ನೆಲದಾಳದಲ್ಲಿ ಹೊಸ ನೀರು

ಪ್ರಶಾಂತ ಸೊರಟೂರ.

ಈಗ ಕಡಲಿನಲ್ಲಿರುವ ನೀರಿಗಿಂತ ಮೂರು ಪಟ್ಟು ಹೆಚ್ಚಿನ ನೀರು ನೆಲದಾಳದಲ್ಲಿ ದೊರೆತಿದೆ !

ಎಂಬಂತ ಬಿಸಿ ಸುದ್ದಿ ಹಲವು ವರ್ಷಗಳಿಂದ ಜಗತ್ತಿನೆಲ್ಲೆಡೆ ಪಸರಿಸಿತ್ತು. ಹನಿ ನೀರಿಗಾಗಿ ಪರದಾಡುತ್ತಿರುವ ಇಂದಿನ ದಿನಗಳಲ್ಲಿ ಹೊಸದಾಗಿ ದೊರೆತ ಹೇರಳವಾದ ನೀರಿನ ಸೆಲೆ ಎಲ್ಲರನ್ನೂ ಸೆಳೆದಿತ್ತು. ಆದರೆ ಹಾಗೆ ದೊರೆತ ಸೆಲೆಯ ಆಳಕ್ಕೆ ಹೋಗುವುದು ಮತ್ತು ಅಲ್ಲಿಂದ ನೀರೆತ್ತಿ ನೆಲದ ಮೇಲ್ಗಡೆ ತರುವುದು ಈ ಹೊತ್ತಿಗಂತೂ ಆಗದ ಮಾತು ಅನ್ನುವಂತ ವಿಷಯ ಹಲವು ಮಂದಿಯ ಗಮನಕ್ಕೆ ಬರಲಿಲ್ಲವೆನ್ನಬಹುದು.

ಹೊಸ ನೀರಿನ ಸೆಲೆ ಎಟುಕದ ಕನ್ನಡಿಯಲ್ಲಿರುವ ಗಂಟಿನಂತಾದರೂ, ಈ ಹೊಸ ಕಂಡುಹಿಡಿಯುವಿಕೆ ನೆಲದಲ್ಲಿ ಕಡಲುಗಳು ಹೇಗೆ ಉಂಟಾದವು ಅನ್ನುವಂತ ಸಿಕ್ಕಲಾದ ಪ್ರಶ್ನೆಗೆ ಸರಿಯಾದ ಉತ್ತರ ನೀಡಲಿದೆಯೆಂದು ಅರಿಮೆಗಾರರು ಅಂದುಕೊಂಡಿದ್ದಾರೆ. ನೀರಿನ ಈ ಹೊಸ ಸೆಲೆಯತ್ತ ಹೋಗುವ ಮುನ್ನ ನಮ್ಮ ನೆಲದ ಆಳಕ್ಕೆ ಮೊದಲು ಇಳಿಯೋಣ ಬನ್ನಿ.

ನೆಲದ ಮೇಲ್ಮಯಲ್ಲಿ ಕಡಲು, ಬೆಟ್ಟಗಳು ಇರುವುದು ಕಣ್ಣಿಗೆ ಕಾಣಿಸುವಂತದು. ನೆಲದಲ್ಲಿ ನೀರಿನ ಪಾಲು ಮೂರುಪಟ್ಟಿದೆ ಅನ್ನುವುದು ಅದರ ಮೇಲ್ಮಯನ್ನು ತೆಗೆದುಕೊಂಡಾಗಷ್ಟೇ ದಿಟ, ಆದರೆ ಅದರ ಒಡಲಾಳದ ರಚನೆಯನ್ನು ತಿಳಿದುಕೊಂಡಾಗ ಅದರ ಇಡಿಯಾದ ಕಟ್ಟಣೆ ನಮ್ಮ ಅರಿವಿಗೆ ಬರಬಲ್ಲದು. ನೆಲದ ಒಟ್ಟಾರೆ ತೂಕಕ್ಕೆ ಹೋಲಿಸಿದಾಗ ನೀರಿನ ತೂಕ, ಅದರ ಪ್ರಮಾಣ ತುಂಬಾನೇ ಕಡಿಮೆ. ನೆಲದಾಳವು ಮುಖ್ಯವಾಗಿ ಕಬ್ಬಿಣದಂತಹ ಜಲ್ಲಿಯ ವಸ್ತುಗಳಿಂದ ಕೂಡಿದೆ.

ಹಿಂದಿನ ಬರಹವೊಂದರಲ್ಲಿ ನೆಲದ ದುಂಡಗಲವು ಸುಮಾರು 12,756 ಕಿ.ಮೀ. ಮತ್ತು ಅದರ ರಾಶಿಯು (mass) ಸುಮಾರು 5.98 x1024 kg ಇರುವುದನ್ನು ತಿಳಿದುಕೊಂಡಿದ್ದೆವು. ನೆಲದ ಮೇಲ್ಮಯಿಂದ ನೆಲದ ನಡುವು (center) ಸುಮಾರು 12,756/ = 6378 ಕಿ.ಮೀ. ಆಳದಲ್ಲಿದೆ.

ಅದರ ಒಟ್ಟು ರಾಶಿಯಲ್ಲಿ ಕಬ್ಬಿಣವು ಸುಮಾರು 32.1%, ಆಕ್ಸಿಜನ್ 30.1%, ಸಿಲಿಕಾನ್ 15.1%, ಮ್ಯಾಗ್ನೇಸಿಯಂ 13.9%, ಗಂದಕ 2.9%, ನಿಕೆಲ್ 1.8%, ಕ್ಯಾಲ್ಸಿಯಂ 1.5% ಮತ್ತು ಅಲ್ಯುಮಿನಿಯಂ 1.4% ರಷ್ಟಿದೆ. ಕೆಳಗಿನ ತಿಟ್ಟದಲ್ಲಿ ನೆಲದ ಒಟ್ಟಾರೆ ಸೀಳುನೋಟವನ್ನು ತೋರಿಸಲಾಗಿದೆ.

ನೆಲದ ಇಟ್ಟಳವನ್ನು (structure) ತೊಗಟೆ (0-35 km), ಮೇಲ್ ಹೊದಿಕೆ (35-60 km), ಹೊದಿಕೆ (35-2890 km), ಹೊರತಿರುಳು (2890-5150) ಮತ್ತು ಒಳತಿರುಳು (5150-6378 km) ಅಂತಾ ಗುರುತಿಸಲಾಗಿದೆ. ನೆಲದ ಒಳತಿರುಳು ಮತ್ತು ಹೊರತಿರುಳಿನ ಭಾಗ ತುಂಬಾ ದಟ್ಟಣೆ ಹೊಂದಿದ್ದು ಮುಖ್ಯವಾಗಿ ಕರಗಿದ ಕಬ್ಬಿಣದಿಂದ ಕೂಡಿದೆ. ಹೊದಿಕೆಯ ಭಾಗವು ಸಿಲಿಕೇಟ್ ಕಲ್ಲುಗಳಿಂದ ಕೂಡಿದ್ದು ಕಬ್ಬಿಣ ಮತ್ತು ಮ್ಯಾಗ್ನೇಸಿಯಂ ಜಲ್ಲಿಗಳನ್ನು ಒಳಗೊಂಡಿದೆ. ತೊಗಟೆಯ ಭಾಗವು ಕಡಲಾಳ, ಕಲ್ಲುಗಳು, ಜಲ್ಲಿಗಳಿಂದ ಕೂಡಿದೆ.

ನೆಲದ ಆಳದಲ್ಲಿ ತುಂಬಾನೇ ಒತ್ತಡ ಮತ್ತು ಬಿಸುಪಿರುವುದರಿಂದ ಅದರ ಆಳಕ್ಕೆ ಕೆಲವು ಕಿ.ಮೀ. ಗಳಷ್ಟೇ ಮನುಷ್ಯರು ಮಾಡಿದ ಸಲಕರಣೆಗಗಳು ಇಳಿಯಬಲ್ಲವು. ಹಾಗೆ ನೋಡಿದರೆ ಇಲ್ಲಿಯವರೆಗೆ ನೆಲದ ಮೇಲ್ಮಯಿಂದ ಮನುಷ್ಯರಿಗೆ ಕೊರೆಯಲು ಆದ ತೂತಿನ ಆಳ ಬರೀ 12.3 ಕಿ.ಮೀ. (ರಷ್ಯಾ ಕೈಗೊಂಡ ತೂತು ಕೊರೆಯುವ ಹಮ್ಮುಗೆ, 1989). ನೆಲದಾಳದಲ್ಲಿ ಸಲಕರಣೆಗಳನ್ನು ಇಳಿಸಲು ಆಗದಿದ್ದರೂ, ನೆಲದ ಇಟ್ಟಳವನ್ನು ಅರಿಮೆಯ ಇತರ ಚಳಕಗಳನ್ನು ಬಳಸಿ ಅರಿತುಕೊಳ್ಳಲಾಗುತ್ತದೆ. ಅಂತಹ ಅರಿಮೆಯ ಚಳಕದಲ್ಲಿ ಮುಕ್ಯವಾದದ್ದು ನಡುಕದರಿಮೆ (Seismology).

ಮುಖ್ಯವಾಗಿ ನೆಲದ ತೊಗಟೆಯ ಭಾಗದಲ್ಲಿ ಬಿಡುಗಡೆಯಾಗುವ ಹೇರಳವಾದ ಕಸುವಿನಿಂದಾಗಿ ‘ನೆಲನಡುಕಗಳು’ (earthquakes) ಉಂಟಾಗುತ್ತವೆ. ಹೀಗೆ ಉಂಟಾದ ನೆಲನಡುಕಗಳು ಹೊಮ್ಮಿಸುವ ನಡುಕದ ಅಲೆಗಳು (seismic waves), ನೆಲದ ಮೇಲ್ಮಯಿಂದ ಹಿಡಿದು ಅದರ ತಿರುಳಿನ ಭಾಗದವರೆಗೆ ತೂರಬಲ್ಲವು. ನಡುಕದ ಅಲೆಗಳ ಹರಡುವ ಬಗೆ, ಅವುಗಳ ವೇಗ, ನೆಲದ ಇಟ್ಟಳವನ್ನು ಮೇಲೆ ತಿಳಿಸಿರುವಂತೆ ಗುರುತಿಸಲು ನೆರವಾಗಿವೆ. ನಡುಕದ ಅಲೆಗಳು ಬೇರೆ ಬೇರೆ ವಸ್ತುಗಳಲ್ಲಿ ಬೇರೆಯಾದ ವೇಗದಿಂದ ಹರಡುತ್ತವೆ. ಒಣಕಲ್ಲಿನಂತಹ ರಚನೆಯಲ್ಲಿ ಅವುಗಳ ವೇಗ ಬೇರೆಯಾಗಿದ್ದರೆ ನೀರಿನಿಂದ ಕೂಡಿದ ಹಸಿಕಲ್ಲಿನಲ್ಲಿ ವೇಗವು ಬೇರೆಯಾಗಿರುತ್ತದೆ.

ಮುಮ್ಮಲೆಗಳು (Primary/P Waves) ಎಂದು ಗುರುತಿಸಲಾಗುವ ನಡುಕದಲೆಗಳ ಒಂದು ಬಗೆ, ಗಟ್ಟಿಯಾದ ಮತ್ತು ನೀರಿನ ರೂಪದಲ್ಲಿರುವ ವಸ್ತಗಳೆರಡಲ್ಲೂ ಸಾಗಬಲ್ಲವು. ಅದೇ ಇಮ್ಮಲೆಗಳು (Secondary/S Waves) ಎಂಬ ನಡುಕದಲೆಗಳು ಗಟ್ಟಿಯಾದ ವಸ್ತುಗಳಲ್ಲಷ್ಟೇ ಸಾಗಬಲ್ಲವು.

Picture1

ಹಾಗೆನೇ ನೀರಿನ ರೂಪ ಇಲ್ಲವೇ ಅದರ ಅಂಶವನ್ನು ಹೊಂದಿದ ವಸ್ತುಗಳಲ್ಲಿ ಸಾಗುವಾಗ ಮುಮ್ಮಲೆಗಳ ವೇಗ ಬದಲಾಗುವುದು ಅರಕೆಯಿಂದ ತಿಳಿದುಬಂದಿದೆ. ಈ ಅರಿವನ್ನು ಬಳಸಿಕೊಂಡೇ ಇತ್ತೀಚಿಗೆ ನೆಲದಾಳದಲ್ಲಿ ’ನೀರಿದೆ’ ಎಂಬುದನ್ನು ಅಂದಾಜಿಸಲಾಗಿದೆ. ಈಗ ನಮ್ಮ ಈ ಬರಹದ ಮುಖ್ಯ  ವಿಷಯ’ನೆಲದಾಳ’ದಲ್ಲಿ ನೀರಿನತ್ತ ಬಂದಂತಾಯಿತು.

ಅಮೇರಿಕಾದ ನಾರ್ತ್ ವೆಸ್ಟರ್ನ್ ಯೂನಿವರ್ಸಿಟಿಯ ನೆಲದಿರುವರಿಗ (geophysicist) ಸ್ಟೀವ್ ಜಾಕಬ್ಸನ್ (Steve Jacobsen) ಮತ್ತು ನ್ಯೂ ಮೆಕ್ಸಿಕೋ ಯೂನಿವರ್ಸಿಟಿಯ ನಡುಕದಲೆಯರಿಗ (seismologist) ಬ್ರಾಂಡನ್ (Brandon Schmandt) ಅವರು ನಡುಕದರಿಮೆ ಬಳಸಿ, ನೆಲದ ಮೇಲ್ಮೈಯಿಂದ ಸುಮಾರು 660 ಕಿ.ಮೀ. ಆಳದಲ್ಲಿ ನೀರಿನ ಬಿಡಿಕಣಗಳಿದ್ದು, ಅವುಗಳು ರಿಂಗ್‍ವುಡಯ್ಟ್ (Ringwoodite) ಎಂಬ ಹರಳು ರೂಪದಲ್ಲಿರುವ ವಸ್ತುವಿಗೆ ಅಂಟಿಕೊಂಡಿರುವುದಾಗಿ ತಿಳಿಸಿದ್ದಾರೆ.

ರಿಂಗ್‍ವುಡಯ್ಟ್ (ಅದನ್ನು ಕಂಡುಹಿಡಿದ ಅರಿಮೆಗಾರರ ಹೆಸರಿನಿಂದ ಕರೆಯಲಾಗುತ್ತಿದೆ), ನೆಲದಾಳದ ಹೊದಿಕೆಯ ಭಾಗದಲ್ಲಿ ಹೇರಳವಾಗಿ ಇರುವ ವಸ್ತುವೆಂದು ನಡುಕದಲೆಗಳ ಮೂಲಕ ಈ ಮುಂಚೆ ಅರಿಯಲಾಗಿತ್ತು. ರಿಂಗ್‍ವುಡಯ್ಟ್ ಮುಖ್ಯವಾಗಿ  ಕಬ್ಬಿಣ ಮತ್ತು ಮ್ಯಾಗ್ನೇಸಿಯ್ಂ ನಿಂದ ಕೂಡಿದ್ದು, ತನ್ನ ತೂಕದ 2.1% ರಷ್ಟು ನೀರನ್ನು ಹಿಡಿದುಕೊಳ್ಳಬಲ್ಲದು ಅಂತಾನೂ ತಿಳಿಯಲಾಗಿತ್ತು. ಆದರೆ ಇಲ್ಲಿಯವರೆಗೆ ನೆಲದಾಳದ ರಿಂಗ್‍ವುಡಯ್ಟ್ ಹರಳಿನಲ್ಲಿ ನಿಜವಾಗಲೂ ನೀರಿದೆಯೇ ಎಂದು ಗೊತ್ತಾಗಿರಲಿಲ್ಲ.

BlueRingwoodite

(ನೆಲದ ಒಡಲಾಳದ ಹೊದಿಕೆಯ ಭಾಗದಲ್ಲಿ ಕಂಡುಬರುವ ರಿಂಗ್‍ವುಡಯ್ಟ್ ಹರಳು)

ಇಲ್ಲಿಯವರೆಗೆ ಉಂಟಾದ ಸುಮಾರು 500 ನೆಲನಡುಕಗಳ (earthquakes) ಮಾಹಿತಿಗಳನ್ನು ಸ್ಟೀವ್ ಜಾಕಬ್ಸನ್ ಅವರು ಒರೆಗೆಹಚ್ಚಿ ನೋಡಿದಾಗ, ನಡುಕದಲೆಗಳ (seismic waves) ವೇಗ ಸುಮಾರು 660 ಕಿ.ಮೀ. ನೆಲದಾಳಕ್ಕೆ ತಲುಪಿದಾಗಲೆಲ್ಲಾ ಬೇರೆಯಾಗಿರುವುದು ಮತ್ತು ಆ ವೇಗ ಹಸಿ ರೂಪದಲ್ಲಿರುವ ರಿಂಗ್‍ವುಡಯ್ಟ್ ಹರಳುಗಳಿಗೆ ತಾಗಿದಾಗ ಪಡೆಯುವ ವೇಗಕ್ಕೆ ಸಾಟಿಯಾಗಿದೆ ಎಂದು ತೋರಿಸಿದ್ದಾರೆ. ಇದಕ್ಕಾಗಿ ಅವರು ಮತ್ತು ಬ್ರಾಂಡನ್ ತಮ್ಮ ಅರಕೆಮನೆಯಲ್ಲಿ ಹಸಿ ಮತ್ತು ಒಣ ರಿಂಗ್‍ವುಡಯ್ಟ್ ಹರಳುಗಳಿಗೆ ನಡುಕದಲೆಗಳನ್ನು ತಾಗಿಸಿದಾಗ ದೊರೆತ ವೇಗ ಮತ್ತು ನೆಲನಡುಕಗಳು ನೀಡಿದ ಮಾಹಿತಿಯನ್ನು ತಾಳೆಹಾಕಿ ಈ ನಿಲುವಿಗೆ ಬಂದಿದ್ದಾರೆ.

