ಅಣು ಕೂಡಿಕೆಯಿಂದ ಮಿಂಚು – ಸವಾಲುಗಳೇನು?

ರಘುನಂದನ್.

ಹಿಂದಿನ ಬರಹದಲ್ಲಿ ಅಣುಕೂಡಿಕೆಯಿಂದ ಮಿಂಚನ್ನು ಪಡೆಯುವ ಬಗೆಯನ್ನು ತಿಳಿದೆವು. ಅಣು ಕೂಡಿಕೆಯ ಹೊಲಬಿನಿಂದ ಸುತ್ತಮುತ್ತಲಿನ ಪರಿಸರಕ್ಕೆ ಯಾವುದೇ ತೊಂದರೆಯಿಲ್ಲ(environmental friendly). ಬೂದಿ(ash), ಇಂಗಾಲ (carbon), ಹೊಗೆ(smoke), ಕೊಳಕು ನೀರು(polluted water) ಮತ್ತು ಕೆಟ್ಟಗಾಳಿ ಇಂತಹ ಯಾವುದೇ ಹಾನಿಯಿಲ್ಲ, ಆದರೂ ಅಣು ಕೂಡಿಕೆಯಿಂದ ನಾವು ಮಿಂಚನ್ನು ಯಾಕೆ ಬಳಸುತ್ತಿಲ್ಲ ಎಂಬುದನ್ನು ಈ ಬರಹದಲ್ಲಿ ತಿಳಿಯೋಣ.

ಅಣು ಕೂಡಿಕೆಯನ್ನು ಯಾಕೆ ನಾವು ಯಾಕೆ ಬಳಸುತ್ತಿಲ್ಲ?

1. ಅಣು ಕೂಡಿಕೆಯಲ್ಲಿ ಡ್ಯೂಟಿರಿಯಮ್-ಟ್ರೈಶಿಯಮ್ ಅಣುಗಳು ಒಂದಕ್ಕೊಂದು ಕೂಡಬೇಕಾದರೆ ತುಂಬಾ ಹೆಚ್ಚು ಕಾವಳತೆ (Temperature) ಬೇಕಾಗುತ್ತದೆ, ಅಂದರೆ 100 ಮಿಲಿಯ ಡಿಗ್ರಿಗಳಷ್ಟು (100 million degree centigrade). ಹೆಚ್ಚು ಹರವು ಮತ್ತು ಕಾಲದಲ್ಲಿ ಅಷ್ಟು ಕಾವಳತೆ ಹೇಗೆ ಉಂಟು ಮಾಡಬಹುದೆಂಬುದು ಇನ್ನೂ ಗೊತ್ತಿಲ್ಲ, ನೇಸರನಲ್ಲಿ ಈ ಮಟ್ಟದ ಕಾವಳತೆ ಕಾಣಬಹುದು. ಅಲ್ಲಿ ಕೂಡ ಇದೇ ಅಣು ಕೂಡಿಕೆ ನಡೆಯುತ್ತಿದ್ದು ನಮಗೆ ದಿನಾಲು ಬೆಳಕು ಮತ್ತು ಹುರುಪು ನೇಸರನಿಂದ ದೊರಕುತ್ತಿರುವುದು ಇದೇ ಮಾದರಿಯಲ್ಲಿ. ಅದರಿಂದ ಗಿಡ ಮರಗಳು ಬದುಕುತ್ತಿವೆ. ನಾವು ಬೆಳೆಗಳನ್ನು ಬೆಳೆಯುತ್ತಿದ್ದೇವೆ. ಅದೇ ಮನುಷ್ಯರಿಗೆ ಊಟ ದೊರಕಿಸುತ್ತಿದೆ. ಈ ಭೂಮಿಯ ಮೇಲೆ ಜೀವಿಗಳು ಇರುವುದೇ ಅಣು ಕೂಡಿಕೆಯಿಂದ ಬರುವ ಬೆಳಕು ಮತ್ತು ಹುರುಪಿನಿಂದ ಎಂದು ಹೇಳಬಹುದು.

