ಹಸಿರುಮನೆಯ ಗುಟ್ಟು

ರತೀಶ ರತ್ನಾಕರ.

ಸಣ್ಣ ಸಣ್ಣ ಗಿಡಗಳನ್ನು ಬೆಳಸಲು ಇಲ್ಲವೇ ಹೆಚ್ಚಾಗಿ ಹೂವಿನ ಗಿಡಗಳನ್ನು ಬೆಳಸಲು ಹಸಿರು ಬಣ್ಣದ ಇಲ್ಲವೇ ಬಣ್ಣವಿಲ್ಲದ ಗಾಜು ಇಲ್ಲವೇ ಪ್ಲಾಸ್ಟಿಕ್ ಹೊದ್ದಿರುವ ‘ಹಸಿರು ಮನೆಗಳನ್ನು’ ಎಲ್ಲಾದರೂ ಕಂಡಿರುತ್ತೇವೆ. ಗಿಡಗಳ ಬೆಳವಣಿಗೆಗೆ ಈ ಬಗೆಯ ಬೆಳಸುವಿಕೆ ನೆರವಾಗುತ್ತದೆ ಎಂದು ಅಲ್ಲಲ್ಲಿ ಕೇಳಿರುತ್ತೇವೆ. ಹಾಗದರೆ ಈ ಹಸಿರು ಮನೆಗಳು ಗಿಡಗಳ ಬೆಳವಣಿಗೆಗೆ ಹೇಗೆ ನೆರವಾಗುತ್ತವೆ? ಇದರ ಕೆಲಸವೇನು ಎಂಬುದನ್ನು ಅರಿಯೋಣ ಬನ್ನಿ.

ಹಸಿರುಮನೆಯ ಹಿಂದಿರುವ ಅರಿಮೆ:

ನೇಸರನಿಂದ ನೆಲಕ್ಕೆ ಬೀಳುವ ಬೆಳಕಿನಿಂದಾಗಿ ನೆಲದಲ್ಲಿರುವ ಮಣ್ಣು, ನೀರು ಹಾಗು ಇತರೆ ವಸ್ತುಗಳು ಬಿಸಿಯಾಗುತ್ತವೆ. ಅಂದರೆ ನೇಸರನ ಬೆಳಕಿನ ಶಕ್ತಿಯನ್ನು ಹೀರಿಕೊಂಡು ಅದೇ ಶಕ್ತಿಯನ್ನು ಬಿಸಿಯ ರೂಪದಲ್ಲಿ ಹೊರಬಿಡುತ್ತವೆ ಹೀಗೆ ಹೊರಸೂಸುವ ಬಿಸಿಯು ತಿಳಿಗೆಂಪು ಕದಿರಾಗಿರುತ್ತದೆ (infrared rays). ನೇಸರನ ಬೆಳಕಿನ ಅಲೆಯಗಲ (wavelength) ಮತ್ತು ಮಣ್ಣು/ನೀರು ಹೊರಬಿಡುವ ತಿಳಿಗೆಂಪು ಕದಿರಿನ (infrared rays) ಅಲೆಯಗಲ ಬೇರೆ ಬೇರೆಯಾಗಿರುತ್ತದೆ. ಈ ಅಲೆಯಗಲದ ಆದಾರದ ಮೇಲೆ ಈ ಕಿರಣಗಳು ಕೆಲವು ವಸ್ತುಗಳ ಮೂಲಕ ಹಾದುಹೋಗಲಾರವು. ಉದಾಹರಣೆಗೆಗೆ , ನೇಸರನ ಬೆಳಕು ಗೋಡೆಗಳ ಮೂಲಕ ಹಾದುಹೋಗಲಾಗದು ಆದರೆ ರೇಡಿಯೋ ಅಲೆಗಳು ಗೋಡೆಗಳಮೂಲಕ ಹಾದುಹೋಗವುವು ಅದಕ್ಕೆ ಕಾರಣ ಅವುಗಳ ಅಲೆಯಗಲವೂ ಒಂದು. ಹೀಗೆ ನೇಸರನ ಬೆಳಕು ಗಾಜು/ಪ್ಲಾಸ್ಟಿಕ್ ಮೂಲಕ ಹಾದುಹೋಗುವುದು ಆದರೆ ತಿಳಿಗೆಂಪು ಕದಿರು ತಮ್ಮ ಅಲೆಯಗಲದಿಂದಾಗಿ ಗಾಜು/ಪ್ಲಾಸ್ಟಿಕ್ ಮೂಲಕ ಹಾದುಹೋಗಲಾರವು.

ಒಂದು ಹಸಿರುಮನೆಯು ಕಾಲಿ ಕೋಣೆಯಂತಿದ್ದು ಅದರ ಗೋಡೆ ಹಾಗು ಮಾಡನ್ನು ಗಾಜು ಇಲ್ಲವೇ ಪ್ಲಾಸ್ಟಿಕ್ ನಿಂದ ಕಟ್ಟಿರುತ್ತಾರೆ. ಈ ಗಾಜು/ಪ್ಲಾಸ್ಟಿಕ್ ನಿಂದ ನೇಸರನ ಬೆಳಕು ಹರಿದು ಹಸಿರುಮನೆಯ ಒಳಗೆ ಬರುತ್ತದೆ. ಹೀಗೆ ಒಳಗೆ ಬಂದ ನೇಸರನ ಬೆಳಕು ಮಣ್ಣಿನ ಮೇಲ್ಬಾಗ ಇಲ್ಲವೇ ಗಿಡಗಳಲ್ಲಿರುವ ತೇವವನ್ನು (humidity) ಆರಿಸುತ್ತದೆ ಮತ್ತು ಬಿಸಿಯನ್ನು ಅಂದರೆ ತಿಳಿಗೆಂಪು ಕದಿರನ್ನು (infrared rays) ಹೊರಹಾಕತೊಡಗುತ್ತವೆ.