ಹೀಗೆ ನೆಲದಾಳದಲ್ಲಿ ಇಳಿಯದೇ ಅರಿಮೆಯ ಚಳಕಗಳನ್ನು ಬಳಸಿ ನೆಲದ ಒಡಲಾಳದಲ್ಲಿ ನೀರಿರುವುದನ್ನು ಅರಿಮೆಗಾರರು ತೋರಿಸಿದಂತಾಗಿದೆ. ನಮಗೆ ಕಂಡಿರುವ ಈ ಹೊಸ ನೀರು ಬಳಕೆಗೆ ಎಟುಕದಂತಿದ್ದರೂ, ನಮ್ಮ ನೆಲದ ಮೇಲ್ಮೈಯಲ್ಲಿ ಉಂಟಾಗಿರುವ ಕಡಲುಗಳ ಹುಟ್ಟಿನ ಕತೆ ಮತ್ತು ಒಟ್ಟಾರೆಯಾಗಿ ನೆಲದ ರಚನೆಯ ಬಗ್ಗೆ ನಮಗೆ ಸಾಕಷ್ಟು ತಿಳುವಳಿಕೆಯನ್ನು ಮುಂದಿನ ದಿನಗಳಲ್ಲಿ ನೀಡಲಿದೆ.

(ಮಾಹಿತಿ ಮತ್ತು ತಿಟ್ಟ ಸೆಲೆಗಳು: www.usatoday.com, scitechdaily.comwikipedia.org)

ಕರೆಂಟ್ ಶಾಕ್ – ಏನಿದರ ಹಿನ್ನೆಲೆ?

ಹರ್ಷಿತ್ ಮಂಜುನಾಥ್.

electric shock

ನೀವೊಂದು ಗಾದೆ ಕೇಳಿರಬಹುದು.

ಬಟ್ಟೆ ಮುಳ್ಳಿನ ಮೇಲೆ ಬಿದ್ದರು, ಮುಳ್ಳೇ ಬಟ್ಟೆಯ ಮೇಲೆ ಬಿದ್ದರೂ ಹರಿಯುವುದು ಬಟ್ಟೆಯೇ!

ಈ ಗಾದೆಗೂ ಮಾನವನಿಗೂ ಮಿಂಚುಹೊಡೆತಕ್ಕೂ (Electric shock) ತುಂಬಾ ಹೊಂದಾಣಿಕೆಯಿದೆ. ಅಂದರೆ ಮನುಷ್ಯನ ಮಯ್ಯಿಗೆ ಮಿಂಚು ತಗಲಿದರೂ, ಮಿಂಚಿಗೆ ಮಯ್ಯಿ ತಗುಲಿದರೂ ಮಿಂಚುಹೊಡೆತಗಳು ಅನುಭವವಾಗುವುದು ಮನುಷ್ಯನಿಗೆ.  ಮಯ್ ತೊಗಲು, ಹುರಿಕಟ್ಟು(Muscle), ಕೂದಲು ಸೇರಿದಂತೆ ಮನುಷ್ಯನ ಅಂಗಗಳು ಮಿಂಚಿನ ಹರಿವಿಗೆ ತಗಲುವುದರಿಂದ ಮಿಂಚುಹೊಡೆತಗಳು ಏರ್ಪಡುತ್ತವೆ.

ಸಾಮಾನ್ಯವಾಗಿ ಮನುಷ್ಯನ ಗಮನಕ್ಕೆ ಬರಬಲ್ಲ ಮಿಂಚು, ಮಿಂಚಿನ ನೇರ ಹರಿವು(Direct current) ಅತವಾ ಬದಲಿ ಹರಿವು (Alternate current) ಮತ್ತು ಸಲದೆಣಿಕೆ(Frequency)ಯನ್ನು ನೆಚ್ಚಿಕೊಂಡಿರುತ್ತದೆ. ಆದರೆ ಕೆಲವೊಮ್ಮೆ ಸಣ್ಣ ಪ್ರಮಾಣದ ಮಿಂಚು ಮನುಷ್ಯನ ಗಮನಕ್ಕೆ ಬಾರದೆಯೂ ಇರಬಹುದು. ಅಷ್ಟಕ್ಕೂ ಮಯ್ಯಿಗೆ ಮಿಂಚು ತಗುಲಿದೊಡನೆ ಮಯ್ಯಿ ಮಿಂಚನ್ನು ಏಕೆ ಸೆಳೆದುಕೊಳ್ಳುತ್ತದೆ? ಮಿಂಚು ಮನುಷ್ಯನ ಮಯ್ಯ ಮೇಲೆ ಹರಿದಾಡಲು ನೆರವಾಗಬಲ್ಲ ಅಂಶಗಳೇನು? ಮತ್ತು ಮಿಂಚೊಡೆತಗಳು ಮನುಷ್ಯನ ಬದುಕಿಗೆ ಹೇಗೆ ಕುತ್ತು ತರುತ್ತವೆ? ಎಂಬುದನ್ನು ಮುಂದೆ ತಿಳಿಯೋಣ.

ಮನುಷ್ಯನ ಮಯ್ಯಿಗೆ ಮಿಂಚು ತಗಲಿದೊಡನೆ ಮಯ್ಯಿ ಮಿಂಚನ್ನು ಸೆಳೆದುಕೊಳ್ಳಲು ಮುಕ್ಯ ಕಾರಣ ರಾಸಾಯನಿಕ ಕಸುವು (Chemical energy). ಇದು ಮಯ್ಯಿಯ ಒಳಗಡೆ ಏರ್ಪಡುವ ಸೀರಕೂಟಗಳು (Atoms)  ಮತ್ತು ಅಣುಕೂಟಗಳ (Molecules) ಪ್ರತಿಕ್ರಿಯೆಯಿಂದ (Reactions) ಏರ್ಪಡುತ್ತದೆ.

  • ನಾವು ಸೇವಿಸುವ ಕೆಲವು ಆಹಾರ ಹೊಟ್ಟೆಯೊಳಗೆ ಕರಗುವ ಹೊತ್ತಿನಲ್ಲಿ ಆಹಾರಗಳಲ್ಲಿರುವ ಅಣುಕೂಟಗಳು ಚಿಕ್ಕ ಚಿಕ್ಕ ಅಣುಕೂಟಗಳಾಗಿ ಬೇರ್ಪಡುತ್ತವೆ. ಈ ಅಣುಕೂಟಗಳು ಮನುಷ್ಯನ  ಮಯ್ಯೊಳಗೆ ಉಸಿರುಗಾಳಿ(O2-Oxygen), ಸೋಡಿಯಂ (Na-Sodium), ಪೊಟ್ಯಾಶಿಯಂ  (K-Potassium), ಮತ್ತು ಬೇರುಸುಣ್ಣ(Ca-Calcium) ನಂತಹ ಬೇರಡಕಗಳನ್ನು (Elements) ಕಟ್ಟಿಕೊಡುತ್ತದೆ.
  • ಅಲ್ಲದೇ ಇವೆಲ್ಲಕ್ಕೂ ಅದರದ್ದೇ ಆದ ಮಿಂಚಿನ ಹುರುಪು (Electrical charge) ಇರುತ್ತದೆ. ಅಂದರೆ ಇವುಗಳಲ್ಲಿ ಗೊತ್ತುಮಾಡಿದ ಎಣಿಕೆಯ ಕೊಡುವಣಿಗಳು (Protons), ನೆಲೆವಣಿಗಳು (Neutrons) ಮತ್ತು ಕಳೆವಣಿಗಳು (Electrons) ಇರುತ್ತವೆ. ಇಂತಹ ಮಿಂಚಿನ ಹುರುಪುಗಳು ಕೂಡು-ಹುರುಪು (Positive charge) ಆಗಿರಲೂಬಹುದು ಅತವಾ ಕಳೆ-ಹುರುಪು(Negative charge) ಆಗಿರಲೂಬಹುದು, ಒಟ್ಟಿನಲ್ಲಿ ಇವು ಅಣುಕೂಟಗಳೊಂದಿಗೆ ಪ್ರತಿಕ್ರಿಯಿಸುತ್ತದೆ.
  • ಇಂತಹ ಕ್ರಿಯೆಯನ್ನು ಅಣು ಕೂಡಿಕೆ (Nuclear fusion) ಎನ್ನುವರು, ಮತ್ತು ಈ ಪ್ರಕ್ರಿಯೆಗಳು ಮಿಂಚು ಹರಿಯಲು ಬೇಕಾದ ಕಸುವನ್ನು ಹುಟ್ಟುಹಾಕುತ್ತದೆ.

ಹೀಗೆ ಮಿಂಚು ಮಯ್ಯ ಒಳಗಡೆಗೆ ಹರಿಯಲು ಬೇಕಾದ ಅಂಶಗಳು ಮಯ್ಯಲ್ಲಿರುವುದರಿಂದ ಮಿಂಚು ಮಯ್ಯೊಳಗೆ ಹರಿದು ಮಿಂಚೊಡೆತದ ಅರಿವು ನಮಗಾಗುತ್ತದೆ. ಇಂತಹ ಮಿಂಚುಹೊಡೆತಗಳು ಸಾವು ತರಲೂಬಹುದು. ಹೀಗೆ ಮಿಂಚಿನಿಂದಾಗುವ ಸಾವನ್ನು ಮಿಂಮಡಿತ (Electrocution) ಎನ್ನುವರು. ಆದರೆ ನಿಮಗೆ ತಿಳಿದಿರಲಿ, ಹೆಚ್ಚಿನ ಮಿಂಚೊಡೆತದ ಸಾವುಗಳು ಮಿಂಚಿನ ಬದಲಿ ಹರಿವಿನಿಂದ ಆಗುತ್ತದೆ. ಮತ್ತು ಹೆಚ್ಚಾಗಿ 500 ವೋಲ್ಟ್ ಗಿಂತಲೂ ಕಡಿಮೆ ಹರಿವಿನಿಂದ ಆಗುತ್ತದೆ. ಅಂದ ಮಾತ್ರಕ್ಕೆ ಹೆಚ್ಚು ವೋಲ್ಟ್ ಇರುವ ಮಿಂಚೊಡೆತ ಅಪಾಯಕಾರಿಯಲ್ಲ ಎಂದಲ್ಲ. ಇಲ್ಲಿ ಮನುಷ್ಯನ ಮಯ್ಯಲ್ಲಿರುವ ತಡೆತ(Resistance) ಹೆಚ್ಚಿನ ಪಾತ್ರವಹಿಸುತ್ತದೆ.

ಅಂದರೆ ಮಯ್ಯ ಒಣಬಾಗಕ್ಕೆ ಮಿಂಚು ತಗುಲಿದರೆ ಮಯ್ಯೊಳಗೆ ಹರಿಯಬಲ್ಲ ಮಿಂಚಿನ ಸಾಧ್ಯತೆಗಿಂತ, ತಂಪಿನ ಭಾಗಕ್ಕೆ ಮಿಂಚು ತಗುಲಿದರೆ ಮಿಂಚೊಡೆತ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಕಾರಣ ಒಣಭಾಗಕ್ಕೆ ಹೆಚ್ಚಿನ ತಡೆತವಿರುತ್ತದೆ. ಹಾಗಾಗಿ ಇದು ಅಷ್ಟು  ಬೇಗನೆ ಮಿಂಚನ್ನು ತನ್ನೊಳಗೆ ಬಿಟ್ಟುಕೊಳ್ಳುವುದಿಲ್ಲ. ಆದರೆ ತಂಪಿರುವ ಭಾಗಕ್ಕೆ ತಡೆತ ಕಡಿಮೆ ಇರುವುದರಿಂದ ಬೇಗನೆ ಮಿಂಚು ಮಯ್ಯೊಳಗೆ ಹರಿಯುತ್ತದೆ. ಮಿಂಚು ಮನುಷ್ಯನ ಮಯ್ಯ ಯಾವುದೇ ಬಾಗಕ್ಕೆ ತಾಕಿದರೂ ಆ ಭಾಗವನ್ನು ಹಾನಿಗೊಳಿಸುತ್ತದೆ. ಹಾಗಾಗಿ ಮಿಂಚೊಡೆತದಿಂದ ಗಾಯಗಳಾಗುವುದು ಸಹಜ.

ಆದರೆ ಇಲ್ಲಿ ನಾವು ಕೆಲವು ವಿಷಯಗಳನ್ನು ಗಮನಿಸಬೇಕು.

  • ಮಿಂಚೊಡೆತ ನಡೆದಾಗ ಎಷ್ಟು ಆಂಪ್ (Amp) ಮಿಂಚು ಒಳಹರಿವಾಗಿದೆ.
  • ಮಯ್ಯಲ್ಲಿ ಮಿಂಚು ಹರಿದಾಡುವ ದಾರಿ
  • ಮಯ್ಯಿ ಮಿಂಚಿಗೆ ಸೋಕಿರುವ ಒಟ್ಟು ಹೊತ್ತು.

ಮಿಂಚೊಡೆತದಿಂದ ಮಯ್ಯಲ್ಲಿ ಆಗಬಹುದಾದ ಅರಿದಾದ (important) ತೊಂದರೆಗಳೆಂದರೆ,
i. ಮಯ್ ಸುಡುವಿಕೆ (burns): ಮಿಂಚಿನ ಹರಿವಿಗೆ  ಮಯ್ ಒಡ್ಡುವ ತಡೆತದಿಂದಾಗಿ (resistance) ಹೊಮ್ಮುವ ಬಿಸುಪು (heat) ಗೂಡುಕಟ್ಟುಗಳನ್ನು (tissues) ಸುಡುತ್ತದೆ.
ii. ಗುಂಡಿಗೆಯ ತೊರೆಗೋಣೆಗಳಏರ್ಪಡಿತವನ್ನು ಉಂಟುಮಾಡುತ್ತದೆ (ventricular fibrillation).
iii. ಮಿಂಚು ತನ್ನ ಹರಿವಿನ ಹಾದಿಯಲ್ಲಿ ಬರುವು ನರಗಳಿಗೂ ಹಾನಿಯನ್ನುಂಟು ಮಾಡುವ ಅಳವನ್ನು ಹೊಂದಿದೆ.

ಮಿಂಚೊಡೆತದಿಂದ ಮಯ್ಯಲ್ಲಿ ಉಂಟಾಗುವ ಏರು-ಪೇರುಗಳು ಮನುಷ್ಯರನ್ನು ಸಾವಿನ ದವಡಿಗೂ ನೂಕಬಹುದು. ಹೀಗೆ ಮಿಂಚೊಡೆತದಿಂದ  ಆಗುವು ಸಾವನ್ನು ‘ಎಲೆಕ್ಟ್ರಿಕ್ಯೂಶನ್’ ಎಂದು ಹೇಳಲಾಗುತ್ತದೆ. ಕನ್ನಡದಲ್ಲಿ ಇದನ್ನು ‘ಮಿಂಮಡಿತ’ ಎಂದು ಹೇಳಬಹುದು. ‘ಎಲೆಕ್ಟ್ರಿಕ್ಯೂಶನ್’ ಪದವನ್ನು 1890 ರಲ್ಲಿ ಮೊದಲಸಲ ಬಳಸಲಾಯಿತು. ಆ ಹೊತ್ತಿನಲ್ಲಿ ಮಿಂಚನ್ನು ಬಳಸಿ ಕೈದಿಗಳನ್ನು ಕೊಲ್ಲುತ್ತಿದ್ದ ಬಗೆಯನ್ನಷ್ಟೇ ‘ಎಲೆಕ್ಟ್ರಿಕ್ಯೂಶನ್’ ಎಂದು ಕರೆಯುತ್ತಿದ್ದರು. ಮುಂದೆ ಮಿಂಚಿನ ಕೆಟ್ಟಾಗುಹಗಳಿಂದ (accident) ಉಂಟಾಗುವ ಸಾವುಗಳಿಗೂ ‘ಎಲೆಕ್ಟ್ರಿಕ್ಯೂಶನ್’ ಪದವನ್ನು ಬಳಸಲಾರಂಬಿಸಿದರು.

(ತಿಟ್ಟಸೆಲೆ: dawsonpower.com)

3-Phase ಕರೆಂಟ್ ಅಂದರೇನು?

ಪ್ರಶಾಂತ ಸೊರಟೂರ.

3 Phase

3 ಫೇಸ್ ಕರೆಂಟ್ ಕುರಿತು ಒಂಚೂರು ಸರಳವಾಗಿಸಿ ಹೇಳುವ ಪ್ರಯತ್ನವಿದು (ಪಠ್ಯಪುಸ್ತಕದ ಹೊರತಾಗಿ ಸರಳವಾಗಿ ತಿಳಿಸುವ ಪ್ರಯತ್ನ).

