ಏನಿದು ಮೋಡ ಬಿತ್ತನೆ?

ಪ್ರಶಾಂತ ಸೊರಟೂರ.

‘ಮೋಡ ಬಿತ್ತನೆ’, ಕೆಲವು ವರ್ಷಗಳ ಹಿಂದೆ ಹೀಗೊಂದು ಪದ ಒಮ್ಮೆಲೇ ಬೆಳಕಿಗೆ ಬಂತು, ಬರಗಾಲದಿಂದ ತತ್ತರಿಸಿದ್ದ ಕರ್ನಾಟಕಕ್ಕೆ ಮಳೆ ಬರಿಸಲು ಮೋಡದಲ್ಲಿಯೇ ವಿಮಾನದಿಂದ ಬಿತ್ತನೆಯ ಕೆಲಸವಂತೆ, ಅದು ಮಳೆ ತರುತ್ತದಂತೆ ಅನ್ನುವ ಮಾತುಗಳು ಎಲ್ಲೆಡೆ ಹರಡ ತೊಡಗಿದ್ದವು. ನೆಲದಲ್ಲಿ ಬಿತ್ತನೆ ಮಾಡಿದ, ನೋಡಿದ ಕನ್ನಡಿಗರಿಗೆ ಬಾನಿನಲ್ಲಿ ಮಾಡುವ ಇದ್ಯಾವ ಬಗೆಯ ಬಿತ್ತನೆ ಅನ್ನಿಸಿತ್ತು. ಕೆಲ ಊರುಗಳ ಮೇಲೆ ವಿಮಾನಗಳು ಹಾರಾಡಿ ’ಮೋಡ ಬಿತ್ತನೆ’ಯಿಂದ ಮಳೆ ಸುರಿಸಿದ್ದೂ ಸುದ್ದಿಯಾಯಿತು. ಇಡೀ ದೇಶದಲ್ಲಿಯೇ ಈ ತರಹ ಮಳೆ ಸುರಿಸಲು ಮೋಡ ಬಿತ್ತನೆಗೆ ಕೈಹಾಕಿದ ಮೊದಲ ನಾಡು ಕರ್ನಾಟಕ ಅನ್ನುವ ಸುದ್ದಿಯಾಯಿತು.

ಮೋಡ ಬಿತ್ತನೆಯ ಬಗ್ಗೆ ತಿಳಿದುಕೊಳ್ಳುವ ಮುನ್ನ, ಮೋಡ ಮತ್ತು ಮಳೆಯ ಬಗ್ಗೆ ಒಂಚೂರು ತಿಳಿದುಕೊಳ್ಳೋಣ. ಕಡಲು, ಹೊಳೆ ಮತ್ತು ನೆಲದ ಹಲವೆಡೆ ಇರುವ ನೀರು ಬಿಸಿಲಿಗೆ ಕಾಯ್ದು ಆವಿಯಾಗುತ್ತದೆ. ಹೀಗೆ ಉಂಟಾದ ನೀರಾವಿಯು ಗಾಳಿಯೊಡನೆ ಬೆರೆತು ಬಾನಿನೆಡೆಗೆ ಸಾಗ ತೊಡಗುತ್ತದೆ. ಗಾಳಿಯು ಬಿಸಿಯಾದಷ್ಟು ಅದು ತನ್ನಲ್ಲಿ ಹೆಚ್ಚೆಚ್ಚು ನೀರಾವಿಯನ್ನು ಅಡಗಿಸಿಟ್ಟುಕೊಳ್ಳಬಲ್ಲದು, ಆದರೆ ನೆಲದಿಂದ ಮೇಲೆ-ಮೇಲೆ ಹೋದಂತೆಲ್ಲಾ ಅಲ್ಲಿರುವ ಬಿಸುಪು (temperature) ಕಡಿಮೆಯಾಗುತ್ತಾ ಹೋಗುತ್ತದೆ. ಒಂದು ಹಂತದಲ್ಲಿ ಬಿಸುಪು ತುಂಬಾ ಕಡಿಮೆಯಾಗಿ ಗಾಳಿಗೆ ತನ್ನಲ್ಲಿ ಇನ್ನಷ್ಟು ನೀರಾವಿಯನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ಈ ಹಂತದ ಗಾಳಿಯನ್ನು ‘ತಣಿದ ಗಾಳಿ’ (saturated air) ಅಂತಾ ಕರೆಯುತ್ತಾರೆ. ಈ ತಣಿದ ಗಾಳಿಯು ತೂಕವಾದ ನೀರಾವಿಯನ್ನು ಹೊತ್ತುಕೊಂಡು ಬಾನಿನಲ್ಲಿ ಒಂದೆಡೆ ನೆಲೆ ನಿಲ್ಲುತ್ತದೆ, ಇವೇ ಮೋಡಗಳು.