ಹಸಿರುಮನೆಯ ಒಳಗಿರುವ ಮಣ್ಣು ನೇಸರನ ಬೆಳಕು ಬಿದ್ದೊಡನೆ ಬಿಸಿಯಾಗಿ ಆ ಬಿಸಿಯನ್ನು ಮಣ್ಣಿನ ಮೇಲ್ಬಾಗದಲ್ಲಿರುವ ಗಾಳಿಗೆ ಸಾಗಿಸುತ್ತದೆ. ಇದರಿಂದ ಮಣ್ಣಿನ ಮೇಲ್ಭಾಗದ ಗಾಳಿ ಮೊದಲು ಬಿಸಿಯಾಗತೊಡಗುತ್ತದೆ. ಹೀಗೆ ಬಿಸಿಯಾದ ಗಾಳಿಯ ದಟ್ಟಣೆ (Density) ಕಡಿಮೆಯಿರುವುದರಿಂದ ಇದು ಹರಡಿಕೊಂಡು ನೆಲದಿಂದ ಮೇಲೇರುವುದು ಅದರ ಗುಣ ಹಾಗಾಗಿ ಬಿಸಿಗಾಳಿಯು ಹರಡಿಕೊಂಡು ಮೇಲೇರುತ್ತದೆ. ಹಸಿರುಮನೆಯ ಚಾವಣಿಯ ಹತ್ತಿರದ ತಂಪನೆಯಗಾಳಿಯು ಬಿಸಿಗಾಳಿಗಿಂತ ಹೆಚ್ಚು ದಟ್ಟಣೆ ಹೊಂದಿರುವುದರಿಂದ ಇದು ಕೆಳಭಾಗಕ್ಕೆ ಬರುತ್ತದೆ. ಈ ತಂಪುಗಾಳಿಯು ಮಣ್ಣಿನಿಂದ ಹೊರಬರುತ್ತಿರುವ ಬಿಸಿಯನ್ನು ಹೀರಿಕೊಂಡು ಬಿಸಿಗಾಳಿಯಾಗಿ ಮತ್ತೆ ಮೇಲೇರತೊಡಗುತ್ತದೆ. ಹೀಗೆ ಮಣ್ಣಿನ ಮೇಲ್ಬಾಗದ ಕಡೆಯಿಂದ ಹಸಿರುಮನೆಯ ಚಾವಣಿಯ ಕಡೆಗೆ ಗಾಳಿಯು ಬಿಸಿಯಾಗತೊಡಗುತ್ತದೆ.

ಹಸಿರುಮನೆಗೆ ಬಳಸುವ ಗಾಜು/ಪ್ಲಾಸ್ಟಿಕ್‍ನ ಗುಣವೆಂದರೆ ಅದು ನೇಸರನ ಬೆಳಕನ್ನು ತನ್ನ ಮೂಲಕ ಹರಿಯಲು ಬಿಡುತ್ತದೆ ಆದರೆ ಹೆಚ್ಚು ಅಲೆಯಗಲ ಹೊಂದಿರುವ ಕಿರಣಗಳನ್ನು ಅಂದರೆ infrared rays ನ್ನು ತನ್ನ ಮೂಲಕ ಹರಿಯಲು ಬಿಡುವುದಿಲ್ಲ ಎಂದು ಮೊದಲೇ ತಿಳಿದಿದ್ದೇವೆ. ಹೀಗಾಗಿ ಮಣ್ಣಿನಿಂದ ಹೊರಬಂದ ಬಿಸಿಯು ಹಸಿರುಮನೆಯ ಗಾಳಿಗೆ ಸೇರಿ ಗಾಜು/ಪ್ಲಾಸ್ಟಿಕ್ ಮೂಲಕ ಹೊರಹೋಗಲಾಗದೆ ಇರುತ್ತದೆ. ಇದರಿಂದ ಹಸಿರುಮನೆಯ ಒಳಗಿನ ಗಾಳಿಯು ಬಿಸಿಯಾಗಿ, ಹಸಿರುಮನೆ ಹೊರಗಿನ ಗಾಳಿಯ ಬಿಸುಪಿಗಿಂತ (temperature) ಹೆಚ್ಚಿನ ಬಿಸುಪನ್ನು ಹೊಂದಿರುತ್ತದೆ. ಈ ಎಲ್ಲಾ ಕಾರಣಗಳಿಂದಾಗಿ ಹಸಿರುಮನೆಯ ಒಳಗೆ ಯಾವಾಗಲೂ ಹೊರಗಿನ ಗಾಳಿಪಾಡಿಗಿಂತ ಹೆಚ್ಚಿನ ಬಿಸುಪು ಇರುತ್ತದೆ. ಈ ಹೆಚ್ಚಿನ ಬಿಸುಪು ಗಿಡಗಳ ಬೆಳವಣಿಗೆಗೆ ಹೇಗೆ ನೆರವಾಗುತ್ತದೆ ಎಂಬುದನ್ನು ಮುಂದೆ ನೋಡೋಣ.