1) 3 ಬೇರೆ ಬೇರೆಯಾದ ತಂತಿಗಳನ್ನು ಬಳಸಿ ಕರೆಂಟ್ ಸಾಗಿಸುವುದಕ್ಕೆ 3 ಫೇಸ್ (ಹಂತ) ಅನ್ನುತ್ತಾರೆ. ಅಂದರೆ 1 ಫೇಸ್ನಲ್ಲಿ ಕರೆಂಟ್ ಸಾಗಿಸಲು 1 ತಂತಿ  ಬೇಕಾದರೆ 10 ಫೇಸ್ಗೆ 10 ತಂತಿಗಳು ಬೇಕು. ಹಾಗಾದರೆ ಫೇಸ್ ಅಂದರೇನು? ಮುಂದೆ ತಿಳಿದುಕೊಳ್ಳೋಣ.

2) ಕರೆಂಟ್ ಅಲೆಯ ರೂಪದಲ್ಲಿ ಹೊಮ್ಮುತ್ತದೆ. ಕೆರೆಯಲ್ಲಿ ಕಲ್ಲು ಎಸೆದಾಗ ಚಿಕ್ಕ ತೆರೆಯ ಅಲೆಗಳು ಹೇಗೆ ಹೊಮ್ಮುವವೋ ಹಾಗೆ ಕರೆಂಟ್ ಕೂಡಾ ಅಲೆಗಳಂತೆ ಸಾಗುತ್ತದೆ. ಕಲ್ಲು ತಾಕಿದ ಸ್ಥಳದಿಂದ ಅಲೆಗಳು ಎಲ್ಲ ಕಡೆ  ಹರಡುವುದನ್ನೂ ನೀವು ಗಮನಿಸಿರಬಹುದು. ಈಗ ಅದೇ ಅಲೆಗಳು ಒಂದು ಕೊಳವೆಯಲ್ಲಿ ಸಾಗಿದರೆ ಹೇಗಿರುತ್ತೆ ಅನ್ನುವುದನ್ನು ಊಹಿಸಿಕೊಳ್ಳಿ ಹೀಗೆನೇ ಕರೆಂಟ್ ಕೂಡಾ ಅಲೆಗಳಂತೆ ಒಂದು ತಂತಿಯಲ್ಲಿ ಏರಿಳಿತದೊಂದಿಗೆ ಸಾಗುತ್ತದೆ. ಆದರೆ ನೀರಿನ ಅಲೆಗಳಿಗೆ ಹೋಲಿಸಿದಾಗ ಕರೆಂಟ್ ಅಲೆಗಳ ಏರಿಳಿತ ತುಂಬಾನೇ ಹೆಚ್ಚಾಗಿರುತ್ತದೆ. ನಮ್ಮ ಮನೆಗೆ ತಲುಪುವ ಕರೆಂಟ್ ಈ ತರಹದಲ್ಲಿ ಪ್ರತಿ ಸೆಕೆಂಡಿಗೆ 50 ಸಲದ ಏರಿಳಿತ ಹೊಂದಿರುತ್ತದೆ! ಇದಕ್ಕೆ ಸಲದೆಣಿಕೆ (frequency) ಅನ್ನುತ್ತಾರೆ. ಮೀಟರಗಳ ಮೇಲೆ 50 Hz ಅಂತಾ ಬರೆದಿರುವುದನ್ನು ನೀವು ಗಮನಿಸಿರಬಹುದು ಅದೇ ಈ  ಸಲದೆಣಿಕೆ (frequency). ಮೇಲೆ ತಿಳಿಸಿದಂತೆ ಕರೆಂಟ್ ಏರು-ಇಳಿತದೊಂದಿಗೆ ಸಾಗುತ್ತದೆ. ಏರಿಕೆಯ ಕೊನೆಯಲ್ಲಿ, ಎಲ್ಲಕ್ಕಿಂತ ಹೆಚ್ಚಿನ ಕರೆಂಟ್ ಇದ್ದರೆ ಇಳಿತದ ಕೊನೆಯಲ್ಲಿ ಕರೆಂಟ್ ಎಲ್ಲಕ್ಕಿಂತ ಕಡಿಮೆಯಿರುತ್ತದೆ. ಈ ಏರು-ಇಳಿತದಲ್ಲಿ ಕರೆಂಟಿನ ಯಾವುದೇ ಹಂತವನ್ನು ‘ಫೇಸ್’ ಅಂತಾ ಕರೆಯಲಾಗುತ್ತದೆ.

3) ಇದಕ್ಕೊಂದು ಉದಾಹರಣೆಯನ್ನು ತೆಗೆದುಕೊಳ್ಳೋಣ. ಚಂದ್ರ ಅಮವಾಸ್ಯೆಯಿಂದ ಹುಣ್ಣಿಮೆವರೆಗೆ ದೊಡ್ಡದಾಗುವಂತೆ ಕಾಣಿಸಿದರೆ ಹುಣ್ಣಿಮೆಯಿಂದ ಅಮವಾಸ್ಯೆಯೆಡೆಗೆ ಸಾಗಿದಾಗ ಚಿಕ್ಕದಾಗುವಂತೆ ಕಾಣಿಸುತ್ತಾನೆ. ಹುಣ್ಣಿಮೆಯ ತುಂಬು ಚಂದಿರ ಮತ್ತು ಅಮವಾಸ್ಯೆಯ ಮರೆಯಾದ ಚಂದ್ರನ ನಡುವಿನ ದಿನಗಳಲ್ಲಿ ನಮಗೆ ಚಂದ್ರನ ಹಲವು ಹಂತಗಳು ಕಾಣಿಸುತ್ತವೆ. ಒಮ್ಮೆ ಚಂದ್ರ ಅರೆ (1/2) ಚಂದ್ರನಾದರೆ ಇನ್ನೊಮ್ಮೆ ಮುಕ್ಕಾಲು (3/4) ಚಂದ್ರನಂತೆ ಕಾಣುತ್ತಾನೆ. ಇದನ್ನೇ ‘ಹಂತ’ ಇಲ್ಲವೇ ಫೇಸ್ ಅಂತಾ ಕರೆಯೋದು! ಕರೆಂಟಿನ್ ಏರು-ಇಳಿತದಲ್ಲಿರುವ ಹಂತ/ಫೇಸ್.

4) ಈಗ, ಒಂದಕ್ಕೊಂದು ಜೋಡಿಸಿರದ 2 ತಂತಿಗಳಿವೆ ಅಂದುಕೊಳ್ಳಿ. ಅವುಗಳಲ್ಲಿ ಹರಿಯುವ ಕರೆಂಟ್ ಎರಡರಲ್ಲೂ ಒಂದೇ ಹಂತದಲ್ಲಿ (ಫೇಸ್) ಇರಲು ಸಾಧ್ಯವೇ ? ಅಂದರೆ ಒಂದು ತಂತಿಯಲ್ಲಿ ಕರೆಂಟ್ ಏರಿಕೆಯ ತುದಿಯಲ್ಲಿದ್ದರೇ ಎರಡನೇಯ ತಂತಿಯಲ್ಲೂ ಕರೆಂಟ್ ಅದೇ ಹಂತದಲ್ಲಿ ಇರಲು ಸಾಧ್ಯವೇ ? ಹಾಗೊಮ್ಮೆ ಇದ್ದರೆ ಅದು ಕಾಕತಾಳಿಯವಷ್ಟೇ. ಅಂದರೆ 10 ಬೇರ್ಪಟ್ಟ ತಂತಿಗಳನ್ನು ತೆಗೆದುಕೊಂಡರೆ ಅವುಗಳಲ್ಲಿ ಹರಿಯುವ ಕರೆಂಟಿನ ಹಂತ (ಫೇಸ್) ಬೇರೆ ಬೇರೆಯಾಗಿರುತ್ತದೆ. ಒಂದರಲ್ಲಿ ಕರೆಂಟ್ ಏರಿಕೆಯಾಗುತ್ತಿದ್ದರೆ ಇನ್ನೊಂದರಲ್ಲಿ ಇಳಿಕೆಯಾಗುತ್ತಿರಬಹುದು, ಮತ್ತೊಂದರಲ್ಲಿ ಇವೆರಡರ ನಡುವಿನ ಯಾವುದೇ ಹಂತದಲ್ಲಿರಬಹುದು.

5) ಆಯಿತು! ಈಗ ಈ ಹಂತ/ಫೇಸ್ ನಮಗೆ ಹೇಗೆ ನೆರವಾಗುತ್ತದೆ ಎಂದು ತಿಳಿಯಬೇಕಲ್ಲ! ಕರೆಂಟ್ ಯಾವ ರೀತಿಯಲ್ಲಿ ಕೆಲಸ ಮಾಡುತ್ತದೆ ಅಂತಾ ಒಮ್ಮೆ ನೆನಪಿಸಿಕೊಳ್ಳೋಣ. ಅದೊಂದು ಶಕ್ತಿಯ ಪೆಟ್ಟು/ಹೊಡೆತ ಇದ್ದಂಗೆ. ಗಾಡಿಯನ್ನು ಶುರುಮಾಡಲು ‘ಕಿಕ್’ ಹೊಡೆಯುತ್ತಿವಲ್ಲ ಹಾಗಿರುವ ಪೆಟ್ಟು/ಹೊಡೆತ ಅದು. ಮೇಲೆ ನೋಡಿದಂತೆ ಕರೆಂಟಿನದು ಪ್ರತಿ ಸೆಕೆಂಡಿಗೆ 50 ಹೊಡೆತ/ಪೆಟ್ಟುಗಳು. 1 ಫೇಸ್ ಬಳಸಿ ಈ ಬಗೆಯ ಕರೆಂಟ್ ಪೆಟ್ಟುಗಳಿಂದ ಚಿಕ್ಕದಾದ ಮೋಟಾರ್‍ ನಡೆಸಬಹುದು ಆದರೆ ಅದೇ ಗದ್ದೆಯಲ್ಲಿ ಬೇಕಾದ 10 HP ಯಷ್ಟು ದೊಡ್ಡದಾದ ಪಂಪ್ ನಡೆಸಲು ಹೆಚ್ಚಿನ ಕಸುವು ಬೇಕು. ಇಂತಲ್ಲಿ 1 ತಂತಿಯಿಂದ ಹೊರಡುವ ಕರೆಂಟಿನ ಪೆಟ್ಟುಗಳನ್ನು ಕೊಡುವುದಕ್ಕಿಂತ 2-3 ತಂತಿಗಳಲ್ಲಿ ಕರೆಂಟ್ ಹರಿಸಿ ಪೆಟ್ಟುಗಳನ್ನು ಕೊಟ್ಟರೆ ಪಂಪನ್ನು ಸುಲಬವಾಗಿ ಓಡಿಸಬಹುದು. ಒಂದು ಗಾಲಿಯನ್ನು ಒಬ್ಬರೇ ತಿರುಗಿಸುವುದಕ್ಕಿಂತ ಹಲವು ಜನರು ಒಂದಾಗಿ ಸುಲಭವಾಗಿ ತಿರುಗಿಸಿದಂತೆಯೇ ಇದು.

6) ಹಾಗಾಗಿ, ದೊಡ್ಡ ಸಲಕರಣೆಗಳನ್ನು ನಡೆಸಲು 1 ಫೇಸ್ ಕರೆಂಟಗಿಂತ 3 ಫೇಸ್ ಕರೆಂಟ್ ಒಳ್ಳೆಯದು. ಹಾಗಿದ್ದರೆ 4 ಇಲ್ಲವೇ 5 ಫೇಸಗಳನ್ನು ಏಕೆ ಬಳಸಬಾರದು ಅನ್ನುವ ಪ್ರಶ್ನೆ ಹಲವರಲ್ಲಿ ಮೂಡಬಹುದು. ಇದಕ್ಕೆ ಉತ್ತರ ಸರಳವಾಗಿದೆ 3 ಫೇಸಗಳಲ್ಲಿ ಕಡಿಮೆ ದುಡ್ಡಿನಿಂದ ಮಾಡಬಹುದಾದುಕ್ಕೆ 4-5 ಫೇಸ್ಗಳನ್ನು ಯಾಕೇ ಬಳಸಬೇಕು, ಅಲ್ಲವೇ ?! ಆದ್ದರಿಂದ ಅಗತ್ಯವಿರುವ ಎಲ್ಲೆಡೆ  ಕಡಿಮೆ ವೆಚ್ಚದ 3 ಫೇಸ ಕರೆಂಟನ್ನೇ ಬಳಸಲಾಗುತ್ತದೆ.

7) ಗಮನಿಸಿ ನೋಡಿ ನಿಮ್ಮ ಅಕ್ಕಪಕ್ಕದಲ್ಲಿರುವ ಟ್ರಾನ್ಸ್ಪಾರ್ಮರ್ ಇಂದ ಕರೆಂಟ್ 3 ತಂತಿಯಲ್ಲಿ ಹೊರಬರುತ್ತದೆ. ಅಂದರೆ ಅದು 3 ಫೇಸ್ ಆಗಿರುತ್ತದೆ. ಅಲ್ಲಿಂದ ಕರೆಂಟನ್ನು ಕಂಬವೊಂದಕ್ಕೆ ಸಾಗಿಸಿ, ಮುಂದೆ ಎಲ್ಲರ ಮನೆಗೆ ನೀಡಲಾಗುತ್ತದೆ. ಕರೆಂಟ್ ಕಂಬದಿಂದ ಹೊರಡುವ ತಂತಿಗಳ ಮೇಲೆ ಇಲ್ಲವೇ ಬದಿಯಲ್ಲಿ ಇನ್ನೊಂದು ಹೆಚ್ಚಿನ ತಂತಿ ಇರಬಹುದು ಇದಕ್ಕೆ ನ್ಯೂಟ್ರಲ್ ಇಲ್ಲವೇ ಗ್ರೌಂಡ್ (ನೆಲ) ತಂತಿ ಅನ್ನುತ್ತಾರೆ. ಇದು ಕರೆಂಟಿನಲ್ಲಿ ಏರಿಳಿತವಾದಾಗ ಹೆಚ್ಚಿನ ಕರೆಂಟನ್ನು ನೆಲಕ್ಕೆ ಸಾಗಿಸಿ ತೊಂದರೆಯಿಂದ ಕಾಪಾಡುತ್ತದೆ.

8) ಹೀಗೆ, ದೊಡ್ಡ ಸಲಕರಣೆಗಳಿಗೆ ಹೆಚ್ಚಿನ ಕರೆಂಟ್ ಬೇಕಾದಾಗ ಎಲ್ಲ 3 ತಂತಿಗಳಿಂದ ಕರೆಂಟನ್ನು ಪಡೆಯಲಾಗುತ್ತದೆ. ಅದೇ ನಿಮ್ಮ ಮನೆಯಲ್ಲಿ ಚಿಕ್ಕ ಸಲಕರಣೆಗಳಿದ್ದು ಅವುಗಳಿಗೆ ಕರೆಂಟ್ ಕಡಿಮೆ ಬೇಕಾಗಿದ್ದರೆ 3 ತಂತಿಗಳಲ್ಲಿ ಬರೀ 1 ತಂತಿಯಿಂದ ಕರೆಂಟ್ ಪಡೆದರೂ ಸಾಕು. ಅದರಿಂದಲೇ ಟ್ಯೂಬಲಯ್ಟ್, ಫ್ಯಾನ್, ಮಿಕ್ಸರ್‍ ಮುಂತಾದ ಸಲಕರಣೆಗಳನ್ನು ನಡೆಸಬಹುದು.

ನಿಮ್ಮಲ್ಲಿ ಒಂಚೂರು ಹೆಚ್ಚಿಗೆನೇ ಕರೆಂಟಿನಿಂದ ನಡೆಯುವ ಉಪಕರಣಗಳಿದ್ದರೆ ಆಗ 2 ತಂತಿಗಳಿಂದ ನಿಮ್ಮ ಮನೆಗೆ ಕರೆಂಟನ್ನು ಒದಗಿಸಲಾಗುತ್ತದೆ. ಟ್ಯೂಬಲಯ್ಟನಂತಹ ಬೆಳಕಿನ ಸಲಕರಣೆಗಳಿಗೆ ಒಂದು ತಂತಿಯಾದರೆ, ಕರೆಂಟ್ ಒಲೆಯಂತಹ ಬಿಸಿ ಮಾಡುವ ಸಲಕರಣೆಗಳನ್ನು ನಡೆಸಲು ಎರಡನೆಯದು.

ಸರಿ ಹಾಗಾದ್ರೆ, ಮುಂದಿನ ಸರತಿ ಕರೆಂಟ್ ಕಂಬದಲ್ಲಿ 3 ತಂತಿಗಳು ಏಕಿವೆ ಅನ್ನುವ ಪ್ರಶ್ನೆಯನ್ನು ಯಾರಾದರೂ ನಿಮಗೆ ಕೇಳಿದರೆ ನೀವೇ ಅದಕ್ಕೆ ಉತ್ತರಿಸಬಲ್ಲಿರಿ, ಅಲ್ಲವೇ !

ಇಂಗ್ಲಿಷ್ ಮೂಲ: ‘ಬೆಸ್ಕಾಂ ಮಣಿವಣ್ಣನ್’.

ಕನ್ನಡಕ್ಕೆ: ಪ್ರಶಾಂತ ಸೊರಟೂರ

ವೋಲ್ಟೆಜ್ ಎಂಬ ಒತ್ತಡ, ಕರೆಂಟ್ ಎಂಬ ಹರಿವು

ಪ್ರಶಾಂತ ಸೊರಟೂರ.

