ ಅವುಗಳ ತೂಕ ತಾಳಿಕೊಳ್ಳಲು ಆಗದಂತ ಪರಿಸ್ಥಿತಿ ಬಂದುಬಿಡುತ್ತದೆ. ಆಗಲೇ ಅವು ನೆಲಕ್ಕೆ ಮಳೆಯಾಗಿ ಸುರಿಯ ತೊಡಗುತ್ತವೆ.

ಮೋಡಗಳ ಕುರಿತಾದ ಮೇಲಿನ ವಿಷಯದಲ್ಲಿ ಗಮನಿಸಬೇಕಾದುದೆಂದರೆ, ಮೋಡಗಳು ಮಳೆಯಾಗಬೇಕಾದರೆ ಅವುಗಳಲ್ಲಿರುವ ನೀರಿನ ಹನಿಗಳು ಒಂದೋ ಹೆಚ್ಚಾಗಬೇಕು ಇಲ್ಲವೇ ಆ ನೀರ ಹನಿಗಳು ಒಂದಾಗಿ ದೊಡ್ಡದಾಗಬೇಕು. ಇದರಲ್ಲಿ ಎರಡನೇ ಬಗೆಯನ್ನು ಬಳಸಿ ಮಳೆ ತರಿಸುವುದೇ ‘ಮೋಡ ಬಿತ್ತನೆ’ಯ ಹಿಂದಿರುವ ಚಳಕ. ಮೋಡ ಬಿತ್ತನೆಯಲ್ಲಿ, ಬೆಳ್ಳಿಯ ಆಯೋಡಾಯಡ್ ಇಲ್ಲವೇ ಒಣ ಮಂಜು ಎಂದು ಕರೆಯಲ್ಪಡುವ ಗಟ್ಟಿ ಕಾರ್ಬನ್ ತುಣುಕುಗಳನ್ನು ವಿಮಾನಗಳ ಮೂಲಕ ಮೋಡಗಳ ಮೇಲೆ ಚಿಮುಕಿಸಲಾಗುತ್ತದೆ. ಹೀಗೆ ಚಿಮುಕಿಸಿದ ತುಣುಕುಗಳು ಮೋಡದಲ್ಲಿರುವ ನೀರಿನ, ಮಂಜಿನ ಹನಿಗಳನ್ನು ತನ್ನೆಡೆಗೆ ಸೆಳೆದು ದೊಡ್ಡದಾಗಿಸುತ್ತವೆ. ಹೀಗೆ ಒಂದುಗೂಡಿ ದೊಡ್ಡದಾದ ನೀರ ಹನಿಗಳ ಬಾರ ತಾಳಲಾಗದೇ ಮೋಡಗಳು, ಮಳೆಯಾಗಿ ಸುರಿಯ ತೊಡಗುತ್ತವೆ.

‘ಮೋಡ ಬಿತ್ತನೆ’ಯ ಕೆಲಸ ಯಾವಾಗಲೂ ಗೆಲುವು ಕಾಣುತ್ತದೆ ಅನ್ನಲಾಗದು, ಮೋಡದಲ್ಲಿರುವ ನೀರ ಹನಿಗಳ ಗಾತ್ರ, ಅವುಗಳ ಸುತ್ತಿರುವ ವಾತಾವರಣ ಇದರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಜಗತ್ತಿನ ಹಲವೆಡೆ ಮೋಡ ಬಿತ್ತನೆಯ ಕೆಲಸವನ್ನು ಕೈಗೊಂಡರೂ ಎಲ್ಲಾ ಕಡೆ ಇದಕ್ಕೆ ಒಪ್ಪಿಗೆ ಪಡೆಯಲು ಇನ್ನೂ ಆಗಿಲ್ಲ. ಆದರೆ ಚೀನಾ ದೇಶ ಯಾವುದೇ ಅನುಮಾನಗಳನ್ನು ಇಟ್ಟುಕೊಳ್ಳದೇ ’ಮೋಡ ಬಿತ್ತನೆ’ಯಲ್ಲಿ ಪ್ರತಿ ವರ್ಷ ಹೆಚ್ಚಿನ ದುಡ್ಡು ತೊಡಗಿಸುತ್ತಾ ಹೊರಟಿದೆ. ಬೀಜಿಂಗ್ ಒಲಂಪಿಕ್ಸಿನಲ್ಲಿ ಮಳೆಯಿಂದ ಆಟ ಹಾಳಾಗಬಾರದೆಂದು, ಮೋಡ ಬಿತ್ತನೆ ಮಾಡಿ ಆಟಕ್ಕಿಂತ ಹಲವು ದಿನಗಳ ಮೊದಲೇ ಮೋಡಗಳನ್ನು ಮಳೆಯಾಗಿಸಿದ್ದು ಇಲ್ಲಿ ನೆನಪಿಸಿಕೊಳ್ಳಬಹುದು. ಕರ್ನಾಟಕದಲ್ಲಿ 2003 ರಿಂದ ಮೋಡಬಿತ್ತನೆಯನ್ನು ಕೈಗೊಳ್ಳಲಾಗಿದೆ .

ಮಾಹಿತಿ ಸೆಲೆ:

 

ಕಡಲ ತೆರೆಗಳಿಂದ ಮಿಂಚು

ಪ್ರಶಾಂತ ಸೊರಟೂರ.

ಕಲ್ಲಿದ್ದಲು, ಪೆಟ್ರೋಲಿಯಂ ಮುಂತಾದ ಮುಗಿದು ಹೋಗಬಹುದಾದಂತಹ ಉರುವಲುಗಳ ಬದಲಾಗಿ ಮುಗಿದು ಹೋಗಲಾರದಂತಹ ಮತ್ತು ಸುತ್ತಣಕ್ಕೆ ಕಡಿಮೆ ತೊಂದರೆಯನ್ನುಂಟು ಮಾಡುವಂತಹ ಕಸುವಿನ ಸೆಲೆಗಳ ಅರಕೆ ಜಗತ್ತಿನೆಲ್ಲೆಡೆ ಎಡೆಬಿಡದೇ ಸಾಗಿದೆ.

ಈ ನಿಟ್ಟಿನಲ್ಲಿ ಗುಡ್ಡ-ಬೆಟ್ಟದ ಮೇಲೆ ಬೀಸುವ ಗಾಳಿ ಇಲ್ಲವೇ ನೇಸರನ ಬೆಳಕಿನಿಂದ ಮಿಂಚು (ಕರೆಂಟ್) ಉಂಟುಮಾಡುವ ಹೊಸ ಸಲಕರಣೆಗಳನ್ನು ಹಲವಾರು ಕಡೆ ಅಳವಡಿಸಲಾಗುತ್ತಿದೆ. ಇದರಂತೆ ಇತ್ತೀಚಿಗೆ ಬಳಕೆಗೆ ತರಲಾಗುತ್ತಿರುವ ಕಸುವಿನ ಇನ್ನೊಂದು ಸೆಲೆಯೆಂದರೆ ಕಡಲ ತೆರೆಗಳನ್ನು ಬಳಸಿ ಕರೆಂಟ್ ಉಂಟುಮಾಡುವುದು.