2. ಅಷ್ಟು ಕಾವಳತೆಯನ್ನು(Temperature) ಉಂಟುಮಾಡಿದೆವು ಎಂದು ಇಟ್ಟುಕೊಳ್ಳೋಣ. ಆಗ ಅದನ್ನು ಹಿಡಿದಿಟ್ಟುಕೊಳ್ಳಬಹುದಾದ ವಸ್ತು ಯಾವುದಾದರು ಇದೆಯೇ? ಏಕೆಂದರೆ ಬರಿಯ ಮೂರು ಸಾವಿರ ಡಿಗ್ರಿಗಳಿಗಷ್ಟೇ ಎಲ್ಲಾ ಗೊತ್ತಿರುವ ವಸ್ತುಗಳು ಕರಗಿ ಹೋಗುತ್ತವೆ. ಇದಕ್ಕೆ ಬಗೆಹರಿಕೆ ಎಂದರೆ ಡ್ಯೂಟಿರಿಯಮ್-ಟ್ರೈಶಿಯಮ್ ಬೆರಕೆಯನ್ನು ಸೆಳೆ-ಸುರುಳಿಗಳ(magnetic coils) ಮೂಲಕ ಎರಕದ ಇರವಿನಲ್ಲಿ ಇರಿಸಬಹುದೇ ಎಂದು ವಿಜ್ಞಾನಿಗಳು ಯೋಚಿಸುತ್ತಿದ್ದಾರೆ. ಹಾಗಾದಾಗ ಹೆಚ್ಚು ಕಾದ ಭಾಗಗಳು ಸುತ್ತಲಿನ ವಸ್ತುವಿಗೆ ತಾಕದಂತೆ ನೋಡಿಕೊಳ್ಳಬಹುದು. ಈ ಬಗೆಯ ಏರ್ಪಾಟಿಗೆ ಟೋಕಾಮಾಕ್ (Tokamak) ಎನ್ನುತ್ತಾರೆ. ಟೋಕಾಮಾಕಿನಲ್ಲಿ ಬಿಡಿ ಎಲೆಕ್ಟ್ರಾನ್ಗಳು ಮತ್ತು ಅಣುಗಳು ಪ್ಲಾಸ್ಮಾ/ಎರಕದ ಇರವಿನಲ್ಲಿ(molten state/plasma) ಇರುವುದರಿಂದ ಒಂದಕ್ಕೊಂದು ಡಿಕ್ಕಿ ಹೊಡೆದಾಗ ಹೀಲಿಯಮ್ ರೂಪುಗೊಳ್ಳುತ್ತದೆ. ಅದರಿಂದ ಉಂಟಾಗುವ ಬಿಸಿ ಕಾವಿನಿಂದ ಮಿಂಚು / ವಿದ್ಯುತ್ ಅನ್ನು ಹುಟ್ಟುಹಾಕಬಹುದು.

ಅಮೇರಿಕಾದ ದೊಡ್ಡ ಕಂಪೆನಿಗಳಲ್ಲಿ ಒಂದಾದ ಲಾಕ್‌ಹೀಡ್ ಮಾರ್ಟಿನ್ (Lockheed Martin) ಅಣು ಕೂಡಿಕೆಯ ಕುರಿತಾಗಿ ಸುದ್ದಿಯೊಂದನ್ನು ಬಿಡುಗಡೆ ಮಾಡಿದೆ. ಲಾಕ್‌ಹೀಡ್ ಮಾರ್ಟಿನ್ ನ ತಾಮಸ್ ಮೆಗ್ವೈರ್ ಕಳೆದ ತಿಂಗಳಿನ ಸುದ್ದಿಕೂಟದಲ್ಲಿ ಹೀಗೆ ಹೇಳಿದ್ದಾರೆ –

“ಹೊಸ ಅಣುವಿನ ಶಕೆಯೊಂದನ್ನು ಮೊದಲು ಮಾಡೋಣ. ಪ್ರಪಂಚಕ್ಕೆ ಹಸನಾದ ಹುರುಪನ್ನು ಕೊಡುವುದು ನಮ್ಮ ಮುಂದಿನ ಗುರಿಯಾಗಿದೆ”.