ಕಳೆದ ಕೆಲವು ಬರಹಗಳಲ್ಲಿ (1,2,3) ಮೊದಲ ಹಂತದಿಂದ ಕರೆಂಟ್ ಕುರಿತು ತಿಳಿದುಕೊಂಡೆವು. ಈ ಬರಹದಲ್ಲಿ ನಮ್ಮ ಸುತ್ತಮುತ್ತ ಕಾಣುವ ವಿಷಯಗಳ ಜೊತೆ ಹೋಲಿಸಿ ಕರೆಂಟ್ ಮತ್ತು ಅದಕ್ಕೆ ನಂಟಿರುವ ಮತ್ತಷ್ಟು ವಿಷಯಗಳ ಕುರಿತು ತಿಳಿದುಕೊಳ್ಳೋಣ.

minchu_holike_neerina_totti_2

ಚಿತ್ರ 1 ರಲ್ಲಿ ತೋರಿಸಿದಂತೆ ನೀರಿನ ಎರಡು ತೊಟ್ಟಿಗಳಿದ್ದು, ಒಂದರಲ್ಲಿ ನೀರಿನ ಮಟ್ಟ ಹೆಚ್ಚಿಗೆ ಮತ್ತು ಇನ್ನೊಂದರಲ್ಲಿ ಮಟ್ಟ ಕಡಿಮೆ ಇದೆ ಎಂದುಕೊಳ್ಳೋಣ. ಈಗ ಇವೆರಡು ತೊಟ್ಟಿಗಳನ್ನು ಕೊಳವೆಯೊಂದರಿಂದ ಸೇರಿಸಿದಾಗ ಏನಾಗುತ್ತದೆ? ಮಟ್ಟ ಹೆಚ್ಚಿಗೆ ಇರುವ ತೊಟ್ಟಿಯಿಂದ ಕಡಿಮೆ ಮಟ್ಟ ಇರುವ ತೊಟ್ಟಿಗೆ ನೀರು ಹರಿಯತೊಡಗುತ್ತದೆ. ಹೀಗೆ ಒಂದೆಡೆಯಿಂದ ಇನ್ನೊಂದೆಡೆಗೆ ನೀರು ಹರಿಯಲು ಕಾರಣ ನೀರಿನ ಮಟ್ಟದಲ್ಲಿದ್ದ ಏರುಪೇರು ಇದನ್ನು ’ಒತ್ತಡದ ಬೇರ್ಮೆ’ (pressure/potential difference) ಅನ್ನುತ್ತಾರೆ.

ಹೆಚ್ಚಿಗೆಯಿಂದ ಕಡಿಮೆಯೆಡೆಗೆ ನಡೆಯುವ ಈ ಬಗೆಯ ಸಾಗಾಟ ನೀರಿಗಷ್ಟೇ ಅಲ್ಲದೇ ಬೇರೆ ಹಲವು ವಿಷಯಗಳಲ್ಲಿ ನಡೆಯುವುದನ್ನು ನಾವು ಗಮನಿಸಬಹುದು. ಹೆಚ್ಚಿನ ಬಿಸುಪಿನಿಂದ (temperature) ಕಡಿಮೆ ಬಿಸುಪಿನಡೆಗೆ ಕಾವು ಸಾಗುವುದು ಇದಕ್ಕೆ ಇನ್ನೊಂದು ಎತ್ತುಗೆ.

ಈಗ ನೀರಿನ ತೊಟ್ಟಿಗಳನ್ನು ಸೇರಿಸಿದ ಕೊಳವೆಯಲ್ಲಿ ಒಂದು ತೆರುಪು (valve) ಅಳವಡಿಸೋಣ. ಈ ತೆರುಪು ತಿರುಗಿಸಿ ನೀರು ಹರಿಯಲು ಇದ್ದ ಜಾಗವನ್ನು ಕಿರಿದಾಗಿಸಿದರೆ ಏನಾಗುತ್ತದೆ? ಆಗ ಒಂದು ತೊಟ್ಟಿಯಿಂದ ಇನ್ನೊಂದು ತೊಟ್ಟಿಯೆಡೆಗೆ ಇದ್ದ ನೀರಿನ ’ಹರಿವು’ ಕಡಿಮೆಯಾಗುತ್ತದೆ ಅಲ್ಲವೇ? ತಿರುಪು ತಿರುಗಿಸುತ್ತಾ ಹೋದಂತೆ ಕೊನೆಗೆ ನೀರಿನ ಹರಿವು ನಿಂತು ಹೋಗುತ್ತದೆ.

ಈಗ ಮೇಲಿನ ಉದಾಹರಣೆಯನ್ನು ಕರೆಂಟಿನ ವಿಷಯಕ್ಕೆ ಹೋಲಿಸೋಣ (ಚಿತ್ರ 2 ನೋಡಿ). ಕರೆಂಟ್ ದೊರೆಯಬೇಕೆಂದರೆ ವಸ್ತುಗಳಲ್ಲಿರುವ  ಕಳೆವಣಿಗಳನ್ನು (electrons) ಹರಿಯುವಂತೆ ಮಾಡಬೇಕು. ಕಳೆವಣಿಗಳು ಹರಿಯಬೇಕೆಂದರೆ ಅವುಗಳನ್ನು ಕಸುವೊಂದು ಒತ್ತಡದಿಂದ ತಳ್ಳಬೇಕು. ಕಳೆವಣಿಗಳನ್ನು ಒತ್ತಿ ಕರೆಂಟ್ ಹರಿಯುವಂತೆ ಮಾಡುವ ಕಸುವಿಗೆ ’ಒತ್ತಾಟ’ ಅಂದರೆ ’ವೋಲ್ಟೆಜ್’ (voltage) ಎಂದು ಕರೆಯುತ್ತಾರೆ.

ನೀರಿನ ಮಟ್ಟದಲ್ಲಿದ್ದ ’ಒತ್ತಡದ ಬೇರ್ಮೆ’ ನೀರು ಹರಿಯುವಂತೆ ಮಾಡಿದರೆ ತಂತಿಯ ತುದಿಯೆರಡರ ನಡುವೆ ಇದ್ದ ಒತ್ತಡದ ಬೇರ‍್ಮೆ ಕರೆಂಟ್ ಹರಿಯುವಂತೆ ಮಾಡುತ್ತದೆ. ಹೆಚ್ಚಿನ ಒತ್ತಾಟ ಇರುವ ತುದಿಯನ್ನು’+’ ಗುರುತಿನಿಂದ ಗುರುತಿಸದರೆ ಕಡಿಮೆ ಒತ್ತಾಟವಿರುವ ತುದಿಗೆ ’–’ ಗುರುತನ್ನು ತಳುಕಿಸಲಾಗುತ್ತದೆ.

ಹೀಗೆ ಒತ್ತಾಟಕ್ಕೆ ಒಳಪಟ್ಟ ಕಳೆವಣಿಗಳು (electrons) ಹರಿಯ ತೊಡಗಿದರೂ ಅವುಗಳ ಹರಿಯುವಿಕೆಗೆ ವಸ್ತುಗಳಲ್ಲಿನ ಇಕ್ಕಟ್ಟಾದ, ಒಂದಕ್ಕೊಂದು ಅಂಟಿಕೊಂಡ ಅಣುಗಳಿಂದಾಗಿ ಅಡೆತಡೆ ಎದುರಾಗುತ್ತದೆ. ಹರಿಯುವಿಕೆಗೆ ಎದುರಾಗುವ ಈ ತೊಡಕನ್ನು ’ತಡೆತನ’ ಇಲ್ಲವೇ ’ಅಡ್ಡಿತನ’ (resistance) ಅನ್ನುತ್ತಾರೆ. ನೀರಿನ ತೊಟ್ಟಿಗಳ ಎತ್ತುಗೆಯಲ್ಲಿ ನೀರಿನ ಹರಿವಿಗೆ ’ತಡೆಯೊಡ್ಡಿ’ದ ತೆರುಪು (valve) ಮಾಡಿದ್ದು ಇದೆ ಬಗೆಯ ತಡೆ.

ಈ ಮೇಲಿನ ಉದಾಹರಣೆಗಳಿಂದ ಕೆಳಗಿನ ಹೋಲಿಕೆಗಳನ್ನು ಗಮನಿಸಬಹುದು

(ನೀರಿನ) ಹರಿವು = (ಮಿಂಚಿನ) ಹರಿವು = (Electric) Current

(ನೀರಿನ) ಒತ್ತಡ  = (ಮಿಂಚಿನ) ಒತ್ತಾಟ = (Electric) Voltage

(ನೀರಿಗೆ) ತಡೆ = (ಮಿಂಚಿಗೆ) ತಡೆತನ = (Electric) Resistance

ಈ ಮೂರು ಗುಣಗಳ ನಡುವಿರುವ ನಂಟು ಈ ಕೆಳಗಿನಂತಿದೆ,

ಒತ್ತಾಟ (Voltage)  = ಹರಿವು (Current) x  ತಡೆತನ (Resistance)

ಅಂದರೆ,  V  = I x R

ಮೇಲಿನ ನಂಟನ್ನು ಮತ್ತೊಮ್ಮೆ ನೀರಿನ ಹರಿವಿಗೆ ಹೋಲಿಸಿ ನೋಡೋಣ. (ಮೇಲಿರುವ ಗಣಿತದ ನಂಟಿನ ಬಲಗಡೆ ಮತ್ತು ಎಡಗಡೆಯ ತಿರುಳನ್ನು ಗಮನಿಸಿ)

1)      ಒತ್ತಡ ಹೆಚ್ಚಾದಂತೆ ನೀರಿನ ಹರಿವು ಹೇಗೆ ಹೆಚ್ಚಾಗುತ್ತದೆಯೋ ಹಾಗೆನೇ ಒತ್ತಾಟ ಹೆಚ್ಚಾದರೆ ಕರೆಂಟಿನ ಹರಿವು ಹೆಚ್ಚಾಗುತ್ತದೆ (V ಹೆಚ್ಚಾದಂತೆ I ಹೆಚ್ಚುತ್ತದೆ)

2)      ತಡೆ ಹೆಚ್ಚಾದಂತೆ ನೀರಿನ ಹರಿವು ಹೇಗೆ ಕಡಿಮೆಯಾಗುತ್ತದೆಯೋ ಹಾಗೆನೇ ತಡೆತನ ಹೆಚ್ಚಾದಂತೆ ಕರೆಂಟಿನ ಹರಿವು ಕಡಿಮೆಯಾಗುತ್ತದೆ (R ಹೆಚ್ಚಿದಂತೆ I ಕಡಿಮೆಯಾಗುತ್ತದೆ)

ಈ ನಂಟನ್ನು ತುಂಬಾ ತಿಳಿಯಾಗಿ ತಿಳಿಸಿಕೊಡುತ್ತಿರುವ ಈ ಕೆಳಗಿನ ತಿಟ್ಟವನ್ನು ನೋಡಿ

minchu_cartoon

ಚುಟುಕಾಗಿ ಹೇಳುವುದಾದರೆ ಒತ್ತಾಟ (ವೋಲ್ಟೆಜ್) ಕರೆಂಟಿನ ಹರಿವಿಗೆ ಕಾರಣವಾದರೆ ಆ ಹರಿವಿಗೆ ತಡೆಯೊಡ್ಡುವುದೇ ತಡೆತನದ (resistance) ಕೆಲಸ.

(ತಿಟ್ಟಸೆಲೆ: https://swipefile.com)

ಕರೆಂಟ್ ಹುಟ್ಟುವ ಬಗೆ

ಪ್ರಶಾಂತ ಸೊರಟೂರ.

ಕಳೆದ ಬರಹದಲ್ಲಿ ಕರೆಂಟ್ ಎಂದರೆ ಮುಖ್ಯವಾಗಿ ವಸ್ತುಗಳಲ್ಲಿರುವ ಕಳೆವಣಿಗಳ (electrons) ಹರಿವು ಮತ್ತು ಮಿನ್ಸೆಳೆತನ (electromagnetism) ಎಂದು ಕರೆಯಲಾಗುವ ಮಿಂಚು-ಸೆಳೆಗಲ್ಲುಗಳ (magnets) ನಂಟಿನ ಕುರಿತು ತಿಳಿದುಕೊಂಡೆವು. ಮಿನ್ಸೆಳೆತನವನ್ನು ಬಳಸಿಕೊಂಡು ಕರೆಂಟ್ ಉಂಟುಮಾಡುವ ಬಗೆಯನ್ನು ಈಗ ನೋಡೋಣ.

ಕರೆಂಟ್ ಉಂಟುಮಾಡಲು ಅಂದರೆ ವಸ್ತುಗಳಲ್ಲಿರುವ ಕಳೆವಣಿಗಳನ್ನು (electrons) ಹರಿಸಲು ಬೇಕಾದ ಕಸುವು ಪಡೆಯಲು ಮುಖ್ಯವಾಗಿ ಈ ಕೆಳಗಿನವುಗಳು ಬೇಕಾಗುತ್ತವೆ,

1)      ಸೆಳೆಗಲ್ಲ ಬಯಲು (magnetic field)

2)      ತಾಮ್ರದಂತಹ ಬಿಡುವೆ (conductor)

3)      ಬಿಡುವೆಯನ್ನು ತಿರುಗಿಸುವ ಕಸುವು

4)      ಉಂಟಾದ ಕರೆಂಟನ್ನು ಸಾಗಿಸುವ ಮಿನ್ಸುತ್ತು (electric circuit)

minchuttuka_electric generator

(ಕರೆಂಟ್ ಹುಟ್ಟುವ ಭಾಗಗಳನ್ನು ತೋರಿಸುತ್ತಿರುವ ಚಿತ್ರ)

ಎರಡು ಸೆಳೆಗಲ್ಲುಗಳ (magnets) ಎದುರು ತುದಿಗಳನ್ನು ಅಂದರೆ ಬಡಗಣ (north) ಮತ್ತು ತೆಂಕಣ (south) ತುದಿಗಳನ್ನು ಒಂದರ ಮುಂದೊಂದು ತಂದಾಗ ಅವೆರಡಗಳ ನಡುವೆ ಸೆಳೆತ ಉಂಟಾಗುತ್ತದೆ. ಹೀಗೆ ಉಂಟಾದ ‘ಸೆಳೆತದ’ ಬಯಲಿನಲ್ಲಿ ತಾಮ್ರದ ತಂತಿಯ ಕಟ್ಟನ್ನು ಹೊತ್ತ ತಿರುಗುಣಿಯನ್ನು (rotor/turbine) ತಿರುಗಿಸಿದರೆ, ತಾಮ್ರದ ತಂತಿಯಲ್ಲಿ ಕಳೆವಣಿಗಳು (electrons) ಅಂದರೆ ಕರೆಂಟ್ ಹರಿಯತೊಡಗುತ್ತದೆ.

ಈ ಬಗೆಯಲ್ಲಿ ತಿರುಗುವ ಕಸುವಿನಿಂದ ಮಿಂಚಿನ (ಕರೆಂಟ್) ಕಸುವು ಉಂಟುಮಾಡುವ ಸಲಕರಣೆಯನ್ನು ‘ಮಿಂಚುಟ್ಟುಕ’ (electric generator) ಅಂತಾ ಕರೆಯುತ್ತಾರೆ.ಇಲ್ಲಿ ಗಮನಿಸಬೇಕಾದ ಮುಖ್ಯಸಂಗತಿ ಎಂದರೆ,

ತಾಮ್ರದಂತಹ ಬಿಡುವೆ (conductor) ಅಳವಡಿಸಿದ ತಿರುಗುಣಿಯನ್ನು ತಿರುಗಿಸಲು ‘ಕಸುವು’ ದೊರೆತರೆ ಕರೆಂಟನ್ನು ಸುಲಭವಾಗಿ ಉಂಟುಮಾಡಬಹುದು.