ದಂಡೆಯಲ್ಲಿ ಹೊಯ್ದಾಡುವ ತೆರೆಗಳನ್ನು ಇಲ್ಲವೇ ಕಡಲ ನಡುವೆ ಏಳುವ ದೊಡ್ಡ ಅಲೆಗಳು ಹೊಮ್ಮಿಸುವ ಕಸುವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳುವಂತಾದರೆ ಜಗತ್ತಿನ ಹಲವು ನಾಡುಗಳಿಗೆ ಯಾವುದೇ ಅಡೆತಡೆ ಇಲ್ಲದೇ ಮಿಂಚು (ಕರೆಂಟ್) ನೀಡಬಹುದೆಂದು ಎಣಿಕೆಮಾಡಲಾಗಿದೆ. ಆದರೆ ಬಿರುಸಾಗಿ ಅಪ್ಪಳಿಸುವ ಕಡಲ ಅಲೆಗಳನ್ನು ತಡೆದುಕೊಂಡು ಮಿಂಚು ಉಂಟಮಾಡಬಲ್ಲ ಗಟ್ಟಿಯಾದ ಮಿಂಚುಟ್ಟುಕಗಳನ್ನು (electric generators) ತಯಾರಿಸುವುದು ಇಂದು ದೊಡ್ಡ ತೊಡಕಾಗಿದೆ. ಹಾಗಾಗಿ ಕಡಲ ತೆರೆಯ ಕರೆಂಟ್ ಸಲಕರಣೆಗಳು ಇನ್ನೂ ಹೆಚ್ಚಾಗಿ ಬಳಕೆಯಾಗುತ್ತಿಲ್ಲ.

ಈ ನಿಟ್ಟಿನಲ್ಲಿ ಅಮೇರಿಕಾದ ‘Ocean Renewable Power Company’ ಹಲವಾರು ಹೊಸ ಅರಕೆಯ ಕೆಲಸಗಳನ್ನು ನಡೆಸುತ್ತಿದ್ದು, ಇತ್ತೀಚಿಗೆ ಕಡಲೊಳಗೆ 150 ಅಡಿ ಆಳದಲ್ಲಿ ಹೊಸದೊಂದು ಮಿಂಚುಟ್ಟುಕವನ್ನು ಅಣಿಗೊಳಿಸಿದೆ. 98 ಅಡಿ ಅಗಲ ಮತ್ತು 31 ಅಡಿ ಎತ್ತರ ಇರುವ ಅಡಿಪಾಯದ ಮೇಲೆ ಅಲೆಗಳಿಂದ ತಿರುಗುವ ಮಿಂಚುಟ್ಟುಕವನ್ನು ಅಳವಡಿಸಲಾಗಿದೆ.

ಮೊದಲ ಹಂತದಲ್ಲಿ ಕಡಲ ಅಲೆಗಳಿಂದ 150 ಕಿಲೋ ವ್ಯಾಟ್ ಕರೆಂಟಿನ ಕಸುವನ್ನು ಉಂಟುಮಾಡಬಲ್ಲ ಈ ಮಿಂಚುಟ್ಟುಕವು ಮುಂದಿನ ಕೆಲವು ವರುಶಗಳಲ್ಲಿ 5 ಮೆಗಾ ವ್ಯಾಟ್ ಕಸುವನ್ನು ಉಂಟು ಮಾಡುವಷ್ಟು ದೊಡ್ಡದಾಗಿಸಲು ಅಮೇರಿಕಾದ ಕೂಟವು ಗುರಿ ಇಟ್ಟುಕೊಂಡಿದೆ.

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಡಲ ತೆರೆಯ ಕಸುವು ಹೇರಳವಾಗಿ ದೊರೆಯುವಂತದು. ಅಮೇರಿಕಾದಂತೆ ಈ ಕಸುವನ್ನು ನಾವು ಕೂಡ ಸರಿಯಾಗಿ ಬಳಸಿಕೊಳ್ಳಬೇಕಾಗಿದೆ.

(ಸುದ್ದಿಸೆಲೆ: popsci)

ನೀರಿಗೆ ಏಕೆ ಈ ವಿಶೇಷ ಗುಣಗಳು?

ರಘುನಂದನ್.

ಕಳೆದ ಬರಹದಲ್ಲಿ ತಿಳಿದುಕೊಂಡಂತೆ ನಮ್ಮ ಸುತ್ತಣದಲ್ಲಿರುವ ವಸ್ತುಗಳಲ್ಲೇ ನೀರು ವಿಶೇಷವಾದುದು. ಆದರೆ ವಿಶೇಷವಾದ ಗುಣಗಳು ನೀರಿಗೇ ಏಕೆ ಇವೆ ಎಂಬುದು ಕುತೂಹಲವಾದುದು. ಇದಕ್ಕೆ ಕಾರಣ ಅದರ ಅಣುಗಳು ಒಂದಕ್ಕೊಂದು ಹೊಂದಿಕೊಂಡಿರುವ ಬಗೆ. ಮುಂಚೆ ಹೇಳಿದ ಹಾಗೆ ಹೈಡ್ರೋಜನ್ ಬೆಸೆತದ ಏರ್ಪಾಟು (hydrogen bonding arrangement) ನೀರು ಈ ರೀತಿ ಇರುವುದಕ್ಕೆ ಕಾರಣ.

ಜೀವಿಗಳು ಬದುಕಿರುವಾಗ ಅವುಗಳ ಒಡಲಿನಲ್ಲಿ ಸಾಕಷ್ಟು ರಾಸಾಯನಿಕ ಚಟುವಟಿಕೆಗಳು (chemical reactions) ನಡೆಯುತ್ತಿರುತ್ತವೆ, ಈ ರೀತಿಯ ಚಟುವಟಿಕೆಗಳು ನಡೆಯುವುದಕ್ಕೆ ಸಾಕಷ್ಟು ಪ್ರೋಟೀನ್‍ಗಳು, ಎಂಜೈಮ್ಗಳು ಹರಿದಾಡುತ್ತಿರಬೇಕು. ನರ ನಾಡಿಗಳ ಸಂದಿಗೊಂದಿಗಳಲ್ಲಿ ಸಣ್ಣ ಪುಟ್ಟ ಹಾದಿಗಳಲ್ಲಿ ಪ್ರೋಟೀನುಗಳು ಮತ್ತು ಎಂಜೈಮ್ಗಳು ಓಡಾಡುತ್ತಿರಬೇಕು. ಪ್ರೋಟೀನುಗಳು ಹೇಗೆ ಬೇಕೋ ಹಾಗೆ ತಿರುಗುವ, ನುಣುಚಿಕೊಳ್ಳುವ, ಆಕಾರ ಮಾರ್ಪಡಿಸುವುದಕ್ಕೆ ನೀರು ನೆರವಾಗುತ್ತದೆ. ಅದಕ್ಕಾಗಿಯೇ ನೀರು ಭೂಮಿಯ ಮೇಲಿನ ಜೀವಿಗಳೊಂದಿಗೆ ಈ ಬಗೆಯ ನಂಟನ್ನು ಹೊಂದಿದೆ.