ಹಗಲಿನ ಹೊತ್ತು ನೇಸರನ ಬೆಳಕಿನಿಂದ ಹಸಿರುಮನೆಯ ಒಳಗೆ ಹೆಚ್ಚಿನ ಬಿಸುಪು ಇದ್ದರೆ ಇನ್ನೂ ಇರುಳಿನ ಹೊತ್ತಿನಲ್ಲಿ ಇಲ್ಲಿ ಬೆಚ್ಚಗಿನ ಗಾಳಿ ಇರುತ್ತದೆ. ಇದಕ್ಕೆ ಕಾರಣ, ಹಗಲೆಲ್ಲಾ ನೇಸರನ ಬೆಳಕಿನಿಂದ ಬಿಸಿಯಾದ ಹಸಿರು ಮನೆಯೊಳಗಿನ ಮಣ್ಣು ತನ್ನಲ್ಲಿರುವ ಬಿಸುಪನ್ನು ರಾತ್ರಿಯ ಹೊತ್ತು ಹೊರಗಾಳಿಗೆ ಬಿಡಲಾರಂಬಿಸುತ್ತದೆ. ಹಾಗು ಈ ಬಿಸಿಯನ್ನು ಗಾಜು/ಪ್ಲಾಸ್ಟಿಕ್ಕಿನ ಗೊಡೆಯ ನೆರವಿನಿಂದ ಹಸಿರುಮನೆಯ ಒಳಗೇ ಹಿಡಿದಿಡಿಲಾಗುತ್ತದೆ. ಹಾಗಾಗಿ ಹಸಿರು ಮನೆಯ ಒಳಗಿನ ಬಿಸುಪು ಹೊರಗಿನ ಗಾಳಿಯ ಬಿಸುಪಿಗಿಂತ ಹೆಚ್ಚಿರುತ್ತದೆ ಮತ್ತು ಇದು ಗಿಡಗಳ ಸುತ್ತಲಿನ ಗಾಳಿಯನ್ನು ಕೂಡಲೇ ತಂಪಾಗುವುದನ್ನು ತಡೆಯುತ್ತದೆ.

ಗಿಡಗಳ ಬೆಳವಣಿಗೆಗೆ ಹಸಿರುಮನೆ ಹೇಗೆ ನೆರವಾಗುತ್ತದೆ?
ನೇಸರನ ಬೆಳಕನ್ನು ಹಸಿರುಮನೆಯ ಒಳಗೆ ಹಾಯಿಸಿ ಅದರಿಂದ ಬಿಸಿಯಾದ ಮಣ್ಣು/ಗಿಡ/ನೀರಿನಿಂದ ಹೊರಬರುವ ತಿಳಿಗೆಂಪು ಕದಿರನ್ನು (infrared rays) ಹಿಡಿದಿಟ್ಟುಕೊಳ್ಳುವುದರಿಂದ ಗಿಡಗಳ ಬೆಳವಣಿಗೆಗೆ ಹೇಗೆ ನೆರವಾಗುತ್ತದೆ ಎಂಬುದನ್ನು ನೋಡೋಣ.

 

1. ಹೆಚ್ಚಿನ ಬಿಸುಪು ಗಿಡದ ಬೆಳವಣಿಗೆಗೆ ಉಪಕಾರಿ:
ಪ್ರತಿಯೊಂದು ಮರಗಿಡಗಳು ಸೂಲುಗೂಡುಗಳಿಂದ (cell) ಆಗಿರುತ್ತದೆ. ಈ ಸೂಲುಗೂಡುಗಳಲ್ಲಿ ದಿನಕ್ಕೆ ನೂರಾರು ಬಗೆಯ ರಾಸಾಯನಿಕ ಚಟುವಟಿಕೆಗಳು (chemical reaction) ನಡೆಯುತ್ತಿರುತ್ತವೆ, ಇವು ಸೂಲುಗೂಡುಗಳ ಬೆಳವಣಿಗೆಗೆ ನೆರವಾಗುತ್ತವೆ. ಹೀಗೆ ನಡೆಯುವ ರಾಸಾಯನಿಕ ಚಟುವಟಿಕೆಗಳಿಗೆ ದೊಳೆಗಳು (enzymes) ನೆರವನ್ನು ನೀಡುತ್ತವೆ. ಈ ದೊಳೆಗಳು ರಾಸಾಯನಿಕ ಚಟುವಟಿಕೆಗೆ ಬಿರುಗೆ (catalyst)ಯಂತೆ ಕೆಲಸ ಮಾಡುತ್ತವೆ. ಗಿಡದ ಸೂಲುಗೂಡುಗಳ ರಾಸಾಯನಿಕ ಚಟುವಟಿಕೆಯಲ್ಲಿ ‘ಬೆಳಕಿನ ಅಡುಗೆ ‘(photosynthesis) ಕೂಡ ಒಂದು. ಹೀಗೆ ಬೆಳಕಿನ ಒಂದುಗೆಗೆ ನೆರವಾಗುವ ದೊಳೆಗಳು ಕೆಲವು ಹುಳಿಯಳತೆ (pH) ಮತ್ತು ಬಿಸುಪಿನಲ್ಲಿ ಚೆನ್ನಾಗಿ ಕೆಲಸಮಾಡುತ್ತವೆ. ಅತಿ ಕಡಿಮೆ ಹುಳಿಯಳತೆ ಮತ್ತು ಕಡಿಮೆ ಬಿಸುಪು ಇದ್ದರೆ ಈ ದೊಳೆಗಳ ಕೆಲಸ ಕುಂದುತ್ತದೆ. ಹಾಗೆಯೇ ಅತಿ ಹೆಚ್ಚು ಹುಳಿಯಳತೆ ಮತ್ತು ಬಿಸುಪು ಇದ್ದರೂ ಈ ದೊಳೆಗಳು ತಮ್ಮ ಕೆಲಸಮಾಡಲಾರವು ಮತ್ತು ಸಾಯುಲೂ ಬಹುದು. ಹಾಗಾಗಿ, ಈ ದೊಳೆಗಳು ಚೆನ್ನಾಗಿ ತಮ್ಮ ಬಿರುಗೆಯ ಕೆಲಸವನ್ನು ಚೆನ್ನಾಗಿ ಮಾಡಲು ಒಂದು ಒಳ್ಳೆಯ ಬಿಸುಪು ಇರಬೇಕಾಗುತ್ತದೆ. ದೊಳೆಗಳ ಬಗೆಯ ಆಧಾರದ ಮೇಲೆ ಅವು ಹೆಚ್ಚು ಕೆಲಸ ಮಾಡುವ ಬಿಸುಪು ಬೇರೆ ಬೇರೆಯಾಗಿರುತ್ತದೆ.