ಈ ತಿರುಗಿಸುವ ಕಸುವನ್ನು ಹಲವಾರು ಬಗೆಗಳಲ್ಲಿ ಪಡೆಯಬಹುದು. ಅವುಗಳಲ್ಲಿ ಮುಖ್ಯ ಬಗೆಗಳು ಹೀಗಿವೆ,

  • ನೀರಿನ ಬಳಕೆ: ಮೇಲಿನಿಂದ ದುಮ್ಮಿಕ್ಕುವ ನೀರನ್ನು ಕೆಳಗಿರುವ ತಿರುಗಣಿಯ ಮೇಲೆ ಹಾಯಿಸಿ ಅದು ತಿರುಗುವಂತೆ ಮಾಡಲಾಗುತ್ತದೆ. ಹೀಗೆ ನೀರಿನ ಬೀಳುವಿಕೆಯಿಂದ ಮಿಂಚು (ಕರೆಂಟ್) ಪಡೆಯುವ ತಾಣಕ್ಕೆ ‘ನೀರ‍್ಮಿಂಚು ನೆಲೆಗಳು’ (hydro-electric power station) ಅನ್ನುತ್ತಾರೆ. ಜೋಗ, ಶಿವನಸಮುದ್ರ ಮುಂತಾದ ಕಡೆ ಈ ಬಗೆಯಲ್ಲಿ ಕರೆಂಟ್ ಉಂಟುಮಾಡಲಾಗುತ್ತದೆ.
  • ಕಾವು ಬಳಸಿ ಕರೆಂಟ್: ಈ ಬಗೆಯಲ್ಲಿ ಕಲ್ಲಿದ್ದಲಿನಂತಹ ಉರುವಲನ್ನು ಬಳಸಿ ನೀರನ್ನು ಕಾಯಿಸಲಾಗುತ್ತದೆ. ಕಾದ ನೀರು ಆವಿಯ ರೂಪ ಪಡೆದಾಗ ಅದನ್ನು ತಿರುಗುಣಿಯನ್ನು ತಿರುಗಿಸಲು ಬಳಸಲಾಗುತ್ತದೆ. ಹೀಗೆ ಕರೆಂಟ್ ಉಂಟುಮಾಡುವ ತಾಣಗಳಿಗೆ ‘ಕಾವ್ಮಿಂಚು ನೆಲೆಗಳು’ (thermal power station) ಅನ್ನುತ್ತಾರೆ. ರಾಯಚೂರಿನಲ್ಲಿರುವ ಮಿಂಚಿನ-ನೆಲೆಯಲ್ಲಿ ಹೀಗೆಯೇ ಕರೆಂಟ್ ಉಂಟುಮಾಡಲಾಗುತ್ತದೆ.
  • ಅಣುಗಳ ಒಡೆತ:  ಇದೂ ಕಾವಿನಿಂದ ಕರೆಂಟ್ ಪಡೆಯುವ ಬಗೆಗಳಲ್ಲಿ ಒಂದು ಆದರೆ ಇಲ್ಲಿ ಕಲ್ಲಿದ್ದಲಿನ ಬದಲಾಗಿ ಅಣುಗಳ ಒಡೆತದಿಂದ ಉಂಟಾಗುವ ಕಾವನ್ನು ನೀರು ಕಾಯಿಸಲು ಬಳಸಲಾಗುತ್ತದೆ. ಯುರೇನಿಯಂ ನಂತಹ ಅಣುಗಳ ನಡುವಣಕ್ಕೆ (nucleus) ನೆಲೆವಣಿಗಳನ್ನು (neutrons) ಗುದ್ದಿಸಿ, ನಡುವಣ ಒಡೆಯುವಂತಾದರೆ ಅದರಿಂದ ತುಂಬಾ ಕಸುವು ಬಿಡುಗಡೆಯಾಗುತ್ತದೆ. ಈ ಕಸುವು ಬಳಸಿ ನೀರಾವಿಯನ್ನು ಉಂಟಮಾಡಿ, ಎಂದಿನ ಬಗೆಯಂತೆ ತಿರುಗುಣಿಯನ್ನು ತಿರುಗಿಸಿ ಕರೆಂಟ್ ಪಡೆಯಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯ ‘ಕೈಗಾ’ ದಲ್ಲಿ ಇಂತ ’ನಡುವಣ-ಮಿಂಚಿನ’ (nuclear power) ನೆಲೆಯಿದೆ.
  • ಗಾಳಿಯ ಬಳಕೆ: ಬೆಟ್ಟ-ಗುಡ್ಡಗಳ ಮೇಲೆ ಬೀಸುವ ಗಾಳಿಯನ್ನು ಬಳಸಿ ತಿರುಗುಣಿಯನ್ನು ತಿರುಗಿಸುವ ಕಸುವು ಪಡೆಯಲಾಗುತ್ತದೆ. ಗದುಗಿನ ಕಪ್ಪತ್ತಗುಡ್ಡ, ಚಿತ್ರದುರ್ಗದ ಬೆಟ್ಟಗಳಲ್ಲಿ ಇಂತಹ ಗಾಳಿ ಮಿಂಚಿನ ನೆಲೆಗಳನ್ನು ಕಾಣಬಹುದು.
  • ಕಡಲ ಅಲೆಗಳ ಬಳಕೆ: ಕಡಲ ದಂಡೆಯಲ್ಲಿ ಹೊಯ್ದಾಡುವ ತೆರೆಗಳನ್ನು ಬಳಸಿ ತಿರುಗುಣಿಯನ್ನು ತಿರುಗಿಸುವ ಕಸುವು ಪಡೆಯಲಾಗುತ್ತದೆ. ಈ ಬಗೆ ಇತ್ತೀಚಿಗೆ ಕಂಡುಹಿಡಿಯಲಾಗಿದ್ದು ಇನ್ನೂ ಹೆಚ್ಚಾಗಿ ಬಳಕೆಗೆ ಬರಬೇಕಾಗಿದೆ.

minchumane

(ನಡುವಣ (nucleus) ಒಡೆತದಿಂದ ಉಂಟಾದ ಕಸುವು ಬಳಸಿ ಕರೆಂಟ್ ಉಂಟುಮಾಡುತ್ತಿರುವ ಬಗೆಯನ್ನು ತೋರಿಸುವ ಚಿತ್ರ)

ಹೀಗೆ ಯಾವುದಾದರೊಂದು ಕಸುವಿನ ಸೆಲೆಯಿಂದ ತಿರುಗುಣಿ ತಿರುಗಿಸಿ ಮಿಂಚುಟ್ಟುಕದ (generator) ನೆರವಿನಿಂದ  ಕರೆಂಟ್ ಉಂಟುಮಾಡಲಾಗುತ್ತದೆ.

ಚಿತ್ರ : ವಿಕಿಪೀಡಿಯಾ , ಸೆಲೆ: iaea ,rite.or.jp

ಎಲ್ಲೆ ದಾಟಿದ ವೋಯಜರ್ – 1

ಪ್ರಶಾಂತ ಸೊರಟೂರ.

ಚಿತ್ರ: ವೋಯಜರ್ – 1

12.09.2013, ಅಮೇರಿಕಾ ಕಳುಹಿಸಿದ ಬಾನಬಂಡಿ (space craft) ವೋಯಜರ್–1 ಮೊಟ್ಟಮೊದಲ ಬಾರಿಗೆ ನೇಸರ-ಕೂಟದ (solar system) ಎಲ್ಲೆ ದಾಟುವ ಮೂಲಕ ಮಾನವರು ಮಾಡಿದ ವಸ್ತುಗಳಲ್ಲಿ ಎಲ್ಲಕ್ಕಿಂತ ಹೆಚ್ಚು ದೂರದಲ್ಲಿರುವ ವಸ್ತು ಅನ್ನುವ ಹೆಗ್ಗಳಿಕೆಯನ್ನು ತನ್ನತಾಗಿಸಿಕೊಂಡಿತು.

ಸೆಪ್ಟೆಂಬರ್ 2023 ಕ್ಕೆ ನೇಸರನಿಂದ ವೋಯಜರ್ – 1 ರ ದೂರ 161 AU ಅಂದರೆ ಸುಮಾರು 24 ಬಿಲಿಯನ್ ಕಿಲೋ ಮೀಟರಗಳಷ್ಟು! ನೇಸರ ಮತ್ತು ನಮ್ಮ ಭೂಮಿಗೆ ಇರುವ ದೂರವನ್ನು 1 ಬಾನಳತೆ ಇಲ್ಲವೇ ಅಸ್ಟ್ರೋನಾಮಿಕಲ್ ಯುನಿಟ್ (Astronomical Unit – AU) ಅಂತ ಕರೆಯುತ್ತಾರೆ. ಅಂದರೆ ನಮ್ಮಿಂದ ನೇಸರಕ್ಕೆ ಇರುವ ದೂರದ ಸರಿಸುಮಾರು 161 ಪಟ್ಟು ಹೆಚ್ಚು ದೂರದಲ್ಲಿ ವೋಯಜರ್ ಈಗ ಸಾಗುತ್ತಿದೆ.

ನೇಸರನ ಸುತ್ತ ಸುತ್ತುವ 8 ಗ್ರಹಗಳು (planets) ಮತ್ತು ಅವುಗಳ ಸ್ಯಾಟಲೈಟ್ ಗಳನ್ನ ಒಳಗೊಂಡ ಏರ್ಪಾಟಿಗೆ ‘ನೇಸರ-ಕೂಟ’ (Solar System) ಅಂತ ಕರೆಯಲಾಗುತ್ತದೆ. ನೇಸರನ ಒಂಬತ್ತನೇ ಗ್ರಹ ಎಂದು ಗುರುತಿಸಲಾಗಿದ್ದ ಪ್ಲೂಟೋವನ್ನು 2006 ರಲ್ಲಿ ಪಟ್ಟಿಯಿಂದ ಹೊರಗಿಡಲಾಯಿತು ಹಾಗಾಗಿ ನೇಸರ ಕೂಟದಲ್ಲಿ ಇದೀಗ 8 ಗ್ರಹಗಳನ್ನಷ್ಟೇ ಎಣಿಸಲಾಗುತ್ತದೆ. ಇವೆಲ್ಲವುಗಳನ್ನು ದಾಟಿಕೊಂಡು ವೋಯಜರ್–1 ಮುನ್ನಡೆಯುತ್ತಿದೆ.

ವೋಯಜರ್ – 1 ಇಂದಿಗೆ ಸಾಗಿದ ದೂರ ಹಾಗು ಬಾನಿನ 3D ನೋಟವನ್ನು ನಾಸಾ ಮಿಂದಾಣನದಲ್ಲಿ ನೋಡಬಹುದು, ಕೆಳಗಿನ ಕೊಂಡಿಯನ್ನು ಒತ್ತಿ.

 ವೋಯಜರ್ – 1 ಸಾಗಿದ ದೂರ

ಸಪ್ಟಂಬರ್ 5, 1977 ರಂದು ಅಮೇರಿಕಾದ ಬಾನರಿಮೆಯ ಕೂಟ ನಾಸಾ (NASA), ನೇಸರಕೂಟದ ಆಚೆಗಿನ ಮಾಹಿತಿಗಳನ್ನು ತಿಳಿದುಕೊಳ್ಳಲು ವೋಯಜರ್–1 (Voyager-1) ಬಾನಬಂಡಿಯನ್ನು ಹಾರಿಸಿತ್ತು. ಬಾನ ತೆರವು (space) ತಲುಪಿದ ಮೇಲೆ 1979 ರಲ್ಲಿ ಗುರುವಿನ ಏರ್ಪಾಟು (Jovian system) ಮತ್ತು 1980 ರಲ್ಲಿ ಶನಿಯ ಏರ್ಪಾಟಿನ (Saturnine system) ಕುರಿತು ಹಲವಾರು ವಿಷಯಗಳನ್ನು ವೋಯಜರ್–1 ತಿಳಿಸಿಕೊಟ್ಟಿತ್ತು.

ವೋಯಜರ್ – 1 ತೆಗೆದ ಗುರು ಮತ್ತು ಶನಿಯ ಚಿತ್ರಗಳು

        

 ವೋಯಜರ್ – ಏರ್ಪಾಟುಗಳು.

ಬಾನಾಡಿರುವಿನಲ್ಲಿ (ಸ್ಪೇಸ್) ದೊರೆಯುವ ಮಾಹಿತಿಗಳನ್ನು ಕಲೆಹಾಕಲು ವೋಯಜರ್–1 ಹಲವು ಬಗೆಯ ಸಲಕರಣೆಗಳನ್ನು ಹೊಂದಿದೆ. ಚಿತ್ರಗಳನ್ನು ಸೆರೆಹಿಡಿಯಲು ಕ್ಯಾಮೆರಾಗಳ ಏರ್ಪಾಟು, ಸುತ್ತಣದ ಗುಣಗಳನ್ನು ತಿಳಿದುಕೊಳ್ಳಲು ನೆರವಾಗುವು ರೆಡಿಯೋ ಅಲೆಗಳ ಸಲಕರಣೆಗಳು, ಸೆಳೆತದ ಹರವನ್ನು (magnetic field) ಅಳೆಯುವ ಸೆಳೆಯಳಕಗಳು (magnetometers), ಸಲಕರಣೆಗಳನ್ನು ಹಿಡಿತದಲ್ಲಿಡುವ ಕಂಪ್ಯೂಟರ್ ಮುಂತಾದವುಗಳನ್ನು ವೋಯಜರ್ ಒಳಗೊಂಡಿದೆ. ಸಲಕರಣೆಗಳಿಗೆ ಕಸುವು ನೀಡಲು ವೋಯಜರಿನಲ್ಲಿ ಪ್ಲುಟೋನಿಯಮ್-238 ಆಕ್ಸಾಯಡ್ಸನಿಂದ ಮಾಡಿದ ಬ್ಯಾಟರಿಗಳಿವೆ.

ವೋಯಜರ್ – 1 ರ 3D ಚಿತ್ರಣ

ಬಾನಾಚೆಗೆ ಸಾಗುತ್ತಿರುವ ವೋಯಜರ್–1 ಬಾನಬಂಡಿಗೆ ಯಾವುದಾದರೂ (ಯಾರಾದರೂ!) ಜಾಣ್ಮೆ, ತಿಳುವಳಿಕೆ ಹೊಂದಿದ ಜೀವಿಗಳು ಎದುರಾದರೆ ನಮ್ಮ ಕುರಿತು, ನಾವಿರುವ ನೆಲದ ಕುರಿತು ತಿಳಿಸಿಕೊಡಲು ಮೇಲಿನ ಸಲಕರಣೆಗಳ ಜೊತೆಗೆ ಚಿನ್ನದ ಹೊದಿಕೆಯಿರುವ ಅಡಕತಟ್ಟೆಯೊಂದನ್ನು ಇರಿಸಲಾಗಿದೆ. ಈ ಅಡಕತಟ್ಟೆಯಲ್ಲಿ ನೆಲದ ತಿಟ್ಟಗಳು, ಜೀವಿಗಳ ಬದುಕು, ಅರಿಮೆಯ ಹಲವಾರು ವಿಷಯಗಳು, ಮುಂದಾಳುಗಳ ಹಾರಯ್ಕೆಗಳು ಅಡಕಗೊಂಡಿವೆ. ’ನೆಲದ ದನಿಗಳು’ (sounds of earth) ಎಂದು ಹೆಸರಿಟ್ಟಿರುವ ಕಡತದಲ್ಲಿ ತಿಮಿಂಗಲಿನ ಕೂಗಾಟ, ಮಗುವಿನ ಅಳುವು, ಕಡಲ ತೆರೆಗಳ ಅಪ್ಪಳಿಸುವ ದನಿ ಮತ್ತು ಹಲವು ಬಗೆಯ ಇನಿತದ (music) ಕಟ್ಟುಗಳಿವೆ.

1977 ಕ್ಕಿಂತ ಮುಂಚೆಯೇ ಬಾನಿನಲ್ಲಿ ತೇಲಿದ ವೋಯಜರ್–1, ತನಗೊಪ್ಪಿಸಿದ ಕೆಲಸವನ್ನು ಕೊರತೆಯಿಲ್ಲದಂತೆ ಮಾಡಿ ತೋರಿಸಿದೆ. ಇಷ್ಟು ವರುಷಗಳ ಬಳಿಕವೂ, ಅಷ್ಟೊಂದು ದೂರ ಸಾಗಿದರೂ ನಮ್ಮೊಡನೆ ಒಡನಾಡುತ್ತಿರುವ ವೋಯಜರ್, ಅರಿಮೆಯ ಹಿರಿಮೆಯನ್ನು ಎತ್ತಿ ತೋರಿಸುತ್ತಿದೆ.

2025 ಕ್ಕೆ ಬ್ಯಾಟರಿಗಳ ಕಸುವು ಕೊನೆಗೊಳ್ಳುವದರಿಂದ ವೋಯೋಜರ್–1, ಭೂಮಿಯ ಒಡನಾಟವನ್ನು ಕಡಿದುಕೊಳ್ಳುತ್ತ ಕೊನೆಯಿರದ ಬಾನಂಗಳದಲ್ಲಿ ಕಣ್ಮರೆಯಾಗಲಿದೆ.

ಮಾಹಿತಿ ಮತ್ತು ಚಿತ್ರ ಸೆಲೆ: ನಾಸಾ

 

ಅಣು ಕೂಡಿಕೆಯಿಂದ ಮಿಂಚು – ಸವಾಲುಗಳೇನು?

ರಘುನಂದನ್.

ಹಿಂದಿನ ಬರಹದಲ್ಲಿ ಅಣುಕೂಡಿಕೆಯಿಂದ ಮಿಂಚನ್ನು ಪಡೆಯುವ ಬಗೆಯನ್ನು ತಿಳಿದೆವು. ಅಣು ಕೂಡಿಕೆಯ ಹೊಲಬಿನಿಂದ ಸುತ್ತಮುತ್ತಲಿನ ಪರಿಸರಕ್ಕೆ ಯಾವುದೇ ತೊಂದರೆಯಿಲ್ಲ(environmental friendly). ಬೂದಿ(ash), ಇಂಗಾಲ (carbon), ಹೊಗೆ(smoke), ಕೊಳಕು ನೀರು(polluted water) ಮತ್ತು ಕೆಟ್ಟಗಾಳಿ ಇಂತಹ ಯಾವುದೇ ಹಾನಿಯಿಲ್ಲ, ಆದರೂ ಅಣು ಕೂಡಿಕೆಯಿಂದ ನಾವು ಮಿಂಚನ್ನು ಯಾಕೆ ಬಳಸುತ್ತಿಲ್ಲ ಎಂಬುದನ್ನು ಈ ಬರಹದಲ್ಲಿ ತಿಳಿಯೋಣ.

ಅಣು ಕೂಡಿಕೆಯನ್ನು ಯಾಕೆ ನಾವು ಯಾಕೆ ಬಳಸುತ್ತಿಲ್ಲ?