ನೀರನ್ನು ಈ ಮಾದರಿಯಲ್ಲಿ ತೋರಿಸಬಹುದು, ನೆಗೆಟಿವ್
ಚಾರ್ಜ್ ಹೈಡ್ರೋಜನ್ ಅಣುಗಳು ಮತ್ತು ಪಾಸಿಟಿವ್ ಚಾರ್ಜ್ ಆಕ್ಸಿಜನ್ ಎಲೆಕ್ಟ್ರಾನ್‍ಗಳ ನಡುವಿನ ಸೆಳೆತ. ಈ ಸೆಳೆತವು ಒಂದು ಬಗೆಯ ನಿರುಗೆಯನ್ನು ಹುಟ್ಟುಹಾಕುತ್ತದೆ. ಈ ಸೆಳೆತಕ್ಕೆ ವಾನ್ ಡರ್ ವಾಲ್ಸ್ ಕಸುವು (Van der Waals force) ಎನ್ನುತ್ತಾರೆ. ಇವು ನೋಡಲಿಕ್ಕೆ ನಾಲ್ಬದಿಗಳಾಗಿ (Tetrahedra) ಕಾಣುತ್ತವೆ. ಕೆಳಗಿನ ಚಿತ್ರವನ್ನು ನೋಡಿ,

ಎಡಗಡೆಯ ಚಿತ್ರದಲ್ಲಿ ನೀವು ನೀರಿನ ಅಣುಕೂಟಗಳು ಹೇಗೆ ಒಂದಕ್ಕೊಂದು ಅಂಟಿಕೊಂಡಿವೆ ಎಂದು ನೋಡಬಹುದು. ಈ ಬಗೆಯ ನಲ್ಬದಿಗಳು ಹೆಚ್ಚು ಹೆಚ್ಚು ಚಾಚಿದಾಗ ಬಲಗಡೆಯ ಚಿತ್ರದಂತೆ ಕಾಣುತ್ತದೆ. ಇಲ್ಲಿ ಕೆಂಪು ಬಣ್ಣದಲ್ಲಿ ಇರುವುದು ಆಕ್ಸಿಜನ್ ಅಣುಗಳು ಮತ್ತು ಬಿಳಿ ಬಣ್ಣದಲ್ಲಿ ಇರುವುದು ಹೈಡ್ರೋಜನ್ ಅಣುಗಳು. ಈ ಅಣುಗಳ ನಡುವೆ ಇರುವ ಗೆರೆಯೇ ಹೈಡ್ರೋಜನ್ ಬೆಸೆತ (Hydrogen Bond).

ಬೇರೆ ಹರಿಯುವ ವಸ್ತುಗಳು (fluids) ಯಾಕೆ ಹೀಗಿಲ್ಲ ಎಂಬುದನ್ನು ಒರೆಹಚ್ಚಲು ಕೆಲವು ವಿಜ್ಞಾನಿಗಳು ಈ ಬಗೆಯ ಪ್ರಯೋಗವೊಂದನ್ನು ಮಾಡಿದರು. ಈ ಪ್ರಯೋಗದಲ್ಲಿ ವಾನ್ ಡರ್ ವಾಲ್ಸ್ ಕಸುವು (Van der Waals force) ಮತ್ತು ಹೈಡ್ರೋಜನ್ ಬೆಸೆತದ (Hydrogen bonding) ಮೊತ್ತಗಳನ್ನು ಕೊಂಚ ಮಟ್ಟಕ್ಕೆ ಮಾರ್ಪಾಟು ಮಾಡುವುದಕ್ಕೆ ಮುಂದಾದರು. ಅಂದರೆ ನೀರಿನಂತೆಯೇ ಆದರೆ ನೀರಲ್ಲ ಎಂಬ ಅಣುಕೂಟಗಳು ಹೇಗಿರುತ್ತವೆ ಎಂದು ತಿಳಿಯುವುದಕ್ಕೆ.

ಈ ಪ್ರಯೋಗದಿಂದ ಕೆಲವು ಅಚ್ಚರಿಯ ಸಂಗತಿಗಳು ಬೆಳಕಿಗೆ ಬಂದವು. ಹೈಡ್ರೋಜನ್ ಬೆಸೆತ ಇಲ್ಲ ಎಂದುಕೊಳ್ಳಿ ಆಗ ನೀರು ಮೇಲಿನ ಚಿತ್ರದಲ್ಲಿ ತೋರಿದಂತೆ ಮೂರು ದಿಕ್ಕುಗಳ ಬಲೆಯಾಗಿ (three dimensional network) ಅಂಟಿಕೊಂಡಿರದೆ ಉದ್ದುದ್ದ ಸರಪಳಿಗಳಾಗಿ ಇರುತ್ತಿತ್ತು (ಅಮೋನಿಯಾ ಮತ್ತು ಹೈಡ್ರೋಜನ್ ಕ್ಲೋರೈಡಿನಲ್ಲಿ ಇರುವಂತೆ). ಆಗ ನೀರಿಗೆ ಮೇಲೆ ಹೇಳಿದಂತ ಸೆಳೆತ ಇರುತ್ತಿರಲಿಲ್ಲ ಮತ್ತು ಪ್ರೋಟೀನುಗಳನ್ನು ಸಾಗಿಸಲು ಆಗುತ್ತಿರಲಿಲ್ಲ. ಈ ಭೂಮಿಯ ಮೇಲೆ ಜೀವಿಗಳೇ ಇರುತ್ತಿರಲಿಲ್ಲ ಎಂದೇ ಹೇಳಬಹುದು! ಹಾಗೆಯೇ ಹೈಡ್ರೋಜನ್ ಬೆಸೆತಗಳ ಮೂಲೆಗಳ (hydrogen bond angles) ಮೊತ್ತವನ್ನು ಮಾರ್ಪಡಿಸಿದರೂ ನೀರಿನ ಕೆಲವು ಗುಣಗಳು ಮಾರ್ಪಾಟಾಗುತ್ತಿದ್ದವು.

ಈ ಮೇಲಿನ ಕಾರಣಗಳಿಗಾಗಿಯೇ ನೀರು ನೀರಾಗಿರುವುದು ಮತ್ತು ಬೇರೆ ವಸ್ತುಗಳಿಗಿಂತ ಬೇರೆಯಾಗಿರುವುದು. ದಿನ ಬಳಸುವ ಸಾಮಾನ್ಯ ನೀರಿನ ಬಗೆಗಿನ ತಿಳುವಳಿಕೆ ಎಷ್ಟು ಸೋಜಿಗವಲ್ಲವೇ !?.

ನೀರಿನ ಬಗ್ಗೆ ಕೆಲವು ಸೋಜಿಗದ ಪ್ರಶ್ನೆಗಳು

ರಘುನಂದನ್.

ಈ ಬರಹದಲ್ಲಿ ನೀರಿನ ಬಗ್ಗೆ ಹಲವು ತಿಳಿಯದ ಕೆಲವು ಸೋಜಿಗದ ಪ್ರಶ್ನೆಗಳನ್ನು ಕೇಳಿಕೊಳ್ಳೋಣ !.

ಎಷ್ಟು ಬಗೆಯ ಮಂಜುಗಡ್ಡೆಗಳಿವೆ ?