ಹಸಿರುಮನೆಯ ಒಳಗೆ ಹೊರಗಿನ ಗಾಳಿಗಿಂತ ಹೆಚ್ಚಿನ ಬಿಸುಪು ಇರುವುದರಿಂದ ಗಿಡದ ಸೂಲುಗೂಡುಗಳ ದೊಳೆಗಳು ಈ ಬಿಸುಪಿನಲ್ಲಿ ತಮ್ಮ ಕೆಲಸವನ್ನು ಚೆನ್ನಾಗಿ ನಡೆಸಿ ಬೆಳಕಿನ ಒಂದುಗೆಯನ್ನು ನಡೆಸುತ್ತಿರುತ್ತವೆ. ಗಿಡಗಳಿಗೆ ಬೇಕಾದ ಬಿಸುಪನ್ನು ಮೊದಲೇ ತಿಳಿದುಕೊಂಡು ಆ ಬಿಸುಪನ್ನು ಹಸಿರುಮನೆಯ ಒಳಗೆ ಕಾದುಕೊಳ್ಳಬೇಕಾಗುತ್ತದೆ. ಒಂದು ವೇಳೆ ನೇಸರನ ಬೆಳಕು ಹೆಚ್ಚಾಗಿ ಹಸಿರುಮನೆಯ ಒಳಗಿನ ಬಿಸುಪು ಬೇಕಾದ ಬಿಸುಪಿಗಿಂತ ಹೆಚ್ಚಾದರೆ ಗಾಳಿಕಿಂಡಿಗಳ (Ventilator) ಮೂಲಕ ಬಿಸಿಗಾಳಿಯನ್ನು ಹೊರಹಾಕಿ ಹೊರಗಿನ ತಂಪುಗಾಳಿಯನ್ನು ಹಸಿರುಮನೆಯ ಒಳಗೆ ಬರುವಂತೆ ಏರ್ಪಾಡು ಮಾಡಬೇಕಾಗುತ್ತದೆ. ಅದಕ್ಕಾಗಿ ಹಸಿರುಮನೆಯಲ್ಲಿ ಗಾಳಿಕಿಂಡಿಗಳನ್ನು ಇಟ್ಟಿರಬೇಕಾಗುತ್ತದೆ. ಹಸಿರುಮನೆಯ ಕಿಟಕಿ ಬಾಗಿಲುಗಳು ಕೂಡ ಗಾಳಿಕಿಂಡಿಗಳಾಗಿ ಕೆಲಸ ಮಾಡುತ್ತವೆ. ಹೀಗೆ ಹಗಲೆಲ್ಲಾ ಬಿಸುಪಿನಲ್ಲಿ ಹೆಚ್ಚಿನ ಏರುಪೇರಾಗದೇ, ಬೇಕಾದ ಬಿಸುಪನ್ನು ಕಾಯ್ದುಕೊಳ್ಳುವುದರಿಂದ ಗಿಡದ ದೊಳೆಗಳು ನೇಸರನ ಬೆಳಕು ಸಿಗುವವರೆಗೂ ಚೆನ್ನಾಗಿ ಕೆಲಸಮಾಡಿ ಬೆಳಕಿನ ಅಡುಗೆಯನ್ನು ನಡೆಸುತ್ತವೆ. ಇದರಿಂದ ಹಸಿರು ಮನೆಯ ಒಳಗೆ ಗಿಡಗಳು ಬೇಗನೇ ಮತ್ತು ಚೆನ್ನಾಗಿ ಬೆಳೆಯುತ್ತವೆ.

2. ಹೆಚ್ಚಿನ ತೇವ (humidity) ಗಿಡದ ಬೆಳವಣಿಗೆಗೆ ಉಪಕಾರಿ:
ನೇಸರನ ಬೆಳಕಿದ್ದಾಗ ಬೆಳಕಿನ ಒಂದುಗೆಯನ್ನು ಗಿಡಗಳು ನಡೆಸುತ್ತವೆ ಎಂದು ನಾವು ಮೊದಲೇ ತಿಳಿದಿದ್ದೇವೆ. ಈ ಬೆಳಕಿನ ಒಂದುಗೆಗೆ ನೀರನ್ನೂ ಕೂಡ ಗಿಡಗಳು ಬಳಸುತ್ತವೆ. ಹಾಗಾಗಿ ಹಸಿರುಮನೆಯ ಒಳಗೆ ಸಾಕಷ್ಟು ನೀರಿನ ಏರ್ಪಾಡು ಗಿಡಗಳಿಗೆ ಬೇಕಾಗುತ್ತದೆ. ಮಣ್ಣಿನಿಂದ ಆವಿಯಾದ ನೀರಿನ ತೇವ ಮತ್ತು ಗಿಡಗಳ ಬೆಳಕಿನ ಅಡುಗೆಯಿಂದ ಹೊರಬಂದ ತೇವ ಹಸಿರುಮನೆಯ ಒಳಗೆಯೇ ಇರುತ್ತದೆ, ಗಾಜು/ಪ್ಲಾಸ್ಟಿಕ್ ಗೋಡೆಗಳನ್ನು ದಾಟಿ ತೇವಾಂಶವು ಹೊರಹೋಗಲಾಗದು. ಇದರಿಂದ ಮಣ್ಣಿನಲ್ಲಿರುವ ನೀರು ಬೇಗನೆ ಆವಿಯಾಗುವುದನ್ನು ತಪ್ಪಿಸಬಹುದು ಮತ್ತು ಈ ನೀರನ್ನು ಗಿಡಗಳ ಬೆಳಕಿನ ಅಡುಗೆಗೆ ಒದಗಿಸುತ್ತಿರ ಬಹುದು. ಒಂದು ವೇಳೆ, ಹಸಿರು ಮನೆಯ ಒಳಗೆ ತೇವಾಂಶವು ಅಗತ್ಯಕ್ಕಿಂತ ಹೆಚ್ಚಾದರೆ ಗಿಡಗಳಿಗೆ ಬೆಳಕಿನ ಅಡುಗೆಯಿಂದ ತೇವಾಂಶವನ್ನು ಹೊರಹಾಕಲು ತೊಡಕಾಗುತ್ತದೆ. ಹಾಗಾಗಿ ತೇವಾಂಶವನ್ನು ಬೇಕಾದಷ್ಟು ಮಾತ್ರ ಕಾಯ್ದುಕೊಳ್ಳಲು ಮತ್ತೊಮ್ಮೆ ಗಾಳಿಕಿಂಡಿಗಳ ನೆರವನ್ನು ಪಡೆಯಬಹುದು. ಒಳಗಿರುವ ತೇವದ ಗಾಳಿ ಹೊರಹೋಗಿ ಹೊರಗಿನ ಗಾಳಿ ಒಳಬರುವಂತೆ ಗಾಳಿಕಿಂಡಿಗಳನ್ನು ಹಸಿರುಮನೆಗಳಲ್ಲಿ ಅಳವಡಿಸಲಾಗಿರುತ್ತದೆ.