1. ಅಣು ಕೂಡಿಕೆಯಲ್ಲಿ ಡ್ಯೂಟಿರಿಯಮ್-ಟ್ರೈಶಿಯಮ್ ಅಣುಗಳು ಒಂದಕ್ಕೊಂದು ಕೂಡಬೇಕಾದರೆ ತುಂಬಾ ಹೆಚ್ಚು ಕಾವಳತೆ (Temperature) ಬೇಕಾಗುತ್ತದೆ, ಅಂದರೆ 100 ಮಿಲಿಯ ಡಿಗ್ರಿಗಳಷ್ಟು (100 million degree centigrade). ಹೆಚ್ಚು ಹರವು ಮತ್ತು ಕಾಲದಲ್ಲಿ ಅಷ್ಟು ಕಾವಳತೆ ಹೇಗೆ ಉಂಟು ಮಾಡಬಹುದೆಂಬುದು ಇನ್ನೂ ಗೊತ್ತಿಲ್ಲ, ನೇಸರನಲ್ಲಿ ಈ ಮಟ್ಟದ ಕಾವಳತೆ ಕಾಣಬಹುದು. ಅಲ್ಲಿ ಕೂಡ ಇದೇ ಅಣು ಕೂಡಿಕೆ ನಡೆಯುತ್ತಿದ್ದು ನಮಗೆ ದಿನಾಲು ಬೆಳಕು ಮತ್ತು ಹುರುಪು ನೇಸರನಿಂದ ದೊರಕುತ್ತಿರುವುದು ಇದೇ ಮಾದರಿಯಲ್ಲಿ. ಅದರಿಂದ ಗಿಡ ಮರಗಳು ಬದುಕುತ್ತಿವೆ. ನಾವು ಬೆಳೆಗಳನ್ನು ಬೆಳೆಯುತ್ತಿದ್ದೇವೆ. ಅದೇ ಮನುಷ್ಯರಿಗೆ ಊಟ ದೊರಕಿಸುತ್ತಿದೆ. ಈ ಭೂಮಿಯ ಮೇಲೆ ಜೀವಿಗಳು ಇರುವುದೇ ಅಣು ಕೂಡಿಕೆಯಿಂದ ಬರುವ ಬೆಳಕು ಮತ್ತು ಹುರುಪಿನಿಂದ ಎಂದು ಹೇಳಬಹುದು.

2. ಅಷ್ಟು ಕಾವಳತೆಯನ್ನು(Temperature) ಉಂಟುಮಾಡಿದೆವು ಎಂದು ಇಟ್ಟುಕೊಳ್ಳೋಣ. ಆಗ ಅದನ್ನು ಹಿಡಿದಿಟ್ಟುಕೊಳ್ಳಬಹುದಾದ ವಸ್ತು ಯಾವುದಾದರು ಇದೆಯೇ? ಏಕೆಂದರೆ ಬರಿಯ ಮೂರು ಸಾವಿರ ಡಿಗ್ರಿಗಳಿಗಷ್ಟೇ ಎಲ್ಲಾ ಗೊತ್ತಿರುವ ವಸ್ತುಗಳು ಕರಗಿ ಹೋಗುತ್ತವೆ. ಇದಕ್ಕೆ ಬಗೆಹರಿಕೆ ಎಂದರೆ ಡ್ಯೂಟಿರಿಯಮ್-ಟ್ರೈಶಿಯಮ್ ಬೆರಕೆಯನ್ನು ಸೆಳೆ-ಸುರುಳಿಗಳ(magnetic coils) ಮೂಲಕ ಎರಕದ ಇರವಿನಲ್ಲಿ ಇರಿಸಬಹುದೇ ಎಂದು ವಿಜ್ಞಾನಿಗಳು ಯೋಚಿಸುತ್ತಿದ್ದಾರೆ. ಹಾಗಾದಾಗ ಹೆಚ್ಚು ಕಾದ ಭಾಗಗಳು ಸುತ್ತಲಿನ ವಸ್ತುವಿಗೆ ತಾಕದಂತೆ ನೋಡಿಕೊಳ್ಳಬಹುದು. ಈ ಬಗೆಯ ಏರ್ಪಾಟಿಗೆ ಟೋಕಾಮಾಕ್ (Tokamak) ಎನ್ನುತ್ತಾರೆ. ಟೋಕಾಮಾಕಿನಲ್ಲಿ ಬಿಡಿ ಎಲೆಕ್ಟ್ರಾನ್ಗಳು ಮತ್ತು ಅಣುಗಳು ಪ್ಲಾಸ್ಮಾ/ಎರಕದ ಇರವಿನಲ್ಲಿ(molten state/plasma) ಇರುವುದರಿಂದ ಒಂದಕ್ಕೊಂದು ಡಿಕ್ಕಿ ಹೊಡೆದಾಗ ಹೀಲಿಯಮ್ ರೂಪುಗೊಳ್ಳುತ್ತದೆ. ಅದರಿಂದ ಉಂಟಾಗುವ ಬಿಸಿ ಕಾವಿನಿಂದ ಮಿಂಚು / ವಿದ್ಯುತ್ ಅನ್ನು ಹುಟ್ಟುಹಾಕಬಹುದು.

ಅಮೇರಿಕಾದ ದೊಡ್ಡ ಕಂಪೆನಿಗಳಲ್ಲಿ ಒಂದಾದ ಲಾಕ್‌ಹೀಡ್ ಮಾರ್ಟಿನ್ (Lockheed Martin) ಅಣು ಕೂಡಿಕೆಯ ಕುರಿತಾಗಿ ಸುದ್ದಿಯೊಂದನ್ನು ಬಿಡುಗಡೆ ಮಾಡಿದೆ. ಲಾಕ್‌ಹೀಡ್ ಮಾರ್ಟಿನ್ ನ ತಾಮಸ್ ಮೆಗ್ವೈರ್ ಕಳೆದ ತಿಂಗಳಿನ ಸುದ್ದಿಕೂಟದಲ್ಲಿ ಹೀಗೆ ಹೇಳಿದ್ದಾರೆ –

“ಹೊಸ ಅಣುವಿನ ಶಕೆಯೊಂದನ್ನು ಮೊದಲು ಮಾಡೋಣ. ಪ್ರಪಂಚಕ್ಕೆ ಹಸನಾದ ಹುರುಪನ್ನು ಕೊಡುವುದು ನಮ್ಮ ಮುಂದಿನ ಗುರಿಯಾಗಿದೆ”.

ಈ ಚಳಕದರಿಮೆಯ ಮೂಲಕ ಮಿಂಚನ್ನು ತಯಾರಿಸಲಾಗುತ್ತದೆ ಎಂದು ಲಾಕ್‌ಹೀಡ್ ಮಾರ್ಟಿನ್ ಹೇಳಿಕೊಂಡಿದೆ. ಇದರಿಂದಾಗಿ ಅರಿಮೆಯ ಕೂಟಗಳಲ್ಲಿ (scientific circles) ಈ ಸುದ್ದಿ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ತಾಮಸ್ ಮೆಗ್ವೈರ್ ಪ್ರಕಾರ ಟೋಕಾಮಾಕ್‌ಗಳ ಒಳಗೆ ಇರುವ ಪ್ಲಾಸ್ಮಾ/ಎರಕದ ಒತ್ತಡ ಹೆಚ್ಚಾದರೆ ಅದರ ಸುತ್ತಲಿನ ವಸ್ತುವಿಗೆ ತೊಂದರೆಯಾಗುತ್ತದೆ. ಅದರ ಬದಲು ಒತ್ತಡವನ್ನು ಕಡಿಮೆ ಮಾಡಿದಲ್ಲಿ ಅಣುಗಳು ಒಂದಕ್ಕೊಂದು ಡಿಕ್ಕಿ ಹೊಡೆಯುವ ಸಲದೆಣಿಕೆ(Frequency) ಕಡಿಮೆಯಾಗುತ್ತದೆ ಮತ್ತು ಟೋಕಾಮಾಕ್ ಗಳನ್ನು ತಯಾರಿಸಿದ ವಸ್ತುವಿನ ಮೇಲೆ ಯಾವುದೇ ತೊಂದರೆಯಾಗುವುದಿಲ್ಲ. ಆದರೆ ಈ ಬಗೆಯಲ್ಲಿ ಮಾಡಿದರೆ, ಹಣಕಾಸಿನ ಲೆಕ್ಕಾಚಾರದಲ್ಲಿ ನೋಡಿದರೆ ಅಷ್ಟು ಗಿಟ್ಟುವ ಏರ್ಪಾಟು (profitable venture) ಎನಿಸುವುದಿಲ್ಲ. ಅದಕ್ಕಾಗಿ ಲಾಕ್‌ಹೀಡ್ ಅವರು ಮೊಗೆಸಿರುವ ಟೋಕಾಮಾಕಿನಲ್ಲಿ ಪ್ಲಾಸ್ಮಾವು ಗೋಡೆಯ ಹತ್ತಿರ ಬರುತ್ತಿದ್ದಂತೆ ಸೆಳೆ-ಸುರುಳಿಗಳ ಹರಹು ಹೆಚ್ಚಾಗುತ್ತಾ ಹೋಗುತ್ತದೆ. ಹಾಗಾಗಿ ಆ ಎಡೆಯಲ್ಲಿ ಒತ್ತಡ ಹೆಚ್ಚಾಗಿರುತ್ತದೆ. ಮತ್ತು ಆ ಭಾಗದಲ್ಲಿ ಹೆಚ್ಚು ಮರುಎಸಕಗಳು ಆಗುತ್ತವೆ,ಹೆಚ್ಚು ಹುರುಪು ದೊರೆಯುತ್ತದೆ.

ತಾಮಸ್ ಮೆಗ್ವೈರ್ ತಂಡವು ತಯಾರಿಸುತ್ತಿರುವ ಟೋಕಾಮಾಕ್‍ಗಳು ಎಷ್ಟು ಚಿಕ್ಕದಾಗಿ ಇರುತ್ತವೆಯೆಂದರೆ ಅದನ್ನು ಒಂದು ಟ್ರಕ್ ಇಲ್ಲವೇ ಲಾರಿಯ ಹಿಂದೆ ಅಳವಡಿಸಬಹುದು, ಹೀಗೆ ಮಾಡುವುದು ಸುಲಭದ ಮಾತಲ್ಲ ಎಂದು ಜಗತ್ತಿನ ವಿಜ್ಞಾನಿಗಳ ಅನಿಸಿಕೆ. ಈ ಹಮ್ಮುಗೆಯ ವಿಷಯವಾಗಿ ಲಾಕ್‌ಹೀಡ್ ಯಾವುದೇ ಗುಟ್ಟುಗಳನ್ನು ಹೊರಹಾಕಿಲ್ಲ. ಈ ಹಮ್ಮುಗೆ ಗೆಲುವು ಕಂಡಲ್ಲಿ ಜಗತ್ತು ಎದುರಿಸುತ್ತಿರುವ ಎಲೆಕ್ಟ್ರಿಸಿಟಿ ತೊಂದರೆ ಕೊನೆಗೊಳ್ಳಬಹುದು. ಇನ್ನೂ ಹಲವು ವರ್ಷ ಕಾದುನೋಡಬೇಕಿದೆ. ಇದರ ಕುರಿತಾಗಿ ಲಾಕ್‌ಹೀಡ್ ಮಾರ್ಟಿನ್ ಬಿಡುಗಡೆ ಮಾಡಿರುವ ಒಂದು ವಿಡಿಯೋ ಇಲ್ಲಿದೆ.

(ಚಿತ್ರ ಸೆಲೆ: chenected.ichewikipediawired.com)

ಅಣು ಕೂಡಿಕೆಯಿಂದ ಮಿಂಚು

ರಘುನಂದನ್.

ನಮ್ಮ ಮನೆಗಳನ್ನು ಬೆಳಗುವ ಕರೆಂಟ್ ಎಲ್ಲಿಂದ ಬರುತ್ತದೆ ಮತ್ತು ಹೇಗೆ ಹುಟ್ಟುತ್ತದೆ ಎಂಬ ಕುತೂಹಲ ಸಾಮಾನ್ಯವಾಗಿ ಎಲ್ಲರಿಗೂ ಇರುತ್ತದೆ. ರಾಯಚೂರು, ಶರಾವತಿ, ಕೈಗಾ ಮತ್ತು ಶಿವನಸಮುದ್ರಗಳಲ್ಲಿ ಪವರ್ ಪ್ಲಾಂಟ್‌ಗಳಿವೆ (ಶಕ್ತಿ ಸ್ಥಾವರಗಳು) ಎಂದು ಕಂಡು ಕೇಳಿರುತ್ತೇವೆ. ಪವರ್ ಪ್ಲಾಂಟ್‍ಗಳಲ್ಲಿ ಅರಿಮೆ ಮತ್ತು ಚಳಕಗಳೆರಡೂ ಬಳಸಿ ಮಿಂಚನ್ನು (electric current) ಹುಟ್ಟಿಸಿ ಮನೆಮನೆಗಳಿಗೆ, ಊರುಗಳಿಗೆ ತಲುಪಿಸುತ್ತಾರೆ. 1902ರಲ್ಲಿ ಏಶಿಯಾದಲ್ಲಿಯೇ ಮೊಟ್ಟಮೊದಲಿಗೆ ಶಿವನಸಮುದ್ರದ ಅಬ್ಬಿಗಳಿಂದ(waterfalls) ಮಿಂಚನ್ನು (electric current) ತಯಾರಿಸಿ ಬೆಂಗಳೂರಿಗೆ ತಲುಪಿಸಲಾಗಿತ್ತು.

ರಾಯಚೂರಿನಲ್ಲಿ ಇದ್ದಿಲಿನಿಂದ ಮಿಂಚನ್ನು ತಯಾರಿಸಲಾಗುತ್ತದೆ. ಅಂದರೆ ಇದ್ದಿಲನ್ನು ಚೆನ್ನಾಗಿ ಕಾಯಿಸಿ ಅದರ ಕಾವಿನಿಂದ ನೀರನ್ನು ದೊಡ್ಡ ಹಂಡೆಗಳಲ್ಲಿ(boiler) ಕುದಿಸಲಾಗುತ್ತದೆ. ನೀರು ಕುದ್ದ ಬಳಿಕ ಅದರಿಂದ ಬರುವ ಆವಿಯ ಒತ್ತಡವನ್ನು ಹೆಚ್ಚಿಸಿ ತಿರುಗಾಲಿಗಳ(turbine) ಮೂಲಕ ಹರಿದುಹೋಗಲು ಬಿಡಲಾಗುತ್ತದೆ. ಒತ್ತಡದ ಆವಿಯಲ್ಲಿ ಅಡಗಿರುವ ಹುರುಪು ಆ ತಿರುಗಾಲಿಗಳನ್ನು ಕಡುಹೆಚ್ಚು ಬಿರುಸಿನಲ್ಲಿ ತಿರುಗಿಸುತ್ತದೆ. ಈ ತಿರುಗಾಲಿಗಳು ಬಳಿಕ ಮಿಂಚುಟ್ಟುಕಗಳನ್ನು(electric generators) ತಿರುಗಿಸುತ್ತವೆ. ಅಲ್ಲಿಂದ ತಂತಿಗಳ ಮೂಲಕ ಮನೆಮನೆಗಳಿಗೆ ಮಿಂಚನ್ನು ತಲುಪಿಸಲಾಗುತ್ತದೆ.

ಶರಾವತಿಯಲ್ಲಿ ನೀರಿನಿಂದ ಮಿಂಚನ್ನು ಉಂಟುಮಾಡಲಾಗುತ್ತದೆ. ಅಂದರೆ ಹೊಳೆಯಿಂದ ಬರುವ ನೀರನ್ನು ಅಣೆಕಟ್ಟುಗಳ ನೆರವಿನಿಂದ ತಡೆದುಹಿಡಿಯಲಾಗುತ್ತದೆ. ಅಣೆಕಟ್ಟುಗಳಲ್ಲಿ ಒಂದು ಎತ್ತರದ ಮಟ್ಟದಲ್ಲಿ ನೀರನ್ನು ಹಿಡಿದಿಡಲಾಗುತ್ತದೆ. ಕೆಳಗಿನ ಮಟ್ಟದಲ್ಲಿ ನೀರು ತಿರುಗಾಲಿಗಳನ್ನು ಅಳವಡಿಸಿರುತ್ತಾರೆ. ಅಣೆಕಟ್ಟುಗಳ ಬಾಗಿಲು ತೆರೆದಾಗ ದುಮ್ಮಿಕ್ಕಿ ಬಿರುಸಿನಿಂದ ಬರುವ ನೀರನ್ನು ತಿರುಗಾಲಿಗಳ ಸುತ್ತಕ್ಕೆ (periphery) ತಾಕುವಂತೆ ಹರಿಸಲಾಗುತ್ತದೆ. ತಿರುಗಾಲಿಗಳು ಹೆಚ್ಚು ಬಿರುಸಿನಲ್ಲಿ ತಿರುಗುತ್ತವೆ . ಈ ತಿರುಗಾಲಿಗಳನ್ನು(turbines) ಮಿಂಚುಟ್ಟುಕಗಳಿಗೆ (electric generators) ತಳುಕಿಸಿದಾಗ ಅವು ಕೂಡ ತಿರುಗುತ್ತವೆ ಮತ್ತು ಮಿಂಚು ತಯಾರಾಗುತ್ತದೆ. ಅದನ್ನು ತಂತಿಗಳ ಮೂಲಕ ಮನೆಗಳಿಗೆ ತಲುಪಿಸುತ್ತಾರೆ.