ನಿಮಗೆ ಅಚ್ಚರಿಯೆನಿಸಬಹುದು, ಈಗಿನವರೆಗೆ 17 ಬಗೆಯ ಮಂಜುಗಡ್ಡೆಗಳನ್ನು ಗುರುತಿಸಲಾಗಿದೆ. ಅವುಗಳ ಹರಳಿಟ್ಟಳದ (crystal structure) ನೆಲೆಯ ಮೇಲೆ ಈ 17 ಬಗೆಗಳನ್ನು ಗುರುತಿಸಲಾಗಿದೆ. ನಾವು ನೋಡುವುದು ಒಂದೇ ಬಗೆಯ ಮಂಜುಗಡ್ಡೆ. ಮತ್ತೊಂದು ಬಗೆಯು ಹೊರ ಗಾಳಿಪದರದಲ್ಲಿ ಇರುತ್ತದೆ. ಮಿಕ್ಕ 15 ಬಗೆಗಳು ಹೆಚ್ಚಿನ ಒತ್ತಡದಲ್ಲಿ ಮಾತ್ರವೇ ರೂಪವನ್ನು ತಾಳುತ್ತವೆ. ನೀರಿನಲ್ಲಿ ಹೈಡ್ರೋಜನ್ ನಂಟು (hydrogen bond) ಆಕ್ಸಿಜನ್ ಒಟ್ಟಿಗೆ ನಾಲ್ಕುಚಾಚುಗಳ ಬಲೆಯಾಗಿ (tetrahedral network) ಹೆಣೆದುಕೊಂಡಿರುತ್ತವೆ. ಇದರ ಮೇಲೆ ಒತ್ತಡವನ್ನು ಹಾಕಿದರೆ ಬಗೆ ಬಗೆಯ ನೀರು-ಮಂಜುಗಡ್ಡೆಗಳಾಗಿ ಮಾರ‍್ಪಾಟಾಗುತ್ತವೆ. ಆದರೆ ಹದಿನೇಳಕ್ಕಿಂತ ಹೆಚ್ಚಿಗೆ ಇವೆಯೇ ಎಂಬುದು ಗೊತ್ತಿಲ್ಲ.

ಎಷ್ಟು ಬಗೆಯ ನೀರುಗಳಿವೆ ?

ನಿಮಗೆ ಈ ಪ್ರಶ್ನೆ ಬೆರಗೆನಿಸಬಹುದು. ನೀರು ಗಟ್ಟಿಯಾಗಿದ್ದರೆ ಮಂಜುಗಡ್ಡೆ ಎನ್ನುತ್ತೇವೆ. ನೀರು ಉಗಿಯಾದರೆ ಆವಿ ಎನ್ನುತ್ತೇವೆ. ನೀರು ಹರಿದರೆ ನೀರೇ ಎನ್ನುತ್ತೇವೆ. ಆದರೆ ಈ ಹರಿಯುವ ನೀರಿನಲ್ಲಿ ಎರಡು ಬಗೆಗಳಿದ್ದರೆ?

ವಿಜ್ಞಾನಿಗಳ ಪ್ರಕಾರ ನೀರನ್ನು ಕಡುತಂಪಾಗಿಸಿದಾಗ (super-cooled) ಎರಡು ಬಗೆಯ ನೀರುಗಳು ಒಂದಕ್ಕೊಂದು ಮಾರ್ಪಾಟಾಗುವುದನ್ನು ಗಮನಿಸಬಹುದಂತೆ. ಆದರೆ ಕೆಲವು ವಿಜ್ಞಾನಿಗಳು ಇದನ್ನು ನಿರಾಕರಿಸಿದ್ದಾರೆ, ಹಾಗಾಗಿ ಇದರಬಗ್ಗೆ ಇನ್ನು ಹೆಚ್ಚು ಅರಕೆ ಮಾಡಬೇಕಿದೆ.

ನೀರು ಹೇಗೆ ಆವಿಯಾಗುತ್ತದೆ ?

ಇಂದಿಗೂ ಯಾವ ಬಿರುಸಿನಲ್ಲಿ ನೆಲದ ಮೇಲಿರುವ ನೀರು ಆವಿಯಾಗುತ್ತದೆ (rate of evaporation) ಎಂದು ತಿಳಿದಿಲ್ಲ. ಅದು ತಿಳಿದರೆ ಮೋಡದಲ್ಲಿ ನೀರಿನ ಹನಿಗಳು ಹೇಗೆ ಹರಡಿಕೊಂಡಿವೆ ಎಂಬುದನ್ನು ಅರಿಯಬಹುದು. ಅದನ್ನು ಅರಿತರೆ ಮೋಡಗಳು ನೇಸರನು ಸೂಸುವ ಬೆಳಕನ್ನು ಹೇಗೆ ತಿರುಗಿಸುತ್ತವೆ, ಹೇಗೆ ಹೀರುತ್ತವೆ ಮತ್ತು ಹೇಗೆ ಚದರಿಸುತ್ತವೆ ಎಂಬುದನ್ನು ತಿಳಿಯಬಹುದು. ಇದು ತಿಳಿದರೆ ನೆಲದ ಬಿಸಿಯಾಗುವಿಕೆಯ(global warming) ಕುರಿತಾಗಿ ಹೆಚ್ಚು ಅರಕೆ ನಡೆಸಬಹುದು.

ನೀರಿನ ಮೇಲ್ಮೈಯ pH ಎಷ್ಟು ?

ನೀರಿನ pH (ಹುಳಿಯಳತೆ) 7 ಎಂದು ಗೊತ್ತಿದೆ. ಆದರೆ ನೀರಿನ ಮೇಲ್ಮೈ ಯಾವ pH ಅನ್ನು ಹೊಂದಿರುತ್ತದೆ ? ನೀರಿನ ಅಬ್ಬಿಗಳ(water falls) ಸುತ್ತ ಕಾಣುವ ಮಂಜು ಸಾಮಾನ್ಯವಾಗಿ ನೆಗೆಟಿವ್ OH ಮಿನ್ತುಣುಕುಗಳನ್ನು(ions) ಹೊಂದಿರುತ್ತವೆ. ಅಂದರೆ pH 7 ಕ್ಕಿಂತ ಹೆಚ್ಚು ಎನ್ನಬಹುದು. ಆದರೆ ಇತ್ತೀಚಿನ ಅರಕೆಗಳ ಪ್ರಕಾರ ನೀರಿನ ಮೇಲ್ಮಯ್ ಅರೆ-ಹೈಡ್ರೋಜನ್ ನಂಟನ್ನು (broken hydrogen bonds) ಹೊಂದಿರುತ್ತವೆಯಂತೆ. ಹಾಗಾಗಿ ಇವು 7 ಕ್ಕಿಂತ ಕಡಿಮೆ pH ಅನ್ನು ಹೊಂದಿರಬಹುದೆಂದು ಹೇಳಲಾಗುತ್ತಿದೆ. ಹಿಂದಿನ ಬರಹದಲ್ಲಿ ನೋಡಿದಂತೆ ಎಂಜಾಯ್ಂಗಳು, ಪ್ರೋಟೀನುಗಳು ಒಡಲಿನಲ್ಲಿ ಹರಿದಾಡುತ್ತಿರಬೇಕೆಂದರೆ ನೀರು ಮುಖ್ಯ . ಇವೆಲ್ಲವೂ ನೀರಿನ pH ಅನ್ನು ನೆಚ್ಚಿರುತ್ತವೆ. ಆದ್ದರಿಂದ ನೀರಿನ ಮೇಲ್ಮೈಯ pH ತಿಳಿವಳಿಕೆ ಮುಖ್ಯವಾದದ್ದು ಆದರೆ ಆ ತಿಳುವಳಿಕೆ ನಮಗಿನ್ನೂ ಎಟುಕಿಲ್ಲ.

ನ್ಯಾನೋ ನೀರು ಬೇರೆಯದೇ ?