ಹೀಗೆ ನೆಲೆಗೊಂಡ ಮೋಡದಲ್ಲಿ ನೀರ ಹನಿಗಳು ತುಂಬಾ ತಂಪಾಗಿದ್ದು ಅವುಗಳ ಬಿಸುಪು (temperature) ಕೆಲವೊಮ್ಮೆ – 40° ಸೆಲ್ಸಿಯಸ್ ಆಗಿರುತ್ತದೆ. ಇಲ್ಲಿ ಇನ್ನೊಂದು ತಿಳಿದುಕೊಳ್ಳಬೇಕಾದ ವಿಶಯವೆಂದರೆ ಇಷ್ಟು ತಂಪಾಗಿದ್ದರೂ ಎಲ್ಲ ಹನಿಗಳು ಗಟ್ಟಿ ಮಂಜಿನ ರೂಪದಲ್ಲಿರದೇ ಕೆಲವು ಹನಿಗಳು ನೀರಿನ ರೂಪದಲ್ಲೇ ಉಳಿದಿರುತ್ತವೆ. ಇದಕ್ಕೆ ಕಾರಣವೆಂದರೆ ಸಾಮಾನ್ಯ ಒತ್ತಡದಲ್ಲಿ 0° ಸೆ. ಹೆಪ್ಪುಗಟ್ಟುವ ನೀರು ಬಾನಿನಲ್ಲಿ, ಮೇಲೆ ಹೋದಂತೆ ಒತ್ತಡ ಕಡಿಮೆ ಇರುವುದರಿಂದ ಅದರ ಹೆಪ್ಪುಗಟ್ಟುವಿಕೆ ಬಿಸುಪು (freezing temperature) ಕಡಿಮೆಯಾಗುತ್ತಾ ಹೋಗುತ್ತದೆ

ಮೋಡಗಳಲ್ಲಿರುವ ಚಿಕ್ಕ ನೀರಿನ ಹನಿಗಳು ಮತ್ತು ಮಂಜಿನ (ಗಟ್ಟಿ ನೀರು) ಹನಿಗಳು ಒಂದಕ್ಕೊಂದು ಬೆಸೆದು ಇಲ್ಲವೇ ಮೋಡದಲ್ಲಿರುವ ಇತರೆ ಪುಟಾಣಿ ಕಣಗಳನ್ನು ಸುತ್ತುವರೆದು ದೊಡ್ಡದಾಗುತ್ತಾ ಹೋಗುತ್ತವೆ. ಹೀಗೆ ದೊಡ್ಡದಾದ ನೀರಿನ, ಮಂಜಿನ ಹನಿ ಹೊತ್ತುಕೊಂಡಿರುವ ಮೋಡಕ್ಕೆ ಅವುಗಳ ತೂಕ ತಾಳಿಕೊಳ್ಳಲು ಆಗದಂತ ಪರಿಸ್ಥಿತಿ ಬಂದುಬಿಡುತ್ತದೆ. ಆಗಲೇ ಅವು ನೆಲಕ್ಕೆ ಮಳೆಯಾಗಿ ಸುರಿಯ ತೊಡಗುತ್ತವೆ.