ನಮ್ಮ ನಾಡಿನ ಕೈಗಾದಲ್ಲಿರುವ ಅಣುಶಕ್ತಿ ಸ್ಥಾವರದ ಬಗ್ಗೆ ಸುದ್ದಿಹಾಳೆಗಳಲ್ಲಿ ಓದಿರುತ್ತೇವೆ. ಅಣುಶಕ್ತಿ ಕುರಿತಾಗಿ ಜಗತ್ತಿನಲ್ಲಿ ಮಾತುಕತೆಗಳು, ವಾದವಿವಾದಗಳು ನಡೆಯುತ್ತಲೇ ಇರುತ್ತವೆ. ಅಣುಗಳ ಮೂಲಕ ಹೇಗೆ ಮಿಂಚಿನ ಶಕ್ತಿಯನ್ನು(electric energy) ತಯಾರಿಸಲಾಗುತ್ತದೆ ಎಂಬುದನ್ನು ನೋಡೋಣ.

ಅಣುಶಕ್ತಿ ತಯಾರಿಸುವಲ್ಲಿ ಎರಡು ಬಗೆಯಿದೆ:

1. ಅಣು ಒಡೆತ (nuclear fission)
2. ಅಣು ಕೂಡಿಕೆ (nuclear fusion)

ಈಗ ಜಗತ್ತಿನಲ್ಲಿರುವ ಎಲ್ಲಾ ಅಣುಶಕ್ತಿ ತಯಾರಿಕೆಯು ಅಣು ಒಡೆತದ ಮೂಲಕವೇ ಆಗುತ್ತಿದೆ. ಅಣು ಒಡೆತದ ಹೊಲಬಿನಲ್ಲಿ(process) ಹೆಚ್ಚು ತೂಕವಿರುವ ಬೇರಡಕವಾದ (ಬೇರು+ಅಡಕ – element) ಯುರೇನಿಯಮ್ ಅನ್ನು ನ್ಯೂಟ್ರಾನ್‌ಗಳ ಮೂಲಕ ಸಿಡಿಸಲಾಗುತ್ತದೆ. ಆಗ ಅದು ಎರಡು ಕಡಿಮೆ ತೂಕವಿರುವ ಬೇರಡಕಗಳಾಗಿ ಮಾರ್ಪಾಟಾಗುತ್ತದೆ. ಅದರ ಜೊತೆ ಇನ್ನೊ ಹೆಚ್ಚು ನ್ಯೂಟ್ರಾನ್‌ಗಳನ್ನು, ಗಾಮಾ ಕದಿರುಗಳನ್ನು(gamma rays) ಹುಟ್ಟಿಸುತ್ತದೆ ಮತ್ತು ಮಿಕ್ಕಿರುವ ತೂಕ ಹುರುಪಾಗಿ(mass to energy) ಮಾರ್ಪಾಟಾಗುತ್ತದೆ. ಅಣು ಒಡೆತದಿಂದ ಬರುವ ಹುರುಪು ತುಂಬಾ ಕಾವನ್ನು(heat energy) ಹೊರಸೂಸುತ್ತದೆ. ಈ ಕಾವನ್ನು ನೀರನ್ನು ಕುದಿಸಲಿಕ್ಕೆ ಬಳಸಲಾಗುತ್ತದೆ. ನೀರು ಕುದ್ದ ಬಳಿಕ ಬರುವ ಆವಿಯನ್ನು(steam) ಮುಂಚೆ ತಿಳಿಸಿದಂತೆ ಮಿಂಚಿನ ಶಕ್ತಿಯನ್ನು (electric energy) ತಯಾರಿಸುವುದಕ್ಕೆ ಬಳಸುತ್ತಾರೆ. ತೋರಿಯಮ್ (Th) ಮತ್ತು ಪ್ಲುಟೋನಿಯಮನ್ನು (Pu) ಕೂಡ ಅಣುಶಕ್ತಿ ಹುಟ್ಟಿಸುವುದಕ್ಕೆ ಬಳಸಲಾಗುತ್ತದೆ.

ಈಗ ಮೂರು ಬೇರೆ ಬೇರೆ ಬಗೆಗಳಲ್ಲಿ ಮಿಂಚನ್ನು ತಯಾರಿಸುವದನ್ನು ಮೇಲೆ ಕಂಡಿದ್ದೇವೆ. ಈ ಮೂರು ಬಗೆಗಳಿಗೆ ಅದರದ್ದೇ ಕೊರತೆಗಳಿವೆ.
1. ಮೊದಲಿಗೆ ರಾಯಚೂರಿನಲ್ಲಿ ಇದ್ದಿಲಿನ ಮೂಲಕ ತಯಾರಾಗುವ ಮಿಂಚಿನ ಶಕ್ತಿಯಲ್ಲಿ ಯಾವಾಗಲೂ ಇದ್ದಿಲಿನ ಪೂರೈಕೆಯನ್ನು ನೆಚ್ಚಿರುತ್ತದೆ. ಹಾಗಾಗಿ ಇದ್ದಿಲು ಇಲ್ಲ ಅಂದರೆ ಮಿಂಚನ್ನು ತಯಾರಿಸಲಾಗುವುದಿಲ್ಲ. ಮತ್ತೆ ಇದ್ದಿಲು ನೆಲದಲ್ಲಿ ಸಿಗುವ ಪಳೆಯುಳಿಕೆಯ ಉರವಲಾದ್ದರಿಂದ(fossil fuel) ಹೆಚ್ಚು ದಿನಗಳ ಕಾಲ ಅದನ್ನು ನೆಚ್ಚಿ ಕೂರಲಾಗುವುದಿಲ್ಲ. ಅದಕ್ಕಿಂತ ಹೆಚ್ಚಾಗಿ ಇದ್ದಿಲಿನಿಂದ ಬರುವ ಕಸ ಸುತ್ತಮುತ್ತಲ ಪರಿಸರವನ್ನು ಹಾಳುಗೆಡುವುದರಿಂದ ಈ ಬಗೆಯ ತಯಾರಿಕೆ ಅಂತಹ ಹಸನಾದದುದಲ್ಲ(clean energy) ಎಂಬುದು ಸಾಮಾನ್ಯ ಅನಿಸಿಕೆ.

2. ಶರಾವತಿ, ಶಿವನಸಮುದ್ರದಲ್ಲಿ ತಯಾರಾಗುವ ಮಿಂಚಿನ ಶಕ್ತಿ ಯಾವಾಗಲು ಹರಿಯುವ ಹೊಳೆಯನ್ನು ನೆಚ್ಚಿರುತ್ತದೆ. ಅಂದರೆ ಒಳ್ಳೆ ಮಳೆ ಆದರೆ ಅಣೆಕಟ್ಟುಗಳಿಗೆ ನೀರು ತುಂಬುತ್ತದೆ. ಇಲ್ಲವಾದರೆ ತಿರುಗಾಲಿಗಳಿಗೆ ನೀರು ಒದಗಿಸಲಾಗುವುದಿಲ್ಲ.

3. ಕೈಗಾದಲ್ಲಿ ತಯಾರುಗುವ ಮಿನ್ಕೆ ಅಣು ಒಡೆತದ (nuclear fission) ಮೂಲಕ ತಯಾರಾಗುತ್ತದೆ. ಹೆಚ್ಚು ಅಣುತೂಕವುಳ್ಳ ಯುರೇನಿಯಮ್, ಪ್ಲುಟೋನಿಯಮ್ ಇಲ್ಲವೇ ತೋರಿಯಮನ್ನು ನ್ಯೂಟ್ರಾನ್‌ಗಳ ಮೂಲಕ ಸಿಡಿಸಿ ಎರಡು ಕಡಿಮೆ ಅಣುತೂಕವುಳ್ಳ ಬೇರಡಕಗಳಾಗಿ ಮಾರ್ಪಾಡಾಗುತ್ತದೆ. ಈ ಹೊಲಬಿನಲ್ಲಿ ಆಲ್ಪಾ, ಗಾಮಾ ಕದಿರುಗಳು ಕೂಡ ಹುಟ್ಟಿಕೊಳ್ಳುತ್ತವೆ. ಹೊಸದಾಗಿ ಹುಟ್ಟಿದ ಎರಡು ಬೇರಡಕಗಳೂ ರೇಡಿಯೋಆಕ್ಟಿವ್ ಆಗಿರುತ್ತದೆ. ಅಂದರೆ ಅವು ಕೂಡ ಕದಿರುಗಳನ್ನು ಹೊರಸೂಸುತ್ತಿರುತ್ತವೆ. ಮಿಕ್ಕುಳಿದ ಯುರೇನಿಯಮ್, ಪ್ಲುಟೋನಿಯಮ್ ಗಳೂ ಕೂಡ ಹಾನಿಕಾರಕವೇ. ಒಟ್ಟಾರೆ ಇವೆಲ್ಲವನ್ನು ಅಣುಕಸ(nuclear waste) ಎಂದು ಗುರುತಿಸಲಾಗುತ್ತದೆ. ಇವು ಮಾನವನ ಹದುಳಕ್ಕೆ (human health) ಕುತ್ತನ್ನು(hazardous) ಉಂಟುಮಾಡುವಂತಹ ವಸ್ತುಗಳು.

ಅಣುಕಸವನ್ನು ಹೇಗೆ ಅಡಗಿಸಬೇಕು ಎಂಬುದು ಸಾಕಷ್ಟು ಮಾತುಕತೆಗೆ ಒಳಗಾಗಿರುವ ವಿಷಯವಾಗಿದೆ. ಈ ಮೇಲಿನ ಮೂರು ಕಾರಣಗಳಿಂದಾಗಿ ಈಗ ಸದ್ಯದಲ್ಲಿ ಅಣು ಕೂಡಿಕೆಯ(Nuclear Fusion) ಮೂಲಕ ಮಿಂಚಿನ ಶಕ್ತಿಯನ್ನು ತಯಾರಿಸುವುದು ಹೆಚ್ಚೆಚ್ಚು ಗಮನ ಸೆಳೆಯುತ್ತಿದೆ.

ಅಣು ಕೂಡಿಕೆಯ ಮೂಲಕ ಹೇಗೆ ಮಿಂಚನ್ನು ತಯಾರಿಸಬಹುದು?

ಅಣು ಒಡೆತದ ಹೊಲಬಿನಲ್ಲಿ (process) ಒಂದು ಹೆಚ್ಚು ತೂಕವುಳ್ಳ ಅಣುವನ್ನು ಎರಡು ಕಡಿಮೆ ತೂಕವುಳ್ಳ ಅಣುಗಳಾಗಿ ಒಡೆಯಲಾಗುತ್ತದೆ. ಆದರೆ ಅಣು ಕೂಡಿಕೆಯಲ್ಲಿ ಎರಡು ಚಿಕ್ಕ ಅಣುಗಳು ಕೂಡುತ್ತವೆ. ಹೊಸದಾಗಿ ರೂಪಗೊಂಡ ಅಣುವಿಗೂ ಮೊದಲು ಕೂಡಿಕೆಯಾದ ಎರಡು ಚಿಕ್ಕ ಅಣುಗಳಿಗೂ ಇರುವ ತೂಕದ ವ್ಯತ್ಯಾಸವು (mass deficit) ಶಕ್ತಿಯಾಗಿ ಮಾರ್ಪಾಡಾಗುತ್ತದೆ.

ಈಗ ಹೈಡ್ರೋಜನನ್ನು ಉದಾಹರಣೆಯಾಗಿ ತೆಗೆದುಕೊಂಡು ಅಣು ಕೂಡಿಕೆಯ ಮೂಲಕ ಹೇಗೆ ಶಕ್ತಿಯನ್ನು ಹುಟ್ಟಿಸಬಹುದು ಎಂದು ನೋಡೋಣ. ಹೈಡ್ರೋಜನ್ ಒಂದು ಪ್ರೋಟಾನ್ ಇರುವ ಅಣು. ಆದರೆ ಒಂದಕ್ಕಿಂತ ಹೆಚ್ಚು ನ್ಯೂಟ್ರಾನ್‌ಗಳು ಇರಬಲ್ಲವು. ಒಂದು ನ್ಯೂಟ್ರಾನ್ ಇದ್ದರೆ ಡ್ಯೂಟಿರಿಯಮ್ ಮತ್ತು ಎರಡು ನ್ಯೂಟ್ರಾನ್‌ಗಳಿದ್ದರೆ ಟ್ರೈಶಿಯಮ್ ಎನ್ನುತ್ತಾರೆ. ಇವರೆಡನ್ನು ಕೂಡಿದಾಗ ಏನಾಗುತ್ತದೆ ನೋಡೋಣ. ಕೆಳಗಿನ ಚಿತ್ರದಲ್ಲಿ ಕಾಣುವಂತೆ ಡ್ಯೂಟಿರಿಯಮ್ ಮತ್ತು ಟ್ರೈಶಿಯನ್ ಕೂಡಿದಾಗ ಹೊಸ ಅಣುವಾದ ಹೀಲಿಯಮ್ ರೂಪಗೊಳ್ಳುತ್ತದೆ. ಇದರೊಟ್ಟಿಗೆ ಒಂದು ನ್ಯೂಟ್ರಾನ್ ಕೂಡ ಹೊರಬರುತ್ತದೆ ಮತ್ತು ಹೆಚ್ಚು ಶಕ್ತಿ ಹುಟ್ಟುತ್ತದೆ.

ಈ ಕೂಡಿಕೆಯಿಂದ ಎಷ್ಟು ಶಕ್ತಿ ಹುಟ್ಟುತ್ತದೆ ಎಂದು ಲೆಕ್ಕ ಹಾಕಬಹುದು. ಮೇಲೆ ತೋರಿದ ರಿಯಾಕ್ಷನ್ ಅನ್ನು ಸರಿದೂಗಿಸೋಣ (balancing the reaction).

2D1 + 3T1 -> 4He + 1n0

mD = (2-0.000994) mH

mT = (3-0.006284)mH

mHe = (4-0.027404)mH

mn = (1+0.001378)mH

dm = 0.0187mH

mH = 1.6727. 10-27 kg

E = mc2 = 0.0187mHc2 = 2.8184. 10-12 J

E = 2.8184. 10-12 / 1.6022.10-19 eV = 17.56MeV

ಒಂದು ಕೆಜಿ ಡ್ಯೂಟಿರಿಯಮ್ ಟ್ರೈಶಿಯಮ್ ಬೆರಕೆಗೆ ಒಟ್ಟು ರಿಯಾಕ್ಷನ್ ಗಳ ಎಣಿಕೆ(total number of reactions);

N = (0.5)/2.5 X 1.67 X 10-27 = 1.2 X 1026

E = N 2.8184. 10-12 J = 3.4 X 1014 J

24 ಗಂಟೆಗಳಲ್ಲಿ 4 GW ಶಕ್ತಿ.

ಬರಿ ಒಂದು ಕೆಜಿ ಡ್ಯೂಟಿರಿಯಮ್-ಟ್ರೈಶಿಯಮ್ ಬೆರೆತದಿಂದ ಈ ಮಟ್ಟದಲ್ಲಿ ಶಕ್ತಿಯನ್ನು ಹುಟ್ಟಿಸಬಹುದು. ಅದರ ಜೊತೆ ಅಣು ಕೂಡಿಕೆಯ ಹೊಲಬಿನಿಂದ ಸುತ್ತಮುತ್ತಲಿನ ಪರಿಸರಕ್ಕೆ ಯಾವುದೇ ತೊಂದರೆಯಿಲ್ಲ(environmental friendly). ಬೂದಿ(ash), ಕರ‍್ಪು(carbon), ಹೊಗೆ(smoke), ಕೊಳಕು ನೀರು(polluted water) ಮತ್ತು ಕೆಟ್ಟಗಾಳಿ ಇಂತಹ ಯಾವುದೇ ಹಾನಿಯಿಲ್ಲ.

ಹಾಗಾದರೆ ಅಣು ಕೂಡಿಕೆಯನ್ನು ಯಾಕೆ ನಾವು ಯಾಕೆ ಬಳಸುತ್ತಿಲ್ಲ ಎಂಬುದನ್ನು ಮುಂದಿನ ಬರಹದಲ್ಲಿ ನೋಡೋಣ.

(ಚಿತ್ರ ಸೆಲೆ: wikipediakompulsa.com)

ಏನಿದು ಮೋಡ ಬಿತ್ತನೆ?

ಪ್ರಶಾಂತ ಸೊರಟೂರ.

‘ಮೋಡ ಬಿತ್ತನೆ’, ಕೆಲವು ವರ್ಷಗಳ ಹಿಂದೆ ಹೀಗೊಂದು ಪದ ಒಮ್ಮೆಲೇ ಬೆಳಕಿಗೆ ಬಂತು, ಬರಗಾಲದಿಂದ ತತ್ತರಿಸಿದ್ದ ಕರ್ನಾಟಕಕ್ಕೆ ಮಳೆ ಬರಿಸಲು ಮೋಡದಲ್ಲಿಯೇ ವಿಮಾನದಿಂದ ಬಿತ್ತನೆಯ ಕೆಲಸವಂತೆ, ಅದು ಮಳೆ ತರುತ್ತದಂತೆ ಅನ್ನುವ ಮಾತುಗಳು ಎಲ್ಲೆಡೆ ಹರಡ ತೊಡಗಿದ್ದವು. ನೆಲದಲ್ಲಿ ಬಿತ್ತನೆ ಮಾಡಿದ, ನೋಡಿದ ಕನ್ನಡಿಗರಿಗೆ ಬಾನಿನಲ್ಲಿ ಮಾಡುವ ಇದ್ಯಾವ ಬಗೆಯ ಬಿತ್ತನೆ ಅನ್ನಿಸಿತ್ತು. ಕೆಲ ಊರುಗಳ ಮೇಲೆ ವಿಮಾನಗಳು ಹಾರಾಡಿ ’ಮೋಡ ಬಿತ್ತನೆ’ಯಿಂದ ಮಳೆ ಸುರಿಸಿದ್ದೂ ಸುದ್ದಿಯಾಯಿತು. ಇಡೀ ದೇಶದಲ್ಲಿಯೇ ಈ ತರಹ ಮಳೆ ಸುರಿಸಲು ಮೋಡ ಬಿತ್ತನೆಗೆ ಕೈಹಾಕಿದ ಮೊದಲ ನಾಡು ಕರ್ನಾಟಕ ಅನ್ನುವ ಸುದ್ದಿಯಾಯಿತು.

ಮೋಡ ಬಿತ್ತನೆಯ ಬಗ್ಗೆ ತಿಳಿದುಕೊಳ್ಳುವ ಮುನ್ನ, ಮೋಡ ಮತ್ತು ಮಳೆಯ ಬಗ್ಗೆ ಒಂಚೂರು ತಿಳಿದುಕೊಳ್ಳೋಣ. ಕಡಲು, ಹೊಳೆ ಮತ್ತು ನೆಲದ ಹಲವೆಡೆ ಇರುವ ನೀರು ಬಿಸಿಲಿಗೆ ಕಾಯ್ದು ಆವಿಯಾಗುತ್ತದೆ. ಹೀಗೆ ಉಂಟಾದ ನೀರಾವಿಯು ಗಾಳಿಯೊಡನೆ ಬೆರೆತು ಬಾನಿನೆಡೆಗೆ ಸಾಗ ತೊಡಗುತ್ತದೆ. ಗಾಳಿಯು ಬಿಸಿಯಾದಷ್ಟು ಅದು ತನ್ನಲ್ಲಿ ಹೆಚ್ಚೆಚ್ಚು ನೀರಾವಿಯನ್ನು ಅಡಗಿಸಿಟ್ಟುಕೊಳ್ಳಬಲ್ಲದು, ಆದರೆ ನೆಲದಿಂದ ಮೇಲೆ-ಮೇಲೆ ಹೋದಂತೆಲ್ಲಾ ಅಲ್ಲಿರುವ ಬಿಸುಪು (temperature) ಕಡಿಮೆಯಾಗುತ್ತಾ ಹೋಗುತ್ತದೆ. ಒಂದು ಹಂತದಲ್ಲಿ ಬಿಸುಪು ತುಂಬಾ ಕಡಿಮೆಯಾಗಿ ಗಾಳಿಗೆ ತನ್ನಲ್ಲಿ ಇನ್ನಷ್ಟು ನೀರಾವಿಯನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ಈ ಹಂತದ ಗಾಳಿಯನ್ನು ‘ತಣಿದ ಗಾಳಿ’ (saturated air) ಅಂತಾ ಕರೆಯುತ್ತಾರೆ. ಈ ತಣಿದ ಗಾಳಿಯು ತೂಕವಾದ ನೀರಾವಿಯನ್ನು ಹೊತ್ತುಕೊಂಡು ಬಾನಿನಲ್ಲಿ ಒಂದೆಡೆ ನೆಲೆ ನಿಲ್ಲುತ್ತದೆ, ಇವೇ ಮೋಡಗಳು.

ಹೀಗೆ ನೆಲೆಗೊಂಡ ಮೋಡದಲ್ಲಿ ನೀರ ಹನಿಗಳು ತುಂಬಾ ತಂಪಾಗಿದ್ದು ಅವುಗಳ ಬಿಸುಪು (temperature) ಕೆಲವೊಮ್ಮೆ – 40° ಸೆಲ್ಸಿಯಸ್ ಆಗಿರುತ್ತದೆ. ಇಲ್ಲಿ ಇನ್ನೊಂದು ತಿಳಿದುಕೊಳ್ಳಬೇಕಾದ ವಿಶಯವೆಂದರೆ ಇಷ್ಟು ತಂಪಾಗಿದ್ದರೂ ಎಲ್ಲ ಹನಿಗಳು ಗಟ್ಟಿ ಮಂಜಿನ ರೂಪದಲ್ಲಿರದೇ ಕೆಲವು ಹನಿಗಳು ನೀರಿನ ರೂಪದಲ್ಲೇ ಉಳಿದಿರುತ್ತವೆ. ಇದಕ್ಕೆ ಕಾರಣವೆಂದರೆ ಸಾಮಾನ್ಯ ಒತ್ತಡದಲ್ಲಿ 0° ಸೆ. ಹೆಪ್ಪುಗಟ್ಟುವ ನೀರು ಬಾನಿನಲ್ಲಿ, ಮೇಲೆ ಹೋದಂತೆ ಒತ್ತಡ ಕಡಿಮೆ ಇರುವುದರಿಂದ ಅದರ ಹೆಪ್ಪುಗಟ್ಟುವಿಕೆ ಬಿಸುಪು (freezing temperature) ಕಡಿಮೆಯಾಗುತ್ತಾ ಹೋಗುತ್ತದೆ

ಮೋಡಗಳಲ್ಲಿರುವ ಚಿಕ್ಕ ನೀರಿನ ಹನಿಗಳು ಮತ್ತು ಮಂಜಿನ (ಗಟ್ಟಿ ನೀರು) ಹನಿಗಳು ಒಂದಕ್ಕೊಂದು ಬೆಸೆದು ಇಲ್ಲವೇ ಮೋಡದಲ್ಲಿರುವ ಇತರೆ ಪುಟಾಣಿ ಕಣಗಳನ್ನು ಸುತ್ತುವರೆದು ದೊಡ್ಡದಾಗುತ್ತಾ ಹೋಗುತ್ತವೆ. ಹೀಗೆ ದೊಡ್ಡದಾದ ನೀರಿನ, ಮಂಜಿನ ಹನಿ ಹೊತ್ತುಕೊಂಡಿರುವ ಮೋಡಕ್ಕೆ ಅವುಗಳ ತೂಕ ತಾಳಿಕೊಳ್ಳಲು ಆಗದಂತ ಪರಿಸ್ಥಿತಿ ಬಂದುಬಿಡುತ್ತದೆ. ಆಗಲೇ ಅವು ನೆಲಕ್ಕೆ ಮಳೆಯಾಗಿ ಸುರಿಯ ತೊಡಗುತ್ತವೆ.

ಮೋಡಗಳ ಕುರಿತಾದ ಮೇಲಿನ ವಿಷಯದಲ್ಲಿ ಗಮನಿಸಬೇಕಾದುದೆಂದರೆ, ಮೋಡಗಳು ಮಳೆಯಾಗಬೇಕಾದರೆ ಅವುಗಳಲ್ಲಿರುವ ನೀರಿನ ಹನಿಗಳು ಒಂದೋ ಹೆಚ್ಚಾಗಬೇಕು ಇಲ್ಲವೇ ಆ ನೀರ ಹನಿಗಳು ಒಂದಾಗಿ ದೊಡ್ಡದಾಗಬೇಕು. ಇದರಲ್ಲಿ ಎರಡನೇ ಬಗೆಯನ್ನು ಬಳಸಿ ಮಳೆ ತರಿಸುವುದೇ ‘ಮೋಡ ಬಿತ್ತನೆ’ಯ ಹಿಂದಿರುವ ಚಳಕ. ಮೋಡ ಬಿತ್ತನೆಯಲ್ಲಿ, ಬೆಳ್ಳಿಯ ಆಯೋಡಾಯಡ್ ಇಲ್ಲವೇ ಒಣ ಮಂಜು ಎಂದು ಕರೆಯಲ್ಪಡುವ ಗಟ್ಟಿ ಕಾರ್ಬನ್ ತುಣುಕುಗಳನ್ನು ವಿಮಾನಗಳ ಮೂಲಕ ಮೋಡಗಳ ಮೇಲೆ ಚಿಮುಕಿಸಲಾಗುತ್ತದೆ. ಹೀಗೆ ಚಿಮುಕಿಸಿದ ತುಣುಕುಗಳು ಮೋಡದಲ್ಲಿರುವ ನೀರಿನ, ಮಂಜಿನ ಹನಿಗಳನ್ನು ತನ್ನೆಡೆಗೆ ಸೆಳೆದು ದೊಡ್ಡದಾಗಿಸುತ್ತವೆ. ಹೀಗೆ ಒಂದುಗೂಡಿ ದೊಡ್ಡದಾದ ನೀರ ಹನಿಗಳ ಬಾರ ತಾಳಲಾಗದೇ ಮೋಡಗಳು, ಮಳೆಯಾಗಿ ಸುರಿಯ ತೊಡಗುತ್ತವೆ.

‘ಮೋಡ ಬಿತ್ತನೆ’ಯ ಕೆಲಸ ಯಾವಾಗಲೂ ಗೆಲುವು ಕಾಣುತ್ತದೆ ಅನ್ನಲಾಗದು, ಮೋಡದಲ್ಲಿರುವ ನೀರ ಹನಿಗಳ ಗಾತ್ರ, ಅವುಗಳ ಸುತ್ತಿರುವ ವಾತಾವರಣ ಇದರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಜಗತ್ತಿನ ಹಲವೆಡೆ ಮೋಡ ಬಿತ್ತನೆಯ ಕೆಲಸವನ್ನು ಕೈಗೊಂಡರೂ ಎಲ್ಲಾ ಕಡೆ ಇದಕ್ಕೆ ಒಪ್ಪಿಗೆ ಪಡೆಯಲು ಇನ್ನೂ ಆಗಿಲ್ಲ. ಆದರೆ ಚೀನಾ ದೇಶ ಯಾವುದೇ ಅನುಮಾನಗಳನ್ನು ಇಟ್ಟುಕೊಳ್ಳದೇ ’ಮೋಡ ಬಿತ್ತನೆ’ಯಲ್ಲಿ ಪ್ರತಿ ವರ್ಷ ಹೆಚ್ಚಿನ ದುಡ್ಡು ತೊಡಗಿಸುತ್ತಾ ಹೊರಟಿದೆ. ಬೀಜಿಂಗ್ ಒಲಂಪಿಕ್ಸಿನಲ್ಲಿ ಮಳೆಯಿಂದ ಆಟ ಹಾಳಾಗಬಾರದೆಂದು, ಮೋಡ ಬಿತ್ತನೆ ಮಾಡಿ ಆಟಕ್ಕಿಂತ ಹಲವು ದಿನಗಳ ಮೊದಲೇ ಮೋಡಗಳನ್ನು ಮಳೆಯಾಗಿಸಿದ್ದು ಇಲ್ಲಿ ನೆನಪಿಸಿಕೊಳ್ಳಬಹುದು. ಕರ್ನಾಟಕದಲ್ಲಿ 2003 ರಿಂದ ಮೋಡಬಿತ್ತನೆಯನ್ನು ಕೈಗೊಳ್ಳಲಾಗಿದೆ .

ಮಾಹಿತಿ ಸೆಲೆ:

 

ಕಡಲ ತೆರೆಗಳಿಂದ ಮಿಂಚು

ಪ್ರಶಾಂತ ಸೊರಟೂರ.

ಕಲ್ಲಿದ್ದಲು, ಪೆಟ್ರೋಲಿಯಂ ಮುಂತಾದ ಮುಗಿದು ಹೋಗಬಹುದಾದಂತಹ ಉರುವಲುಗಳ ಬದಲಾಗಿ ಮುಗಿದು ಹೋಗಲಾರದಂತಹ ಮತ್ತು ಸುತ್ತಣಕ್ಕೆ ಕಡಿಮೆ ತೊಂದರೆಯನ್ನುಂಟು ಮಾಡುವಂತಹ ಕಸುವಿನ ಸೆಲೆಗಳ ಅರಕೆ ಜಗತ್ತಿನೆಲ್ಲೆಡೆ ಎಡೆಬಿಡದೇ ಸಾಗಿದೆ.

ಈ ನಿಟ್ಟಿನಲ್ಲಿ ಗುಡ್ಡ-ಬೆಟ್ಟದ ಮೇಲೆ ಬೀಸುವ ಗಾಳಿ ಇಲ್ಲವೇ ನೇಸರನ ಬೆಳಕಿನಿಂದ ಮಿಂಚು (ಕರೆಂಟ್) ಉಂಟುಮಾಡುವ ಹೊಸ ಸಲಕರಣೆಗಳನ್ನು ಹಲವಾರು ಕಡೆ ಅಳವಡಿಸಲಾಗುತ್ತಿದೆ. ಇದರಂತೆ ಇತ್ತೀಚಿಗೆ ಬಳಕೆಗೆ ತರಲಾಗುತ್ತಿರುವ ಕಸುವಿನ ಇನ್ನೊಂದು ಸೆಲೆಯೆಂದರೆ ಕಡಲ ತೆರೆಗಳನ್ನು ಬಳಸಿ ಕರೆಂಟ್ ಉಂಟುಮಾಡುವುದು.

ದಂಡೆಯಲ್ಲಿ ಹೊಯ್ದಾಡುವ ತೆರೆಗಳನ್ನು ಇಲ್ಲವೇ ಕಡಲ ನಡುವೆ ಏಳುವ ದೊಡ್ಡ ಅಲೆಗಳು ಹೊಮ್ಮಿಸುವ ಕಸುವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳುವಂತಾದರೆ ಜಗತ್ತಿನ ಹಲವು ನಾಡುಗಳಿಗೆ ಯಾವುದೇ ಅಡೆತಡೆ ಇಲ್ಲದೇ ಮಿಂಚು (ಕರೆಂಟ್) ನೀಡಬಹುದೆಂದು ಎಣಿಕೆಮಾಡಲಾಗಿದೆ. ಆದರೆ ಬಿರುಸಾಗಿ ಅಪ್ಪಳಿಸುವ ಕಡಲ ಅಲೆಗಳನ್ನು ತಡೆದುಕೊಂಡು ಮಿಂಚು ಉಂಟಮಾಡಬಲ್ಲ ಗಟ್ಟಿಯಾದ ಮಿಂಚುಟ್ಟುಕಗಳನ್ನು (electric generators) ತಯಾರಿಸುವುದು ಇಂದು ದೊಡ್ಡ ತೊಡಕಾಗಿದೆ. ಹಾಗಾಗಿ ಕಡಲ ತೆರೆಯ ಕರೆಂಟ್ ಸಲಕರಣೆಗಳು ಇನ್ನೂ ಹೆಚ್ಚಾಗಿ ಬಳಕೆಯಾಗುತ್ತಿಲ್ಲ.

ಈ ನಿಟ್ಟಿನಲ್ಲಿ ಅಮೇರಿಕಾದ ‘Ocean Renewable Power Company’ ಹಲವಾರು ಹೊಸ ಅರಕೆಯ ಕೆಲಸಗಳನ್ನು ನಡೆಸುತ್ತಿದ್ದು, ಇತ್ತೀಚಿಗೆ ಕಡಲೊಳಗೆ 150 ಅಡಿ ಆಳದಲ್ಲಿ ಹೊಸದೊಂದು ಮಿಂಚುಟ್ಟುಕವನ್ನು ಅಣಿಗೊಳಿಸಿದೆ. 98 ಅಡಿ ಅಗಲ ಮತ್ತು 31 ಅಡಿ ಎತ್ತರ ಇರುವ ಅಡಿಪಾಯದ ಮೇಲೆ ಅಲೆಗಳಿಂದ ತಿರುಗುವ ಮಿಂಚುಟ್ಟುಕವನ್ನು ಅಳವಡಿಸಲಾಗಿದೆ.

ಮೊದಲ ಹಂತದಲ್ಲಿ ಕಡಲ ಅಲೆಗಳಿಂದ 150 ಕಿಲೋ ವ್ಯಾಟ್ ಕರೆಂಟಿನ ಕಸುವನ್ನು ಉಂಟುಮಾಡಬಲ್ಲ ಈ ಮಿಂಚುಟ್ಟುಕವು ಮುಂದಿನ ಕೆಲವು ವರುಶಗಳಲ್ಲಿ 5 ಮೆಗಾ ವ್ಯಾಟ್ ಕಸುವನ್ನು ಉಂಟು ಮಾಡುವಷ್ಟು ದೊಡ್ಡದಾಗಿಸಲು ಅಮೇರಿಕಾದ ಕೂಟವು ಗುರಿ ಇಟ್ಟುಕೊಂಡಿದೆ.

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಡಲ ತೆರೆಯ ಕಸುವು ಹೇರಳವಾಗಿ ದೊರೆಯುವಂತದು. ಅಮೇರಿಕಾದಂತೆ ಈ ಕಸುವನ್ನು ನಾವು ಕೂಡ ಸರಿಯಾಗಿ ಬಳಸಿಕೊಳ್ಳಬೇಕಾಗಿದೆ.

(ಸುದ್ದಿಸೆಲೆ: popsci)