ನೀರೆಂದರೆ ನಮಗೆ ತಟ್ಟನೆ ಹೊಳೆಯುವುದು ದೊಡ್ಡದಾದ ಕಡಲುಗಳು ಹರಿಯುವ ಕಾಲುವೆಗಳು. ಆದರೆ ಕಡುಚಿಕ್ಕದಾದ ಎಡೆಗಳಲ್ಲಿ ನೀರನ್ನು ಸೆರೆಹಿಡಿದಾಗ (ಅಂದರೆ ನ್ಯಾನೋ ಮೀಟರ್ ಮಟ್ಟದಲ್ಲಿ) ಅದು ಬೇರೆ ಬಗೆಯ ಗುಣಗಳನ್ನು ತೋರಬಹುದೇ? ಯಾಕೆಂದರೆ ಬರಿಯ ನ್ಯಾನೋಮೀಟರ್ ಅಗಲದಲ್ಲಿ ನೀರನ್ನು ಹಿಡಿದಿಟ್ಟಾಗ ಕೆಲವೇ ಕೆಲವು ಅಣುಕೂಟಗಳಿರುವ ಸಾಧ್ಯತೆ ಇರುತ್ತದೆ. ಹೀಗಾದಾಗ ಕ್ವಾಂಟಮ್ ಪರಿಣಾಮಗಳು(quantum effects) ಆ ಅಣುಕೂಟಗಳ ಮೇಲೆ ಬೀರಬಹುದಾದ ಕಾರಣದಿಂದ ಅದರ ಗುಣಗಳು ಮಾರ್ಪಾಟಾಗಬಹುದು ಇದರ ಬಗ್ಗೆ ಇನ್ನಷ್ಟು ಅರಕೆ ನಡೆಯಬೇಕಿದೆ.

(ಸೆಲೆ: nautil.us7-themes.com)

ನೀರು – ಏನಿದರ ಗುಟ್ಟು?

ರಘುನಂದನ್.

ಮುಂಚಿನಿಂದಲೂ ಮನುಷ್ಯನಿಗೆ ನಮ್ಮ ಭೂಮಿಯನ್ನು ಬಿಟ್ಟು ಬೇರೆಡೆ ಜೀವಿಗಳು ಇವೆಯೇ ಎಂಬ ಕುತೂಹಲ ಇದ್ದೇ ಇದೆ. ಮಂಗಳ ಮತ್ತು ಶುಕ್ರ ಗ್ರಹಗಳಲ್ಲಿ ಜೀವಿಗಳನ್ನು ಹುಡುಕುವ ಪ್ರಯತ್ನ ಸಾಕಷ್ಟು ನಡೆದಿದೆ. ನೇಸರ ಬಳಗದಾಚೆಗೂ (solar system) ಜೀವಿಗಳು ಇವೆಯೇ ಎಂಬ ಪ್ರಶ್ನೆ ಆಗಾಗ ವಿಜ್ಞಾನಿಗಳ ತಲೆ ಹೊಕ್ಕಿದೆ. ಇದಕ್ಕೆ ಸಾಕಷ್ಟು ಅರಕೆ ಕೂಡ ನಡೆದಿದೆ, ನಡೆಯುತ್ತಲೂ ಇದೆ.

ಜೀವಿಗಳು ಇರಬಹುದೇ ಎಂಬ ಪ್ರಶ್ನೆಯನ್ನು ಇನ್ನೊಂದು ಬಗೆಯಲ್ಲಿ ನೋಡಿದರೆ – ಜೀವಿಗಳು ಹುಟ್ಟಿ ಬೆಳೆಯುವುದಕ್ಕೆ ಮುಖ್ಯವಾದ ಕಾರಣಗಳಾವವು ಎಂಬುದನ್ನು ತಿಳಿದುಕೊಳ್ಳಬೇಕಾಗುತ್ತದೆ. ಅಂದರೆ ಆ ನೆಲದಲ್ಲಿ ಭೂಮಿಯಲ್ಲಿ ಇರುವಂತಹ ಕಾವಳತೆ (temperature), ಗಾಳಿ, ನೀರು ಮುಂತಾದವುಗಳು ಇರಬೇಕಾಗುತ್ತದೆ. ಹಾಗಾಗಿ ವಿಜ್ಞಾನಿಗಳು ಸಾಮಾನ್ಯವಾಗಿ ಹೊಸ ನೆಲಗಳನ್ನು ಹುಡುಕುವಾಗ ಅಲ್ಲಿ ನೀರಿನ ಇರುವಿಕೆಯ ಕುರುಹುಗಳಿವೆಯೇ ಎಂದು ಮೊದಲು ಹುಡುಕುತ್ತಾರೆ. ಭೂಮಿಯಲ್ಲಿ ಗಿಡ ಮರಗಳು ಪ್ರಾಣಿ ಹಕ್ಕಿಗಳು ಇರುವುದೇ ನೀರಿನಿಂದ ಎಂಬ ಸಾಮಾನ್ಯ ತಿಳುವಳಿಕೆ ಎಲ್ಲರಿಗೂ ಇರುತ್ತದೆ. ಈ ನೋಟದಲ್ಲಿ ನೋಡಿದಾಗ ನೀರು ವಿಶೇಷ ವಸ್ತು ಎನಿಸುತ್ತದೆ.

ಬೇರೆ ಎಲ್ಲಾ ಹರಿಕಗಳಿಗೆ (fluid) ಹೋಲಿಸಿದರೆ ನೀರು ಯಾಕೆ ಬೇರೆ ಮತ್ತು ಅದರಿಂದ ಜೀವಿಗಳಿಗೆ ಹೇಗೆ ಒಳಿತು ಎಂಬುದನ್ನು ಅರಿಮೆಯ ನೋಟದಿಂದ ನೋಡುವ ಒಂದು ಪ್ರಯತ್ನ ಈ ಬರಹ.

ಒಂದು ನೀರಿನ ಅಣುಕೂಟದಲ್ಲಿ(molecule) ಎರಡು ಹೈಡ್ರೋಜನ್ ಅಣು ಮತ್ತು ಒಂದು ಆಕ್ಸಿಜನ್ ಅಣುವಿರುತ್ತದೆ. ಇವು ಒಂದಕ್ಕೊಂದು ಹೇಗೆ ಅಂಟಿಕೊಂಡಿವೆ ಎಂಬುದನ್ನು ಆಮೇಲೆ ನೋಡೋಣ. ಸೋಜಿಗವೆಂದರೆ ಬೇರೆ ಹೈಡ್ರೋಜನ್ ಉಳ್ಳ ಅಣುಕೂಟಗಳು (ಮೀತೇನ್, ಅಮೋನಿಯಾ, ಹೈಡ್ರೋಜನ್ ಸಲ್ಪೈಡ್) ಭೂಮಿಯ ಕಾವಳತೆ ಮತ್ತು ಒತ್ತಡದಲ್ಲಿ (atmospheric temperature and pressure) ಆವಿಯ(gaseous) ರೂಪದಲ್ಲಿ ಇರುತ್ತವೆ. ಆದರೆ ನೀರು ಮಾತ್ರವೇ ಹರಿಯುವ ರೂಪದಲ್ಲಿರುತ್ತದೆ ! ಹಾಗಾಗಿ ನೀರಿನ ಅಣುಕೂಟಗಳಿಗೆ ಒಂದಕ್ಕೊಂದು ಅಂಟಿಕೊಳ್ಳುವ ಸೆಳೆತ ಹೆಚ್ಚಿದೆ ಎಂದು ಅರಿಯಬಹುದು.