ಮೋಡಗಳ ಕುರಿತಾದ ಮೇಲಿನ ವಿಷಯದಲ್ಲಿ ಗಮನಿಸಬೇಕಾದುದೆಂದರೆ, ಮೋಡಗಳು ಮಳೆಯಾಗಬೇಕಾದರೆ ಅವುಗಳಲ್ಲಿರುವ ನೀರಿನ ಹನಿಗಳು ಒಂದೋ ಹೆಚ್ಚಾಗಬೇಕು ಇಲ್ಲವೇ ಆ ನೀರ ಹನಿಗಳು ಒಂದಾಗಿ ದೊಡ್ಡದಾಗಬೇಕು. ಇದರಲ್ಲಿ ಎರಡನೇ ಬಗೆಯನ್ನು ಬಳಸಿ ಮಳೆ ತರಿಸುವುದೇ ‘ಮೋಡ ಬಿತ್ತನೆ’ಯ ಹಿಂದಿರುವ ಚಳಕ. ಮೋಡ ಬಿತ್ತನೆಯಲ್ಲಿ, ಬೆಳ್ಳಿಯ ಆಯೋಡಾಯಡ್ ಇಲ್ಲವೇ ಒಣ ಮಂಜು ಎಂದು ಕರೆಯಲ್ಪಡುವ ಗಟ್ಟಿ ಕಾರ್ಬನ್ ತುಣುಕುಗಳನ್ನು ವಿಮಾನಗಳ ಮೂಲಕ ಮೋಡಗಳ ಮೇಲೆ ಚಿಮುಕಿಸಲಾಗುತ್ತದೆ. ಹೀಗೆ ಚಿಮುಕಿಸಿದ ತುಣುಕುಗಳು ಮೋಡದಲ್ಲಿರುವ ನೀರಿನ, ಮಂಜಿನ ಹನಿಗಳನ್ನು ತನ್ನೆಡೆಗೆ ಸೆಳೆದು ದೊಡ್ಡದಾಗಿಸುತ್ತವೆ. ಹೀಗೆ ಒಂದುಗೂಡಿ ದೊಡ್ಡದಾದ ನೀರ ಹನಿಗಳ ಬಾರ ತಾಳಲಾಗದೇ ಮೋಡಗಳು, ಮಳೆಯಾಗಿ ಸುರಿಯ ತೊಡಗುತ್ತವೆ.

‘ಮೋಡ ಬಿತ್ತನೆ’ಯ ಕೆಲಸ ಯಾವಾಗಲೂ ಗೆಲುವು ಕಾಣುತ್ತದೆ ಅನ್ನಲಾಗದು, ಮೋಡದಲ್ಲಿರುವ ನೀರ ಹನಿಗಳ ಗಾತ್ರ, ಅವುಗಳ ಸುತ್ತಿರುವ ವಾತಾವರಣ ಇದರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಜಗತ್ತಿನ ಹಲವೆಡೆ ಮೋಡ ಬಿತ್ತನೆಯ ಕೆಲಸವನ್ನು ಕೈಗೊಂಡರೂ ಎಲ್ಲಾ ಕಡೆ ಇದಕ್ಕೆ ಒಪ್ಪಿಗೆ ಪಡೆಯಲು ಇನ್ನೂ ಆಗಿಲ್ಲ. ಆದರೆ ಚೀನಾ ದೇಶ ಯಾವುದೇ ಅನುಮಾನಗಳನ್ನು ಇಟ್ಟುಕೊಳ್ಳದೇ ’ಮೋಡ ಬಿತ್ತನೆ’ಯಲ್ಲಿ ಪ್ರತಿ ವರ್ಷ ಹೆಚ್ಚಿನ ದುಡ್ಡು ತೊಡಗಿಸುತ್ತಾ ಹೊರಟಿದೆ. ಬೀಜಿಂಗ್ ಒಲಂಪಿಕ್ಸಿನಲ್ಲಿ ಮಳೆಯಿಂದ ಆಟ ಹಾಳಾಗಬಾರದೆಂದು, ಮೋಡ ಬಿತ್ತನೆ ಮಾಡಿ ಆಟಕ್ಕಿಂತ ಹಲವು ದಿನಗಳ ಮೊದಲೇ ಮೋಡಗಳನ್ನು ಮಳೆಯಾಗಿಸಿದ್ದು ಇಲ್ಲಿ ನೆನಪಿಸಿಕೊಳ್ಳಬಹುದು. ಕರ್ನಾಟಕದಲ್ಲಿ 2003 ರಿಂದ ಮೋಡಬಿತ್ತನೆಯನ್ನು ಕೈಗೊಳ್ಳಲಾಗಿದೆ .

ಮಾಹಿತಿ ಸೆಲೆ:

 

ನೀರು – ಏನಿದರ ಗುಟ್ಟು?

ರಘುನಂದನ್.