3. ಹೊರಗಿನ ಕ್ರಿಮಿಕೀಟಗಳಿಂದ ಕಾಯುವುದು.
ಹಸಿರುಮನೆಯು ಗಾಜು/ಪ್ಲಾಸ್ಟಿಕ್ ನ ಗೋಡೆಗಳಿಂದ ಕಟ್ಟಿರುವುದರಿಂದ ಗಿಡಗಳ ಬೆಳವಣಿಗೆಗೆ ತೊಂದರೆ ಕೊಡುವ ಹೊರಗಿನ ಕ್ರಿಮಿಕೀಟಗಳಿಂದ ದೂರವಿಡಬಹುದಾಗಿದೆ.

4. ಕೆಟ್ಟ ಗಾಳಿಪಾಡಿನಿಂದ ಕಾಯುವುದು.
ಹಸಿರುಮನೆಯ ಗಿಡಗಳನ್ನು ಅತಿ ಹೆಚ್ಚಿನ ಮಳೆ, ಗಾಳಿ ಮತ್ತು ಬಿಸಿಲಿನಿಂದ ಆಗುವ ತೊಂದರೆಗಳಿಂದ ಕಾಪಾಡಬಹುದು. ಅಲ್ಲದೇ ಇರುಳಿನ ಹೆಚ್ಚು ಹೊತ್ತು ಹಸಿರುಮನೆಯ ಒಳಗೆ ಬೆಚ್ಚಗಿನ ಗಾಳಿ ಇರುವುದರಿಂದ ತಂಪುಗಾಳಿಯಿಂದ ಗಿಡಗಳಿಗೆ ಆಗುವ ತೊಂದರೆಗಳನ್ನು ತಪ್ಪಿಸಬಹುದು. ಕೆಲವು ಕಡೆ ಹಸಿರುಮನೆಗಳಿಗೆ ಹಸಿರುಬಣ್ಣದ ಗಾಜು/ಪ್ಲಾಸ್ಟಿಕ್ ಅನ್ನು ಬಳಸಿರುತ್ತಾರೆ, ಇದು ನೇಸರನ ಬಿಸಿಲು ಅಗತ್ಯಕ್ಕಿಂತ ಹೆಚ್ಚಾಗಿ ಹಸಿರುಮನೆಯ ಒಳಗೆ ಬರದಂತೆ ತಡೆಯುತ್ತದೆ.

ಹೀಗೆ, ಹಸಿರುಮನೆಯನ್ನು ಬಳಸಿ ಗಿಡಗಳನ್ನು ಬೆಳಸುವುದರಿಂದ ಗಿಡಗಳಿಗೆ ಬೇಕಾದ ಬಿಸುಪು ಮತ್ತು ತೇವಾಂಶ ದಿನದ ಹೆಚ್ಚುಕಾಲ ಸಿಗುತ್ತಿರುತ್ತದೆ. ಇದರಿಂದ ಗಿಡಗಳು ತಮ್ಮ ಬೆಳಕಿನ ಒಂದುಗೆಯನ್ನ್ಯು ನಡೆಸಿ ಆದಷ್ಟು ಬೇಗ ಮತ್ತು ಚೆನ್ನಾಗಿ ಬೆಳೆಯುತ್ತವೆ. ಹಸಿರುಮನೆಯ ಬಿಸುಪು ಹಾಗು ತೇವಾಂಶವನ್ನು ನಮಗೆ ಬೇಕಾದ ಬಗೆಯಲ್ಲಿ ಹಿಡಿದಿಟ್ಟುಕೊಳ್ಳಬಹುದಾಗಿದೆ. ಇದು ಹೆಚ್ಚು ಇಳುವರಿ ತರುವಲ್ಲಿ ನೆರವಾಗುತ್ತದೆ.

(ಮಾಹಿತಿ ಸೆಲೆ: www.ishs.org420magazine)

(ಚಿತ್ರ ಸೆಲೆ: wikipedia)

ಬಾನಿನ ಬಣ್ಣವೇಕೆ ನೀಲಿ ಇಲ್ಲವೇ ಕೆಂಪು?

ರಘುನಂದನ್.

ನಮ್ಮ ಮೇಲಿರುವ ತಿಳಿಯಾಗಸದ ಬಣ್ಣ ನೀಲಿಯಾಗಿರುತ್ತದೆ ಎಂದು ಎಲ್ಲರಿಗೂ ತಿಳಿದಿರುವ ವಿಷಯ . ಅದು ಬೆಳಿಗ್ಗೆ ಮತ್ತು ನಡು ಹಗಲಿನಲ್ಲಿ ನೀಲಿಯಾಗಿರುತ್ತದೆ ಮತ್ತು ಹೊತ್ತು ಮುಳುಗುತ್ತಿದ್ದಂತೆ ಕೆಂಪು, ಕಿತ್ತಳೆ ಬಣ್ಣವಾಗಿ ಮಾರ್ಪಾಡಾಗುವುದನ್ನು ನಾವು ದಿನಾಲು ಕಂಡಿರುತ್ತೇವೆ. ಬೆಳಿಗ್ಗೆ ಬಾನು ಯಾಕೆ ನೀಲಿಯಾಗಿರುತ್ತದೆ ಮತ್ತು ಬಯ್ಗಿನ (ಸಂಜೆಯ) ಹೊತ್ತಿಗೆ ಏಕೆ ಕೆಂಪಾಗುತ್ತದೆ ಎಂದು ಯಾವಾತ್ತಾದರೂ ಯೋಚಿಸಿದ್ದೀರ?