ನೀರಿಗೆ ಬಿಸುಪಿನ ಅಳವು (heat capacity) ಹೆಚ್ಚಿರುತ್ತದೆ (ಅಂದರೆ ಹೆಚ್ಚು ಕಾವು ಒದಗಿಸಿದಷ್ಟು ಕಾವಳತೆ ಕೂಡಲೆ ಏರುವುದಿಲ್ಲ). ಈ ಗುಣದಿಂದಾಗಿ ನೀರಿನ ಒಡಲುಗಳಾದ ಕಡಲುಗಳು, ನೇಸರನಿಂದ ಬರುವ ಕಾವನ್ನು ಚೆನ್ನಾಗಿ ಮರುಹಂಚಿಕೆ ಮಾಡುತ್ತವೆ ಮತ್ತು ಭೂಮಿಯ ತಾಪವನ್ನು ಒಬ್ಬಗೆಯಾಗಿ ಇರಿಸುತ್ತವೆ. ಇದು ಜೀವಿಗಳಿಗೆ ತುಂಬಾ ಅನುಕೂಲಕರವಾಗಿರುತ್ತದೆ.

ಬೇರೆಲ್ಲಾ ಹರಿಕಗಳು ತಂಪಾಗಿಸಿದಾಗ ಕುಗ್ಗುತ್ತವೆ ಮತ್ತು ಗಟ್ಟಿಯಾಗುತ್ತವೆ ಆದರೆ ನೀರಿನ ರೂಪವಾದ ಮಂಜುಗಡ್ಡೆ (ice) ತಂಪಾಗಿಸಿದಾಗ ಹಿಗ್ಗುತ್ತದೆ ಮತ್ತು ತೇಲುತ್ತದೆ. ಇದರಿಂದ ಕೆರೆ ಕೊಳಗಳು ಕೆಳಗಿನಿಂದ ಗಟ್ಟಿಯಾಗದೇ ಮಂಜುಗಡ್ಡೆ ಬರಿಯ ನೀರಿನ ಮೇಲೆ ತೇಲುತ್ತದೆ. ಇದರಿಂದ ನೀರಿನ ಜೀವಿಗಳಿಗೆ ಬೇಕಾದ ಕಾವಳತೆ ಸಿಗುತ್ತದೆ.

ನೀರಿಗೆ ಸಾಕಷ್ಟು ಬಗೆಯ ವಸ್ತುಗಳನ್ನು ಕರಗಿಸಿಕೊಳ್ಳುವ ಕಸುವು ಇದೆ. ಇದರಿಂದಾಗಿ ಜೀವಿಗಳಿಗೆ ಬೇಕಾಗುವ ಹಲಬಗೆಯ ಪೊರೆತ (nutrients)ಗಳನ್ನು ಸಾಗಿಸುವ ಶಕ್ತಿ ನೀರಿಗಿದೆ. ನೀರಿಗೆ ಮಿಂತುಣುಕನ್ನು ಅಡಗಿಸಿಕೊಳ್ಳುವ ಅಳವಿಲ್ಲದಿದ್ದರೆ ಗಿಡ ಮರಗಳಲ್ಲಿ ಬೆಳಕಿನಡುಗೆ (photosynthesis) ಆಗುತ್ತಲೇ ಇರಲಿಲ್ಲ. ನೀರಿಗೆ ಹೆಚ್ಚಿನ ಮಟ್ಟದ ಮೇಲ್ಮೈ ಎಳೆತ(surface tension) ಇರುವ ಕಾರಣದಿಂದ ಎಷ್ಟೇ ಉದ್ದ ಇರುವ ಮರಕ್ಕೂ ಮರದ-ರಸ (sap) ಸಾಗಿಸಬಲ್ಲದು.

(ಚಿತ್ರ ಸೆಲೆ : unrth.com)

ಬಾನಿನ ಬಣ್ಣವೇಕೆ ನೀಲಿ ಇಲ್ಲವೇ ಕೆಂಪು?

ರಘುನಂದನ್.

ನಮ್ಮ ಮೇಲಿರುವ ತಿಳಿಯಾಗಸದ ಬಣ್ಣ ನೀಲಿಯಾಗಿರುತ್ತದೆ ಎಂದು ಎಲ್ಲರಿಗೂ ತಿಳಿದಿರುವ ವಿಷಯ . ಅದು ಬೆಳಿಗ್ಗೆ ಮತ್ತು ನಡು ಹಗಲಿನಲ್ಲಿ ನೀಲಿಯಾಗಿರುತ್ತದೆ ಮತ್ತು ಹೊತ್ತು ಮುಳುಗುತ್ತಿದ್ದಂತೆ ಕೆಂಪು, ಕಿತ್ತಳೆ ಬಣ್ಣವಾಗಿ ಮಾರ್ಪಾಡಾಗುವುದನ್ನು ನಾವು ದಿನಾಲು ಕಂಡಿರುತ್ತೇವೆ. ಬೆಳಿಗ್ಗೆ ಬಾನು ಯಾಕೆ ನೀಲಿಯಾಗಿರುತ್ತದೆ ಮತ್ತು ಬಯ್ಗಿನ (ಸಂಜೆಯ) ಹೊತ್ತಿಗೆ ಏಕೆ ಕೆಂಪಾಗುತ್ತದೆ ಎಂದು ಯಾವಾತ್ತಾದರೂ ಯೋಚಿಸಿದ್ದೀರ?

ಇದಕ್ಕೆ ಉತ್ತರ ಸುಳುವಾಗಿಲ್ಲ. ಈ ಪ್ರಶ್ನೆಯ ಬಗ್ಗೆ ಹಲವಾರು ಅರಿಮೆಗಾರರು ತಲೆ ಕೆಡಿಸಿಕೊಂಡಿದ್ದಾರೆ. ಬಾನಿನ ನೀಲಿ ಬಣ್ಣದ ಹಿಂದಿನ ಅರಿಮೆ ಏನು ಎಂಬುದನ್ನು ಈ ಬರಹದಲ್ಲಿ ತಿಳಿದುಕೊಳ್ಳೋಣ.

ನೇಸರನು ಹೊರಸೂಸುವ ಬೇರೆ ಬೇರೆ ತೆರನಾದ ಕದಿರುಗಳು (rays) ಭೂಮಿಯ ಗಾಳಿಪದರವನ್ನು (atmosphere) ದಾಟಿ ನೆಲದ ಮೇಲೆ ಬೀಳುತ್ತವೆ. ಬರಿ ಬೆಳಕೊಂದೇ ಅಲ್ಲದೆ ಮಿನ್ಸೆಳೆತದ ಅಲೆಸಾಲಿನ(electromagnetic spectrum) ಬೇರೆ ಬೇರೆ ಕದಿರುಗಳನ್ನೂ ಕೂಡ ನೇಸರನೆಂಬ ಬೆಂಕಿಯುಂಡೆ ಹೊರಹಾಕುತ್ತದೆ. ಆದರೆ ಭೂಮಿಯ ಮೇಲಿನ ಉಸಿರಿಗಳಿಗೆ ಕುತ್ತು ಎನಿಸುವ ಕದಿರುಗಳನ್ನು ಒಜೋನ್ (ozone) ಪದರ ಹೀರಿಕೊಳ್ಳುತ್ತದೆ. ಉದಾಹರಣೆಗೆ – ಕಡುನೀಲಿ ಕದಿರುಗಳು (ultra violet rays). ಹಾಗಾಗಿ ನಮ್ಮ ಕಣ್ಣಿಗೆ ಕಾಣುವ ಬೆಳಕಿನ ಕದಿರುಗಳ ಮೂಲಕ ನಾವು ನಮ್ಮ ಸುತ್ತಮುತ್ತವನ್ನು ನೋಡಬಹುದಾಗಿದೆ. ನಮಗೆ ತಿಳಿದಿರುವಂತೆ ಬೆಳಕು ಕೂಡ ಬೇರೆ ಬೇರೆ ಬಣ್ಣಗಳಿಂದ ಕೂಡಿದೆ ಮತ್ತು ಎಲ್ಲಾ ಬಣ್ಣಗಳಿಗೆ ಅದರದೇ ಆದ ಅಲೆಯಗಲ (wavelength) ಕೂಡ ಇರುತ್ತದೆ.