ಮುಂಚಿನಿಂದಲೂ ಮನುಷ್ಯನಿಗೆ ನಮ್ಮ ಭೂಮಿಯನ್ನು ಬಿಟ್ಟು ಬೇರೆಡೆ ಜೀವಿಗಳು ಇವೆಯೇ ಎಂಬ ಕುತೂಹಲ ಇದ್ದೇ ಇದೆ. ಮಂಗಳ ಮತ್ತು ಶುಕ್ರ ಗ್ರಹಗಳಲ್ಲಿ ಜೀವಿಗಳನ್ನು ಹುಡುಕುವ ಪ್ರಯತ್ನ ಸಾಕಷ್ಟು ನಡೆದಿದೆ. ನೇಸರ ಬಳಗದಾಚೆಗೂ (solar system) ಜೀವಿಗಳು ಇವೆಯೇ ಎಂಬ ಪ್ರಶ್ನೆ ಆಗಾಗ ವಿಜ್ಞಾನಿಗಳ ತಲೆ ಹೊಕ್ಕಿದೆ. ಇದಕ್ಕೆ ಸಾಕಷ್ಟು ಅರಕೆ ಕೂಡ ನಡೆದಿದೆ, ನಡೆಯುತ್ತಲೂ ಇದೆ.

ಜೀವಿಗಳು ಇರಬಹುದೇ ಎಂಬ ಪ್ರಶ್ನೆಯನ್ನು ಇನ್ನೊಂದು ಬಗೆಯಲ್ಲಿ ನೋಡಿದರೆ – ಜೀವಿಗಳು ಹುಟ್ಟಿ ಬೆಳೆಯುವುದಕ್ಕೆ ಮುಖ್ಯವಾದ ಕಾರಣಗಳಾವವು ಎಂಬುದನ್ನು ತಿಳಿದುಕೊಳ್ಳಬೇಕಾಗುತ್ತದೆ. ಅಂದರೆ ಆ ನೆಲದಲ್ಲಿ ಭೂಮಿಯಲ್ಲಿ ಇರುವಂತಹ ಕಾವಳತೆ (temperature), ಗಾಳಿ, ನೀರು ಮುಂತಾದವುಗಳು ಇರಬೇಕಾಗುತ್ತದೆ. ಹಾಗಾಗಿ ವಿಜ್ಞಾನಿಗಳು ಸಾಮಾನ್ಯವಾಗಿ ಹೊಸ ನೆಲಗಳನ್ನು ಹುಡುಕುವಾಗ ಅಲ್ಲಿ ನೀರಿನ ಇರುವಿಕೆಯ ಕುರುಹುಗಳಿವೆಯೇ ಎಂದು ಮೊದಲು ಹುಡುಕುತ್ತಾರೆ. ಭೂಮಿಯಲ್ಲಿ ಗಿಡ ಮರಗಳು ಪ್ರಾಣಿ ಹಕ್ಕಿಗಳು ಇರುವುದೇ ನೀರಿನಿಂದ ಎಂಬ ಸಾಮಾನ್ಯ ತಿಳುವಳಿಕೆ ಎಲ್ಲರಿಗೂ ಇರುತ್ತದೆ. ಈ ನೋಟದಲ್ಲಿ ನೋಡಿದಾಗ ನೀರು ವಿಶೇಷ ವಸ್ತು ಎನಿಸುತ್ತದೆ.

ಬೇರೆ ಎಲ್ಲಾ ಹರಿಕಗಳಿಗೆ (fluid) ಹೋಲಿಸಿದರೆ ನೀರು ಯಾಕೆ ಬೇರೆ ಮತ್ತು ಅದರಿಂದ ಜೀವಿಗಳಿಗೆ ಹೇಗೆ ಒಳಿತು ಎಂಬುದನ್ನು ಅರಿಮೆಯ ನೋಟದಿಂದ ನೋಡುವ ಒಂದು ಪ್ರಯತ್ನ ಈ ಬರಹ.

ಒಂದು ನೀರಿನ ಅಣುಕೂಟದಲ್ಲಿ(molecule) ಎರಡು ಹೈಡ್ರೋಜನ್ ಅಣು ಮತ್ತು ಒಂದು ಆಕ್ಸಿಜನ್ ಅಣುವಿರುತ್ತದೆ. ಇವು ಒಂದಕ್ಕೊಂದು ಹೇಗೆ ಅಂಟಿಕೊಂಡಿವೆ ಎಂಬುದನ್ನು ಆಮೇಲೆ ನೋಡೋಣ. ಸೋಜಿಗವೆಂದರೆ ಬೇರೆ ಹೈಡ್ರೋಜನ್ ಉಳ್ಳ ಅಣುಕೂಟಗಳು (ಮೀತೇನ್, ಅಮೋನಿಯಾ, ಹೈಡ್ರೋಜನ್ ಸಲ್ಪೈಡ್) ಭೂಮಿಯ ಕಾವಳತೆ ಮತ್ತು ಒತ್ತಡದಲ್ಲಿ (atmospheric temperature and pressure) ಆವಿಯ(gaseous) ರೂಪದಲ್ಲಿ ಇರುತ್ತವೆ. ಆದರೆ ನೀರು ಮಾತ್ರವೇ ಹರಿಯುವ ರೂಪದಲ್ಲಿರುತ್ತದೆ ! ಹಾಗಾಗಿ ನೀರಿನ ಅಣುಕೂಟಗಳಿಗೆ ಒಂದಕ್ಕೊಂದು ಅಂಟಿಕೊಳ್ಳುವ ಸೆಳೆತ ಹೆಚ್ಚಿದೆ ಎಂದು ಅರಿಯಬಹುದು.