ಈ ಚಳಕದರಿಮೆಯ ಮೂಲಕ ಮಿಂಚನ್ನು ತಯಾರಿಸಲಾಗುತ್ತದೆ ಎಂದು ಲಾಕ್‌ಹೀಡ್ ಮಾರ್ಟಿನ್ ಹೇಳಿಕೊಂಡಿದೆ. ಇದರಿಂದಾಗಿ ಅರಿಮೆಯ ಕೂಟಗಳಲ್ಲಿ (scientific circles) ಈ ಸುದ್ದಿ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ತಾಮಸ್ ಮೆಗ್ವೈರ್ ಪ್ರಕಾರ ಟೋಕಾಮಾಕ್‌ಗಳ ಒಳಗೆ ಇರುವ ಪ್ಲಾಸ್ಮಾ/ಎರಕದ ಒತ್ತಡ ಹೆಚ್ಚಾದರೆ ಅದರ ಸುತ್ತಲಿನ ವಸ್ತುವಿಗೆ ತೊಂದರೆಯಾಗುತ್ತದೆ. ಅದರ ಬದಲು ಒತ್ತಡವನ್ನು ಕಡಿಮೆ ಮಾಡಿದಲ್ಲಿ ಅಣುಗಳು ಒಂದಕ್ಕೊಂದು ಡಿಕ್ಕಿ ಹೊಡೆಯುವ ಸಲದೆಣಿಕೆ(Frequency) ಕಡಿಮೆಯಾಗುತ್ತದೆ ಮತ್ತು ಟೋಕಾಮಾಕ್ ಗಳನ್ನು ತಯಾರಿಸಿದ ವಸ್ತುವಿನ ಮೇಲೆ ಯಾವುದೇ ತೊಂದರೆಯಾಗುವುದಿಲ್ಲ. ಆದರೆ ಈ ಬಗೆಯಲ್ಲಿ ಮಾಡಿದರೆ, ಹಣಕಾಸಿನ ಲೆಕ್ಕಾಚಾರದಲ್ಲಿ ನೋಡಿದರೆ ಅಷ್ಟು ಗಿಟ್ಟುವ ಏರ್ಪಾಟು (profitable venture) ಎನಿಸುವುದಿಲ್ಲ. ಅದಕ್ಕಾಗಿ ಲಾಕ್‌ಹೀಡ್ ಅವರು ಮೊಗೆಸಿರುವ ಟೋಕಾಮಾಕಿನಲ್ಲಿ ಪ್ಲಾಸ್ಮಾವು ಗೋಡೆಯ ಹತ್ತಿರ ಬರುತ್ತಿದ್ದಂತೆ ಸೆಳೆ-ಸುರುಳಿಗಳ ಹರಹು ಹೆಚ್ಚಾಗುತ್ತಾ ಹೋಗುತ್ತದೆ. ಹಾಗಾಗಿ ಆ ಎಡೆಯಲ್ಲಿ ಒತ್ತಡ ಹೆಚ್ಚಾಗಿರುತ್ತದೆ. ಮತ್ತು ಆ ಭಾಗದಲ್ಲಿ ಹೆಚ್ಚು ಮರುಎಸಕಗಳು ಆಗುತ್ತವೆ,ಹೆಚ್ಚು ಹುರುಪು ದೊರೆಯುತ್ತದೆ.

ತಾಮಸ್ ಮೆಗ್ವೈರ್ ತಂಡವು ತಯಾರಿಸುತ್ತಿರುವ ಟೋಕಾಮಾಕ್‍ಗಳು ಎಷ್ಟು ಚಿಕ್ಕದಾಗಿ ಇರುತ್ತವೆಯೆಂದರೆ ಅದನ್ನು ಒಂದು ಟ್ರಕ್ ಇಲ್ಲವೇ ಲಾರಿಯ ಹಿಂದೆ ಅಳವಡಿಸಬಹುದು, ಹೀಗೆ ಮಾಡುವುದು ಸುಲಭದ ಮಾತಲ್ಲ ಎಂದು ಜಗತ್ತಿನ ವಿಜ್ಞಾನಿಗಳ ಅನಿಸಿಕೆ. ಈ ಹಮ್ಮುಗೆಯ ವಿಷಯವಾಗಿ ಲಾಕ್‌ಹೀಡ್ ಯಾವುದೇ ಗುಟ್ಟುಗಳನ್ನು ಹೊರಹಾಕಿಲ್ಲ. ಈ ಹಮ್ಮುಗೆ ಗೆಲುವು ಕಂಡಲ್ಲಿ ಜಗತ್ತು ಎದುರಿಸುತ್ತಿರುವ ಎಲೆಕ್ಟ್ರಿಸಿಟಿ ತೊಂದರೆ ಕೊನೆಗೊಳ್ಳಬಹುದು. ಇನ್ನೂ ಹಲವು ವರ್ಷ ಕಾದುನೋಡಬೇಕಿದೆ. ಇದರ ಕುರಿತಾಗಿ ಲಾಕ್‌ಹೀಡ್ ಮಾರ್ಟಿನ್ ಬಿಡುಗಡೆ ಮಾಡಿರುವ ಒಂದು ವಿಡಿಯೋ ಇಲ್ಲಿದೆ.