ಇದಕ್ಕೆ ಉತ್ತರ ಸುಳುವಾಗಿಲ್ಲ. ಈ ಪ್ರಶ್ನೆಯ ಬಗ್ಗೆ ಹಲವಾರು ಅರಿಮೆಗಾರರು ತಲೆ ಕೆಡಿಸಿಕೊಂಡಿದ್ದಾರೆ. ಬಾನಿನ ನೀಲಿ ಬಣ್ಣದ ಹಿಂದಿನ ಅರಿಮೆ ಏನು ಎಂಬುದನ್ನು ಈ ಬರಹದಲ್ಲಿ ತಿಳಿದುಕೊಳ್ಳೋಣ.

ನೇಸರನು ಹೊರಸೂಸುವ ಬೇರೆ ಬೇರೆ ತೆರನಾದ ಕದಿರುಗಳು (rays) ಭೂಮಿಯ ಗಾಳಿಪದರವನ್ನು (atmosphere) ದಾಟಿ ನೆಲದ ಮೇಲೆ ಬೀಳುತ್ತವೆ. ಬರಿ ಬೆಳಕೊಂದೇ ಅಲ್ಲದೆ ಮಿನ್ಸೆಳೆತದ ಅಲೆಸಾಲಿನ(electromagnetic spectrum) ಬೇರೆ ಬೇರೆ ಕದಿರುಗಳನ್ನೂ ಕೂಡ ನೇಸರನೆಂಬ ಬೆಂಕಿಯುಂಡೆ ಹೊರಹಾಕುತ್ತದೆ. ಆದರೆ ಭೂಮಿಯ ಮೇಲಿನ ಉಸಿರಿಗಳಿಗೆ ಕುತ್ತು ಎನಿಸುವ ಕದಿರುಗಳನ್ನು ಒಜೋನ್ (ozone) ಪದರ ಹೀರಿಕೊಳ್ಳುತ್ತದೆ. ಉದಾಹರಣೆಗೆ – ಕಡುನೀಲಿ ಕದಿರುಗಳು (ultra violet rays). ಹಾಗಾಗಿ ನಮ್ಮ ಕಣ್ಣಿಗೆ ಕಾಣುವ ಬೆಳಕಿನ ಕದಿರುಗಳ ಮೂಲಕ ನಾವು ನಮ್ಮ ಸುತ್ತಮುತ್ತವನ್ನು ನೋಡಬಹುದಾಗಿದೆ. ನಮಗೆ ತಿಳಿದಿರುವಂತೆ ಬೆಳಕು ಕೂಡ ಬೇರೆ ಬೇರೆ ಬಣ್ಣಗಳಿಂದ ಕೂಡಿದೆ ಮತ್ತು ಎಲ್ಲಾ ಬಣ್ಣಗಳಿಗೆ ಅದರದೇ ಆದ ಅಲೆಯಗಲ (wavelength) ಕೂಡ ಇರುತ್ತದೆ.

 

ಭೂಮಿಯ ಸುತ್ತಾವಿ

ಭೂಮಿಯ ಸುತ್ತ ಇರುವ, ಇಂಗ್ಲಿಶಿನಲ್ಲಿ ಅಟ್ಮೊಸ್ಪಿಯರ್ ಎನ್ನುವ ಗಾಳಿಪದರದಲ್ಲಿ ಸಾಮಾನ್ಯವಾಗಿ ಆವಿ – ಅನಿಲಗಳು, ನೀರಿನ ಹನಿಗಳು ಮುಂತಾದವುಗಳು ಇರುತ್ತವೆ. ಆವಿಗಳಲ್ಲಿ ಹೆಚ್ಚಾಗಿ ನೈಟ್ರೋಜನ್ (78%) ಮತ್ತು ಆಕ್ಸಿಜನ್ (21%) ಇರುತ್ತದೆ. ಇದರ ಜೊತೆ ಕಸದ ತುಣುಕುಗಳು, ಕಡಲಿನ ಉಪ್ಪು, ದೂಳು ಕೂಡ ಈ ಪದರದಲ್ಲಿ ಇರುತ್ತದೆ. ಇವುಗಳು ಕಡುಚಿಕ್ಕದಾದ ಕಾರಣ ನಮ್ಮ ಕಣ್ಣಿಗೆ ಕಾಣಸಿಗುವುದಿಲ್ಲ. ಭೂಮಿಯ ಗಾಳಿಪದರದ ಆಚೆ ಇರುವುದು ಬಾನಂಗಳ (space). ಭೂಮಿಯ ಸುತ್ತಾವಿ ನೆಲದ ಹತ್ತಿರ ದಟ್ಟವಾಗಿರುತ್ತದೆ(dense) ಮತ್ತು ಬಾನಂಗಳದೆಡೆಗೆ ಚಾಚುತ್ತಿದ್ದಂತೆ ಗಾಳಿಯ ದಟ್ಟಣೆ ಕಡಿಮೆಯಾಗುತ್ತಾ ಹೋಗುತ್ತದೆ. ಇದನ್ನೇ ಗಾಳಿಪದರದ ಒತ್ತಡ(atmospheric pressure) ಎನ್ನುತ್ತೇವೆ.