ನೀರಿಗೆ ಬಿಸುಪಿನ ಅಳವು (heat capacity) ಹೆಚ್ಚಿರುತ್ತದೆ (ಅಂದರೆ ಹೆಚ್ಚು ಕಾವು ಒದಗಿಸಿದಷ್ಟು ಕಾವಳತೆ ಕೂಡಲೆ ಏರುವುದಿಲ್ಲ). ಈ ಗುಣದಿಂದಾಗಿ ನೀರಿನ ಒಡಲುಗಳಾದ ಕಡಲುಗಳು, ನೇಸರನಿಂದ ಬರುವ ಕಾವನ್ನು ಚೆನ್ನಾಗಿ ಮರುಹಂಚಿಕೆ ಮಾಡುತ್ತವೆ ಮತ್ತು ಭೂಮಿಯ ತಾಪವನ್ನು ಒಬ್ಬಗೆಯಾಗಿ ಇರಿಸುತ್ತವೆ. ಇದು ಜೀವಿಗಳಿಗೆ ತುಂಬಾ ಅನುಕೂಲಕರವಾಗಿರುತ್ತದೆ.

ಬೇರೆಲ್ಲಾ ಹರಿಕಗಳು ತಂಪಾಗಿಸಿದಾಗ ಕುಗ್ಗುತ್ತವೆ ಮತ್ತು ಗಟ್ಟಿಯಾಗುತ್ತವೆ ಆದರೆ ನೀರಿನ ರೂಪವಾದ ಮಂಜುಗಡ್ಡೆ (ice) ತಂಪಾಗಿಸಿದಾಗ ಹಿಗ್ಗುತ್ತದೆ ಮತ್ತು ತೇಲುತ್ತದೆ. ಇದರಿಂದ ಕೆರೆ ಕೊಳಗಳು ಕೆಳಗಿನಿಂದ ಗಟ್ಟಿಯಾಗದೇ ಮಂಜುಗಡ್ಡೆ ಬರಿಯ ನೀರಿನ ಮೇಲೆ ತೇಲುತ್ತದೆ. ಇದರಿಂದ ನೀರಿನ ಜೀವಿಗಳಿಗೆ ಬೇಕಾದ ಕಾವಳತೆ ಸಿಗುತ್ತದೆ.

ನೀರಿಗೆ ಸಾಕಷ್ಟು ಬಗೆಯ ವಸ್ತುಗಳನ್ನು ಕರಗಿಸಿಕೊಳ್ಳುವ ಕಸುವು ಇದೆ. ಇದರಿಂದಾಗಿ ಜೀವಿಗಳಿಗೆ ಬೇಕಾಗುವ ಹಲಬಗೆಯ ಪೊರೆತ (nutrients)ಗಳನ್ನು ಸಾಗಿಸುವ ಶಕ್ತಿ ನೀರಿಗಿದೆ. ನೀರಿಗೆ ಮಿಂತುಣುಕನ್ನು ಅಡಗಿಸಿಕೊಳ್ಳುವ ಅಳವಿಲ್ಲದಿದ್ದರೆ ಗಿಡ ಮರಗಳಲ್ಲಿ ಬೆಳಕಿನಡುಗೆ (photosynthesis) ಆಗುತ್ತಲೇ ಇರಲಿಲ್ಲ. ನೀರಿಗೆ ಹೆಚ್ಚಿನ ಮಟ್ಟದ ಮೇಲ್ಮೈ ಎಳೆತ(surface tension) ಇರುವ ಕಾರಣದಿಂದ ಎಷ್ಟೇ ಉದ್ದ ಇರುವ ಮರಕ್ಕೂ ಮರದ-ರಸ (sap) ಸಾಗಿಸಬಲ್ಲದು.

(ಚಿತ್ರ ಸೆಲೆ : unrth.com)