(ಚಿತ್ರ ಸೆಲೆ: chenected.ichewikipediawired.com)

ಏನಿದು ಮೋಡ ಬಿತ್ತನೆ?

ಪ್ರಶಾಂತ ಸೊರಟೂರ.

‘ಮೋಡ ಬಿತ್ತನೆ’, ಕೆಲವು ವರ್ಷಗಳ ಹಿಂದೆ ಹೀಗೊಂದು ಪದ ಒಮ್ಮೆಲೇ ಬೆಳಕಿಗೆ ಬಂತು, ಬರಗಾಲದಿಂದ ತತ್ತರಿಸಿದ್ದ ಕರ್ನಾಟಕಕ್ಕೆ ಮಳೆ ಬರಿಸಲು ಮೋಡದಲ್ಲಿಯೇ ವಿಮಾನದಿಂದ ಬಿತ್ತನೆಯ ಕೆಲಸವಂತೆ, ಅದು ಮಳೆ ತರುತ್ತದಂತೆ ಅನ್ನುವ ಮಾತುಗಳು ಎಲ್ಲೆಡೆ ಹರಡ ತೊಡಗಿದ್ದವು. ನೆಲದಲ್ಲಿ ಬಿತ್ತನೆ ಮಾಡಿದ, ನೋಡಿದ ಕನ್ನಡಿಗರಿಗೆ ಬಾನಿನಲ್ಲಿ ಮಾಡುವ ಇದ್ಯಾವ ಬಗೆಯ ಬಿತ್ತನೆ ಅನ್ನಿಸಿತ್ತು. ಕೆಲ ಊರುಗಳ ಮೇಲೆ ವಿಮಾನಗಳು ಹಾರಾಡಿ ’ಮೋಡ ಬಿತ್ತನೆ’ಯಿಂದ ಮಳೆ ಸುರಿಸಿದ್ದೂ ಸುದ್ದಿಯಾಯಿತು. ಇಡೀ ದೇಶದಲ್ಲಿಯೇ ಈ ತರಹ ಮಳೆ ಸುರಿಸಲು ಮೋಡ ಬಿತ್ತನೆಗೆ ಕೈಹಾಕಿದ ಮೊದಲ ನಾಡು ಕರ್ನಾಟಕ ಅನ್ನುವ ಸುದ್ದಿಯಾಯಿತು.

ಮೋಡ ಬಿತ್ತನೆಯ ಬಗ್ಗೆ ತಿಳಿದುಕೊಳ್ಳುವ ಮುನ್ನ, ಮೋಡ ಮತ್ತು ಮಳೆಯ ಬಗ್ಗೆ ಒಂಚೂರು ತಿಳಿದುಕೊಳ್ಳೋಣ. ಕಡಲು, ಹೊಳೆ ಮತ್ತು ನೆಲದ ಹಲವೆಡೆ ಇರುವ ನೀರು ಬಿಸಿಲಿಗೆ ಕಾಯ್ದು ಆವಿಯಾಗುತ್ತದೆ. ಹೀಗೆ ಉಂಟಾದ ನೀರಾವಿಯು ಗಾಳಿಯೊಡನೆ ಬೆರೆತು ಬಾನಿನೆಡೆಗೆ ಸಾಗ ತೊಡಗುತ್ತದೆ. ಗಾಳಿಯು ಬಿಸಿಯಾದಷ್ಟು ಅದು ತನ್ನಲ್ಲಿ ಹೆಚ್ಚೆಚ್ಚು ನೀರಾವಿಯನ್ನು ಅಡಗಿಸಿಟ್ಟುಕೊಳ್ಳಬಲ್ಲದು, ಆದರೆ ನೆಲದಿಂದ ಮೇಲೆ-ಮೇಲೆ ಹೋದಂತೆಲ್ಲಾ ಅಲ್ಲಿರುವ ಬಿಸುಪು (temperature) ಕಡಿಮೆಯಾಗುತ್ತಾ ಹೋಗುತ್ತದೆ. ಒಂದು ಹಂತದಲ್ಲಿ ಬಿಸುಪು ತುಂಬಾ ಕಡಿಮೆಯಾಗಿ ಗಾಳಿಗೆ ತನ್ನಲ್ಲಿ ಇನ್ನಷ್ಟು ನೀರಾವಿಯನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ಈ ಹಂತದ ಗಾಳಿಯನ್ನು ‘ತಣಿದ ಗಾಳಿ’ (saturated air) ಅಂತಾ ಕರೆಯುತ್ತಾರೆ. ಈ ತಣಿದ ಗಾಳಿಯು ತೂಕವಾದ ನೀರಾವಿಯನ್ನು ಹೊತ್ತುಕೊಂಡು ಬಾನಿನಲ್ಲಿ ಒಂದೆಡೆ ನೆಲೆ ನಿಲ್ಲುತ್ತದೆ, ಇವೇ ಮೋಡಗಳು.