 

ಭೂಮಿಯ ಸುತ್ತಾವಿ

ಭೂಮಿಯ ಸುತ್ತ ಇರುವ, ಇಂಗ್ಲಿಶಿನಲ್ಲಿ ಅಟ್ಮೊಸ್ಪಿಯರ್ ಎನ್ನುವ ಗಾಳಿಪದರದಲ್ಲಿ ಸಾಮಾನ್ಯವಾಗಿ ಆವಿ – ಅನಿಲಗಳು, ನೀರಿನ ಹನಿಗಳು ಮುಂತಾದವುಗಳು ಇರುತ್ತವೆ. ಆವಿಗಳಲ್ಲಿ ಹೆಚ್ಚಾಗಿ ನೈಟ್ರೋಜನ್ (78%) ಮತ್ತು ಆಕ್ಸಿಜನ್ (21%) ಇರುತ್ತದೆ. ಇದರ ಜೊತೆ ಕಸದ ತುಣುಕುಗಳು, ಕಡಲಿನ ಉಪ್ಪು, ದೂಳು ಕೂಡ ಈ ಪದರದಲ್ಲಿ ಇರುತ್ತದೆ. ಇವುಗಳು ಕಡುಚಿಕ್ಕದಾದ ಕಾರಣ ನಮ್ಮ ಕಣ್ಣಿಗೆ ಕಾಣಸಿಗುವುದಿಲ್ಲ. ಭೂಮಿಯ ಗಾಳಿಪದರದ ಆಚೆ ಇರುವುದು ಬಾನಂಗಳ (space). ಭೂಮಿಯ ಸುತ್ತಾವಿ ನೆಲದ ಹತ್ತಿರ ದಟ್ಟವಾಗಿರುತ್ತದೆ(dense) ಮತ್ತು ಬಾನಂಗಳದೆಡೆಗೆ ಚಾಚುತ್ತಿದ್ದಂತೆ ಗಾಳಿಯ ದಟ್ಟಣೆ ಕಡಿಮೆಯಾಗುತ್ತಾ ಹೋಗುತ್ತದೆ. ಇದನ್ನೇ ಗಾಳಿಪದರದ ಒತ್ತಡ(atmospheric pressure) ಎನ್ನುತ್ತೇವೆ.

ಬೆಳಕಿನ ಅಲೆಗಳು

ಬೆಳಕು ಒಂದು ಬಗೆಯ ಹುರುಪು/ಶಕ್ತಿ. ಬೆಳಕು ಅಲೆಗಳಾಗಿ ಕೂಡ ಹರಿಯಬಹುದು ಇಲ್ಲವೇ ತುಣುಕುಗಳಾಗಿ ಕೂಡ ಹರಿಯಬಹುದು. ಅಲೆಗಳಾಗಿ ತೆಗೆದುಕೊಂಡರೆ ಬೆಳಕು ಮಿಂಚಿನ(electric) ಮತ್ತು ಸೆಳೆತದ(magnetic) ಅಲೆಗಳಾಗಿ ಹರಿಯುತ್ತದೆ. ಹೀಗೆ ಅಲೆಗಳಾಗಿ ಹರಿಯುವ ಕಾರಣದಿಂದ ಬೆಳಕಿಗೆ ಒಂದು ಅಲೆಯಗಲ ಎಂದು ಇರುತ್ತದೆ. ಬೆಳಕಿನ ಅಲೆಯಗಲ 400nm ಇಂದ 750nm ವರೆಗೂ ಇರುತ್ತದೆ. ಮಿನ್ಸೆಳೆತ ಅಲೆಸಾಲಿನ ಬೇರೆ ಬೇರೆ ಕದಿರುಗಳಿಗೆ ಒಂದೊಂದು ಅಲೆಯಗಲದ ಬೆಲೆ ಇರುತ್ತದೆ. ಕದಿರುಗಳ ಹರಿಯುವಿಕೆಯ ದೆಸೆಯಿಂದ ಎಲ್ಲಾ ಅಲೆಗಳಿಗೆ ಹುರುಪು ಕೂಡ ಇರುತ್ತದೆ.

ಅಲೆಯಗಲ ಹೆಚ್ಚಿದ್ದು ಸಲದೆಣಿಕೆ (frequency) ಕಡಿಮೆ ಇದ್ದರೆ ಆ ಕದಿರಿಗೆ ಕಡಿಮೆ ಹುರುಪಿರುತ್ತದೆ. ಅಲೆಯಗಲ ಕಡಿಮೆಯಿದ್ದು ಸಲದೆಣಿಕೆ ಹೆಚ್ಚಿದ್ದರೆ ಆ ಕದಿರಿಗೆ ಹೆಚ್ಚು ಹುರುಪಿರುತ್ತದೆ. ಮಳೆಬಿಲ್ಲಿನಲ್ಲಿ ಕಾಣುವಂತೆ ನೀಲಿ ನೇರಳೆ ಬಣ್ಣಗಳು ಒಂದೆಡೆ ಇದ್ದರೆ ಕೆಂಪು ಕಿತ್ತಳೆಗಳು ಇನ್ನೊಂದೆಡೆ ಇರುತ್ತದೆ. ನೀಲಿ ಬಣ್ಣಕ್ಕೆ ಹೆಚ್ಚು ಸಲದೆಣಿಕೆ/ಕಡಿಮೆ ಅಲೆಯಗಲ ಇರುತ್ತದೆ ಮತ್ತು ಕೆಂಪಿಗೆ ಕಡಿಮೆ ಸಲದೆಣಿಕೆ/ಹೆಚ್ಚು ಅಲೆಯಗಲ ಇರುತ್ತದೆ. ಈ ಎಲ್ಲಾ ಅಲೆಗಳು 3 X 108 m/s ಬಿರುಸಿನಲ್ಲಿ (speed) ಹರಿಯುತ್ತವೆ.

ನೇಸರನ ಬೆಳಕು ಗಾಳಿಪದರದ ಮೂಲಕ ಬರುತ್ತಿದ್ದಂತೆ ಗಾಳಿಪದರದ ಬೇರೆ ಬೇರೆ ವಸ್ತುಗಳೊಡನೆ ಬೆಳಕಿನ ತಿಕ್ಕಾಟ ಏರ್ಪಡುತ್ತದೆ . ಕಸದ ತುಣುಕುಗಳು ಮತ್ತು ನೀರಿನ ಹನಿಗಳು ಬೆಳಕಿನ ಅಲೆಯಗಲಕ್ಕಿಂತ ದೊಡ್ಡದಾಗಿರುವ ಕಾರಣ ಅದಕ್ಕೆ ಡಿಕ್ಕಿ ಹೊಡೆದು ಬೇರೆ ದಿಕ್ಕಿನೆಡೆಗೆ ಸಾಗುತ್ತದೆ. ಬೆಳಕಿನ ಎಲ್ಲಾ ಬಣ್ಣಗಳು ಒಂದೇ ಬಗೆಯಲ್ಲಿ ಸಾಗಿಹೋಗುವುದರಿಂದ ಡಿಕ್ಕಿಯ ಬಳಿಕವೂ ಬೆಳಕಿನ ಬಣ್ಣ ಹಾಗೆಯೇ ಉಳಿಯುತ್ತದೆ. ಹಾಗಾಗಿ ಬಿಳಿ ಬಣ್ಣ ಬಿಳಿಯಾಗಿಯೇ ಇರುತ್ತದೆ.

