ನೀರು – ಏನಿದರ ಗುಟ್ಟು?

ರಘುನಂದನ್.

ಮುಂಚಿನಿಂದಲೂ ಮನುಷ್ಯನಿಗೆ ನಮ್ಮ ಭೂಮಿಯನ್ನು ಬಿಟ್ಟು ಬೇರೆಡೆ ಜೀವಿಗಳು ಇವೆಯೇ ಎಂಬ ಕುತೂಹಲ ಇದ್ದೇ ಇದೆ. ಮಂಗಳ ಮತ್ತು ಶುಕ್ರ ಗ್ರಹಗಳಲ್ಲಿ ಜೀವಿಗಳನ್ನು ಹುಡುಕುವ ಪ್ರಯತ್ನ ಸಾಕಷ್ಟು ನಡೆದಿದೆ. ನೇಸರ ಬಳಗದಾಚೆಗೂ (solar system) ಜೀವಿಗಳು ಇವೆಯೇ ಎಂಬ ಪ್ರಶ್ನೆ ಆಗಾಗ ವಿಜ್ಞಾನಿಗಳ ತಲೆ ಹೊಕ್ಕಿದೆ. ಇದಕ್ಕೆ ಸಾಕಷ್ಟು ಅರಕೆ ಕೂಡ ನಡೆದಿದೆ, ನಡೆಯುತ್ತಲೂ ಇದೆ.

ಜೀವಿಗಳು ಇರಬಹುದೇ ಎಂಬ ಪ್ರಶ್ನೆಯನ್ನು ಇನ್ನೊಂದು ಬಗೆಯಲ್ಲಿ ನೋಡಿದರೆ – ಜೀವಿಗಳು ಹುಟ್ಟಿ ಬೆಳೆಯುವುದಕ್ಕೆ ಮುಖ್ಯವಾದ ಕಾರಣಗಳಾವವು ಎಂಬುದನ್ನು ತಿಳಿದುಕೊಳ್ಳಬೇಕಾಗುತ್ತದೆ. ಅಂದರೆ ಆ ನೆಲದಲ್ಲಿ ಭೂಮಿಯಲ್ಲಿ ಇರುವಂತಹ ಕಾವಳತೆ (temperature), ಗಾಳಿ, ನೀರು ಮುಂತಾದವುಗಳು ಇರಬೇಕಾಗುತ್ತದೆ. ಹಾಗಾಗಿ ವಿಜ್ಞಾನಿಗಳು ಸಾಮಾನ್ಯವಾಗಿ ಹೊಸ ನೆಲಗಳನ್ನು ಹುಡುಕುವಾಗ ಅಲ್ಲಿ ನೀರಿನ ಇರುವಿಕೆಯ ಕುರುಹುಗಳಿವೆಯೇ ಎಂದು ಮೊದಲು ಹುಡುಕುತ್ತಾರೆ. ಭೂಮಿಯಲ್ಲಿ ಗಿಡ ಮರಗಳು ಪ್ರಾಣಿ ಹಕ್ಕಿಗಳು ಇರುವುದೇ ನೀರಿನಿಂದ ಎಂಬ ಸಾಮಾನ್ಯ ತಿಳುವಳಿಕೆ ಎಲ್ಲರಿಗೂ ಇರುತ್ತದೆ. ಈ ನೋಟದಲ್ಲಿ ನೋಡಿದಾಗ ನೀರು ವಿಶೇಷ ವಸ್ತು ಎನಿಸುತ್ತದೆ.

ಬೇರೆ ಎಲ್ಲಾ ಹರಿಕಗಳಿಗೆ (fluid) ಹೋಲಿಸಿದರೆ ನೀರು ಯಾಕೆ ಬೇರೆ ಮತ್ತು ಅದರಿಂದ ಜೀವಿಗಳಿಗೆ ಹೇಗೆ ಒಳಿತು ಎಂಬುದನ್ನು ಅರಿಮೆಯ ನೋಟದಿಂದ ನೋಡುವ ಒಂದು ಪ್ರಯತ್ನ ಈ ಬರಹ.

ಒಂದು ನೀರಿನ ಅಣುಕೂಟದಲ್ಲಿ(molecule) ಎರಡು ಹೈಡ್ರೋಜನ್ ಅಣು ಮತ್ತು ಒಂದು ಆಕ್ಸಿಜನ್ ಅಣುವಿರುತ್ತದೆ. ಇವು ಒಂದಕ್ಕೊಂದು ಹೇಗೆ ಅಂಟಿಕೊಂಡಿವೆ ಎಂಬುದನ್ನು ಆಮೇಲೆ ನೋಡೋಣ. ಸೋಜಿಗವೆಂದರೆ ಬೇರೆ ಹೈಡ್ರೋಜನ್ ಉಳ್ಳ ಅಣುಕೂಟಗಳು (ಮೀತೇನ್, ಅಮೋನಿಯಾ, ಹೈಡ್ರೋಜನ್ ಸಲ್ಪೈಡ್) ಭೂಮಿಯ ಕಾವಳತೆ ಮತ್ತು ಒತ್ತಡದಲ್ಲಿ (atmospheric temperature and pressure) ಆವಿಯ(gaseous) ರೂಪದಲ್ಲಿ ಇರುತ್ತವೆ. ಆದರೆ ನೀರು ಮಾತ್ರವೇ ಹರಿಯುವ ರೂಪದಲ್ಲಿರುತ್ತದೆ ! ಹಾಗಾಗಿ ನೀರಿನ ಅಣುಕೂಟಗಳಿಗೆ ಒಂದಕ್ಕೊಂದು ಅಂಟಿಕೊಳ್ಳುವ ಸೆಳೆತ ಹೆಚ್ಚಿದೆ ಎಂದು ಅರಿಯಬಹುದು.

ನೀರಿಗೆ ಬಿಸುಪಿನ ಅಳವು (heat capacity) ಹೆಚ್ಚಿರುತ್ತದೆ (ಅಂದರೆ ಹೆಚ್ಚು ಕಾವು ಒದಗಿಸಿದಷ್ಟು ಕಾವಳತೆ ಕೂಡಲೆ ಏರುವುದಿಲ್ಲ). ಈ ಗುಣದಿಂದಾಗಿ ನೀರಿನ ಒಡಲುಗಳಾದ ಕಡಲುಗಳು, ನೇಸರನಿಂದ ಬರುವ ಕಾವನ್ನು ಚೆನ್ನಾಗಿ ಮರುಹಂಚಿಕೆ ಮಾಡುತ್ತವೆ ಮತ್ತು ಭೂಮಿಯ ತಾಪವನ್ನು ಒಬ್ಬಗೆಯಾಗಿ ಇರಿಸುತ್ತವೆ. ಇದು ಜೀವಿಗಳಿಗೆ ತುಂಬಾ ಅನುಕೂಲಕರವಾಗಿರುತ್ತದೆ.

ಬೇರೆಲ್ಲಾ ಹರಿಕಗಳು ತಂಪಾಗಿಸಿದಾಗ ಕುಗ್ಗುತ್ತವೆ ಮತ್ತು ಗಟ್ಟಿಯಾಗುತ್ತವೆ ಆದರೆ ನೀರಿನ ರೂಪವಾದ ಮಂಜುಗಡ್ಡೆ (ice) ತಂಪಾಗಿಸಿದಾಗ ಹಿಗ್ಗುತ್ತದೆ ಮತ್ತು ತೇಲುತ್ತದೆ. ಇದರಿಂದ ಕೆರೆ ಕೊಳಗಳು ಕೆಳಗಿನಿಂದ ಗಟ್ಟಿಯಾಗದೇ ಮಂಜುಗಡ್ಡೆ ಬರಿಯ ನೀರಿನ ಮೇಲೆ ತೇಲುತ್ತದೆ. ಇದರಿಂದ ನೀರಿನ ಜೀವಿಗಳಿಗೆ ಬೇಕಾದ ಕಾವಳತೆ ಸಿಗುತ್ತದೆ.

ನೀರಿಗೆ ಸಾಕಷ್ಟು ಬಗೆಯ ವಸ್ತುಗಳನ್ನು ಕರಗಿಸಿಕೊಳ್ಳುವ ಕಸುವು ಇದೆ. ಇದರಿಂದಾಗಿ ಜೀವಿಗಳಿಗೆ ಬೇಕಾಗುವ ಹಲಬಗೆಯ ಪೊರೆತ (nutrients)ಗಳನ್ನು ಸಾಗಿಸುವ ಶಕ್ತಿ ನೀರಿಗಿದೆ. ನೀರಿಗೆ ಮಿಂತುಣುಕನ್ನು ಅಡಗಿಸಿಕೊಳ್ಳುವ ಅಳವಿಲ್ಲದಿದ್ದರೆ ಗಿಡ ಮರಗಳಲ್ಲಿ ಬೆಳಕಿನಡುಗೆ (photosynthesis) ಆಗುತ್ತಲೇ ಇರಲಿಲ್ಲ. ನೀರಿಗೆ ಹೆಚ್ಚಿನ ಮಟ್ಟದ ಮೇಲ್ಮೈ ಎಳೆತ(surface tension) ಇರುವ ಕಾರಣದಿಂದ ಎಷ್ಟೇ ಉದ್ದ ಇರುವ ಮರಕ್ಕೂ ಮರದ-ರಸ (sap) ಸಾಗಿಸಬಲ್ಲದು.

(ಚಿತ್ರ ಸೆಲೆ : unrth.com)