ಬೆಳಕಿನ ಅಲೆಗಳು

ಬೆಳಕು ಒಂದು ಬಗೆಯ ಹುರುಪು/ಶಕ್ತಿ. ಬೆಳಕು ಅಲೆಗಳಾಗಿ ಕೂಡ ಹರಿಯಬಹುದು ಇಲ್ಲವೇ ತುಣುಕುಗಳಾಗಿ ಕೂಡ ಹರಿಯಬಹುದು. ಅಲೆಗಳಾಗಿ ತೆಗೆದುಕೊಂಡರೆ ಬೆಳಕು ಮಿಂಚಿನ(electric) ಮತ್ತು ಸೆಳೆತದ(magnetic) ಅಲೆಗಳಾಗಿ ಹರಿಯುತ್ತದೆ. ಹೀಗೆ ಅಲೆಗಳಾಗಿ ಹರಿಯುವ ಕಾರಣದಿಂದ ಬೆಳಕಿಗೆ ಒಂದು ಅಲೆಯಗಲ ಎಂದು ಇರುತ್ತದೆ. ಬೆಳಕಿನ ಅಲೆಯಗಲ 400nm ಇಂದ 750nm ವರೆಗೂ ಇರುತ್ತದೆ. ಮಿನ್ಸೆಳೆತ ಅಲೆಸಾಲಿನ ಬೇರೆ ಬೇರೆ ಕದಿರುಗಳಿಗೆ ಒಂದೊಂದು ಅಲೆಯಗಲದ ಬೆಲೆ ಇರುತ್ತದೆ. ಕದಿರುಗಳ ಹರಿಯುವಿಕೆಯ ದೆಸೆಯಿಂದ ಎಲ್ಲಾ ಅಲೆಗಳಿಗೆ ಹುರುಪು ಕೂಡ ಇರುತ್ತದೆ.

ಅಲೆಯಗಲ ಹೆಚ್ಚಿದ್ದು ಸಲದೆಣಿಕೆ (frequency) ಕಡಿಮೆ ಇದ್ದರೆ ಆ ಕದಿರಿಗೆ ಕಡಿಮೆ ಹುರುಪಿರುತ್ತದೆ. ಅಲೆಯಗಲ ಕಡಿಮೆಯಿದ್ದು ಸಲದೆಣಿಕೆ ಹೆಚ್ಚಿದ್ದರೆ ಆ ಕದಿರಿಗೆ ಹೆಚ್ಚು ಹುರುಪಿರುತ್ತದೆ. ಮಳೆಬಿಲ್ಲಿನಲ್ಲಿ ಕಾಣುವಂತೆ ನೀಲಿ ನೇರಳೆ ಬಣ್ಣಗಳು ಒಂದೆಡೆ ಇದ್ದರೆ ಕೆಂಪು ಕಿತ್ತಳೆಗಳು ಇನ್ನೊಂದೆಡೆ ಇರುತ್ತದೆ. ನೀಲಿ ಬಣ್ಣಕ್ಕೆ ಹೆಚ್ಚು ಸಲದೆಣಿಕೆ/ಕಡಿಮೆ ಅಲೆಯಗಲ ಇರುತ್ತದೆ ಮತ್ತು ಕೆಂಪಿಗೆ ಕಡಿಮೆ ಸಲದೆಣಿಕೆ/ಹೆಚ್ಚು ಅಲೆಯಗಲ ಇರುತ್ತದೆ. ಈ ಎಲ್ಲಾ ಅಲೆಗಳು 3 X 108 m/s ಬಿರುಸಿನಲ್ಲಿ (speed) ಹರಿಯುತ್ತವೆ.

ನೇಸರನ ಬೆಳಕು ಗಾಳಿಪದರದ ಮೂಲಕ ಬರುತ್ತಿದ್ದಂತೆ ಗಾಳಿಪದರದ ಬೇರೆ ಬೇರೆ ವಸ್ತುಗಳೊಡನೆ ಬೆಳಕಿನ ತಿಕ್ಕಾಟ ಏರ್ಪಡುತ್ತದೆ . ಕಸದ ತುಣುಕುಗಳು ಮತ್ತು ನೀರಿನ ಹನಿಗಳು ಬೆಳಕಿನ ಅಲೆಯಗಲಕ್ಕಿಂತ ದೊಡ್ಡದಾಗಿರುವ ಕಾರಣ ಅದಕ್ಕೆ ಡಿಕ್ಕಿ ಹೊಡೆದು ಬೇರೆ ದಿಕ್ಕಿನೆಡೆಗೆ ಸಾಗುತ್ತದೆ. ಬೆಳಕಿನ ಎಲ್ಲಾ ಬಣ್ಣಗಳು ಒಂದೇ ಬಗೆಯಲ್ಲಿ ಸಾಗಿಹೋಗುವುದರಿಂದ ಡಿಕ್ಕಿಯ ಬಳಿಕವೂ ಬೆಳಕಿನ ಬಣ್ಣ ಹಾಗೆಯೇ ಉಳಿಯುತ್ತದೆ. ಹಾಗಾಗಿ ಬಿಳಿ ಬಣ್ಣ ಬಿಳಿಯಾಗಿಯೇ ಇರುತ್ತದೆ.

ಆದರೆ, ಬೆಳಕು ತನ್ನ ಅಲೆಯಗಲಕ್ಕಿಂತ ಚಿಕ್ಕದಾದ ಅಂದರೆ ಆವಿಯ ಅಣುಕೂಟಗಳಿಗೆ (gas molecules) ಡಿಕ್ಕಿ ಹೊಡೆದಾಗ ಬೆಳಕಿನ ಚದುರುವಿಕೆಯಾಗುತ್ತದೆ(scattering). ಬೆಳಕು ಚದುರಿದಾಗ ಅದರೊಳಗೆ ಇರುವ ಬಣ್ಣಗಳೂ ಕೂಡ ಚದುರುತ್ತವೆ. ಆದರೆ ಬೆರಗಿನ ವಿಷಯವೆಂದರೆ ಎಲ್ಲಾ ಬಣ್ಣಗಳು ಒಂದೇ ತೆರನಾಗಿ ಚದುರುವುದಿಲ್ಲ.