ಹೀಗೆ ನೆಲೆಗೊಂಡ ಮೋಡದಲ್ಲಿ ನೀರ ಹನಿಗಳು ತುಂಬಾ ತಂಪಾಗಿದ್ದು ಅವುಗಳ ಬಿಸುಪು (temperature) ಕೆಲವೊಮ್ಮೆ – 40° ಸೆಲ್ಸಿಯಸ್ ಆಗಿರುತ್ತದೆ. ಇಲ್ಲಿ ಇನ್ನೊಂದು ತಿಳಿದುಕೊಳ್ಳಬೇಕಾದ ವಿಶಯವೆಂದರೆ ಇಷ್ಟು ತಂಪಾಗಿದ್ದರೂ ಎಲ್ಲ ಹನಿಗಳು ಗಟ್ಟಿ ಮಂಜಿನ ರೂಪದಲ್ಲಿರದೇ ಕೆಲವು ಹನಿಗಳು ನೀರಿನ ರೂಪದಲ್ಲೇ ಉಳಿದಿರುತ್ತವೆ. ಇದಕ್ಕೆ ಕಾರಣವೆಂದರೆ ಸಾಮಾನ್ಯ ಒತ್ತಡದಲ್ಲಿ 0° ಸೆ. ಹೆಪ್ಪುಗಟ್ಟುವ ನೀರು ಬಾನಿನಲ್ಲಿ, ಮೇಲೆ ಹೋದಂತೆ ಒತ್ತಡ ಕಡಿಮೆ ಇರುವುದರಿಂದ ಅದರ ಹೆಪ್ಪುಗಟ್ಟುವಿಕೆ ಬಿಸುಪು (freezing temperature) ಕಡಿಮೆಯಾಗುತ್ತಾ ಹೋಗುತ್ತದೆ

ಮೋಡಗಳಲ್ಲಿರುವ ಚಿಕ್ಕ ನೀರಿನ ಹನಿಗಳು ಮತ್ತು ಮಂಜಿನ (ಗಟ್ಟಿ ನೀರು) ಹನಿಗಳು ಒಂದಕ್ಕೊಂದು ಬೆಸೆದು ಇಲ್ಲವೇ ಮೋಡದಲ್ಲಿರುವ ಇತರೆ ಪುಟಾಣಿ ಕಣಗಳನ್ನು ಸುತ್ತುವರೆದು ದೊಡ್ಡದಾಗುತ್ತಾ ಹೋಗುತ್ತವೆ. ಹೀಗೆ ದೊಡ್ಡದಾದ ನೀರಿನ, ಮಂಜಿನ ಹನಿ ಹೊತ್ತುಕೊಂಡಿರುವ ಮೋಡಕ್ಕೆ ಅವುಗಳ ತೂಕ ತಾಳಿಕೊಳ್ಳಲು ಆಗದಂತ ಪರಿಸ್ಥಿತಿ ಬಂದುಬಿಡುತ್ತದೆ. ಆಗಲೇ ಅವು ನೆಲಕ್ಕೆ ಮಳೆಯಾಗಿ ಸುರಿಯ ತೊಡಗುತ್ತವೆ.