ಆದರೆ, ಬೆಳಕು ತನ್ನ ಅಲೆಯಗಲಕ್ಕಿಂತ ಚಿಕ್ಕದಾದ ಅಂದರೆ ಆವಿಯ ಅಣುಕೂಟಗಳಿಗೆ (gas molecules) ಡಿಕ್ಕಿ ಹೊಡೆದಾಗ ಬೆಳಕಿನ ಚದುರುವಿಕೆಯಾಗುತ್ತದೆ(scattering). ಬೆಳಕು ಚದುರಿದಾಗ ಅದರೊಳಗೆ ಇರುವ ಬಣ್ಣಗಳೂ ಕೂಡ ಚದುರುತ್ತವೆ. ಆದರೆ ಬೆರಗಿನ ವಿಷಯವೆಂದರೆ ಎಲ್ಲಾ ಬಣ್ಣಗಳು ಒಂದೇ ತೆರನಾಗಿ ಚದುರುವುದಿಲ್ಲ.

ಕಡಿಮೆ ಅಲೆಯಗಲಗಳುಳ್ಳ ಬಣ್ಣಗಳು (ನೀಲಿ,ನೇರಳೆ) ಹೆಚ್ಚು ಚದುರುತ್ತವೆ ಮತ್ತು ಹೆಚ್ಚು ಅಲೆಯಗಲಗಳುಳ್ಳ ಬಣ್ಣಗಳು(ಕೆಂಪು,ಕಿತ್ತಳೆ) ಕಡಿಮೆ ಚದುರುತ್ತವೆ. ಇದನ್ನು ರೇಯ್ಲೀ ಎಂಬಾತ ಮೊದಲು ತೋರಿಸಿಕೊಟ್ಟಿದ್ದರಿಂದ ಇದಕ್ಕೆ ರೇಯ್ಲೀ ಚದುರುವಿಕೆ (Rayleigh Scattering) ಎನ್ನುತ್ತಾರೆ. ಆವಿಯ ಅಣುಕೂಟಗಳು (Molecules) ನೀಲಿ ಮತ್ತು ನೇರಳೆ ಬಣ್ಣಗಳನ್ನು ಸುಳುವಾಗಿ ಹೀರಿಕೊಳ್ಳುತ್ತವೆ. ಆದರೆ ಕೆಂಪು ಮತ್ತು ಕಿತ್ತಳೆಯನ್ನು ಅಷ್ಟು ಸುಳುವಾಗಿ ಹೀರಿಕೊಳ್ಳುವುದಿಲ್ಲ ಮತ್ತು ಅದು ಪದರದ ಮೂಲಕ ಹಾದುಹೋಗಿಬಿಡುತ್ತವೆ.

ಆವಿಯ ಅಣುಕೂಟಗಳು ಹೀಗೆ ಕಡಿಮೆ ಅಲೆಯಗಲದ ಬಣ್ಣಗಳನ್ನು(ನೀಲಿ,ನೇರಳೆ) ಹೀರಿಕೊಂಡ ಬಳಿಕ ಅವು ಎಲ್ಲಾ ದಿಕ್ಕುಗಳಲ್ಲಿ ಚದುರಲು ಮೊದಲಾಗುತ್ತವೆ. ಹೀಗೆ ಎಲ್ಲಾ ದಿಕ್ಕಿನಲ್ಲಿ ಚದರುವ ಕಾರಣ ಬಾನಿನ ಬಣ್ಣ ನೀಲಿಯಾಗಿ ಕಾಣುತ್ತದೆ. ಆದರೆ ನೀಲಿಯೇ ಏಕೆ ನೇರಳೆ ಬಣ್ಣ ಯಾಕಲ್ಲ ಎಂಬ ಪ್ರಶ್ನೆ ನಿಮಗೆ ಬಂದಿರಬಹುದು.

ಮನುಷ್ಯನ ಕಣ್ಣುಗಳು ನೀಲಿ, ಕೆಂಪು ಮತ್ತು ಹಸಿರು ಬಣ್ಣಗಳಿಗೆ ಹೆಚ್ಚು ನಾಟುವ ಹಾಗೆ ಏರ್ಪಾಟಾಗಿವೆ , ಹಾಗಾಗಿ ನೀಲಿ-ನೇರಳೆ ಬಣ್ಣದ ಬೆರೆತ ಇದ್ದರೂ ಕೂಡ ಕಣ್ಣು ಅದನ್ನು ನೀಲಿಯೆಂದೆ ಅರಿಯುತ್ತದೆ . ಹಾಗಾಗಿ ಬಾನು ನಮಗೆ ನೀಲಿಯಾಗಿ ಕಾಣುತ್ತದೆ.

ಇಳಿಸಂಜೆಯ ಹೊತ್ತಿಗೆ ಬಾನು ಕೆಂಪಾಗುವುದನ್ನು ನಾವು ಕಂಡಿರುತ್ತೇವೆ. ಭೂಮಿಯು ತನ್ನ ಸುತ್ತ ತಿರುಗುತ್ತಿದ್ದಂತೆ ಬೆಳಿಗ್ಗೆ ನೇಸರನ ಎದುರಿಗಿದ್ದ ಭೂಮಿಯ ಬದಿಯು ಸಂಜೆಗೆ ನೇಸರನಿಂದ ದೂರ ಸರಿಯುತ್ತದೆ. ಮೇಲಿನ ತಿಟ್ಟದಲ್ಲಿ ಕಾಣುವಂತೆ ಸಂಜೆಯ ಹೊತ್ತಿಗೆ ನೇಸರನ ಕದಿರುಗಳು ಬೆಳಗಿನ ಹೊತ್ತಿನಂತೆ ನೇರವಾಗಿ ಭೂಮಿಯ ಮೇಲೆ ಬೀಳುವುದಿಲ್ಲ. ಅದು ನಾವು ಇರುವ ನೆಲವನ್ನು ತಲುಪಬೇಕಾದರೆ ಬೆಳಗಿನ ಹೊತ್ತಿಗಿಂತ ಹೆಚ್ಚು ದೂರ ಸಾಗಬೇಕಾಗುತ್ತದೆ. ಹೀಗೆ ಸಾಗುವಾಗ ಮೊದಲು ಚದರುವ ಕಡಿಮೆ ಅಲೆಯಗಲದ ನೀಲಿ ಬಣ್ಣವನ್ನು ಸುತ್ತಾವಿ ಆಗಲೇ ಹೀರಿಕೊಂಡಿರುತ್ತದೆ. ಮಿಕ್ಕ ಬಣ್ಣಗಳು ಸುತ್ತಾವಿಯನ್ನು ದಾಟಿ ನಮ್ಮನ್ನು ತಲುಪುತ್ತವೆ. ಈ ಬಣ್ಣಗಳು ಹೆಚ್ಚು ಅಲೆಯಗಲವುಳ್ಳವಾದ್ದರಿಂದ ನಮಗೆ ಸಂಜೆಯ ಬಾನು ಕೆಂಪು ಕಿತ್ತಳೆ ಬಣ್ಣವಾಗಿ ಕಾಣುತ್ತದೆ.