ಕಡಿಮೆ ಅಲೆಯಗಲಗಳುಳ್ಳ ಬಣ್ಣಗಳು (ನೀಲಿ,ನೇರಳೆ) ಹೆಚ್ಚು ಚದುರುತ್ತವೆ ಮತ್ತು ಹೆಚ್ಚು ಅಲೆಯಗಲಗಳುಳ್ಳ ಬಣ್ಣಗಳು(ಕೆಂಪು,ಕಿತ್ತಳೆ) ಕಡಿಮೆ ಚದುರುತ್ತವೆ. ಇದನ್ನು ರೇಯ್ಲೀ ಎಂಬಾತ ಮೊದಲು ತೋರಿಸಿಕೊಟ್ಟಿದ್ದರಿಂದ ಇದಕ್ಕೆ ರೇಯ್ಲೀ ಚದುರುವಿಕೆ (Rayleigh Scattering) ಎನ್ನುತ್ತಾರೆ. ಆವಿಯ ಅಣುಕೂಟಗಳು (Molecules) ನೀಲಿ ಮತ್ತು ನೇರಳೆ ಬಣ್ಣಗಳನ್ನು ಸುಳುವಾಗಿ ಹೀರಿಕೊಳ್ಳುತ್ತವೆ. ಆದರೆ ಕೆಂಪು ಮತ್ತು ಕಿತ್ತಳೆಯನ್ನು ಅಷ್ಟು ಸುಳುವಾಗಿ ಹೀರಿಕೊಳ್ಳುವುದಿಲ್ಲ ಮತ್ತು ಅದು ಪದರದ ಮೂಲಕ ಹಾದುಹೋಗಿಬಿಡುತ್ತವೆ.

ಆವಿಯ ಅಣುಕೂಟಗಳು ಹೀಗೆ ಕಡಿಮೆ ಅಲೆಯಗಲದ ಬಣ್ಣಗಳನ್ನು(ನೀಲಿ,ನೇರಳೆ) ಹೀರಿಕೊಂಡ ಬಳಿಕ ಅವು ಎಲ್ಲಾ ದಿಕ್ಕುಗಳಲ್ಲಿ ಚದುರಲು ಮೊದಲಾಗುತ್ತವೆ. ಹೀಗೆ ಎಲ್ಲಾ ದಿಕ್ಕಿನಲ್ಲಿ ಚದರುವ ಕಾರಣ ಬಾನಿನ ಬಣ್ಣ ನೀಲಿಯಾಗಿ ಕಾಣುತ್ತದೆ. ಆದರೆ ನೀಲಿಯೇ ಏಕೆ ನೇರಳೆ ಬಣ್ಣ ಯಾಕಲ್ಲ ಎಂಬ ಪ್ರಶ್ನೆ ನಿಮಗೆ ಬಂದಿರಬಹುದು.

ಮನುಷ್ಯನ ಕಣ್ಣುಗಳು ನೀಲಿ, ಕೆಂಪು ಮತ್ತು ಹಸಿರು ಬಣ್ಣಗಳಿಗೆ ಹೆಚ್ಚು ನಾಟುವ ಹಾಗೆ ಏರ್ಪಾಟಾಗಿವೆ , ಹಾಗಾಗಿ ನೀಲಿ-ನೇರಳೆ ಬಣ್ಣದ ಬೆರೆತ ಇದ್ದರೂ ಕೂಡ ಕಣ್ಣು ಅದನ್ನು ನೀಲಿಯೆಂದೆ ಅರಿಯುತ್ತದೆ . ಹಾಗಾಗಿ ಬಾನು ನಮಗೆ ನೀಲಿಯಾಗಿ ಕಾಣುತ್ತದೆ.

ಇಳಿಸಂಜೆಯ ಹೊತ್ತಿಗೆ ಬಾನು ಕೆಂಪಾಗುವುದನ್ನು ನಾವು ಕಂಡಿರುತ್ತೇವೆ. ಭೂಮಿಯು ತನ್ನ ಸುತ್ತ ತಿರುಗುತ್ತಿದ್ದಂತೆ ಬೆಳಿಗ್ಗೆ ನೇಸರನ ಎದುರಿಗಿದ್ದ ಭೂಮಿಯ ಬದಿಯು ಸಂಜೆಗೆ ನೇಸರನಿಂದ ದೂರ ಸರಿಯುತ್ತದೆ. ಮೇಲಿನ ತಿಟ್ಟದಲ್ಲಿ ಕಾಣುವಂತೆ ಸಂಜೆಯ ಹೊತ್ತಿಗೆ ನೇಸರನ ಕದಿರುಗಳು ಬೆಳಗಿನ ಹೊತ್ತಿನಂತೆ ನೇರವಾಗಿ ಭೂಮಿಯ ಮೇಲೆ ಬೀಳುವುದಿಲ್ಲ. ಅದು ನಾವು ಇರುವ ನೆಲವನ್ನು ತಲುಪಬೇಕಾದರೆ ಬೆಳಗಿನ ಹೊತ್ತಿಗಿಂತ ಹೆಚ್ಚು ದೂರ ಸಾಗಬೇಕಾಗುತ್ತದೆ. ಹೀಗೆ ಸಾಗುವಾಗ ಮೊದಲು ಚದರುವ ಕಡಿಮೆ ಅಲೆಯಗಲದ ನೀಲಿ ಬಣ್ಣವನ್ನು ಸುತ್ತಾವಿ ಆಗಲೇ ಹೀರಿಕೊಂಡಿರುತ್ತದೆ. ಮಿಕ್ಕ ಬಣ್ಣಗಳು ಸುತ್ತಾವಿಯನ್ನು ದಾಟಿ ನಮ್ಮನ್ನು ತಲುಪುತ್ತವೆ. ಈ ಬಣ್ಣಗಳು ಹೆಚ್ಚು ಅಲೆಯಗಲವುಳ್ಳವಾದ್ದರಿಂದ ನಮಗೆ ಸಂಜೆಯ ಬಾನು ಕೆಂಪು ಕಿತ್ತಳೆ ಬಣ್ಣವಾಗಿ ಕಾಣುತ್ತದೆ.