ಮೋಡಗಳ ಕುರಿತಾದ ಮೇಲಿನ ವಿಷಯದಲ್ಲಿ ಗಮನಿಸಬೇಕಾದುದೆಂದರೆ, ಮೋಡಗಳು ಮಳೆಯಾಗಬೇಕಾದರೆ ಅವುಗಳಲ್ಲಿರುವ ನೀರಿನ ಹನಿಗಳು ಒಂದೋ ಹೆಚ್ಚಾಗಬೇಕು ಇಲ್ಲವೇ ಆ ನೀರ ಹನಿಗಳು ಒಂದಾಗಿ ದೊಡ್ಡದಾಗಬೇಕು. ಇದರಲ್ಲಿ ಎರಡನೇ ಬಗೆಯನ್ನು ಬಳಸಿ ಮಳೆ ತರಿಸುವುದೇ ‘ಮೋಡ ಬಿತ್ತನೆ’ಯ ಹಿಂದಿರುವ ಚಳಕ. ಮೋಡ ಬಿತ್ತನೆಯಲ್ಲಿ, ಬೆಳ್ಳಿಯ ಆಯೋಡಾಯಡ್ ಇಲ್ಲವೇ ಒಣ ಮಂಜು ಎಂದು ಕರೆಯಲ್ಪಡುವ ಗಟ್ಟಿ ಕಾರ್ಬನ್ ತುಣುಕುಗಳನ್ನು ವಿಮಾನಗಳ ಮೂಲಕ ಮೋಡಗಳ ಮೇಲೆ ಚಿಮುಕಿಸಲಾಗುತ್ತದೆ. ಹೀಗೆ ಚಿಮುಕಿಸಿದ ತುಣುಕುಗಳು ಮೋಡದಲ್ಲಿರುವ ನೀರಿನ, ಮಂಜಿನ ಹನಿಗಳನ್ನು ತನ್ನೆಡೆಗೆ ಸೆಳೆದು ದೊಡ್ಡದಾಗಿಸುತ್ತವೆ. ಹೀಗೆ ಒಂದುಗೂಡಿ ದೊಡ್ಡದಾದ ನೀರ ಹನಿಗಳ ಬಾರ ತಾಳಲಾಗದೇ ಮೋಡಗಳು, ಮಳೆಯಾಗಿ ಸುರಿಯ ತೊಡಗುತ್ತವೆ.

‘ಮೋಡ ಬಿತ್ತನೆ’ಯ ಕೆಲಸ ಯಾವಾಗಲೂ ಗೆಲುವು ಕಾಣುತ್ತದೆ ಅನ್ನಲಾಗದು, ಮೋಡದಲ್ಲಿರುವ ನೀರ ಹನಿಗಳ ಗಾತ್ರ, ಅವುಗಳ ಸುತ್ತಿರುವ ವಾತಾವರಣ ಇದರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಜಗತ್ತಿನ ಹಲವೆಡೆ ಮೋಡ ಬಿತ್ತನೆಯ ಕೆಲಸವನ್ನು ಕೈಗೊಂಡರೂ ಎಲ್ಲಾ ಕಡೆ ಇದಕ್ಕೆ ಒಪ್ಪಿಗೆ ಪಡೆಯಲು ಇನ್ನೂ ಆಗಿಲ್ಲ. ಆದರೆ ಚೀನಾ ದೇಶ ಯಾವುದೇ ಅನುಮಾನಗಳನ್ನು ಇಟ್ಟುಕೊಳ್ಳದೇ ’ಮೋಡ ಬಿತ್ತನೆ’ಯಲ್ಲಿ ಪ್ರತಿ ವರ್ಷ ಹೆಚ್ಚಿನ ದುಡ್ಡು ತೊಡಗಿಸುತ್ತಾ ಹೊರಟಿದೆ. ಬೀಜಿಂಗ್ ಒಲಂಪಿಕ್ಸಿನಲ್ಲಿ ಮಳೆಯಿಂದ ಆಟ ಹಾಳಾಗಬಾರದೆಂದು, ಮೋಡ ಬಿತ್ತನೆ ಮಾಡಿ ಆಟಕ್ಕಿಂತ ಹಲವು ದಿನಗಳ ಮೊದಲೇ ಮೋಡಗಳನ್ನು ಮಳೆಯಾಗಿಸಿದ್ದು ಇಲ್ಲಿ ನೆನಪಿಸಿಕೊಳ್ಳಬಹುದು. ಕರ್ನಾಟಕದಲ್ಲಿ 2003 ರಿಂದ ಮೋಡಬಿತ್ತನೆಯನ್ನು ಕೈಗೊಳ್ಳಲಾಗಿದೆ .

ಮಾಹಿತಿ ಸೆಲೆ: